ದಿನದ ಸುದ್ದಿ
ಕಾಳೇನಹಳ್ಳಿ ಶ್ರೀ ಮ.ನಿ.ಪ್ರ. ರೇವಣಸಿದ್ದ ಮಹಾಸ್ವಾಮಿಗಳ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಸಂತಾಪ
ಸುದ್ದಿದಿನ,ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಕಾಳೇನಹಳ್ಳಿ ಶಿವಯೋಗ ಮಂದಿರದ ಪೂಜ್ಯ ಶ್ರೀ ಮ.ನಿ.ಪ್ರ. ರೇವಣಸಿದ್ದ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾಗಿದ್ದು, ಸಂಸದ ಬಿ.ವೈ. ರಾಘವೇಂದ್ರರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಡಿನಾಧ್ಯಂತ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ಶ್ರೀಗಳು 44 ವರ್ಷಗಳ ಕಾಲ ಮಠವನ್ನು ಮುನ್ನೆಡೆಸಿ ನಡೆದಾಡುವ ದೇವರೆಂದೇ ಕರೆಯಲ್ಪಡುತ್ತಿದ್ದರು. ಸಮಾಜಮುಖಿ ಚಿಂತನೆಗಳ ಮೂಲಕ ಜಾತಿ ಜನಾಂಗಗಳ ಬೇದವಿಲ್ಲದೇ ಎಲ್ಲಾ ಜನರಿಗೂ ಮಾರ್ಗದರ್ಶನ ನೀಡುತ್ತಿದ್ದರು.
ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದ ಶ್ರೀಗಳು ಕೃಷಿ ಬಗ್ಗೆ ಹೆಚ್ಚಿನ ಸಮಯ ವಿನಿಯೋಗಿಸುತ್ತಿದ್ದರು. ಮಕ್ಕಳಿಲ್ಲದ ದಂಪತಿಗಳಿಗೆ ವಿಶೇಷವಾಗಿ ಗಿಡಮೂಲಿಕೆ ಔಷಧವನ್ನು ನೀಡುವುದರ ಮೂಲಕ ನೆಮ್ಮದಿಯ ಬದುಕನ್ನು ಕಂಡುಕೊಳ್ಳಲು ಕಾರಣರಾಗಿದ್ದರು. ಕಳೆದ ಶುಕ್ರವಾರವಷ್ಟೇ ಮಠಕ್ಕೆ ಭೇಟಿ ನೀಡಿ ಪೂಜ್ಯ ಶ್ರೀಗಳ ಆಶೀರ್ವಾದ ಪಡೆದುಕೊಂಡಿದ್ದನ್ನು ಸ್ಮರಿಸುತ್ತಾ, ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿಯೂ ಸಹ ಕುಟುಂಬ ಸಮೇತ ಭೇಟಿ ನೀಡಿ ಪೂಜ್ಯ ಶ್ರೀಗಳ ಆರೋಗ್ಯ ವಿಚಾರಿಸಿಕೊಳ್ಳಲಾಗಿತ್ತು ಎಂದು ತಿಳಿಸಿದರು.
ಇದನ್ನೂ ಓದಿ |ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ
ತಂದೆಯವರಾದ ಶ್ರೀ ಬಿ.ಎಸ್. ಯಡಿಯೂರಪ್ಪರವರ ಮಾರ್ಗದರ್ಶಕರಾಗಿ ಅವರ ಶ್ರೇಯೋಭಿವೃದ್ಧಿ ಬಗ್ಗೆ ಯಾವಾಗಲೂ ಉತ್ತಮ ಸಲಹೆಗಳನ್ನು ನೀಡುತ್ತಿದ್ದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ಪೂಜ್ಯಶ್ರೀಗಳ ಅಗಲಿಕೆಯಿಂದ ನಾಡು ಒಬ್ಬ ಹಿರಿಯ ಮಾರ್ಗದರ್ಶಿಯನ್ನು ಕಳೆದುಕೊಂಡಂತಾಗಿದೆ. ಪೂಜ್ಯ ಶ್ರೀಗಳ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಸಮಸ್ತ ಭಕ್ತರಿಗೆ ಅವರ ಅಗಲಿಕೆಯ ದು:ಖ ಭರಿಸುವ ಶಕ್ತಿಯನ್ನು ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243