ದಿನದ ಸುದ್ದಿ
ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ
- ಗಿರೀಶ್ ಕುಮಾರ್ ಗೌಡ
ಸುದ್ದಿದಿನ,ವಿಜಯನಗರ:ಚುನಾವಣೆ ಸಂದರ್ಭದಲ್ಲಿ ನೀಡಿದ ಪ್ರಣಾಳಿಕೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು ಕಳೆದೆರಡು ವರ್ಷಗಳಿಂದ 90 ಸಾವಿರ ಕೋಟಿಗೂ ಹೆಚ್ಚು ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದೆ. ಇದರಿಂದ ರಾಜ್ಯದ ಆರ್ಥಿಕ ಅಭಿವೃದ್ದಿಯಲ್ಲಿ ಗಣನೀಯ ಸಾಧನೆ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.
ಅವರು ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ, ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಕಾರ್ಯಕ್ರಮವನ್ನು ಮೇ.20 ರಂದು ಸರ್ಕಾರದಿಂದ ಏರ್ಪಡಿಸಲಾಗಿದ್ದು, ಇದರ ಪೂರ್ವಸಿದ್ದತೆ ಪರಿಶೀಲನೆಗೆ ಆಗಮಿಸಿ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು, 2023 ರ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಪಕ್ಷ ಸರ್ಕಾರ ರಚನೆ ಮಾಡಿತು. ಮೊದಲ ಸಂಪುಟ ಸಭೆಯಲ್ಲಿಯೇ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತೀರ್ಮಾನಿಸಲಾಯಿತು. ಆದರೆ ವಿರೋಧ ಪಕ್ಷದವರು ಇದರಿಂದ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅನೇಕ ಟೀಕೆಯನ್ನು ಮಾಡಿದವು. ಅಂದು ಟೀಕೆ ಮಾಡಿದವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಇಂದು ನಕಲು ಮಾಡುವಂತಾಗಿದೆ. ಈಗ ಕರ್ನಾಟಕದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ್ದು, ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಳವಾಗಿದೆ. ಇದಕ್ಕೆ ನಿದರ್ಶನ 2024-25 ರಲ್ಲಿ ಸರ್ಕಾರದ ಬಜೆಟ್ ಗಾತ್ರ ರೂ.3,71,000 ಕೋಟಿ, 2025-26 ರಲ್ಲಿ ಇದು ರೂ.4,09,000 ಕೋಟಿರೂಗಳಿಗೆ ಏರಿಕೆಯಾಗಿರುವುದು ಒಂದು ವರ್ಷದಲ್ಲಿ 38,000 ಸಾವಿರ ಕೋಟಿ ರೂಗಳು ಸರ್ಕಾರದ ಹೆಚ್ಚುವರಿ ಆದಾಯವಾಗಿದೆ. ಬಜೆಟ್ ಮಂಡನೆಯನ್ನು ಸಂಗ್ರಹವಾಗುವ ತೆರಿಗೆ ಮತ್ತು ಆದಾಯವನ್ನು ಆಧರಿಸಿ ಬಜೆಟ್ ಸಿದ್ದಪಡಿಸಲಾಗುತ್ತದೆ. ಆದಾಯ ಇಲ್ಲದೇ ಬಜೆಟ್ ಗಾತ್ರ ಹೆಚ್ಚುತ್ತಿರಲಿಲ್ಲ ಎಂದರು.
ಗ್ಯಾರಂಟಿ ಯೋಜನೆಯಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗಿವೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಆದರೆ ಗ್ಯಾರಂಟಿ ಜೊತೆಗೆ ಅಭಿವೃದ್ದಿಗೂ ಅನುದಾನ ನೀಡಿದ್ದು ಅನೇಕ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇನ್ನೂರು, ಮುನ್ನೂರು ಮತ್ತು ಏಳುನೂರು ಕೋಟಿವರೆಗೆ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳಿಗಾಗಿ ರೂ.90,000 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಲಾಗಿದೆ. ವಿರೋಧ ಪಕ್ಷದವರು ಅಭಿವೃದ್ದಿಗೆ ಹಣವಿಲ್ಲ ಎಂದು ಹೇಳುತ್ತಿದ್ದು, 2024-25 ರಲ್ಲಿ ಆಸ್ತಿ ಸೃಜನೆಗಾಗಿ ರೂ.51,000 ಕೋಟಿ ವೆಚ್ಚ ಮಾಡಲಾಗಿದೆ. 2025-26 ರಲ್ಲಿ ಆಸ್ತಿ ಸೃಜನೆಗಾಗಿ ರೂ.83,000 ಕೋಟಿ ವರೆಗೆ ವೆಚ್ಚ ಮಾಡುತ್ತಿದ್ದು ಗ್ಯಾರಂಟಿಗೆ ರೂ.50,018 ಕೋಟಿ ಮೀಸಲಿರಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನವನ್ನೂ ಸಹ ಪೂರಕ ಬಜೆಟ್ಲ್ಲಿ ನೀಡಲಾಗುತ್ತದೆ. ಆದರೆ ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದೆ ಎಂದರು.
ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಬದ್ದ
ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಕೆಕೆಆರ್ಡಿಬಿಗೆ ಕಳೆದ ಬಜೆಟ್ನಲ್ಲಿ ರೂ.5,000 ಕೋಟಿ ರೂಗಳು ನೀಡಿದ್ದು, ಈ ವರ್ಷವೂ ಅಷ್ಟೇ ಅನುದಾನ ನೀಡಲಾಗಿದೆ. ಆದರೆ ಹಿಂದಿನ ಸರ್ಕಾರ ಕೊನೆ ವರ್ಷ ರೂ.3,000 ಕೋಟಿ ರೂಗಳನ್ನು ಕೆಕೆಆರ್ಡಿಬಿಗೆ ನೀಡಿತ್ತು. 371ಜೆ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು ಇದರ ಅಭಿವೃದ್ದಿಗೆ ಕೇಂದ್ರ ಅನುದಾನ ನೀಡಬೇಕಿತ್ತು. ಆದರೆ ಒಂದು ಬಿಡಿಗಾಸು, ಒಂದೇ ಒಂದು ರೂಪಾಯಿಯನ್ನು ನೀಡಿಲ್ಲ ಎಂದರು. ಮೇ.20 ರಂದು ಹೊಸಪೇಟೆಯಲ್ಲಿ ನಡೆಯುವ ಸಮಾರಂಭದಲ್ಲಿ 1,03,000 ಜನರಿಗೆ ಕಂದಾಯ ಇಲಾಖೆಯಿಂದ ಆಸ್ತಿಯ ಹಕ್ಕುಪತ್ರಗಳನ್ನು ನೀಡಲಾಗುತ್ತದೆ. ಕಳೆದೆರಡು ವರ್ಷಗಳಲ್ಲಿ ಸರ್ಕಾರ ಜನರಿಗಾಗಿ ಮಾಡಿದ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನರು ಬರಲಿದ್ದಾರೆ. ಅಂದಾಜು ಮೂರು ಲಕ್ಷಕ್ಕಿಂತ ಹೆಚ್ಚಿನ ಜನರು ಈ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಂಪುಟದ ಸಚಿವರು, ಶಾಸಕರು ಭಾಗವಹಿಸುತ್ತಿದ್ದಾರೆ. ಇದು ಸರ್ಕಾರದ ಕಾರ್ಯಕ್ರಮವಾಗಿದ್ದು ವಿರೋಧ ಪಕ್ಷದ ನಾಯಕರನ್ನು ಸಹ ಅಹ್ವಾನಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳ ಸಮನ್ವಯತೆಯಿಂದ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಕ್ಫ್, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ಖಾನ್, ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಸಚಿವ ಎನ್.ಎಸ್.ಭೋಸರಾಜು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಯೋಜನಾ ಸಚಿವರಾದ ಡಿ.ಸುಧಾಕರ್, ಸಂಸದ ಈ.ತುಕಾರಾಂ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶೀನಿವಾಸ್, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಕಂಪ್ಲಿ ಶಾಸಕ ಗಣೇಶ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ, ಮೊಣಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಬಳ್ಳಾರಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ಮೊಹಮ್ಮದ್ ನೋಂಗ್ಜಾಯ್ ಅಕ್ರಮ್ ಷಾ ಅಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶ್ರೀಹರಿಬಾಬು.ಬಿ.ಎಲ್, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಇತರರಿದ್ದರು.
| www.suddidina.com | contact : watsapp 9980346243 |