Connect with us

ಅಂತರಂಗ

ಒಲವೇ ಜೀವನ ಸಾಕ್ಷಾತ್ಕಾರ..!

Published

on

sakshtkara_suddidina
  • ಕ್ರಾಂತಿರಾಜ್ ಒಡೆಯರ್, ಸಹಾಯಕ ಪ್ರಾಧ್ಯಾಪಕರು, ಮೈಸೂರು

ನ್ನಡ ಚಲನಚಿತ್ರ ಲೋಕದ ದಿಗ್ಗಜ ನಿರ್ದೇಶಕರಲ್ಲೊಬ್ಬರಾದ ಪುಟ್ಟಣ್ಣ ಕಣಗಾಲ್ ಅವರು ನಿರ್ದೇಶಿಸಿರುವ ಅದ್ಬುತ ಚಿತ್ರಗಳಲ್ಲಿ “ಸಾಕ್ಷಾತ್ಕಾರ” ಹಲವರಿಗೆ ಬಹಳ ಇಷ್ಟವಾಗುವ ಚಿತ್ರ. ಈ ಚಿತ್ರದಲ್ಲಿ, ನಾಯಕ ಡಾ ರಾಜಕುಮಾರ್ ಅವರ ತಂದೆ ಪಾತ್ರ ನಿರ್ವಹಿಸಿರುವ ಪೃಥ್ವಿರಾಜ್ ಕಪೂರ್ ಅವರು ಚಿತ್ರದಲ್ಲಿ ಹಲವು ಬಾರಿ ಹೇಳುವ ಘೋಷವಾಕ್ಯ “ಒಲವೇ ಜೀವನ ಸಾಕ್ಷಾತ್ಕಾರ”. ಈ ಘೋಷವಾಕ್ಯಕ್ಕೆ ಹೇಳಿ ಮಾಡಿಸಿದ ಹಾಗೆ ನಾಯಕ ರಾಜಕುಮಾರ್ ಅವರ ಪಾತ್ರ.

ಸೋದರ ಮಾವನ ಮಗಳನ್ನೇ ಮದುವೆ ಮಾಡಿಕೊಳ್ಳಬೇಕೆಂಬ ಷರತ್ತು ಹಾಕುವ ತಾಯಿ ಹಾಗೂ ಅದರಂತೆ ಒತ್ತಡದ ವಾತಾವರಣ ನಿರ್ಮಾಣ ಮಾಡುವ ಮನೆಯವರ ಮಾತನ್ನು ದಿಕ್ಕರಿಸಿ, ರಾಜಕುಮಾರ್ ಅವರು ತಂದೆಯ ಘೋಷವಾಕ್ಯ “ಒಲವೇ ಜೀವನ ಸಾಕ್ಷಾತ್ಕಾರ’ ದಂತೆ ತಾನು ಪ್ರೀತಿಸಿದ ಹುಡುಗಿ ಮೂಲ ನಕ್ಷತ್ರದವಳಾದರೂ, ಅವಳನ್ನೇ ವರಿಸಬೇಕೆಂದು ನಿರ್ದರಿಸಿದರೂ, ಅವರಿಬ್ಬರ ಮದುವೆ ಸಾಧ್ಯವಾಗದೇ, ಚಿತ್ರದ ನಾಯಕನ ಮನೆಯ ಜನರ ಕ್ರೂರತ್ವದಿಂದ ಸಾವಿಗೀಡಾಗುವ ನಾಯಕಿಯ ಮೃತದೇಹದ ಬಳಿ ಕುಳಿತು ಕಣ್ಣೀರಿಡುವ ನಾಯಕ ರಾಜಕುಮಾರ್, ಶವವಾಗಿ ಮಲಗಿರುವ ನಾಯಕಿಯ ಕೊರಳಿಗೆ ತಾಳಿಯನ್ನು ಕಟ್ಟಿ “ಒಲವೇ ಜೀವನ ಸಾಕ್ಷಾತ್ಕಾರ” ಎಂದು ಹೇಳುವ ದೃಶ್ಯ ಎಲ್ಲರ ಮನಕಲಕುವಂತೆ ಮಾಡುವುದರ ಜೊತೆಗೆ ಪ್ರೀತಿ, ಸಂಬಂಧ ಹಾಗೂ ವಿಶ್ವಾಸ ಎಂಬ ಪದಗಳ ಆದರ್ಶದ ಫಿಲಾಸಫಿಯನ್ನೇ ಹೇಳುತ್ತದೆ.

ಈ ಚಿತ್ರದಲ್ಲಿ ತೋರಿಸಿರುವ ಹಾಗೆ ಆದರ್ಶಮಯ ಪ್ರೀತಿಯನ್ನು ಒಂದು ಗಂಡಾಗಲಿ ಅಥವಾ ಹೆಣ್ಣಾಗಲಿ ಕಾಪಾಡಿಕೊಳ್ಳಲು ಸಾಧ್ಯವೇ ಎಂದು ಅವಲೋಕಿಸಿದಾಗ, ಇತಿಹಾಸದಲ್ಲಿ ಹಾಗೂ ವರ್ತಮಾನದಲ್ಲಿ ಕೆಲವು ಉದಾಹರಣೆಗಳು ಸಿಗಬಹುದು. ಆದರೆ ಮನುಷ್ಯರ ಸೈಕಾಲಜಿ ಇದರ ವಿರುದ್ಧವಾದ ದಿಕ್ಕಿನಲ್ಲಿ ಚಲಿಸುತ್ತದೆ. ಅದಕ್ಕಾಗಿಯೇ ಏನೋ ಒಂದು ಗಂಡು ಹೆಣ್ಣಿನ ಸಂಬಂಧದಲ್ಲಿ ವೈಮನಸ್ಸು, ಜಗಳ ಹಾಗೂ ದೋಷಾರೋಪದಿಂದ ಪ್ರಾರಂಭವಾಗಿ ಕೆಲವರ ಜೀವನದಲ್ಲಿ ವಿವಾಹೇತರ ಸಂಬಂಧಗಳು ಬೆಸೆದುಕೊಳ್ಳುವುದಲ್ಲದೇ, ಹಲವರ ಸಂಬಂಧಗಳು ವಿವಾಹ ವಿಚ್ಚೇದನದಲ್ಲಿ ಕೊನೆಗೊಳ್ಳುತ್ತವೆ.

ಇದು ಒಂಥರಾ “ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ನೆಡೆಯುವುದೇ ಜೀವನ” ಎಂಬ ನಾಣ್ಣುಡಿಗೆ ಪೂರಕವಾದಂತೆ. ಒಟ್ಟಿನಲ್ಲಿ ಹೇಳುವುದಾದರೆ, ಒಂದು ಗಂಡು ಮತ್ತು ಹೆಣ್ಣಿನ ನಡುವಿನ ಆದರ್ಶಮಯ ಪ್ರೀತಿ ಅಥವಾ ಸಂಬಂಧ ಮನುಷ್ಯರ ಸೈಕಾಲಜಿಗೆ ವಿರುದ್ಧ ದಿಕ್ಕಿನಲ್ಲಿ ಚಲಿಸಬೇಕಾಗಿದ್ದು, ಅದಕ್ಕೆ ಬಹಳ ಸದೃಢ ಮನಸ್ಸು ಒಂದು ಗಂಡು ಹಾಗೂ ಹೆಣ್ಣು ಇಬ್ಬರಲ್ಲೂ ಇರಬೇಕಾಗುತ್ತದೆ. ಇಂತಹ ಸದೃಢ ಮನಸ್ಸುಗಳು ಇರಲು ಸಾಧ್ಯವೇ ಎಂದು ನನ್ನನ್ನೂ ಒಳಗೊಂಡಂತೆ ನನ್ನ ಸುತ್ತಲಿರುವ ವ್ಯಕ್ತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ, ಮನುಷ್ಯರ ಜೀವನದ ಕೆಲವು ಸತ್ಯಗಳು ಅನಾವರಣಗೊಳ್ಳುತ್ತಾ ಹೋದವು.

ಎರಡು ದಿನಗಳ ಹಿಂದೆ, ನಾನು ಮತ್ತು ನನ್ನ ಮಡದಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ, ಆ ರಸ್ತೆಯ ಬದಿಯಲ್ಲಿ ನಿಂತಿದ್ದ ಕಾರಿನಿಂದ ಒಬ್ಬ ಮಹಿಳೆ ಡೋರ್ ತೆಗೆದು ಹೊರ ಬರಲಾಗಿ, “ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ಸೆಳೆಯುವುದು ಮನಸ್ಸು” ಎಂಬ ಮನುಷ್ಯನ ಸೈಕಾಲಜಿ ಪ್ರಕಾರ ಕಾರಿನಿಂದ ಇಳಿಯುವ ಆ ಮಹಿಳೆಯತ್ತ ನೆಟ್ಟ ನನ್ನ ಕಣ್ಣುಗಳನ್ನು ಗಮನಿಸಿದ ನನ್ನ ಮಡದಿ, “ದಾರಿ ಮುಂದೆ ಇದೆ. ಸರಿಗೇ ನೋಡ್ಕಂಡು ಗಾಡಿ ಓಡ್ಸಿ” ಎಂದು ನನಗೆ ಹೇಳಲಾಗಿ, “ಚೆನ್ನಾಗಿದಾರಲ್ವ ನೋಡಕೆ” ಎಂದು ನಾನು ಮಡದಿಗೆ ಉತ್ತರ ಕೊಡಲಾಗಿ, ಇಬ್ಬರೂ ಆ ಸಂದರ್ಭದಲ್ಲಿ ನಕ್ಕು, ಮನೆಗೆ ತೆರಳಿದ ಮೇಲೂ ಆ ಸಂದರ್ಭವನ್ನು ನೆನೆದು ನನ್ನ ಮಡದಿ ನನ್ನನ್ನು ಕಿಚಾಯಿಸಿದ್ದೂ ಇದೆ. ನಮ್ಮಿಬ್ಬರ ನಡುವೆ ಇಂತಹ ಸಂದರ್ಭಗಳು ಬಂದಿರುವುದು ಹಲವಾರು.

ಕನ್ನಡ ಚಲನ ಚಿತ್ರದ ಮಾಜಿ ನಟಿ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ನನಗೆ ಬಹಳ ಇಷ್ಟ ಎಂದು ತಿಳಿದಿರುವ ನನ್ನ ಮಡದಿ, ರಮ್ಯಾ ಅವರ ಯಾವುದೇ ಚೆಂದದ ಚಿತ್ರ ಸಿಕ್ಕರೆ ನನಗೆ ಫೋನಿನ ಮೂಲಕ ಕಳುಹಿಸುತ್ತಾರೆ. ಹಾಗೆಯೇ ನನ್ನ ಮಡದಿಗೆ ನಟ ದರ್ಶನ್ ತೂಗುದೀಪ ಎಂದರೆ ನನಗಿಂತ ಇಷ್ಟ. ದರ್ಶನ್ ರ ಚೆಂದದ ಚಿತ್ರ ಹಾಗೂ ಅವರು ನಟಿಸಿರುವ ಚಲನ ಚಿತ್ರದ ತುಣುಕುಗಳನ್ನು ನನ್ನ ಮಡದಿಗೆ ನಾನು ಕಳುಹಿಸುತ್ತೇನೆ.

ಅಷ್ಟೇ ಅಲ್ಲದೇ, ಅವರು ನನ್ನ ಜೊತೆ ಇರುವಾಗ ನಮ್ಮ ಕಣ್ಣಿಗೆ ಕಾಣುವ ಚೆಂದದ ಪುರುಷರನ್ನು ನೋಡಿ ಪ್ರಶಂಸಿಸುವಾಗ, ನಾನು ಕೂಡ ಅವರೊಡನೆ ದನಿಗೂಡಿಸುತ್ತೇನೆ. ಇಷ್ಟಿದ್ದರೂ ನಮ್ಮಿಬ್ಬರಲ್ಲಿ ಯಾವತ್ತೂ ಕೂಡ “ಜೆಲಸಿ” ಎಂಬುದನ್ನು ನಾನು ಕಂಡಿಲ್ಲ. ನಾವಿಬ್ಬರೂ ಮನುಷ್ಯರ ಸೈಕಾಲಜಿ ಅನ್ನು ಸರಿಯಾಗಿ ಅರ್ಥಮಾಡಿಕೊಂಡಿದ್ದು, ಕ್ಷಣ ಮಾತ್ರಕ್ಕೆ ಬೇರೆಡೆ ಆಕರ್ಷಿತರಾದರೂ, ನಮ್ಮಲ್ಲಿರುವ ಸತ್ಯವನ್ನು ಅರಗಿಸಿಕೊಳ್ಳುವ ಗುಣ ಹಾಗೂ ಸಾಕ್ಷಾತ್ಕಾರ ಚಿತ್ರದಲ್ಲಿ ಡಾ ರಾಜಕುಮಾರ್ ಅವರು ಹೇಳುವ “ಒಲವು” ಎಂಬ ಭಾವನೆ ವಿಸ್ತಾರವಾದ ಜೀವನದಲ್ಲಿ ನಮ್ಮಿಬ್ಬರನ್ನು ಮನುಷ್ಯರ ಸೈಕಾಲಜಿ ಗೆ ವಿರುದ್ಧವಾಗಿ ನೆಡೆಯುವಂತೆ ಮಾಡುತ್ತಿದೆಯೇನೋ ಎಂಬುದು ನನ್ನ ಅನಿಸಿಕೆ.

ಒಂದು ಗಂಡು ಮತ್ತು ಹೆಣ್ಣಿನ ನಡುವೆ ಉಂಟಾಗುವ “ಒಲವು” ಎಂಬ ಭಾವನೆಗೆ ಮನುಷ್ಯರ ಸೈಕಾಲಜಿ ಪ್ರಚೋದಿಸುವ “ಜೀವನದ ತಾತ್ಕಾಲಿಕ ಆಕರ್ಷಣೆ” ಯನ್ನು ಮೀರಿಸುವ ಶಕ್ತಿ ಇದೆ ಎಂಬುದು ನನ್ನ ಅನುಭವದ ಅನಿಸಿಕೆ. ಈ “ಒಲವು” ಉಂಟಾಗಲು ಒಂದು ಗಂಡು ಹಾಗೂ ಹೆಣ್ಣಿನ ಆಸೆ ಮತ್ತು ಆದ್ಯತೆಗಳಲ್ಲಿ ಸಾಮ್ಯತೆ, ಇಬ್ಬರ ಜೀವನದ ಉದ್ದೇಶ ಹಾಗೂ ಗುರಿ ಸಾದಿಸಲು ಒಬ್ಬರಿಗೊಬ್ಬರು ಒತ್ತಾಸೆಯಾಗಿ ನಿಲ್ಲುವ ಮನೋಭಾವ, ಸ್ವಾತಂತ್ರ್ಯ ಹಾಗೂ ಸಮಾನತೆ, ಸ್ನೇಹಿತರ ಭಾವನೆ ಇವೆಲ್ಲದರಿಂದ ಕೂಡಿರುವ ವಾತಾವರಣ ಬಹಳ ಮುಖ್ಯ ಎಂದು ನನ್ನ ಅಭಿಪ್ರಾಯ.

ನನ್ನ ಕೆಲವು ಸ್ನೇಹಿತರು ಹಾಗೂ ಸಂಬಂಧಿಕರನ್ನೂ ನೋಡಿದ್ದೇನೆ. ಅದರಲ್ಲಿ ಕೆಲವರು ತಮ್ಮ ಕುಟುಂಬದ ಯಾರನ್ನೋ ಖುಷಿಪಡಿಸಲು, ಅವರ ಪೋಷಕರು ಗುರುತು ಪಡಿಸಿದವರನ್ನ ಮದುವೆ ಮಾಡಿಕೊಂಡು, ಮಡದಿಗಳಿಬ್ಬರ ನಡುವಿನ ಆಸೆ, ಗುರಿ, ಸಿದ್ದಾಂತ, ಜೀವನ ಶೈಲಿ, ಜೀವನದ ಉದ್ದೇಶ, ಆಲೋಚನೆ, ಸಮಾಜದ ಬಗೆಗಿನ ಪರಿಕಲ್ಪನೆ ಹಾಗೂ ಹವ್ಯಾಸಗಳಲ್ಲಿ ಅಜಗಜಾಂತರ ವ್ಯತ್ಯಾಸಗಳಿದ್ದು, ಒಬ್ಬರ ಒಟ್ಟಾರೆ ಜೀವನ ಶೈಲಿ ಕಂಡರೆ ಮತ್ತೊಬ್ಬರಿಗೆ ಕೋಪ. ಒಬ್ಬರ ಮೇಲೊಬ್ಬರು ದೋಷಾರೋಪ ಮಾಡಿಕೊಂಡು, ತಮ್ಮ ನಿಕಟವರ್ತಿಗಳೊಂದಿಗೆ ಮಡದಿಯ ಬಗೆಗೆ ದೂರನ್ನ ಹೇಳಿ, ತಾವಿರುವ ಪರಿಸ್ಥಿತಿಯ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸುವ ಸ್ಥಿತಿ ಇವರದು.

ಇದರ ಪರಿಣಾಮವಾಗಿ, ಇಬ್ಬರ ನಡುವಿನ ಮುಖಾಮುಖಿ ತಪ್ಪಿಸಲು ಏನೇನೋ ಕಾರಣಗಳನ್ನು ಹೇಳಿ ಮನೆಗೆ ತಡವಾಗಿ ಬರುವುದೋ, ಬರೀ ಔಪಚಾರಿಕ ಮಾತುಗಳನ್ನಷ್ಟೇ ಆಡಿ ಬೇರೆ ಕೆಲಸಗಳಲ್ಲಿ ಪಾಲ್ಗೊಳ್ಳುವುದೋ, ಯಾವುದಾದರೊಂದು ಕಾರಣಗಳನ್ನು ಹೇಳಿ ಎಷ್ಟು ಸಮಯ ಅಥವಾ ದಿನಗಳು ಸಾಧ್ಯವೂ ಅಷ್ಟು ದೂರ ಉಳಿಯುವುದನ್ನು ಮೊದಲಿಸಿ ವಿವಾಹೇತರ ಸಂಬಂಧಗಳಿಗೆ ಕೆಲವರು ಒಳಗಾಗಿದ್ದರೆ, ಕೆಲವರು ಈ ಅನ್ಯೋನ್ಯತೆ ಇಲ್ಲದ ಸಂಬಂಧ ಸಾಕೆಂದು ವಿವಾಹ ವಿಚ್ಚೇದನ ಪಡೆದು ತಮ್ಮ ಕಲ್ಪನೆಯ ಜೀವನವನ್ನು ನೆಡೆಸುತ್ತಿದ್ದಾರೆ. ಇನ್ನೂ ಹಲವರು ಸಮಾಜದ ಕಟ್ಟುಪಾಡುಗಳಿಗೆ ಹೆದರಿ ಕಷ್ಟವೋ ಸುಖವೋ “ಕಟ್ಟುಕೊಂಡಿದದ್ದರ ಜೊತೆ ಕೊನೆವರೆಗೂ ಸಾಯಬೇಕು” ಎಂದು ನಿಶ್ಚಯಿಸಿ ಜೀವನವನ್ನ ದೂಡುತ್ತಿದ್ದಾರೆ.

ಇನ್ನು ಈ ಯುವಕ ಯುವತಿಯರ ನಡುವಿನ “ಪ್ರೀತಿ” ಎಂಬ ಸಂಬಂದದ್ದು ಇನ್ನೊಂದು ವಿಚಿತ್ರ. ಇವರಿಗೆ ಮನುಷ್ಯರ ಸಹಜ ಸೈಕಾಲಜಿ ಸತ್ಯಗಳು ಆರ್ಥವಾಗದೇ, ಅಥವಾ ಅರ್ಥವಾದರೂ ಅದನ್ನು ಜೀರ್ಣಿಸಿಕೊಳ್ಳಲಾಗದೇ ಕೆಲವರು ತಮ್ಮ ಪ್ರೇಯಸಿ ಅಥವಾ ಪ್ರಿಯತಮನನ್ನು ದೂಷಿಸಿ, ದ್ವೇಷಿಸಿ , ತಮ್ಮ ನಡವಳಿಕೆಯಲ್ಲಿ ಬಾರೀ ಬದಲಾವಣೆ ಮಾಡಿಕೊಂಡು, ಅಡ್ಡ ದಾರಿಯನ್ನು ಹಿಡಿದಿದ್ದರೆ, ಇನ್ನು ಕೆಲವು ಮುಗ್ಧ ಮನಸ್ಸುಗಳು ತಮ್ಮ ಜೀವನದಲ್ಲಾದ ಕಹಿ ಘಟನೆಯಿಂದ ಹೊರಬರಲಾರದೆ ಖಿನ್ನತೆಗೆ ಒಳಗಾಗಿರುವುದನ್ನು ನಾನು ನೋಡಿದ್ದೇನೆ.

ಸಮಾಜದ ಎಲ್ಲ ವ್ಯಕ್ತಿಗಳ ಹಿತಬಯಸುವವನಾಗಿ ಹೇಳುವುದಾದರೆ, ಒಂದು ಗಂಡು ಅಥವಾ ಹೆಣ್ಣು, ಯುವ ವಯಸ್ಸಿನಲ್ಲಿ ಪ್ರೀತಿ ಎಂಬ ಸಂಕೋಲೆಯಲ್ಲಿ ಬೀಳುವ ಹಾಗೂ ಮದುವೆ ಎಂಬ ಸಂಬಂಧದಲ್ಲಿ ಬೆಸೆದುಕೊಳ್ಳುವ ಮೊದಲು ಈ “ಒಲವು” ಎಂಬ ಪದದ ಅಂಶಗಳಾದ ಸಿದ್ದಾಂತ, ಜೀವನ ಶೈಲಿ, ಜೀವನದ ಉದ್ದೇಶ, ಆಲೋಚನೆ, ಸಮಾಜದ ಬಗೆಗಿನ ಪರಿಕಲ್ಪನೆ, ಗೆಳೆತನ, ಹವ್ಯಾಸಗಳು ಹಾಗೂ ಇತ್ಯಾದಿಗಳಲ್ಲಿ ತಮ್ಮದೇ ಆಲೋಚನೆಯುಳ್ಳ ಜತೆಗಾರರನ್ನ ಹುಡುಕಿಕೊಳ್ಳುವ ಮೂಲಕ ಸಾಯುವವರೆಗೂ ಸಂತೋಷವಾಗಿ ಬದುಕಿ ತಮ್ಮ ಜೀವನದ ಉದ್ದೇಶವನ್ನು ಸಾರ್ಥಕಗೊಳಿಸಬಹುದು.

ಒಂದು ವೇಳೆ ಅನಿರೀಕ್ಷಿತವಾಗಿಯೋ ಅಥವಾ ಪೋಷಕರು ನಿಶ್ಚಯಿಸುವ ಒಪ್ಪಂದದ ಮದುವೆಗಳಿಂದ ಬೆಸೆದುಕೊಳ್ಳುವ ಸಂಬಂಧದಿಂದ “ಒಲವಿನ” ಅಂಶಗಳನ್ನ ನಿರೀಕ್ಷಿಸಲು ಆರಂಭದಲ್ಲಿ ಸಾಧ್ಯವಾಗದಿದ್ದರೂ, ಒಂದು ಗಂಡು ಹಾಗೂ ಹೆಣ್ಣಿನಲ್ಲಿ ಇರುವ ಮೆಚುರಿಟಿ ಹಾಗೂ ಪರಸ್ಪರ ತಿಳುವಳಿಕೆಯ ಗುಣಗಳಿದ್ದರೆ ಈ ಮನುಷ್ಯರ ಸಹಜ ಸೈಕಾಲಜಿ “ಇರುವುದೆಲ್ಲವ ಬಿಟ್ಟು ಇರುದುದರೆಡೆಗೆ ಜೀವನ” ಎಂಬ ಮಾತನ್ನು ಒಂದು ಗಂಡು ಮತ್ತು ಹೆಣ್ಣಿನ ವಿಸ್ತಾರ ಸಂಬಂಧದ ಪರಿಕಲ್ಪನೆಯಲ್ಲಿ ಸುಳ್ಳು ಮಾಡಿ, ಸಾಕ್ಷಾತ್ಕಾರ ಚಿತ್ರದ ಘೋಷವಾಕ್ಯ “ಒಲವೇ ಜೀವನ ಸಾಕ್ಷಾತ್ಕಾರ” ವನ್ನು ಸತ್ಯವಾಗಿಸಬಹುದು ಎಂಬ ಅನಿಸಿಕೆ ನನ್ನದು.

ಸುದ್ದಿದಿನ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending