ಬಹಿರಂಗ
ಮೇಲ್ಜಾತಿಗೆ ನೀಡಿದ 10% ಮೀಸಲಾತಿ ಲಿಂಗಾಯತರು, ಒಕ್ಕಲಿಗರನ್ನೂ ಒಳಗೊಂಡಂಡಂತೆ ಇಡೀ ಹಿಂದುಳಿದ ವರ್ಗಗಳಿಗೆ ಮಾಡಿದ ಚಾರಿತ್ರಿಕ ಅನ್ಯಾಯ..!
ನಿನ್ನೆ ಸಂಜೆ ಪತ್ರಿಕೆಗೆ ಕಳಿಸಬೇಕಾದ ಎಲ್ಲಾ ಸುದ್ದಿಗಳನ್ನು ಕಳಿಸಿ ವಾಟ್ಸಾಪು, ಫೇಸ್ಬುಕ್ಕು ಅಂತ ಹರಟೆ ಶುರು ಮಾಡುವ ಹೊತ್ತಿಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಫೋನ್ ಮಾಡಿದರು. ಸ್ವಲ್ಪ ಬೇಸರ, ಆತಂಕ, ಆಶ್ಚರ್ಯ, ಜಿಗುಪ್ಸೆ, ಸಿಟ್ಟುಗಳ ಮಿಶ್ರಣದಂತಿದ್ದವು ಅವರ ಮಾತುಗಳು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮೇಲ್ಜಾತಿಗಳಿಗೆ ನೀಡಿದ ಶೇಕಡ 10ರಷ್ಟು ಮೀಸಲಾತಿ ಅವರ ಈ ಕೋಪ-ಬೇಸರಕ್ಕೆ ಕಾರಣವಾಗಿತ್ತು. ಇಂತಹದ್ದೊಂದು ಪ್ರಸ್ತಾಪ ಬಂದ ಕೂಡಲೇ ಇದನ್ನು ವಿರೋಧಿಸಿ ಇಡೀ ದೇಶಾದ್ಯಂತ ಹಿಂದುಳಿದ ವರ್ಗಗಳ ಹೋರಾಟಗಳು ಭುಗಿಲೇಳುತ್ತವೆ ಎಂದು ಅವರು ನಿರೀಕ್ಷಿಸಿದ್ದರು. ಆದರೆ, ತಮಗೇನೂ ಆಗೇ ಇಲ್ಲವೆಂಬಂತೆ ಎಲ್ಲರೂ ಸುಮ್ಮನಾಗಿಬಿಟ್ಟಿರುವುದು ಅವರ ಆತಂಕಕ್ಕೆ ಕಾರಣವಾಗಿತ್ತು. ಹಿಂದುಳಿದ ವರ್ಗಗಳ ಹಿತಾಸಕ್ತಿಗಳನ್ನು ಪ್ರತಿನಿಧಿಸುತ್ತೇವೆಂದು ಅಬ್ಬರಿಸಿ ಬೊಬ್ಬಿಡುವ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಇದಕ್ಕೆ ಮೌನ ಸಮ್ಮತಿ ಸೂಚಿಸಿದ್ದು ಅವರ ದುಗುಡವನ್ನುಹೆಚ್ಚಿಸಿತ್ತು. ಹೆಚ್ಚೂ ಕಮ್ಮಿ ಅರ್ಧ ಗಂಟೆ ಅವರ ಜೊತೆ ಮಾತಾಡಿದ ಮೇಲೆ ನನಗೂ ಅದರ ಬಗ್ಗೆ ಸ್ವಲ್ಪ ಸ್ಪಷ್ಟತೆ ಸಿಕ್ಕಿತು. ಅವರೊಂದಿಗಿನ ಸಂಭಾಷಣೆಯ ಸಾರ, ನಾನೂ ಒಂದಿಷ್ಟು ಕೆದಕಿ ತೆಗೆದ ಮಾಹಿತಿ ಸೇರಿಸಿ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.
ನಾನು ಮೊಟ್ಟ ಮೊದಲು ಮಾಡಿದ ಕೆಲಸ ಎಂದರೆ ಈ ವಿಷಯವಾಗಿ ಪಾರ್ಲಿಮೆಂಟಿನಲ್ಲಿ ಅಂಗೀಕಾರವಾದ ಮೂಲ ಸಂವಿಧಾನ ತಿದ್ದುಪಡಿ ಮಸೂದೆಯನ್ನು (THE CONSTITUTION (ONE HUNDRED AND TWENTY-FOURTH AMENDMENT) BILL, 2019) ಹುಡುಕಿ ತೆಗೆದು ಓದಿದ್ದು. ಇದು ನಮ್ಮ ಸಂವಿಧಾನಕ್ಕೆ ಮಾಡುತ್ತಿರುವ 124ನೇ ತಿದ್ದುಪಡಿ. ಇದರ ಮೂಲಕ ಸಂವಿಧಾನದ 15ನೇ ವಿಧಿಯಲ್ಲಿ ಈಗಾಗಲೇ 5 ಕ್ಲಾಸುಗಳಿದ್ದು ಅದರಲ್ಲಿ ಈಗ 6ನೇ ಕ್ಲಾಸನ್ನು ಸೇರಿಸಲಾಗಿದೆ. ಅದರ ಸಾರಾಂಶ ಹೀಗಿದೆ:
‘(6) Nothing in this article or sub-clause (g) of clause (1) of article 19 or clause (2) of article 29 shall prevent the State from making,—
(a) any special provision for the advancement of any economically weaker sections of citizens other than the classes mentioned in clauses (4) and (5); and
(b) any special provision for the advancement of any economically weaker sections of citizens other than the classes mentioned in clauses (4) and (5) in so far as such special provisions relate to their admission to educational institutions including private educational institutions, whether aided or unaided by the State, other than the minority educational institutions referred to in clause (1) of article 30, which in the case of reservation would be in addition to the existing reservations and subject to a maximum of ten per cent. of the total seats in each category.
ಜೊತೆಗೆ ಸಂವಿಧಾನದ 16ನೇ ವಿಧಿಗೂ ತಿದ್ದುಪಡಿ ಮಾಡಲಾಗಿದ್ದು ಅಲ್ಲೂ ಹೆಚ್ಚೂ ಕಮ್ಮಿ ಇದೇ ಸಾರಾಂಶವಿದೆ.
ಮೇಲಿನ ಈ ಪ್ಯಾರಾಗಳ ಸಾರಾಂಶ ಏನೆಂದರೆ, ಸಂವಿಧಾನದ 4 ಮತ್ತು 5ನೇ ಕ್ಲಾಸುಗಳಲ್ಲಿರುವ ಸಮುದಾಯಗಳನ್ನು ಹೊರತುಪಡಿಸಿ ಉಳಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇಕಡ 10ರಷ್ಟು ಮೀಸಲಾತಿ ನೀಡುವುದಕ್ಕೆ ಪ್ರಭುತ್ವಕ್ಕೆ ಯಾವುದೇ ಅಡ್ಡಿಯಿಲ್ಲ.
ಸಂವಿಧಾನದ 4 ಮತ್ತು 5ನೇ ವಿಧಿಯಲ್ಲಿರುವ ಸಮುದಾಯಗಳನ್ನು ಹೊರತುಪಡಿಸಿ ಎಂದಾಕ್ಷಣ ಆ ಸಮುದಾಯಗಳು ಯಾವವು ಎಂಬ ಪ್ರಶ್ನೆ ಹುಟ್ಟಿತು. ಅದನ್ನು ಬಗೆಹರಿಸಿಕೊಳ್ಳುವುದಕ್ಕಾಗಿ ನಮ್ಮ ಸಂವಿಧಾನದ ಪುಟಗಳನ್ನು ತಿರುವಿ ಹಾಕಿದೆ. ಆ ಸಮುದಾಯಗಳು ಎಂದರೆ ಅನುಸೂಚಿತ ಜಾತಿಗಳು (SCs), ಅನುಸೂಚಿತ ಬುಡಕಟ್ಟುಗಳು (STs) ಮತ್ತು ಹಿಂದುಳಿದ ವರ್ಗಗಳು (OBCs). ಅಂದರೆ ಈ ಮೂರು ವಿಭಾಗಗಳ ಸಮುದಾಯಗಳನ್ನು ಹೊರತುಪಡಿಸಿ ಉಳಿದವರಿಗೆ ಈ ಶೇಕಡ 10% ಮೀಸಲಾತಿ ಸೌಲಭ್ಯ ದೊರಕಲಿದೆ ಎಂದಾಯಿತು.
ಇಲ್ಲಿಯ ತನಕ ಅನುಸೂಚಿತ ಜಾತಿಗಳಿಗೆ, ಅನುಸೂಚಿತ ಬುಡಕಟ್ಟುಗಳಿಗೆ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಒಟ್ಟು ಮೀಸಲಾತಿಯ ಪ್ರಮಾಣ ಶೇಕಡ 50%. ಇದು Reserved ಕ್ಯಟಗರಿ. ಹಿಂದುಳಿದವರಿಗೆ ನೀಡಲಾಗುವ ಮೀಸಲಾತಿಯ ಪ್ರಮಾಣವನ್ನು ಶೇಕಡ 50%ಕ್ಕಿಂತ ಹೆಚ್ಚು ಮಾಡಬಾರದು ಎಂದು ಸುಪ್ರೀಂ ಕೋರ್ಟು ಆದೇಶವಿದೆ.
ಉಳಿದ 50% ಜನರಲ್ ಕ್ಯಟಗರಿಗೆ ಮೀಸಲು. ಇಲ್ಲಿ ಜನರಲ್ ಕ್ಯಟಗರಿ ಎಂದರೆ Unreserved ಅಥವಾ It is open to all ಎಂದರ್ಥ. Reserved ಕ್ಯಟಗರಿಯಲ್ಲಿ ಯಾವ ಯಾವ ಸಮುದಾಯಕ್ಕೆ ಎಷ್ಟೆಷ್ಟು ಮೀಸಲಾತಿ ನೀಡಲಾಗಿದೆಯೋ ಆ ಸಮುದಾಯವಷ್ಟೇ ಅದನ್ನು ಬಳಸಲು ಸಾಧ್ಯ. ಬೇರೆ ಸಮುದಾಯಗಳು ಆ ಮೀಸಲಾತಿಗೆ ಕೈಹಾಕುವಂತಿಲ್ಲ. Unreserved ಅಥವಾ Open ಕ್ಯಟಗರಿಯು ಅದರ ಹೆಸರೇ ಸೂಚಿಸುವಂತೆ ಯಾರು ಬೇಕಾದರೂ ಸ್ಪರ್ಧಿಸಿ ಮೆರಿಟ್ ಆಧಾರದಲ್ಲಿ ಸೀಟು/ಹುದ್ದೆ ಪಡೆದುಕೊಳ್ಳಬಹುದು. ಅಂದರೆ, ಎಸ್ಸಿ, ಎಸ್ಟಿ, ಓಬಿಸಿಯವರೂ ಈ unreserved ಅಥವಾ ಜನರಲ್ ಕ್ಯಟಗರಿಯಲ್ಲಿ ಸ್ಪರ್ಧಿಸಿ ಮೆರಿಟ್ ಆಧಾರದಲ್ಲಿ ಸೀಟು/ಹುದ್ದೆ ಪಡೆದುಕೊಳ್ಳಬಹುದು.
ಯಾವುದಾದರೂ ಹುದ್ದೆಗಳನ್ನು ಭರ್ತಿಮಾಡುವಾಗ ಮೊದಲು ಜನರಲ್ ಕ್ಯಟಗರಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಅಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದವರು, ಮುಂದುವರೆದವರು ಎಲ್ಲರನ್ನೂ ಮೆರಿಟ್ ಆಧಾರದಲ್ಲಿ ತೂಗಿ ಆಯ್ಕೆ ಮಾಡಲಾಗುತ್ತದೆ. ಜನರಲ್ ಕ್ಯಟಗರಿಯಲ್ಲಿ ಆಯ್ಕೆಯಾಗುವಷ್ಟು ಮೆರಿಟ್ ಇಲ್ಲದ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಮಂದಿಯನ್ನು ಅವರವರ ಕ್ಯಟಗರಿಗೆ ಮೀಸಲಿಟ್ಟಿರುವ ಹುದ್ದೆಗಳಿಗೆ ಪರಿಗಣಿಸಲಾಗುತ್ತದೆ.
ಈಗ ಕೇಂದ್ರ ಸರ್ಕಾರ ಮಾಡುತ್ತಿರುವ ಕೆಲಸ ಏನೆಂದರೆ, ಜನರಲ್ ಅಥವಾ Unreserved ಕ್ಯಟಗರಿಯಿಂದ ಶೇಕಡ 10ರಷ್ಟುನ್ನು ತೆಗೆದು ಅದನ್ನು ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಸೇರಿರದ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವರ್ಗಗಳಿಗೆ ನೀಡಲು ಹೊರಟಿದೆ. ಅಂದರೆ, ಸಾರಾಂಶದಲ್ಲಿ Unreserved ಅಥವಾ ಜನರಲ್ ಕ್ಯಟಗರಿಯ ಪ್ರಮಾಣ ಶೇಕಡ 50ರಿಂದ ಶೇಕಡ 40ಕ್ಕೆ ಇಳಿಯುತ್ತದೆ ಹಾಗೂ Reserved ಪ್ರಮಾಣ ಶೇಕಡ 50 ರಿಂದ ಶೇಕಡ 60ಕ್ಕೆ ಏರುತ್ತದೆ.
ಇಲ್ಲೊಂದು ಪ್ರಶ್ನೆ ಏಳುತ್ತದೆ. ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿಯ ಒಟ್ಟು ಪ್ರಮಾಣ ಶೇಕಡ 50ಕ್ಕಿಂತ ಹೆಚ್ಚು ಆಗಬಾರದು ಎಂದು ಸುಪ್ರೀಂ ಕೋರ್ಟು ನೀಡಿರುವ ತೀರ್ಪಿನ ಉಲ್ಲಂಘನೆಯಾಗುವುದಿಲ್ಲವೆ ಎಂದು. ಕೇಂದ್ರ ಕಾನೂನು ಮಂತ್ರಿ ರವಿಶಂಕರ್ ಪ್ರಸಾದ ಉಲ್ಲಂಘನೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಮೀಸಲಾತಿಯ ಪ್ರಮಾಣ ಶೇಕಡ 50ಕ್ಕಿಂತ ಹೆಚ್ಚಿರಬಾರದು ಎಂದು ಸಂವಿಧಾನವೇನೂ ಹೇಳಿಲ್ಲ, ಅದನ್ನು ಹೇಳಿದ್ದು ಕೋರ್ಟು ಎಂಬುದು ಅವರ ವಾದ. ಅಲ್ಲದೇ ಸುಪ್ರೀಂ ಕೋರ್ಟು ಹೇಳಿದ್ದು “ಹಿಂದುಳಿದ ವರ್ಗಗಳಿಗೆ (ಎಸ್ಸಿ, ಎಸ್ಟಿ, ಮತ್ತು ಇತರ ಹಿಂದುಳಿದ ವರ್ಗಗಳು ಒಳಗೊಂಡಂತೆ) ನೀಡಲಾಗುವ ಮೀಸಲಾತಿ ಪ್ರಮಾಣ ಶೇಕಡ 50ಕ್ಕಿಂತ ಹೆಚ್ಚಿರಬಾರದು ಎಂದಿದೆ. ಈಗ ನೀಡುತ್ತಿರುವ ಶೇಕಡ 10ರಷ್ಟು ಮೀಸಲಾತಿ ಅವರಿಗಲ್ಲ. ಅದು ಮುಂದುವರೆದವರಿಗಾಗಿ, ಮುಂದುವರಿದ ಸಮುದಾಯಗಳ ಬಡವರಿಗಾಗಿ. ಹಾಗಾಗಿ, ಅದು ಸುಪ್ರೀಂ ಕೋರ್ಟಿನ ಉಲ್ಲಂಘನೆಯಾಗುವುದಿಲ್ಲ ಎಂದೂ ಕೆಲವರು ವಾದಿಸುತ್ತಾರೆ. ಆದರೆ ಒಟ್ಟು ಮೀಸಲಾತಿಯ ಪ್ರಮಾಣ ಶೇಕಡಾ 50 ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾದರೂ ಅಂತಿಮವಾಗಿ ಸುಪ್ರೀಂ ಕೋರ್ಟಿನ ನ್ಯಾಯಿಕ ವಿಮರ್ಶೆಯನ್ನು ಸಂಸತ್ತು ತಳ್ಳಿಹಾಕಿದ ಸಂಭವವೂ ಇಲ್ಲದಿಲ್ಲ.
ಸಾರಾಂಶದಲ್ಲಿ ಮೀಸಲಾತಿಯ ಪ್ರಮಾಣ ಶೇಕಡ 60 ಹಾಗೂ ಜನರಲ್ ಕ್ಯಟಗರಿಯ ಪ್ರಮಾಣ ಶೇಕಡ 40 ಆದಂತೆ ಆಗುತ್ತದೆ. ಈಗ ಶೇಕಡ 60ರಷ್ಟು ಮೀಸಲಾತಿಯಲ್ಲಿ ಯಾವ ಯಾವ ಸಮುದಾಯಕ್ಕೆ ಎಷ್ಟು ಸಿಗುತ್ತದೆ ಎಂಬುದನ್ನು ನಾವು ಕಂಡುಕೊಳ್ಳಬೇಕು. ಇದನ್ನು ಮೀಸಲಾತಿಯನ್ನು ನಿಗದಿ ಮಾಡುವ ಅಧಿಕಾರ ರಾಜ್ಯಗಳಿಗೂ ಇರುವುದರಿಂದ ನಾವು ಯಾವುದಾದರೊಂದು ರಾಜ್ಯವನ್ನು ಉದಾಹರಣೆಯಾಗಿ ತೆಗೆದುಕೊಂಡರೆ ಈ ವಿಷಯವನ್ನು ಇನ್ನಷ್ಟು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ನಮ್ಮ ಕರ್ನಾಟಕವನ್ನೇ ಉದಾಹರಣೆಯಾಗಿ ತೆಗೆದುಕೊಳ್ಳೋಣ. ಇಲ್ಲಿ ಮೀಸಲಾತಿಯ ಪ್ರಮಾಣ ಈ ಕೆಳಗಿನಂತಿದೆ:
SCs: 15%
STs: 3%
OBC:32% (ಕ್ಯಟಗರಿ 1: 4% + ಕ್ಯಟಗರಿ 2A: 15% + ಕ್ಯಟಗರಿ 2B: 4% + ಕ್ಯಟಗರಿ 3A: 4% + ಕ್ಯಟಗರಿ 3B: 5% = 32%)
ಒಟ್ಟು: 50%
ಜನರಲ್: 50%
ಈಗ ಮೀಸಲಾತಿಯ ಪ್ರಮಾಣ ಶೇಕಡ 60ಕ್ಕೆ ಏರಿದ ನಂತರ ಅದು ಈ ಕೆಳಗಿನಂತೆ ಆಗಲಿದೆ.
SCs: 15%
STs: 3%
OBC: 32% (ಕ್ಯಟಗರಿ 1: 4% +ಕ್ಯಟಗರಿ 2A: 15% +ಕ್ಯಟಗರಿ 2B: 4% + ಕ್ಯಟಗರಿ 3A: 4% + ಕ್ಯಟಗರಿ 3B: 5% = 32%)
ಈ ಮೇಲಿನ ವರ್ಗಗಳನ್ನು ಹೊರತುಪಡಿಸಿದ ಬಡವರಿಗೆ (ಅರ್ಥಾತ್ ನಮ್ಮ ರಾಜ್ಯದಲ್ಲಿ ಬ್ರಾಹ್ಮಣರಿಗೆ): 10%
ಒಟ್ಟು: 60%
ಜನರಲ್: 40%
ಇಲ್ಲಿ ಗಮನಿಸಬೇಕಾದ ಒಂದು ಅಂಶವಿದೆ. ನಮ್ಮಲ್ಲಿ ಸಾಮಾನ್ಯವಾಗಿ SC ಯಾರು, ST ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, OBC ಯಾರು ಎಂಬುದರ ಬಗ್ಗೆ ಬಹಳಷ್ಟು ಸಾಮಾನ್ಯ ಜನರಿಗೆ ಗೊಂದಲಗಳಿವೆ. ಉದಾಹರಣೆಗೆ, ಬಹಳಷ್ಟು ಲಿಂಗಾಯತರು, ಒಕ್ಕಲಿಗರು ತಾವು OBC ಕ್ಯಟಗರಿಗೆ ಸೇರಿದವರೆಂದು, ತಮಗೂ ಮೀಸಲಾತಿ ಸೌಕರ್ಯ ಕಲ್ಪಿಸಲಾಗಿದೆ ಎಂಬುದನ್ನು ಮರೆತು ತಾವು ಮುಂದುವರಿದವರು ಅಥವಾ ಮೇಲ್ವರ್ಗದವರು ಎಂದು ಭಾವಿಸಿದ್ದಾರೆ. ವಾಸ್ತವದಲ್ಲಿ ಸಾಮಾಜಿಕವಾಗಿ ಅವರು ಮೇಲ್ಜಾತಿಗಳೇ ಆಗಿದ್ದರೂ ಕಾನೂನಿನಡಿಯಲ್ಲಿ ಅವರೂ ಕೂಡ OBC ಕ್ಯಟಗರಿಗೆ ಸೇರಿದ್ದು ಅವರಿಗೂ ಮೀಸಲಾತಿ ಸೌಕರ್ಯವಿದೆ. ಇದನ್ನೇ ಸಾರಾಂಶೀಕರಿಸಿ ಹೇಳುವುದಾದರೆ, ಕರ್ನಾಟಕದ ಮಟ್ಟಿಗೆ SC, ST ಮತ್ತು ಬ್ರಾಹ್ಮಣರನ್ನು ಹೊರತುಪಡಿಸಿದರೆ ಲಿಂಗಾಯತರು, ಒಕ್ಕಲಿಗರು, ಕುರುಬರು, ಈಡಿಗರು ಮುಂತಾದ ಉಳಿದೆಲ್ಲಾ ಸಮುದಾಯಗಳು OBCಯಲ್ಲಿ ಬರುತ್ತವೆ. ಈ ಹಿನ್ನೆಲೆಯಲ್ಲಿ ನಮ್ಮ ಮೀಸಲಾತಿ ಕೋಸ್ಟಕವನ್ನು ಜಾತಿ ಆಧಾರಿತವಾಗಿ ತಯಾರಿಸೋಣ.
- ಮಾದಿಗರು, ಹೊಲೆಯರು/ಚಲವಾದಿಗಳು, ಲಂಬಾಣಿ, ಭೋವಿ/ವಡ್ಡರ್ ಇತ್ಯಾದಿ 101 ಸಮುದಾಯಗಳಿಗೆ (SC) 15% ಮೀಸಲಾತಿ.
- ಬೇಡರು/ನಾಯಕರು/ವಾಲ್ಮಿಕಿ, ಹಕ್ಕಿಪಿಕ್ಕಿ, ಜೇನುಕುರುಬ, ಕಾಡುಕುರುಬ, ಕೊರಗ, ಮಲೆಕುಡಿಯ, ಇತ್ಯಾದಿ 49 ಸಮುದಾಯಗಳಿಗೆ (STs) 3% ಮೀಸಲಾತಿ.
- ಕ್ಯಟಗರಿ 1 ರಲ್ಲಿರುವ ಬೆಸ್ತ, ಉಪ್ಪಾರ, ಗೊಲ್ಲ, ಬೋಯಿ, ಬೋವಿ, ಕುಣಬಿ, ಬುಡಬುಡಕಿ, ದಲಿತ ಕ್ರೈಸ್ತ, ಮೊದಲಾದ 95 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿರುವ 285 ಉಪಜಾತಿಗಳಿಗೆ (ಕೆಲವು ಕಡೆ ಸಂವಾದಿ ಪದಗಳು) 4% ಮೀಸಲಾತಿ.
- ಕ್ಯಟಗರಿ 2A ಅಡಿಯಲ್ಲಿ ಬರುವ ಅಗಸ, ದೇವಾಡಿಗ, ಈಡಿಗ, ಕುಂಬಾರ, ಕುರುಬ, ವಿಶ್ವಕರ್ಮ, ತಿಗಳ, ದೇವಾಂಗ, ಮೊದಲಾದ 102 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿಬರುವ 282 ಉಪಜಾತಿಗಳಿಗೆ 15% ಮೀಸಲಾತಿ.
- ಕ್ಯಟಗರಿ 2Bಯಲ್ಲಿ ಬರುವ ಮುಸ್ಲೀಮರಿಗೆ 4% ಮೀಸಲಾತಿ.
- ಕ್ಯಟಗರಿ 3Aನಲ್ಲಿ ಬರುವ ಒಕ್ಕಲಿಗರು/ಗೌಡರು, ಕೊಡಗರು ಮತ್ತು ಬಲಿಜ ಎಂಬ ಮೂರು ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 42 ಉಪಜಾತಿಗಳಿಗೆ ಸೇರಿ 4% ಮೀಸಲಾತಿ.
- ಕ್ಯಟಗರಿ 3Bನಲ್ಲಿ ಬರುವ ವೀರಶೈವ ಲಿಂಗಾಯತರು, ಮರಾಠರು, ಕ್ರಿಶ್ಚಿಯನ್ನರು, ಬಂಟರು, ಜೈನರು ಮತ್ತು ಸತನಿ ಎಂಬ ಆರು ಜಾತಿಗಳು ಹಾಗೂ ಅದರ ಅಡಿಯಲ್ಲಿ ಬರುವ 30 ಉಪಜಾತಿಗಳಿಗೆ (ಈ ಉಪಜಾತಿಗಳಲ್ಲಿ ಲಿಂಗಾಯತರ ಉಪಜಾತಿಗಳು ಬರುತ್ತವೆ – ಹೆಳವ, ಅಂಬಿಗ, , ಮಡಿವಾಳ, ಕುಂಬಾರ, ಕುರುಬ ಭಜಂತ್ರಿ, ಅಕ್ಕಸಾಲಿಗ/ಬಡಿಗ, ಮೇದಾರ ಇತ್ಯಾದಿಗಳು) 5% ಮೀಸಲಾತಿ.
- ಈ ಮೇಲಿನ ವರ್ಗಗಳನ್ನು ಹೊರತುಪಡಿಸಿದ ಬಡವರಿಗೆ, ಅಂದರೆ ನಮ್ಮ ರಾಜ್ಯದಲ್ಲಿ ಬ್ರಾಹ್ಮಣರಿಗೆ 10% ಮೀಸಲಾತಿ.
ಈ ವಿವರಣೆಯನ್ನು ಏಕೆ ಕೊಡಬೇಕಾಯಿತು ಎಂದರೆ ಇಂದು ಬ್ರಾಹ್ಮಣರಿಗೆ ಕೊಡುತ್ತಿರುವ 10% ಮೀಸಲಾತಿಯನ್ನು ಬಲವಾಗಿ ಸಮರ್ಥಿಸುತ್ತಿರುವವರಲ್ಲಿ ಬಹುತೇಕರು ಸಮಾಜದಲ್ಲಿ ಮೇಲ್ಪದರದಲ್ಲಿರುವ ಆದರೆ ಕಾನೂನಿನಲ್ಲಿ OBC ಯಲ್ಲಿರುವ ಒಕ್ಕಲಿಗರು ಮತ್ತು ಲಿಂಗಾಯತರು. ಅವರು ತಮ್ಮ ತಮ್ಮ ಕ್ಯಟಗರಿಗಳಾದ 3A ಮತ್ತು 3Bಯನ್ನೊಮ್ಮೆ ನೋಡಿ, ಕರ್ನಾಟಕದ ಜನಸಂಖ್ಯೆಯಲ್ಲಿ ತಮ್ಮ ಜನಸಂಖ್ಯೆ ಎಷ್ಟಿದೆ ಮತ್ತು ತಮಗೆ ಎಷ್ಟು ಮೀಸಲಾತಿ ಕೊಡಲಾಗಿದೆ ಎಂಬುದನ್ನು ಗಮನಿಸಿ ಅದನ್ನು ಬ್ರಾಹ್ಮಣರ ಜನಸಂಖ್ಯೆಗೆ ಮತ್ತು ಅವರಿಗೆ ಈಗ ಕೊಟ್ಟಿರುವ ಮೀಸಲಾತಿಯೊಂದಿಗೆ ಹೋಲಿಸಿಕೊಳ್ಳಬೇಕು.
ಕ್ಯಟಗರಿ 3A ಅಡಿಯಲ್ಲಿ ಬರುವ ಒಕ್ಕಲಿಗರು, ಕೊಡಗರು, ಬಲಿಜ ಮತ್ತು ಇತರ ಉಪಜಾತಿಗಳು ಸೇರಿ ಕರ್ನಾಟಕ ಜನಸಂಖ್ಯೆಯ ಶೇಕಡ 15 ರಷ್ಟಾಗುತ್ತಾರೆ. ಅವರಿಗೆ ಸಿಗುತ್ತಿರುವುದು ಕೇವಲ 4% ಮೀಸಲಾತಿ.
ಕ್ಯಟಗರಿ 3Bನಲ್ಲಿ ಬರುವ ಲಿಂಗಾಯತರು, ವೀರಶೈವರು, ಕುಂಬಾರರು, ಭಜಂತ್ರಿಗಳು, ಅಕ್ಕಸಾಲಿಗರು/ವಿಶ್ವಕರ್ಮರು, ಮೇದಾರರು, ಕ್ರಿಶ್ಚಿಯನ್ನರು, ಮರಾಠರು, ಬಂಟರು, ಜೈನರು ಎಲ್ಲಾ ಸೇರಿದರೆ ಕರ್ನಾಟಕದ ಜನಸಂಖ್ಯೆಯ ಶೇಕಡ 18ರಷ್ಟಾಗಿಬಿಡುತ್ತಾರೆ. ಅವರಿಗೆ ಸಿಗುತ್ತಿರುವುದು ಕೇವಲ 5% ಮೀಸಲಾತಿ.
ಆದರೆ, ಕರ್ನಾಟಕದ ಜನಸಂಖ್ಯೆಯ ಶೇಕಡ 3 ರಷ್ಟಿರುವ ಅಥವಾ ಅದಕ್ಕಿಂತ ಕಡಿಮೆ ಇರುವ ಬ್ರಾಹ್ಮಣರಿಗೆ ಸಿಗುತ್ತಿರುವುದು 10% ಮೀಸಲಾತಿ!
ಇಷ್ಟೂ ಅರ್ಥವಾಗದಿದ್ದರೆ ಹೇಗೆ?
ಇನ್ನು ಜನರಲ್ ಕ್ಯಟಗರಿ 50% ನಿಂದ 40%ಗೆ ಇಳಿದಿದ್ದರ ಬಗ್ಗೆ ಮಾತನಾಡೋಣ. ಇಲ್ಲಿಯ ತನಕ ಜನರಲ್ ಕ್ಯಟಗರಿಯಲ್ಲಿ ಸಿಂಹಪಾಲು ಪಡೆಯುತ್ತಾ ಬಂದಿರುವವರು ಬ್ರಾಹ್ಮಣರೇ. ಅದರ ನಂತರದ ಸ್ಥಾನದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಬರುತ್ತಾರೆ. ದಲಿತರಿಗೆ ಮತ್ತು OBC ಒಳಗಿನ ಹಿಂದುಳಿದಿರುವ ವರ್ಗಗಳು ಜನರಲ್ ಕ್ಯಟಗರಿಯಲ್ಲಿ ಸ್ಪರ್ಧಿಸಿ ಸ್ಥಾನಗಳನ್ನು ಪಡೆಯುವುದು ಅಪರೂಪ. ಈಗ ಜನರಲ್ ಕ್ಯಟಗರಿಯಿಂದ 10% ಬ್ರಾಹ್ಮಣರ ಕ್ಯಟಗರಿಗೆ ಹೋಗಿದ್ದರಿಂದ ಉಳಿದ 40% ನಲ್ಲಿಯೇ ಮತ್ತೆ ಎಲ್ಲರೂ ಮತ್ತೆ ಗುದ್ದಾಡಬೇಕು. ಈಗ ಅಸಲಿಗೆ ಏನಾಗುತ್ತದೆ ಎಂದರೆ, ಇತ್ತ ಈ 40%ನಲ್ಲಿಯೂ ಬ್ರಾಹ್ಮಣರು ಸಿಂಹಪಾಲು ಪಡೆಯುತ್ತಾರೆ, ಅತ್ತ 10% ಮೀಸಲಾತಿಯಂತೂ ಅವರಿಗೇ ಮೀಸಲು.
ಒಂದು ಸರಳ ಅಂಕಗಣಿತದವನ್ನು ನೋಡೋಣ.
ಕರ್ನಾಟಕದಲ್ಲಿ 100 ತಹಶೀಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪರಿಭಾವಿಸಿಕೊಳ್ಳೋಣ. ಅದಕ್ಕೆ ಈ ಹೊಸ ಮೀಸಲಾತಿಯನ್ನು ಅನ್ವಯಿಸಿದರೆ ಈ ಕೆಳಗಿನಂತೆ ಹಂಚಿಕೆ ಮಾಡಬೇಕಾಗುತ್ತದೆ.
- ಮಾದಿಗ, ಹೊಲೆಯ/ಚಲವಾದಿ, ಲಂಬಾಣಿ, ಭೋವಿ/ವಡ್ಡರ್ ಇತ್ಯಾದಿ 101 ಸಮುದಾಯಗಳಿಗೆ (SCs): 15 ಸ್ಥಾನಗಳು
- ಬೇಡರು/ನಾಯಕರು/ವಾಲ್ಮಿಕಿ, ಹಕ್ಕಿಪಿಕ್ಕಿ, ಜೇನು ಕುರುಬ, ಕಾಡುಕುರುಬ, ಕೊರಗ, ಮಲೆಕುಡಿಯ, ಇತ್ಯಾದಿ 49 ಸಮುದಾಯಗಳಿಗೆ (STs): 3 ಸ್ಥಾನಗಳು
- ಕ್ಯಟಗರಿ 1 ರಲ್ಲಿರುವ 95 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿರುವ 285 ಉಪಜಾತಿಗಳಿಗೆ (ಕೆಲವು ಕಡೆ ಸಂವಾದಿ ಪದಗಳು): 4 ಸ್ಥಾನಗಳು.
- ಕ್ಯಟಗರಿ 2A ಅಡಿಯಲ್ಲಿ ಬರುವ 102 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 282 ಉಪಜಾತಿಗಳಿಗೆ ಸೇರಿ: 15ಸ್ಥಾನಗಳು
- ಕ್ಯಟಗರಿ 2Bಯಲ್ಲಿ ಬರುವ ಮುಸ್ಲೀಮರಿಗೆ: 4 ಸ್ಥಾನಗಳು
- ಕ್ಯಟಗರಿ 3Aನಲ್ಲಿ ಬರುವ ಒಕ್ಕಲಿಗರು/ಗೌಡರು, ಕೊಡಗರು ಮತ್ತು ಬಜಿಜ ಎಂಬ ಮೂರು ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 42 ಉಪಜಾತಿಗಳಿಗೆ: 4 ಸ್ಥಾನಗಳು.
- ಕ್ಯಟಗರಿ 3Bನಲ್ಲಿ ಬರುವ ವೀರಶೈವ ಲಿಂಗಾಯತರು, ಮರಾಠರು, ಕ್ರಿಶ್ಚಿಯನ್ನರು, ಬಂಟರು, ಜೈನರು ಮತ್ತು ಸತನಿ ಎಂಬ ಆರು ಜಾತಿಗಳು ಹಾಗೂ ಅದರ ಅಡಿಯಲ್ಲಿ ಬರುವ 30 ಉಪಜಾತಿಗಳು – ಹೆಳವ, ಅಂಬಿಗ, , ಮಡಿವಾಳ, ಕುಂಬಾರ, ಕುರುಬ ಭಜಂತ್ರಿ, ಅಕ್ಕಸಾಲಿಗ/ಬಡಿಗ, ಮೇದಾರ ಇತ್ಯಾದಿಗಳು – ಇವರೆಲ್ಲರಿಗೆ ಸೇರಿ: 5 ಸ್ಥಾನಗಳು.
- ಬ್ರಾಹ್ಮಣರಿಗೆ: 10 ಸ್ಥಾನಗಳು.
ಇದುವರೆಗಿನ ಜನರಲ್ ಕ್ಯಟಗರಿಯ ಉಪಯೋಗದ ಅನುಭವವನ್ನು ನೋಡಿದರೆ ಅಲ್ಲಿ ಉಳಿಯುವ 40 ಸ್ಥಾನಗಳ ಪೈಕಿ 25 ಸ್ಥಾನಗಳು ಬ್ರಾಹ್ಮಣರಿಗೆ ಹೋಗುತ್ತವೆ, 10 ಸ್ಥಾನಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಸಾಪೇಕ್ಷವಾಗಿ ಮುಂದುವರೆದಿರುವ ಇತರ ಸಮುದಾಯಗಳ ಪಾಲಾಗುತ್ತವೆ. ಉಳಿದ 10 ಸ್ಥಾನಗಳನ್ನು SC, ST ಮತ್ತು ಇತರ OBC ಅಭ್ಯರ್ಥಿಗಳು ಪಡೆದುಕೊಳ್ಳುತ್ತಾರೆ.
ಅಂತಿಮವಾಗಿ 100 ತಹಶೀಲ್ದಾರರ ಪೈಕಿ:
ಕನಿಷ್ಠ 35 ತಹಶೀಲ್ದಾರರು ಬ್ರಾಹ್ಮಣರಾಗಿರುತ್ತಾರೆ (ಅವರ ಜನಸಂಖ್ಯೆ ಕೇವಲ 3% ಇದ್ದರೂ); 10 ತಹಶೀಲ್ದಾರರು ಲಿಂಗಾಯತರು, ಬಂಟರು, ಕ್ರಿಶ್ಚಿಯನ್ನರು, ಮರಾಠರ ಸಮುದಾಯಗಳಿಗೆ ಸೇರಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 18 ಆಗಿದ್ದರೂ); 10 ತಹಶೀಲ್ದಾರರು ಒಕ್ಕಲಿಗರು, ಕೊಡಗರು, ಬಲಿಜರು ಆಗಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 15 ರಷ್ಟಾಗಿದ್ದರೂ); 6 ತಹಶೀಲ್ದಾರರು ಮುಸ್ಲೀಮರಾಗಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 16ರಷ್ಟಿದ್ದರೂ); 18 ತಹಶೀಲ್ದಾರರು ಮಾದಿಗರು, ಹೊಲೆಯರು/ಚಲವಾದಿಗಳು, ಬೋವಿಗಳು/ವಡ್ಡರು ಆಗಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 20ರಷ್ಟು ಇದ್ದಾಗ್ಯೂ); 5 ತಹಶೀಲ್ದಾರರು ವಾಲ್ಮಿಕಿ/ ಬೇಡರು ಮತ್ತು ಇತರ ಬುಡಕಟ್ಟು ಜನರಾಗಿರುತ್ತಾರೆ; 6 ತಹಶೀಲ್ದಾರರು ಕುರುಬರಾಗಿರುತ್ತಾರೆ; ಉಳಿದ ಸಮುದಾಯಗಳಿಗೆ ಸೇರಿದ ತಹಶೀಲ್ದಾರರು 10 ಜನ ಇರುತ್ತಾರೆ.
ಈ 10% ಮೀಸಲಾತಿ ಬರದೇ ಹೋಗಿದ್ದರೆ ಬ್ರಾಹ್ಮಣರಿಗೆ 10 ಸ್ಥಾನಗಳು ಕಡಿಮೆ ಸಿಗುತ್ತಿದ್ದವು ಹಾಗೂ ಅವು ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ, ಕುರುಬ ಮತ್ತಿತರ ಹಿಂದುಳಿದ ವರ್ಗಗಳ ಪಾಲಾಗುತ್ತಿದ್ದವು.
ಪ್ರತಿಷ್ಠಿತ ಪತ್ರಿಕೆಗಳನ್ನೂ ಒಳಗೊಂಡಂತೆ ಎಲ್ಲಾ ಮಾಧ್ಯಮಗಳು ಈ ವಿಷಯವನ್ನು ತಪ್ಪಾಗಿ ವರದಿ ಮಾಡಿದವು ಎಂದು ನನಗನ್ನಿಸುತ್ತದೆ. ಏಕೆಂದರೆ ಎಲ್ಲಾ ಪತ್ರಿಕೆಗಳು ವರದಿ ಮಾಡಿದ್ದು “ಆರ್ಥಿಕವಾಗಿ ಹಿಂದುಳಿದ ಜನರಲ್ ಕ್ಯಟಗರಿಯ ಜನರಿಗೆ ಶೇಕಡ 10% ಮೀಸಲಾತಿ” ಎಂದು. ಇಲ್ಲಿ ಜನರಲ್ ಕ್ಯಟಗರಿ ಎಂದರೆ ಯಾರು? ಜನರಲ್ ಕ್ಯಟಗರಿಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಮುದಾಯಗಳ ಎಲ್ಲಾ ಜನರೂ ಬರುತ್ತಾರೆ ತಾನೆ? ಜನರಲ್ ಕ್ಯಟಗರಿ ಎಂದರೆ ಹೊಲೆಯರು, ಮಾದಿಗರು, ಲಂಬಾಣಿಗಳು, ಮುಸ್ಲೀಮರು, ಲಿಂಗಾಯತರು, ಒಕ್ಕಲಿಗರು, ಕುರುಬರು, ಬೇಡರು, ಬ್ರಾಹ್ಮಣರು ಎಲ್ಲರಿಗೂ ಸೇರಿದ್ದು ತಾನೆ? ಹಾಗಿದ್ದರೆ ಅವರಿಗೂ ಈ 10%ನಲ್ಲಿ ಮೀಸಲಾತಿ ಸಿಗುತ್ತದೆಯೆ? ಪಾರ್ಲಿಮೆಂಟಿನಲ್ಲಿ ಪಾಸಾದ ಮಸೂದೆಯ ಪ್ರಕಾರ ಇಲ್ಲ. ಅದರ ಪ್ರಕಾರ SC, ST ಮತ್ತು ಲಿಂಗಾಯತ ಮತ್ತು ಒಕ್ಕಲಿಗರನ್ನೂ ಒಳಗೊಂಡ OBC ಕ್ಯಟಗರಿಯ ಜನರನ್ನು ಹೊರತುಪಡಿಸಿ ಜನರಲ್ ಕ್ಯಟಗರಿಯಲ್ಲಿರುವ ಮಂದಿಗೆ ಮಾತ್ರ ಮೀಸಲು. ಇವರೆಲ್ಲರನ್ನು ಹೊರತುಪಡಿಸಿದ ಜನರಲ್ ಕ್ಯಟಗರಿ ಎಂದರೆ ಕರ್ನಾಟಕದಲ್ಲಿ ಬ್ರಾಹ್ಮಣರು ಮಾತ್ರ. ಅಂದರೆ ಅವರಿಗೆ ಮಾತ್ರ ಈ 10% ಮೀಸಲು.
ಕೊನೆಯದಾಗಿ, ಆ ಐಎಎಸ್ ಅಧಿಕಾರಿ ಎತ್ತಿದ ಮೂಲ ಪ್ರಶ್ನೆಗೆ ಬರೋಣ. ಇಷ್ಟೆಲ್ಲಾ ದೊಡ್ಡ ಮಟ್ಟದ ಅನ್ಯಾಯವಾಗುತ್ತಿದ್ದರೂ ದೇಶಾದ್ಯಂತ ಪ್ರತಿರೋಧ ಏಕೆ ಭುಗಿಲೇಳುತ್ತಿಲ್ಲ?
ನನಗನ್ನಿಸಿದ ಮಟ್ಟಿಗೆ ಇದರಲ್ಲಿ ಎರಡು ಅಂಶಗಳು ಕೆಲಸ ಮಾಡಿವೆ. ಮೊದಲನೆಯದು, ಈಗಾಗಲೇ ಮೀಸಲಾತಿ ಪಡೆಯುತ್ತಿರುವ ದಲಿತರು, ಲಂಬಾಣಿಗಳು, ವಡ್ಡರು, ಬೇಡರು, ಕುರುಬರು, ಮುಸ್ಲೀಮರು, ಲಿಂಗಾಯತರು, ಒಕ್ಕಲಿಗರಿಗೆ ಯಾವ ತೊಂದರೆಯೂ ಆಗುವುದಿಲ್ಲ, ಅವರಿಗೆ ನೀಡಿರುವ ಮೀಸಲಾತಿಯಲ್ಲಿ ಎಳ್ಳಷ್ಟನ್ನೂ ಕಿತ್ತುಕೊಳ್ಳುವುದಿಲ್ಲ ಎಂದು ಹೇಳಲಾಗಿದೆ. ಅದು ನಿಜ ಕೂಡ. ನಮ್ಮ ಮೀಸಲಾತಿಗೇನೂ ತೊಂದರೆಯಾಗಿಲ್ಲವಲ್ಲ ಅಂತ ಈ ಸಮುದಾಯಗಳು ಮತ್ತು ಅವುಗಳ ನಾಯಕರು ಸುಮ್ಮನಾಗಿದ್ದಾರೆ.
ಎರಡನೆಯದಾಗಿ, ಮೇಲ್ಜಾತಿಯ ಬಡವರಿಗೆ ಅಥವಾ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಲಾಗುತ್ತಿದೆ ಎಂದು ಬಿಂಬಿಸಲಾಗಿದೆ. ಬಡವರು ಅಂದಾಗ ಅವರಿಗೂ ಕೂಡ ಸೌಲಭ್ಯ ದೊರಕಲಿ ಬಿಡು ಎಂಬ ಭಾವನೆ ಮೂಡಿರುವುದಕ್ಕೆ ಸಾಕು. ಇನ್ನೊಂದೆಡೆ ಮೇಲ್ಜಾತಿಯ ಬಡವರಿಗೆ ಅಂದಾಕ್ಷಣ ಸಮಾಜದಲ್ಲಿ ವಾಸ್ತವದಲ್ಲಿ ಮೇಲ್ಜಾತಿಗಳೇ ಆಗಿರುವ ಲಿಂಗಾಯತರು ಮತ್ತು ಒಕ್ಕಲಿಗರು ತಮಗೂ ಇದರಲ್ಲಿ ಪಾಲು ಸಿಗುತ್ತೆ ಎಂಬ ಭ್ರಮಿಸಿರಲಿಕ್ಕೂ ಸಾಧ್ಯವಿದೆ.
ಸಾರಾಂಶ ಇಷ್ಟೆ. ಅತ್ಯಂತ ಮುಂದುವರಿದ ಹಾಗೂ ಜನಸಂಖ್ಯೆಯಲ್ಲಿ ತೀರಾ ಕಡಿಮೆ ಇರುವ ಜಾತಿಯೊಂದಕ್ಕೆ ಅತ್ಯಂತ ಹಿಂದುಳಿದ ಜಾತಿಗಳಿಗಿಂತಲೂ, ಜನಸಂಖ್ಯೆಯಲ್ಲಿ ಅತ್ಯಂತ ಹೆಚ್ಚಿರುವ ಜಾತಿಗಳಿಗಿಂತಲೂ ಹೆಚ್ಚಿನ ಮೀಸಲಾತಿಯನ್ನು ಒದಗಿಸಲಾಗಿದೆ. ಮೇಲಾಗಿ ಈ ಜಾತಿಯಲ್ಲಿ ಇರುವ ಬಡವರ ಸಂಖ್ಯೆಗಿಂತಲೂ ಹೆಚ್ಚು ಮೀಸಲಾತಿಯನ್ನು ನೀಡಲಾಗಿದೆ. ಇದು ಸಾಮಾಜಿಕ ನ್ಯಾಯ ನೀತಿಯ ಅಣಕವಾಗುತ್ತದೆ. ಮೀಸಲಾತಿ ಉದ್ದೇಶ ಏನಾಗಿದೆಯೋ ಅದನ್ನೇ ಅಪಹಾಸ್ಯ ಮಾಡಿದಂತಾಗುತ್ತದೆ.
ಮೋದಿ ಸರ್ಕಾರದ ಈ ನಿರ್ಣಯದಿಂದ ತಾವು ಕಳೆದುಕೊಂಡಿದ್ದೇನು ಎಂಬುದು ಲಿಂಗಾಯತರಿಗೆ, ಒಕ್ಕಲಿಗರಿಗೆ, ಕುರುಬರಿಗೆ, ಮುಸ್ಲೀಮರಿಗೆ, ದಲಿತರಿಗೆ, ಬೇಡರಿಗೆ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಈಗಲೂ ಅರ್ಥವಾಗದಿದ್ದರೆ ಯಾರೇನು ಮಾಡೋಕಾಗುತ್ತದೆ?
– ಕುಮಾರ್ ಬುರಡಿಕಟ್ಟಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


