ಅಂತರಂಗ
ಆತ್ಮಕತೆ | ತುರ್ತು ಪರಿಸ್ಥಿತಿ ಮತ್ತು ನಮ್ಮೂರಿನ ಭೂ ಹೋರಾಟ
- ರುದ್ರಪ್ಪ ಹನಗವಾಡಿ
ದೇಶದಾದ್ಯಂತ ತುರ್ತುಪರಿಸ್ಥಿತಿ ಇತ್ತು. ಶಾಲಾ ಕಾಲೇಜುಗಳಲ್ಲಿ ಪಾಠ ಪ್ರವಚನಗಳು ನಿಗದಿಯಂತೆ ನಡೆಯುತ್ತಿದ್ದವು. ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾಂಗ್ರೆಸ್ ವಿರೋಧಿ ರಾಜಕೀಯ ನಾಯಕರನ್ನು ಬಂಧಿಸಿ ಜೈಲಿನಲ್ಲಿರಿಸಿದ್ದರು. ಇಂದಿರಾ ಗಾಂಧಿಯವರ 20 ಅಂಶದ ಕಾರ್ಯಕ್ರಮಗಳು ವಿಶೇಷವಾಗಿ ದಲಿತ ಹಿಂದುಳಿದವರ ಪರವಾಗಿದ್ದುದನ್ನು ಮುಖ್ಯಮಂತ್ರಿ ದೇವರಾಜ ಅರಸು ಅವರು ಒತ್ತಿ ಹೇಳುತ್ತಿದ್ದರು ಮತ್ತು ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಂಡು ರಾಜ್ಯಾಡಳಿತವನ್ನು ನಡೆಸುತ್ತಿದ್ದರು.
ದೇವರಾಜ ಅರಸು ಅವರು ಕರ್ನಾಟಕದಲ್ಲಿ ಹಿಂದೆಂದೂ ನೀಡಿರದಿದ್ದ ವಿಶೇಷ ಸವಲತ್ತುಗಳನ್ನು ದಲಿತರು, ಹಿಂದುಳಿದವರಿಗೆ ಮತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿದ್ದರು. ಹಾಗೆ ಹೇಳುತ್ತಲೂ ಇದ್ದರು. ಅದು ನಿಜವೂ ಆಗಿತ್ತು. ಆದರೆ ನಾವೆಲ್ಲ ತುರ್ತುಪರಿಸ್ಥಿತಿಯ ವಿರುದ್ಧವಾಗಿ ಕೆಲಸ ಮಾಡುತ್ತಿದ್ದೆವು.
ನಮ್ಮ ಊರಿನಲ್ಲಿ ವೀರಭದ್ರ ದೇವರ ಚಾಕರಿ (ಮ್ಯಾಳ) ಮಾಡುತ್ತಿದ್ದ ಕಾರಣ ಹದಿನೇಳು ಎಕರೆ ವೀರಭದ್ರ ದೇವರ ಹೆಸರಿನಲ್ಲಿದ್ದುದನ್ನು ನಮ್ಮ ಎಲ್ಲ ಆರು ಕುಟುಂಬಗಳಿಗೆ ಊರಿನ ಪ್ರಮುಖರು ನಾವಿನ್ನು ಹುಟ್ಟುವ ಮುಂಚೆಯೇ ಹಂಚಿ ಕೊಟ್ಟಿದ್ದರು. ಅದರಲ್ಲಿ ಅಪ್ಪನಿಗೆ ಸುಮಾರು ನಾಲ್ಕು ಎಕರೆಯಷ್ಟನ್ನು ನೀಡಿದ್ದು ಸಾಗುವಳಿ ಮಾಡಿಕೊಂಡು ಬರುತ್ತಿದ್ದೆವು. ಈ ನಡುವೆ ಭೂಸುಧಾರಣಾ ಕಾನೂನು ಜಾರಿ ಮಾಡುವ ಬಗ್ಗೆ ಅರಸು ಸರ್ಕಾರ ವಿಶೇಷವಾಗಿ ಭೂನ್ಯಾಯ ಮಂಡಳಿಯನ್ನು ರಚಿಸಿತ್ತು. ಇದನ್ನರಿತ ನಮ್ಮವರೆಲ್ಲ ಸೇರಿ ನಮ್ಮ ಅಣ್ಣ ತಿಪ್ಪಣ್ಣನ ಪ್ರಯತ್ನದಿಂದ ಸರ್ಕಾರ ರಚಿಸಿದ್ದ ಭೂನ್ಯಾಯ ಮಂಡಳಿಯ ಮುಂದೆ ಎಲ್ಲ ಆರು ಜನರೂ ತಮಗೆ ಭೂಮಿಯ ಹಕ್ಕು ನೀಡಲು ನಮೂನೆ 7ರ ಅರ್ಜಿ ಸಲ್ಲಿಸಿದ್ದರು.
ಭೂನ್ಯಾಯ ಮಂಡಳಿಯ ಮುಂದೆ ಅರ್ಜಿ ಹಾಕಿದ ವಿಷಯ ಊರಲ್ಲಿ ದೊಡ್ಡ ಅಸಮಾಧಾನದ ಕಿಚ್ಚನ್ನು ಮೂಡಿಸಿತ್ತು. ಈ ನಡುವೆ ನಮಗಾಗಿ ಕೊಟ್ಟಿದ್ದ 17 ಎಕರೆಯಲ್ಲಿ ಮಧ್ಯ ಭಾಗದಲ್ಲಿ 4 ಎಕರೆಯನ್ನು ಕಬಳಿಸುವಷ್ಟು ರಾಷ್ಟ್ರೀಯ ಹೆದ್ದಾರಿಯು ದಾವಣಗೆರೆಯಿಂದ ಹುಬ್ಬಳ್ಳಿವರೆಗೆ ಬೈಪಾಸ್ ರಸ್ತೆಗಾಗಿ ಸರ್ಕಾರ ವಶಪಡಿಸಿಕೊಂಡಿತ್ತು. ಸರ್ಕಾರದಿಂದ ನೀಡಿದ ನಾಲ್ಕು ಎಕರೆ ಪರಿಹಾರದ ಹಣವನ್ನು ಕೂಡ ದೇವಸ್ಥಾನದವರೇ ತೆಗೆದುಕೊಂಡಿದ್ದರು. ಉಳಿದಿದ್ದ 13 ಎಕರೆಯಲ್ಲಿ ಮತ್ತೆ ಪುನಃ ಮರು ಹಂಚಿಕೆ ಮಾಡಿಕೊಂಡು ಆರು ಜನರು ಸುಮಾರು ಎರಡೆರಡು ಎಕರೆಗಳಷ್ಟು ಸಾಗುವಳಿ ಮಾಡುತ್ತಿದ್ದರು.
ದೇವಸ್ಥಾನ ಧರ್ಮದರ್ಶಿ ಕಮಿಟಿಯಲ್ಲಿ ಊರಿನ ಹಿರಿಯರಿದ್ದರೂ ಉಳಿದಿರುವ ಭೂಮಿಯನ್ನು ನಮ್ಮವರಿಂದ ಬಿಡಿಸುವುದು ಮತ್ತು ಪ್ರತಿ ಮಂಗಳವಾರ ಗುಡಿಯಲ್ಲಿ ಮಾಡುತ್ತಿರುವ ಮ್ಯಾಳಗಳನ್ನು ನಿಲ್ಲಿಸಬೇಕೆಂದು ಚರ್ಚೆ ಆಗ ಊರಲ್ಲಿ ನಡೆಯುತ್ತಿತ್ತು. ಅವರೆಲ್ಲರ ಚರ್ಚೆಗಳ ಮಧ್ಯೆ ಮ್ಯಾಳದವರು ನಿಲ್ಲಿಸದೆ ಪ್ರತಿ ಮಂಗಳವಾರ ತಪ್ಪಿಸದೆ ಗುಡಿಗೆ ಹೋಗಿ ಎಂದಿನಂತೆ ಮ್ಯಾಳ ಮಾಡಿ ಬರುತ್ತಿದ್ದರು.
ನಮ್ಮೂರ ಚಲುವಾದಿಗಳಿಗೆ ಈ ರೀತಿಯ ಧೈರ್ಯವಿರಲಿಲ್ಲ. ಇವೆಲ್ಲದರ ಹಿಂದಿನ ಯೋಜಕ ಮೈಸೂರಲ್ಲಿ ಓದುತ್ತಿರುವ ಹುಡುಗ ನಾನೇ ಎಂದು ಊರವರು ಮಾತಾಡಿಕೊಂಡರು. ಅವನು ಊರಿಗೆ ಯಾವ ದಾರಿಯಲ್ಲಿ ಬರುತ್ತಾನೋ ಕಾದು ಕುಳಿತು ಕಾಲು ಮುರಿಯಬೇಕೆಂಬ ಯೋಜನೆ ಕೂಡ ಹಾಕಿಕೊಂಡಿದ್ದರಂತೆ. ಆದರೆ ಏಕಾಂಗಿಯಾಗಿ ಓಡಾಡುತ್ತಿದ್ದ ನನಗೆ ಒಳಗೊಳಗೆ ಅಳುಕು ಇದ್ದರೂ ನಾನೇನು ತಪ್ಪು ಮಾಡುತ್ತಿಲ್ಲ ಎಂಬ ತಿಳುವಳಿಕೆ ಧರ್ಯ ನೀಡುತ್ತಿತ್ತು. ಆದರೆ ಊರಿಗೆ ಬಂದು ಹೊರಗೆ ಓಡಾಡುತ್ತಿದ್ದರೆ ನಮ್ಮವರೆಲ್ಲ ದೂರದಲ್ಲಿದ್ದುಕೊಂಡೇ ನನ್ನನ್ನು ಊರಲ್ಲಿರುವ ತನಕ ವಿಶೇಷವಾಗಿ ಕವರ್ ಮಾಡುತ್ತಿದ್ದರು.
ಇದಕ್ಕೂ ಮುಂಚೆ ನಾನಿನ್ನು ಬಿ.ಎ.ನಲ್ಲಿ ಓದುತ್ತಿರುವಾಗ ಸರ್ಕಾರದ ವತಿಯಿಂದ ನಮ್ಮ ಮನೆಯ ಹತ್ತಿರದಲ್ಲೇ ಸಾರ್ವಜನಿಕರಿಗಾಗಿ ಕುಡಿಯಲು ಒಂದು ತೆರೆದ ಬಾವಿಯನ್ನು ತೆಗೆದಿದ್ದರು. ಊರಲ್ಲಿದ್ದ ಎರಡು ಬಾವಿಗಳಿಂದ ನೀರು ಸೇದುತ್ತಿದ್ದ ಮೇಲ್ಜಾತಿಗಳ ಜನರಿಂದ ನಮ್ಮವರೆಲ್ಲ ಹೊಯ್ ನೀರು ತರುತ್ತಿದ್ದರು. ಅಂದರೆ ಮೇಲ್ಜಾತಿಯವರಿಂದ ನೀರು ಸೇದಿ ಇವರ ಕೊಡಗಳಿಗೆ ನೀರು ಹಾಕಬೇಕು, ಆಗ ಇವರ ಮನೆಗಳಿಗೆ ತೆಗೆದುಕೊಳ್ಳಬೇಕು. 1936ರಲ್ಲಿ ಸರ್ಕಾರ ನಮಗೊಂದು ರಂಗಜ್ಜನ ಮಠದ ಹತ್ತಿರ ಬಾವಿ ತೆಗೆಸಿತ್ತು. ಅದು ನಮ್ಮ ಮನೆಗಳಿಗೆ ಅರ್ಧ ಕಿಲೋಮೀಟರ್ ದೂರದಲ್ಲಿತ್ತು. ಆದರೆ ಅಲ್ಲಿನ ನೀರು ಕುಡಿಯಲು ಯೋಗ್ಯವಾಗಿರಲಿಲ್ಲ.
ಮನೆಯ ಹತ್ತಿರವಿರುವ ಬಾವಿಯನ್ನು ವಿಧ್ಯುಕ್ತವಾಗಿ ಉದ್ಘಾಟಿಸುವ ಮುನ್ನ ನಾನು ನಮ್ಮಲ್ಲಿದ್ದ ಹಸುವಿನ ಜೊತೆ ಆ ಹೊಸ ಬಾವಿಯಿಂದ ನೀರು ಸೇದಿ ಅದಕ್ಕೆ ಕುಡಿಸಿ ನಾನು ಅಲ್ಲೇ ಸ್ನಾನ ಮಾಡಿಕೊಂಡು ಬರುತ್ತಿದ್ದೆ. ನಾನಿರುವಾಗ ಯಾರೂ ಮಾತಾಡದೆ ಇದ್ದವರು, ನಾನು ಮೈಸೂರಿಗೆ ವಾಪಸ್ ಓದಲು ಹೋದಾಕ್ಷಣ ಮಾರನೆ ದಿನ ನಮ್ಮ ಮನೆಯ ಹೆಣ್ಣು ಮಕ್ಕಳು ನೀರಿಗೆ ಹೋದಾಗ ಹಗ್ಗ ಕೊಡಪಾನಗಳನ್ನು ಕಿತ್ತು ಬಿಸಾಕಿ ನೀರು ಸೇದಲು ಬಿಟ್ಟಿರಲಿಲ್ಲ. ಆಗಿನ್ನು ಅಪ್ಪ ಇದ್ದ. ‘ನೀನು ಊರ ಉಸಾಬರಿಗೆ ಬರಬೇಡ ನಿನ್ನ ಓದು ನೀನು ಮಾಡಿಕೊಂಡು ಸುಮ್ಮನಿರು’ ಎಂದು ಪತ್ರ ಬರೆಸಿ ಸಮಾಧಾನ ಹೇಳಿದ್ದ. ಆದರೂ ನಾನು ಆಗಿರುವ ಅವಮಾನದ ಬಗ್ಗೆ ಚಿಂತಿಸುತ್ತಿದ್ದಾಗ ಒಂದು ದಿನ ಮೈಸೂರಿಗೆ ಬಂದಿದ್ದ ಕಂದಾಯ ಮಂತ್ರಿಗಳಾಗಿದ್ದ ಬಸವಲಿಂಗಪ್ಪನವರ ಹತ್ತಿರ ಹೋಗಿ, ನಮ್ಮೂರಲ್ಲಿ ಸಾರ್ವಜನಿಕ ಬಾವಿಯಿಂದ ನೀರು ಸೇದಲು ಲಿಂಗಾಯತರು ತೊಂದರೆ ಕೊಡುತ್ತಿರುವ ಬಗ್ಗೆ ಹೇಳಿದೆ.
ಅವರು ಅದನ್ನು ಮನಸ್ಸಿನಲ್ಲಿಕೊಂಡು ಬೆಂಗಳೂರಿಗೆ ವಾಪಸಾಗಿದ್ದರು. ನಮ್ಮೂರ ಛರ್ಮನ್ ಬಸಪ್ಪನವರು ಮತ್ತು ನಮ್ಮ ಹರಿಹರದವರೇ ಬಿ. ಬಸವಲಿಂಗಪ್ಪನವರು ಮೊದಲಿಂದಲೂ ಬಳಕೆಯಲ್ಲಿದ್ದವರಾಗಿದ್ದರು. ಛರ್ಮನ್ ಬಸಪ್ಪನವರು ಇನ್ನು ನಮ್ಮ ಊರಿನವರೊಡನೆ ಬೆಂಗಳೂರಲ್ಲಿ ತಮ್ಮ ಯಾವುದೋ ಕೆಲಸಕ್ಕೆ ಭೇಟಿ ಮಾಡಿದಾಗ ನಾನು ಹೇಳಿದ ವಿಷಯವನ್ನು ಪ್ರಸ್ತಾಪಿಸಿ, ‘ನೀವೇನು ಹೆಂಡ ಕುಡಿಯೋದಿಲ್ಲವಾ? ಮಾಂಸ ತಿನ್ನೋದಿಲ್ವಾ’ ಎಂದೆಲ್ಲಾ ಕೇಳಿ ‘ಬಸವಣ್ಣ ಏನು ಹೇಳಿದ್ದಾನೆ ಗೊತ್ತಾ? ಅದನ್ನ ಪಾಲಿಸೋದು ಬಿಟ್ಟು, ಸರ್ಕಾರ ಕಟ್ಟಿಸಿದ ಬಾವಿಯ ನೀರು ಸೇದಲು ಅಡ್ಡಿಪಡಿಸಬಾರದೆಂದು ಗರ್ಜನೆ ಹಾಕಿ ತಾಕೀತು ಮಾಡಿ ಕಳಿಸಿದ್ದರು.
ನಮ್ಮೂರ ಛರ್ಮನ್ ಬಸಪ್ಪನವರು ಬಹಳ ದಿನಗಳ ಕಾಲ ನಮ್ಮೂರ ಛರ್ಮನ್ರಾಗಿ ಎಲ್ಲರ ಜೊತೆ ಒಳ್ಳೆಯ ಸಂಬಂಧವಿಟ್ಟುಕೊಂಡಿದ್ದರು. ಆದರೆ ಊರ ಸಮಷ್ಟಿಯ ಸಮಸ್ಯೆಗಳು ಬಂದಾಗ ಧೈರ್ಯವಾಗಿ ಒಬ್ಬರೇ ತೀರ್ಮಾನ ತೆಗೆದುಕೊಳ್ಳಲು ಆಗುತ್ತಿರಲಿಲ್ಲ. ಆದರೆ ಬೆಂಗಳೂರಿನಿಂದ ಬಂದವರೇ ಯಾರು ನಿಮಗೆ ನೀರು ತರಲು ಅಡ್ಡಿಪಡಿಸಿದವರು ಎಂದು ಹೇಳಿ ಅವರೇ ನಮ್ಮ ಕೇರಿಗೆ ಬಂದು ನಮ್ಮವರನ್ನೇ ನೀರು ಸೇದಿಕೊಳ್ಳಲು ಹೇಳಿದ್ದರು. ಊರಲ್ಲಿ ವಿರೋಧಿಸಿದವರಿಗೆ ಸರ್ಕಾರದಿಂದ ಆದೇಶವಾಗಿದೆ ಎಂದೆಲ್ಲ ಹೇಳಿ ಬಾಯಿ ಮುಚ್ಚಿಸಿದ್ದರು. ಛರ್ಮನ್ ಬಸಪ್ಪನವರು ಸುಮಾರು 20 ವರ್ಷಗಳ ಕಾಲ ಛರ್ಮನ್ರಾಗಿದ್ದರು. ಯಾರಿಗೂ ಕೇಡು ಬಯಸುವ ವ್ಯಕ್ತಿಯಾಗಿರಲಿಲ್ಲ. ಇದೇ ಸಮಸ್ಯೆ ಬೇರೆಯವರ ಕೈಗೆ ಬಿದ್ದಿದ್ದರೆ, ಏನೆಲ್ಲಾ ಅನಾಹುತ ಮಾಡುತ್ತಿದ್ದರೋ ಊಹಿಸಲೂ ಅಸಾಧ್ಯ.
ಈ ಹಿನ್ನೆಲೆಯಲ್ಲಿ ಈಗ ಊರ ಮಟ್ಟದಲ್ಲಿ ಮತ್ತೊಂದು ಮಹತ್ತರವಾದ ಸಮಸ್ಯೆಯಾಗಿ ಎದ್ದು ಕೂತಿತ್ತು. ಅದು ಭೂ ನ್ಯಾಯ ಮಂಡಳಿಗೆ ಅರ್ಜಿ ಫಾರಂ ಹಾಕಿದ್ದು. ಹರಿಹರದಲ್ಲಿ ನಡೆಸುತ್ತಿದ್ದ ಭೂನ್ಯಾಯ ಮಂಡಳಿಯ ಮುಂದೆ ಹಾಜರಾಗಬೇಕು. ನಮ್ಮವರೆಲ್ಲ ದೇವಸ್ಥಾನದ ಧರ್ಮದರ್ಶಿಗಳ ಜೊತೆಗೆ ಮಾತಾಡಿಕೊಂಡು ಅವರು ತರುತ್ತಿದ್ದ ಟ್ರಾಕ್ಟರ್ನಲ್ಲಿ ಕೂತು ಹೋಗುತ್ತಿದ್ದರು. ನಮ್ಮ ಅಣ್ಣ ತಿಪ್ಪಣ್ಣ ಮಾತ್ರ ಅವರ ಜೊತೆಗೆ ಹೋಗುತ್ತಿರಲಿಲ್ಲ. ಅವರ ಜೊತೆ ಇರುವಾಗ, ನೀವು ಹೇಳಿದ ಹಾಗೆ ಸಾಕ್ಷಿ ಹೇಳುತ್ತೇವೆಂದು ಅವರ ಹತ್ತಿರವೇ ಬೀಡಿ ಕೇಳಿ ಸೇದಿಕೊಳ್ಳುತ್ತಿದ್ದರು. `ಇದೆಲ್ಲ ನಮ್ಮ ಹುಡುಗನ ಕೆಲಸ, ನಮಗ್ಯಾಕಣ್ಣ ದೇವರ ಜಮೀನು’ ಎಂದೆಲ್ಲ ಅವರ ಜೊತೆಯೇ ತಾಳ ಹಾಕುತ್ತ ಇದ್ದರು. ನಾನು ಊರಿಗೆ ಹೋದಾಗ ಯಾವಾಗ ತೀರ್ಮಾನಿಸಲಾಗುತ್ತದೆ ಎಂದು ಬಂದು ಗುಟ್ಟಾಗಿ ನನ್ನ ಬಳಿ ಕೇಳುತ್ತಿದ್ದರು. ನಮ್ಮವರೆಲ್ಲರ ಅದೃಷ್ಟವೋ ಎನ್ನುವಂತೆ ನನಗೆ 1969-1972ರಲ್ಲಿ ಮಹಾರಾಜಾ ಕಾಲೇಜಿನಲ್ಲಿ ಸಹಪಾಠಿಯಾಗಿದ್ದ ಕೆ.ಎಂ. ಶಂಕರಲಿಂಗೇಗೌಡರನ್ನು ದಾವಣಗೆರೆ ಭೂನ್ಯಾಯ ಮಂಡಳಿಯ ಅಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿತ್ತು. ನಾನು ನಮ್ಮ ಊರಿನ ಸ್ಥಿತಿಯನ್ನೆಲ್ಲ್ಲ ಅವರಿಗೆ ವಿವರಿಸಿ, ನಮಗೆ ಆದಷ್ಟು ಬೇಗ ಇತ್ಯರ್ಥಗೊಳಿಸಿಕೊಡಬೇಕೆಂದು ಅವರಲ್ಲಿ ವಿನಂತಿಸಿದೆ. ನಾನು ಹೋಗಿ ವಿನಂತಿಸಿದ 3-4 ತಿಂಗಳಲ್ಲಿ ನಮ್ಮವರೆಲ್ಲರ ಹೆಸರಿಗೆ ಭೂನ್ಯಾಯ ಮಂಡಳಿಯಲ್ಲಿ 1976ರ ವರ್ಷದ ಮಧ್ಯ ಭಾಗದಲ್ಲಿ ಭೂನ್ಯಾಯ ಮಂಡಳಿಯಿಂದ ತೀರ್ಮಾನಿಸಲಾಗಿತ್ತು.
ಆ ಸಂದರ್ಭದಲ್ಲಿ ಹೆಚ್. ಶಿವಪ್ಪನವರು ಹರಿಹರ ತಾಲ್ಲೂಕು ಶಾಸಕರು ಮತ್ತು ಭೂನ್ಯಾಯ ಮಂಡಳಿಯ ಸದಸ್ಯರಾಗಿದ್ದರು. ಅವರು ನಮಗೆಲ್ಲ ಜಮೀನು ನೋಂದಾಯಿಸುವ ಪ್ರಕರಣದಲ್ಲಿ ವಿರೋಧಿಸದೆ ಸಹಕಾರ ನೀಡಿದ್ದನ್ನು ನಾನು ನೆನಪಿಸಿಕೊಳ್ಳಬೇಕು. ಆದೇಶ ನೀಡುವ ಸಮಯದಲ್ಲಿ ದೇವಸ್ಥಾನದ ಧರ್ಮದರ್ಶಿಗಳು, ಭೂನ್ಯಾಯ ಮಂಡಳಿಯ ಅಧ್ಯಕ್ಷರ ಎದುರೇ ‘ಊರಿಗೆ ರ್ರಲೇ ನೋಡಿಕೊಳ್ಳುತ್ತೇವೆ’ ಎನ್ನೋ ಧಮ್ಕಿ ಹಾಕಿದಾಗ, ಅಧ್ಯಕ್ಷರು ‘ನಿಮ್ಮನ್ನೆಲ್ಲ ಪೊಲೀಸ್ ಕರೆಸಿ ಈಗಲೇ ಜೈಲಿಗೆ ಕಳಿಸುತ್ತೇನೆಂದು ಹೇಳಿ ಎಚ್ಚರಿಕೆ ನೀಡಿದರೆಂದು ನಮ್ಮವರೆಲ್ಲ ನನ್ನ ಬಳಿ ಸಂತೋಷದಿಂದ ಎಲ್ಲ ಮುಗಿದ ಮೇಲೆ ಹೇಳಿಕೊಂಡಿದ್ದರು.
ಮುಂದುವರಿಯುವುದು
ಸುದ್ದಿದಿನ.ಕಾಂ|ವಾಟ್ಸಾಪ್|9980346243