ದಿನದ ಸುದ್ದಿ
ಕೊಡಗು ಮಹಾಮಳೆ | ವಿಪತ್ತು ನಿರ್ವಹಣಾ ಕೇಂದ್ರಗಳ ಕಂಪ್ಲೀಟ್ ಡೀಟೇಲ್ಸ್
ಸುದ್ದಿದಿನ ಡೆಸ್ಕ್ |ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೀಳುತ್ತಿರುವ ಭಾರೀ ಗಾಳಿ ಮಳೆಯಿಂದ ಜಿಲ್ಲೆಯ ಅನೇಕ ಭಾಗಗಳಲ್ಲಿ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಅನೇಕ ಸಂತ್ರಸ್ಥರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಪಾಯದಲ್ಲಿ ಸಿಲುಕಿದ್ದು, ತುರ್ತು ರಕ್ಷಣಾ ಕಾರ್ಯ ಕೈಗೊಳ್ಳಲು ದೂರವಾಣಿ ಮುಖಾಂತರ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ತಾಲ್ಲೂಕು ಕಚೇರಿ, ಪೊಲೀಸ್ ಕಚೇರಿಯಲ್ಲಿ ಸ್ಥಾಪಿಸಲಾಗಿರುವ 24*7 ವಿಪತ್ತು ನಿಯಂತ್ರಣಾ ಕೊಠಡಿಗೆ ವಿನಂತಿಸುತ್ತಿದ್ದಾರೆ.
ಜಿಲ್ಲಾಡಳಿತವು ಅಪಾಯದಲ್ಲಿ ಸಿಲುಕಿರುವ ಸಂತ್ರಸ್ಥರ ನೆರವಿಗೆ ಸ್ಪಂದಿಸಲು ಸಕಲ ಪರಿಹಾರ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲಾ ಕಚೇರಿ, ಪೊಲೀಸ್ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಸಹಾಯವಾಣಿಯು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿರುತ್ತದೆ. ಹಾಗೂ ಸ್ವೀಕೃತವಾಗುವ ಎಲ್ಲಾ ಕರೆಗಳಿಗೆ ಸ್ಪಂದಿಸಿ, ಶೀಘ್ರ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಾದ್ಯಂತ ಈವರೆವಿಗೆ ಒಟ್ಟು 2569 ಸಂತ್ರಸ್ಥರನ್ನು ರಕ್ಷಿಸಿದ್ದು, ಸುರಕ್ಷಿತ ಸ್ಥಳ/ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಜಿಲ್ಲೆಯಾದ್ಯಂತ ಒಟ್ಟು 31 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕೇಂದ್ರದಲ್ಲಿ ಸಂತ್ರಸ್ಥರಿಗೆ ಊಟೋಪಚಾರ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ, ಹಾಸಿಗೆ ಮತ್ತು ಹೊದಿಕೆ ಮುಂತಾದ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಸಚಿವ ಮಹೇಶ್ ತಿಳಿಸಿದರು.
ಮಡಿಕೇರಿ ತಾಲ್ಲೂಕಿನ ಕೊಟ್ಟಮುಡಿ, ಗಾಳಿಬೀಡು, ಕರ್ಣಂಗೇರಿ, ಮಕ್ಕಂದೂರು, ಜೋಡುಪಾಲ, ಕಾಟಕೇರಿ, ಹೊದವಾಡ, ಐಕೊಳ, ಮಡಿಕೇರಿ ನಗರ-2 ಪುನರ್ವಸತಿ ಕೇಂದ್ರದಲ್ಲಿ 550 ಸಂತ್ರಸ್ಥರು. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ, ಕಾಂಡನಕೊಲ್ಲಿ, ಮಂಜುನಾಥ ಕಲ್ಯಾಣ, ಮದರಸಾ, ಸೇಂಟ್ ಮೇರೀಸ್ ಸ್ಕೂಲ್, ರಾಮಮಂದಿರ, ಪನ್ಯ ಎಸ್ಟೇಟ್ ಸುಂಟಿಕೊಪ್ಪ, ಬೆಟ್ಟದಕಾಡು, ಗುಡ್ಡೆಹೊಸೂರು, ಮದಲಾಪುರ, ಹಾರಂಗಿ, ದಂಡಿನಪೇಟೆ, ಕೊಡವ ಸಮಾಜ, ಗಂಧದಕೋಟೆ, ಶಾಂತಳ್ಳಿ, ಸೋಮವಾರಪೇಟೆ ಪುನರ್ವಸತಿ ಕೇಂದ್ರದಲ್ಲಿ 2233 ಸಂತ್ರಸ್ಥರು.
ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು-3, ಅಮ್ಮತ್ತಿ-1, ವಿರಾಜಪೇಟೆ-1, ಪುನರ್ವಸತಿ ಕೇಂದ್ರದಲ್ಲಿ 376 ಸಂತ್ರಸ್ಥರು. ಜಲ್ಲೆಯ ಒಟ್ಟು 31 ಪುನರ್ವಸತಿ ಕೇಂದ್ರದಲ್ಲಿ 3159 ಸಂತ್ರಸ್ಥರಿಗೆ ಆಶ್ರಯವನ್ನು ಕಲ್ಪಿಸಲಾಗಿದೆ. ಪುನರ್ವಸತಿ ಕೇಂದ್ರದಲ್ಲಿ ಸಂತ್ರಸ್ಥರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಪ್ರತಿ ಕೇಂದ್ರಕ್ಕೆ ತಲಾ ಇಬ್ಬರಂತೆ ಅಧಿಕಾರಿ/ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ರಕ್ಷಣಾ ಪರಿಹಾರ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್), ನಾಗರಿಕ ರಕ್ಷಣಾ ಪಡೆ (ಸಿವಿಲ್ ಡಿಫೆನ್ಸ್ ಫೋರ್ಸ್-ಕ್ಯೂ.ಆರ್.ಟಿ), ಭಾರತೀಯ ಸೇನೆಯ ಒಂದು ತುಕಡಿಯ 167 ಜನರು ತಲಾ 10 ಸದಸ್ಯರಂತೆ 16 ತಂಡಗಳಾಗಿ ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ತುರ್ತು ಪರಿಸ್ಥಿತಿ ಇರುವ ಪ್ರದೇಶಗಳಾದ ಕಾಟಕೇರಿ, ಜೋಡುಪಾಲ, ಕಾಲೂರು, ಮುಕ್ಕೋಡ್ಲು, ಮಕ್ಕಂದೂರು, ಹೆಮ್ಮೆತ್ತಾಳು, ಮೇಘತ್ತಾಳು, ದೇವಸ್ತೂರು, ದೇವಮಾನಿ, ಹಟ್ಟಿಹೊಳೆ ಪ್ರದೇಶಗಳಲ್ಲಿ ಸಂತ್ರಸ್ಥರ ರಕ್ಷಣೆ ಮತ್ತು ಸ್ಥಳಾಂತರಕ್ಕೆ ಕಾರ್ಯನಿರ್ವಹಿಸುತ್ತಿವೆ ಎಂದು ಸಾ.ರಾ.ಮಹೇಶ್ ಅವರು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯ ಹಲವು ಭಾಗಗಳು ಮಳೆಯಿಂದ ಜಲಾವೃತಗೊಂಡಿದ್ದು, ಭಾರಿ ಭೂ ಕುಸಿತದಿಂದ ಅಪಾಯದಂಚಿನಲ್ಲಿ ಸಂತ್ರಸ್ಥರು ಸಿಲುಕಿದ್ದು, ಇವರುಗಳನ್ನು ರಕ್ಷಿಸಲು ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ವಾಯು ಮಾರ್ಗದ ಮುಖಾಂತರ ರಕ್ಷಣಾ ಕಾರ್ಯ ನಡೆಸಲು ಪ್ರಯತ್ನಿಸಲಾಗಿ, ಪ್ರತಿಕೂಲ ಹವಾಮಾನದಿಂದ ಹೆಲಿಕಾಪ್ಟರ್ ಮೂಲಕ ಈ ಕಾರ್ಯ ನಡೆಸಲು ಸಾಧ್ಯವಾಗಿರುವುದಿಲ್ಲ. ಮಡಿಕೇರಿ ತಾಲ್ಲೂಕಿನ ಸಂಪಾಜೆ ಹೋಬಳಿಯ ಜೋಡುಪಾಲ ಗ್ರಾಮದಲ್ಲಿ ಅಪಾಯದ ಪರಿಸ್ಥಿತಿಗೆ ಸಿಲುಕಿದ್ದ 140 ಸಂತ್ರಸ್ಥರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಹಾಯದಿಂದ ರಕ್ಷಿಸಿ, ಸುರಕ್ಷಿತ ಸ್ಥಳವಾದ ಸಂಪಾಜೆಯ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಸುಂಟಿಕೊಪ್ಪ ಹೋಬಳಿಯ ನಂದಿಮೊಟ್ಟೆಯಲ್ಲಿ ಅಪಾಯದ ಪರಿಸ್ಥಿತಿಗೆ ಸಿಲುಕಿದ್ದ ಇಬ್ಬರು ಗರ್ಭಿಣಿಯರನ್ನು ಒಳಗೊಂಡ ಒಟ್ಟು 30 ಮಂದಿ ಸಂತ್ರಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇವರಲ್ಲಿ 4 ಮಂದಿ ಗಾಯಾಳುಗಳಿರುವ ಬಗ್ಗೆ ವರದಿ ಸ್ವೀಕೃತವಾಗಿರುತ್ತದೆ. ಹಟ್ಟಿಹೊಳೆಯಿಂದ 10 ಕಿ.ಮೀ ಅಂತರದಲ್ಲಿರುವ ಸೂರ್ಯಕಿರಣ ಎಸ್ಟೇಟ್ನಲ್ಲಿ ಸಿಲುಕಿದ್ದ 12 ಮಹಿಳೆಯರು ಮತ್ತು 3 ಮಕ್ಕಳನ್ನು ಒಳಗೊಂಡಂತೆ ಒಟ್ಟು 37 ಮಂದಿಯನ್ನು ಭಾರತೀಯ ಸೇನೆ ಹಾಗೂ ತುರ್ತು ರಕ್ಷಣಾ ತಂಡದ ಸಹಾಯದಿಂದ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಭಾರತೀಯ ಸೇನಾ ತುಕಡಿ ಮತ್ತು ಕ್ಯೂ.ಆರ್.ಟಿ ತಂಡಗಳು ಮುಕ್ಕೋಡ್ಲುವಿನ ಸಂತ್ರಸ್ಥರೊಂದಿಗೆ ಸಂಪರ್ಕ ಸಾಧಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸಚಿವರು ಹೇಳಿದರು.
ಅಲ್ಲದೆ ಮಡಿಕೇರಿ ತಾಲ್ಲೂಕಿನ ಹೆಮ್ಮತ್ತಾಳು ಮತ್ತು ಮಕ್ಕಂದೂರು ಗ್ರಾಮದಲ್ಲಿ 130, ಕಾಲೂರು ಮತ್ತು ಗಾಳಿಬೀಡುವಿನಲ್ಲಿ 200, ಕಟ್ಟೆಮಾಡು ಮತ್ತು ಪರಂಬು ಪೈಸಾರಿ (ಮರಗೋಡು) ಯಲ್ಲಿ 60 ಕುಟುಂಬಗಳು, 2ನೇ ಮೊಣ್ಣಂಗೇರಿ-20, ಜೋಡುಪಾಲದಲ್ಲಿ 130 ಸಂತ್ರಸ್ಥರನ್ನು ಭಾರತೀಯ ಸೇನೆ, ಎಸ್.ಡಿ.ಆರ್.ಎಫ್ ಮತ್ತು ನಾಗರೀಕ ರಕ್ಷಣಾ ಪಡೆಗಳ ಜಂಟಿ ಕಾರ್ಯಾಚರಣೆಯಿಂದ ರಕ್ಷಿಸಲಾಗಿದೆ. ದಿನಾಂಕ:16-08-2018 ಹಾಗೂ 17-08-2018 ರಂದು ಜಿಲ್ಲೆಯಲ್ಲಿ ಬಿದ್ದ ಧಾರಾಕಾರ ಮಳೆಯಿಂದಾಗಿ ಒಟ್ಟು 05 ಜನರು ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನಿಡಿದರು.
ಕಂದಾಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ತುರ್ತು ರಕ್ಷಣಾ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ದೇಶನ ನೀಡಿದ್ದು, ಜಿಲ್ಲೆಯ ಒಟ್ಟು 07 ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ ಹಾಗೂ ತುರ್ತು ಕಾರ್ಯಾಚರಣೆ ಮತ್ತು ಪುನರ್ವಸತಿ ಕೇಂದ್ರಗಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿರುತ್ತಾರೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಜಿಲ್ಲಾಡಳಿತದಿಂದ ಕೈಗೊಂಡಿದೆ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


