ದಿನದ ಸುದ್ದಿ

ಭಾರೀ ಮಳೆ ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕ, ಗುಜರಾತ್, ಉತ್ತರಪ್ರದೇಶ ಸೇರಿದಂತೆ ದೇಶದ ಹಲವೆಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮುನ್ನೆಚರಿಕೆ ಕ್ರಮವಾಗಿ ನಾಳೆ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭದ್ರ ಜಲಾಶಯದಲ್ಲಿ ನೀರಿನ ಒಳ ಹರಿವು ಹೆಚ್ಚಳವಾಗಿದ್ದು, ಜಲಾಶಯಕ್ಕೆ 59 ಸಾವಿರದ 500 ಕ್ಯೂಸೆಕ್ ನೀರು ಹರಿದು ಬಂದಿದೆ. ಜಲಾಶಯದ ಗರಿಷ್ಠ ಮಟ್ಟ 1 ಸಾವಿರದ633 ಅಡಿ ಇದ್ದು, ಇಂದಿನ ಮಟ್ಟ 1 ಸಾವಿರದ 600 ಅಡಿಗೆ ತಲುಪಿದೆ. ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಅದರ ಉಪನದಿ ಗುಂಡಬಾಳ ನದಿಯೂ ಉಕ್ಕಿ ಹರಿಯುತ್ತಿದ್ದು ನದಿಪಾತ್ರದ ಮನೆಗಳು ಜಲಾವೃತವಾಗಿವೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾವೇರಿ, ತುಂಗಭದ್ರ, ವರದಾ, ಕುಮದ್ವತಿ, ಧರ್ಮಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಜನರು ನದಿಗೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಐದು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ನೆರೆಯ ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳ ಮಟ್ಟ ತಾಲೂಕಿನಲ್ಲಿ ಗಣನೀಯವಾಗಿ ಏರಿಕೆಯಾಗಿವೆ. ರಾಜಾಪುರ್ ಬ್ಯಾರೆಜ್‌ನಿಂದ 2 ಸಾವಿರ ಕ್ಯೂಸೆಕ್ ನೀರನ್ನು ಬಿಟ್ಟಿರುವುದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಬರುವ 7 ಸೇತುವೆಗಳು ಮುಳುಗಡೆಯಾಗಿವೆ. ಗುಜರಾತ್‌ನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರಿ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಅಲ್ಲಿನ ಪರಿಸ್ಥಿತಿ ಕುರಿತು ಮಾತನಾಡಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ನಿಯೋಜಿಸುವ ಭರವಸೆ ನೀಡಿದರು.

ಉತ್ತರಪ್ರದೇಶದ ವಾರಾಣಸಿಯಲ್ಲಿ ಗಂಗಾನದಿ ನೀರಿನ ಮಟ್ಟ ಹೆಚ್ಚುತ್ತಿದ್ದು, ಮುಂದಿನ ಆದೇಶದವರೆಗೆ ನದಿಯಲ್ಲಿ ದೋಣಿಗಳ ಕಾರ್ಯಾಚರಣೆಗೆ ಅಲ್ಲಿನ ಆಡಳಿತ ನಿರ್ಬಂಧ ವಿಧಿಸಿದೆ. ರಾಜ್ಯದ ಇತರ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದಲ್ಲಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದ ಇರ್ಸಾಲ್ವಾಡಿ ಗ್ರಾಮದಲ್ಲಿ ಶೋಧ ಮತ್ತು ಪರಿಹಾರ ಕಾರ್ಯದಲ್ಲಿ 27ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ 57 ಜನರು ಕಣ್ಮರೆಯಾಗಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ ಮುಂಬೈ ಮತ್ತು ಸುತ್ತಮುತ್ತಲ ಭಾಗಗಳಲ್ಲಿ ಮೂರನೇ ದಿನವಾದ ಇಂದೂ ಕೂಡ ಭಾರಿ ಮಳೆಯಾಗಿದೆ. ಪಾಲ್ಗರ್, ರಾಯ್‌ಗಢ್, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆಯಿಂದಾಗಿ ಮುಂಬೈನಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಏಳು ಜಲಾಶಯಗಳಲ್ಲಿ ನೀರಿನ ಮಟ್ಟ ಶೇಕಡ 50 ರಷ್ಟು ತುಂಬಿದೆ. ಇನ್ನು ಕೆಲವು ದಿನಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವ ನಿರೀಕ್ಷೆ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version