ಅಂತರಂಗ
ಆತ್ಮಕತೆ | ಪಠ್ಯೇತರ ಚಟುವಟಿಕೆಗಳು
- ರುದ್ರಪ್ಪ ಹನಗವಾಡಿ
ಪಠ್ಯೇತರ ಚಟುವಟಿಕೆಗಳ ಕಾರಣದಿಂದಾಗಿ ಅದರ ಅಧ್ಯಕ್ಷನಾಗಿದ್ದ ಕಾರಣ ಇಡೀ ಕೇಂದ್ರದ ವಿದ್ಯಾರ್ಥಿಗಳು ಪರಸ್ಪರ ಪರಿಚಯ ಮತ್ತು ಅರ್ಥಮಾಡಿಕೊಳ್ಳುವಂತಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಭಾಷಣ, ಚರ್ಚೆಗಳ ಜೊತೆಗೆ ವಿದ್ಯಾರ್ಥಿಗಳಿಗೆ ಸಂಘಟಿತ ಕಾರ್ಯಕ್ರಮಗಳಾದ ಸಂಗೀತ, ನಾಟಕ, ಏಕಪಾತ್ರಾಭಿನಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತಾಗಿತ್ತು.
ಪಠ್ಯೇತರ ಚಟುವಟಿಕೆಯ ಸಂಘದ ಉದ್ಘಾಟನಾ ಸಮಾರಂಭದ ನೆಪದಲ್ಲಿ ನಮ್ಮ ಕೇಂದ್ರಕ್ಕೆ ಆಗಿನ ವಿದ್ಯಾ ಮಂತ್ರಿಗಳಾಗಿದ್ದ ಎ. ಆರ್. ಬದರಿ ನಾರಾಯಣ, ಪಿಡಬ್ಲೂಡಿ ಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪ, ಉಪಕುಲಪತಿಗಳಾಗಿದ್ದ ಕೆ.ಎಸ್. ಹೆಗ್ಗಡೆಯವರಂತವರನ್ನು ಆಹ್ವಾನಿಸಿ, ಇಲ್ಲಿನ ಅನಾನುಕೂಲತೆಗಳನ್ನು ಅವರಿಗೆ ವಿವರಿಸಿ, ಅದರ ಅಭಿವೃದ್ಧಿಗಾಗಿ ಕ್ರಮ ಜರುಗಿಸುವಂತೆ ಒತ್ತಾಯಿಸುತ್ತಿದ್ದೆವು. ಮತ್ತು ಇದೇ ಸಂಘಟನೆಯನ್ನು ಉಪಯೋಗಿಸಿಕೊಂಡು ನಮ್ಮ ಕೇಂದ್ರಕ್ಕೆ ಹಿರಿಯ ಸಾಹಿತಿಗಳಾಗಿದ್ದ ಚಂಪಾ, ಸುಜನಾ ಮತ್ತು ಆಗಿನ್ನು ಹಾಡುವ ಉತ್ಸಾಹದಲ್ಲಿದ್ದ ಜಾನಪದ ಹಾಡುಗಾರ ಬಾನಂದೂರು ಕೆಂಪಯ್ಯ, ಶಿವಮೊಗ್ಗದ ಜನಪದ ಹಾಡುಗಾರರಾಗಿದ್ದ ಯುವರಾಜ ಹೀಗೆ ಅನೇಕರನ್ನು ಸಮಾರಂಭಗಳಿಗೆ ಆಹ್ವಾನಿಸಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೆವು.
ನಮ್ಮಲ್ಲಿನ ಕೊರತೆಗಳನ್ನು ಅರುಹುತ್ತಾ ಸರ್ಕಾರ ಮತ್ತು ವಿಶ್ವವಿದ್ಯಾಲಯ ನಮ್ಮ ಕೇಂದ್ರದ ಬೆಳವಣಿಗೆಗೆ ಏನೆಲ್ಲ ಪ್ರಯತ್ನಗಳನ್ನು ಮಾಡಬೇಕೆಂಬುದರ ಬಗ್ಗೆ ಚರ್ಚೆ ಕೂಡ ನಡೆಯುತ್ತಿದ್ದವು. ಇದೇ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಂದ ಚಂದ್ರಶೇಖರ ಪಾಟೀಲರ `ಕುಂಟ ಕುಂಟ ಕುರುವತ್ತಿ’, `ಕೊಡೆಗಳು’, ಚಂದ್ರಶೇಖರ ಕಂಬಾರರ ‘ಸಂಗ್ಯಾ-ಬಾಳ್ಯಾ’, ಪೂರ್ಣಚಂದ್ರ ತೇಜಸ್ವಿಯವರ ‘ಯಮಳ ಪ್ರಶ್ನೆ’, ನಾಟಕಗಳನ್ನು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೆಲ್ಲ ಸೇರಿ ಪ್ರದರ್ಶನ ಮಾಡುತ್ತಿದ್ದೆವು. ನಾಟಕದ ನಿರ್ದೇಶನವನ್ನು ನಾನೇ ಮಾಡುತ್ತಿದ್ದೆ. ಈ ಸಮಾರಂಭಗಳು ನಡೆದಾಗ ವಿಶೇಷವಾಗಿ ವಿದ್ಯಾರ್ಥಿಗಳಲ್ಲದೆ, ಕೇಂದ್ರದ ಅಕ್ಕಪಕ್ಕದ ಗ್ರಾಮಸ್ಥರು ಮತ್ತು ಬಿ.ಆರ್.ಪಿ. ಯಲ್ಲಿ ಇದ್ದ ವಿದ್ಯುತ್ ನಿಗಮದ ಹಿರಿಯ ಅಧಿಕಾರಿಗಳು,ಲೋಕೋಪಯೋಗಿ ಇಲಾಖೆ ನೌಕರರು ಹಾಗೂ ಹತ್ತಿರದಲ್ಲಿದ್ದ ಮೀನುಗಾರಿಕಾ ಇಲಾಖೆಯ ನೌಕರರು ಕೂಡಾ ಬರುತ್ತಿದ್ದರು. ನಮ್ಮ ಪಠ್ಯೇತರ ಚಟುವಟಿಕೆಗಳ ಕಾರಣದಿಂದಾಗಿ ನಮ್ಮ ಕೇಂದ್ರದ ಅಸ್ತಿತ್ವಕ್ಕೆ ಒಂದು ರೀತಿಯ ಮನ್ನಣೆ ದೊರೆತಂತಾಗಿತ್ತು. ಇಂತಹ ಎಲ್ಲಾ ಸಭೆ ಸಮಾರಂಭಗಳಲ್ಲಿ ಹಿರಿಯರಾಗಿದ್ದ ಕನ್ನಡ ವಿಭಾಗದ ಡಾ. ಹೆಚ್. ತಿಪ್ಪೇರುದ್ರ ಸ್ವಾಮಿ ಅವರು ಅಧ್ಯಕ್ಷತೆ ವಹಿಸುತ್ತಿದ್ದರು. ಇತರೆ ಎಲ್ಲಾ ಆಧ್ಯಾಪಕರು ಕೂಡಾ ಏಕಮನಸ್ಸಿನಿಂದ ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದರು.
ನಮ್ಮ ಅರ್ಥಶಾಸ್ತ್ರ ವಿಭಾಗದ ಯೋಜನಾ ವೇದಿಕೆಯೂ ಕೂಡ ಕ್ರಿಯಾಶೀಲವಾಗಿತ್ತು. ಸಾಮಾನ್ಯ ಅರ್ಥಶಾಸ್ತçಕ್ಕೂ ಒಳಪಡುವ ರಾಷ್ಟç ಮತ್ತು ರಾಜ್ಯ ಯೋಜನೆಗಳ ರ್ಯಾವಲೋಚನೆ, ವಾರ್ಷಿಕ ಬಜೆಟ್ ಮೇಲಿನ ಚರ್ಚೆ ಇವೇ
ಮುಂತಾದ ವಿಷಯಗಳನ್ನು ಚರ್ಚಿಸುತ್ತಿದ್ದೆವು. ಇದಕ್ಕಾಗಿ ಮೈಸೂರಿನಿಂದ ಹಿರಿಯ ಅಧ್ಯಾಪಕರಾಗಿದ್ದ ಡಾ. ಮಾದಯ್ಯ, ಡಾ. ಎಸ್. ನಾಗರಾಜು, ಡಾ. ಎಸ್.ಎಂ. ವೀರರಾಘವಾಚಾರ್ ಅವರುಗಳನ್ನು ಜೊತೆಗೆ ಆಡಳಿತಾಧಿ ಕಾರಿಗಳಾಗಿದ್ದ ತರಿಕೆರೆ ಉಪ ವಿಭಾಗದಲ್ಲಿದ್ದ ಎಸ್.ಎಂ. ಜಾಮಾದಾರ್ ಅವರನ್ನು ಕರೆಸಿ ನಮ್ಮ ವಿದ್ಯಾರ್ಥಿಗಳಿಗೆ ಅವರಿಂದ ಉಪನ್ಯಾಸ ಮತ್ತು ಆಡಳಿತದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ಮಾಡುತ್ತಿದ್ದೆವು.
ನಮ್ಮ ಕೇಂದ್ರದ ಅಧ್ಯಾಪಕರ ಮತ್ತು ವಿದ್ಯಾರ್ಥಿಗಳನ್ನು ಸಂಘಟಿಸಿ ಸುಮಾರು 10 ದಿನಗಳಿಗೂ ಹೆಚ್ಚು ಕಾಲ ಇಡೀ ಸ್ನಾತಕೋತ್ತರ ಕೇಂದ್ರವನ್ನು ಬಂದ್ ಮಾಡಿ ಪ್ರತಿಭಟಿಸಿದ್ದೆವು. ಈ ಕೇಂದ್ರ ಪ್ರಾರಂಭವಾಗಿ 6-7 ವರ್ಷಗಳಾದರೂ ಖಾಯಂ ಅಧ್ಯಾಪಕರ ಕೊರತೆ ನೀಗಿಸಲು ಸರಿಯಾದ ಲೈಬ್ರರಿ ವ್ಯವಸ್ಥೆ, ಹಾಸ್ಟೆಲ್ನಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಮುಂದಿಟ್ಟುಕೊಂಡು ಒಂದು ಕರಪತ್ರ ಮುದ್ರಿಸಿ ಧರಣಿ ನಡೆಸಿದ್ದೊಂದು ದೊಡ್ಡ ಇತಿಹಾಸ.
ನೇರವಾಗಿ ಅಧ್ಯಾಪಕರು ಭಾಗವಹಿಸಿಲ್ಲವಾದರೂ ವಿದ್ಯಾರ್ಥಿಗಳು ದಿನನಿತ್ಯದ ಬೆಳವಣಿಗೆಯನ್ನೆಲ್ಲ ಗಮನಿಸುತ್ತಾ ಈ ಧರಣಿಯ ವಿಷಯಗಳು ವಿಶ್ವವಿದ್ಯಾಲಯ ಮತ್ತು ಸರ್ಕಾರಕ್ಕೆ ಮುಟ್ಟುವಂತೆ ಮಾಡಲು ಶಿವಮೊಗ್ಗದಲ್ಲಿದ್ದ ಪತ್ರಕರ್ತರಿಗೂ ಸಂಪರ್ಕಿಸಿ ಎಲ್ಲಾ ಪತ್ರಿಕೆಗಳಲ್ಲಿ ಬರುವಂತೆ ಮಾಡಿದ್ದೆವು. ಅದರ ಪರಿಣಾಮವೋ ಎನ್ನುವಂತೆ, ವಿಶ್ವವಿದ್ಯಾಲಯದಿಂದ ಹಿರಿಯ ಅಧಿಕಾರಿಗಳು ಬಂದು ಅಲ್ಲಿನ ಸಮಸ್ಯೆಗಳ ಬಗ್ಗೆ ತುರ್ತು ಗಮನ ಹರಿಸುವ ಬಗ್ಗೆ ಭರವಸೆ ನೀಡಿದ್ದು, ಅದರ ಭಾಗವಾಗಿ ತಾತ್ಕಾಲಿಕವಾಗಿ ಕೆಲಸ ನಿರ್ವಹಿಸುತ್ತಿದ್ದ ಅಧ್ಯಾಪಕರಲ್ಲಿ ನನ್ನನ್ನು ಒಳಗೊಂಡAತೆ ಅನೇಕರಿಗೆ ಖಾಯಂಗೊಳಿಸುವ ಪ್ರಕ್ರಿಯೆ ಪ್ರಾರಂಭವಾದವು. ಲೈಬ್ರರಿ ಶಾಖೆಗೆ ಪೂರ್ಣ ಪ್ರಮಾಣದ ಲೈಬ್ರರಿಯನ್ ಆಗಿ ಮೈಸೂರಿನಿಂದ ರಾಮಕೃಷ್ಣ ಗೌಡ ಬಂದರು. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ವಿಭಾಗಗಳಿಗೆ ಹೊಸ ಪುಸ್ತಕಗಳನ್ನು, ನಿಯತಕಾಲಿಕಗಳನ್ನು ಕೇಂದ್ರಕ್ಕೆ ತರಿಸುವ ವ್ಯವಸ್ಥೆಯಾಯಿತು.
ಈ ನಡುವೆ ನಾನು ಪಿಹೆಚ್.ಡಿ., ಮಾಡಲು ಹೊಸ ವಿಷಯವೊಂದರ ಹುಡುಕಾಟ ಮತ್ತು ನನಗೆ ಗೈಡ್ ಮಾಡಲು ಈಗಾಗಲೇ ಪ್ರಾಧ್ಯಾಪಕರಾಗಿದ್ದವರನ್ನು ನಿಗದಿಗೊಳಿಸಿಕೊಳ್ಳುವ ತಯಾರಿಯಲ್ಲಿದ್ದೆ. ಗಂಗೋತ್ರಿಯಲ್ಲಿ ಪ್ರೊ. ಮಾದಯ್ಯನವರನ್ನು ಈ ಬಗ್ಗೆ ವಿಚಾರಿಸಿದೆ. ಅವರ ಬಳಿ ಈಗಾಗಲೇ ಸಂಶೋಧನೆ ಮಾಡುವ ಹೆಚ್ಚಿನ ವಿದ್ಯಾರ್ಥಿಗಳಿರುವ ಕಾರಣ ನೀಡಿ, ಸಾಧ್ಯವಾಗುವುದಿಲ್ಲ ಎಂದರು. ಹಿರಿಯ ಪ್ರಾಧ್ಯಾಪಕರಾಗಿದ್ದ ಎಪಿಎಸ್ ಮತ್ತು ಎಸ್.ಎಂ.ವಿ. ಅವರು ನಿವೃತ್ತಿ ಅಂಚಿನಲ್ಲಿದ್ದು ಅವರೂ ಕೂಡ ನನಗೆ ಮಾರ್ಗದರ್ಶನ ಮಾಡುವ ಆಸಕ್ತಿ ತೋರಲಿಲ್ಲ. ಇದೇ ಯೋಚನೆಯಲ್ಲಿ ನಾನು ಬೆಂಗಳೂರು ವಿಕೆಆರ್ವಿ. ಇನ್ಸಿಟಿಟ್ಯೂಟ್ನಲ್ಲಿ ಅಂದು ಪ್ರಾಧ್ಯಾಪಕರಾಗಿದ್ದ ಡಾ. ಅಬ್ದುಲ್ ಅಜೀಜ್ ಅವರನ್ನು ಭೇಟಿ ಮಾಡಿ ನನ್ನ ಸಂಶೋಧನಾ ಆಸಕ್ತಿಯನ್ನು ವಿವರಿಸಿ ತಾವು ಗೈಡ್ ಆಗಬೇಕೆಂದು ಕೇಳಿದೆ. ಅದಕ್ಕವರು ಇಲ್ಲ, ನೀವು ನಿಮ್ಮ ವಿಶ್ವವಿದ್ಯಾಲಯದಲ್ಲೇ ಇರುವ ಪ್ರಾಧ್ಯಾಪಕರಲ್ಲಿ ಸಂಶೋಧನೆ ಮಾಡುವುದು ಸೂಕ್ತ.
ಮುಂದೆ ಅನೇಕ ಸಂದರ್ಭಗಳಲ್ಲಿ ನಿಮ್ಮ ವಿಭಾಗದ ಮುಖ್ಯಸ್ಥರ ಶಿಫಾರಸ್ಸುಗಳು ನಿಮಗೆ ಬೇಕಾಗುತ್ತದೆ. ನೀವು ಬೇರೊಂದು ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಪ್ರಾರಂಭಿಸಿದರೆ ಮುಂದೆ ನಿಮಗೆ ವಿಭಾಗ ಮಟ್ಟದಲ್ಲಿ ಅನೇಕ ಸಮಸ್ಯೆಗಳು ಉದ್ಭವಿಸಿ ನಿಮಗೆ ಸಂಶೋಧನೆಯಲ್ಲಿ ಆಸಕ್ತಿ ಬರದಂತಹ ಸನ್ನಿವೇಶ ಬರಬಹುದೆಂದು ಅವರು ತಿಳಿ ಹೇಳಿದರು. ಸ್ನಾತಕೋತ್ತರ ವಿಭಾಗದಲ್ಲಿ ಹೆಚ್ಚು ಅರ್ಹತೆಗಳನ್ನು ಪಡೆಯದೆ ಸ್ನಾತಕೋತ್ತರ ಕೇಂದ್ರದಲ್ಲಿ ಮುಂದುವರಿಯುವುದು ನ್ಯಾಯ ಸಮ್ಮತವಲ್ಲವೆಂದು ನನ್ನೊಳಗಿನ ಒಳ ಮನಸ್ಸು ಕೂಡ ಜಾಗೃತವಾಗಿ ಹೇಳುತ್ತಲೇ ಇತ್ತು. ಅದರ ಒತ್ತಾಸೆಯಂತೆ ಮುಂದೆ ನಾನು ನನ್ನ ಹುದ್ದೆಯನ್ನು ಬಿಟ್ಟು ಬೇರೆ ಕಡೆಗೆ ಹೋಗುವ ಬಗ್ಗೆ ಯೋಚನೆ ಪ್ರಾರಂಭವಾಗಿತ್ತು.
ಮುಂದುವರಿಯುವುದು
ಸುದ್ದಿದಿನ.ಕಾಂ|ವಾಟ್ಸಾಪ್|9980346243