ದಿನದ ಸುದ್ದಿ

ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು

Published

on

  • ರುದ್ರಪ್ಪ ಹನಗವಾಡಿ

ನಾನು ಮದುವೆಯಾದ ಮೇಲೆ ನಮ್ಮೂರಿನಲ್ಲಿಯೇ 3-4 ಅಂತರ್ಜಾತಿ ಮದುವೆಗಳಾದವು. ಮೈಸೂರಿನಲ್ಲಿ ನಮ್ಮ ಜೊತೆಗಿದ್ದ ಪ್ರೊ. ಗೊಟ್ಟಿಗೆರೆ ಶಿವರಾಜು ಚನ್ನರಾಯ ಪಟ್ಟಣದಲ್ಲಿ ರಾಜ್ಯಶಾಸ್ತçದ ಅಧ್ಯಾಪಕನಾಗಿದ್ದ. ಅವನ ಸಹೋದ್ಯೋಗಿಗಳಾಗಿದ್ದ ನರಸಿಂಹಾಚಾರ್ ಇಂಗ್ಲಿಷ್ ಅಧ್ಯಾಪಕ ಮತ್ತು ಪ್ರೊ. ಸುಮತಿ ಎನ್. ಗೌಡ ಅಧ್ಯಾಪಕರಾಗಿದ್ದ ಅವರು ಪರಸ್ಪರ ಪ್ರೀತಿಸುತ್ತಿದ್ದರು.

ಅವರನ್ನು ನೇರ ಬಿಆರ್‌ಪಿಗೆ ಕರೆತಂದು, ಮದುವೆಯ ಬಗ್ಗೆ ಪ್ರಸ್ತಾಪ ಮಾಡಿದನು. ನಾನು ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ ಕೃಷ್ಣಪ್ಪನವರಿಗೆ ಸುದ್ದಿ ಮುಟ್ಟಿಸಿ, ಮದುವೆಯ ಏರ್ಪಾಡು ಮಾಡಿದೆ. ಹುಡುಗಿ ಒಕ್ಕಲಿಗ ಜಾತಿ, ಹುಡುಗ ಬ್ರಾಹ್ಮಣನಾಗಿದ್ದ. ಸಹೋದ್ಯೋಗಿಗಳ ಪ್ರೀತಿಯ ಮದುವೆ ಮಾಡಿದ ಪ್ರೊ. ಜಿ.ಬಿ. ಶಿವರಾಜು ನಂತರ ದಿನಗಳಲ್ಲಿ ಗೌಡ ಜಾತಿಗೆ ಸೇರಿದ ಸಂಬಂಧಿಕರಿಂದ ಅನೇಕ ರೀತಿಯ ಕಿರುಕುಳಕ್ಕೂ ಒಳಗಾಗಬೇಕಾಯಿತು. ಆದರೆ ಈ ದಂಪತಿಗಳು ಶಿವರಾಜು ಪರ ಇರಬೇಕಾದವರು ನಂತರದ ದಿನಗಳಲ್ಲಿ ಇವರುಗಳಿಂದಲೇ ಕಿರುಕುಳ ಅನುಭವಿಸುವಂತೆ ಆದುದು ವಿಪರ್ಯಾಸವೇ ಸರಿ. ಮಾಡಿದ ಉಪಕಾರ ಸ್ಮರಣೆ ನಮ್ಮ ವ್ಯಕ್ತಿತ್ವದಲ್ಲಿ ಇರದಿದ್ದರೆ, ಮನುಷ್ಯನಿಂದ ಮತ್ತಿನ್ನೇನನ್ನು ಮಾಡಲು ಸಾಧ್ಯ?

ಈ ಸರಣಿಯಲ್ಲಿ ಇಲ್ಲಿಯೇ ಇನ್ನೊಬ್ಬನ ಕಥೆ ಹೇಳಿ ಮುಗಿಸುವೆ. ಬಳ್ಳಾರಿ ಮೂಲದ ಒಬ್ಬ ಡಾಕ್ಟರ್ ಮತ್ತು ಅವರ ಕೈಕೆಳಗೆ ಇದ್ದ ನರ್ಸ್ ಇಬ್ಬರೂ ಪ್ರೀತಿಸಿದ್ದು, ಮದುವೆಯಾಗುವ ತಯಾರಿಯಲ್ಲಿದ್ದರು. ಶಿವಮೊಗ್ಗದ ಕಡೆಯ ಗೆಳೆಯರೊಬ್ಬರ ಮೂಲಕ ನನ್ನಲ್ಲಿಗೆ ಬಂದರು. ಇಬ್ಬರೂ ಮದುವೆಗೆ ಅರ್ಹ ವಯಸ್ಸಿನವರಾಗಿದ್ದು, ಬೇರೆ ಬೇರೆ ಜಾತಿಯವರಾದ ಕಾರಣ, ಹುಡುಗಿಗೆ ನನ್ನದೇ ಮನೆ ವಿಳಾಸಕೊಟ್ಟು ಮದುವೆ ಮಾಡಿಸಿ ಕಳಿಸಿಕೊಟ್ಟೆವು. ನಾನಾಗ ಪ್ರೊಬೆಷನರಿ ತಹಸೀಲ್ದಾರ್‌ನಾಗಿ ತರೀಕೆರೆಯಲ್ಲಿದ್ದೆ. ಅಲ್ಲಿನ ಸಬ್ ರಿಜಿಸ್ಟ್ರಾರ್ ಚಳಗೇರಿ ಎನ್ನುವವರ ಜೊತೆ ಮಾತಾಡಿ ರಿಜಿಸ್ಟ್ರೇಷನ್ ಮುಗಿಸಿ ಕಳಿಸಿದೆ.

ಇದೆಲ್ಲ ಆಗಿ ಒಂದು ವಾರದಲ್ಲಿ ಹುಡುಗನ ಕಡೆಯ ನಿವೃತ್ತ ಸೇನಾ ಅಧಿಕಾರಿ ಬಂದು ಗಾಯತ್ರಿಯೊಬ್ಬಳೇ ಮನೆಯಲ್ಲಿದ್ದಾಗ ನನ್ನ ಬಗ್ಗೆ ಆಕ್ಷೇಪಿಸಿ ನಾನು ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ಸಂಬಂಧಿ, ನಿನ್ನ ಗಂಡನ ಕೆಲಸ ಕೂಡ ಕಳೆದುಕೊಳ್ಳುವಂತೆ ಮಾಡುತ್ತೇನೆ’ ಎಂದೆಲ್ಲ ಕೂಗಾಡಿ ಹೋಗಿದ್ದ. ನಾನು ತರೀಕೆರೆಯಿಂದ ಬಂದಾಕ್ಷಣ ಇವಳು ಆತಂಕದಿAದ `ನಾವೇನೋ ಮದುವೆಯಾಗಿದ್ದೇವೆ. ಬೇರೆಯವರ ಮದುವೆ ಮಾಡಲು ಹೋಗಿ ಯಾಕೆ ತೊಂದರೆಗೊಳಗಾಗಬೇಕೆಂದು’ ಅಲವತ್ತುಕೊಂಡಳು.

ನಾನು ಈ ರೀತಿ ಮದುವೆಗಳ ಬಗ್ಗೆ ಖಚಿತ ತಿಳುವಳಿಕೆಯುಳ್ಳವನಾಗಿದ್ದು, ಈ ಬಗ್ಗೆ ರಾಜ್ಯದಲ್ಲಿ ನಡೆದಿದ್ದ ಶಿವರಾಮ ಕಾರಂತ, ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ, ಕೆ. ರಾಮದಾಸ್, ಕೃಷ್ಣಪ್ಪ, ಪ್ರೊ. ಎಂ. ನಂಜುಂಡಸ್ವಾಮಿ, ಪ್ರೊ. ರವಿವರ್ಮಕುಮಾರ್, ಹೀಗೆ ಮದುವೆಯಾದವರ ಬಗ್ಗೆ ಸಾಲು ಸಾಲು ಹೆಸರುಗಳನ್ನು ತಿಳಿಸಿ ಗಾಯತ್ರಿಗೆ ಸಮಾಧಾನ ಮಾಡುತ್ತಿದ್ದೆ.

ನಾವು ಮದುವೆಯಾಗಿ ಆರು ತಿಂಗಳು ಆಗಿರಲಿಲ್ಲ, ನಮ್ಮ ವಿದ್ಯಾರ್ಥಿಯೊಬ್ಬರ ಅಕ್ಕ ಪ್ಲಾರಿ ಬಿಆರ್‌ಪಿ ಹತ್ತಿರವಿರುವ ಜಂಕ್ಷನ್‌ನಿಂದ ಭದ್ರಾವತಿಗೆ ಸ್ಟೆಫೆಂಡಿಯರಿ ಗ್ರಾಜ್ಯುಯೇಟ್ ಸ್ಕೀಂನಲ್ಲಿ ತಾಲ್ಲೂಕು ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಹುಡುಗ ಸಿದ್ದಯ್ಯ ಭದ್ರಾವತಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಆತ ಬಿಆರ್‌ಪಿ ಹತ್ತಿರದ ಶಾಂತಿನಗರದಿಂದ ದಿನವೂ ಬಸ್‌ನಲ್ಲಿ ಓಡಾಡುತ್ತಿರುವಾಗ ಪರಿಚಯವಾಗಿ ಪ್ರೀತಿಯ ಸೆಳೆತದಲ್ಲಿದ್ದರು. ಒಂದು ದಿನ ಬೆಳಗಿನ ಜಾವ ಹುಡುಗನ ಅಣ್ಣ ಬಂದು ಅವರಿಬ್ಬರ ಪ್ರೀತಿಗೆ ತಮ್ಮ ಒಪ್ಪಿಗೆ ಇದ್ದು ಹುಡುಗಿ ಕಡೆಯವರು ಒಪ್ಪುವುದಿಲ್ಲ, ಮದುವೆ ಮಾಡಿಸಬೇಕಾಗಿ ಕೋರಿದ.

ಹುಡುಗಿಯ ತಮ್ಮ ನನ್ನ ವಿಭಾಗದಲ್ಲಿಯೇ ನೇರ ವಿದ್ಯಾರ್ಥಿಯಾಗಿದ್ದ. ಈಗಾಗಲೇ ನಮ್ಮ ವಿಭಾಗದಲ್ಲಿ ಇವರು ಬರೀ ಇಂತದೇ ಕೆಲಸ ಮಾಡುತ್ತಿರುತ್ತಾನೆಂದು ಅಪಪ್ರಚಾರ ಬೇರೆ ಮಾಡುತ್ತಿದ್ದರು. ಆದರೂ ಎಲ್ಲ ಸೇರಿಕೊಂಡು ಇಂದಿರಾ ಕೃಷ್ಣಪ್ಪನವರಿಗೆ ತಿಳಿಸಿ ಭದ್ರಾವತಿಯಲ್ಲಿ ಮದುವೆ ನಡೆಸಲಾಯಿತು. ಮದುವೆಯಾದ ನಂತರ ಹೆಣ್ಣಿನ ಕಡೆಯವರು ನನ್ನನ್ನು ಹೊಡೆಯಲು ಜಂಕ್ಷನ್ ಎಂಬಲ್ಲಿ ಕಾಯುತ್ತಿದ್ದಾರೆ, ಇಲ್ಲಿ ಕಾಯುತ್ತಿದ್ದಾರೆ ಎಂದು ಪುಕಾರು ಹಬ್ಬಿಸುತ್ತಿದ್ದರು. ಆದರೆ ದಿನಗಳೆದಂತೆ ಹುಡುಗ-ಹುಡುಗಿಯ ಮದುವೆಯನ್ನು ಈರ್ವರ ಕಡೆಯವರು ಒಪ್ಪಿ ನಂತರ ನಮ್ಮ ಕಡೆಗೆ ದೂರುವುದನ್ನು ನಿಲ್ಲಿಸಿದರು. ಈಗ ಇಬ್ಬರೂ ತಮ್ಮ ವೃತ್ತಿಯಲ್ಲಿ ಮುಂದುವರಿದು ಮಕ್ಕಳೊಂದಿಗೆ ಆರೋಗ್ಯಕರ ಜೀವನ ಸಾಗಿಸುತ್ತಿದ್ದಾರೆ.

ಹೀಗೆ ಶಿವಮೊಗ್ಗ, ಭದ್ರಾವತಿಯಲ್ಲಿ ಕೃಷ್ಣಪ್ಪನವರು ಪ್ರಾರಂಭಿಸಿದ ಒಲವಿನ ಸರಳ ಮದುವೆಗಳು ಸಾಲು ಸಾಲಾಗಿ ನಡೆಯುತ್ತಾ, ಡಿ.ಎಸ್.ಎಸ್. ಮತ್ತು ರೈತ ಸಂಘದ ಅನೇಕ ಕಾರ್ಯಕರ್ತರು ತಮ್ಮ ಕಾರ್ಯಸೂಚಿಯಲ್ಲಿ ಕಾರ್ಯಗತ ಮಾಡಬೇಕಾದ ಜವಾಬ್ದಾರಿ ಎಂಬಂತೆ ಸರಳ ಅಂತರ್‌ಜಾತಿ ಮದುವೆಗಳನ್ನು ನಡೆಸುವಂತಾಯಿತು. ಅದು ಇಂದಿಗೂ ಕರ್ನಾಟಕದಲ್ಲಿ ನಡೆದುಕೊಂಡು ಬರುತ್ತಿರುವುದು ಸಂತೋಷದ ಸಂಗತಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version