ದಿನದ ಸುದ್ದಿ
ಪೂನಾ ಒಪ್ಪಂದಕ್ಕೆ 92 ವರ್ಷ
- ಮಲ್ಕುಂಡಿ ಮಹದೇವ ಸ್ವಾಮಿ
“ಅಂಬೇಡ್ಕರ್ ಜೀ ನಮ್ಮ ತಂದೆ ‘ಮುಳುಗುತ್ತಿದ್ದಾರೆ’ ಅವರ ಪ್ರಾಣ ಉಳಿಸಿ” ದೇವದಾಸ್ ಗಾಂಧಿ.
“ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ” ಡಾ. ಅಂಬೇಡ್ಕರ್.
ಅಂದು ಅಕೋಲದಲ್ಲಿ ಗಾಂಧಿಜೀ ತಂಗಿದ್ದರು. ಅಲ್ಲಿಗೆ ಕೆಲವು ಅಂಬೇಡ್ಕರ್ ಅನುಯಾಯಿಗಳು ಬಂದು ಗಾಂಧಿಯವರನ್ನು ಭೇಟಿಯಾಗಿ, ಕೆಲವು ಪ್ರಶ್ನೆಗಳನ್ನು ಕೇಳಿದರು. “ಗಾಂಧೀಜಿಯವರೇ, ಕೆಲವರು ತಿಲಕರನ್ನು ದೇವರೆಂದು ಪೂಜಿಸುವಂತೆ, ಅಂಬೇಡ್ಕರರನ್ನು ದೇವರೆಂದು ಪೂಜಿಸಬಹುದೇ….? ಗಾಂಧೀಜಿಯವರು ಉತ್ತರಿಸುತ್ತಾ, ಪೂಜಿಸಬಹುದು. ಪೂಜಿಸುವವರಿಗೆ ಈ ಹಕ್ಕಿದೆ. ಅಂಬೇಡ್ಕರರನ್ನು ನಾನು ಮೆಚ್ಚುತ್ತೇನೆ. ನಾನು ಅವರ ದೃಷ್ಟಿಕೋನಗಳಿಂದ ಭಿನ್ನವಾಗಿದ್ದೇನೆ ಆದರೆ ಅವರು ಧೈರ್ಯಶಾಲಿ ಎಂದು ಒಪ್ಪಿಕೊಳ್ಳುತ್ತೇನೆ. ಧೈರ್ಯಶಾಲಿ ಪುರುಷ ಕೂಡ ತಪ್ಪು ಮಾಡುತ್ತಾನೆ. ನಾನು ನನ್ನನ್ನು ಧೈರ್ಯಶಾಲಿ ಎಂದು ಸ್ವತಹ ನಿರ್ಧರಿಸಿಕೊಳ್ಳುತ್ತೇನೆ ಮತ್ತು ನಾನು ಅನೇಕ ತಪ್ಪುಗಳನ್ನು ಮಾಡಿದ್ದೇನೆ ಎಂದು ಒಪ್ಪಿಕೊಳ್ಳುತ್ತೇನೆ” ಎಂದರು.
ತಿಲಕರನ್ನು ದೇವರೆಂದು ಭಾವಿಸಿದ್ದ ಗಾಂಧೀಜಿಗೆ ಪ್ರಶ್ನಿಸಿದ ಅಂಬೇಡ್ಕರ್ ಅನುಯಾಯಿಗಳು ಪೂನಾ ಒಪಂದದಿಂದಾದ ಅನ್ಯಾಯದ ಸಿಟ್ಟನ್ನು ತೋಡಿಕೊಂಡರು. ಮತ್ತು ಈ ಒಪ್ಪಂದ ಇನ್ನು ಮುಂದಿನ ಪೀಳಿಗೆಯೂ ಪ್ರಶ್ನಿಸುವ ಅಧಿಕಾರವನ್ನು ಶಾಶ್ವತವಾಗಿ ಕಿತ್ತುಕೊಂಡಿತು ಎಂಬ ಮತ್ತೊಂದು ಸಿಟ್ಟುಕೂಡ ಅಲ್ಲಡಗಿತ್ತು. ನೀವು ಪ್ರಶ್ನಿಸುವವರಾಗಿದ್ದರೇ ಈ ಪ್ರಸಂಗದ ವಿಶ್ಲೇಷಣೆಯನ್ನು ನಿಮಗೇ ಬಿಡುತ್ತೇನೆ.
ರಾಮ್ಸೆ ಮೆಕ್ ಡೊನಾಲ್ಡ್ ರವರಿಗೆ ಆಗಸ್ಟ್ 18 ಗಾಂಧಿಜೀ ಪತ್ರ ಬರೆದು ಬ್ರಿಟಿಷ್ ರ ಕೋಮುವಾರು ತೀರ್ಪನ್ನು ಕಟುವಾಗಿ ಟೀಕಿಸಿದ್ದರು. ಮತ್ತು ತಮ್ಮ ಅಸಮ್ಮತಿಯನ್ನು ತೋರಿದರು. ಸೆಪ್ಟೆಂಬರ್ 9 ಬ್ರಿಟಿಷರು ಗಾಂಧೀಜಿ ಯವರ ನಿರ್ಧಾರವನ್ನು ನಿರಾಕರಿಸಿದ ಕಾರಣ. ಆ ಸೋಮವಾರ ಎಲ್ಲಾ ನಾಯಕರು ಜಮಾಯಿಸಿ ಅಂಬೇಡ್ಕರರನ್ನು ಕೇಳಿದಾಗ: ” ಗಾಂಧೀಜಿ ಅವರಿಗಾಗಿ ಇಂತಹ ಮಹಾತ್ಯಾಗ ಮಾಡಲಾರೆ ” ಎಂದರು. ಮರುದಿನ ಮಹಾತ್ಮಗಾಂಧಿಜೀಯವರು ಆ ಮಾವಿನ ತೋಪಿನಲ್ಲಿ ಉಪವಾಸಕ್ಕೆ ಕುಳಿತರು.
ಉಪವಾಸದ 3 ದಿನಗಳ ನಂತರ ಅಂಬೇಡ್ಕರ್ ಅವರಿಗೆ ಎಲ್ಲಾ ಕಡೆಯಿಂದ ಬೆದರಿಕೆ ಕರೆಗಳು ಬರಲು ಆರಂಭಿಸಿದವು. ಕೆಲವು ಗೂಂಡಾಗಳು ನೇರವಾಗಿ ಅಂಬೇಡ್ಕರರನ್ನು ಪ್ರಶ್ನಿಸಿದ್ದರು. ಬಹುತೇಕ ಎಲ್ಲ ಪತ್ರಿಕೆಗಳು ಗಾಂಧಿಯವರನ್ನು ಬೆಂಬಲಿಸುತ್ತಿವೆ ಮತ್ತು ಅಂಬೇಡ್ಕರರನ್ನು ವಿರೋಧಿಸುತ್ತಿವೆ. ಅವರ ರಕ್ತದ ಒತ್ತಡ ಹೆಚ್ಚುತ್ತಿದೆ.
ಉದ್ರಿಕ್ತತೆ ಹೆಚ್ಚಾಯಿತು, ಅಂಬೇಡ್ಕರ್ ಖಳನಾಯಕ, ದೇಶದ್ರೋಹಿ, ಭಾರತವನ್ನು ಛಿದ್ರಗೊಳಿಸಲು ಬಯಸಿದ ವ್ಯಕ್ತಿ, ಗಾಂಧಿಯನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದ ವ್ಯಕ್ತಿ. ಟ್ಯಾಗೋರ್, ನೆಹರು ಮತ್ತು ಸಿ. ರಾಜಗೋಪಾಲಾಚಾರಿ ಸೇರಿದಂತೆ ಗರಂ ದಾಲ್ (ಉಗ್ರಗಾಮಿಗಳು) ಹಾಗೂ ನರಮ್ ದಾಲ್ (ಮಿತವಾದಿಗಳು) ರಾಜಕೀಯ ಭಾರೀ ತೂಕ ಗಾಂಧಿಯ ಕಡೆ ತೂಗಿತು. ಆದರೂ ಅಂಬೇಡ್ಕರ್ ರದು ಅದೇಮಾತು.
“ನಾನು ನನ್ನ ಆದ್ಯ ಕರ್ತವ್ಯಕ್ಕೆ ದ್ರೋಹ ಬಗೆಯಲಾರೆ ಮತ್ತು ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ನ್ಯಾಯಯುತ ಮತ್ತು ನ್ಯಾಯ ಸಮ್ಮತವಾದ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ” ಎಂಬದು. ಅಂಬೇಡ್ಕರ್ ರವರ ಈ ಕಾಠಿಣ್ಯ, ಗಾಂಧಿಯವರ ಸ್ವಯಂ ಪ್ರೇರಿತ ಹಠ. ಭಾರತವನ್ನು ಅಂದು ನಿತ್ರಾಣಗೊಳಿಸಿತ್ತು.
ಮಹಾದೇವ ದೇಸಾಯಿ ಹೇಳುವಂತೆ ಸೆಪ್ಟಂಬರ್ 22 ಮಧ್ಯಾಹ್ನ ಅಂಬೇಡ್ಕರ್ ಗಾಂಧಿಯಜೀಯವರನ್ನು ಭೇಟಿಯಾಗಿ, “ನಾನು ನನ್ನ ಸಮುದಾಯಕ್ಕೆ ರಾಜಕೀಯ ಅಧಿಕಾರವನ್ನು ಬಯಸುತ್ತೇನೆ ಅದು ನಮ್ಮ ಉಳಿವಿಗೆ ಅನಿವಾರ್ಯವಾಗಿದೆ” ಉಪವಾಸವನ್ನು ಕೈ ಬಿಡಿ” ಎಂದರು. ಚರ್ಚೆ ಕಗ್ಗಂಟಾಗಿ ಸೆಪ್ಟೆಂಬರ್ 23 ಕ್ಕೆ ಮಾತುಕತೆ ಮುಂದುವರಿಯಿತು. ಮತ್ತೇ 24 ಕ್ಕೆ. ಅಂದು ಸಂಜೆ 5 ಗಂಟೆಗೆ 23 ಜನರು ಒಪ್ಪಂದಕ್ಕೆ ಸಹಿ ಹಾಕಿದ್ದರು. ಈ ವಿಶ್ವಾಸ ಅರ್ಹತೆಗಾಗಿ ರಾಜಾಜಿ ತಮ್ಮ ಒಂದು “ಫೌಂಟೆನ್ ಪೆನ್ನ” ನ್ನು ಅಂಬೇಡ್ಕರ್ ಅವರ ಜತೆ ವಿನಿಮಯ ಮಾಡಿಕೊಂಡಿದ್ದರು. ಇದು ಹೊರಗಿನ ಮರ್ಮಾಘಾತ. ಈ ಒಳಗಿನ ಮರ್ಮಾಘಾತದಬಗ್ಗೆ ಹೇಳಲೇ ಬೇಕು.
ಈ ದಕ್ಷಿಣ ಭಾರತದ ಅಸ್ಪೃಶ್ಯ ರಾಜಕಾರಣಿ
“ಎ ಸಿ ರಾಜನ್” ಅವರು ಅಂಬೇಡ್ಕರ್ ಅವರು ದುಂಡುಮೇಜಿನ ಸಭೆಯಲ್ಲಿ ಚರ್ಚಿಸಲು ಅಸ್ಪೃಶ್ಯರ ಪ್ರತಿನಿಧಿ ಎನ್ನುವುದನ್ನು ನಿರಾಕರಿಸಿದ್ದರು. ಮತ್ತು ಬಾಪೂ ರವರ ಕಡೆ ಕೈ ಎತ್ತಿದ್ದರು. ಪೂನಾ ಒಪ್ಪಂದದ ಬಿಕ್ಕಟ್ಟಿನ ಸಮಯದಲ್ಲಿ ಅಂಬೇಡ್ಕರವರನ್ನು ಪ್ರತ್ಯೇಕೀಕರಿಸಿ ಚರ್ಚೆಮಾಡಲು ಸಿದ್ಧಗೊಂಡಿದ್ದರು.
“ಪಲ್ ವಂಕರ್ ಬಾಲೂ” ದೇಶದ ಮೊದಲ ದಲಿತ ಕ್ರಿಕೆಟಿಗ ಕೂಡ ಅಂಬೇಡ್ಕರವರಿಗೆ 24ವರ್ಷ ದೊಡ್ಡವರಾಗಿದ್ದು ಅಂಬೇಡ್ಕರರ ಸ್ನೇಹ ಜೀವಿಯಾಗಿದ್ದರು. ಆದರೆ ಈ ಸಂದರ್ಭದಲ್ಲಿ ಗಾಂಧೀಜಿಯವರ ಪಾಳಯದಲ್ಲಿ ಪಳಗಿದರು. ಅವರು ಗಾಂಧಿಜೀಯವರ ಅನುಯಾಯಿಗಳಾಗಿ, ಅಂಬೇಡ್ಕರವರ ನಿಲುವುಗಳನ್ನು ಹೆಜ್ಜೆಹೆಜ್ಜೆಗೂ ನಿರಾಕರಿಸಿದರು. ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ಮತಾಂತರ ವಾಗುವ ವಿಚಾರದಲ್ಲಿಯೂ ಕಠೋರ ವಿರೋಧವನ್ನು ವ್ಯಕ್ತಪಡಿಸಿದ್ದರು. ಮುಂದೆ ಅಂಬೇಡ್ಕರ್ ಅವರ ವಿರುದ್ಧ ಚುನಾವಣೆಗೆ ನಿಂತು ಸೋತದ್ದು ಬೇರೆ ವಿಚಾರ ಆದರೆ ಇಲ್ಲಿ ನಾವು ಅರ್ಥಮಾಡಿಕೊಳ್ಳಬೇಕಾದದ್ದು ಒಂದು ಐತಿಹಾಸಿಕ ಹೋರಾಟದಲ್ಲಿ ಅಂಬೇಡ್ಕರ್ ಅವರ ನಿಲುವು ಮತ್ತು ಕಾಠಿಣ್ಯಗಳನ್ನು.
ಗಾಂಧೀಜಿಯವರ ಪ್ರಕಾರ ಪ್ರತ್ಯೇಕ ಮತದಾನ ಪದ್ಧತಿ ಸಮಸ್ಯೆಯನ್ನು ಉತ್ತಮಕ್ಕಿಂತ ಕೆಟ್ಟದ್ದಾಗಿಸುತ್ತದೆ. ಇದು ಪ್ರತಿ ಹಳ್ಳಿಯಲ್ಲಿ ವಿಭಜನೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಸ್ಥಳಿಯ ಸಂಘರ್ಷಕ್ಕೆ ಕಾರಣವಾಗುತ್ತಿದೆ.ಎಂಬುದು.
1931 ಅ 14 ಅಂಬೇಡ್ಕರವರು ಗಾಂಧಿಯವರನ್ನು ಮೊಟ್ಟ ಮೊದಲನೆ ಬಾರಿಗೆ ಭೇಟಿಯಾಗಿ ಪ್ರತ್ಯೇಕ ಮತದಾನದ ಹಕ್ಕುಗಳ ಬಗ್ಗೆ ಚರ್ಚಿಸಿದ್ದರು. ನಂತರ ಗಾಂಧೀಜಿ ನವೆಂಬರ್ 13 ತಮ್ಮ ಭಾಷಣದಲ್ಲಿ ನಾನು ಪ್ರತ್ತೇಕ ಪ್ರಾತಿನಿಧ್ಯವನ್ನು ವಿರೋಧಿಸುವ ಏಕೈಕ ವ್ಯಕ್ತಿಯಾಗಿದ್ದೇನೆ ಎಂದು ಒಂದು ವರ್ಷದ ಹಿಂದೆಯೇ ಹೇಳಿದ್ದರು. ಈ ಉಪವಾಸ ಒಂದು ವರ್ಷ ಪೂರ್ವ ನಿಯೋಜಿತ ಕಾರ್ಯಕ್ರಮ ದಂತೆ ಕಾಣುತ್ತದೆ ಅಲ್ಲವೆ? ಇದು ಹಠಾತ್ತಾಗಿ ಆಗಿಂದಾಗೆ ಸೃಷ್ಟಿಯಾದ ಯೋಜನೆ ಅಲ್ಲ.
ಇಡೀ ಪೂನಾ ಒಪ್ಪಂದಕ್ಕೆ ಸಾಕ್ಷಿಯಾದ ಘಟನೆಗಳನ್ನಾಧರಿಸಿ ಮಹಾದೇವ ರಾನಡೆ ಹೇಳುವಂತೆ ” ಅವರಿಗೆ ಬೇಕಿರುವುದು ಯಾವುದೋ ಒಂದು ಇತ್ಯಾರ್ಥ; ಅವರು ಆದರ್ಶ ಪರಿಹಾರಕ್ಕಾಗಿ ಕಾಯಲು ಸಿದ್ಧರಿಲ್ಲ. ಗಾಂಧೀಜಿ ಯವರ ಜೀವ ಉಳಿಸುವ ಉತ್ಸಾಹದಲ್ಲಿ ಈ ಸಹಿ ಹಾಕಿದರು.
ಅಂಬೇಡ್ಕರ್ ಜೀ ನಮ್ಮ ತಂದೆ ‘ಮುಳುಗುತ್ತಿದ್ದಾರೆ’ ಅವರ ಪ್ರಾಣ ಉಳಿಸಿ” ಎಂದು ಅಂಬೇಡ್ಕರ್ ರವರ ಮುಂದೆ ಕಣ್ಣೀರುಡುತ್ತದ್ದ ದೇವದಾಸ್ ಗಾಂಧಿ ಅವರ ಮುಖದಲ್ಲಿ ಮಾತ್ರ ಮಂದಹಾಸವಿತ್ತು.
ಹೊ! ಗಾಂಧಿಯವರು ಒಪ್ಪಂದಕ್ಕೆ ಸಹಿ ಹಾಕಿದರಾ?, ಒಂದು ಅಂತಿಮ ಪದ; ಅದು ಗಾಂಧಿಯಲ್ಲ. ಅವರ ಮಗ ದೇವದಾಸ್ ಗಾಂಧಿ.
ಸುಪರ್ಣ ಗುಪ್ತಾ ‘ ಅಂಬೇಡ್ಕರ್ ರವರು ಶೋಷಿತರ ವಿಮೋಚನೆಗಾಗಿ ಹಕ್ಕು ಆಧಾರಿತ ವಿಧಾನಕ್ಕೆ ಆದ್ಯತೆ ನೀಡಿದರು. ಗಾಂಧಿಜೀಯವರು ಅಧ್ಯಾತ್ಮ ಮತ್ತು ನಂಬಿಕೆ ವಿಧಾನಕ್ಕೆ ಮಾನ್ಯತೆ ನೀಡಿದರು. ಅಂಬೇಡ್ಕರರಿಗಿಂತ ಭಿನ್ನವಾಗಿ ಶೋಷಕರ ಮನಸ್ಥಿತಿಯನ್ನು ಬದಲಾಯಿಸಿದಾಗ ಮಾತ್ರ, ಯಾವುದೇ ಶೋಷಣೆಯನ್ನು ಸರಿಪಡಿಸಬಹುದು ಎಂದು ಗಾಂಧಿಜೀ ಭಾವಿಸಿದ್ದರು’. ಎನ್ನುತ್ತಾರೆ. ಇದು ಈ ನೆಲದಲ್ಲಿ ಅಸಂಭವ. ಕಾರಣ ಇಲ್ಲಿನ ಜಾತಿ ವ್ಯವಸ್ಥೆ ಒಂದು ಮಾನಸಿಕ ಸ್ಥಿತಿಯಾಗಿದೆ. ಅದು ಸಾವಿರಾರು ವರ್ಷಗಳು ತನ್ನ ಬೇರನ್ನು ತಾನೇ, ತನ್ನ ಮೆದುಳಿಗೆ ಎಣೆದುಕೊಂಡಿದೆ. ಇದನ್ನು ನಂಬಿಕೆ ಮಾತ್ರದಿಂದಲೇ ಬಿಡಿಸುವುದು ಕಷ್ಟ.
ಈ ಸತ್ಯ ಗಾಂಧೀಜಿಯವರ ಅರಿವಿಗೆ ಬಂದಿದ್ದೆ ಅವರು
ಅಸ್ಪೃಶ್ಯತೆಯ ವಿರುದ್ದ 1933 ನವೆಂಬರ್ ನಿಂದ 1934 ರ ಆಗಸ್ಟ್ ವರೆಗೆ 12500 km ಭಾರತದಾದ್ಯಂತ ಪ್ರವಾಸ ಕೈಗೊಂಡಾಗ. 800000 ಗಳನ್ನು ಹರಿಜನ ನಿಧಿಗೆ ಸಂಗ್ರಹಿಸಲು ಮೇಲ್ವರ್ಗದ ಜನರ ಬಳಿ ತೆರಳಿದಾಗ. ಕೊನೆ ಕೊನೆಗೆ ಶ್ರೀರಂಗಂ ತಂಜಾವೂರಿನ ಇತರ ದೇವಾಲಯಗಳಲ್ಲಿ ಅಸ್ಪೃಶ್ಯತಾಚರಣೆಯನ್ನು ಮನಗಂಡು ತಾವೇ ದೇವಾಲಗಳಿಗೇ ಹೋಗುವುದನ್ನು ನಿಷೇಧಿಸಿಕೊಂಡಾಗ. ಹರಿಜನ ಸೇವಕ ಸಂಘ ಹರಿಜನ ಪತ್ರಿಕೆ ಇಲ್ಲಿ ಹುಟ್ಟಿಕೊಂಡವು. ಪ್ರತಿ ಹಳ್ಳಿಗಳಲ್ಲಿ ರಾಮಮಂದಿರ ಭಜನೆಗಳು ಆರಂಭವಾದವು. ಇದು
ಈಗ ಈ ಜನರ ಬದುಕಿನ ಭಾಗವಾಗಿ ಬಿಟ್ಟಿದೆ.
ಲೂಯಿ ಫಿಷರ್ “ಗಾಂಧೀಜಿಗೆ ದ್ವೇಷ, ಅಸೂಯೆ, ವಿಷ, ಅಸಮಧಾನವಿಲ್ಲ. ಅವರನ್ನು ಜೈಲಿಗೆ ಹಾಕಿದ ವೈಸ್ ರಾಯ್ ಗಳ ಜೊತೆ ಅವರು ಸ್ನೇಹಿತರಾಗಿದ್ದರು. ಅವರು ವ್ಯವಸ್ಥೆಯನ್ನು ವಿರೋಧಿಸಿದರು ಆದರೆ ವ್ಯಕ್ತಿಯನ್ನಲ್ಲಾ.
ಎಂದು ಯಾರು ಏನೇ ಹೇಳಿದರು,
ಅಂಬೇಡ್ಕರ್ ಅವರು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಗಾಂಧೀಜಿಯವರನ್ನು ನಾನು “ಮಹಾತ್ಮ” ಎಂದು ಒಪ್ಪಲಾರೆ ಎಂದರು.
ಅಂಬೇಡ್ಕರ್ ರ ಈ ನೋವಿಗೆ ಪಟೇಲರ ಈ ಮಾತನಲ್ಲಿ ಉತ್ತರ ಸಿಗಬಹುದೇನೊ ಪಟೇಲರು “ಈ ಗಾಂಧಿಜೀ ಏಕೆ ಉಪವಾಸ ಮಾಡುತ್ತಿದ್ದಾರೆ ?” ಎಂದು ಗೊಂದಲಕ್ಕೀಡಾದರು. ಎದುರಿನಲ್ಲಿದ್ದವರು “ಅಸ್ಪೃಶ್ಯರನ್ನು ಎದುರಿಸಲು ಇನ್ಯಾವುದೇ ಮಾರ್ಗಗಳಿಲ್ಲವಲ್ಲಾ ಆ ಕಾರಣಕ್ಕಿರಬಹುದೇನೊ…? ಎಂದರು.
ಕೊನೆಯದಾಗಿ ಈ ಮಾತು
ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ವಿಶ್ವಾಸ ಕ್ಕೆ ದ್ರೋಹ ಮಾಡುವುದಿಲ್ಲ” ಎಂದರಲ್ಲಾ ಡಾ. ಅಂಬೇಡ್ಕರ್ ಈ ಎಳೆಯನ್ನು ಇಡಿದು ಈ ಪೀಳಿಗೆ ಯಾಕೆ ಬದುಕುವ ಪ್ರಯತ್ನ ಮಾಡುತ್ತಿಲ್ಲಾ….? (ಬರಹ-ಮಲ್ಕುಂಡಿ ಮಹದೇವ ಸ್ವಾಮಿ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

