ಅಂತರಂಗ
ರವಿ ಬೆಳಗೆರೆ – ಸಂತಾಪ ಸೂಚಿಸುವ ಮುನ್ನ..!
- ನಾ ದಿವಾಕರ
ರೋಚಕತೆ ಸೃಜನಶೀಲತೆಯನ್ನುಕೊಲ್ಲುತ್ತದೆ. ಅತಿಯಾದ ರೋಚಕತೆ ವೈಚಾರಿಕತೆಯನ್ನೂ ಕೊಲ್ಲುತ್ತದೆ. ಅಕ್ಷರ ಕೃಷಿಯಲ್ಲಿ ತೊಡಗಿರುವ ಪ್ರತಿಯೊಬ್ಬರೂ ಇದನ್ನು ನೆನಪಿಡಬೇಕು. ಲೇಖನವಾಗಲಿ, ಕಾವ್ಯವೇ ಆಗಲಿ ಅಥವಾ ಒಂದು ಕಥನವೇ ಆಗಲೀ ಅವಶ್ಯಕತೆಯನ್ನು ಮೀರಿದ ರೋಚಕತೆಯಿಂದ ತನ್ನ ಅಂತಃಸತ್ವವನ್ನು ಕಳೆದುಕೊಂಡುಬಿಡುತ್ತದೆ.
ಪತ್ರಿಕೋದ್ಯಮವನ್ನು ತಮ್ಮ ವೃತ್ತಿ ಮತ್ತು ಪ್ರವೃತ್ತಿಯನ್ನಾಗಿ ಸ್ವೀಕರಿಸುವವರು ಇದನ್ನು ಮನಗಾಣದೆ ಹೋದರೆ ಏನಾಗುತ್ತದೆ ? ತಮ್ಮ ಬರವಣಿಗೆಯಿಂದಲೇ ಕರ್ನಾಟಕದಲ್ಲಿ ತಮ್ಮದೇ ಆದ ಪ್ರಭಾವಳಿಯನ್ನು ನಿರ್ಮಿಸಿಕೊಂಡು 25 ವರ್ಷಗಳ ನಿರಂತರ ಅಕ್ಷರ ಕೃಷಿ ನಡೆಸಿದ ರವಿಬೆಳಗೆರೆ ಈ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿ ಇಹಲೋಕ ತ್ಯಜಿಸಿದ್ದಾರೆ.
ಸಂತಾಪ ಸೂಚಿಸಲೂ ಹಿಂಜರಿಯುವಂತಹ ಮನಸುಗಳು ರವಿ ಬೆಳಗೆರೆಯವರ ಪತ್ರಿಕೋದ್ಯಮ ಸೃಷ್ಟಿಸಿದೆ, ಹಾಗೆಯೇ ಆರಾಧಿಸುವ ಮನಸುಗಳನ್ನೂ ಸೃಷ್ಟಿಸಿದೆ. ಇದು ವ್ಯಕ್ತಿಗತ ಅಭಿವ್ಯಕ್ತಿಗೆ ಸಂಬಂಧಿಸಿದ ವಿಚಾರ. ಸೈದ್ದಾಂತಿಕವಾಗಿ, ತಾತ್ವಿಕವಾಗಿ ರವಿಯ ಯಾವ ಸ್ವರೂಪವನ್ನೂ ಒಪ್ಪದವರೂ ಸಹ, ಅವರೊಡಗಿನ ಸುದೀರ್ಘ ಒಡನಾಟ ಮತ್ತು ಸ್ನೇಹದ ಹಿನ್ನೆಲೆಯಲ್ಲಿ ಅಗಲಿದ ಗೆಳೆಯನಿಗೆ ಭಾವಪೂರ್ಣ ಸಂತಾಪಗಳನ್ನು, ಕೆಲವು ಹೊಗಳಿಕೆಯ ಮಾತುಗಳೊಂದಿಗೆ ಹೇಳಿರುವುದೂ ಸಹ ಸಾಮಾಜಿಕ ತಾಣಗಳಲ್ಲಿ ಟೀಕೆ, ವಿಮರ್ಶೆಗೊಳಗಾಗಿದೆ.
ನಾವು ರವಿ ಬೆಳಗೆರೆಯವರನ್ನು ಒಬ್ಬ ವ್ಯಕ್ತಿಯಾಗಿ ನೋಡುವುದೇ ಬೇರೆ, ಮಾಧ್ಯಮ ಪ್ರತಿನಿಧಿಯಾಗಿ ನೋಡುವ ದೃಷ್ಟಿಯೇ ಬೇರೆಯಾಗಿದ್ದರೆ ಅಡ್ಡಿಯೇನಿಲ್ಲ. ಅದ್ಭುತ ಮಾತುಗಾರ, ಮೋಡಿ ಮಾಡುವಂತಹ ಸ್ನೇಹಮಯಿ, ಉತ್ತಮ ವಾಗ್ಮಿ ಮುಂತಾದ ಗುಣವಿಶೇಷಣಗಳ ನಡುವೆಯೇ ಮಾಧ್ಯಮ ಲೋಕದ ನೆಲೆಯಲ್ಲಿ ರವಿಬೆಳಗೆರೆಯನ್ನು ನಿಲ್ಲಿಸಿದಾಗ, ಅವರು ಅಪರಾಧಿಯಂತೆ ಕಟಕಟೆಯಲ್ಲಿ ನಿಲ್ಲಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ.
ಸಹಜವಾಗಿಯೇ ಹಾಯ್ ಬೆಂಗಳೂರು ಪತ್ರಿಕೆಯನ್ನು ಲಂಕೇಶ್ ಪತ್ರಿಕೆಗೆ ಮುಖಾಮುಖಿಯಾಗಿಸಿ ವಿಮರ್ಶೆಗೆ ಒಳಪಡಿಸಲಾಗುತ್ತದೆ. ಲಂಕೇಶ್ ಪತ್ರಿಕೆ ಕನ್ನಡದಲ್ಲಿ ಟ್ಯಾಬ್ಲಾಯ್ಡ್ ಪತ್ರಿಕೆಗೆ ಚಾಲನೆ ನೀಡಿದ್ದಷ್ಟೇ ಅಲ್ಲ, ಒಂದು ಸುದ್ದಿಪತ್ರಿಕೆಯ ಸಾಮಾಜಿಕ, ಸಾಂಸ್ಕೃತಿಕ ಮತ್ತುರಾಜಕೀಯ ಜವಾಬ್ದಾರಿಗಳನ್ನೂ ಅರಿತು ಹೆಜ್ಜೆ ಇಟ್ಟಿತ್ತು. ಲಂಕೇಶ್ ಪತ್ರಿಕೆ ಆರಂಭವಾದ ಕಾಲಘಟ್ಟದಲ್ಲಿ ನಾಗರಿಕ ಸಮಾಜದ ಸಾಮಾಜಿಕ ಕಳಕಳಿ, ಕಾಳಜಿ ಮತ್ತು ಸಾಂಸ್ಕೃತಿಕ ಒಳತೋಟಿಗಳು ಸಂಘರ್ಷದ ಪರಾಕಾಷ್ಠೆಯನ್ನು ತಲುಪಿದ್ದವು. ಜನಾಂದೋಲನಗಳು ಪರಿಪಕ್ವವಾಗಿ ನಂತರ ತನ್ನದೇ ಆದ ಸಮಸ್ಯೆಗಳಿಂದ ಕೆಲ ಕಾಲ ನೇಪಥ್ಯಕ್ಕೆ ಸರಿಯುವ ಒಂದು ಕಾಲಘಟ್ಟದಲ್ಲಿ ಲಂಕೇಶ್ ತಮ್ಮ ಪತ್ರಿಕೆಯ ಮೂಲಕ ಸಮಾಜೋ ಸಾಂಸ್ಕೃತಿಕ ಸಂವಾದ ಮತ್ತು ಸಂಕಥನಗಳಿಗೆ ಅವಕಾಶ ಕಲ್ಪಿಸಿದ್ದರು.
ಹಾಗಾಗಿ ಲಂಕೇಶ್ ಪತ್ರಿಕೆಯ ಓದುಗರ ಬಳಗ ವಿಶಿಷ್ಟವಾಗಿತ್ತು. ಆಗ ತಾನೇ ತಮ್ಮ ಸಾಮಾಜಿಕ ನೆಲೆ ಕಂಡುಕೊಳ್ಳುತ್ತಿದ್ದ ಆದರೆ ಪ್ರಭುತ್ವದೊಡನೆ ಸದಾ ಸಂಘರ್ಷದಲ್ಲಿರುವ ಅನಿವಾರ್ಯತೆಯನ್ನು ಎದುರಿಸುತ್ತಿದ್ದ ಒಂದು ಯುವ ಸಮುದಾಯಕ್ಕೆ ಭಾರತೀಯ ಸಮಾಜದಲ್ಲಿನ ಒಳನೋಟಗಳನ್ನು ಪರಿಚಯಿಸುವುದು ಮತ್ತು ಸಾರ್ವಜನಿಕ ಚರ್ಚೆಗೆ ಒಳಪಡಿಸುವುದು ಲಂಕೇಶರ ಗುರಿಯಾಗಿತ್ತು. ಹಾಗಾಗಿ ಸಾಂಪ್ರದಾಯಿಕ ಪತ್ರಿಕೋದ್ಯಮದಿಂದ ಭಿನ್ನವಾಗಿ ತಮ್ಮದೇ ಆದ ಮಾಧ್ಯಮ ಪರಿಭಾಷೆಯನ್ನು ಸೃಷ್ಟಿಸಿಕೊಂಡ ಲಂಕೇಶ್ ಅಂದಿನ ಯುವ ಪೀಳಿಗೆಯನ್ನು ಮತ್ತು ಹೋರಾಟ ನಿರತ ಜನತೆಯನ್ನು ಆಕರ್ಷಿಸಿದ್ದರು.
ಆದರೆ ರವಿ ಬೆಳಗೆರೆಯನ್ನು ಲಂಕೇಶರಿಗೆ ಮುಖಾಮುಖಿಯಾಗಿಸುವ ಮುನ್ನ ನಾವು ಯೋಚಿಸಬೇಕಿರುವುದು, ಲಂಕೇಶರ ಕಾಲಘಟ್ಟದ ಸಮಾಜೋ ಸಾಂಸ್ಕೃತಿಕ ಮತ್ತು ರಾಜಕೀಯ ಪಲ್ಲಟಗಳು. ಈ ಬೆಳವಣಿಗೆಗಳಿಗೆ ಸ್ಪಂದಿಸುವುದಷ್ಟೇ ಅಲ್ಲದೆ ಯುವ ಪೀಳಿಗೆಯಲ್ಲಿ ವಿಭಿನ್ನ ದೃಷ್ಟಿಕೋನವನ್ನು ಬಿತ್ತುವ ಕೆಲಸವನ್ನು ಲಂಕೇಶ್ ಮಾಡಿದ್ದು ಸ್ಪಷ್ಟ. ಈ ಕುರಿತು ಪ್ರಸ್ತುತ ಲೇಖನದಲ್ಲಿ ಹೆಚ್ಚಿನ ಸಂವಾದದ ಅವಶ್ಯಕತೆ ಇಲ್ಲ ಎಂದೆಣಿಸುತ್ತೇನೆ.
ಆದರೆ ರವಿಬೆಳಗೆರೆ 1995ರಲ್ಲಿ ತಮ್ಮ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದ ಸಂದರ್ಭವನ್ನೂ ಗಮನಿಸಬೇಕಾಗುತ್ತದೆ. 1989-90ರ ಸಾಂಸ್ಕೃತಿಕ ರಾಜಕಾರಣ, ಕಾಶ್ಮೀರ ಸಮಸ್ಯೆಯ ಉಲ್ಬಣ, ಮತೀಯ ರಾಜಕಾರಣ ಮತ್ತು ಜಾತಿ ರಾಜಕಾರಣದ ಗಟ್ಟಿ ನೆಲೆಗಳು , ಕ್ಷೀಣಿಸುತ್ತಿದ್ದ ಜನಾಂದೋಲನಗಳು ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ ನವ ಉದಾರವಾದ ಮತ್ತು ಜಾಗತೀಕರಣ ಸೃಷ್ಟಿಸಿದ್ದ ಆಧುನಿಕೋತ್ತರ ಚಿಂತನೆಯ ನೆಲೆಗಳು ಒಂದು ಹೊಸ ಪೀಳಿಗೆಯ ದೃಷ್ಟಿಕೋನವನ್ನೇ ಬದಲಿಸುವ ನಿಟ್ಟಿನಲ್ಲಿ ಮುನ್ನಡೆದಿದ್ದವು.
ಆ ವೇಳೆಗಾಗಲೇ ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿಯನ್ನೂ ಸೇರಿದಂತೆ ಬಹಳಷ್ಟು ಜನಾಂದೋಲನಗಳು ವಿಘಟನೆಯತ್ತ ಸಾಗುತ್ತಿದ್ದುದೇ ಅಲ್ಲದೆ, ಅಯೋಧ್ಯೆ-ರಾಮಮಂದಿರ-ಕಾಶ್ಮೀರ ಮತ್ತು ಭಯೋತ್ಪಾದನೆಯ ಚೌಕಟ್ಟಿನಲ್ಲಿ ಸಾಮಾಜಿಕ ಕಾಳಜಿ, ಕಳಕಳಿ ಮತ್ತು ಸಮ ಸಮಾಜದ ಪರಿಕಲ್ಪನೆಗಳು ಶಿಥಿಲವಾಗುತ್ತಿದ್ದವು. ಈ ಸಂದರ್ಭದಲ್ಲಿ ತಮ್ಮ ಪತ್ರಿಕೆ ಆರಂಭಿಸಿದ ರವಿ ಬೆಳಗೆರೆ ಇಂದು ನಾವು ಕಾಣುತ್ತಿರುವ ವಾಟ್ಸಪ್ ವಿಶ್ವವಿದ್ಯಾಲಯದ ಬೌದ್ಧಿಕ ವಲಯಕ್ಕೆ ಬುನಾದಿ ಹಾಕಿದ್ದನ್ನು ಅವರ ಪ್ರತಿಯೊಂದು ಸಂಚಿಕೆಯಲ್ಲೂ , ಇಂದಿಗೂ ಗುರುತಿಸಬಹುದು.
ರೋಚಕತೆಯನ್ನೇ ಪ್ರಧಾನವಾಗಿಸಿ, ಗಂಭೀರ ಸುದ್ದಿಯನ್ನೂ ರೋಮಾಂಚಕಾರಿಯಾಗಿ ಬಿತ್ತರಿಸುವುದು, ತಾತ್ವಿಕ ನೆಲೆಗಳಲ್ಲಿ ನಿಷ್ಕರ್ಷೆಗೊಳಪಡಬೇಕಾದ, ನಿರ್ವಚಿಸಬೇಕಾದ ಸಮಾಜೋ ಸಾಂಸ್ಕೃತಿಕ ಸಮಸ್ಯೆಗಳನ್ನು ಆಧುನಿಕೋತ್ತರ ನೆಲೆಗಳನ್ನೂ ಮೀರಿದ ನವ ಉದಾರವಾದದ ನೆಲೆಯಲ್ಲಿ ಪ್ರಸ್ತುತಪಡಿಸುವುದು ರವಿ ಬೆಳಗೆರೆಯವ ಅಜೆಂಡಾ ಆಗಿತ್ತು ಎನ್ನುವುದನ್ನು ಅಲ್ಲಗಳೆಯಲಾಗದು.
ಆ ದಶಕದಲ್ಲಿ ಬಿತ್ತಲಾದ ಭಾರತದ ಸಾಂಸ್ಕೃತಿಕ ರಾಜಕಾರಣದ ಬೀಜಗಳು ಇಂದು ಫಲ ನೀಡುತ್ತಿದ್ದರೆ ಅದಕ್ಕೆ ರವಿಬೆಳಗೆರೆಯವರಂತಹ ಪತ್ರಿಕೋದ್ಯಮಿಗಳ ಕೊಡುಗೆಯೂ ಇದೆ ಎನ್ನುವುದನ್ನು ಒಪ್ಪಲೇಬೇಕಾಗುತ್ತದೆ. ಹಾಗಾಗಿಯೇ ಹಾಯ್ ಬೆಂಗಳೂರು ಪತ್ರಿಕೆ ವಿಕೃತ ಪರಿಭಾಷೆಯನ್ನೂ ತನ್ನದಾಗಿಸಿಕೊಂಡಿತ್ತು. ಇಲ್ಲಿ ರವಿ ಬೆಳಗೆರೆಯವರಿಗೆ ರೋಚಕತೆ ಮುಖ್ಯವಾಗಿತ್ತು. ಒಂದು ಇಡೀ ಪೀಳಿಗೆಯನ್ನು ಸಾಮಾಜಿಕ ಕಳಕಳಿಯುಳ್ಳ ಹೋರಾಟ, ಸಂಘರ್ಷದಿಂದ ವಿಮುಖರಾಗಿಸುವ ಸಮಾಜೋ ಸಾಂಸ್ಕೃತಿಕ ಮತ್ತು ರಾಜಕೀಯ ಪ್ರಯತ್ನಗಳಿಗೆ ತಮ್ಮ ಪತ್ರಿಕೆಯ ಮೂಲಕ ಸ್ಪಷ್ಟ ನೆಲೆ ಒದಗಿಸಿದ್ದು ರವಿ ಬೆಳಗೆರೆಯವರ ಸಾಧನೆ(?) ಎನ್ನಬಹುದೇನೋ.
ಹಾಗಾಗಿಯೇ ಅವರ ಭಾಷಾ ಪ್ರೌಢಿಮೆ ಮತ್ತು ವಾಕ್ ಪಟುತ್ವ ಸೃಜನಶೀಲತೆಯನ್ನು ಕಳೆದುಕೊಂಡು, ಸಂವೇದನಾಶೀಲತೆಯನ್ನೂ ಕಳೆದುಕೊಂಡು ಬೆತ್ತಲಾಗಿಬಿಟ್ಟಿತ್ತು. ಲಂಕೇಶರ ಟೀಕೆ ಟಿಪ್ಪಣಿಗೂ, ರವಿಬೆಳಗೆರೆಯ ಖಾಸ್ ಬಾತ್ ಗೂ ಇರುವ ವ್ಯತ್ಯಾಸವನ್ನು ಇಲ್ಲಿ ಗುರುತಿಸಬೇಕಾದ ಅನಿವಾರ್ಯತೆಯೂ ನಮಗಿದೆ. ಏಕೆಂದರೆ ಪತ್ರಿಕೋದ್ಯಮ ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ರಾಜಕೀಯ ಪಲ್ಲಟಗಳ ನಡುವೆಯೇ ಬೆಳೆಯುವ, ಬೆಳೆಯಬೇಕಾದ ಒಂದು ಮಾರ್ಗ. ಕನ್ನಡದ ಇಂದಿನ ಟಿವಿ ವಾಹಿನಿಗಳು ಮತ್ತು ಸುದ್ದಿಮನೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ರವಿ ಬೆಳಗೆರೆ ಮತ್ತು ಅವರ ಹಾಯ್ ಬೆಂಗಳೂರು ಈ ವಾಹಿನಿಗಳ ಪಾಲಿಗೆ ದ್ರೋಣಾಚಾರ್ಯರಂತೆ ಕಾಣಬಹುದು.
ಈ ಚೌಕಟ್ಟಿನಿಂದಾಚೆಗೆ ರವಿ ಹೊರಬರಲೇ ಇಲ್ಲ ಎನ್ನುವುದನ್ನು ಅವರ ಹಲವು ಕಾದಂಬರಿಗಳಲ್ಲೂ ಗುರುತಿಸಬಹುದು. ಭಾರತದಲ್ಲಿ ನೆಲೆಯೂರುತ್ತಿದ್ದ ಮತಾಂಧ ರಾಜಕಾರಣ ಮತ್ತು ಸಾಂಸ್ಕೃತಿಕ ರಾಜಕಾರಣದ ಬಹುಸಂಖ್ಯಾವಾದಕ್ಕೆ ಪೂರಕವಾಗಿಯೇ ತಮ್ಮ ಆಲೋಚನಾ ಕ್ರಮವನ್ನೂ ರೂಪಿಸಿಕೊಂಡಿದ್ದ ರವಿ ಬೆಳಗೆರೆ ತಮ್ಮ ಪತ್ರಿಕೆಗಳಲ್ಲಿ ಆಡಳಿತಾರೂಢ ಪಕ್ಷ ರಾಜಕಾರಣವನ್ನು ವಿಮರ್ಶಾತ್ಮಕವಾಗಿ ನೋಡಿದರೂ, ಪ್ರಭುತ್ವದ ಧೋರಣೆಯನ್ನು ಎಂದಿಗೂ ಪ್ರಶ್ನಿಸಿದಂತಿಲ್ಲ. ಶಿಥಿಲವಾಗಿದ್ದರೂ ತಮ್ಮ ಹೋರಾಟದ ನೆಲೆಗಳನ್ನು ವಿಸ್ತರಿಸುತ್ತಲೇ ನವ ಉದಾರವಾದ ಮತ್ತು ಮತೀಯ ರಾಜಕಾರಣದ ವಿರುದ್ಧ ಸಂಘರ್ಷದಲ್ಲಿ ತೊಡಗಿದ್ದ ಜನಸಮುದಾಯಗಳಿಗೆ ಹಾಯ್ ಬೆಂಗಳೂರು ಪತ್ರಿಕೆ ಒಂದು ಅಂಗುಲದಷ್ಟು ಜಾಗವನ್ನೂ ನೀಡಲಿಲ್ಲ.
ಹಾಗಾಗಿಯೇ ತಮ್ಮ ಕೃತಿಗಳಲ್ಲೂ ರವಿ ಬೆಳಗೆರೆ ಅಂದಿನ-ಇಂದಿನ ಸಾಂಸ್ಕೃತಿಕ ರಾಜಕಾರಣದ ಪ್ರವರ್ತಕರಾಗಿ ಕಾಣುತ್ತಾರೆಯೇ ಹೊರತು ಓರ್ವ ಪತ್ರಕರ್ತರಾಗಿ ಕಾಣುವುದಿಲ್ಲ. ಅವರು ಬಳಸಿದ ಪರಿಭಾಷೆಯೂ ಸಹ ಜನಸಾಮಾನ್ಯರಲ್ಲಿರುವ ಕನಿಷ್ಟ ಸಮೂಹ ಪ್ರಜ್ಞೆಯನ್ನು ಶಿಥಿಲಗೊಳಿಸುವ ನಿಟ್ಟಿನಲ್ಲೇ ರಚನೆಯಾಗಿದ್ದನ್ನೂ ಗಮನಿಸಬೇಕು. 1995ರ ನಂತರದಲ್ಲಿ ಮತ್ತು ಅದಕ್ಕೂ ಮುನ್ನ ಕರ್ನಾಟಕದಾದ್ಯಂತ ಆರಂಭವಾದ ಅನೇಕ ಟ್ಯಾಬ್ಲಾಯ್ಡ್ ಪತ್ರಿಕೆಗಳಿಗೆ ಲಂಕೇಶರಿಗಿಂತಲೂ ರವಿ ಬೆಳಗೆರೆ ಮಾದರಿಯಾಗಿದ್ದು ನಮ್ಮ ದುರಂತ. ಆದರೆ ಇದು ವಾಸ್ತವ.
ಆದ್ದರಿಂದಲೇ ಒಂದು ಪೀಳಿಗೆಯ ಬರಹಗಾರರು, ಯುವ ಹೋರಾಟಗಾರರು ಸಾಮಾಜಿಕ ತಾಣಗಳಲ್ಲಿ ರವಿ ಬೆಳಗೆರೆ ವಿರುದ್ಧತಮ್ಮ ಸಿಟ್ಟು, ಆಕ್ರೋಶ ಮತ್ತು ಪ್ರತಿರೋಧವನ್ನು ಹೊರಗೆಡಹುತ್ತಿದ್ದಾರೆ. ಸಾಂಸ್ಕೃತಿಕ ರಾಜಕಾರಣ ಮತ್ತು ಮತಾಂಧತೆ, ಇಸ್ಲಾಂ ವಿರೋಧಿ ಧೋರಣೆ ಮತ್ತು ಜಾತಿ ಶ್ರೇಷ್ಠತೆಯ ವಿರುದ್ಧ, ದಲಿತ ಸಮುದಾಯಗಳು ಎದುರಿಸುತ್ತಿರುವ ದೌರ್ಜನ್ಯಗಳ ವಿರುದ್ಧ ಹೋರಾಟದಲ್ಲಿ ತೊಡಗಿರುವ ಯುವ ಮನಸುಗಳಿಗೆ ರವಿಬೆಳಗೆರೆ ಓರ್ವ ಖಳನಾಯಕನಂತೆ ಕಂಡುಬಂದರೆ ಅಚ್ಚರಿಯೇನಿಲ್ಲ.
ಪತ್ರಿಕೋದ್ಯಮ ಮತ್ತು ಮಾಧ್ಯಮ ವಲಯ ಪ್ರಭುತ್ವದ ಬಾಲಂಗೋಚಿಗಳಂತೆ ಕಾರ್ಯ ನಿರ್ವಹಿಸುತ್ತಾ ಅವಕಾಶವಂಚಿತ, ಶೋಷಿತ ಸಮುದಾಯಗಳಿಗೆ ವಿಮುಖವಾಗುತ್ತಿರುವ ಸಂದರ್ಭದಲ್ಲಿ ಈ ಆಕ್ರೋಶ ಸಹಜವಾದದ್ದು. ಕರ್ನಾಟಕದ ಮಟ್ಟಿಗೆ ವಿದ್ಯುನ್ಮಾನ ಮಾಧ್ಯಮವನ್ನೂ ಸೇರಿದಂತೆ ಪತ್ರಿಕೋದ್ಯಮ ಇಂದು ಸಮಾಜಮುಖಿ-ಜನಮುಖಿ ಯುವಪೀಳಿಗೆಗೆ ಯಾವುದೇ ರೀತಿಯಲ್ಲೂ ಸಹಾಯಕವಾಗುತ್ತಿಲ್ಲ, ಮಾದರಿಯಾಗುವುದು ಸಾಧ್ಯವೂ ಇಲ್ಲ.
ಈ ವಿಕೃತ ಪರಂಪರೆಗೆ ಬುನಾದಿ ಹಾಕಿದವರಲ್ಲಿ ರವಿ ಬೆಳಗೆರೆ ಪ್ರಮುಖರು. ಬಹುಶಃ 1990ರ ದಶಕದ ಸಮಾಜೋ ಸಾಂಸ್ಕೃತಿಕ ಹಾಗೂ ರಾಜಕೀಯ ನೆಲೆಗಳೇ ಹಾಯ್ ಬೆಂಗಳೂರ್ ನಂತಹ ಪತ್ರಿಕೆಯನ್ನು, ರವಿ ಬೆಳಗೆರೆಯಂತಹ ಪತ್ರಿಕೋದ್ಯಮಿಯನ್ನು ಹುಟ್ಟುಹಾಕಿತ್ತು ಎನಿಸುತ್ತದೆ. ಒಬ್ಬ ವ್ಯಕ್ತಿಯಾಗಿ ರವಿ ಬೆಳಗೆರೆಯವರ ಸಾವಿಗೆ ಸಂತಾಪ ಸೂಚಿಸುತ್ತಲೇ ಒಬ್ಬ ಪತ್ರಿಕೋದ್ಯಮಿಯಾಗಿ ಅವರಲ್ಲಿ ಅಡಗಿದ್ದ ವಿಕೃತಿಗಳನ್ನು, ವಿಸ್ಮೃತಿಗಳನ್ನು ಹೊರಹಾಕಲು ಮುಂದಾಗಿರುವ ಯುವ ಮನಸುಗಳಿಗೆ ನಾವು ಸ್ಪಂದಿಸಬೇಕಾಗುತ್ತದೆ.
ರವಿ ಸರ್ ಹೋಗಿ ಬನ್ನಿ, ಬಂದರೂ ನಿಮ್ಮೊಳಗಿದ್ದ ಪತ್ರಿಕೋದ್ಯಮಿಯನ್ನು ಕಳಚಿಹಾಕಿ ಬನ್ನಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ದಿನದ ಸುದ್ದಿ2 days agoಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಇಂದು ಕರೆಂಟ್ ಇರಲ್ಲ
-
ದಿನದ ಸುದ್ದಿ3 days agoಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
-
ದಿನದ ಸುದ್ದಿ1 day ago‘ಮತದಾರ ದೇವರು’ ಎಂದ ಸಿದ್ದರಾಮಯ್ಯ



