ಬಹಿರಂಗ
ಮೇಲ್ಜಾತಿಗೆ ನೀಡಿದ 10% ಮೀಸಲಾತಿ ಲಿಂಗಾಯತರು, ಒಕ್ಕಲಿಗರನ್ನೂ ಒಳಗೊಂಡಂಡಂತೆ ಇಡೀ ಹಿಂದುಳಿದ ವರ್ಗಗಳಿಗೆ ಮಾಡಿದ ಚಾರಿತ್ರಿಕ ಅನ್ಯಾಯ..!
ನಿನ್ನೆ ಸಂಜೆ ಪತ್ರಿಕೆಗೆ ಕಳಿಸಬೇಕಾದ ಎಲ್ಲಾ ಸುದ್ದಿಗಳನ್ನು ಕಳಿಸಿ ವಾಟ್ಸಾಪು, ಫೇಸ್ಬುಕ್ಕು ಅಂತ ಹರಟೆ ಶುರು ಮಾಡುವ ಹೊತ್ತಿಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಫೋನ್ ಮಾಡಿದರು. ಸ್ವಲ್ಪ ಬೇಸರ, ಆತಂಕ, ಆಶ್ಚರ್ಯ, ಜಿಗುಪ್ಸೆ, ಸಿಟ್ಟುಗಳ ಮಿಶ್ರಣದಂತಿದ್ದವು ಅವರ ಮಾತುಗಳು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮೇಲ್ಜಾತಿಗಳಿಗೆ ನೀಡಿದ ಶೇಕಡ 10ರಷ್ಟು ಮೀಸಲಾತಿ ಅವರ ಈ ಕೋಪ-ಬೇಸರಕ್ಕೆ ಕಾರಣವಾಗಿತ್ತು. ಇಂತಹದ್ದೊಂದು ಪ್ರಸ್ತಾಪ ಬಂದ ಕೂಡಲೇ ಇದನ್ನು ವಿರೋಧಿಸಿ ಇಡೀ ದೇಶಾದ್ಯಂತ ಹಿಂದುಳಿದ ವರ್ಗಗಳ ಹೋರಾಟಗಳು ಭುಗಿಲೇಳುತ್ತವೆ ಎಂದು ಅವರು ನಿರೀಕ್ಷಿಸಿದ್ದರು. ಆದರೆ, ತಮಗೇನೂ ಆಗೇ ಇಲ್ಲವೆಂಬಂತೆ ಎಲ್ಲರೂ ಸುಮ್ಮನಾಗಿಬಿಟ್ಟಿರುವುದು ಅವರ ಆತಂಕಕ್ಕೆ ಕಾರಣವಾಗಿತ್ತು. ಹಿಂದುಳಿದ ವರ್ಗಗಳ ಹಿತಾಸಕ್ತಿಗಳನ್ನು ಪ್ರತಿನಿಧಿಸುತ್ತೇವೆಂದು ಅಬ್ಬರಿಸಿ ಬೊಬ್ಬಿಡುವ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಇದಕ್ಕೆ ಮೌನ ಸಮ್ಮತಿ ಸೂಚಿಸಿದ್ದು ಅವರ ದುಗುಡವನ್ನುಹೆಚ್ಚಿಸಿತ್ತು. ಹೆಚ್ಚೂ ಕಮ್ಮಿ ಅರ್ಧ ಗಂಟೆ ಅವರ ಜೊತೆ ಮಾತಾಡಿದ ಮೇಲೆ ನನಗೂ ಅದರ ಬಗ್ಗೆ ಸ್ವಲ್ಪ ಸ್ಪಷ್ಟತೆ ಸಿಕ್ಕಿತು. ಅವರೊಂದಿಗಿನ ಸಂಭಾಷಣೆಯ ಸಾರ, ನಾನೂ ಒಂದಿಷ್ಟು ಕೆದಕಿ ತೆಗೆದ ಮಾಹಿತಿ ಸೇರಿಸಿ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.
ನಾನು ಮೊಟ್ಟ ಮೊದಲು ಮಾಡಿದ ಕೆಲಸ ಎಂದರೆ ಈ ವಿಷಯವಾಗಿ ಪಾರ್ಲಿಮೆಂಟಿನಲ್ಲಿ ಅಂಗೀಕಾರವಾದ ಮೂಲ ಸಂವಿಧಾನ ತಿದ್ದುಪಡಿ ಮಸೂದೆಯನ್ನು (THE CONSTITUTION (ONE HUNDRED AND TWENTY-FOURTH AMENDMENT) BILL, 2019) ಹುಡುಕಿ ತೆಗೆದು ಓದಿದ್ದು. ಇದು ನಮ್ಮ ಸಂವಿಧಾನಕ್ಕೆ ಮಾಡುತ್ತಿರುವ 124ನೇ ತಿದ್ದುಪಡಿ. ಇದರ ಮೂಲಕ ಸಂವಿಧಾನದ 15ನೇ ವಿಧಿಯಲ್ಲಿ ಈಗಾಗಲೇ 5 ಕ್ಲಾಸುಗಳಿದ್ದು ಅದರಲ್ಲಿ ಈಗ 6ನೇ ಕ್ಲಾಸನ್ನು ಸೇರಿಸಲಾಗಿದೆ. ಅದರ ಸಾರಾಂಶ ಹೀಗಿದೆ:
‘(6) Nothing in this article or sub-clause (g) of clause (1) of article 19 or clause (2) of article 29 shall prevent the State from making,—
(a) any special provision for the advancement of any economically weaker sections of citizens other than the classes mentioned in clauses (4) and (5); and
(b) any special provision for the advancement of any economically weaker sections of citizens other than the classes mentioned in clauses (4) and (5) in so far as such special provisions relate to their admission to educational institutions including private educational institutions, whether aided or unaided by the State, other than the minority educational institutions referred to in clause (1) of article 30, which in the case of reservation would be in addition to the existing reservations and subject to a maximum of ten per cent. of the total seats in each category.
ಜೊತೆಗೆ ಸಂವಿಧಾನದ 16ನೇ ವಿಧಿಗೂ ತಿದ್ದುಪಡಿ ಮಾಡಲಾಗಿದ್ದು ಅಲ್ಲೂ ಹೆಚ್ಚೂ ಕಮ್ಮಿ ಇದೇ ಸಾರಾಂಶವಿದೆ.
ಮೇಲಿನ ಈ ಪ್ಯಾರಾಗಳ ಸಾರಾಂಶ ಏನೆಂದರೆ, ಸಂವಿಧಾನದ 4 ಮತ್ತು 5ನೇ ಕ್ಲಾಸುಗಳಲ್ಲಿರುವ ಸಮುದಾಯಗಳನ್ನು ಹೊರತುಪಡಿಸಿ ಉಳಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇಕಡ 10ರಷ್ಟು ಮೀಸಲಾತಿ ನೀಡುವುದಕ್ಕೆ ಪ್ರಭುತ್ವಕ್ಕೆ ಯಾವುದೇ ಅಡ್ಡಿಯಿಲ್ಲ.
ಸಂವಿಧಾನದ 4 ಮತ್ತು 5ನೇ ವಿಧಿಯಲ್ಲಿರುವ ಸಮುದಾಯಗಳನ್ನು ಹೊರತುಪಡಿಸಿ ಎಂದಾಕ್ಷಣ ಆ ಸಮುದಾಯಗಳು ಯಾವವು ಎಂಬ ಪ್ರಶ್ನೆ ಹುಟ್ಟಿತು. ಅದನ್ನು ಬಗೆಹರಿಸಿಕೊಳ್ಳುವುದಕ್ಕಾಗಿ ನಮ್ಮ ಸಂವಿಧಾನದ ಪುಟಗಳನ್ನು ತಿರುವಿ ಹಾಕಿದೆ. ಆ ಸಮುದಾಯಗಳು ಎಂದರೆ ಅನುಸೂಚಿತ ಜಾತಿಗಳು (SCs), ಅನುಸೂಚಿತ ಬುಡಕಟ್ಟುಗಳು (STs) ಮತ್ತು ಹಿಂದುಳಿದ ವರ್ಗಗಳು (OBCs). ಅಂದರೆ ಈ ಮೂರು ವಿಭಾಗಗಳ ಸಮುದಾಯಗಳನ್ನು ಹೊರತುಪಡಿಸಿ ಉಳಿದವರಿಗೆ ಈ ಶೇಕಡ 10% ಮೀಸಲಾತಿ ಸೌಲಭ್ಯ ದೊರಕಲಿದೆ ಎಂದಾಯಿತು.
ಇಲ್ಲಿಯ ತನಕ ಅನುಸೂಚಿತ ಜಾತಿಗಳಿಗೆ, ಅನುಸೂಚಿತ ಬುಡಕಟ್ಟುಗಳಿಗೆ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಒಟ್ಟು ಮೀಸಲಾತಿಯ ಪ್ರಮಾಣ ಶೇಕಡ 50%. ಇದು Reserved ಕ್ಯಟಗರಿ. ಹಿಂದುಳಿದವರಿಗೆ ನೀಡಲಾಗುವ ಮೀಸಲಾತಿಯ ಪ್ರಮಾಣವನ್ನು ಶೇಕಡ 50%ಕ್ಕಿಂತ ಹೆಚ್ಚು ಮಾಡಬಾರದು ಎಂದು ಸುಪ್ರೀಂ ಕೋರ್ಟು ಆದೇಶವಿದೆ.
ಉಳಿದ 50% ಜನರಲ್ ಕ್ಯಟಗರಿಗೆ ಮೀಸಲು. ಇಲ್ಲಿ ಜನರಲ್ ಕ್ಯಟಗರಿ ಎಂದರೆ Unreserved ಅಥವಾ It is open to all ಎಂದರ್ಥ. Reserved ಕ್ಯಟಗರಿಯಲ್ಲಿ ಯಾವ ಯಾವ ಸಮುದಾಯಕ್ಕೆ ಎಷ್ಟೆಷ್ಟು ಮೀಸಲಾತಿ ನೀಡಲಾಗಿದೆಯೋ ಆ ಸಮುದಾಯವಷ್ಟೇ ಅದನ್ನು ಬಳಸಲು ಸಾಧ್ಯ. ಬೇರೆ ಸಮುದಾಯಗಳು ಆ ಮೀಸಲಾತಿಗೆ ಕೈಹಾಕುವಂತಿಲ್ಲ. Unreserved ಅಥವಾ Open ಕ್ಯಟಗರಿಯು ಅದರ ಹೆಸರೇ ಸೂಚಿಸುವಂತೆ ಯಾರು ಬೇಕಾದರೂ ಸ್ಪರ್ಧಿಸಿ ಮೆರಿಟ್ ಆಧಾರದಲ್ಲಿ ಸೀಟು/ಹುದ್ದೆ ಪಡೆದುಕೊಳ್ಳಬಹುದು. ಅಂದರೆ, ಎಸ್ಸಿ, ಎಸ್ಟಿ, ಓಬಿಸಿಯವರೂ ಈ unreserved ಅಥವಾ ಜನರಲ್ ಕ್ಯಟಗರಿಯಲ್ಲಿ ಸ್ಪರ್ಧಿಸಿ ಮೆರಿಟ್ ಆಧಾರದಲ್ಲಿ ಸೀಟು/ಹುದ್ದೆ ಪಡೆದುಕೊಳ್ಳಬಹುದು.
ಯಾವುದಾದರೂ ಹುದ್ದೆಗಳನ್ನು ಭರ್ತಿಮಾಡುವಾಗ ಮೊದಲು ಜನರಲ್ ಕ್ಯಟಗರಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಅಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದವರು, ಮುಂದುವರೆದವರು ಎಲ್ಲರನ್ನೂ ಮೆರಿಟ್ ಆಧಾರದಲ್ಲಿ ತೂಗಿ ಆಯ್ಕೆ ಮಾಡಲಾಗುತ್ತದೆ. ಜನರಲ್ ಕ್ಯಟಗರಿಯಲ್ಲಿ ಆಯ್ಕೆಯಾಗುವಷ್ಟು ಮೆರಿಟ್ ಇಲ್ಲದ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಮಂದಿಯನ್ನು ಅವರವರ ಕ್ಯಟಗರಿಗೆ ಮೀಸಲಿಟ್ಟಿರುವ ಹುದ್ದೆಗಳಿಗೆ ಪರಿಗಣಿಸಲಾಗುತ್ತದೆ.
ಈಗ ಕೇಂದ್ರ ಸರ್ಕಾರ ಮಾಡುತ್ತಿರುವ ಕೆಲಸ ಏನೆಂದರೆ, ಜನರಲ್ ಅಥವಾ Unreserved ಕ್ಯಟಗರಿಯಿಂದ ಶೇಕಡ 10ರಷ್ಟುನ್ನು ತೆಗೆದು ಅದನ್ನು ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಸೇರಿರದ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವರ್ಗಗಳಿಗೆ ನೀಡಲು ಹೊರಟಿದೆ. ಅಂದರೆ, ಸಾರಾಂಶದಲ್ಲಿ Unreserved ಅಥವಾ ಜನರಲ್ ಕ್ಯಟಗರಿಯ ಪ್ರಮಾಣ ಶೇಕಡ 50ರಿಂದ ಶೇಕಡ 40ಕ್ಕೆ ಇಳಿಯುತ್ತದೆ ಹಾಗೂ Reserved ಪ್ರಮಾಣ ಶೇಕಡ 50 ರಿಂದ ಶೇಕಡ 60ಕ್ಕೆ ಏರುತ್ತದೆ.
ಇಲ್ಲೊಂದು ಪ್ರಶ್ನೆ ಏಳುತ್ತದೆ. ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿಯ ಒಟ್ಟು ಪ್ರಮಾಣ ಶೇಕಡ 50ಕ್ಕಿಂತ ಹೆಚ್ಚು ಆಗಬಾರದು ಎಂದು ಸುಪ್ರೀಂ ಕೋರ್ಟು ನೀಡಿರುವ ತೀರ್ಪಿನ ಉಲ್ಲಂಘನೆಯಾಗುವುದಿಲ್ಲವೆ ಎಂದು. ಕೇಂದ್ರ ಕಾನೂನು ಮಂತ್ರಿ ರವಿಶಂಕರ್ ಪ್ರಸಾದ ಉಲ್ಲಂಘನೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಮೀಸಲಾತಿಯ ಪ್ರಮಾಣ ಶೇಕಡ 50ಕ್ಕಿಂತ ಹೆಚ್ಚಿರಬಾರದು ಎಂದು ಸಂವಿಧಾನವೇನೂ ಹೇಳಿಲ್ಲ, ಅದನ್ನು ಹೇಳಿದ್ದು ಕೋರ್ಟು ಎಂಬುದು ಅವರ ವಾದ. ಅಲ್ಲದೇ ಸುಪ್ರೀಂ ಕೋರ್ಟು ಹೇಳಿದ್ದು “ಹಿಂದುಳಿದ ವರ್ಗಗಳಿಗೆ (ಎಸ್ಸಿ, ಎಸ್ಟಿ, ಮತ್ತು ಇತರ ಹಿಂದುಳಿದ ವರ್ಗಗಳು ಒಳಗೊಂಡಂತೆ) ನೀಡಲಾಗುವ ಮೀಸಲಾತಿ ಪ್ರಮಾಣ ಶೇಕಡ 50ಕ್ಕಿಂತ ಹೆಚ್ಚಿರಬಾರದು ಎಂದಿದೆ. ಈಗ ನೀಡುತ್ತಿರುವ ಶೇಕಡ 10ರಷ್ಟು ಮೀಸಲಾತಿ ಅವರಿಗಲ್ಲ. ಅದು ಮುಂದುವರೆದವರಿಗಾಗಿ, ಮುಂದುವರಿದ ಸಮುದಾಯಗಳ ಬಡವರಿಗಾಗಿ. ಹಾಗಾಗಿ, ಅದು ಸುಪ್ರೀಂ ಕೋರ್ಟಿನ ಉಲ್ಲಂಘನೆಯಾಗುವುದಿಲ್ಲ ಎಂದೂ ಕೆಲವರು ವಾದಿಸುತ್ತಾರೆ. ಆದರೆ ಒಟ್ಟು ಮೀಸಲಾತಿಯ ಪ್ರಮಾಣ ಶೇಕಡಾ 50 ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾದರೂ ಅಂತಿಮವಾಗಿ ಸುಪ್ರೀಂ ಕೋರ್ಟಿನ ನ್ಯಾಯಿಕ ವಿಮರ್ಶೆಯನ್ನು ಸಂಸತ್ತು ತಳ್ಳಿಹಾಕಿದ ಸಂಭವವೂ ಇಲ್ಲದಿಲ್ಲ.
ಸಾರಾಂಶದಲ್ಲಿ ಮೀಸಲಾತಿಯ ಪ್ರಮಾಣ ಶೇಕಡ 60 ಹಾಗೂ ಜನರಲ್ ಕ್ಯಟಗರಿಯ ಪ್ರಮಾಣ ಶೇಕಡ 40 ಆದಂತೆ ಆಗುತ್ತದೆ. ಈಗ ಶೇಕಡ 60ರಷ್ಟು ಮೀಸಲಾತಿಯಲ್ಲಿ ಯಾವ ಯಾವ ಸಮುದಾಯಕ್ಕೆ ಎಷ್ಟು ಸಿಗುತ್ತದೆ ಎಂಬುದನ್ನು ನಾವು ಕಂಡುಕೊಳ್ಳಬೇಕು. ಇದನ್ನು ಮೀಸಲಾತಿಯನ್ನು ನಿಗದಿ ಮಾಡುವ ಅಧಿಕಾರ ರಾಜ್ಯಗಳಿಗೂ ಇರುವುದರಿಂದ ನಾವು ಯಾವುದಾದರೊಂದು ರಾಜ್ಯವನ್ನು ಉದಾಹರಣೆಯಾಗಿ ತೆಗೆದುಕೊಂಡರೆ ಈ ವಿಷಯವನ್ನು ಇನ್ನಷ್ಟು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ನಮ್ಮ ಕರ್ನಾಟಕವನ್ನೇ ಉದಾಹರಣೆಯಾಗಿ ತೆಗೆದುಕೊಳ್ಳೋಣ. ಇಲ್ಲಿ ಮೀಸಲಾತಿಯ ಪ್ರಮಾಣ ಈ ಕೆಳಗಿನಂತಿದೆ:
SCs: 15%
STs: 3%
OBC:32% (ಕ್ಯಟಗರಿ 1: 4% + ಕ್ಯಟಗರಿ 2A: 15% + ಕ್ಯಟಗರಿ 2B: 4% + ಕ್ಯಟಗರಿ 3A: 4% + ಕ್ಯಟಗರಿ 3B: 5% = 32%)
ಒಟ್ಟು: 50%
ಜನರಲ್: 50%
ಈಗ ಮೀಸಲಾತಿಯ ಪ್ರಮಾಣ ಶೇಕಡ 60ಕ್ಕೆ ಏರಿದ ನಂತರ ಅದು ಈ ಕೆಳಗಿನಂತೆ ಆಗಲಿದೆ.
SCs: 15%
STs: 3%
OBC: 32% (ಕ್ಯಟಗರಿ 1: 4% +ಕ್ಯಟಗರಿ 2A: 15% +ಕ್ಯಟಗರಿ 2B: 4% + ಕ್ಯಟಗರಿ 3A: 4% + ಕ್ಯಟಗರಿ 3B: 5% = 32%)
ಈ ಮೇಲಿನ ವರ್ಗಗಳನ್ನು ಹೊರತುಪಡಿಸಿದ ಬಡವರಿಗೆ (ಅರ್ಥಾತ್ ನಮ್ಮ ರಾಜ್ಯದಲ್ಲಿ ಬ್ರಾಹ್ಮಣರಿಗೆ): 10%
ಒಟ್ಟು: 60%
ಜನರಲ್: 40%
ಇಲ್ಲಿ ಗಮನಿಸಬೇಕಾದ ಒಂದು ಅಂಶವಿದೆ. ನಮ್ಮಲ್ಲಿ ಸಾಮಾನ್ಯವಾಗಿ SC ಯಾರು, ST ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, OBC ಯಾರು ಎಂಬುದರ ಬಗ್ಗೆ ಬಹಳಷ್ಟು ಸಾಮಾನ್ಯ ಜನರಿಗೆ ಗೊಂದಲಗಳಿವೆ. ಉದಾಹರಣೆಗೆ, ಬಹಳಷ್ಟು ಲಿಂಗಾಯತರು, ಒಕ್ಕಲಿಗರು ತಾವು OBC ಕ್ಯಟಗರಿಗೆ ಸೇರಿದವರೆಂದು, ತಮಗೂ ಮೀಸಲಾತಿ ಸೌಕರ್ಯ ಕಲ್ಪಿಸಲಾಗಿದೆ ಎಂಬುದನ್ನು ಮರೆತು ತಾವು ಮುಂದುವರಿದವರು ಅಥವಾ ಮೇಲ್ವರ್ಗದವರು ಎಂದು ಭಾವಿಸಿದ್ದಾರೆ. ವಾಸ್ತವದಲ್ಲಿ ಸಾಮಾಜಿಕವಾಗಿ ಅವರು ಮೇಲ್ಜಾತಿಗಳೇ ಆಗಿದ್ದರೂ ಕಾನೂನಿನಡಿಯಲ್ಲಿ ಅವರೂ ಕೂಡ OBC ಕ್ಯಟಗರಿಗೆ ಸೇರಿದ್ದು ಅವರಿಗೂ ಮೀಸಲಾತಿ ಸೌಕರ್ಯವಿದೆ. ಇದನ್ನೇ ಸಾರಾಂಶೀಕರಿಸಿ ಹೇಳುವುದಾದರೆ, ಕರ್ನಾಟಕದ ಮಟ್ಟಿಗೆ SC, ST ಮತ್ತು ಬ್ರಾಹ್ಮಣರನ್ನು ಹೊರತುಪಡಿಸಿದರೆ ಲಿಂಗಾಯತರು, ಒಕ್ಕಲಿಗರು, ಕುರುಬರು, ಈಡಿಗರು ಮುಂತಾದ ಉಳಿದೆಲ್ಲಾ ಸಮುದಾಯಗಳು OBCಯಲ್ಲಿ ಬರುತ್ತವೆ. ಈ ಹಿನ್ನೆಲೆಯಲ್ಲಿ ನಮ್ಮ ಮೀಸಲಾತಿ ಕೋಸ್ಟಕವನ್ನು ಜಾತಿ ಆಧಾರಿತವಾಗಿ ತಯಾರಿಸೋಣ.
- ಮಾದಿಗರು, ಹೊಲೆಯರು/ಚಲವಾದಿಗಳು, ಲಂಬಾಣಿ, ಭೋವಿ/ವಡ್ಡರ್ ಇತ್ಯಾದಿ 101 ಸಮುದಾಯಗಳಿಗೆ (SC) 15% ಮೀಸಲಾತಿ.
- ಬೇಡರು/ನಾಯಕರು/ವಾಲ್ಮಿಕಿ, ಹಕ್ಕಿಪಿಕ್ಕಿ, ಜೇನುಕುರುಬ, ಕಾಡುಕುರುಬ, ಕೊರಗ, ಮಲೆಕುಡಿಯ, ಇತ್ಯಾದಿ 49 ಸಮುದಾಯಗಳಿಗೆ (STs) 3% ಮೀಸಲಾತಿ.
- ಕ್ಯಟಗರಿ 1 ರಲ್ಲಿರುವ ಬೆಸ್ತ, ಉಪ್ಪಾರ, ಗೊಲ್ಲ, ಬೋಯಿ, ಬೋವಿ, ಕುಣಬಿ, ಬುಡಬುಡಕಿ, ದಲಿತ ಕ್ರೈಸ್ತ, ಮೊದಲಾದ 95 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿರುವ 285 ಉಪಜಾತಿಗಳಿಗೆ (ಕೆಲವು ಕಡೆ ಸಂವಾದಿ ಪದಗಳು) 4% ಮೀಸಲಾತಿ.
- ಕ್ಯಟಗರಿ 2A ಅಡಿಯಲ್ಲಿ ಬರುವ ಅಗಸ, ದೇವಾಡಿಗ, ಈಡಿಗ, ಕುಂಬಾರ, ಕುರುಬ, ವಿಶ್ವಕರ್ಮ, ತಿಗಳ, ದೇವಾಂಗ, ಮೊದಲಾದ 102 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿಬರುವ 282 ಉಪಜಾತಿಗಳಿಗೆ 15% ಮೀಸಲಾತಿ.
- ಕ್ಯಟಗರಿ 2Bಯಲ್ಲಿ ಬರುವ ಮುಸ್ಲೀಮರಿಗೆ 4% ಮೀಸಲಾತಿ.
- ಕ್ಯಟಗರಿ 3Aನಲ್ಲಿ ಬರುವ ಒಕ್ಕಲಿಗರು/ಗೌಡರು, ಕೊಡಗರು ಮತ್ತು ಬಲಿಜ ಎಂಬ ಮೂರು ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 42 ಉಪಜಾತಿಗಳಿಗೆ ಸೇರಿ 4% ಮೀಸಲಾತಿ.
- ಕ್ಯಟಗರಿ 3Bನಲ್ಲಿ ಬರುವ ವೀರಶೈವ ಲಿಂಗಾಯತರು, ಮರಾಠರು, ಕ್ರಿಶ್ಚಿಯನ್ನರು, ಬಂಟರು, ಜೈನರು ಮತ್ತು ಸತನಿ ಎಂಬ ಆರು ಜಾತಿಗಳು ಹಾಗೂ ಅದರ ಅಡಿಯಲ್ಲಿ ಬರುವ 30 ಉಪಜಾತಿಗಳಿಗೆ (ಈ ಉಪಜಾತಿಗಳಲ್ಲಿ ಲಿಂಗಾಯತರ ಉಪಜಾತಿಗಳು ಬರುತ್ತವೆ – ಹೆಳವ, ಅಂಬಿಗ, , ಮಡಿವಾಳ, ಕುಂಬಾರ, ಕುರುಬ ಭಜಂತ್ರಿ, ಅಕ್ಕಸಾಲಿಗ/ಬಡಿಗ, ಮೇದಾರ ಇತ್ಯಾದಿಗಳು) 5% ಮೀಸಲಾತಿ.
- ಈ ಮೇಲಿನ ವರ್ಗಗಳನ್ನು ಹೊರತುಪಡಿಸಿದ ಬಡವರಿಗೆ, ಅಂದರೆ ನಮ್ಮ ರಾಜ್ಯದಲ್ಲಿ ಬ್ರಾಹ್ಮಣರಿಗೆ 10% ಮೀಸಲಾತಿ.
ಈ ವಿವರಣೆಯನ್ನು ಏಕೆ ಕೊಡಬೇಕಾಯಿತು ಎಂದರೆ ಇಂದು ಬ್ರಾಹ್ಮಣರಿಗೆ ಕೊಡುತ್ತಿರುವ 10% ಮೀಸಲಾತಿಯನ್ನು ಬಲವಾಗಿ ಸಮರ್ಥಿಸುತ್ತಿರುವವರಲ್ಲಿ ಬಹುತೇಕರು ಸಮಾಜದಲ್ಲಿ ಮೇಲ್ಪದರದಲ್ಲಿರುವ ಆದರೆ ಕಾನೂನಿನಲ್ಲಿ OBC ಯಲ್ಲಿರುವ ಒಕ್ಕಲಿಗರು ಮತ್ತು ಲಿಂಗಾಯತರು. ಅವರು ತಮ್ಮ ತಮ್ಮ ಕ್ಯಟಗರಿಗಳಾದ 3A ಮತ್ತು 3Bಯನ್ನೊಮ್ಮೆ ನೋಡಿ, ಕರ್ನಾಟಕದ ಜನಸಂಖ್ಯೆಯಲ್ಲಿ ತಮ್ಮ ಜನಸಂಖ್ಯೆ ಎಷ್ಟಿದೆ ಮತ್ತು ತಮಗೆ ಎಷ್ಟು ಮೀಸಲಾತಿ ಕೊಡಲಾಗಿದೆ ಎಂಬುದನ್ನು ಗಮನಿಸಿ ಅದನ್ನು ಬ್ರಾಹ್ಮಣರ ಜನಸಂಖ್ಯೆಗೆ ಮತ್ತು ಅವರಿಗೆ ಈಗ ಕೊಟ್ಟಿರುವ ಮೀಸಲಾತಿಯೊಂದಿಗೆ ಹೋಲಿಸಿಕೊಳ್ಳಬೇಕು.
ಕ್ಯಟಗರಿ 3A ಅಡಿಯಲ್ಲಿ ಬರುವ ಒಕ್ಕಲಿಗರು, ಕೊಡಗರು, ಬಲಿಜ ಮತ್ತು ಇತರ ಉಪಜಾತಿಗಳು ಸೇರಿ ಕರ್ನಾಟಕ ಜನಸಂಖ್ಯೆಯ ಶೇಕಡ 15 ರಷ್ಟಾಗುತ್ತಾರೆ. ಅವರಿಗೆ ಸಿಗುತ್ತಿರುವುದು ಕೇವಲ 4% ಮೀಸಲಾತಿ.
ಕ್ಯಟಗರಿ 3Bನಲ್ಲಿ ಬರುವ ಲಿಂಗಾಯತರು, ವೀರಶೈವರು, ಕುಂಬಾರರು, ಭಜಂತ್ರಿಗಳು, ಅಕ್ಕಸಾಲಿಗರು/ವಿಶ್ವಕರ್ಮರು, ಮೇದಾರರು, ಕ್ರಿಶ್ಚಿಯನ್ನರು, ಮರಾಠರು, ಬಂಟರು, ಜೈನರು ಎಲ್ಲಾ ಸೇರಿದರೆ ಕರ್ನಾಟಕದ ಜನಸಂಖ್ಯೆಯ ಶೇಕಡ 18ರಷ್ಟಾಗಿಬಿಡುತ್ತಾರೆ. ಅವರಿಗೆ ಸಿಗುತ್ತಿರುವುದು ಕೇವಲ 5% ಮೀಸಲಾತಿ.
ಆದರೆ, ಕರ್ನಾಟಕದ ಜನಸಂಖ್ಯೆಯ ಶೇಕಡ 3 ರಷ್ಟಿರುವ ಅಥವಾ ಅದಕ್ಕಿಂತ ಕಡಿಮೆ ಇರುವ ಬ್ರಾಹ್ಮಣರಿಗೆ ಸಿಗುತ್ತಿರುವುದು 10% ಮೀಸಲಾತಿ!
ಇಷ್ಟೂ ಅರ್ಥವಾಗದಿದ್ದರೆ ಹೇಗೆ?
ಇನ್ನು ಜನರಲ್ ಕ್ಯಟಗರಿ 50% ನಿಂದ 40%ಗೆ ಇಳಿದಿದ್ದರ ಬಗ್ಗೆ ಮಾತನಾಡೋಣ. ಇಲ್ಲಿಯ ತನಕ ಜನರಲ್ ಕ್ಯಟಗರಿಯಲ್ಲಿ ಸಿಂಹಪಾಲು ಪಡೆಯುತ್ತಾ ಬಂದಿರುವವರು ಬ್ರಾಹ್ಮಣರೇ. ಅದರ ನಂತರದ ಸ್ಥಾನದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಬರುತ್ತಾರೆ. ದಲಿತರಿಗೆ ಮತ್ತು OBC ಒಳಗಿನ ಹಿಂದುಳಿದಿರುವ ವರ್ಗಗಳು ಜನರಲ್ ಕ್ಯಟಗರಿಯಲ್ಲಿ ಸ್ಪರ್ಧಿಸಿ ಸ್ಥಾನಗಳನ್ನು ಪಡೆಯುವುದು ಅಪರೂಪ. ಈಗ ಜನರಲ್ ಕ್ಯಟಗರಿಯಿಂದ 10% ಬ್ರಾಹ್ಮಣರ ಕ್ಯಟಗರಿಗೆ ಹೋಗಿದ್ದರಿಂದ ಉಳಿದ 40% ನಲ್ಲಿಯೇ ಮತ್ತೆ ಎಲ್ಲರೂ ಮತ್ತೆ ಗುದ್ದಾಡಬೇಕು. ಈಗ ಅಸಲಿಗೆ ಏನಾಗುತ್ತದೆ ಎಂದರೆ, ಇತ್ತ ಈ 40%ನಲ್ಲಿಯೂ ಬ್ರಾಹ್ಮಣರು ಸಿಂಹಪಾಲು ಪಡೆಯುತ್ತಾರೆ, ಅತ್ತ 10% ಮೀಸಲಾತಿಯಂತೂ ಅವರಿಗೇ ಮೀಸಲು.
ಒಂದು ಸರಳ ಅಂಕಗಣಿತದವನ್ನು ನೋಡೋಣ.
ಕರ್ನಾಟಕದಲ್ಲಿ 100 ತಹಶೀಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪರಿಭಾವಿಸಿಕೊಳ್ಳೋಣ. ಅದಕ್ಕೆ ಈ ಹೊಸ ಮೀಸಲಾತಿಯನ್ನು ಅನ್ವಯಿಸಿದರೆ ಈ ಕೆಳಗಿನಂತೆ ಹಂಚಿಕೆ ಮಾಡಬೇಕಾಗುತ್ತದೆ.
- ಮಾದಿಗ, ಹೊಲೆಯ/ಚಲವಾದಿ, ಲಂಬಾಣಿ, ಭೋವಿ/ವಡ್ಡರ್ ಇತ್ಯಾದಿ 101 ಸಮುದಾಯಗಳಿಗೆ (SCs): 15 ಸ್ಥಾನಗಳು
- ಬೇಡರು/ನಾಯಕರು/ವಾಲ್ಮಿಕಿ, ಹಕ್ಕಿಪಿಕ್ಕಿ, ಜೇನು ಕುರುಬ, ಕಾಡುಕುರುಬ, ಕೊರಗ, ಮಲೆಕುಡಿಯ, ಇತ್ಯಾದಿ 49 ಸಮುದಾಯಗಳಿಗೆ (STs): 3 ಸ್ಥಾನಗಳು
- ಕ್ಯಟಗರಿ 1 ರಲ್ಲಿರುವ 95 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿರುವ 285 ಉಪಜಾತಿಗಳಿಗೆ (ಕೆಲವು ಕಡೆ ಸಂವಾದಿ ಪದಗಳು): 4 ಸ್ಥಾನಗಳು.
- ಕ್ಯಟಗರಿ 2A ಅಡಿಯಲ್ಲಿ ಬರುವ 102 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 282 ಉಪಜಾತಿಗಳಿಗೆ ಸೇರಿ: 15ಸ್ಥಾನಗಳು
- ಕ್ಯಟಗರಿ 2Bಯಲ್ಲಿ ಬರುವ ಮುಸ್ಲೀಮರಿಗೆ: 4 ಸ್ಥಾನಗಳು
- ಕ್ಯಟಗರಿ 3Aನಲ್ಲಿ ಬರುವ ಒಕ್ಕಲಿಗರು/ಗೌಡರು, ಕೊಡಗರು ಮತ್ತು ಬಜಿಜ ಎಂಬ ಮೂರು ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 42 ಉಪಜಾತಿಗಳಿಗೆ: 4 ಸ್ಥಾನಗಳು.
- ಕ್ಯಟಗರಿ 3Bನಲ್ಲಿ ಬರುವ ವೀರಶೈವ ಲಿಂಗಾಯತರು, ಮರಾಠರು, ಕ್ರಿಶ್ಚಿಯನ್ನರು, ಬಂಟರು, ಜೈನರು ಮತ್ತು ಸತನಿ ಎಂಬ ಆರು ಜಾತಿಗಳು ಹಾಗೂ ಅದರ ಅಡಿಯಲ್ಲಿ ಬರುವ 30 ಉಪಜಾತಿಗಳು – ಹೆಳವ, ಅಂಬಿಗ, , ಮಡಿವಾಳ, ಕುಂಬಾರ, ಕುರುಬ ಭಜಂತ್ರಿ, ಅಕ್ಕಸಾಲಿಗ/ಬಡಿಗ, ಮೇದಾರ ಇತ್ಯಾದಿಗಳು – ಇವರೆಲ್ಲರಿಗೆ ಸೇರಿ: 5 ಸ್ಥಾನಗಳು.
- ಬ್ರಾಹ್ಮಣರಿಗೆ: 10 ಸ್ಥಾನಗಳು.
ಇದುವರೆಗಿನ ಜನರಲ್ ಕ್ಯಟಗರಿಯ ಉಪಯೋಗದ ಅನುಭವವನ್ನು ನೋಡಿದರೆ ಅಲ್ಲಿ ಉಳಿಯುವ 40 ಸ್ಥಾನಗಳ ಪೈಕಿ 25 ಸ್ಥಾನಗಳು ಬ್ರಾಹ್ಮಣರಿಗೆ ಹೋಗುತ್ತವೆ, 10 ಸ್ಥಾನಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಸಾಪೇಕ್ಷವಾಗಿ ಮುಂದುವರೆದಿರುವ ಇತರ ಸಮುದಾಯಗಳ ಪಾಲಾಗುತ್ತವೆ. ಉಳಿದ 10 ಸ್ಥಾನಗಳನ್ನು SC, ST ಮತ್ತು ಇತರ OBC ಅಭ್ಯರ್ಥಿಗಳು ಪಡೆದುಕೊಳ್ಳುತ್ತಾರೆ.
ಅಂತಿಮವಾಗಿ 100 ತಹಶೀಲ್ದಾರರ ಪೈಕಿ:
ಕನಿಷ್ಠ 35 ತಹಶೀಲ್ದಾರರು ಬ್ರಾಹ್ಮಣರಾಗಿರುತ್ತಾರೆ (ಅವರ ಜನಸಂಖ್ಯೆ ಕೇವಲ 3% ಇದ್ದರೂ); 10 ತಹಶೀಲ್ದಾರರು ಲಿಂಗಾಯತರು, ಬಂಟರು, ಕ್ರಿಶ್ಚಿಯನ್ನರು, ಮರಾಠರ ಸಮುದಾಯಗಳಿಗೆ ಸೇರಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 18 ಆಗಿದ್ದರೂ); 10 ತಹಶೀಲ್ದಾರರು ಒಕ್ಕಲಿಗರು, ಕೊಡಗರು, ಬಲಿಜರು ಆಗಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 15 ರಷ್ಟಾಗಿದ್ದರೂ); 6 ತಹಶೀಲ್ದಾರರು ಮುಸ್ಲೀಮರಾಗಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 16ರಷ್ಟಿದ್ದರೂ); 18 ತಹಶೀಲ್ದಾರರು ಮಾದಿಗರು, ಹೊಲೆಯರು/ಚಲವಾದಿಗಳು, ಬೋವಿಗಳು/ವಡ್ಡರು ಆಗಿರುತ್ತಾರೆ (ಅವರ ಜನಸಂಖ್ಯಾ ಪ್ರಮಾಣ ಶೇಕಡ 20ರಷ್ಟು ಇದ್ದಾಗ್ಯೂ); 5 ತಹಶೀಲ್ದಾರರು ವಾಲ್ಮಿಕಿ/ ಬೇಡರು ಮತ್ತು ಇತರ ಬುಡಕಟ್ಟು ಜನರಾಗಿರುತ್ತಾರೆ; 6 ತಹಶೀಲ್ದಾರರು ಕುರುಬರಾಗಿರುತ್ತಾರೆ; ಉಳಿದ ಸಮುದಾಯಗಳಿಗೆ ಸೇರಿದ ತಹಶೀಲ್ದಾರರು 10 ಜನ ಇರುತ್ತಾರೆ.
ಈ 10% ಮೀಸಲಾತಿ ಬರದೇ ಹೋಗಿದ್ದರೆ ಬ್ರಾಹ್ಮಣರಿಗೆ 10 ಸ್ಥಾನಗಳು ಕಡಿಮೆ ಸಿಗುತ್ತಿದ್ದವು ಹಾಗೂ ಅವು ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ, ಕುರುಬ ಮತ್ತಿತರ ಹಿಂದುಳಿದ ವರ್ಗಗಳ ಪಾಲಾಗುತ್ತಿದ್ದವು.
ಪ್ರತಿಷ್ಠಿತ ಪತ್ರಿಕೆಗಳನ್ನೂ ಒಳಗೊಂಡಂತೆ ಎಲ್ಲಾ ಮಾಧ್ಯಮಗಳು ಈ ವಿಷಯವನ್ನು ತಪ್ಪಾಗಿ ವರದಿ ಮಾಡಿದವು ಎಂದು ನನಗನ್ನಿಸುತ್ತದೆ. ಏಕೆಂದರೆ ಎಲ್ಲಾ ಪತ್ರಿಕೆಗಳು ವರದಿ ಮಾಡಿದ್ದು “ಆರ್ಥಿಕವಾಗಿ ಹಿಂದುಳಿದ ಜನರಲ್ ಕ್ಯಟಗರಿಯ ಜನರಿಗೆ ಶೇಕಡ 10% ಮೀಸಲಾತಿ” ಎಂದು. ಇಲ್ಲಿ ಜನರಲ್ ಕ್ಯಟಗರಿ ಎಂದರೆ ಯಾರು? ಜನರಲ್ ಕ್ಯಟಗರಿಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಮುದಾಯಗಳ ಎಲ್ಲಾ ಜನರೂ ಬರುತ್ತಾರೆ ತಾನೆ? ಜನರಲ್ ಕ್ಯಟಗರಿ ಎಂದರೆ ಹೊಲೆಯರು, ಮಾದಿಗರು, ಲಂಬಾಣಿಗಳು, ಮುಸ್ಲೀಮರು, ಲಿಂಗಾಯತರು, ಒಕ್ಕಲಿಗರು, ಕುರುಬರು, ಬೇಡರು, ಬ್ರಾಹ್ಮಣರು ಎಲ್ಲರಿಗೂ ಸೇರಿದ್ದು ತಾನೆ? ಹಾಗಿದ್ದರೆ ಅವರಿಗೂ ಈ 10%ನಲ್ಲಿ ಮೀಸಲಾತಿ ಸಿಗುತ್ತದೆಯೆ? ಪಾರ್ಲಿಮೆಂಟಿನಲ್ಲಿ ಪಾಸಾದ ಮಸೂದೆಯ ಪ್ರಕಾರ ಇಲ್ಲ. ಅದರ ಪ್ರಕಾರ SC, ST ಮತ್ತು ಲಿಂಗಾಯತ ಮತ್ತು ಒಕ್ಕಲಿಗರನ್ನೂ ಒಳಗೊಂಡ OBC ಕ್ಯಟಗರಿಯ ಜನರನ್ನು ಹೊರತುಪಡಿಸಿ ಜನರಲ್ ಕ್ಯಟಗರಿಯಲ್ಲಿರುವ ಮಂದಿಗೆ ಮಾತ್ರ ಮೀಸಲು. ಇವರೆಲ್ಲರನ್ನು ಹೊರತುಪಡಿಸಿದ ಜನರಲ್ ಕ್ಯಟಗರಿ ಎಂದರೆ ಕರ್ನಾಟಕದಲ್ಲಿ ಬ್ರಾಹ್ಮಣರು ಮಾತ್ರ. ಅಂದರೆ ಅವರಿಗೆ ಮಾತ್ರ ಈ 10% ಮೀಸಲು.
ಕೊನೆಯದಾಗಿ, ಆ ಐಎಎಸ್ ಅಧಿಕಾರಿ ಎತ್ತಿದ ಮೂಲ ಪ್ರಶ್ನೆಗೆ ಬರೋಣ. ಇಷ್ಟೆಲ್ಲಾ ದೊಡ್ಡ ಮಟ್ಟದ ಅನ್ಯಾಯವಾಗುತ್ತಿದ್ದರೂ ದೇಶಾದ್ಯಂತ ಪ್ರತಿರೋಧ ಏಕೆ ಭುಗಿಲೇಳುತ್ತಿಲ್ಲ?
ನನಗನ್ನಿಸಿದ ಮಟ್ಟಿಗೆ ಇದರಲ್ಲಿ ಎರಡು ಅಂಶಗಳು ಕೆಲಸ ಮಾಡಿವೆ. ಮೊದಲನೆಯದು, ಈಗಾಗಲೇ ಮೀಸಲಾತಿ ಪಡೆಯುತ್ತಿರುವ ದಲಿತರು, ಲಂಬಾಣಿಗಳು, ವಡ್ಡರು, ಬೇಡರು, ಕುರುಬರು, ಮುಸ್ಲೀಮರು, ಲಿಂಗಾಯತರು, ಒಕ್ಕಲಿಗರಿಗೆ ಯಾವ ತೊಂದರೆಯೂ ಆಗುವುದಿಲ್ಲ, ಅವರಿಗೆ ನೀಡಿರುವ ಮೀಸಲಾತಿಯಲ್ಲಿ ಎಳ್ಳಷ್ಟನ್ನೂ ಕಿತ್ತುಕೊಳ್ಳುವುದಿಲ್ಲ ಎಂದು ಹೇಳಲಾಗಿದೆ. ಅದು ನಿಜ ಕೂಡ. ನಮ್ಮ ಮೀಸಲಾತಿಗೇನೂ ತೊಂದರೆಯಾಗಿಲ್ಲವಲ್ಲ ಅಂತ ಈ ಸಮುದಾಯಗಳು ಮತ್ತು ಅವುಗಳ ನಾಯಕರು ಸುಮ್ಮನಾಗಿದ್ದಾರೆ.
ಎರಡನೆಯದಾಗಿ, ಮೇಲ್ಜಾತಿಯ ಬಡವರಿಗೆ ಅಥವಾ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಲಾಗುತ್ತಿದೆ ಎಂದು ಬಿಂಬಿಸಲಾಗಿದೆ. ಬಡವರು ಅಂದಾಗ ಅವರಿಗೂ ಕೂಡ ಸೌಲಭ್ಯ ದೊರಕಲಿ ಬಿಡು ಎಂಬ ಭಾವನೆ ಮೂಡಿರುವುದಕ್ಕೆ ಸಾಕು. ಇನ್ನೊಂದೆಡೆ ಮೇಲ್ಜಾತಿಯ ಬಡವರಿಗೆ ಅಂದಾಕ್ಷಣ ಸಮಾಜದಲ್ಲಿ ವಾಸ್ತವದಲ್ಲಿ ಮೇಲ್ಜಾತಿಗಳೇ ಆಗಿರುವ ಲಿಂಗಾಯತರು ಮತ್ತು ಒಕ್ಕಲಿಗರು ತಮಗೂ ಇದರಲ್ಲಿ ಪಾಲು ಸಿಗುತ್ತೆ ಎಂಬ ಭ್ರಮಿಸಿರಲಿಕ್ಕೂ ಸಾಧ್ಯವಿದೆ.
ಸಾರಾಂಶ ಇಷ್ಟೆ. ಅತ್ಯಂತ ಮುಂದುವರಿದ ಹಾಗೂ ಜನಸಂಖ್ಯೆಯಲ್ಲಿ ತೀರಾ ಕಡಿಮೆ ಇರುವ ಜಾತಿಯೊಂದಕ್ಕೆ ಅತ್ಯಂತ ಹಿಂದುಳಿದ ಜಾತಿಗಳಿಗಿಂತಲೂ, ಜನಸಂಖ್ಯೆಯಲ್ಲಿ ಅತ್ಯಂತ ಹೆಚ್ಚಿರುವ ಜಾತಿಗಳಿಗಿಂತಲೂ ಹೆಚ್ಚಿನ ಮೀಸಲಾತಿಯನ್ನು ಒದಗಿಸಲಾಗಿದೆ. ಮೇಲಾಗಿ ಈ ಜಾತಿಯಲ್ಲಿ ಇರುವ ಬಡವರ ಸಂಖ್ಯೆಗಿಂತಲೂ ಹೆಚ್ಚು ಮೀಸಲಾತಿಯನ್ನು ನೀಡಲಾಗಿದೆ. ಇದು ಸಾಮಾಜಿಕ ನ್ಯಾಯ ನೀತಿಯ ಅಣಕವಾಗುತ್ತದೆ. ಮೀಸಲಾತಿ ಉದ್ದೇಶ ಏನಾಗಿದೆಯೋ ಅದನ್ನೇ ಅಪಹಾಸ್ಯ ಮಾಡಿದಂತಾಗುತ್ತದೆ.
ಮೋದಿ ಸರ್ಕಾರದ ಈ ನಿರ್ಣಯದಿಂದ ತಾವು ಕಳೆದುಕೊಂಡಿದ್ದೇನು ಎಂಬುದು ಲಿಂಗಾಯತರಿಗೆ, ಒಕ್ಕಲಿಗರಿಗೆ, ಕುರುಬರಿಗೆ, ಮುಸ್ಲೀಮರಿಗೆ, ದಲಿತರಿಗೆ, ಬೇಡರಿಗೆ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಈಗಲೂ ಅರ್ಥವಾಗದಿದ್ದರೆ ಯಾರೇನು ಮಾಡೋಕಾಗುತ್ತದೆ?
– ಕುಮಾರ್ ಬುರಡಿಕಟ್ಟಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ5 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ1 day agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

