Connect with us

ಅಂತರಂಗ

ಒಲವೇ ಜೀವನ ಸಾಕ್ಷಾತ್ಕಾರ..!

Published

on

sakshtkara_suddidina
  • ಕ್ರಾಂತಿರಾಜ್ ಒಡೆಯರ್, ಸಹಾಯಕ ಪ್ರಾಧ್ಯಾಪಕರು, ಮೈಸೂರು

ನ್ನಡ ಚಲನಚಿತ್ರ ಲೋಕದ ದಿಗ್ಗಜ ನಿರ್ದೇಶಕರಲ್ಲೊಬ್ಬರಾದ ಪುಟ್ಟಣ್ಣ ಕಣಗಾಲ್ ಅವರು ನಿರ್ದೇಶಿಸಿರುವ ಅದ್ಬುತ ಚಿತ್ರಗಳಲ್ಲಿ “ಸಾಕ್ಷಾತ್ಕಾರ” ಹಲವರಿಗೆ ಬಹಳ ಇಷ್ಟವಾಗುವ ಚಿತ್ರ. ಈ ಚಿತ್ರದಲ್ಲಿ, ನಾಯಕ ಡಾ ರಾಜಕುಮಾರ್ ಅವರ ತಂದೆ ಪಾತ್ರ ನಿರ್ವಹಿಸಿರುವ ಪೃಥ್ವಿರಾಜ್ ಕಪೂರ್ ಅವರು ಚಿತ್ರದಲ್ಲಿ ಹಲವು ಬಾರಿ ಹೇಳುವ ಘೋಷವಾಕ್ಯ “ಒಲವೇ ಜೀವನ ಸಾಕ್ಷಾತ್ಕಾರ”. ಈ ಘೋಷವಾಕ್ಯಕ್ಕೆ ಹೇಳಿ ಮಾಡಿಸಿದ ಹಾಗೆ ನಾಯಕ ರಾಜಕುಮಾರ್ ಅವರ ಪಾತ್ರ.

ಸೋದರ ಮಾವನ ಮಗಳನ್ನೇ ಮದುವೆ ಮಾಡಿಕೊಳ್ಳಬೇಕೆಂಬ ಷರತ್ತು ಹಾಕುವ ತಾಯಿ ಹಾಗೂ ಅದರಂತೆ ಒತ್ತಡದ ವಾತಾವರಣ ನಿರ್ಮಾಣ ಮಾಡುವ ಮನೆಯವರ ಮಾತನ್ನು ದಿಕ್ಕರಿಸಿ, ರಾಜಕುಮಾರ್ ಅವರು ತಂದೆಯ ಘೋಷವಾಕ್ಯ “ಒಲವೇ ಜೀವನ ಸಾಕ್ಷಾತ್ಕಾರ’ ದಂತೆ ತಾನು ಪ್ರೀತಿಸಿದ ಹುಡುಗಿ ಮೂಲ ನಕ್ಷತ್ರದವಳಾದರೂ, ಅವಳನ್ನೇ ವರಿಸಬೇಕೆಂದು ನಿರ್ದರಿಸಿದರೂ, ಅವರಿಬ್ಬರ ಮದುವೆ ಸಾಧ್ಯವಾಗದೇ, ಚಿತ್ರದ ನಾಯಕನ ಮನೆಯ ಜನರ ಕ್ರೂರತ್ವದಿಂದ ಸಾವಿಗೀಡಾಗುವ ನಾಯಕಿಯ ಮೃತದೇಹದ ಬಳಿ ಕುಳಿತು ಕಣ್ಣೀರಿಡುವ ನಾಯಕ ರಾಜಕುಮಾರ್, ಶವವಾಗಿ ಮಲಗಿರುವ ನಾಯಕಿಯ ಕೊರಳಿಗೆ ತಾಳಿಯನ್ನು ಕಟ್ಟಿ “ಒಲವೇ ಜೀವನ ಸಾಕ್ಷಾತ್ಕಾರ” ಎಂದು ಹೇಳುವ ದೃಶ್ಯ ಎಲ್ಲರ ಮನಕಲಕುವಂತೆ ಮಾಡುವುದರ ಜೊತೆಗೆ ಪ್ರೀತಿ, ಸಂಬಂಧ ಹಾಗೂ ವಿಶ್ವಾಸ ಎಂಬ ಪದಗಳ ಆದರ್ಶದ ಫಿಲಾಸಫಿಯನ್ನೇ ಹೇಳುತ್ತದೆ.

ಈ ಚಿತ್ರದಲ್ಲಿ ತೋರಿಸಿರುವ ಹಾಗೆ ಆದರ್ಶಮಯ ಪ್ರೀತಿಯನ್ನು ಒಂದು ಗಂಡಾಗಲಿ ಅಥವಾ ಹೆಣ್ಣಾಗಲಿ ಕಾಪಾಡಿಕೊಳ್ಳಲು ಸಾಧ್ಯವೇ ಎಂದು ಅವಲೋಕಿಸಿದಾಗ, ಇತಿಹಾಸದಲ್ಲಿ ಹಾಗೂ ವರ್ತಮಾನದಲ್ಲಿ ಕೆಲವು ಉದಾಹರಣೆಗಳು ಸಿಗಬಹುದು. ಆದರೆ ಮನುಷ್ಯರ ಸೈಕಾಲಜಿ ಇದರ ವಿರುದ್ಧವಾದ ದಿಕ್ಕಿನಲ್ಲಿ ಚಲಿಸುತ್ತದೆ. ಅದಕ್ಕಾಗಿಯೇ ಏನೋ ಒಂದು ಗಂಡು ಹೆಣ್ಣಿನ ಸಂಬಂಧದಲ್ಲಿ ವೈಮನಸ್ಸು, ಜಗಳ ಹಾಗೂ ದೋಷಾರೋಪದಿಂದ ಪ್ರಾರಂಭವಾಗಿ ಕೆಲವರ ಜೀವನದಲ್ಲಿ ವಿವಾಹೇತರ ಸಂಬಂಧಗಳು ಬೆಸೆದುಕೊಳ್ಳುವುದಲ್ಲದೇ, ಹಲವರ ಸಂಬಂಧಗಳು ವಿವಾಹ ವಿಚ್ಚೇದನದಲ್ಲಿ ಕೊನೆಗೊಳ್ಳುತ್ತವೆ.

ಇದು ಒಂಥರಾ “ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ನೆಡೆಯುವುದೇ ಜೀವನ” ಎಂಬ ನಾಣ್ಣುಡಿಗೆ ಪೂರಕವಾದಂತೆ. ಒಟ್ಟಿನಲ್ಲಿ ಹೇಳುವುದಾದರೆ, ಒಂದು ಗಂಡು ಮತ್ತು ಹೆಣ್ಣಿನ ನಡುವಿನ ಆದರ್ಶಮಯ ಪ್ರೀತಿ ಅಥವಾ ಸಂಬಂಧ ಮನುಷ್ಯರ ಸೈಕಾಲಜಿಗೆ ವಿರುದ್ಧ ದಿಕ್ಕಿನಲ್ಲಿ ಚಲಿಸಬೇಕಾಗಿದ್ದು, ಅದಕ್ಕೆ ಬಹಳ ಸದೃಢ ಮನಸ್ಸು ಒಂದು ಗಂಡು ಹಾಗೂ ಹೆಣ್ಣು ಇಬ್ಬರಲ್ಲೂ ಇರಬೇಕಾಗುತ್ತದೆ. ಇಂತಹ ಸದೃಢ ಮನಸ್ಸುಗಳು ಇರಲು ಸಾಧ್ಯವೇ ಎಂದು ನನ್ನನ್ನೂ ಒಳಗೊಂಡಂತೆ ನನ್ನ ಸುತ್ತಲಿರುವ ವ್ಯಕ್ತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ, ಮನುಷ್ಯರ ಜೀವನದ ಕೆಲವು ಸತ್ಯಗಳು ಅನಾವರಣಗೊಳ್ಳುತ್ತಾ ಹೋದವು.

ಎರಡು ದಿನಗಳ ಹಿಂದೆ, ನಾನು ಮತ್ತು ನನ್ನ ಮಡದಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ, ಆ ರಸ್ತೆಯ ಬದಿಯಲ್ಲಿ ನಿಂತಿದ್ದ ಕಾರಿನಿಂದ ಒಬ್ಬ ಮಹಿಳೆ ಡೋರ್ ತೆಗೆದು ಹೊರ ಬರಲಾಗಿ, “ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ಸೆಳೆಯುವುದು ಮನಸ್ಸು” ಎಂಬ ಮನುಷ್ಯನ ಸೈಕಾಲಜಿ ಪ್ರಕಾರ ಕಾರಿನಿಂದ ಇಳಿಯುವ ಆ ಮಹಿಳೆಯತ್ತ ನೆಟ್ಟ ನನ್ನ ಕಣ್ಣುಗಳನ್ನು ಗಮನಿಸಿದ ನನ್ನ ಮಡದಿ, “ದಾರಿ ಮುಂದೆ ಇದೆ. ಸರಿಗೇ ನೋಡ್ಕಂಡು ಗಾಡಿ ಓಡ್ಸಿ” ಎಂದು ನನಗೆ ಹೇಳಲಾಗಿ, “ಚೆನ್ನಾಗಿದಾರಲ್ವ ನೋಡಕೆ” ಎಂದು ನಾನು ಮಡದಿಗೆ ಉತ್ತರ ಕೊಡಲಾಗಿ, ಇಬ್ಬರೂ ಆ ಸಂದರ್ಭದಲ್ಲಿ ನಕ್ಕು, ಮನೆಗೆ ತೆರಳಿದ ಮೇಲೂ ಆ ಸಂದರ್ಭವನ್ನು ನೆನೆದು ನನ್ನ ಮಡದಿ ನನ್ನನ್ನು ಕಿಚಾಯಿಸಿದ್ದೂ ಇದೆ. ನಮ್ಮಿಬ್ಬರ ನಡುವೆ ಇಂತಹ ಸಂದರ್ಭಗಳು ಬಂದಿರುವುದು ಹಲವಾರು.

ಕನ್ನಡ ಚಲನ ಚಿತ್ರದ ಮಾಜಿ ನಟಿ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ನನಗೆ ಬಹಳ ಇಷ್ಟ ಎಂದು ತಿಳಿದಿರುವ ನನ್ನ ಮಡದಿ, ರಮ್ಯಾ ಅವರ ಯಾವುದೇ ಚೆಂದದ ಚಿತ್ರ ಸಿಕ್ಕರೆ ನನಗೆ ಫೋನಿನ ಮೂಲಕ ಕಳುಹಿಸುತ್ತಾರೆ. ಹಾಗೆಯೇ ನನ್ನ ಮಡದಿಗೆ ನಟ ದರ್ಶನ್ ತೂಗುದೀಪ ಎಂದರೆ ನನಗಿಂತ ಇಷ್ಟ. ದರ್ಶನ್ ರ ಚೆಂದದ ಚಿತ್ರ ಹಾಗೂ ಅವರು ನಟಿಸಿರುವ ಚಲನ ಚಿತ್ರದ ತುಣುಕುಗಳನ್ನು ನನ್ನ ಮಡದಿಗೆ ನಾನು ಕಳುಹಿಸುತ್ತೇನೆ.

ಅಷ್ಟೇ ಅಲ್ಲದೇ, ಅವರು ನನ್ನ ಜೊತೆ ಇರುವಾಗ ನಮ್ಮ ಕಣ್ಣಿಗೆ ಕಾಣುವ ಚೆಂದದ ಪುರುಷರನ್ನು ನೋಡಿ ಪ್ರಶಂಸಿಸುವಾಗ, ನಾನು ಕೂಡ ಅವರೊಡನೆ ದನಿಗೂಡಿಸುತ್ತೇನೆ. ಇಷ್ಟಿದ್ದರೂ ನಮ್ಮಿಬ್ಬರಲ್ಲಿ ಯಾವತ್ತೂ ಕೂಡ “ಜೆಲಸಿ” ಎಂಬುದನ್ನು ನಾನು ಕಂಡಿಲ್ಲ. ನಾವಿಬ್ಬರೂ ಮನುಷ್ಯರ ಸೈಕಾಲಜಿ ಅನ್ನು ಸರಿಯಾಗಿ ಅರ್ಥಮಾಡಿಕೊಂಡಿದ್ದು, ಕ್ಷಣ ಮಾತ್ರಕ್ಕೆ ಬೇರೆಡೆ ಆಕರ್ಷಿತರಾದರೂ, ನಮ್ಮಲ್ಲಿರುವ ಸತ್ಯವನ್ನು ಅರಗಿಸಿಕೊಳ್ಳುವ ಗುಣ ಹಾಗೂ ಸಾಕ್ಷಾತ್ಕಾರ ಚಿತ್ರದಲ್ಲಿ ಡಾ ರಾಜಕುಮಾರ್ ಅವರು ಹೇಳುವ “ಒಲವು” ಎಂಬ ಭಾವನೆ ವಿಸ್ತಾರವಾದ ಜೀವನದಲ್ಲಿ ನಮ್ಮಿಬ್ಬರನ್ನು ಮನುಷ್ಯರ ಸೈಕಾಲಜಿ ಗೆ ವಿರುದ್ಧವಾಗಿ ನೆಡೆಯುವಂತೆ ಮಾಡುತ್ತಿದೆಯೇನೋ ಎಂಬುದು ನನ್ನ ಅನಿಸಿಕೆ.

ಒಂದು ಗಂಡು ಮತ್ತು ಹೆಣ್ಣಿನ ನಡುವೆ ಉಂಟಾಗುವ “ಒಲವು” ಎಂಬ ಭಾವನೆಗೆ ಮನುಷ್ಯರ ಸೈಕಾಲಜಿ ಪ್ರಚೋದಿಸುವ “ಜೀವನದ ತಾತ್ಕಾಲಿಕ ಆಕರ್ಷಣೆ” ಯನ್ನು ಮೀರಿಸುವ ಶಕ್ತಿ ಇದೆ ಎಂಬುದು ನನ್ನ ಅನುಭವದ ಅನಿಸಿಕೆ. ಈ “ಒಲವು” ಉಂಟಾಗಲು ಒಂದು ಗಂಡು ಹಾಗೂ ಹೆಣ್ಣಿನ ಆಸೆ ಮತ್ತು ಆದ್ಯತೆಗಳಲ್ಲಿ ಸಾಮ್ಯತೆ, ಇಬ್ಬರ ಜೀವನದ ಉದ್ದೇಶ ಹಾಗೂ ಗುರಿ ಸಾದಿಸಲು ಒಬ್ಬರಿಗೊಬ್ಬರು ಒತ್ತಾಸೆಯಾಗಿ ನಿಲ್ಲುವ ಮನೋಭಾವ, ಸ್ವಾತಂತ್ರ್ಯ ಹಾಗೂ ಸಮಾನತೆ, ಸ್ನೇಹಿತರ ಭಾವನೆ ಇವೆಲ್ಲದರಿಂದ ಕೂಡಿರುವ ವಾತಾವರಣ ಬಹಳ ಮುಖ್ಯ ಎಂದು ನನ್ನ ಅಭಿಪ್ರಾಯ.

ನನ್ನ ಕೆಲವು ಸ್ನೇಹಿತರು ಹಾಗೂ ಸಂಬಂಧಿಕರನ್ನೂ ನೋಡಿದ್ದೇನೆ. ಅದರಲ್ಲಿ ಕೆಲವರು ತಮ್ಮ ಕುಟುಂಬದ ಯಾರನ್ನೋ ಖುಷಿಪಡಿಸಲು, ಅವರ ಪೋಷಕರು ಗುರುತು ಪಡಿಸಿದವರನ್ನ ಮದುವೆ ಮಾಡಿಕೊಂಡು, ಮಡದಿಗಳಿಬ್ಬರ ನಡುವಿನ ಆಸೆ, ಗುರಿ, ಸಿದ್ದಾಂತ, ಜೀವನ ಶೈಲಿ, ಜೀವನದ ಉದ್ದೇಶ, ಆಲೋಚನೆ, ಸಮಾಜದ ಬಗೆಗಿನ ಪರಿಕಲ್ಪನೆ ಹಾಗೂ ಹವ್ಯಾಸಗಳಲ್ಲಿ ಅಜಗಜಾಂತರ ವ್ಯತ್ಯಾಸಗಳಿದ್ದು, ಒಬ್ಬರ ಒಟ್ಟಾರೆ ಜೀವನ ಶೈಲಿ ಕಂಡರೆ ಮತ್ತೊಬ್ಬರಿಗೆ ಕೋಪ. ಒಬ್ಬರ ಮೇಲೊಬ್ಬರು ದೋಷಾರೋಪ ಮಾಡಿಕೊಂಡು, ತಮ್ಮ ನಿಕಟವರ್ತಿಗಳೊಂದಿಗೆ ಮಡದಿಯ ಬಗೆಗೆ ದೂರನ್ನ ಹೇಳಿ, ತಾವಿರುವ ಪರಿಸ್ಥಿತಿಯ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸುವ ಸ್ಥಿತಿ ಇವರದು.

ಇದರ ಪರಿಣಾಮವಾಗಿ, ಇಬ್ಬರ ನಡುವಿನ ಮುಖಾಮುಖಿ ತಪ್ಪಿಸಲು ಏನೇನೋ ಕಾರಣಗಳನ್ನು ಹೇಳಿ ಮನೆಗೆ ತಡವಾಗಿ ಬರುವುದೋ, ಬರೀ ಔಪಚಾರಿಕ ಮಾತುಗಳನ್ನಷ್ಟೇ ಆಡಿ ಬೇರೆ ಕೆಲಸಗಳಲ್ಲಿ ಪಾಲ್ಗೊಳ್ಳುವುದೋ, ಯಾವುದಾದರೊಂದು ಕಾರಣಗಳನ್ನು ಹೇಳಿ ಎಷ್ಟು ಸಮಯ ಅಥವಾ ದಿನಗಳು ಸಾಧ್ಯವೂ ಅಷ್ಟು ದೂರ ಉಳಿಯುವುದನ್ನು ಮೊದಲಿಸಿ ವಿವಾಹೇತರ ಸಂಬಂಧಗಳಿಗೆ ಕೆಲವರು ಒಳಗಾಗಿದ್ದರೆ, ಕೆಲವರು ಈ ಅನ್ಯೋನ್ಯತೆ ಇಲ್ಲದ ಸಂಬಂಧ ಸಾಕೆಂದು ವಿವಾಹ ವಿಚ್ಚೇದನ ಪಡೆದು ತಮ್ಮ ಕಲ್ಪನೆಯ ಜೀವನವನ್ನು ನೆಡೆಸುತ್ತಿದ್ದಾರೆ. ಇನ್ನೂ ಹಲವರು ಸಮಾಜದ ಕಟ್ಟುಪಾಡುಗಳಿಗೆ ಹೆದರಿ ಕಷ್ಟವೋ ಸುಖವೋ “ಕಟ್ಟುಕೊಂಡಿದದ್ದರ ಜೊತೆ ಕೊನೆವರೆಗೂ ಸಾಯಬೇಕು” ಎಂದು ನಿಶ್ಚಯಿಸಿ ಜೀವನವನ್ನ ದೂಡುತ್ತಿದ್ದಾರೆ.

ಇನ್ನು ಈ ಯುವಕ ಯುವತಿಯರ ನಡುವಿನ “ಪ್ರೀತಿ” ಎಂಬ ಸಂಬಂದದ್ದು ಇನ್ನೊಂದು ವಿಚಿತ್ರ. ಇವರಿಗೆ ಮನುಷ್ಯರ ಸಹಜ ಸೈಕಾಲಜಿ ಸತ್ಯಗಳು ಆರ್ಥವಾಗದೇ, ಅಥವಾ ಅರ್ಥವಾದರೂ ಅದನ್ನು ಜೀರ್ಣಿಸಿಕೊಳ್ಳಲಾಗದೇ ಕೆಲವರು ತಮ್ಮ ಪ್ರೇಯಸಿ ಅಥವಾ ಪ್ರಿಯತಮನನ್ನು ದೂಷಿಸಿ, ದ್ವೇಷಿಸಿ , ತಮ್ಮ ನಡವಳಿಕೆಯಲ್ಲಿ ಬಾರೀ ಬದಲಾವಣೆ ಮಾಡಿಕೊಂಡು, ಅಡ್ಡ ದಾರಿಯನ್ನು ಹಿಡಿದಿದ್ದರೆ, ಇನ್ನು ಕೆಲವು ಮುಗ್ಧ ಮನಸ್ಸುಗಳು ತಮ್ಮ ಜೀವನದಲ್ಲಾದ ಕಹಿ ಘಟನೆಯಿಂದ ಹೊರಬರಲಾರದೆ ಖಿನ್ನತೆಗೆ ಒಳಗಾಗಿರುವುದನ್ನು ನಾನು ನೋಡಿದ್ದೇನೆ.

ಸಮಾಜದ ಎಲ್ಲ ವ್ಯಕ್ತಿಗಳ ಹಿತಬಯಸುವವನಾಗಿ ಹೇಳುವುದಾದರೆ, ಒಂದು ಗಂಡು ಅಥವಾ ಹೆಣ್ಣು, ಯುವ ವಯಸ್ಸಿನಲ್ಲಿ ಪ್ರೀತಿ ಎಂಬ ಸಂಕೋಲೆಯಲ್ಲಿ ಬೀಳುವ ಹಾಗೂ ಮದುವೆ ಎಂಬ ಸಂಬಂಧದಲ್ಲಿ ಬೆಸೆದುಕೊಳ್ಳುವ ಮೊದಲು ಈ “ಒಲವು” ಎಂಬ ಪದದ ಅಂಶಗಳಾದ ಸಿದ್ದಾಂತ, ಜೀವನ ಶೈಲಿ, ಜೀವನದ ಉದ್ದೇಶ, ಆಲೋಚನೆ, ಸಮಾಜದ ಬಗೆಗಿನ ಪರಿಕಲ್ಪನೆ, ಗೆಳೆತನ, ಹವ್ಯಾಸಗಳು ಹಾಗೂ ಇತ್ಯಾದಿಗಳಲ್ಲಿ ತಮ್ಮದೇ ಆಲೋಚನೆಯುಳ್ಳ ಜತೆಗಾರರನ್ನ ಹುಡುಕಿಕೊಳ್ಳುವ ಮೂಲಕ ಸಾಯುವವರೆಗೂ ಸಂತೋಷವಾಗಿ ಬದುಕಿ ತಮ್ಮ ಜೀವನದ ಉದ್ದೇಶವನ್ನು ಸಾರ್ಥಕಗೊಳಿಸಬಹುದು.

ಒಂದು ವೇಳೆ ಅನಿರೀಕ್ಷಿತವಾಗಿಯೋ ಅಥವಾ ಪೋಷಕರು ನಿಶ್ಚಯಿಸುವ ಒಪ್ಪಂದದ ಮದುವೆಗಳಿಂದ ಬೆಸೆದುಕೊಳ್ಳುವ ಸಂಬಂಧದಿಂದ “ಒಲವಿನ” ಅಂಶಗಳನ್ನ ನಿರೀಕ್ಷಿಸಲು ಆರಂಭದಲ್ಲಿ ಸಾಧ್ಯವಾಗದಿದ್ದರೂ, ಒಂದು ಗಂಡು ಹಾಗೂ ಹೆಣ್ಣಿನಲ್ಲಿ ಇರುವ ಮೆಚುರಿಟಿ ಹಾಗೂ ಪರಸ್ಪರ ತಿಳುವಳಿಕೆಯ ಗುಣಗಳಿದ್ದರೆ ಈ ಮನುಷ್ಯರ ಸಹಜ ಸೈಕಾಲಜಿ “ಇರುವುದೆಲ್ಲವ ಬಿಟ್ಟು ಇರುದುದರೆಡೆಗೆ ಜೀವನ” ಎಂಬ ಮಾತನ್ನು ಒಂದು ಗಂಡು ಮತ್ತು ಹೆಣ್ಣಿನ ವಿಸ್ತಾರ ಸಂಬಂಧದ ಪರಿಕಲ್ಪನೆಯಲ್ಲಿ ಸುಳ್ಳು ಮಾಡಿ, ಸಾಕ್ಷಾತ್ಕಾರ ಚಿತ್ರದ ಘೋಷವಾಕ್ಯ “ಒಲವೇ ಜೀವನ ಸಾಕ್ಷಾತ್ಕಾರ” ವನ್ನು ಸತ್ಯವಾಗಿಸಬಹುದು ಎಂಬ ಅನಿಸಿಕೆ ನನ್ನದು.

ಸುದ್ದಿದಿನ|ವಾಟ್ಸಾಪ್|9980346243

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending