ದಿನದ ಸುದ್ದಿ
ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳ ತ್ವರಿತ ಜಾರಿ : ರೈಲ್ವೆ ಸಚಿವ ವಿ. ಸೋಮಣ್ಣ
ಸುದ್ದಿದಿನಡೆಸ್ಕ್:ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳ ಜಾರಿಯನ್ನು ತ್ವರಿತಗೊಳಿಸಲಾಗುವುದು ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಜನರಿಗೆ ಕೈಗೆಟಕುವಂತೆ ವಂದೇ ಭಾರತ್ ರೈಲುಗಳ ಟಿಕೆಟ್ ದರವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಮುಂದಿನ 2 ವರ್ಷಗಳಲ್ಲಿ ರೈಲ್ವೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ವಿಭಿನ್ನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಜರುಗಲಿವೆ. ಜನಸಂದಣಿ ಇರುವ ಕಡೆಗಳಲ್ಲಿ ಎಲ್ಲೆಲ್ಲಿ ಸಾಧ್ಯವಿದೆಯೋ ಅಲ್ಲಲ್ಲಿ ರೈಲ್ವೆ ಅಂಡರ್ಪಾಸ್ ಮತ್ತು ರೈಲ್ವೆ ಓವರ್ ಬ್ರಿಡ್ಜ್ ನಿರ್ಮಾಣವನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಲಾಗುವುದು. 280 ಕೋಟಿ ರೂಪಾಯಿ ವೆಚ್ಚದಲ್ಲಿ 11 ರೈಲ್ವೆ ಅಂಡರ್ಪಾಸ್ ಹಾಗೂ 285 ಕೋಟಿ ರೂಪಾಯಿ ವೆಚ್ಚದಲ್ಲಿ 11 ರೈಲ್ವೆ ಓವರ್ ಬಿಡ್ಜ್ ನಿರ್ಮಾಣವನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಉಪನಗರ ರೈಲ್ವೆ ಯೋಜನೆಯನ್ನು ಶೀಘ್ರವಾಗಿ ಜಾರಿಗೆ ತರಲು ಅಗತ್ಯಕ್ರಮ ಕೈಗೊಳ್ಳಲಾಗುವುದು. ಹೆಜ್ಜಾಲ-ಚಾಮರಾಜನಗರ ನಡುವಿನ 142 ಕಿಲೋಮೀಟರ್ ಹಳಿ ನಿರ್ಮಾಣಕ್ಕೆ ಶೀಘ್ರ ಸರ್ವೇ ನಡೆಸಿ, ಡಿಪಿಆರ್ ಸಿದ್ಧಪಡಿಸಲಾಗುವುದು. ಈ ಮಾರ್ಗಕ್ಕಾಗಿ 627 ಎಕರೆಗಳ ಭೂಸ್ವಾಧೀನ ಅಗತ್ಯವಿದೆ. ಈ ಕುರಿತು ಮುಂದಿನ 20 ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ ಸೋಮಣ್ಣ ಮಾಹಿತಿ ನೀಡಿದರು.
ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲ್ವೆ ಹಳಿ ನಿರ್ಮಾಣಕ್ಕಾಗಿ 339 ಕೋಟಿ ರೂಪಾಯಿ ಅಗತ್ಯವಿದ್ದು, 2026ರ ವೇಳೆಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಬೆಂಗಳೂರು ಮಹಾನಗರದಲ್ಲಿ ವರ್ತುಲ ರೈಲ್ವೆ ಮಾರ್ಗಕ್ಕಾಗಿ ಈಗಾಗಲೇ ನೀಲನಕ್ಷೆ ರೂಪಿಸಲಾಗಿದೆ. 287 ಕಿಲೋಮೀಟರ್ ಉದ್ದದ ಈ ರೈಲ್ವೆ ಯೋಜನೆಯು ನಿಡುವಂದ-ವಡ್ಡರಹಳ್ಳಿ-ದೇವನಹಳ್ಳಿ-ಮಾಲೂರು-ಹೀಲಲಿಗೆ-ಹೆಜ್ಜಾಲ ಸೋಲೂರು-ನಿಡುವಂದ ನಿಲ್ದಾಣಗಳ ಮೂಲಕ ಬೆಂಗಳೂರು ನಗರದ ಪ್ರಮುಖ ರೈಲ್ವೆ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಯೋಜನೆಗೆ 23 ಸಾವಿರ ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಡಿಪಿಆರ್ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243