ಅಂತರಂಗ
ರವಿ ಬೆಳಗೆರೆ – ಸಂತಾಪ ಸೂಚಿಸುವ ಮುನ್ನ..!
- ನಾ ದಿವಾಕರ
ರೋಚಕತೆ ಸೃಜನಶೀಲತೆಯನ್ನುಕೊಲ್ಲುತ್ತದೆ. ಅತಿಯಾದ ರೋಚಕತೆ ವೈಚಾರಿಕತೆಯನ್ನೂ ಕೊಲ್ಲುತ್ತದೆ. ಅಕ್ಷರ ಕೃಷಿಯಲ್ಲಿ ತೊಡಗಿರುವ ಪ್ರತಿಯೊಬ್ಬರೂ ಇದನ್ನು ನೆನಪಿಡಬೇಕು. ಲೇಖನವಾಗಲಿ, ಕಾವ್ಯವೇ ಆಗಲಿ ಅಥವಾ ಒಂದು ಕಥನವೇ ಆಗಲೀ ಅವಶ್ಯಕತೆಯನ್ನು ಮೀರಿದ ರೋಚಕತೆಯಿಂದ ತನ್ನ ಅಂತಃಸತ್ವವನ್ನು ಕಳೆದುಕೊಂಡುಬಿಡುತ್ತದೆ.
ಪತ್ರಿಕೋದ್ಯಮವನ್ನು ತಮ್ಮ ವೃತ್ತಿ ಮತ್ತು ಪ್ರವೃತ್ತಿಯನ್ನಾಗಿ ಸ್ವೀಕರಿಸುವವರು ಇದನ್ನು ಮನಗಾಣದೆ ಹೋದರೆ ಏನಾಗುತ್ತದೆ ? ತಮ್ಮ ಬರವಣಿಗೆಯಿಂದಲೇ ಕರ್ನಾಟಕದಲ್ಲಿ ತಮ್ಮದೇ ಆದ ಪ್ರಭಾವಳಿಯನ್ನು ನಿರ್ಮಿಸಿಕೊಂಡು 25 ವರ್ಷಗಳ ನಿರಂತರ ಅಕ್ಷರ ಕೃಷಿ ನಡೆಸಿದ ರವಿಬೆಳಗೆರೆ ಈ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿ ಇಹಲೋಕ ತ್ಯಜಿಸಿದ್ದಾರೆ.
ಸಂತಾಪ ಸೂಚಿಸಲೂ ಹಿಂಜರಿಯುವಂತಹ ಮನಸುಗಳು ರವಿ ಬೆಳಗೆರೆಯವರ ಪತ್ರಿಕೋದ್ಯಮ ಸೃಷ್ಟಿಸಿದೆ, ಹಾಗೆಯೇ ಆರಾಧಿಸುವ ಮನಸುಗಳನ್ನೂ ಸೃಷ್ಟಿಸಿದೆ. ಇದು ವ್ಯಕ್ತಿಗತ ಅಭಿವ್ಯಕ್ತಿಗೆ ಸಂಬಂಧಿಸಿದ ವಿಚಾರ. ಸೈದ್ದಾಂತಿಕವಾಗಿ, ತಾತ್ವಿಕವಾಗಿ ರವಿಯ ಯಾವ ಸ್ವರೂಪವನ್ನೂ ಒಪ್ಪದವರೂ ಸಹ, ಅವರೊಡಗಿನ ಸುದೀರ್ಘ ಒಡನಾಟ ಮತ್ತು ಸ್ನೇಹದ ಹಿನ್ನೆಲೆಯಲ್ಲಿ ಅಗಲಿದ ಗೆಳೆಯನಿಗೆ ಭಾವಪೂರ್ಣ ಸಂತಾಪಗಳನ್ನು, ಕೆಲವು ಹೊಗಳಿಕೆಯ ಮಾತುಗಳೊಂದಿಗೆ ಹೇಳಿರುವುದೂ ಸಹ ಸಾಮಾಜಿಕ ತಾಣಗಳಲ್ಲಿ ಟೀಕೆ, ವಿಮರ್ಶೆಗೊಳಗಾಗಿದೆ.
ನಾವು ರವಿ ಬೆಳಗೆರೆಯವರನ್ನು ಒಬ್ಬ ವ್ಯಕ್ತಿಯಾಗಿ ನೋಡುವುದೇ ಬೇರೆ, ಮಾಧ್ಯಮ ಪ್ರತಿನಿಧಿಯಾಗಿ ನೋಡುವ ದೃಷ್ಟಿಯೇ ಬೇರೆಯಾಗಿದ್ದರೆ ಅಡ್ಡಿಯೇನಿಲ್ಲ. ಅದ್ಭುತ ಮಾತುಗಾರ, ಮೋಡಿ ಮಾಡುವಂತಹ ಸ್ನೇಹಮಯಿ, ಉತ್ತಮ ವಾಗ್ಮಿ ಮುಂತಾದ ಗುಣವಿಶೇಷಣಗಳ ನಡುವೆಯೇ ಮಾಧ್ಯಮ ಲೋಕದ ನೆಲೆಯಲ್ಲಿ ರವಿಬೆಳಗೆರೆಯನ್ನು ನಿಲ್ಲಿಸಿದಾಗ, ಅವರು ಅಪರಾಧಿಯಂತೆ ಕಟಕಟೆಯಲ್ಲಿ ನಿಲ್ಲಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ.
ಸಹಜವಾಗಿಯೇ ಹಾಯ್ ಬೆಂಗಳೂರು ಪತ್ರಿಕೆಯನ್ನು ಲಂಕೇಶ್ ಪತ್ರಿಕೆಗೆ ಮುಖಾಮುಖಿಯಾಗಿಸಿ ವಿಮರ್ಶೆಗೆ ಒಳಪಡಿಸಲಾಗುತ್ತದೆ. ಲಂಕೇಶ್ ಪತ್ರಿಕೆ ಕನ್ನಡದಲ್ಲಿ ಟ್ಯಾಬ್ಲಾಯ್ಡ್ ಪತ್ರಿಕೆಗೆ ಚಾಲನೆ ನೀಡಿದ್ದಷ್ಟೇ ಅಲ್ಲ, ಒಂದು ಸುದ್ದಿಪತ್ರಿಕೆಯ ಸಾಮಾಜಿಕ, ಸಾಂಸ್ಕೃತಿಕ ಮತ್ತುರಾಜಕೀಯ ಜವಾಬ್ದಾರಿಗಳನ್ನೂ ಅರಿತು ಹೆಜ್ಜೆ ಇಟ್ಟಿತ್ತು. ಲಂಕೇಶ್ ಪತ್ರಿಕೆ ಆರಂಭವಾದ ಕಾಲಘಟ್ಟದಲ್ಲಿ ನಾಗರಿಕ ಸಮಾಜದ ಸಾಮಾಜಿಕ ಕಳಕಳಿ, ಕಾಳಜಿ ಮತ್ತು ಸಾಂಸ್ಕೃತಿಕ ಒಳತೋಟಿಗಳು ಸಂಘರ್ಷದ ಪರಾಕಾಷ್ಠೆಯನ್ನು ತಲುಪಿದ್ದವು. ಜನಾಂದೋಲನಗಳು ಪರಿಪಕ್ವವಾಗಿ ನಂತರ ತನ್ನದೇ ಆದ ಸಮಸ್ಯೆಗಳಿಂದ ಕೆಲ ಕಾಲ ನೇಪಥ್ಯಕ್ಕೆ ಸರಿಯುವ ಒಂದು ಕಾಲಘಟ್ಟದಲ್ಲಿ ಲಂಕೇಶ್ ತಮ್ಮ ಪತ್ರಿಕೆಯ ಮೂಲಕ ಸಮಾಜೋ ಸಾಂಸ್ಕೃತಿಕ ಸಂವಾದ ಮತ್ತು ಸಂಕಥನಗಳಿಗೆ ಅವಕಾಶ ಕಲ್ಪಿಸಿದ್ದರು.
ಹಾಗಾಗಿ ಲಂಕೇಶ್ ಪತ್ರಿಕೆಯ ಓದುಗರ ಬಳಗ ವಿಶಿಷ್ಟವಾಗಿತ್ತು. ಆಗ ತಾನೇ ತಮ್ಮ ಸಾಮಾಜಿಕ ನೆಲೆ ಕಂಡುಕೊಳ್ಳುತ್ತಿದ್ದ ಆದರೆ ಪ್ರಭುತ್ವದೊಡನೆ ಸದಾ ಸಂಘರ್ಷದಲ್ಲಿರುವ ಅನಿವಾರ್ಯತೆಯನ್ನು ಎದುರಿಸುತ್ತಿದ್ದ ಒಂದು ಯುವ ಸಮುದಾಯಕ್ಕೆ ಭಾರತೀಯ ಸಮಾಜದಲ್ಲಿನ ಒಳನೋಟಗಳನ್ನು ಪರಿಚಯಿಸುವುದು ಮತ್ತು ಸಾರ್ವಜನಿಕ ಚರ್ಚೆಗೆ ಒಳಪಡಿಸುವುದು ಲಂಕೇಶರ ಗುರಿಯಾಗಿತ್ತು. ಹಾಗಾಗಿ ಸಾಂಪ್ರದಾಯಿಕ ಪತ್ರಿಕೋದ್ಯಮದಿಂದ ಭಿನ್ನವಾಗಿ ತಮ್ಮದೇ ಆದ ಮಾಧ್ಯಮ ಪರಿಭಾಷೆಯನ್ನು ಸೃಷ್ಟಿಸಿಕೊಂಡ ಲಂಕೇಶ್ ಅಂದಿನ ಯುವ ಪೀಳಿಗೆಯನ್ನು ಮತ್ತು ಹೋರಾಟ ನಿರತ ಜನತೆಯನ್ನು ಆಕರ್ಷಿಸಿದ್ದರು.
ಆದರೆ ರವಿ ಬೆಳಗೆರೆಯನ್ನು ಲಂಕೇಶರಿಗೆ ಮುಖಾಮುಖಿಯಾಗಿಸುವ ಮುನ್ನ ನಾವು ಯೋಚಿಸಬೇಕಿರುವುದು, ಲಂಕೇಶರ ಕಾಲಘಟ್ಟದ ಸಮಾಜೋ ಸಾಂಸ್ಕೃತಿಕ ಮತ್ತು ರಾಜಕೀಯ ಪಲ್ಲಟಗಳು. ಈ ಬೆಳವಣಿಗೆಗಳಿಗೆ ಸ್ಪಂದಿಸುವುದಷ್ಟೇ ಅಲ್ಲದೆ ಯುವ ಪೀಳಿಗೆಯಲ್ಲಿ ವಿಭಿನ್ನ ದೃಷ್ಟಿಕೋನವನ್ನು ಬಿತ್ತುವ ಕೆಲಸವನ್ನು ಲಂಕೇಶ್ ಮಾಡಿದ್ದು ಸ್ಪಷ್ಟ. ಈ ಕುರಿತು ಪ್ರಸ್ತುತ ಲೇಖನದಲ್ಲಿ ಹೆಚ್ಚಿನ ಸಂವಾದದ ಅವಶ್ಯಕತೆ ಇಲ್ಲ ಎಂದೆಣಿಸುತ್ತೇನೆ.
ಆದರೆ ರವಿಬೆಳಗೆರೆ 1995ರಲ್ಲಿ ತಮ್ಮ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದ ಸಂದರ್ಭವನ್ನೂ ಗಮನಿಸಬೇಕಾಗುತ್ತದೆ. 1989-90ರ ಸಾಂಸ್ಕೃತಿಕ ರಾಜಕಾರಣ, ಕಾಶ್ಮೀರ ಸಮಸ್ಯೆಯ ಉಲ್ಬಣ, ಮತೀಯ ರಾಜಕಾರಣ ಮತ್ತು ಜಾತಿ ರಾಜಕಾರಣದ ಗಟ್ಟಿ ನೆಲೆಗಳು , ಕ್ಷೀಣಿಸುತ್ತಿದ್ದ ಜನಾಂದೋಲನಗಳು ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ ನವ ಉದಾರವಾದ ಮತ್ತು ಜಾಗತೀಕರಣ ಸೃಷ್ಟಿಸಿದ್ದ ಆಧುನಿಕೋತ್ತರ ಚಿಂತನೆಯ ನೆಲೆಗಳು ಒಂದು ಹೊಸ ಪೀಳಿಗೆಯ ದೃಷ್ಟಿಕೋನವನ್ನೇ ಬದಲಿಸುವ ನಿಟ್ಟಿನಲ್ಲಿ ಮುನ್ನಡೆದಿದ್ದವು.
ಆ ವೇಳೆಗಾಗಲೇ ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿಯನ್ನೂ ಸೇರಿದಂತೆ ಬಹಳಷ್ಟು ಜನಾಂದೋಲನಗಳು ವಿಘಟನೆಯತ್ತ ಸಾಗುತ್ತಿದ್ದುದೇ ಅಲ್ಲದೆ, ಅಯೋಧ್ಯೆ-ರಾಮಮಂದಿರ-ಕಾಶ್ಮೀರ ಮತ್ತು ಭಯೋತ್ಪಾದನೆಯ ಚೌಕಟ್ಟಿನಲ್ಲಿ ಸಾಮಾಜಿಕ ಕಾಳಜಿ, ಕಳಕಳಿ ಮತ್ತು ಸಮ ಸಮಾಜದ ಪರಿಕಲ್ಪನೆಗಳು ಶಿಥಿಲವಾಗುತ್ತಿದ್ದವು. ಈ ಸಂದರ್ಭದಲ್ಲಿ ತಮ್ಮ ಪತ್ರಿಕೆ ಆರಂಭಿಸಿದ ರವಿ ಬೆಳಗೆರೆ ಇಂದು ನಾವು ಕಾಣುತ್ತಿರುವ ವಾಟ್ಸಪ್ ವಿಶ್ವವಿದ್ಯಾಲಯದ ಬೌದ್ಧಿಕ ವಲಯಕ್ಕೆ ಬುನಾದಿ ಹಾಕಿದ್ದನ್ನು ಅವರ ಪ್ರತಿಯೊಂದು ಸಂಚಿಕೆಯಲ್ಲೂ , ಇಂದಿಗೂ ಗುರುತಿಸಬಹುದು.
ರೋಚಕತೆಯನ್ನೇ ಪ್ರಧಾನವಾಗಿಸಿ, ಗಂಭೀರ ಸುದ್ದಿಯನ್ನೂ ರೋಮಾಂಚಕಾರಿಯಾಗಿ ಬಿತ್ತರಿಸುವುದು, ತಾತ್ವಿಕ ನೆಲೆಗಳಲ್ಲಿ ನಿಷ್ಕರ್ಷೆಗೊಳಪಡಬೇಕಾದ, ನಿರ್ವಚಿಸಬೇಕಾದ ಸಮಾಜೋ ಸಾಂಸ್ಕೃತಿಕ ಸಮಸ್ಯೆಗಳನ್ನು ಆಧುನಿಕೋತ್ತರ ನೆಲೆಗಳನ್ನೂ ಮೀರಿದ ನವ ಉದಾರವಾದದ ನೆಲೆಯಲ್ಲಿ ಪ್ರಸ್ತುತಪಡಿಸುವುದು ರವಿ ಬೆಳಗೆರೆಯವ ಅಜೆಂಡಾ ಆಗಿತ್ತು ಎನ್ನುವುದನ್ನು ಅಲ್ಲಗಳೆಯಲಾಗದು.
ಆ ದಶಕದಲ್ಲಿ ಬಿತ್ತಲಾದ ಭಾರತದ ಸಾಂಸ್ಕೃತಿಕ ರಾಜಕಾರಣದ ಬೀಜಗಳು ಇಂದು ಫಲ ನೀಡುತ್ತಿದ್ದರೆ ಅದಕ್ಕೆ ರವಿಬೆಳಗೆರೆಯವರಂತಹ ಪತ್ರಿಕೋದ್ಯಮಿಗಳ ಕೊಡುಗೆಯೂ ಇದೆ ಎನ್ನುವುದನ್ನು ಒಪ್ಪಲೇಬೇಕಾಗುತ್ತದೆ. ಹಾಗಾಗಿಯೇ ಹಾಯ್ ಬೆಂಗಳೂರು ಪತ್ರಿಕೆ ವಿಕೃತ ಪರಿಭಾಷೆಯನ್ನೂ ತನ್ನದಾಗಿಸಿಕೊಂಡಿತ್ತು. ಇಲ್ಲಿ ರವಿ ಬೆಳಗೆರೆಯವರಿಗೆ ರೋಚಕತೆ ಮುಖ್ಯವಾಗಿತ್ತು. ಒಂದು ಇಡೀ ಪೀಳಿಗೆಯನ್ನು ಸಾಮಾಜಿಕ ಕಳಕಳಿಯುಳ್ಳ ಹೋರಾಟ, ಸಂಘರ್ಷದಿಂದ ವಿಮುಖರಾಗಿಸುವ ಸಮಾಜೋ ಸಾಂಸ್ಕೃತಿಕ ಮತ್ತು ರಾಜಕೀಯ ಪ್ರಯತ್ನಗಳಿಗೆ ತಮ್ಮ ಪತ್ರಿಕೆಯ ಮೂಲಕ ಸ್ಪಷ್ಟ ನೆಲೆ ಒದಗಿಸಿದ್ದು ರವಿ ಬೆಳಗೆರೆಯವರ ಸಾಧನೆ(?) ಎನ್ನಬಹುದೇನೋ.
ಹಾಗಾಗಿಯೇ ಅವರ ಭಾಷಾ ಪ್ರೌಢಿಮೆ ಮತ್ತು ವಾಕ್ ಪಟುತ್ವ ಸೃಜನಶೀಲತೆಯನ್ನು ಕಳೆದುಕೊಂಡು, ಸಂವೇದನಾಶೀಲತೆಯನ್ನೂ ಕಳೆದುಕೊಂಡು ಬೆತ್ತಲಾಗಿಬಿಟ್ಟಿತ್ತು. ಲಂಕೇಶರ ಟೀಕೆ ಟಿಪ್ಪಣಿಗೂ, ರವಿಬೆಳಗೆರೆಯ ಖಾಸ್ ಬಾತ್ ಗೂ ಇರುವ ವ್ಯತ್ಯಾಸವನ್ನು ಇಲ್ಲಿ ಗುರುತಿಸಬೇಕಾದ ಅನಿವಾರ್ಯತೆಯೂ ನಮಗಿದೆ. ಏಕೆಂದರೆ ಪತ್ರಿಕೋದ್ಯಮ ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ರಾಜಕೀಯ ಪಲ್ಲಟಗಳ ನಡುವೆಯೇ ಬೆಳೆಯುವ, ಬೆಳೆಯಬೇಕಾದ ಒಂದು ಮಾರ್ಗ. ಕನ್ನಡದ ಇಂದಿನ ಟಿವಿ ವಾಹಿನಿಗಳು ಮತ್ತು ಸುದ್ದಿಮನೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ರವಿ ಬೆಳಗೆರೆ ಮತ್ತು ಅವರ ಹಾಯ್ ಬೆಂಗಳೂರು ಈ ವಾಹಿನಿಗಳ ಪಾಲಿಗೆ ದ್ರೋಣಾಚಾರ್ಯರಂತೆ ಕಾಣಬಹುದು.
ಈ ಚೌಕಟ್ಟಿನಿಂದಾಚೆಗೆ ರವಿ ಹೊರಬರಲೇ ಇಲ್ಲ ಎನ್ನುವುದನ್ನು ಅವರ ಹಲವು ಕಾದಂಬರಿಗಳಲ್ಲೂ ಗುರುತಿಸಬಹುದು. ಭಾರತದಲ್ಲಿ ನೆಲೆಯೂರುತ್ತಿದ್ದ ಮತಾಂಧ ರಾಜಕಾರಣ ಮತ್ತು ಸಾಂಸ್ಕೃತಿಕ ರಾಜಕಾರಣದ ಬಹುಸಂಖ್ಯಾವಾದಕ್ಕೆ ಪೂರಕವಾಗಿಯೇ ತಮ್ಮ ಆಲೋಚನಾ ಕ್ರಮವನ್ನೂ ರೂಪಿಸಿಕೊಂಡಿದ್ದ ರವಿ ಬೆಳಗೆರೆ ತಮ್ಮ ಪತ್ರಿಕೆಗಳಲ್ಲಿ ಆಡಳಿತಾರೂಢ ಪಕ್ಷ ರಾಜಕಾರಣವನ್ನು ವಿಮರ್ಶಾತ್ಮಕವಾಗಿ ನೋಡಿದರೂ, ಪ್ರಭುತ್ವದ ಧೋರಣೆಯನ್ನು ಎಂದಿಗೂ ಪ್ರಶ್ನಿಸಿದಂತಿಲ್ಲ. ಶಿಥಿಲವಾಗಿದ್ದರೂ ತಮ್ಮ ಹೋರಾಟದ ನೆಲೆಗಳನ್ನು ವಿಸ್ತರಿಸುತ್ತಲೇ ನವ ಉದಾರವಾದ ಮತ್ತು ಮತೀಯ ರಾಜಕಾರಣದ ವಿರುದ್ಧ ಸಂಘರ್ಷದಲ್ಲಿ ತೊಡಗಿದ್ದ ಜನಸಮುದಾಯಗಳಿಗೆ ಹಾಯ್ ಬೆಂಗಳೂರು ಪತ್ರಿಕೆ ಒಂದು ಅಂಗುಲದಷ್ಟು ಜಾಗವನ್ನೂ ನೀಡಲಿಲ್ಲ.
ಹಾಗಾಗಿಯೇ ತಮ್ಮ ಕೃತಿಗಳಲ್ಲೂ ರವಿ ಬೆಳಗೆರೆ ಅಂದಿನ-ಇಂದಿನ ಸಾಂಸ್ಕೃತಿಕ ರಾಜಕಾರಣದ ಪ್ರವರ್ತಕರಾಗಿ ಕಾಣುತ್ತಾರೆಯೇ ಹೊರತು ಓರ್ವ ಪತ್ರಕರ್ತರಾಗಿ ಕಾಣುವುದಿಲ್ಲ. ಅವರು ಬಳಸಿದ ಪರಿಭಾಷೆಯೂ ಸಹ ಜನಸಾಮಾನ್ಯರಲ್ಲಿರುವ ಕನಿಷ್ಟ ಸಮೂಹ ಪ್ರಜ್ಞೆಯನ್ನು ಶಿಥಿಲಗೊಳಿಸುವ ನಿಟ್ಟಿನಲ್ಲೇ ರಚನೆಯಾಗಿದ್ದನ್ನೂ ಗಮನಿಸಬೇಕು. 1995ರ ನಂತರದಲ್ಲಿ ಮತ್ತು ಅದಕ್ಕೂ ಮುನ್ನ ಕರ್ನಾಟಕದಾದ್ಯಂತ ಆರಂಭವಾದ ಅನೇಕ ಟ್ಯಾಬ್ಲಾಯ್ಡ್ ಪತ್ರಿಕೆಗಳಿಗೆ ಲಂಕೇಶರಿಗಿಂತಲೂ ರವಿ ಬೆಳಗೆರೆ ಮಾದರಿಯಾಗಿದ್ದು ನಮ್ಮ ದುರಂತ. ಆದರೆ ಇದು ವಾಸ್ತವ.
ಆದ್ದರಿಂದಲೇ ಒಂದು ಪೀಳಿಗೆಯ ಬರಹಗಾರರು, ಯುವ ಹೋರಾಟಗಾರರು ಸಾಮಾಜಿಕ ತಾಣಗಳಲ್ಲಿ ರವಿ ಬೆಳಗೆರೆ ವಿರುದ್ಧತಮ್ಮ ಸಿಟ್ಟು, ಆಕ್ರೋಶ ಮತ್ತು ಪ್ರತಿರೋಧವನ್ನು ಹೊರಗೆಡಹುತ್ತಿದ್ದಾರೆ. ಸಾಂಸ್ಕೃತಿಕ ರಾಜಕಾರಣ ಮತ್ತು ಮತಾಂಧತೆ, ಇಸ್ಲಾಂ ವಿರೋಧಿ ಧೋರಣೆ ಮತ್ತು ಜಾತಿ ಶ್ರೇಷ್ಠತೆಯ ವಿರುದ್ಧ, ದಲಿತ ಸಮುದಾಯಗಳು ಎದುರಿಸುತ್ತಿರುವ ದೌರ್ಜನ್ಯಗಳ ವಿರುದ್ಧ ಹೋರಾಟದಲ್ಲಿ ತೊಡಗಿರುವ ಯುವ ಮನಸುಗಳಿಗೆ ರವಿಬೆಳಗೆರೆ ಓರ್ವ ಖಳನಾಯಕನಂತೆ ಕಂಡುಬಂದರೆ ಅಚ್ಚರಿಯೇನಿಲ್ಲ.
ಪತ್ರಿಕೋದ್ಯಮ ಮತ್ತು ಮಾಧ್ಯಮ ವಲಯ ಪ್ರಭುತ್ವದ ಬಾಲಂಗೋಚಿಗಳಂತೆ ಕಾರ್ಯ ನಿರ್ವಹಿಸುತ್ತಾ ಅವಕಾಶವಂಚಿತ, ಶೋಷಿತ ಸಮುದಾಯಗಳಿಗೆ ವಿಮುಖವಾಗುತ್ತಿರುವ ಸಂದರ್ಭದಲ್ಲಿ ಈ ಆಕ್ರೋಶ ಸಹಜವಾದದ್ದು. ಕರ್ನಾಟಕದ ಮಟ್ಟಿಗೆ ವಿದ್ಯುನ್ಮಾನ ಮಾಧ್ಯಮವನ್ನೂ ಸೇರಿದಂತೆ ಪತ್ರಿಕೋದ್ಯಮ ಇಂದು ಸಮಾಜಮುಖಿ-ಜನಮುಖಿ ಯುವಪೀಳಿಗೆಗೆ ಯಾವುದೇ ರೀತಿಯಲ್ಲೂ ಸಹಾಯಕವಾಗುತ್ತಿಲ್ಲ, ಮಾದರಿಯಾಗುವುದು ಸಾಧ್ಯವೂ ಇಲ್ಲ.
ಈ ವಿಕೃತ ಪರಂಪರೆಗೆ ಬುನಾದಿ ಹಾಕಿದವರಲ್ಲಿ ರವಿ ಬೆಳಗೆರೆ ಪ್ರಮುಖರು. ಬಹುಶಃ 1990ರ ದಶಕದ ಸಮಾಜೋ ಸಾಂಸ್ಕೃತಿಕ ಹಾಗೂ ರಾಜಕೀಯ ನೆಲೆಗಳೇ ಹಾಯ್ ಬೆಂಗಳೂರ್ ನಂತಹ ಪತ್ರಿಕೆಯನ್ನು, ರವಿ ಬೆಳಗೆರೆಯಂತಹ ಪತ್ರಿಕೋದ್ಯಮಿಯನ್ನು ಹುಟ್ಟುಹಾಕಿತ್ತು ಎನಿಸುತ್ತದೆ. ಒಬ್ಬ ವ್ಯಕ್ತಿಯಾಗಿ ರವಿ ಬೆಳಗೆರೆಯವರ ಸಾವಿಗೆ ಸಂತಾಪ ಸೂಚಿಸುತ್ತಲೇ ಒಬ್ಬ ಪತ್ರಿಕೋದ್ಯಮಿಯಾಗಿ ಅವರಲ್ಲಿ ಅಡಗಿದ್ದ ವಿಕೃತಿಗಳನ್ನು, ವಿಸ್ಮೃತಿಗಳನ್ನು ಹೊರಹಾಕಲು ಮುಂದಾಗಿರುವ ಯುವ ಮನಸುಗಳಿಗೆ ನಾವು ಸ್ಪಂದಿಸಬೇಕಾಗುತ್ತದೆ.
ರವಿ ಸರ್ ಹೋಗಿ ಬನ್ನಿ, ಬಂದರೂ ನಿಮ್ಮೊಳಗಿದ್ದ ಪತ್ರಿಕೋದ್ಯಮಿಯನ್ನು ಕಳಚಿಹಾಕಿ ಬನ್ನಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ4 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ3 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ


