ಅಂತರಂಗ
ರವಿ ಬೆಳಗೆರೆ – ಸಂತಾಪ ಸೂಚಿಸುವ ಮುನ್ನ..!
- ನಾ ದಿವಾಕರ
ರೋಚಕತೆ ಸೃಜನಶೀಲತೆಯನ್ನುಕೊಲ್ಲುತ್ತದೆ. ಅತಿಯಾದ ರೋಚಕತೆ ವೈಚಾರಿಕತೆಯನ್ನೂ ಕೊಲ್ಲುತ್ತದೆ. ಅಕ್ಷರ ಕೃಷಿಯಲ್ಲಿ ತೊಡಗಿರುವ ಪ್ರತಿಯೊಬ್ಬರೂ ಇದನ್ನು ನೆನಪಿಡಬೇಕು. ಲೇಖನವಾಗಲಿ, ಕಾವ್ಯವೇ ಆಗಲಿ ಅಥವಾ ಒಂದು ಕಥನವೇ ಆಗಲೀ ಅವಶ್ಯಕತೆಯನ್ನು ಮೀರಿದ ರೋಚಕತೆಯಿಂದ ತನ್ನ ಅಂತಃಸತ್ವವನ್ನು ಕಳೆದುಕೊಂಡುಬಿಡುತ್ತದೆ.
ಪತ್ರಿಕೋದ್ಯಮವನ್ನು ತಮ್ಮ ವೃತ್ತಿ ಮತ್ತು ಪ್ರವೃತ್ತಿಯನ್ನಾಗಿ ಸ್ವೀಕರಿಸುವವರು ಇದನ್ನು ಮನಗಾಣದೆ ಹೋದರೆ ಏನಾಗುತ್ತದೆ ? ತಮ್ಮ ಬರವಣಿಗೆಯಿಂದಲೇ ಕರ್ನಾಟಕದಲ್ಲಿ ತಮ್ಮದೇ ಆದ ಪ್ರಭಾವಳಿಯನ್ನು ನಿರ್ಮಿಸಿಕೊಂಡು 25 ವರ್ಷಗಳ ನಿರಂತರ ಅಕ್ಷರ ಕೃಷಿ ನಡೆಸಿದ ರವಿಬೆಳಗೆರೆ ಈ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿ ಇಹಲೋಕ ತ್ಯಜಿಸಿದ್ದಾರೆ.
ಸಂತಾಪ ಸೂಚಿಸಲೂ ಹಿಂಜರಿಯುವಂತಹ ಮನಸುಗಳು ರವಿ ಬೆಳಗೆರೆಯವರ ಪತ್ರಿಕೋದ್ಯಮ ಸೃಷ್ಟಿಸಿದೆ, ಹಾಗೆಯೇ ಆರಾಧಿಸುವ ಮನಸುಗಳನ್ನೂ ಸೃಷ್ಟಿಸಿದೆ. ಇದು ವ್ಯಕ್ತಿಗತ ಅಭಿವ್ಯಕ್ತಿಗೆ ಸಂಬಂಧಿಸಿದ ವಿಚಾರ. ಸೈದ್ದಾಂತಿಕವಾಗಿ, ತಾತ್ವಿಕವಾಗಿ ರವಿಯ ಯಾವ ಸ್ವರೂಪವನ್ನೂ ಒಪ್ಪದವರೂ ಸಹ, ಅವರೊಡಗಿನ ಸುದೀರ್ಘ ಒಡನಾಟ ಮತ್ತು ಸ್ನೇಹದ ಹಿನ್ನೆಲೆಯಲ್ಲಿ ಅಗಲಿದ ಗೆಳೆಯನಿಗೆ ಭಾವಪೂರ್ಣ ಸಂತಾಪಗಳನ್ನು, ಕೆಲವು ಹೊಗಳಿಕೆಯ ಮಾತುಗಳೊಂದಿಗೆ ಹೇಳಿರುವುದೂ ಸಹ ಸಾಮಾಜಿಕ ತಾಣಗಳಲ್ಲಿ ಟೀಕೆ, ವಿಮರ್ಶೆಗೊಳಗಾಗಿದೆ.
ನಾವು ರವಿ ಬೆಳಗೆರೆಯವರನ್ನು ಒಬ್ಬ ವ್ಯಕ್ತಿಯಾಗಿ ನೋಡುವುದೇ ಬೇರೆ, ಮಾಧ್ಯಮ ಪ್ರತಿನಿಧಿಯಾಗಿ ನೋಡುವ ದೃಷ್ಟಿಯೇ ಬೇರೆಯಾಗಿದ್ದರೆ ಅಡ್ಡಿಯೇನಿಲ್ಲ. ಅದ್ಭುತ ಮಾತುಗಾರ, ಮೋಡಿ ಮಾಡುವಂತಹ ಸ್ನೇಹಮಯಿ, ಉತ್ತಮ ವಾಗ್ಮಿ ಮುಂತಾದ ಗುಣವಿಶೇಷಣಗಳ ನಡುವೆಯೇ ಮಾಧ್ಯಮ ಲೋಕದ ನೆಲೆಯಲ್ಲಿ ರವಿಬೆಳಗೆರೆಯನ್ನು ನಿಲ್ಲಿಸಿದಾಗ, ಅವರು ಅಪರಾಧಿಯಂತೆ ಕಟಕಟೆಯಲ್ಲಿ ನಿಲ್ಲಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ.
ಸಹಜವಾಗಿಯೇ ಹಾಯ್ ಬೆಂಗಳೂರು ಪತ್ರಿಕೆಯನ್ನು ಲಂಕೇಶ್ ಪತ್ರಿಕೆಗೆ ಮುಖಾಮುಖಿಯಾಗಿಸಿ ವಿಮರ್ಶೆಗೆ ಒಳಪಡಿಸಲಾಗುತ್ತದೆ. ಲಂಕೇಶ್ ಪತ್ರಿಕೆ ಕನ್ನಡದಲ್ಲಿ ಟ್ಯಾಬ್ಲಾಯ್ಡ್ ಪತ್ರಿಕೆಗೆ ಚಾಲನೆ ನೀಡಿದ್ದಷ್ಟೇ ಅಲ್ಲ, ಒಂದು ಸುದ್ದಿಪತ್ರಿಕೆಯ ಸಾಮಾಜಿಕ, ಸಾಂಸ್ಕೃತಿಕ ಮತ್ತುರಾಜಕೀಯ ಜವಾಬ್ದಾರಿಗಳನ್ನೂ ಅರಿತು ಹೆಜ್ಜೆ ಇಟ್ಟಿತ್ತು. ಲಂಕೇಶ್ ಪತ್ರಿಕೆ ಆರಂಭವಾದ ಕಾಲಘಟ್ಟದಲ್ಲಿ ನಾಗರಿಕ ಸಮಾಜದ ಸಾಮಾಜಿಕ ಕಳಕಳಿ, ಕಾಳಜಿ ಮತ್ತು ಸಾಂಸ್ಕೃತಿಕ ಒಳತೋಟಿಗಳು ಸಂಘರ್ಷದ ಪರಾಕಾಷ್ಠೆಯನ್ನು ತಲುಪಿದ್ದವು. ಜನಾಂದೋಲನಗಳು ಪರಿಪಕ್ವವಾಗಿ ನಂತರ ತನ್ನದೇ ಆದ ಸಮಸ್ಯೆಗಳಿಂದ ಕೆಲ ಕಾಲ ನೇಪಥ್ಯಕ್ಕೆ ಸರಿಯುವ ಒಂದು ಕಾಲಘಟ್ಟದಲ್ಲಿ ಲಂಕೇಶ್ ತಮ್ಮ ಪತ್ರಿಕೆಯ ಮೂಲಕ ಸಮಾಜೋ ಸಾಂಸ್ಕೃತಿಕ ಸಂವಾದ ಮತ್ತು ಸಂಕಥನಗಳಿಗೆ ಅವಕಾಶ ಕಲ್ಪಿಸಿದ್ದರು.
ಹಾಗಾಗಿ ಲಂಕೇಶ್ ಪತ್ರಿಕೆಯ ಓದುಗರ ಬಳಗ ವಿಶಿಷ್ಟವಾಗಿತ್ತು. ಆಗ ತಾನೇ ತಮ್ಮ ಸಾಮಾಜಿಕ ನೆಲೆ ಕಂಡುಕೊಳ್ಳುತ್ತಿದ್ದ ಆದರೆ ಪ್ರಭುತ್ವದೊಡನೆ ಸದಾ ಸಂಘರ್ಷದಲ್ಲಿರುವ ಅನಿವಾರ್ಯತೆಯನ್ನು ಎದುರಿಸುತ್ತಿದ್ದ ಒಂದು ಯುವ ಸಮುದಾಯಕ್ಕೆ ಭಾರತೀಯ ಸಮಾಜದಲ್ಲಿನ ಒಳನೋಟಗಳನ್ನು ಪರಿಚಯಿಸುವುದು ಮತ್ತು ಸಾರ್ವಜನಿಕ ಚರ್ಚೆಗೆ ಒಳಪಡಿಸುವುದು ಲಂಕೇಶರ ಗುರಿಯಾಗಿತ್ತು. ಹಾಗಾಗಿ ಸಾಂಪ್ರದಾಯಿಕ ಪತ್ರಿಕೋದ್ಯಮದಿಂದ ಭಿನ್ನವಾಗಿ ತಮ್ಮದೇ ಆದ ಮಾಧ್ಯಮ ಪರಿಭಾಷೆಯನ್ನು ಸೃಷ್ಟಿಸಿಕೊಂಡ ಲಂಕೇಶ್ ಅಂದಿನ ಯುವ ಪೀಳಿಗೆಯನ್ನು ಮತ್ತು ಹೋರಾಟ ನಿರತ ಜನತೆಯನ್ನು ಆಕರ್ಷಿಸಿದ್ದರು.
ಆದರೆ ರವಿ ಬೆಳಗೆರೆಯನ್ನು ಲಂಕೇಶರಿಗೆ ಮುಖಾಮುಖಿಯಾಗಿಸುವ ಮುನ್ನ ನಾವು ಯೋಚಿಸಬೇಕಿರುವುದು, ಲಂಕೇಶರ ಕಾಲಘಟ್ಟದ ಸಮಾಜೋ ಸಾಂಸ್ಕೃತಿಕ ಮತ್ತು ರಾಜಕೀಯ ಪಲ್ಲಟಗಳು. ಈ ಬೆಳವಣಿಗೆಗಳಿಗೆ ಸ್ಪಂದಿಸುವುದಷ್ಟೇ ಅಲ್ಲದೆ ಯುವ ಪೀಳಿಗೆಯಲ್ಲಿ ವಿಭಿನ್ನ ದೃಷ್ಟಿಕೋನವನ್ನು ಬಿತ್ತುವ ಕೆಲಸವನ್ನು ಲಂಕೇಶ್ ಮಾಡಿದ್ದು ಸ್ಪಷ್ಟ. ಈ ಕುರಿತು ಪ್ರಸ್ತುತ ಲೇಖನದಲ್ಲಿ ಹೆಚ್ಚಿನ ಸಂವಾದದ ಅವಶ್ಯಕತೆ ಇಲ್ಲ ಎಂದೆಣಿಸುತ್ತೇನೆ.
ಆದರೆ ರವಿಬೆಳಗೆರೆ 1995ರಲ್ಲಿ ತಮ್ಮ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದ ಸಂದರ್ಭವನ್ನೂ ಗಮನಿಸಬೇಕಾಗುತ್ತದೆ. 1989-90ರ ಸಾಂಸ್ಕೃತಿಕ ರಾಜಕಾರಣ, ಕಾಶ್ಮೀರ ಸಮಸ್ಯೆಯ ಉಲ್ಬಣ, ಮತೀಯ ರಾಜಕಾರಣ ಮತ್ತು ಜಾತಿ ರಾಜಕಾರಣದ ಗಟ್ಟಿ ನೆಲೆಗಳು , ಕ್ಷೀಣಿಸುತ್ತಿದ್ದ ಜನಾಂದೋಲನಗಳು ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ ನವ ಉದಾರವಾದ ಮತ್ತು ಜಾಗತೀಕರಣ ಸೃಷ್ಟಿಸಿದ್ದ ಆಧುನಿಕೋತ್ತರ ಚಿಂತನೆಯ ನೆಲೆಗಳು ಒಂದು ಹೊಸ ಪೀಳಿಗೆಯ ದೃಷ್ಟಿಕೋನವನ್ನೇ ಬದಲಿಸುವ ನಿಟ್ಟಿನಲ್ಲಿ ಮುನ್ನಡೆದಿದ್ದವು.
ಆ ವೇಳೆಗಾಗಲೇ ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿಯನ್ನೂ ಸೇರಿದಂತೆ ಬಹಳಷ್ಟು ಜನಾಂದೋಲನಗಳು ವಿಘಟನೆಯತ್ತ ಸಾಗುತ್ತಿದ್ದುದೇ ಅಲ್ಲದೆ, ಅಯೋಧ್ಯೆ-ರಾಮಮಂದಿರ-ಕಾಶ್ಮೀರ ಮತ್ತು ಭಯೋತ್ಪಾದನೆಯ ಚೌಕಟ್ಟಿನಲ್ಲಿ ಸಾಮಾಜಿಕ ಕಾಳಜಿ, ಕಳಕಳಿ ಮತ್ತು ಸಮ ಸಮಾಜದ ಪರಿಕಲ್ಪನೆಗಳು ಶಿಥಿಲವಾಗುತ್ತಿದ್ದವು. ಈ ಸಂದರ್ಭದಲ್ಲಿ ತಮ್ಮ ಪತ್ರಿಕೆ ಆರಂಭಿಸಿದ ರವಿ ಬೆಳಗೆರೆ ಇಂದು ನಾವು ಕಾಣುತ್ತಿರುವ ವಾಟ್ಸಪ್ ವಿಶ್ವವಿದ್ಯಾಲಯದ ಬೌದ್ಧಿಕ ವಲಯಕ್ಕೆ ಬುನಾದಿ ಹಾಕಿದ್ದನ್ನು ಅವರ ಪ್ರತಿಯೊಂದು ಸಂಚಿಕೆಯಲ್ಲೂ , ಇಂದಿಗೂ ಗುರುತಿಸಬಹುದು.
ರೋಚಕತೆಯನ್ನೇ ಪ್ರಧಾನವಾಗಿಸಿ, ಗಂಭೀರ ಸುದ್ದಿಯನ್ನೂ ರೋಮಾಂಚಕಾರಿಯಾಗಿ ಬಿತ್ತರಿಸುವುದು, ತಾತ್ವಿಕ ನೆಲೆಗಳಲ್ಲಿ ನಿಷ್ಕರ್ಷೆಗೊಳಪಡಬೇಕಾದ, ನಿರ್ವಚಿಸಬೇಕಾದ ಸಮಾಜೋ ಸಾಂಸ್ಕೃತಿಕ ಸಮಸ್ಯೆಗಳನ್ನು ಆಧುನಿಕೋತ್ತರ ನೆಲೆಗಳನ್ನೂ ಮೀರಿದ ನವ ಉದಾರವಾದದ ನೆಲೆಯಲ್ಲಿ ಪ್ರಸ್ತುತಪಡಿಸುವುದು ರವಿ ಬೆಳಗೆರೆಯವ ಅಜೆಂಡಾ ಆಗಿತ್ತು ಎನ್ನುವುದನ್ನು ಅಲ್ಲಗಳೆಯಲಾಗದು.
ಆ ದಶಕದಲ್ಲಿ ಬಿತ್ತಲಾದ ಭಾರತದ ಸಾಂಸ್ಕೃತಿಕ ರಾಜಕಾರಣದ ಬೀಜಗಳು ಇಂದು ಫಲ ನೀಡುತ್ತಿದ್ದರೆ ಅದಕ್ಕೆ ರವಿಬೆಳಗೆರೆಯವರಂತಹ ಪತ್ರಿಕೋದ್ಯಮಿಗಳ ಕೊಡುಗೆಯೂ ಇದೆ ಎನ್ನುವುದನ್ನು ಒಪ್ಪಲೇಬೇಕಾಗುತ್ತದೆ. ಹಾಗಾಗಿಯೇ ಹಾಯ್ ಬೆಂಗಳೂರು ಪತ್ರಿಕೆ ವಿಕೃತ ಪರಿಭಾಷೆಯನ್ನೂ ತನ್ನದಾಗಿಸಿಕೊಂಡಿತ್ತು. ಇಲ್ಲಿ ರವಿ ಬೆಳಗೆರೆಯವರಿಗೆ ರೋಚಕತೆ ಮುಖ್ಯವಾಗಿತ್ತು. ಒಂದು ಇಡೀ ಪೀಳಿಗೆಯನ್ನು ಸಾಮಾಜಿಕ ಕಳಕಳಿಯುಳ್ಳ ಹೋರಾಟ, ಸಂಘರ್ಷದಿಂದ ವಿಮುಖರಾಗಿಸುವ ಸಮಾಜೋ ಸಾಂಸ್ಕೃತಿಕ ಮತ್ತು ರಾಜಕೀಯ ಪ್ರಯತ್ನಗಳಿಗೆ ತಮ್ಮ ಪತ್ರಿಕೆಯ ಮೂಲಕ ಸ್ಪಷ್ಟ ನೆಲೆ ಒದಗಿಸಿದ್ದು ರವಿ ಬೆಳಗೆರೆಯವರ ಸಾಧನೆ(?) ಎನ್ನಬಹುದೇನೋ.
ಹಾಗಾಗಿಯೇ ಅವರ ಭಾಷಾ ಪ್ರೌಢಿಮೆ ಮತ್ತು ವಾಕ್ ಪಟುತ್ವ ಸೃಜನಶೀಲತೆಯನ್ನು ಕಳೆದುಕೊಂಡು, ಸಂವೇದನಾಶೀಲತೆಯನ್ನೂ ಕಳೆದುಕೊಂಡು ಬೆತ್ತಲಾಗಿಬಿಟ್ಟಿತ್ತು. ಲಂಕೇಶರ ಟೀಕೆ ಟಿಪ್ಪಣಿಗೂ, ರವಿಬೆಳಗೆರೆಯ ಖಾಸ್ ಬಾತ್ ಗೂ ಇರುವ ವ್ಯತ್ಯಾಸವನ್ನು ಇಲ್ಲಿ ಗುರುತಿಸಬೇಕಾದ ಅನಿವಾರ್ಯತೆಯೂ ನಮಗಿದೆ. ಏಕೆಂದರೆ ಪತ್ರಿಕೋದ್ಯಮ ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ರಾಜಕೀಯ ಪಲ್ಲಟಗಳ ನಡುವೆಯೇ ಬೆಳೆಯುವ, ಬೆಳೆಯಬೇಕಾದ ಒಂದು ಮಾರ್ಗ. ಕನ್ನಡದ ಇಂದಿನ ಟಿವಿ ವಾಹಿನಿಗಳು ಮತ್ತು ಸುದ್ದಿಮನೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ರವಿ ಬೆಳಗೆರೆ ಮತ್ತು ಅವರ ಹಾಯ್ ಬೆಂಗಳೂರು ಈ ವಾಹಿನಿಗಳ ಪಾಲಿಗೆ ದ್ರೋಣಾಚಾರ್ಯರಂತೆ ಕಾಣಬಹುದು.
ಈ ಚೌಕಟ್ಟಿನಿಂದಾಚೆಗೆ ರವಿ ಹೊರಬರಲೇ ಇಲ್ಲ ಎನ್ನುವುದನ್ನು ಅವರ ಹಲವು ಕಾದಂಬರಿಗಳಲ್ಲೂ ಗುರುತಿಸಬಹುದು. ಭಾರತದಲ್ಲಿ ನೆಲೆಯೂರುತ್ತಿದ್ದ ಮತಾಂಧ ರಾಜಕಾರಣ ಮತ್ತು ಸಾಂಸ್ಕೃತಿಕ ರಾಜಕಾರಣದ ಬಹುಸಂಖ್ಯಾವಾದಕ್ಕೆ ಪೂರಕವಾಗಿಯೇ ತಮ್ಮ ಆಲೋಚನಾ ಕ್ರಮವನ್ನೂ ರೂಪಿಸಿಕೊಂಡಿದ್ದ ರವಿ ಬೆಳಗೆರೆ ತಮ್ಮ ಪತ್ರಿಕೆಗಳಲ್ಲಿ ಆಡಳಿತಾರೂಢ ಪಕ್ಷ ರಾಜಕಾರಣವನ್ನು ವಿಮರ್ಶಾತ್ಮಕವಾಗಿ ನೋಡಿದರೂ, ಪ್ರಭುತ್ವದ ಧೋರಣೆಯನ್ನು ಎಂದಿಗೂ ಪ್ರಶ್ನಿಸಿದಂತಿಲ್ಲ. ಶಿಥಿಲವಾಗಿದ್ದರೂ ತಮ್ಮ ಹೋರಾಟದ ನೆಲೆಗಳನ್ನು ವಿಸ್ತರಿಸುತ್ತಲೇ ನವ ಉದಾರವಾದ ಮತ್ತು ಮತೀಯ ರಾಜಕಾರಣದ ವಿರುದ್ಧ ಸಂಘರ್ಷದಲ್ಲಿ ತೊಡಗಿದ್ದ ಜನಸಮುದಾಯಗಳಿಗೆ ಹಾಯ್ ಬೆಂಗಳೂರು ಪತ್ರಿಕೆ ಒಂದು ಅಂಗುಲದಷ್ಟು ಜಾಗವನ್ನೂ ನೀಡಲಿಲ್ಲ.
ಹಾಗಾಗಿಯೇ ತಮ್ಮ ಕೃತಿಗಳಲ್ಲೂ ರವಿ ಬೆಳಗೆರೆ ಅಂದಿನ-ಇಂದಿನ ಸಾಂಸ್ಕೃತಿಕ ರಾಜಕಾರಣದ ಪ್ರವರ್ತಕರಾಗಿ ಕಾಣುತ್ತಾರೆಯೇ ಹೊರತು ಓರ್ವ ಪತ್ರಕರ್ತರಾಗಿ ಕಾಣುವುದಿಲ್ಲ. ಅವರು ಬಳಸಿದ ಪರಿಭಾಷೆಯೂ ಸಹ ಜನಸಾಮಾನ್ಯರಲ್ಲಿರುವ ಕನಿಷ್ಟ ಸಮೂಹ ಪ್ರಜ್ಞೆಯನ್ನು ಶಿಥಿಲಗೊಳಿಸುವ ನಿಟ್ಟಿನಲ್ಲೇ ರಚನೆಯಾಗಿದ್ದನ್ನೂ ಗಮನಿಸಬೇಕು. 1995ರ ನಂತರದಲ್ಲಿ ಮತ್ತು ಅದಕ್ಕೂ ಮುನ್ನ ಕರ್ನಾಟಕದಾದ್ಯಂತ ಆರಂಭವಾದ ಅನೇಕ ಟ್ಯಾಬ್ಲಾಯ್ಡ್ ಪತ್ರಿಕೆಗಳಿಗೆ ಲಂಕೇಶರಿಗಿಂತಲೂ ರವಿ ಬೆಳಗೆರೆ ಮಾದರಿಯಾಗಿದ್ದು ನಮ್ಮ ದುರಂತ. ಆದರೆ ಇದು ವಾಸ್ತವ.
ಆದ್ದರಿಂದಲೇ ಒಂದು ಪೀಳಿಗೆಯ ಬರಹಗಾರರು, ಯುವ ಹೋರಾಟಗಾರರು ಸಾಮಾಜಿಕ ತಾಣಗಳಲ್ಲಿ ರವಿ ಬೆಳಗೆರೆ ವಿರುದ್ಧತಮ್ಮ ಸಿಟ್ಟು, ಆಕ್ರೋಶ ಮತ್ತು ಪ್ರತಿರೋಧವನ್ನು ಹೊರಗೆಡಹುತ್ತಿದ್ದಾರೆ. ಸಾಂಸ್ಕೃತಿಕ ರಾಜಕಾರಣ ಮತ್ತು ಮತಾಂಧತೆ, ಇಸ್ಲಾಂ ವಿರೋಧಿ ಧೋರಣೆ ಮತ್ತು ಜಾತಿ ಶ್ರೇಷ್ಠತೆಯ ವಿರುದ್ಧ, ದಲಿತ ಸಮುದಾಯಗಳು ಎದುರಿಸುತ್ತಿರುವ ದೌರ್ಜನ್ಯಗಳ ವಿರುದ್ಧ ಹೋರಾಟದಲ್ಲಿ ತೊಡಗಿರುವ ಯುವ ಮನಸುಗಳಿಗೆ ರವಿಬೆಳಗೆರೆ ಓರ್ವ ಖಳನಾಯಕನಂತೆ ಕಂಡುಬಂದರೆ ಅಚ್ಚರಿಯೇನಿಲ್ಲ.
ಪತ್ರಿಕೋದ್ಯಮ ಮತ್ತು ಮಾಧ್ಯಮ ವಲಯ ಪ್ರಭುತ್ವದ ಬಾಲಂಗೋಚಿಗಳಂತೆ ಕಾರ್ಯ ನಿರ್ವಹಿಸುತ್ತಾ ಅವಕಾಶವಂಚಿತ, ಶೋಷಿತ ಸಮುದಾಯಗಳಿಗೆ ವಿಮುಖವಾಗುತ್ತಿರುವ ಸಂದರ್ಭದಲ್ಲಿ ಈ ಆಕ್ರೋಶ ಸಹಜವಾದದ್ದು. ಕರ್ನಾಟಕದ ಮಟ್ಟಿಗೆ ವಿದ್ಯುನ್ಮಾನ ಮಾಧ್ಯಮವನ್ನೂ ಸೇರಿದಂತೆ ಪತ್ರಿಕೋದ್ಯಮ ಇಂದು ಸಮಾಜಮುಖಿ-ಜನಮುಖಿ ಯುವಪೀಳಿಗೆಗೆ ಯಾವುದೇ ರೀತಿಯಲ್ಲೂ ಸಹಾಯಕವಾಗುತ್ತಿಲ್ಲ, ಮಾದರಿಯಾಗುವುದು ಸಾಧ್ಯವೂ ಇಲ್ಲ.
ಈ ವಿಕೃತ ಪರಂಪರೆಗೆ ಬುನಾದಿ ಹಾಕಿದವರಲ್ಲಿ ರವಿ ಬೆಳಗೆರೆ ಪ್ರಮುಖರು. ಬಹುಶಃ 1990ರ ದಶಕದ ಸಮಾಜೋ ಸಾಂಸ್ಕೃತಿಕ ಹಾಗೂ ರಾಜಕೀಯ ನೆಲೆಗಳೇ ಹಾಯ್ ಬೆಂಗಳೂರ್ ನಂತಹ ಪತ್ರಿಕೆಯನ್ನು, ರವಿ ಬೆಳಗೆರೆಯಂತಹ ಪತ್ರಿಕೋದ್ಯಮಿಯನ್ನು ಹುಟ್ಟುಹಾಕಿತ್ತು ಎನಿಸುತ್ತದೆ. ಒಬ್ಬ ವ್ಯಕ್ತಿಯಾಗಿ ರವಿ ಬೆಳಗೆರೆಯವರ ಸಾವಿಗೆ ಸಂತಾಪ ಸೂಚಿಸುತ್ತಲೇ ಒಬ್ಬ ಪತ್ರಿಕೋದ್ಯಮಿಯಾಗಿ ಅವರಲ್ಲಿ ಅಡಗಿದ್ದ ವಿಕೃತಿಗಳನ್ನು, ವಿಸ್ಮೃತಿಗಳನ್ನು ಹೊರಹಾಕಲು ಮುಂದಾಗಿರುವ ಯುವ ಮನಸುಗಳಿಗೆ ನಾವು ಸ್ಪಂದಿಸಬೇಕಾಗುತ್ತದೆ.
ರವಿ ಸರ್ ಹೋಗಿ ಬನ್ನಿ, ಬಂದರೂ ನಿಮ್ಮೊಳಗಿದ್ದ ಪತ್ರಿಕೋದ್ಯಮಿಯನ್ನು ಕಳಚಿಹಾಕಿ ಬನ್ನಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ4 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ4 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ4 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

