ಬಹಿರಂಗ
ಮೇಲ್ಜಾತಿಗೆ ನೀಡಿದ 10% ಮೀಸಲಾತಿ ಲಿಂಗಾಯತರು, ಒಕ್ಕಲಿಗರನ್ನೂ ಒಳಗೊಂಡಂಡಂತೆ ಇಡೀ ಹಿಂದುಳಿದ ವರ್ಗಗಳಿಗೆ ಮಾಡಿದ ಚಾರಿತ್ರಿಕ ಅನ್ಯಾಯ..!
ನಿನ್ನೆ ಸಂಜೆ ಪತ್ರಿಕೆಗೆ ಕಳಿಸಬೇಕಾದ ಎಲ್ಲಾ ಸುದ್ದಿಗಳನ್ನು ಕಳಿಸಿ ವಾಟ್ಸಾಪು, ಫೇಸ್ಬುಕ್ಕು ಅಂತ ಹರಟೆ ಶುರು ಮಾಡುವ ಹೊತ್ತಿಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಫೋನ್ ಮಾಡಿದರು. ಸ್ವಲ್ಪ ಬೇಸರ, ಆತಂಕ, ಆಶ್ಚರ್ಯ, ಜಿಗುಪ್ಸೆ, ಸಿಟ್ಟುಗಳ ಮಿಶ್ರಣದಂತಿದ್ದವು ಅವರ ಮಾತುಗಳು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮೇಲ್ಜಾತಿಗಳಿಗೆ ನೀಡಿದ ಶೇಕಡ 10ರಷ್ಟು ಮೀಸಲಾತಿ ಅವರ ಈ ಕೋಪ-ಬೇಸರಕ್ಕೆ ಕಾರಣವಾಗಿತ್ತು. ಇಂತಹದ್ದೊಂದು ಪ್ರಸ್ತಾಪ ಬಂದ ಕೂಡಲೇ ಇದನ್ನು ವಿರೋಧಿಸಿ ಇಡೀ ದೇಶಾದ್ಯಂತ ಹಿಂದುಳಿದ ವರ್ಗಗಳ ಹೋರಾಟಗಳು ಭುಗಿಲೇಳುತ್ತವೆ ಎಂದು ಅವರು ನಿರೀಕ್ಷಿಸಿದ್ದರು. ಆದರೆ, ತಮಗೇನೂ ಆಗೇ ಇಲ್ಲವೆಂಬಂತೆ ಎಲ್ಲರೂ ಸುಮ್ಮನಾಗಿಬಿಟ್ಟಿರುವುದು ಅವರ ಆತಂಕಕ್ಕೆ ಕಾರಣವಾಗಿತ್ತು. ಹಿಂದುಳಿದ ವರ್ಗಗಳ ಹಿತಾಸಕ್ತಿಗಳನ್ನು ಪ್ರತಿನಿಧಿಸುತ್ತೇವೆಂದು ಅಬ್ಬರಿಸಿ ಬೊಬ್ಬಿಡುವ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಇದಕ್ಕೆ ಮೌನ ಸಮ್ಮತಿ ಸೂಚಿಸಿದ್ದು ಅವರ ದುಗುಡವನ್ನುಹೆಚ್ಚಿಸಿತ್ತು. ಹೆಚ್ಚೂ ಕಮ್ಮಿ ಅರ್ಧ ಗಂಟೆ ಅವರ ಜೊತೆ ಮಾತಾಡಿದ ಮೇಲೆ ನನಗೂ ಅದರ ಬಗ್ಗೆ ಸ್ವಲ್ಪ ಸ್ಪಷ್ಟತೆ ಸಿಕ್ಕಿತು. ಅವರೊಂದಿಗಿನ ಸಂಭಾಷಣೆಯ ಸಾರ, ನಾನೂ ಒಂದಿಷ್ಟು ಕೆದಕಿ ತೆಗೆದ ಮಾಹಿತಿ ಸೇರಿಸಿ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.
ನಾನು ಮೊಟ್ಟ ಮೊದಲು ಮಾಡಿದ ಕೆಲಸ ಎಂದರೆ ಈ ವಿಷಯವಾಗಿ ಪಾರ್ಲಿಮೆಂಟಿನಲ್ಲಿ ಅಂಗೀಕಾರವಾದ ಮೂಲ ಸಂವಿಧಾನ ತಿದ್ದುಪಡಿ ಮಸೂದೆಯನ್ನು (THE CONSTITUTION (ONE HUNDRED AND TWENTY-FOURTH AMENDMENT) BILL, 2019) ಹುಡುಕಿ ತೆಗೆದು ಓದಿದ್ದು. ಇದು ನಮ್ಮ ಸಂವಿಧಾನಕ್ಕೆ ಮಾಡುತ್ತಿರುವ 124ನೇ ತಿದ್ದುಪಡಿ. ಇದರ ಮೂಲಕ ಸಂವಿಧಾನದ 15ನೇ ವಿಧಿಯಲ್ಲಿ ಈಗಾಗಲೇ 5 ಕ್ಲಾಸುಗಳಿದ್ದು ಅದರಲ್ಲಿ ಈಗ 6ನೇ ಕ್ಲಾಸನ್ನು ಸೇರಿಸಲಾಗಿದೆ. ಅದರ ಸಾರಾಂಶ ಹೀಗಿದೆ:
‘(6) Nothing in this article or sub-clause (g) of clause (1) of article 19 or clause (2) of article 29 shall prevent the State from making,—
(a) any special provision for the advancement of any economically weaker sections of citizens other than the classes mentioned in clauses (4) and (5); and
(b) any special provision for the advancement of any economically weaker sections of citizens other than the classes mentioned in clauses (4) and (5) in so far as such special provisions relate to their admission to educational institutions including private educational institutions, whether aided or unaided by the State, other than the minority educational institutions referred to in clause (1) of article 30, which in the case of reservation would be in addition to the existing reservations and subject to a maximum of ten per cent. of the total seats in each category.
ಜೊತೆಗೆ ಸಂವಿಧಾನದ 16ನೇ ವಿಧಿಗೂ ತಿದ್ದುಪಡಿ ಮಾಡಲಾಗಿದ್ದು ಅಲ್ಲೂ ಹೆಚ್ಚೂ ಕಮ್ಮಿ ಇದೇ ಸಾರಾಂಶವಿದೆ.
ಮೇಲಿನ ಈ ಪ್ಯಾರಾಗಳ ಸಾರಾಂಶ ಏನೆಂದರೆ, ಸಂವಿಧಾನದ 4 ಮತ್ತು 5ನೇ ಕ್ಲಾಸುಗಳಲ್ಲಿರುವ ಸಮುದಾಯಗಳನ್ನು ಹೊರತುಪಡಿಸಿ ಉಳಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇಕಡ 10ರಷ್ಟು ಮೀಸಲಾತಿ ನೀಡುವುದಕ್ಕೆ ಪ್ರಭುತ್ವಕ್ಕೆ ಯಾವುದೇ ಅಡ್ಡಿಯಿಲ್ಲ.
ಸಂವಿಧಾನದ 4 ಮತ್ತು 5ನೇ ವಿಧಿಯಲ್ಲಿರುವ ಸಮುದಾಯಗಳನ್ನು ಹೊರತುಪಡಿಸಿ ಎಂದಾಕ್ಷಣ ಆ ಸಮುದಾಯಗಳು ಯಾವವು ಎಂಬ ಪ್ರಶ್ನೆ ಹುಟ್ಟಿತು. ಅದನ್ನು ಬಗೆಹರಿಸಿಕೊಳ್ಳುವುದಕ್ಕಾಗಿ ನಮ್ಮ ಸಂವಿಧಾನದ ಪುಟಗಳನ್ನು ತಿರುವಿ ಹಾಕಿದೆ. ಆ ಸಮುದಾಯಗಳು ಎಂದರೆ ಅನುಸೂಚಿತ ಜಾತಿಗಳು (SCs), ಅನುಸೂಚಿತ ಬುಡಕಟ್ಟುಗಳು (STs) ಮತ್ತು ಹಿಂದುಳಿದ ವರ್ಗಗಳು (OBCs). ಅಂದರೆ ಈ ಮೂರು ವಿಭಾಗಗಳ ಸಮುದಾಯಗಳನ್ನು ಹೊರತುಪಡಿಸಿ ಉಳಿದವರಿಗೆ ಈ ಶೇಕಡ 10% ಮೀಸಲಾತಿ ಸೌಲಭ್ಯ ದೊರಕಲಿದೆ ಎಂದಾಯಿತು.
ಇಲ್ಲಿಯ ತನಕ ಅನುಸೂಚಿತ ಜಾತಿಗಳಿಗೆ, ಅನುಸೂಚಿತ ಬುಡಕಟ್ಟುಗಳಿಗೆ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಒಟ್ಟು ಮೀಸಲಾತಿಯ ಪ್ರಮಾಣ ಶೇಕಡ 50%. ಇದು Reserved ಕ್ಯಟಗರಿ. ಹಿಂದುಳಿದವರಿಗೆ ನೀಡಲಾಗುವ ಮೀಸಲಾತಿಯ ಪ್ರಮಾಣವನ್ನು ಶೇಕಡ 50%ಕ್ಕಿಂತ ಹೆಚ್ಚು ಮಾಡಬಾರದು ಎಂದು ಸುಪ್ರೀಂ ಕೋರ್ಟು ಆದೇಶವಿದೆ.
ಉಳಿದ 50% ಜನರಲ್ ಕ್ಯಟಗರಿಗೆ ಮೀಸಲು. ಇಲ್ಲಿ ಜನರಲ್ ಕ್ಯಟಗರಿ ಎಂದರೆ Unreserved ಅಥವಾ It is open to all ಎಂದರ್ಥ. Reserved ಕ್ಯಟಗರಿಯಲ್ಲಿ ಯಾವ ಯಾವ ಸಮುದಾಯಕ್ಕೆ ಎಷ್ಟೆಷ್ಟು ಮೀಸಲಾತಿ ನೀಡಲಾಗಿದೆಯೋ ಆ ಸಮುದಾಯವಷ್ಟೇ ಅದನ್ನು ಬಳಸಲು ಸಾಧ್ಯ. ಬೇರೆ ಸಮುದಾಯಗಳು ಆ ಮೀಸಲಾತಿಗೆ ಕೈಹಾಕುವಂತಿಲ್ಲ. Unreserved ಅಥವಾ Open ಕ್ಯಟಗರಿಯು ಅದರ ಹೆಸರೇ ಸೂಚಿಸುವಂತೆ ಯಾರು ಬೇಕಾದರೂ ಸ್ಪರ್ಧಿಸಿ ಮೆರಿಟ್ ಆಧಾರದಲ್ಲಿ ಸೀಟು/ಹುದ್ದೆ ಪಡೆದುಕೊಳ್ಳಬಹುದು. ಅಂದರೆ, ಎಸ್ಸಿ, ಎಸ್ಟಿ, ಓಬಿಸಿಯವರೂ ಈ unreserved ಅಥವಾ ಜನರಲ್ ಕ್ಯಟಗರಿಯಲ್ಲಿ ಸ್ಪರ್ಧಿಸಿ ಮೆರಿಟ್ ಆಧಾರದಲ್ಲಿ ಸೀಟು/ಹುದ್ದೆ ಪಡೆದುಕೊಳ್ಳಬಹುದು.
ಯಾವುದಾದರೂ ಹುದ್ದೆಗಳನ್ನು ಭರ್ತಿಮಾಡುವಾಗ ಮೊದಲು ಜನರಲ್ ಕ್ಯಟಗರಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಅಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದವರು, ಮುಂದುವರೆದವರು ಎಲ್ಲರನ್ನೂ ಮೆರಿಟ್ ಆಧಾರದಲ್ಲಿ ತೂಗಿ ಆಯ್ಕೆ ಮಾಡಲಾಗುತ್ತದೆ. ಜನರಲ್ ಕ್ಯಟಗರಿಯಲ್ಲಿ ಆಯ್ಕೆಯಾಗುವಷ್ಟು ಮೆರಿಟ್ ಇಲ್ಲದ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಮಂದಿಯನ್ನು ಅವರವರ ಕ್ಯಟಗರಿಗೆ ಮೀಸಲಿಟ್ಟಿರುವ ಹುದ್ದೆಗಳಿಗೆ ಪರಿಗಣಿಸಲಾಗುತ್ತದೆ.
ಈಗ ಕೇಂದ್ರ ಸರ್ಕಾರ ಮಾಡುತ್ತಿರುವ ಕೆಲಸ ಏನೆಂದರೆ, ಜನರಲ್ ಅಥವಾ Unreserved ಕ್ಯಟಗರಿಯಿಂದ ಶೇಕಡ 10ರಷ್ಟುನ್ನು ತೆಗೆದು ಅದನ್ನು ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಸೇರಿರದ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವರ್ಗಗಳಿಗೆ ನೀಡಲು ಹೊರಟಿದೆ. ಅಂದರೆ, ಸಾರಾಂಶದಲ್ಲಿ Unreserved ಅಥವಾ ಜನರಲ್ ಕ್ಯಟಗರಿಯ ಪ್ರಮಾಣ ಶೇಕಡ 50ರಿಂದ ಶೇಕಡ 40ಕ್ಕೆ ಇಳಿಯುತ್ತದೆ ಹಾಗೂ Reserved ಪ್ರಮಾಣ ಶೇಕಡ 50 ರಿಂದ ಶೇಕಡ 60ಕ್ಕೆ ಏರುತ್ತದೆ.
ಇಲ್ಲೊಂದು ಪ್ರಶ್ನೆ ಏಳುತ್ತದೆ. ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿಯ ಒಟ್ಟು ಪ್ರಮಾಣ ಶೇಕಡ 50ಕ್ಕಿಂತ ಹೆಚ್ಚು ಆಗಬಾರದು ಎಂದು ಸುಪ್ರೀಂ ಕೋರ್ಟು ನೀಡಿರುವ ತೀರ್ಪಿನ ಉಲ್ಲಂಘನೆಯಾಗುವುದಿಲ್ಲವೆ ಎಂದು. ಕೇಂದ್ರ ಕಾನೂನು ಮಂತ್ರಿ ರವಿಶಂಕರ್ ಪ್ರಸಾದ ಉಲ್ಲಂಘನೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಮೀಸಲಾತಿಯ ಪ್ರಮಾಣ ಶೇಕಡ 50ಕ್ಕಿಂತ ಹೆಚ್ಚಿರಬಾರದು ಎಂದು ಸಂವಿಧಾನವೇನೂ ಹೇಳಿಲ್ಲ, ಅದನ್ನು ಹೇಳಿದ್ದು ಕೋರ್ಟು ಎಂಬುದು ಅವರ ವಾದ. ಅಲ್ಲದೇ ಸುಪ್ರೀಂ ಕೋರ್ಟು ಹೇಳಿದ್ದು “ಹಿಂದುಳಿದ ವರ್ಗಗಳಿಗೆ (ಎಸ್ಸಿ, ಎಸ್ಟಿ, ಮತ್ತು ಇತರ ಹಿಂದುಳಿದ ವರ್ಗಗಳು ಒಳಗೊಂಡಂತೆ) ನೀಡಲಾಗುವ ಮೀಸಲಾತಿ ಪ್ರಮಾಣ ಶೇಕಡ 50ಕ್ಕಿಂತ ಹೆಚ್ಚಿರಬಾರದು ಎಂದಿದೆ. ಈಗ ನೀಡುತ್ತಿರುವ ಶೇಕಡ 10ರಷ್ಟು ಮೀಸಲಾತಿ ಅವರಿಗಲ್ಲ. ಅದು ಮುಂದುವರೆದವರಿಗಾಗಿ, ಮುಂದುವರಿದ ಸಮುದಾಯಗಳ ಬಡವರಿಗಾಗಿ. ಹಾಗಾಗಿ, ಅದು ಸುಪ್ರೀಂ ಕೋರ್ಟಿನ ಉಲ್ಲಂಘನೆಯಾಗುವುದಿಲ್ಲ ಎಂದೂ ಕೆಲವರು ವಾದಿಸುತ್ತಾರೆ. ಆದರೆ ಒಟ್ಟು ಮೀಸಲಾತಿಯ ಪ್ರಮಾಣ ಶೇಕಡಾ 50 ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾದರೂ ಅಂತಿಮವಾಗಿ ಸುಪ್ರೀಂ ಕೋರ್ಟಿನ ನ್ಯಾಯಿಕ ವಿಮರ್ಶೆಯನ್ನು ಸಂಸತ್ತು ತಳ್ಳಿಹಾಕಿದ ಸಂಭವವೂ ಇಲ್ಲದಿಲ್ಲ.
ಸಾರಾಂಶದಲ್ಲಿ ಮೀಸಲಾತಿಯ ಪ್ರಮಾಣ ಶೇಕಡ 60 ಹಾಗೂ ಜನರಲ್ ಕ್ಯಟಗರಿಯ ಪ್ರಮಾಣ ಶೇಕಡ 40 ಆದಂತೆ ಆಗುತ್ತದೆ. ಈಗ ಶೇಕಡ 60ರಷ್ಟು ಮೀಸಲಾತಿಯಲ್ಲಿ ಯಾವ ಯಾವ ಸಮುದಾಯಕ್ಕೆ ಎಷ್ಟು ಸಿಗುತ್ತದೆ ಎಂಬುದನ್ನು ನಾವು ಕಂಡುಕೊಳ್ಳಬೇಕು. ಇದನ್ನು ಮೀಸಲಾತಿಯನ್ನು ನಿಗದಿ ಮಾಡುವ ಅಧಿಕಾರ ರಾಜ್ಯಗಳಿಗೂ ಇರುವುದರಿಂದ ನಾವು ಯಾವುದಾದರೊಂದು ರಾಜ್ಯವನ್ನು ಉದಾಹರಣೆಯಾಗಿ ತೆಗೆದುಕೊಂಡರೆ ಈ ವಿಷಯವನ್ನು ಇನ್ನಷ್ಟು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ನಮ್ಮ ಕರ್ನಾಟಕವನ್ನೇ ಉದಾಹರಣೆಯಾಗಿ ತೆಗೆದುಕೊಳ್ಳೋಣ. ಇಲ್ಲಿ ಮೀಸಲಾತಿಯ ಪ್ರಮಾಣ ಈ ಕೆಳಗಿನಂತಿದೆ:
SCs: 15%
STs: 3%
OBC:32% (ಕ್ಯಟಗರಿ 1: 4% + ಕ್ಯಟಗರಿ 2A: 15% + ಕ್ಯಟಗರಿ 2B: 4% + ಕ್ಯಟಗರಿ 3A: 4% + ಕ್ಯಟಗರಿ 3B: 5% = 32%)
ಒಟ್ಟು: 50%
ಜನರಲ್: 50%
ಈಗ ಮೀಸಲಾತಿಯ ಪ್ರಮಾಣ ಶೇಕಡ 60ಕ್ಕೆ ಏರಿದ ನಂತರ ಅದು ಈ ಕೆಳಗಿನಂತೆ ಆಗಲಿದೆ.
SCs: 15%
STs: 3%
OBC: 32% (ಕ್ಯಟಗರಿ 1: 4% +ಕ್ಯಟಗರಿ 2A: 15% +ಕ್ಯಟಗರಿ 2B: 4% + ಕ್ಯಟಗರಿ 3A: 4% + ಕ್ಯಟಗರಿ 3B: 5% = 32%)
ಈ ಮೇಲಿನ ವರ್ಗಗಳನ್ನು ಹೊರತುಪಡಿಸಿದ ಬಡವರಿಗೆ (ಅರ್ಥಾತ್ ನಮ್ಮ ರಾಜ್ಯದಲ್ಲಿ ಬ್ರಾಹ್ಮಣರಿಗೆ): 10%
ಒಟ್ಟು: 60%
ಜನರಲ್: 40%
ಇಲ್ಲಿ ಗಮನಿಸಬೇಕಾದ ಒಂದು ಅಂಶವಿದೆ. ನಮ್ಮಲ್ಲಿ ಸಾಮಾನ್ಯವಾಗಿ SC ಯಾರು, ST ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, OBC ಯಾರು ಎಂಬುದರ ಬಗ್ಗೆ ಬಹಳಷ್ಟು ಸಾಮಾನ್ಯ ಜನರಿಗೆ ಗೊಂದಲಗಳಿವೆ. ಉದಾಹರಣೆಗೆ, ಬಹಳಷ್ಟು ಲಿಂಗಾಯತರು, ಒಕ್ಕಲಿಗರು ತಾವು OBC ಕ್ಯಟಗರಿಗೆ ಸೇರಿದವರೆಂದು, ತಮಗೂ ಮೀಸಲಾತಿ ಸೌಕರ್ಯ ಕಲ್ಪಿಸಲಾಗಿದೆ ಎಂಬುದನ್ನು ಮರೆತು ತಾವು ಮುಂದುವರಿದವರು ಅಥವಾ ಮೇಲ್ವರ್ಗದವರು ಎಂದು ಭಾವಿಸಿದ್ದಾರೆ. ವಾಸ್ತವದಲ್ಲಿ ಸಾಮಾಜಿಕವಾಗಿ ಅವರು ಮೇಲ್ಜಾತಿಗಳೇ ಆಗಿದ್ದರೂ ಕಾನೂನಿನಡಿಯಲ್ಲಿ ಅವರೂ ಕೂಡ OBC ಕ್ಯಟಗರಿಗೆ ಸೇರಿದ್ದು ಅವರಿಗೂ ಮೀಸಲಾತಿ ಸೌಕರ್ಯವಿದೆ. ಇದನ್ನೇ ಸಾರಾಂಶೀಕರಿಸಿ ಹೇಳುವುದಾದರೆ, ಕರ್ನಾಟಕದ ಮಟ್ಟಿಗೆ SC, ST ಮತ್ತು ಬ್ರಾಹ್ಮಣರನ್ನು ಹೊರತುಪಡಿಸಿದರೆ ಲಿಂಗಾಯತರು, ಒಕ್ಕಲಿಗರು, ಕುರುಬರು, ಈಡಿಗರು ಮುಂತಾದ ಉಳಿದೆಲ್ಲಾ ಸಮುದಾಯಗಳು OBCಯಲ್ಲಿ ಬರುತ್ತವೆ. ಈ ಹಿನ್ನೆಲೆಯಲ್ಲಿ ನಮ್ಮ ಮೀಸಲಾತಿ ಕೋಸ್ಟಕವನ್ನು ಜಾತಿ ಆಧಾರಿತವಾಗಿ ತಯಾರಿಸೋಣ.
- ಮಾದಿಗರು, ಹೊಲೆಯರು/ಚಲವಾದಿಗಳು, ಲಂಬಾಣಿ, ಭೋವಿ/ವಡ್ಡರ್ ಇತ್ಯಾದಿ 101 ಸಮುದಾಯಗಳಿಗೆ (SC) 15% ಮೀಸಲಾತಿ.
- ಬೇಡರು/ನಾಯಕರು/ವಾಲ್ಮಿಕಿ, ಹಕ್ಕಿಪಿಕ್ಕಿ, ಜೇನುಕುರುಬ, ಕಾಡುಕುರುಬ, ಕೊರಗ, ಮಲೆಕುಡಿಯ, ಇತ್ಯಾದಿ 49 ಸಮುದಾಯಗಳಿಗೆ (STs) 3% ಮೀಸಲಾತಿ.
- ಕ್ಯಟಗರಿ 1 ರಲ್ಲಿರುವ ಬೆಸ್ತ, ಉಪ್ಪಾರ, ಗೊಲ್ಲ, ಬೋಯಿ, ಬೋವಿ, ಕುಣಬಿ, ಬುಡಬುಡಕಿ, ದಲಿತ ಕ್ರೈಸ್ತ, ಮೊದಲಾದ 95 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿರುವ 285 ಉಪಜಾತಿಗಳಿಗೆ (ಕೆಲವು ಕಡೆ ಸಂವಾದಿ ಪದಗಳು) 4% ಮೀಸಲಾತಿ.
- ಕ್ಯಟಗರಿ 2A ಅಡಿಯಲ್ಲಿ ಬರುವ ಅಗಸ, ದೇವಾಡಿಗ, ಈಡಿಗ, ಕುಂಬಾರ, ಕುರುಬ, ವಿಶ್ವಕರ್ಮ, ತಿಗಳ, ದೇವಾಂಗ, ಮೊದಲಾದ 102 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿಬರುವ 282 ಉಪಜಾತಿಗಳಿಗೆ 15% ಮೀಸಲಾತಿ.
- ಕ್ಯಟಗರಿ 2Bಯಲ್ಲಿ ಬರುವ ಮುಸ್ಲೀಮರಿಗೆ 4% ಮೀಸಲಾತಿ.
- ಕ್ಯಟಗರಿ 3Aನಲ್ಲಿ ಬರುವ ಒಕ್ಕಲಿಗರು/ಗೌಡರು, ಕೊಡಗರು ಮತ್ತು ಬಲಿಜ ಎಂಬ ಮೂರು ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 42 ಉಪಜಾತಿಗಳಿಗೆ ಸೇರಿ 4% ಮೀಸಲಾತಿ.
- ಕ್ಯಟಗರಿ 3Bನಲ್ಲಿ ಬರುವ ವೀರಶೈವ ಲಿಂಗಾಯತರು, ಮರಾಠರು, ಕ್ರಿಶ್ಚಿಯನ್ನರು, ಬಂಟರು, ಜೈನರು ಮತ್ತು ಸತನಿ ಎಂಬ ಆರು ಜಾತಿಗಳು ಹಾಗೂ ಅದರ ಅಡಿಯಲ್ಲಿ ಬರುವ 30 ಉಪಜಾತಿಗಳಿಗೆ (ಈ ಉಪಜಾತಿಗಳಲ್ಲಿ ಲಿಂಗಾಯತರ ಉಪಜಾತಿಗಳು ಬರುತ್ತವೆ – ಹೆಳವ, ಅಂಬಿಗ, , ಮಡಿವಾಳ, ಕುಂಬಾರ, ಕುರುಬ ಭಜಂತ್ರಿ, ಅಕ್ಕಸಾಲಿಗ/ಬಡಿಗ, ಮೇದಾರ ಇತ್ಯಾದಿಗಳು) 5% ಮೀಸಲಾತಿ.
- ಈ ಮೇಲಿನ ವರ್ಗಗಳನ್ನು ಹೊರತುಪಡಿಸಿದ ಬಡವರಿಗೆ, ಅಂದರೆ ನಮ್ಮ ರಾಜ್ಯದಲ್ಲಿ ಬ್ರಾಹ್ಮಣರಿಗೆ 10% ಮೀಸಲಾತಿ.
ಈ ವಿವರಣೆಯನ್ನು ಏಕೆ ಕೊಡಬೇಕಾಯಿತು ಎಂದರೆ ಇಂದು ಬ್ರಾಹ್ಮಣರಿಗೆ ಕೊಡುತ್ತಿರುವ 10% ಮೀಸಲಾತಿಯನ್ನು ಬಲವಾಗಿ ಸಮರ್ಥಿಸುತ್ತಿರುವವರಲ್ಲಿ ಬಹುತೇಕರು ಸಮಾಜದಲ್ಲಿ ಮೇಲ್ಪದರದಲ್ಲಿರುವ ಆದರೆ ಕಾನೂನಿನಲ್ಲಿ OBC ಯಲ್ಲಿರುವ ಒಕ್ಕಲಿಗರು ಮತ್ತು ಲಿಂಗಾಯತರು. ಅವರು ತಮ್ಮ ತಮ್ಮ ಕ್ಯಟಗರಿಗಳಾದ 3A ಮತ್ತು 3Bಯನ್ನೊಮ್ಮೆ ನೋಡಿ, ಕರ್ನಾಟಕದ ಜನಸಂಖ್ಯೆಯಲ್ಲಿ ತಮ್ಮ ಜನಸಂಖ್ಯೆ ಎಷ್ಟಿದೆ ಮತ್ತು ತಮಗೆ ಎಷ್ಟು ಮೀಸಲಾತಿ ಕೊಡಲಾಗಿದೆ ಎಂಬುದನ್ನು ಗಮನಿಸಿ ಅದನ್ನು ಬ್ರಾಹ್ಮಣರ ಜನಸಂಖ್ಯೆಗೆ ಮತ್ತು ಅವರಿಗೆ ಈಗ ಕೊಟ್ಟಿರುವ ಮೀಸಲಾತಿಯೊಂದಿಗೆ ಹೋಲಿಸಿಕೊಳ್ಳಬೇಕು.
ಕ್ಯಟಗರಿ 3A ಅಡಿಯಲ್ಲಿ ಬರುವ ಒಕ್ಕಲಿಗರು, ಕೊಡಗರು, ಬಲಿಜ ಮತ್ತು ಇತರ ಉಪಜಾತಿಗಳು ಸೇರಿ ಕರ್ನಾಟಕ ಜನಸಂಖ್ಯೆಯ ಶೇಕಡ 15 ರಷ್ಟಾಗುತ್ತಾರೆ. ಅವರಿಗೆ ಸಿಗುತ್ತಿರುವುದು ಕೇವಲ 4% ಮೀಸಲಾತಿ.
ಕ್ಯಟಗರಿ 3Bನಲ್ಲಿ ಬರುವ ಲಿಂಗಾಯತರು, ವೀರಶೈವರು, ಕುಂಬಾರರು, ಭಜಂತ್ರಿಗಳು, ಅಕ್ಕಸಾಲಿಗರು/ವಿಶ್ವಕರ್ಮರು, ಮೇದಾರರು, ಕ್ರಿಶ್ಚಿಯನ್ನರು, ಮರಾಠರು, ಬಂಟರು, ಜೈನರು ಎಲ್ಲಾ ಸೇರಿದರೆ ಕರ್ನಾಟಕದ ಜನಸಂಖ್ಯೆಯ ಶೇಕಡ 18ರಷ್ಟಾಗಿಬಿಡುತ್ತಾರೆ. ಅವರಿಗೆ ಸಿಗುತ್ತಿರುವುದು ಕೇವಲ 5% ಮೀಸಲಾತಿ.
ಆದರೆ, ಕರ್ನಾಟಕದ ಜನಸಂಖ್ಯೆಯ ಶೇಕಡ 3 ರಷ್ಟಿರುವ ಅಥವಾ ಅದಕ್ಕಿಂತ ಕಡಿಮೆ ಇರುವ ಬ್ರಾಹ್ಮಣರಿಗೆ ಸಿಗುತ್ತಿರುವುದು 10% ಮೀಸಲಾತಿ!
ಇಷ್ಟೂ ಅರ್ಥವಾಗದಿದ್ದರೆ ಹೇಗೆ?
ಇನ್ನು ಜನರಲ್ ಕ್ಯಟಗರಿ 50% ನಿಂದ 40%ಗೆ ಇಳಿದಿದ್ದರ ಬಗ್ಗೆ ಮಾತನಾಡೋಣ. ಇಲ್ಲಿಯ ತನಕ ಜನರಲ್ ಕ್ಯಟಗರಿಯಲ್ಲಿ ಸಿಂಹಪಾಲು ಪಡೆಯುತ್ತಾ ಬಂದಿರುವವರು ಬ್ರಾಹ್ಮಣರೇ. ಅದರ ನಂತರದ ಸ್ಥಾನದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಬರುತ್ತಾರೆ. ದಲಿತರಿಗೆ ಮತ್ತು OBC ಒಳಗಿನ ಹಿಂದುಳಿದಿರುವ ವರ್ಗಗಳು ಜನರಲ್ ಕ್ಯಟಗರಿಯಲ್ಲಿ ಸ್ಪರ್ಧಿಸಿ ಸ್ಥಾನಗಳನ್ನು ಪಡೆಯುವುದು ಅಪರೂಪ. ಈಗ ಜನರಲ್ ಕ್ಯಟಗರಿಯಿಂದ 10% ಬ್ರಾಹ್ಮಣರ ಕ್ಯಟಗರಿಗೆ ಹೋಗಿದ್ದರಿಂದ ಉಳಿದ 40% ನಲ್ಲಿಯೇ ಮತ್ತೆ ಎಲ್ಲರೂ ಮತ್ತೆ ಗುದ್ದಾಡಬೇಕು. ಈಗ ಅಸಲಿಗೆ ಏನಾಗುತ್ತದೆ ಎಂದರೆ, ಇತ್ತ ಈ 40%ನಲ್ಲಿಯೂ ಬ್ರಾಹ್ಮಣರು ಸಿಂಹಪಾಲು ಪಡೆಯುತ್ತಾರೆ, ಅತ್ತ 10% ಮೀಸಲಾತಿಯಂತೂ ಅವರಿಗೇ ಮೀಸಲು.
ಒಂದು ಸರಳ ಅಂಕಗಣಿತದವನ್ನು ನೋಡೋಣ.
ಕರ್ನಾಟಕದಲ್ಲಿ 100 ತಹಶೀಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪರಿಭಾವಿಸಿಕೊಳ್ಳೋಣ. ಅದಕ್ಕೆ ಈ ಹೊಸ ಮೀಸಲಾತಿಯನ್ನು ಅನ್ವಯಿಸಿದರೆ ಈ ಕೆಳಗಿನಂತೆ ಹಂಚಿಕೆ ಮಾಡಬೇಕಾಗುತ್ತದೆ.
- ಮಾದಿಗ, ಹೊಲೆಯ/ಚಲವಾದಿ, ಲಂಬಾಣಿ, ಭೋವಿ/ವಡ್ಡರ್ ಇತ್ಯಾದಿ 101 ಸಮುದಾಯಗಳಿಗೆ (SCs): 15 ಸ್ಥಾನಗಳು
- ಬೇಡರು/ನಾಯಕರು/ವಾಲ್ಮಿಕಿ, ಹಕ್ಕಿಪಿಕ್ಕಿ, ಜೇನು ಕುರುಬ, ಕಾಡುಕುರುಬ, ಕೊರಗ, ಮಲೆಕುಡಿಯ, ಇತ್ಯಾದಿ 49 ಸಮುದಾಯಗಳಿಗೆ (STs): 3 ಸ್ಥಾನಗಳು
- ಕ್ಯಟಗರಿ 1 ರಲ್ಲಿರುವ 95 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿರುವ 285 ಉಪಜಾತಿಗಳಿಗೆ (ಕೆಲವು ಕಡೆ ಸಂವಾದಿ ಪದಗಳು): 4 ಸ್ಥಾನಗಳು.
- ಕ್ಯಟಗರಿ 2A ಅಡಿಯಲ್ಲಿ ಬರುವ 102 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 282 ಉಪಜಾತಿಗಳಿಗೆ ಸೇರಿ: 15ಸ್ಥಾನಗಳು
- ಕ್ಯಟಗರಿ 2Bಯಲ್ಲಿ ಬರುವ ಮುಸ್ಲೀಮರಿಗೆ: 4 ಸ್ಥಾನಗಳು
- ಕ್ಯಟಗರಿ 3Aನಲ್ಲಿ ಬರುವ ಒಕ್ಕಲಿಗರು/ಗೌಡರು, ಕೊಡಗರು ಮತ್ತು ಬಜಿಜ ಎಂಬ ಮೂರು ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 42 ಉಪಜಾತಿಗಳಿಗೆ: 4 ಸ್ಥಾನಗಳು.
- ಕ್ಯಟಗರಿ 3Bನಲ್ಲಿ ಬರುವ ವೀರಶೈವ ಲಿಂಗಾಯತರು, ಮರಾಠರು, ಕ್ರಿಶ್ಚಿಯನ್ನರು, ಬಂಟರು, ಜೈನರು ಮತ್ತು ಸತನಿ ಎಂಬ ಆರು ಜಾತಿಗಳು ಹಾಗೂ ಅದರ ಅಡಿಯಲ್ಲಿ ಬರುವ 30 ಉಪಜಾತಿಗಳು – ಹೆಳವ, ಅಂಬಿಗ, , ಮಡಿವಾಳ, ಕುಂಬಾರ, ಕುರುಬ ಭಜಂತ್ರಿ, ಅಕ್ಕಸಾಲಿಗ/ಬಡಿಗ, ಮೇದಾರ ಇತ್ಯಾದಿಗಳು – ಇವರೆಲ್ಲರಿಗೆ ಸೇರಿ: 5 ಸ್ಥಾನಗಳು.
- ಬ್ರಾಹ್ಮಣರಿಗೆ: 10 ಸ್ಥಾನಗಳು.
ಇದುವರೆಗಿನ ಜನರಲ್ ಕ್ಯಟಗರಿಯ ಉಪಯೋಗದ ಅನುಭವವನ್ನು ನೋಡಿದರೆ ಅಲ್ಲಿ ಉಳಿಯುವ 40 ಸ್ಥಾನಗಳ ಪೈಕಿ 25 ಸ್ಥಾನಗಳು ಬ್ರಾಹ್ಮಣರಿಗೆ ಹೋಗುತ್ತವೆ, 10 ಸ್ಥಾನಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಸಾಪೇಕ್ಷವಾಗಿ ಮುಂದುವರೆದಿರುವ ಇತರ ಸಮುದಾಯಗಳ ಪಾಲಾಗುತ್ತವೆ. ಉಳಿದ 10 ಸ್ಥಾನಗಳನ್ನು SC, ST ಮತ್ತು ಇತರ OBC ಅಭ್ಯರ್ಥಿಗಳು ಪಡೆದುಕೊಳ್ಳುತ್ತಾರೆ.
ಅಂತಿಮವಾಗಿ 100 ತಹಶೀಲ್ದಾರರ ಪೈಕಿ:
ಕನಿಷ್ಠ 35 ತಹಶೀಲ್ದಾರರು ಬ್ರಾಹ್ಮಣರಾಗಿರುತ್ತಾರೆ (ಅವರ ಜನಸಂಖ್ಯೆ ಕೇವಲ 3% ಇದ್ದರೂ); 10 ತಹಶೀಲ್ದಾರರು ಲಿಂಗಾಯತರು, ಬಂಟರು, ಕ್ರಿಶ್ಚಿಯನ್ನರು, ಮರಾಠರ ಸಮುದಾಯಗಳಿಗೆ ಸೇರಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 18 ಆಗಿದ್ದರೂ); 10 ತಹಶೀಲ್ದಾರರು ಒಕ್ಕಲಿಗರು, ಕೊಡಗರು, ಬಲಿಜರು ಆಗಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 15 ರಷ್ಟಾಗಿದ್ದರೂ); 6 ತಹಶೀಲ್ದಾರರು ಮುಸ್ಲೀಮರಾಗಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 16ರಷ್ಟಿದ್ದರೂ); 18 ತಹಶೀಲ್ದಾರರು ಮಾದಿಗರು, ಹೊಲೆಯರು/ಚಲವಾದಿಗಳು, ಬೋವಿಗಳು/ವಡ್ಡರು ಆಗಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 20ರಷ್ಟು ಇದ್ದಾಗ್ಯೂ); 5 ತಹಶೀಲ್ದಾರರು ವಾಲ್ಮಿಕಿ/ ಬೇಡರು ಮತ್ತು ಇತರ ಬುಡಕಟ್ಟು ಜನರಾಗಿರುತ್ತಾರೆ; 6 ತಹಶೀಲ್ದಾರರು ಕುರುಬರಾಗಿರುತ್ತಾರೆ; ಉಳಿದ ಸಮುದಾಯಗಳಿಗೆ ಸೇರಿದ ತಹಶೀಲ್ದಾರರು 10 ಜನ ಇರುತ್ತಾರೆ.
ಈ 10% ಮೀಸಲಾತಿ ಬರದೇ ಹೋಗಿದ್ದರೆ ಬ್ರಾಹ್ಮಣರಿಗೆ 10 ಸ್ಥಾನಗಳು ಕಡಿಮೆ ಸಿಗುತ್ತಿದ್ದವು ಹಾಗೂ ಅವು ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ, ಕುರುಬ ಮತ್ತಿತರ ಹಿಂದುಳಿದ ವರ್ಗಗಳ ಪಾಲಾಗುತ್ತಿದ್ದವು.
ಪ್ರತಿಷ್ಠಿತ ಪತ್ರಿಕೆಗಳನ್ನೂ ಒಳಗೊಂಡಂತೆ ಎಲ್ಲಾ ಮಾಧ್ಯಮಗಳು ಈ ವಿಷಯವನ್ನು ತಪ್ಪಾಗಿ ವರದಿ ಮಾಡಿದವು ಎಂದು ನನಗನ್ನಿಸುತ್ತದೆ. ಏಕೆಂದರೆ ಎಲ್ಲಾ ಪತ್ರಿಕೆಗಳು ವರದಿ ಮಾಡಿದ್ದು “ಆರ್ಥಿಕವಾಗಿ ಹಿಂದುಳಿದ ಜನರಲ್ ಕ್ಯಟಗರಿಯ ಜನರಿಗೆ ಶೇಕಡ 10% ಮೀಸಲಾತಿ” ಎಂದು. ಇಲ್ಲಿ ಜನರಲ್ ಕ್ಯಟಗರಿ ಎಂದರೆ ಯಾರು? ಜನರಲ್ ಕ್ಯಟಗರಿಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಮುದಾಯಗಳ ಎಲ್ಲಾ ಜನರೂ ಬರುತ್ತಾರೆ ತಾನೆ? ಜನರಲ್ ಕ್ಯಟಗರಿ ಎಂದರೆ ಹೊಲೆಯರು, ಮಾದಿಗರು, ಲಂಬಾಣಿಗಳು, ಮುಸ್ಲೀಮರು, ಲಿಂಗಾಯತರು, ಒಕ್ಕಲಿಗರು, ಕುರುಬರು, ಬೇಡರು, ಬ್ರಾಹ್ಮಣರು ಎಲ್ಲರಿಗೂ ಸೇರಿದ್ದು ತಾನೆ? ಹಾಗಿದ್ದರೆ ಅವರಿಗೂ ಈ 10%ನಲ್ಲಿ ಮೀಸಲಾತಿ ಸಿಗುತ್ತದೆಯೆ? ಪಾರ್ಲಿಮೆಂಟಿನಲ್ಲಿ ಪಾಸಾದ ಮಸೂದೆಯ ಪ್ರಕಾರ ಇಲ್ಲ. ಅದರ ಪ್ರಕಾರ SC, ST ಮತ್ತು ಲಿಂಗಾಯತ ಮತ್ತು ಒಕ್ಕಲಿಗರನ್ನೂ ಒಳಗೊಂಡ OBC ಕ್ಯಟಗರಿಯ ಜನರನ್ನು ಹೊರತುಪಡಿಸಿ ಜನರಲ್ ಕ್ಯಟಗರಿಯಲ್ಲಿರುವ ಮಂದಿಗೆ ಮಾತ್ರ ಮೀಸಲು. ಇವರೆಲ್ಲರನ್ನು ಹೊರತುಪಡಿಸಿದ ಜನರಲ್ ಕ್ಯಟಗರಿ ಎಂದರೆ ಕರ್ನಾಟಕದಲ್ಲಿ ಬ್ರಾಹ್ಮಣರು ಮಾತ್ರ. ಅಂದರೆ ಅವರಿಗೆ ಮಾತ್ರ ಈ 10% ಮೀಸಲು.
ಕೊನೆಯದಾಗಿ, ಆ ಐಎಎಸ್ ಅಧಿಕಾರಿ ಎತ್ತಿದ ಮೂಲ ಪ್ರಶ್ನೆಗೆ ಬರೋಣ. ಇಷ್ಟೆಲ್ಲಾ ದೊಡ್ಡ ಮಟ್ಟದ ಅನ್ಯಾಯವಾಗುತ್ತಿದ್ದರೂ ದೇಶಾದ್ಯಂತ ಪ್ರತಿರೋಧ ಏಕೆ ಭುಗಿಲೇಳುತ್ತಿಲ್ಲ?
ನನಗನ್ನಿಸಿದ ಮಟ್ಟಿಗೆ ಇದರಲ್ಲಿ ಎರಡು ಅಂಶಗಳು ಕೆಲಸ ಮಾಡಿವೆ. ಮೊದಲನೆಯದು, ಈಗಾಗಲೇ ಮೀಸಲಾತಿ ಪಡೆಯುತ್ತಿರುವ ದಲಿತರು, ಲಂಬಾಣಿಗಳು, ವಡ್ಡರು, ಬೇಡರು, ಕುರುಬರು, ಮುಸ್ಲೀಮರು, ಲಿಂಗಾಯತರು, ಒಕ್ಕಲಿಗರಿಗೆ ಯಾವ ತೊಂದರೆಯೂ ಆಗುವುದಿಲ್ಲ, ಅವರಿಗೆ ನೀಡಿರುವ ಮೀಸಲಾತಿಯಲ್ಲಿ ಎಳ್ಳಷ್ಟನ್ನೂ ಕಿತ್ತುಕೊಳ್ಳುವುದಿಲ್ಲ ಎಂದು ಹೇಳಲಾಗಿದೆ. ಅದು ನಿಜ ಕೂಡ. ನಮ್ಮ ಮೀಸಲಾತಿಗೇನೂ ತೊಂದರೆಯಾಗಿಲ್ಲವಲ್ಲ ಅಂತ ಈ ಸಮುದಾಯಗಳು ಮತ್ತು ಅವುಗಳ ನಾಯಕರು ಸುಮ್ಮನಾಗಿದ್ದಾರೆ.
ಎರಡನೆಯದಾಗಿ, ಮೇಲ್ಜಾತಿಯ ಬಡವರಿಗೆ ಅಥವಾ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಲಾಗುತ್ತಿದೆ ಎಂದು ಬಿಂಬಿಸಲಾಗಿದೆ. ಬಡವರು ಅಂದಾಗ ಅವರಿಗೂ ಕೂಡ ಸೌಲಭ್ಯ ದೊರಕಲಿ ಬಿಡು ಎಂಬ ಭಾವನೆ ಮೂಡಿರುವುದಕ್ಕೆ ಸಾಕು. ಇನ್ನೊಂದೆಡೆ ಮೇಲ್ಜಾತಿಯ ಬಡವರಿಗೆ ಅಂದಾಕ್ಷಣ ಸಮಾಜದಲ್ಲಿ ವಾಸ್ತವದಲ್ಲಿ ಮೇಲ್ಜಾತಿಗಳೇ ಆಗಿರುವ ಲಿಂಗಾಯತರು ಮತ್ತು ಒಕ್ಕಲಿಗರು ತಮಗೂ ಇದರಲ್ಲಿ ಪಾಲು ಸಿಗುತ್ತೆ ಎಂಬ ಭ್ರಮಿಸಿರಲಿಕ್ಕೂ ಸಾಧ್ಯವಿದೆ.
ಸಾರಾಂಶ ಇಷ್ಟೆ. ಅತ್ಯಂತ ಮುಂದುವರಿದ ಹಾಗೂ ಜನಸಂಖ್ಯೆಯಲ್ಲಿ ತೀರಾ ಕಡಿಮೆ ಇರುವ ಜಾತಿಯೊಂದಕ್ಕೆ ಅತ್ಯಂತ ಹಿಂದುಳಿದ ಜಾತಿಗಳಿಗಿಂತಲೂ, ಜನಸಂಖ್ಯೆಯಲ್ಲಿ ಅತ್ಯಂತ ಹೆಚ್ಚಿರುವ ಜಾತಿಗಳಿಗಿಂತಲೂ ಹೆಚ್ಚಿನ ಮೀಸಲಾತಿಯನ್ನು ಒದಗಿಸಲಾಗಿದೆ. ಮೇಲಾಗಿ ಈ ಜಾತಿಯಲ್ಲಿ ಇರುವ ಬಡವರ ಸಂಖ್ಯೆಗಿಂತಲೂ ಹೆಚ್ಚು ಮೀಸಲಾತಿಯನ್ನು ನೀಡಲಾಗಿದೆ. ಇದು ಸಾಮಾಜಿಕ ನ್ಯಾಯ ನೀತಿಯ ಅಣಕವಾಗುತ್ತದೆ. ಮೀಸಲಾತಿ ಉದ್ದೇಶ ಏನಾಗಿದೆಯೋ ಅದನ್ನೇ ಅಪಹಾಸ್ಯ ಮಾಡಿದಂತಾಗುತ್ತದೆ.
ಮೋದಿ ಸರ್ಕಾರದ ಈ ನಿರ್ಣಯದಿಂದ ತಾವು ಕಳೆದುಕೊಂಡಿದ್ದೇನು ಎಂಬುದು ಲಿಂಗಾಯತರಿಗೆ, ಒಕ್ಕಲಿಗರಿಗೆ, ಕುರುಬರಿಗೆ, ಮುಸ್ಲೀಮರಿಗೆ, ದಲಿತರಿಗೆ, ಬೇಡರಿಗೆ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಈಗಲೂ ಅರ್ಥವಾಗದಿದ್ದರೆ ಯಾರೇನು ಮಾಡೋಕಾಗುತ್ತದೆ?
– ಕುಮಾರ್ ಬುರಡಿಕಟ್ಟಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
-
ಅಂಕಣ2 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ5 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ9 hours agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ

