ದಿನದ ಸುದ್ದಿ
ಸಿಸಿಸಿ ಗಳಲ್ಲಿ ಐಸೋಲೇಟ್ ಆಗುವಂತೆ ಸಲಹೆ : ಎಬಿಎಆರ್ಕೆ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಚಿಕಿತ್ಸೆ ಪಡೆಯಲು ಸಂಸದ ಜಿ.ಎಂ.ಸಿದ್ದೇಶ್ ಮನವಿ
ಸುದ್ದಿದಿನ,ದಾವಣಗೆರೆ : ಕೋವಿಡ್ ರೋಗಿಗಳು ಸರ್ಕಾರಿ ಆಸ್ಪತ್ರೆಯಿಂದ ರೆಫರೆನ್ಸ್ ಪಡೆದು ಎಬಿಎಆರ್ಕೆ ಯೋಜನೆಯಡಿ ಎಂಪಾನೆಲ್ ಆಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದ್ದು, ಕೋವಿಡ್ ಸೋಂಕಿತರು ಈ ಯೋಜನೆಯ ಉಪಯೋಗ ಪಡೆಯಬೇಕೆಂದು ಸಂಸದರಾದ ಜಿ.ಎಂ ಸಿದ್ದೇಶ್ವರ ಮನವಿ ಮಾಡಿದರು.
ಬುಧವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಕ್ಸಿಜನ್ ಪೂರೈಕೆ ಮತ್ತು ಬೆಡ್ಗಳು ಮತ್ತು ಲಸಿಕೆ ನಿರ್ವಹಣೆ ಕುರಿತು ಚರ್ಚಿಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ವತಿಯಿಂದ ಸರ್ಕಾರ ಜಾರಿಗೊಳಿಸಿರುವ ಎಬಿಎಆರ್ಕೆ ಯೋಜನೆಯಡಿ ನೋಂದಾಯಿಸಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಜನ ಸಾಮಾನ್ಯರು ಪಡೆಯಬೇಕೆಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಮತ್ತು ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಶೇ.75 ಬೆಡ್ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕೆಂಬ ನಿಯಮವಿದೆ. ಇದುವರೆಗೆ ಎಬಿಎಆರ್ಕೆ ಯಿಂದ ಖಾಸಗಿ ಆಸ್ಪತ್ರೆಗೆ ರೆಫರೆನ್ಸ್ ಪಡೆದು ಕೇವಲ 64 ಜನರು ಮಾತ್ರ ಉಚಿತ ಚಿಕಿತ್ಸೆಯ ಸದುಪಯೋಗ ಪಡೆದಿದ್ದಾರೆ.
ಇದನ್ನೂ ಓದಿ | ದಾವಣಗೆರೆ | ಸೋಂಕಿತರ ಮನೆಗಳಿಗೆ ಜಿ.ಪಂ ಸಿಇಓ ಭೇಟಿ-ಪರಿಶೀಲನೆ
ಸಿ.ಜಿ. ಆಸ್ಪತ್ರೆ ಹೊರತುಪಡಿಸಿ ಖಾಸಗಿಯಲ್ಲಿ 1535 ಬೆಡ್ಗಳು ರೋಗಿಗಳಿಗೆ ನಿಗದಿ ಆಗಿದ್ದು ಬಹಳಷ್ಟು ಜನರು ಈ ಯೋಜನೆಯ ಬಳಕೆ ಮಾಡುತ್ತಿಲ್ಲ. ಆದ ಕಾರಣ ಸೋಂಕಿತರು ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಯಲ್ಲಿ ರೆಫರೆನ್ಸ್ ಪಡೆದು ಖಾಸಗಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಿದ ವೆಚ್ಚ ಭರಿಸುವುದು ಎಂದು ಮಾಹಿತಿ ನೀಡಿದರು.
ಎಬಿಎಆರ್ಕೆ ರೆಫರೆನ್ಸ್ ನೀಡಲು ತಂಡ
ಎಬಿಎಆರ್ಕೆ ಅಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ರೆಫರೆನ್ಸ್ ನೀಡಲು ಜಿಲ್ಲಾಸ್ಪತ್ರೆಯಲ್ಲಿ ಮೂರು ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು ಸೇರಿದಂತೆ 8 ಜನರ ಹೆಲ್ಪ್ಡೆಸ್ಕ್ ತಂಡ ರಚಿಸಲಾಗಿದೆ. ಇವರನ್ನು ಭೇಟಿ ಮಾಡಿ ಖಾಸಗಿ ಆಸ್ಪತ್ರೆ ದಾಖಲಾತಿಗೆ ಮುನ್ನ ರೆಫರೆನ್ಸ್ ಪಡೆಯಬೇಕು ಎಂದರು.
ಸಿಸಿಸಿ ಐಸೊಲೇಷನ್ ಉತ್ತಮ
ಪ್ರತಿಷ್ಟಿತ ಬಡಾವಣೆಗಳಲ್ಲಿಯೇ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪ್ರತ್ಯೇಕ ಕೊಠಡಿ ಇತರೆ ವ್ಯವಸ್ಥೆ ಇದೆ ಎಂದು ಮನೆಯಲ್ಲಿಯೇ ಐಸೊಲೇಟ್ ಆಗುತ್ತಿದ್ದಾರೆ. ಆದರೆ ಸಮರ್ಪಕವಾಗಿ ಐಸೊಲೇಷನ್ ನಿಯಮ ಪಾಲಿಸದೇ ಮನೆಯವರೆಲ್ಲ ಪಾಸಿಟಿವ್ ಆಗುತ್ತಿರುವುದು ಕಂಡು ಬಂದಿದೆ.
ಆದ ಕಾರಣ ನಗರದ ತರಳಬಾಳು ಶ್ರೀಗಳು ಎಲ್ಲ ರೀತಿಯ ವ್ಯವಸ್ಥೆ ಇರುವ ತರಳಬಾಳು ಬಾಲಕಿಯರ ಹಾಸ್ಟೆಲ್ನ್ನು ಕೋವಿಡ್ ಆರೈಕೆ ಕೇಂದ್ರವಾಗಿಸಲು ನೀಡಿದ್ದು ಇಲ್ಲಿ 90 ಜನರಿಗೆ ಅವಕಾಶವಿದೆ. ಇಲ್ಲಿ ಐಸೋಲೇಟ್ ಆಗುವ ಮೂಲಕ ಕೋವಿಡ್ ಸರಪಳಿಯನ್ನು ತುಂಡರಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ಆಕ್ಸಿಜನ್ ಕೊರತೆ ನೀಗಿಸಲು ಪ್ರಾಮಾಣಿಕ ಪ್ರಯತ್ನ
ಪ್ರಸ್ತುತ ಜಿಲ್ಲೆಯಲ್ಲಿ ಸ್ವಲ್ಪ ಆಕ್ಸಿಜನ್ ಕೊರತೆ ಇರುವುದು ನಿಜ. ಪ್ರಸ್ತುತ 14 ಕೆ ಎಲ್ ಆಕ್ಸಿಜನ್ ಸರಬರಾಜಾಗುತ್ತಿದ್ದು 23 ಕೆಎಲ್ಗೆ ಒತ್ತಾಯ ಮಾಡಲಾಗುತ್ತಿದೆ. ಆಕ್ಸಿಜನ್ ಸಮಸ್ಯೆಯನ್ನು ಪರಿಹರಿಸಲು ಕೇಂದ್ರದ ಸಚಿವರು ಹಾಗೂ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಎಂದರು.
ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ತಮ್ಮಲ್ಲಿ ರೆಮಿಡಿಸಿವಿರ್ ಲಸಿಕೆ ಇಲ್ಲ. ಜಿಲ್ಲಾಧಿಕಾರಿಗಳ ಬಳಿ ಹೋಗಿ ಕೇಳಿದರೆ ನೀಡುತ್ತಾರೆಂದು ಕಳುಹಿಸಿದ್ದಾರೆ. ಹಾಗೂ ಆಕ್ಸಿಜನ್ ಇಲ್ಲ. ನೀವೇ ವ್ಯವಸ್ಥೆ ಮಾಡಿದರೆ ಚಿಕಿತ್ಸೆ ನೀಡುತ್ತೇವೆಂದು ರೋಗಿಗಳ ಕಡೆಯವರಿಗೇ ವ್ಯವಸ್ಥೆ ಮಾಡಲು ತಿಳಿಸಿರುವುದು ಗಮನಕ್ಕೆ ಬಂದಿದೆ. ಹೀಗೆ ರೋಗಿಗಳ ಬಳಿಯೇ ವ್ಯವಸ್ಥೆ ಮಾಡಿಸುವುದಾದರೆ ಖಾಸಗಿ ಆಸ್ಪತ್ರೆಗಳ ಪಾತ್ರವೇನು?
ಇನ್ನು ಮುಂದೆ ಈ ರೀತಿ ಮಾಡುವುದು ನನ್ನ ಗಮನಕ್ಕೆ ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ ಅವರು ಆ ರೀತಿಯ ಅವಶ್ಯಕತೆಗಳನ್ನು ಖುದ್ದಾಗಿ ಜಿಲ್ಲಾಧಿಕಾರಿಗಳು ಅಥವಾ ಜನಪ್ರತಿನಿಧಿಗಳ ಬಳಿ ಕೇಳಿ ಪರಿಹರಿಸಿಕೊಳ್ಳಬೇಕೆಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಖಾಸಗಿ ಆಸ್ಪತ್ರೆಯವರು ಈ ರೀತಿ ರೋಗಿಗಳ ಕಡೆಯಿಂದಲೇ ಔಷಧ ಮತ್ತೊಂದು ವ್ಯವಸ್ಥೆ ಮಾಡಿಕೊಡುವಂತೆ ಕೇಳಿದರೆ ಕೆಪಿಎಂಇ ಅಡಿಯಲ್ಲಿ ನೋಟಿಸ್ ನೀಡಿ ಸೇವೆಯನ್ನು ನಿಲಂಬನೆಗೊಳಿಸುವ ಕ್ರಮ ಜರುಗಿಸಲಾಗುವುದು. ಏನಾದರೂ ಕೊರತೆ ಇದ್ದರೆ ನನ್ನ ಬಳಿ ಚರ್ಚೆ ಮಾಡಬೇಕು. ಅದು ಬಿಟ್ಟು ರೋಗಿಗಳ ಕಡೆಯವರಿಗೆ ವ್ಯವಸ್ಥೆ ಮಾಡುವಂತೆ ತಿಳಿಸಬಾರದು ಎಂದು ತಾಕೀತು ಮಾಡಿದರು.
ಇಎಸ್ಐ ಆಸ್ಪತ್ರೆಯಲ್ಲಿ ವ್ಯವಸ್ಥೆ
ಇಎಸ್ಐ ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಬೆಡ್ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು ಇಂದಿನಿಂದಲೇ ರೋಗಿಗಳನ್ನು ಅಲ್ಲಿಗೆ ಸ್ಥಳಾಂತರಿಸಬಹುದಾಗಿದೆ ಎಂದರು. ಹಾಗೂ ಸಿ ಜಿ ಆಸ್ಪತ್ರೆಯ ರೂಂ ಸಂಖ್ಯೆ 65 ಮತ್ತು 66 ರಲ್ಲಿ ಸ್ಟೆಪ್ಡೌನ್ ವಾರ್ಡ್ ಮಾಡಿ ಬೆಡ್ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಮುಂದೆ ಆಕ್ಸಿಜನ್ ಲಭ್ಯತೆ ಹೆಚ್ಚಾದಲ್ಲಿ ಬೆಡ್ಗಳ ಸಂಖ್ಯೆಯನ್ನು ಸಹ ಹೆಚ್ಚಿಸಲಾಗುವುದು ಎಂದರು.
ತಾಲ್ಲೂಕುಗಳಲ್ಲಿ ಸಿಸಿಸಿ ಬಳಕೆ ಮಾಡಿಕೊಳ್ಳಿರಿ
ತಾಲ್ಲೂಕುಗಳಲ್ಲಿನ ಕೋವಿಡ್ ಕೇರ್ ಸೆಂಟರ್ಗಳ ಬಳಕೆಯನ್ನು ಜನರು ಮಾಡಿಕೊಳ್ಳಬೇಕು. ಹೋಂ ಐಸೊಲೇಷನ್ ಸಮರ್ಪಕವಾಗಿ ಮಾಡಿಕೊಳ್ಳದಿದ್ದರೆ ಮನೆಯವರೆಲ್ಲಾ ಪಾಸಿಟಿವ್ ಆಗುತ್ತಾರೆ. ಆದ ಕಾರಣ ಸಿಸಿಸಿ ಬಳಕೆ ಮಾಡಿಕೊಳ್ಳಬೇಕು. ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮದಲ್ಲಿ ಬಹಳಷ್ಟು ಜನರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಟೈನ್ಮೆಂಟ್ ಝೋನ್ ಮಾಡಲಗಿದೆ. ಆದ ಕಾರಣ ಎಲ್ಲರೂ ಎಚ್ಚರಿಕೆಯಿಂದ ಇರಬೇಕು.
ಹಾಗೂ ಎಲ್ಲ ತಾಲ್ಲೂಕುಗಳಲ್ಲಿ 50 ಆಕ್ಸಿಜನ್ ಬೆಡ್ಗಳ ವ್ಯವಸ್ಥೆ ಇದ್ದು, ಗಂಭೀರವಾದ ರೋಗಿಗಳನ್ನು ಮಾತ್ರ ಜಿಲ್ಲಾಸ್ಪತ್ರೆಗೆ ಕಳುಹಿಸಬೇಕು ಎಂದರು.
ಜಿಲ್ಲಾಸ್ಪತ್ರೆಯಲ್ಲಿ 17 ಜನ ತಜ್ಞ ವೈದ್ಯರು ಮತ್ತು 30 ದಾದಿಯರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅನಸ್ತೇಷಿಯಾ ಮತ್ತು ಪಲ್ಮನರಿ ವೈದ್ಯರ ಕೊರತೆ ಇದೆ. ಈ ಹುದ್ದೆಗಳಿಗೂ ಅರ್ಜಿ ಕರೆದಿದ್ದು ಹುದ್ದೆ ಭರ್ತಿಯಾದಲ್ಲಿ ಸಿಬ್ಬಂದಿ ಕೊರತೆಯಿಂದ ಚಾಲನೆಯಲ್ಲಿ ಇಲ್ಲದ ವೆಂಟಿಲೇಟರ್ಗಳನ್ನು ಚಾಲನೆಗೊಳಿಸಲಾಗುವುದು.
ಕಡಿಮೆ ಪಾಸಿಟಿವಿಟಿ ದರ ಪಟ್ಟಿಯಲ್ಲಿ ದಾವಣಗೆರೆ
ಕೇಂದ್ರ ಸರ್ಕಾರ ದೇಶದಲ್ಲಿ ಹೆಚ್ಚು ಪ್ರಕರಣ ಇರುವ 100 ಜಿಲ್ಲೆಗಳನ್ನು ಗುರುತಿಸಿದ್ದು ಅದರಲ್ಲಿ 17 ಜಿಲ್ಲೆ ನಮ್ಮ ರಾಜ್ಯ ಸೇರಿದ್ದವಾಗಿವೆ. ಹಾಗೂ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ದಾವಣಗೆರೆ ಇರುವುದು ಅಭಿನಂದನೀಯ. ಹೀಗೆಯೇ ಜಿಲ್ಲಾಡಳಿತದೊಂದಿಗೆ ಎಲ್ಲರೂ ಸಹಕರಿಸುವ ಮೂಲಕ ಕೋವಿಡ್ ಚೈನ್ ಬ್ರೇಕ್ ಮಾಡಬೇಕು ಎಂದರು.
ಸಭೆಯಲ್ಲಿ ಸುಕ್ಷೇಮ, ಸುಚೇತ, ಆರೈಕೆ, ಆಶ್ರಯ ಸೇರಿದಂತೆ ಕೋವಿಡ್ ಚಿಕಿತ್ಸೆ ನೀಡುವ ಆಸ್ಪತ್ರೆಯ ವೈದ್ಯರು ತಮ್ಮ ಆಸ್ಪತ್ರೆಗಳಲ್ಲಿ ಪ್ರಸ್ತುತ ಆಕ್ಸಿಜನ್ ಕೊರತೆ ಇದ್ದು, ತಮಗೆ ಇಂತಿಷ್ಟು ಆಕ್ಸಿಜನ್ ನೀಡಲಾಗುವುದು ಎಂದು ನಿಗದಿಗೊಳಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಇತ್ತೀಚೆಗೆ ಜಿಲ್ಲಾಸ್ಪತ್ರೆಯಲ್ಲಿ ಉಂಟಾದ ಆಕ್ಸಿಜನ್ ಕ್ರೈಸಿಸ್ನಿಂದ ಸ್ವಲ್ಪ ವ್ಯತ್ಯಯವಾಗಿದೆ. ಇನ್ನು ಮೂರು ನಾಲ್ಕು ದಿನಗಳಲ್ಲಿ ಇದು ಸರಿ ಹೋಗಲಿದ್ದು ಮುಂದಿನ ದಿನಗಳಲ್ಲಿ ಯಾವುದೇ ತೊಡಕಿಲ್ಲದೆ ನಿರಂತರ ಆಕ್ಸಿಜನ್ ಪೂರೈಕೆ ಮಾಡುವ ಭರವಸೆ ನೀಡಿದರು.
ಸಭೆಯಲ್ಲಿ ಮಹಾನಗರಪಾಲಿಕೆಯ ಮಹಾಪೌರರಾದ ಎಸ್.ಟಿ ವಿರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಡಿಸಿ ಪೂಜಾರ ವೀರಮಲ್ಲಪ್ಪ, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ಡಿಹೆಚ್ಒ ಡಾ. ನಾಗರಾಜ್, ಡಿಎಸ್ ಡಾ.ಜಯಪ್ರಕಾಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಆರ್ಸಿಹೆಚ್ಒ ಡಾ.ಮೀನಾಕ್ಷಿ, ಡಾ.ಮುರಳೀಧರ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ7 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

