ದಿನದ ಸುದ್ದಿ
ರಾಣಿ ಚೆನ್ನಮ್ಮ ವಿವಿ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ
ಸುದ್ದಿದಿನ,ಬೆಳಗಾವಿ :ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಬೇಕು. ಇದು ಜ್ಞಾನದ ಶತಮಾನವಾಗಿದೆ. ಜಗತ್ತಿನ ಶಕ್ತಿಯು ಜ್ಞಾನದ ಕಡೆಗೆ ವಾಲುತ್ತಿದೆ. ವಿಶ್ವವಿದ್ಯಾಲಯಗಳು ಇದನ್ನು ಅರಿತುಕೊಂಡು ಶಿಕ್ಷಣ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು.
ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ 126 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕೆ ಬುಧವಾರ (ಡಿ.22) ಭೂಮಿಪೂಜೆ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ವಿವಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುವ ಬದ್ಧತೆ ಸಿಪಾಯಿಯಿಂದ ಹಿಡಿದು ಕುಲಪತಿಗಳವರೆಗೆ ಎಲ್ಲರಿಗೂ ಇರಬೇಕು. ವಿವಿಗಳು ವಿಭಿನ್ನವಾಗಿ ಕಾರ್ಯನಿರ್ವಹಿಸುವ ಮೂಲಕ ಪ್ರಸ್ತುತ ಸನ್ನಿವೇಶಕ್ಕೆ ತಕ್ಕಂತೆ ಎಲ್ಲ ಕ್ಷೇತ್ರದಲ್ಲಿ ಸಾಧನೆಗೈಯಬೇಕು.
ಹೊಸ ಪ್ರಯೋಗಗಳು ವಿಶ್ವವಿದ್ಯಾಲಯದಲ್ಲಿ ಆಗಬೇಕು. ಊಹೆಗೂ ನಿಲುಕದಂತಹ ತಾಂತ್ರಿಕ ಮತ್ತು ವೈಜ್ಞಾನಿಕ ಬದಲಾವಣೆಗಳಾಗುತ್ತಿವೆ. ಇದಕ್ಕೆ ಅನುಗುಣವಾಗಿ ವಿಶ್ವವಿದ್ಯಾಲಯ ಬದಲಾಗುವ ಮೂಲಕ ಆವಿಷ್ಕಾರದ ಕೇಂದ್ರವಾಗಬೇಕು.
ಶಿಕ್ಷಣ ಕ್ಷೇತ್ರದ ಆಮೂಲಾಗ್ರ ಬದಲಾವಣೆ ತರಬೇಕಾದರೆ ಅದು ವಿಶ್ವವಿದ್ಯಾಲಯದ ಮೂಲಕ ಮಾತ್ ಸಾಧ್ಯವಿದೆ. ಈ ಹೊಣೆಗಾರಿಕೆಯನ್ನು ಅರಿತುಕೊಂಡು ವಿಶ್ವವಿದ್ಯಾಲಯದಲ್ಲಿ ಆವಿಷ್ಕಾರಗಳನ್ನು ಕೈಗೊಳ್ಳಬೇಕು.
ಸತ್ವಯುತ ಸಂಶೋಧನೆಗೆ ಸಿಎಂ ಸಲಹೆ
ಯುವಸಮುದಾಯಕ್ಕೆ ಜ್ಞಾನ ಹಾಗೂ ಆತ್ಮವಿಶ್ವಾಸದ ಬಲ ನೀಡಲು ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಪ್ರಾಧ್ಯಾಪಕರು ವಿಶ್ವವಿದ್ಯಾಲಯಗಳ ಕ್ಲಾಸ್ ರೂಮ್ ಗಳಿಂದ ಹೊರಬಂದು ತಮ್ಮ ಸಂಶೋಧನೆಯನ್ನು ಒರೆಗೆ ಹಚ್ಚಬೇಕು. ಸತ್ವಯುತವಾದ ಸಂಶೋಧನೆ ಎಂದಿಗೂ ಉಳಿದುಕೊಳ್ಳುತ್ತದೆ. ಆದ್ದರಿಂದ ಸತ್ವಯುತ ಹಾಗೂ ಜನೋಪಯೋಗಿ ಸಂಶೋಧನೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಕ್ಷಣದಲ್ಲಿ ಸಮರ್ಥ ನಾಯಕತ್ವ ಅತೀ ಮುಖ್ಯವಾಗಿದೆ. ವಿಶ್ವವಿದ್ಯಾಲಯದ ಕುಲಪತಿಗಳು ಇಂತಹ ನಾಯಕತ್ವ ವಹಿಸಿಕೊಂಡು ಮುನ್ನಡೆಯಬೇಕು. ಶಿಕ್ಷಣದ ಗುಣಮಟ್ಟ ಉತ್ತಮಪಡಿಸಲು ಸರಕಾರ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.
ಕಳೆದ ಹತ್ತು ವರ್ಷಗಳಲ್ಲಿ ಆಗಿರುವ ಪಿ.ಎಚ್ಡಿ ಗಳ ವಿಶ್ಲೇಷಣೆ ಆಗಬೇಕು. ಅವುಗಳಿಂದ ಆಗುವ ಪ್ರಯೋಜನಗಳ ಬಗ್ಗೆ ಕೂಡ ಅಧ್ಯಯನ ನಡೆಸಬೇಕು ಎಂದು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ರಾಚವಿ ಆದರ್ಶ ವಿವಿ ಆಗಲಿ; ಸಿಎಂ ಆಶಯ
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಆದರ್ಶ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಲಿ ಎಂದು ಆಶಯ ವ್ಯಕ್ತಪಡಿಸಿದರು. ರಸ್ತೆ, ನೀರು ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲಿದೆ. ಒಂದು ವರ್ಷದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು.
ವಿವಿಯ ಪ್ರತಿ ಕೊಠಡಿಯು ಡಿಜಿಟಲೀಕರಣ ಆಗಬೇಕು. ತಾರ್ಕಿಕ ಚಿಂತನೆಯನ್ನು ಬೆಳೆಸಿಕೊಂಡು ಪ್ರಶ್ನೆಗಳನ್ನು ಕೇಳುವ ಧೈರ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು ಎಂದು ಸಲಹೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿ ಸ್ಥಾಪನೆಯಿಂದ ಕುಡಿಯುವ ನೀರಿನ ಯೋಜನೆಗೆ ಸ್ವಲ್ಪಮಟ್ಟಿಗೆ ತೊಂದರೆಯಾಗಿದೆ. ಆದ್ದರಿಂದ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು.
ಉತ್ಕೃಷ್ಟ ಶಿಕ್ಷಣ ಒದಗಿಸಲು ಸರಕಾರ ಬದ್ಧ
ಉನ್ನತ ಶಿಕ್ಷಣ ಇಲಾಖೆಯ ಸಚಿವರಾದ ಡಾ.ಅಶ್ವತ್ಥನಾರಾಯಣ ಸಿ.ಎನ್., ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ಒದಗಿಸುವ ಉದ್ಧೇಶದಿಂದ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸಲಾಗಿದೆ ಎಂದರು.
ಉತ್ತಮ ಶಿಕ್ಷಣ, ಕೌಶಲ್ಯ , ತಂತ್ರಜ್ಞಾನವನ್ನು ಒದಗಿಸುವ ಮೂಲಕ ಯುವ ಸಮುದಾಯವನ್ನು ಸ್ವಾವಲಂಬಿ ಮತ್ತು ಉತ್ತಮ ಬದುಕು ಕಟ್ಟಿಕೊಳ್ಳಲು ಸರಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ.ಬೆಳಗಾವಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಸರಕಾರ ಎಲ್ಲಾ ಸೌಲಭ್ಯ ಒದಗಿಸಲಿದೆ.
ಈ ಭಾಗದ ಸವಾಲು ಮತ್ತು ಸಮಸ್ಯೆಗಳನ್ನು ಅರಿತುಕೊಂಡು ಅವುಗಳ ನಿವಾರಣೆಗಾಗಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಬೇಕು ಎಂಬ ನಿರೀಕ್ಷೆಯನ್ನು ಸರಕಾರ ಹೊಂದಿದೆ ಎಂದು ತಿಳಿಸಿದರು.
ಸದ್ಯಕ್ಕೆ ಎಂಟು ಸಾವಿರ ಪೈಕಿ ಈಗಾಗಲೇ ಎರಡು ಸಾವಿರ ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗಿದೆ. ಉಳಿದ ಆರು ಸಾವಿರ ಕ್ಲಾಸ್ ಗಳನ್ನು ಸ್ಮಾರ್ಟ್ ಕ್ಲಾಸ್ ಗಳನ್ನಾಗಿ ಪರಿವರ್ತಿಸುವ ಕೆಲಸ ಮಾಡಲಾಗುವುದು. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಸಬಲೀಕರಣ, ಸ್ವಾಯತ್ತತೆಯನ್ನು ಒದಗಿಸುವ ಮೂಲಕ ಪ್ರಸ್ತುತ ಸನ್ನಿವೇಶಕ್ಕೆ ತಕ್ಕಂತೆ ಉತ್ಕೃಷ್ಟ ಮತ್ತು ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಒದಗಿಸಲಾಗುವುದು ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಸೂಪರ್ ಥರ್ಟಿ ಯೋಜನೆ ಮೂಲಕ ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆಯನ್ನು ನೀಡಿದರು. ಸಮಗ್ರ, ಸದೃಢ ಕರ್ನಾಟಕ ಕಟ್ಟಲು ಶಿಕ್ಷಣವೇ ಬುನಾದಿಯಾಗಿದೆ. ಆದ್ದರಿಂದ ಶಿಕ್ಷಣ ಮತ್ತು ಎಲ್ಲರಿಗೂ ಉದ್ಯೋಗ ನೀಡುವ ಪ್ರಯತ್ನವನ್ನು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಮಾಡುತ್ತಿದೆ ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಜರಾಯಿ, ಹಜ್ ಹಾಗೂ ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯ ಮತ್ತು ತಂತ್ರಜ್ಞಾನಾಧಾರಿತ ಶಿಕ್ಷಣದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಮನವಿ
ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಸುವರ್ಣ ವಿಧಾನಸೌಧ, ವಿಟಿಯು ಹಾಗೂ ಆರ್.ಸಿ.ಯು. ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕಳಶಪ್ರಾಯವಾಗಿವೆ ಎಂದು ಸಂತಸ ವ್ಯಕ್ತಪಡಿಸಿದರು.
ಬೆಳಗಾವಿ ಅಭಿವೃದ್ಧಿಗೆ ಪೂರಕವಾಗಿರುವ ಗ್ರಾಮೀಣ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಇದನ್ನು ನಿವಾರಿಸಲು ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.
ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ 300 ಕೋಟಿ ರೂಪಾಯಿಗೂ ಅಧಿಕ ಅನುದಾನವನ್ನು ಮಂಜೂರು ಮಾಡಿಸಲಾಗಿದೆ. ಕೆರೆ ತುಂಬಿಸುವ ಯೋಜನೆ ಮುಂದುವರಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಹಿರೇಬಾಗೇವಾಡಿ ಗ್ರಾಮದ ಕಸ ವಿಲೇವಾರಿಗೆ ಹತ್ತು ಎಕರೆ ಜಮೀನು ಒದಗಿಸಲು ಲಕ್ಷ್ಮೀ ಹೆಬ್ಬಾಳಕರ ಮನವಿ ಮಾಡಿಕೊಂಡರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಹಕಾರದಿಂದ ವಿಶ್ವವಿದ್ಯಾಲಯಕ್ಕೆ ಹಿರೇಬಾಗೇಡಿ ಬಳಿ 126 ಎಕರೆ ವಿಶಾಲವಾದ ಜಾಗೆ ದೊರೆತಿದೆ ಎಂದು ತಿಳಿಸಿದರು.
ವಿವಿ ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳಿಗೆ ಉತ್ಕೃಷ್ಟವಾದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಇದಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ವಿಧಾನಪರಿಷತ್ ಸದಸ್ಯರಾದ ಅರುಣ ಶಹಾಪುರ, ಡಾ.ತಳವಾರ ಸಾಬಣ್ಣ, ಹನಮಂತ ನಿರಾಣಿ, ಸಿಂಡಿಕೇಟ್ ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿನಾಯಕ ಮೋರೆ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು. ಕುಲಪತಿ ಪ್ರೊ.ಬಸವರಾಜ ಪದ್ಮಶಾಲಿ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
~ಅನಿರೀಕ್ಷಿತ್ ನಾರಾಯಣ
ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು.
1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್ ಅನ್ನು ಬಳಸದಿದ್ದಾಗ ರೆಗ್ಯುಲೇಟರಿನಲ್ಲೇ ಆಫ್ ಮಾಡಿ ಗ್ಯಾಸ್ ಸರಬರಾಜನ್ನು ನಿಲ್ಲಿಸಬೇಕು. ಬೇಕೆಂದಾಗ ಮಾತ್ರ ಆನ್ ಮಾಡಿಕೊಳ್ಳಬೇಕು.
2. ನಿಮ್ಮ ಸ್ನಾನದ ಮನೆಯಲ್ಲಿ ಗ್ಯಾಸ್ ಗೀಸರ್ ಅನ್ನು ಅಳವಡಿಸಬೇಕೆಂದಿದ್ದರೆ ಅಲ್ಲಿ ಚೆನ್ನಾಗಿ ಗಾಳಿಯಾಡಲು ಅಗತ್ಯವಿದ್ದಷ್ಟು ಕಿಟಕಿ ಇರಲೇಬೇಕು. ಕೆಲ ಸ್ನಾನದ ಮನೆಗಳಲ್ಲಿ ಬರೀ ಬೆಳಕು ಬರಲಷ್ಟೇ ಗಾಜಿರುವ ಕಿಟಕಿ ಮಾಡಿರುತ್ತಾರೆ. ಅಂತಹ ಕಡೆಗಳಲ್ಲಿ ಗ್ಯಾಸ್ ಗೀಸರ್ ಅನ್ನು ಅಳವಡಿಸದಿರುವುದೇ ಉತ್ತಮ. ಸ್ನಾನದ ಮನೆ ಬಿಟ್ಟು ಹೊರಗೆ ಎಲ್ಲಾದರೂ ಗಾಳಿಯಾಡುವ ಕಡೆ ಗ್ಯಾಸ್ ಗೀಸರ್ ಅನ್ನು ಅಳವಡಿಸಿ ಅಲ್ಲಿಂದ ಬಿಸಿ ನೀರನ್ನು ಒಳಗೆ ತೆಗೆದುಕೊಳ್ಳುತ್ತೇನೆ ಎಂದರೆ ಕೊಂಚ inconvenience ಅನ್ನಿಸಿದರೂ ಹೆಚ್ಚು ಸುರಕ್ಷಿತ.
3. ಗ್ಯಾಸ್ ಗೀಜರ್ ಅನ್ನು ಸ್ನಾನದ ಮನೆಯೊಳಗೆ ಅಳವಡಿಸಿದರೆ, ಮೊದಲು ಬಾಗಿಲು ತೆರೆದಿಟ್ಟುಕೊಂಡೇ, ಬಿಸಿ ನೀರನ್ನು ಬಕೆಟ್ಟಿಗೆ ಬಿಟ್ಟುಕೊಂಡು ನಂತರ ಸ್ಥಾನಕ್ಕೆ ಹೋಗುವುದು ಒಳ್ಳೆಯದು. ಆಗ ಈ ಆತಂಕ ಇರುವುದಿಲ್ಲ.
4. ಈಗ ಮನೆ ಬಳಕೆಯ ಉಪಕರಣಗಳನ್ನು ಮಾರುವ ಅಂಗಡಿಗಳಲ್ಲಿ exhaust fan (ಗಾಳಿಯನ್ನು ಹೊರಹಾಕುವ fan) ದೊರಕುತ್ತದೆ. ಅದರ ಬೆಲೆ ಹೆಚ್ಚೆಂದರೆ ಒಂದು ಸಾವಿರ ರೂಪಾಯಿ ಅಷ್ಟೇ. ಬರೀ ಎರಡು ರೂಪಾಯಿಯ ಟ್ಯಾಗ್ ಬಳಸಿ ಅದನ್ನು ಎಲ್ಲಿ ಬೇಕೆಂದರಲ್ಲಿ (ಕಿಟಕಿಯ ಸರಳುಗಳಿಗೇ) ಎರಡೇ ನಿಮಿಷದಲ್ಲಿ ನಾವೇ install ಮಾಡಿಕೊಳ್ಳಬಹುದು. ಗ್ಯಾಸ್ ಗೀಸರ್ ON ಮಾಡಿದಾಗೆಲ್ಲ, Exhaust Fanಅನ್ನೂ ಆನ್ ಮಾಡಿಕೊಂಡರೆ ಗ್ಯಾಸ್ ಗೀಸರ್ ಹೊರ ಸೂಸಬಹುದಾದ ಕಾರ್ಬನ್ ಮಾನಾಕ್ಸೈಡ್ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲ. ಏಕೆಂದರೆ exhaust fan ಸ್ನಾನದ ಕೊಠಡಿ ಒಳಗಿನ ಗಾಳಿಯನ್ನೆಲ್ಲ ಹೊರಹಾಕುತ್ತಲೇ ಇರುತ್ತದೆ. ಅದರ ಮೂಲಕ ಕಾರ್ಬನ್ ಮಾನಾಕ್ಸೈಡ್ ಕೂಡ ಹೊರಹೋಗುತ್ತದೆ. ಜೊತೆಗೆ ಕೊಠಡಿಯ ವಾಯುಭಾರ ಕುಸಿತವಾದಂತೆಲ್ಲ ಸ್ವಚ್ಛ ಗಾಳಿ ತನ್ನಂತಾನೇ ಒಳಬರುತ್ತದೆ.
5. Carbon monoxide detector: ಮೇಲೆ ಹೇಳಿದಂತೆ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗುತ್ತಿದೆ ಅಂತ ಮನುಷ್ಯನ ಇಂದ್ರಿಯಗಳಿಗೆ ಗ್ರಹಿಸಲು ಸಾಧ್ಯವಿಲ್ಲ. ಆದರೆ ಇವುಗಳನ್ನು ಪತ್ತೆಹಚ್ಚಲೆಂದೆ ಕಾರ್ಬನ್ ಮಾನಾಕ್ಸೈಡ್ ಡಿಟೆಕ್ಟರ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಸಾಧ್ಯವಾದಲ್ಲಿ ಇವುಗಳನ್ನು ಅಳವಡಿಸಿಕೊಂಡರೆ ಗಾಳಿಯಲ್ಲಿ ಕಾರ್ಬನ್ ಮಾನಾಕ್ಸೈಡ್ ಪತ್ತೆಯಾದ ತಕ್ಷಣ ಇವುಗಳು alarm ಕೂಗಿ ಎಚ್ಚರಿಸುತ್ತವೆ. ಆಗ ತಕ್ಷಣ ನಾವು ಕ್ರಮ ಕೈಗೊಳ್ಳಬಹುದು.
6. ಈ ವಿಷಯಗಳನ್ನು ಮುಖ್ಯವಾಗಿ ಮನೆಯ ದೊಡ್ಡವರು ತಿಳಿದುಕೊಂಡಿರಬೇಕು. ಚಿಕ್ಕ ಮಕ್ಕಳು ಸ್ನಾನಕ್ಕೆ ಹೋಗುವಾಗ ಅವರ ಪಾಡಿಗೆ ಅವರನ್ನು ಬಿಡುವ ಬದಲಿಗೆ, ತಾವೇ ನೀರು ಬಿಟ್ಟುಕೊಟ್ಟು ನಂತರ ಅವರನ್ನು ಸ್ನಾನಕ್ಕೆ ಕಳಿಸಬೇಕು.
7. ಒಂದು ಮನೆಯಿಂದ ಇನ್ನೊಂದು ಮನೆಗೆ ಶಿಫ್ಟ್ ಆಗುವಾಗ ನೀವಾಗಿಯೇ ಗ್ಯಾಸ್ ಗೀಜರ್ ಅನ್ನು ಅಳವಡಿಸುವುದರ ಬದಲಾಗಿ ಯಾರಾದರೂ professional ವ್ಯಕ್ತಿಗಳನ್ನೇ ನೆಚ್ಚಿಕೊಂಡರೆ ಒಳ್ಳೆಯದು. ಆಗ ಅವರು ಗೀಸರನ್ನು ಅಳವಡಿಸಬಹುದಾದ ಜಾಗದ ವೆಂಟಿಲೇಶನ್ ಅನ್ನು ಗಮನಿಸಿ ಅವರೇ ಸೂಕ್ತ ಸಲಹೆ ನೀಡುತ್ತಾರೆ.
8. Regular maintenance: ಗ್ಯಾಸ್ ಸಿಲೆಂಡರ್, ರೆಗ್ಯುಲೇಟರ್, ಗ್ಯಾಸ್ ಪೈಪ್ ಮತ್ತು ಗೀಸರನ್ನು ಆಗಾಗ ಗಮನಿಸುತ್ತ ಅಗತ್ಯ ಬಂದಲ್ಲಿ ಅವುಗಳನ್ನು ಬದಲಾಯಿಸಬೇಕು.
9. ಗ್ಯಾಸ್ ಗೀಸರ್ ಬಳಸುವಾಗ ಯಾವುದೇ ಅನುಮಾನ ಬಂದರೂ ಕೂಡಲೆ ಅದನ್ನು ಸರಿಪಡಿಸಿಕೊಳ್ಳುವುದು ಅಗತ್ಯ. ಆಗಲು ನಾವೇ ಏನಾದರೂ ಒಂದು ಮಾಡುವ ಬದಲು, ಅದನ್ನು ರಿಪೇರಿ ಮಾಡುವರಿಂದಲೇ ಸರಿಮಾಡಿಸುವುದು ಒಳ್ಳೆಯದು.
ಬರಹ ಕೃಪೆ : ಫೇಸ್ ಬುಕ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ6 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
-
ದಿನದ ಸುದ್ದಿ1 day agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ6 hours agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

