ಲೋಕಾರೂಢಿ
‘ಅತ್ಯಾಚಾರ’ ಮಾನವ ನಿರ್ಮಿತ ವಿಕೃತಿ
ಪುಟ್ಟ ಕಂದಮ್ಮ ಅದು. ನಲಿಯುತ್ತಾ-ಕಲಿಯುತ್ತಾ ಇರಬೇಕಾದ ವಯಸ್ಸಿನಲ್ಲಿ ಕುಟುಂಬದ ಕೆಲಸಕಾರ್ಯಗಳಿಗೆ ಹೆಗಲಾಗುತ್ತಿದ್ದವಳು. ಆಕೆಯ ಮೊಗದಲ್ಲಿನ ಮುಗ್ಧತೆ ಎಂತಹವರಲ್ಲಾದರೂ ಮುದ್ದು ಉಕ್ಕಿಸುವಂತಿತ್ತು. ಆದರೆ ಕಾಮುಕ ಕಣ್ಣುಗಳಿಗೆ ಆಕೆ ಭೋಗದ ವಸ್ತುವಾಗಿ ಕಂಡಳು. ಯಾವುದೋ ದ್ವೇಷಕ್ಕೆ ಆಕೆ ಪ್ರತೀಕಾರವಾಗಿ ತೋರಿದಳು. ಒಂದಲ್ಲಾ ಎರಡಲ್ಲ ಸತತ ಎಂಟು ದಿನಗಳ ಕಾಲ ಆಕೆಯ ಮೇಲೆ ಅಮಾನುಷವಾಗಿ ವಿಕೃತ ಮನಸ್ಸಿನ ಮೃಗಗಳು ಎರಗಿದವು. ಯಾವ ವ್ಯಕ್ತಿ ಮಾನ ಪ್ರಾಣ ರಕ್ಷಣೆ ಮಾಡುವ ಜವಾಬ್ದಾರಿ ಉಳ್ಳವನಾಗಿದ್ದನೋ ಆತನೇ ಆಕೆಯನ್ನು ಕಾಮಿಸಿದ್ದ. ಮತ್ತೊಬ್ಬ ದುರುಳ ತನ್ನ ಮೊಮ್ಮಗಳ ವಯಸ್ಸಿನ ಬಾಲೆಯ ಮೇಲೆ ಕಾಮಾಗ್ನಿ ಸುರಿಸಿದ್ದ.
ನಿರ್ಭಯಾ ಕೊಲೆ ಪ್ರಕರಣದ ನಂತರದ ದಿನಗಳಲ್ಲಿ ದೇಶಾದ್ಯಂತ ಅತಿಹೆಚ್ಚು ಸದ್ದು ಮಾಡುತ್ತಿರುವ ಪ್ರಕರಣವಿದು. ಅತ್ಯಾಚಾರ ನಡೆಸುವುದರ ಜೊತೆಗೆ ಹತ್ಯೆಯನ್ನೂ ನಡೆಸಿ ‘ಹತ್ಯಾಚಾರ’ದಂತಹ ಪಾತಕವೆಸಗುವ ರಕ್ಕಸರು ತಮ್ಮ ಕ್ರೌರ್ಯ ಮೆರೆಯುತ್ತಿದ್ದರೆ, ದೇಶದ ಜನತೆ ಅತ್ಯಾಚಾರದ ಪ್ರಕರಣಗಳಲ್ಲಿ ಕಾನೂನಿನೆಡೆಗಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತವೇ ಇವೆ. ಆದರೆ ಬಹುತೇಕ ಅತ್ಯಾಚಾರ ಪ್ರಕರಣಗಳು ಸಮಾಜಕ್ಕೆ ಅಂಜಿ, ಮಾನ-ಮರ್ಯಾದೆಯ ಹೆಸರಿನಲ್ಲಿ ಮುಚ್ಚಿಹೋಗುತ್ತವೆ. ದಾಖಲಾದ ಪ್ರಕರಣಗಳ ಸಂಖ್ಯೆ ಎಷ್ಟಿದೆಯೋ, ಅದಷ್ಟೇ ಪ್ರಮಾಣದಲ್ಲಿ ದಾಖಲಾಗದ ಪ್ರಕರಣಗಳೂ ಇವೆಯೆಂದರೆ ನಂಬಲೇಬೇಕು. ಹೆಣ್ಣಿಗೆ ದೇಹಪ್ರಕೃತಿಯೇ ಆಕೆಗೆ ಶಾಪವಾಗಿರುವುದು ವಿಪರ್ಯಾಸ. ‘ಶೀಲ’ವೇ ಹೆಣ್ಣಿನ ಪರಮೋಚ್ಛ ಆಸ್ತಿ ಎಂದು ನಮ್ಮ ಸಮಾಜ ಭಾವಿಸುತ್ತದೆ. ಪ್ರತೀಕಾರ ತೀರಿಸಿಕೊಳ್ಳಲು ದುರುಳರು ಇದನ್ನೊಂದು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಾರೆ. ಇನ್ನು ಹಸುಳೆಯ ಮೇಲೆ, ಮಕ್ಕಳ ಮೇಲೆ ಅತ್ಯಾಚಾರ ಎಸಗುವುದಿದೆಯಲ್ಲ, ಅದು ಯಾವ ಕಾರಣಕ್ಕೂ ಕ್ಷಮಾರ್ಹವಲ್ಲ.
‘ನ್ಯಾಶನಲ್ ಕ್ರೈಂ ರೆಕಾಡ್ರ್ಸ್ ಬ್ಯೂರೋ’ 2013ರಲ್ಲಿ ನೀಡಿದ ವರದಿಯ ಪ್ರಕಾರ 2012ರಲ್ಲಿ 24,923 ಅತ್ಯಾಚಾರ ಪ್ರಕರಣಗಳು ದೇಶಾದ್ಯಂತದಿಂದ ಬೆಳಕಿಗೆ ಬಂದಿವೆ. ಆಘಾತಕಾರಿ ಸಂಗತಿಯೇನು ಗೊತ್ತಾ? ಇಷ್ಟು ಪ್ರಕರಣಗಳಲ್ಲಿ 24,470 ಪ್ರಕರಣಗಳಲ್ಲಿ ಅಂದರೆ ಶೇ.98ರಷ್ಟು ಪ್ರಕರಣಗಳಲ್ಲಿನ ಆರೋಪಿಗಳು ಪರಿಚಯಸ್ಥರೇ ಆಗಿರುವುದು! ಆದ್ದರಿಂದಲೇ ಬಹುತೇಕ ಪ್ರಕರಣಗಳು ಸಂತ್ರಸ್ತೆಯ ಕಣ್ಣೀರಿನಲ್ಲೇ ಕೊಚ್ಚಿ ಹೋಗುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ನಡೆದ ದೌರ್ಜನ್ಯವನ್ನು ಖಂಡಿಸಿ, ದೂರು ದಾಖಲಿಸಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುವಂತೆ ಮಾಡಲು ಪಣ ತೊಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಮಾಧ್ಯಮಗಳ ಬೆಂಬಲ, ಜನರ ಸಹಕಾರ ಶೋಷಿತರಿಗೆ ಆಸರೆಯಾಗಿದೆ. ಎನ್ಸಿಆರ್ಬಿಯ 2015ರ ಅಂಕಿಅಂಶಗಳ ಪ್ರಕಾರ ಮಧ್ಯಪ್ರದೇಶದಲ್ಲಿ ಅತಿಹೆಚ್ಚು ಅತ್ಯಾಚಾರ ಪ್ರಕರಣಗಳು ನಡೆದಿವೆ.
ಇಲ್ಲಿಯವರೆಗೆ ಅತ್ಯಾಚಾರದ ವಿಷಯದಲ್ಲಿ ಕಾನೂನು ಸಹ ಕಠೋರವಾಗಿರಲಿಲ್ಲ. ಯಾವುದೇ ಸ್ವರೂಪದ ಅತ್ಯಾಚಾರ ಪ್ರಕರಣದ ಆರೋಪಿಗೆ ಗರಿಷ್ಠ ಜೀವಮಾನಪರ್ಯಂತದ ಜೈಲು ಶಿಕ್ಷೆ ವಿಧಿಸಬಹುದಿತ್ತು ಹಾಗೂ ಕನಿಷ್ಠ ಏಳು ವರ್ಷದ ಜೈಲು ಶಿಕ್ಷೆಯಿತ್ತು. ಆ ನಂತರ 2012ರಲ್ಲಿ ಯಾವಾಗ ನಿರ್ಭಯಾ ಪ್ರಕರಣಕ್ಕೆ ದೇಶ ಹೊತ್ತಿ ಉರಿಯಿತೋ, ಆಗ ಕ್ರಿಮಿನಲ್ ಕಾನೂನಿನಲ್ಲಿ ಕೆಲವೊಂದು ಬದಲಾವಣೆ ಮಾಡಲಾಯಿತು. ಅತ್ಯಾಚಾರದ ವೇಳೆ ಸಂತ್ರಸ್ತೆ ಮೃತಪಟ್ಟರೆ ಯಾ ದೈಹಿಕವಾಗಿ ಜರ್ಜರಿತಳಾದರೆ ಆರೋಪಿಗಳನ್ನು ಗಲ್ಲಿಗೇರಿಸುವ ಮಹತ್ತರ ಅಂಶ ಸೇರ್ಪಡೆಯಾಯಿತು. ಇದೀಗ ಪೋಕ್ಸೋ ಕಾಯಿದೆಯಲ್ಲಿ ಬದಲಾವಣೆ ತಂದು, ಸುಗ್ರೀವಾಜ್ಞೆ ಹೊರಡಿಸಿರುವ ಕೇಂದ್ರ ಸರ್ಕಾರ ಅಪ್ರಾಪ್ತರ ಅದರಲ್ಲೂ 12 ವರ್ಷದೊಳಗಿನ ಮಕ್ಕಳ ಮೇಲೆ (ಹೆಣ್ಣಾಗಿರಲಿ-ಗಂಡಾಗಿರಲಿ) ಅತ್ಯಾಚಾರ ನಡೆಸುವ ದುರುಳರಿಗೆ ಮರಣ ದಂಡನೆಗೆ ಅವಕಾಶ ನೀಡಿದೆ. ಇದು ಅತ್ಯಾಚಾರಿ ಮನಃಸ್ಥಿತಿಯನ್ನು ತಡೆಯುವಲ್ಲಿ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕು.
ಇದನ್ನೆಲ್ಲ ನೋಡುತ್ತಿದ್ದರೆ, ಮಕ್ಕಳಿಗೆ ಲೈಂಗಿಕ ಶಿಕ್ಷಣದ ಅವಶ್ಯಕತೆ ಎಷ್ಟಿದೆ ಎನ್ನುವ ಅರಿವಾಗುತ್ತದೆ. ಚಿಕ್ಕ ಮಕ್ಕಳಿಗೆ ಲೈಂಗಿಕ ಶಿಕ್ಷಣವಾ? ಎಂದು ಮೂಗು ಮುರಿಯುವ ಮೊದಲು, ಭವಿಷ್ಯದಲ್ಲಿ ಅದು ಉಂಟು ಮಾಡುವ ಪರಿಣಾಮಗಳ ಕುರಿತು ಯೋಚಿಸಬೇಕಿದೆ. ಅವೈಜ್ಞಾನಿಕವಾಗಿ ಹುಟ್ಟಿಕೊಳ್ಳುವ ವಿಕೃತ ಮನಸ್ಸುಗಳನ್ನು ಈ ಮೂಲಕ ಖಂಡಿತ ತಡೆಗಟ್ಟಲು ಸಾಧ್ಯ. ಎಲ್ಲಕ್ಕಿಂತ ಹೆಚ್ಚಾಗಿ ಮಹಿಳೆಯರನ್ನು ಗೌರವಿಸುವ, ಮಾನವೀಯ ಗುಣಮೌಲ್ಯಗಳನ್ನು ಬಿತ್ತರಿಸುವ ನೈತಿಕ ಶಿಕ್ಷಣ ಇಂದಿನ ಜರೂರತ್ತು. ಹೆಣ್ಣನ್ನು ಭೋಗದ ಪರಿಧಿಯಾಚೆ ನಿಲ್ಲಿಸಿ, ಆಕೆಯ ಮಹತ್ವವನ್ನು ಸಾರುವ ಕೆಲಸ ಪ್ರತಿಯೊಂದು ಮಾಧ್ಯಮದ ಮೂಲಕ ಆಗಬೇಕು, ಜನರನ್ನು ತಲುಪಿ ಸ್ವಸ್ಥ ಸಮಾಜ ಬೆಳೆದು ನಿಲ್ಲಬೇಕು.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ
ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.
ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ
ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.
ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ
ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.
ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ
ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.
ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ
ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.
ಭವಿಷ್ಯದ ಆಶಯ
ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ2 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ1 day agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ





