Connect with us

ದಿನದ ಸುದ್ದಿ

ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ

Published

on

  • ರುದ್ರಪ್ಪ ಹನಗವಾಡಿ

ಅಪ್ಪ ಮೊದಲಿನಿಂದಲೂ ಎಲೆ ತೋಟ ಮಾಡಿಕೊಂಡು ಬರುತ್ತಿದ್ದ ಬಗ್ಗೆ ಆಗಲೇ ಬರೆದಿದ್ದೇನೆ. ಅದರಿಂದಲೇ ನಮ್ಮೆಲ್ಲರ ಜೀವನ ಕೊರತೆ ಕಾಣದಂತೆ ನಡೆಯುತ್ತಿತ್ತು. ನಮಗೆ ಸ್ವಂತ ತೋಟದ ಜಮೀನು ಇಲ್ಲದ್ದರಿಂದ ಕಪ್ಪಲಿ ಮಾಡಿ ಬೇರೆಯವರ ಜಮೀನನ್ನು ಕೋರಿಗೆ ಮಾಡುತ್ತಿದ್ದರು.

ಕರ್ನಾಟಕದಲ್ಲಿ ಈ ಪದ್ಧತಿ ಬೇರೆ ಬೇರೆ ಪ್ರದೇಶಗಳಲ್ಲಿ ವಿವಿಧ ರೀತಿಯಲ್ಲಿ ಜಾರಿಯಲ್ಲಿರುವುದನ್ನು ನೋಡುತ್ತೇವೆ. ಭೂಮಾಲೀಕನು ಮತ್ತು ಅದರಲ್ಲಿ ದುಡಿಯುವವ, ಬರುವ ಒಟ್ಟು ಆದಾಯದಲ್ಲಿ ಸಮನಾಗಿ ಹಂಚಿಕೊಳ್ಳುವ ವ್ಯವಸ್ಥೆ ಇರುತ್ತಿತ್ತು. ಹೀಗೆ ಕೋರಿಗೆ ಮಾಡಿಕೊಳ್ಳುತ್ತಿದ್ದ ಮಾಲೀಕ ಮತ್ತು ಶ್ರಮಿಕರಿಬ್ಬರಲ್ಲಿ ನನ್ನ ಬಾಲ್ಯದ ದಿನಗಳಲ್ಲಿ ಅನ್ಯೋನ್ಯ ಸಂಬಂಧಗಳಿರುತ್ತಿದ್ದವು. ಹಬ್ಬ ಹರಿದಿನ, ಮದುವೆ ಮುಂಜಿಗಳಲ್ಲಿ, ಸಾವು ನೋವುಗಳಲ್ಲಿ ಬಂಧುಗಳಂತೆ ಒಬ್ಬರಿಗೊಬ್ಬರು ನೆರವಾಗುತ್ತಿದ್ದರು.

ಹೀಗೆ ಹೆಚ್ಚಿನ ಜಮೀನುಗಳು ಇದ್ದ ಮನೆತನದವರು ಕೋರಿಗೆ ನೀಡಿದ ಜನರೊಡನೆ ಅನೇಕ ತಲೆಮಾರುಗಳಿಂದ ಕೋರಿನ ವ್ಯವಸ್ಥೆಯಲ್ಲಿ ತೋಟ, ಹೊಲಗಳನ್ನು ಮಾಡಿಕೊಂಡು ಬರುತ್ತಿದ್ದರು. ಕೆಲವು ಭೂಮಾಲೀಕರು, ತೋಟದಲ್ಲಿ ದುಡಿಯುತ್ತಿದ್ದ ಕೋರಿನವರಿಗೆ ಬರುವ ಆದಾಯದಲ್ಲಿ ಸರಿಯಾಗಿ ಹಂಚಿಕೊಡದೆ ಮೋಸ ಕೂಡ ಮಾಡುತ್ತಿರುವ ವಿಚಾರಗಳನ್ನು ಕೂಡ ಊರಲ್ಲಿ ಜನರು ಅಲ್ಲಲ್ಲಿ ಮಾತಾಡಿಕೊಳ್ಳುತ್ತಿದ್ದರು. ಏಕೆಂದರೆ ಬೆಳೆದ ಎಲೆ ಪೆಂಡಿಗಳನ್ನು ಹುಬ್ಬಳ್ಳಿ, ಧಾರವಾಡ, ಹೊಸಪೇಟೆ, ಕಂಪ್ಲಿಗಳಿಗೆ ಭೂಮಾಲೀಕರುಗಳೇ ಮಾರಾಟ ಮಾಡಲು ಹೋಗುತ್ತಿದ್ದರು.

ಅಲ್ಲಿನ ದಲಾಲರು ಹರಾಜು ಹಾಕಿ ನೀಡಿದ ಪಟ್ಟಿಯನ್ನು ಕೋರಿನವರಿಗೆ ಸರಿಯಾಗಿ ತೋರಿಸದೆ ಮತ್ತು ಓದಲು ಬಾರದೆ ಇರುವ ಕೋರಿನವರಿಗೆ ಮೋಸ ಮಾಡುತ್ತಿದ್ದರು. ಆದರೆ ಅಪ್ಪ ಮಾಡಿಕೊಂಡು ಬರುತ್ತಿದ್ದ ಕೋರಿನ ತೋಟದ ಯಜಮಾನರುಗಳು ನಾನು ಚಿಕ್ಕಂದಿನಿಂದಲೂ ನೋಡಿದ ದೊಡ್ಡಮನಿ ಬಸಣ್ಣ, ಸಣ್ಣಮನಿ ರುದ್ರಜ್ಜ, ಬಣಕಾರ್ ನಾಗಪ್ಪ ಎಂಬ ಭೂಮಾಲೀಕರುಗಳು ಎಂದೂ ಆ ರೀತಿ ಮಾಡಿದವರಲ್ಲ.

ದೊಡ್ಡಮನಿ ಬಸಣ್ಣನದು ವರ್ಣರಂಜಿತ ವ್ಯಕ್ತಿತ್ವ. ಇವರ ಹಿಂದಿನ ವಂಶಕ್ಕೆ ಹೋದರೆ ಶಿವಪ್ಪಜ್ಜ ಎಂಬ ಹಿರಿಯ, ಅಪ್ಪನನ್ನು `ಹನುಮಂತು’ ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ನಾನು 13-14ನೇ ವಯಸ್ಸಿನಲ್ಲಿ ಇದ್ದಾಗ ಅಪ್ಪನನ್ನು ಹಾಗೆ ಕರೆಯುತ್ತಿದ್ದವರನ್ನು ನಾನು ಎಲ್ಲೂ ಕೇಳಿರಲಿಲ್ಲ. ಶಿವಪ್ಪಜ್ಜನ ತಂಗಿಯಾಗಿದ್ದ ಸಿದ್ದಜ್ಜಿ ತನ್ನ ಗಂಡನ ಕಾಲಾನಂತರ ತವರು ಮನೆಗೆ ಬಂದು ಅಣ್ಣ ಶಿವಪ್ಪಜ್ಜನ ಮನೆಯಲ್ಲೇ ಇದ್ದು ತೋಟ ಮನೆಗಳಲ್ಲಿ ಎರಡಾಳಿನ ಕೆಲಸ ಮಾಡುತ್ತಿದ್ದರು. ಶಿವಪ್ಪಜ್ಜನ ಅಣ್ಣ ತಮ್ಮಂದಿರು ದೊಡ್ಡ ಮನೆತನ ಮತ್ತು ದೊಡ್ಡ ನಡವಳಿಕೆ ಕೂಡ.

ಊರಲ್ಲಿನ ದೇವರ ಕೆಲಸವಾಗಲೀ, ಮದುವೆ ಮುಂಜಿಗಳಲ್ಲಿ ಅವರಿಲ್ಲದೆ ನಡೆಯುತ್ತಿರಲಿಲ್ಲ. ಅದೇನೋ ಮಕ್ಕಳಾಗಲಿಲ್ಲ ಎಂದು ಒಂದೆರಡು ಮದುವೆಯಾಗಿ ಕೊನೆಯಲ್ಲಿ ಚಿಕ್ಕ ಹೆಂಡತಿಗೆ ಗಂಡು ಮಕ್ಕಳಾಗದೇ ಒಂದು ಹೆಣ್ಣು ಮಗಳಿದ್ದು, ಅವರು ನಮ್ಮ ದೊಡ್ಡಕ್ಕ ಕೊಟ್ರಕ್ಕನ ಸಹಪಾಠಿಯಾಗಿ ಶಾಲೆಗೆ ಹೋಗುತ್ತಿದ್ದುದನ್ನು ಅಕ್ಕ ಈಗಲೂ ನೆನಸಿಕೊಳ್ಳುತ್ತಾಳೆ. ಅಪ್ಪ ಇವರ ತೋಟ ಮಾಡುತ್ತಿದ್ದ ಸಮಯದಲ್ಲಿ ನಾನು ತೋಟಕ್ಕೆ ಬುತ್ತಿ ತೆಗೆದುಕೊಂಡು ಹೋಗುತ್ತಿದ್ದೆ. ಎಲ್ಲಾ ಒಟ್ಟಿಗೆ ಕೂತು ಉಣ್ಣುವಾಗ, ಶಿವಪ್ಪಜ್ಜ, ಸಿದ್ದಜ್ಜಿ ಅಪ್ಪನೊಡನೆ ಆತ್ಮೀಯರಾಗಿ ಮಾತಾಡುತ್ತಿದ್ದು ಅವರ ಮನೆತನದಲ್ಲಿನ ಬಂಗಾರದ ಹಂಚಿಕೆಯಲ್ಲಿ ಆಗಿರುವ ತಾರತಮ್ಯಗಳನ್ನು ಮಾತಾಡುತ್ತಿದ್ದರೆ ನಾನೂ ಕೇಳಿಸಿಕೊಳ್ಳುತ್ತಿದ್ದೆ. ಅಪ್ಪನ ಜೊತೆ ಶಿವಪ್ಪಜ್ಜ, ಸಿದ್ದಜ್ಜಿ ಅವರ ಸಂಬಂಧಗಳು ತುಂಬಾ ಆತ್ಮೀಯವಾಗಿರುತ್ತಿದ್ದವು. ಇಂತಹ ಮನೆತನದ ಕುಡಿಯಾಗಿದ್ದ ಬಸಣ್ಣ ಚಿಕ್ಕ ವಯಸ್ಸಿನವರಾಗಿದ್ದು ಅವರ ಪಾಲಿನ ತೋಟದಲ್ಲಿ ಅಪ್ಪ ಕೋರಿಗೆ ಮಾಡುತ್ತಿದ್ದ.

ಅಪ್ಪನನ್ನು ಆತ ಅಣ್ಣಾ ಎಂದು ಯಾವಾಗಲೂ ಕೂಗಿ ಕರೆಯುತ್ತಿದ್ದ. ಎಂದೂ ಏಕವಚನದಲ್ಲಿ ಮಾತಾಡಿದ್ದು ನಾನು ಕೇಳಿರಲಿಲ್ಲ. ಮತ್ತು ಬೆಳೆದ ಬೆಲೆಯಲ್ಲಿ ಸಮಾನ ಹಂಚಿಕೆಯಲ್ಲೂ ಏನೂ ಮೋಸ ಇರುತ್ತಿರಲಿಲ್ಲ. ಆದರೆ ಆತ ಹೊಸ ತಲೆಮಾರಿನ ಶೋಕಿಗೆ ಮಾರುಹೋಗಿದ್ದ. ಊರಿನಲ್ಲಿ ಮೊದಲು ರ‍್ಯಾಲಿ ಬೈಸಿಕಲ್ ನಂತರ ಸೈಕಲ್ ಮೋಟಾರ್ ತಂದು ಓಡಾಡಿಸಿದ! ಲಿಂಗಾಯತರಲ್ಲಿ ನಿಷಿದ್ಧವಾದ ಕುಡಿತ ಮತ್ತು ಮಾಂಸಾಹಾರವನ್ನು ಯಥೇಚ್ಛವಾಗಿ ಸೇವಿಸುತ್ತಿದ್ದ. ಅದಕ್ಕಾಗಿ ಯಾರಿಗೂ ಕೇರ್ ಮಾಡುತ್ತಿರಲಿಲ್ಲ. ಆದರೂ ಅವರಿವರು ಅವನ ಹಿಂದು ಮುಂದೆ ಮಾತಾಡಿಕೊಳ್ಳುವುದನ್ನು ಬಾಲಕನಾಗಿದ್ದ ನಾನು ಕೇಳಿಸಿಕೊಳ್ಳುತ್ತಿದ್ದೆ. ಯಾವಾಗಲಾದರೂ ನಮ್ಮ ಮನೆ ಕಡೆಗೆ ಬಂದಾಗ ಹೊರಕಟ್ಟೆಯಲ್ಲಿ ಕೂತು ಅವನ ಮೂಗಿಗೆ ಮಾಂಸದ ಸಾರಿನದೋ, ಕೋಳಿ ಸಾರಿನದೋ ಘಂ ವಾಸನೆ ಬಡಿದರೆ, ಎದ್ದು ಹೋಗದೆ ತಡರಾತ್ರಿವರೆಗೆ ಕೂತು ಅಪ್ಪನೊಟ್ಟಿಗೆ ಪಾರ್ಟಿ ಮಾಡಿಕೊಂಡು ಹೋಗುತ್ತಿದ್ದ.

ಹೀಗಿದ್ದ ಬಸಣ್ಣನಿಗೆ ಊರಲ್ಲಿದ್ದ ಸುಂದರಿಯೊಬ್ಬಳ ಸಹವಾಸವಾಗಿ ಆಕೆ ನಾವು ಮಾಡುತ್ತಿದ್ದ ಕೋರಿನ ತೋಟಕ್ಕೆ ಬರುತ್ತಿದ್ದಳು. ಅದ್ಯಾವ ವಿಷಯದಲ್ಲಿ ವಿವಾದವಾಯಿತೋ ಅಪ್ಪ ಬೆಳೆದು ನಿಂತಿದ್ದ ತೋಟವನ್ನು ನಿಂತ ಕಾಲಲ್ಲಿ ಬಿಟ್ಟು ಹೊರ ಬಂದು, ಬಣಕಾರ ನಾಗಪ್ಪ ಎನ್ನುವವರ ಬೇರೊಂದು ಕೋರಿನ ತೋಟವನ್ನು ಹಿಡಿದಿದ್ದ. ಇಲ್ಲಿ ಕಪ್ಪಲಿಯನ್ನು ಹೂಡಿ ನೀರು ಹಾಯಿಸುವುದು, ಅದರಿಂದ ಶ್ರಮ ಜಾಸ್ತಿಯಾಗಿರುತ್ತಿತ್ತೇ ಹೊರತು ಆದಾಯದಲ್ಲಿ ಅಂತಹದೇನೂ ಹೆಚ್ಚುವರಿ ಕಾಣುತ್ತಿರಲಿಲ್ಲ. ಆಗ ನಾನು ನೀರು ಹಾಯಿಸುವ, ಎಲೆ ಕೊಯ್ಯುವ, ಬಳ್ಳಿಯನ್ನು ಬೆಳೆದ ಮುಂಡಗಳಿಗೆ ಕಟ್ಟುವ ಕೆಲಸವನ್ನು ಅಪ್ಪ, ಅಣ್ಣನ ಜೊತೆ ಸೇರಿ ಮಾಡುತ್ತಿದ್ದೆ. ಆಗ ಏಳನೆ ತರಗತಿ ಪಾಸುಮಾಡಿ ಸಾಗರದಲ್ಲಿ ಹೈಸ್ಕೂಲಿಗೆ ಸೇರಿದ್ದೆ. ಕೋರಿನ ತೋಟದ ಮಾಲೀಕರಾಗಿದ್ದ ಬಣಕಾರ್ ನಾಗಪ್ಪ ಅವರ ಮಗ ಜಯಣ್ಣ ನನ್ನ ಕಿರಿಯ ಸಹಪಾಠಿಯಾಗಿ ಪ್ರೈಮರಿ ಶಾಲೆಯಲ್ಲಿ ಓದುತ್ತಿದ್ದ.

ನಾಗಪ್ಪಜ್ಜನೂ ದೊಡ್ಡ ಮನುಷ್ಯ. ಆಸೆಯವನಾಗಿರಲಿಲ್ಲ. ಬಂದ ಹಣವನ್ನು ಸರಿಯಾಗಿ ಹಂಚಿ ಕೊಡುತ್ತಿದ್ದ. ಅವರ ಮನೆಯವರೆಲ್ಲ ಇಂದಿಗೂ ಅದೇ ಆತ್ಮೀಯತೆಯನ್ನು ತೋರುವ ಬಂಧುಗಳಾಗಿದ್ದಾರೆ. ನಾಗಜ್ಜನ ಹೆಂಡತಿ ಗಿರಿಜಕ್ಕ, ತಾಯಿ ಹೃದಯದವರು. ನಾನು ಯಾವುದೇ ಕೆಲಸಕ್ಕೆ ಅವರ ಮನೆಗೆ ಹೋದಾಗ ರೊಟ್ಟಿ ಉಣ್ಣೆಂದು ಜುಲುಮೆ ಮಾಡಿ ಉಣಿಸುತ್ತಿದ್ದರು. ಅದೇಕೋ ಕಪ್ಪಲಿಯಿಂದ ದುಡಿಮೆ ಉಚಾಯಿಸದ ಕಾರಣ ಅಪ್ಪ ಬೇರೊಬ್ಬ ಭೂಮಾಲೀಕರಾದ ಸಣ್ಣಮನಿ ರುದ್ರಜ್ಜ, ಹಾಲಸಿದ್ದಪ್ಪ ಎಂಬುವರು ಹರಾಜಿನಲ್ಲಿ ಎಂಟು ವರ್ಷಗಳಿಗೆ ಹಣ ಗುತ್ತಿಗೆ ಪಡೆದ ಊರ ದೇವರ ಜಮೀನನ್ನು, ಕೋರಿಗೆ ಮಾಡಲು ಅಪ್ಪ ತೀರ್ಮಾನಿಸಿದ್ದರು.

ಅದೇನು ಅದೃಷ್ಟವೋ ಎಂಬಂತೆ ತೋಟವೊಂದು ನಂದನವನದಂತೆ ಬೆಳೆದು ಸಾಕಷ್ಟು ಆದಾಯ ಬರುತ್ತಿತ್ತು. ಈ ಸಂದರ್ಭದಲ್ಲಿಯೇ ಅಪ್ಪ ಇಡೀ ಉತ್ಪನ್ನವನ್ನು ನಾಲ್ಕು ಸಾವಿರ ರೂಪಾಯಿಗಳಿಗೆ ಗುತ್ತಿಗೆಗೆ ಒಪ್ಪಿಕೊಂಡು 100 ರೂಗಳಿಗೆ ಏಳೂವರೆ ಪೆಂಡಿಯಂತೆ ಎಲೆ ಪೆಂಡಿ ನೀಡಬೇಕಾಗಿದ್ದ ಕರಾರಿಗೆ ಒಪ್ಪಿ ಕೊಟ್ಟಿದ್ದರು.

ಈ ರೀತಿ ಎಲೆ ಕೊಯ್ದುಕೊಂಡು ಹೋಗುತ್ತಿದ್ದ ಕೇಣಿದಾರರು ಉಳಿಯುತ್ತಿದ್ದ ಅರ್ಧ ಅಥವಾ ಕಾಲು ಪೆಂಡಿಯ ಎಲೆಯನ್ನು ತೆಗೆದುಕೊಳ್ಳದೆ ತೋಟದವರಿಗೆ ಬಿಟ್ಟುಬಿಡುತ್ತಿದ್ದರು. ಅದನ್ನು ಸಾಮಾನ್ಯವಾಗಿ ಕೋರಿಗೆ ಮಾಡಿದವರೇ ಕೊಯ್ದುಕೊಂಡು ಮಾರಿ ಕೊಳ್ಳುತ್ತಿದ್ದರು. ಅದು ತೋಟದ ಮಾಲೀಕನಿಗೆ ಗೊತ್ತಿದ್ದರೂ ಸಾಮಾನ್ಯವಾಗಿ ಕೇಳುತ್ತಿರಲಿಲ್ಲ.ಇಂತಹದೊಂದು ಎಲೆ ಕೊಯ್ಯುವ ಸಮಯದಲ್ಲಿ ಕರಾರುದಾರನಿಗೆ ಕೊಟ್ಟು ಉಳಿದ ಸುಮಾರು ಕಾಲು ಪೆಂಡಿಯಷ್ಟು ಎಲೆ ಉಳಿದಿತ್ತು. ನಾನೇ ಕೊಯ್ದೆನೋ ನಮ್ಮ ಅಣ್ಣ ಹೇಳಿದನೋ ಅಪ್ಪನಿಗೆ ಗೊತ್ತಿಲ್ಲದಂತೆ ನಾನು ಬಂದು ಬೆಳಿಗ್ಗೇನೆ ಎಲೆ ಕೊಯ್ಯುತ್ತಿದ್ದೆ. ಆಗ ಒಳ್ಳೆಯ ರೇಟು ಬೇರೆ ಇದ್ದುದರಿಂದ ಮಾರಿದ ನಂತರ ಖರ್ಚಿಗೆ ದುಡ್ಡು ಸಿಗುವುದೆಂಬ ಯೋಚನೆಯಲ್ಲಿದ್ದೆ. ಆಗ ಬಹುಶಃ ನಾನು ಆಗಷ್ಟೇ ಹೈಸ್ಕೂಲಿಗೆ ಸೇರಿ ರಜೆಯಲ್ಲಿ ಊರಿಗೆ ಬಂದಿದ್ದೆ.

ನನ್ನ ಪಾಡಿಗೆ ನಾನು ಎಲೆ ಕೊಯ್ಯುವ ಸಮಯಕ್ಕೆ ಮಾಲೀಕ ರುದ್ರಪ್ಪಜ್ಜನ ತಮ್ಮ ಹಾಲಸಿದ್ದಪ್ಪ ಬಂದವನೇ ನಾನು ಎಲೆ ಕೊಯ್ಯುತ್ತಿರುವುದನ್ನ ನೋಡಿ, ಇದೇನು ಕಳ್ಳತನದಿಂದ ಎಲೆ ಕೊಯ್ಯುತ್ತಿಯಲ್ಲ ಎಂದು ಪ್ರಾರಂಭಿಸಿದವ ನಾನೊಂದು ಮಹಾಪರಾಧ ಮಾಡಿರುವುದಾಗಿ ಬೈಯುತ್ತಾ ನನ್ನ ಮೇಲೆ ಕಳ್ಳತನದ ಆರೋಪ ಹೊರಿಸಿ ಎಲೆ ಕೊಯ್ಯು ವುದನ್ನ ನಿಲ್ಲಿಸಿದ. ಆಗ ಅದೇನೇನೊ ಮಾತಾಡಿದವನೋ ನನಗಂತೂ ಸಹಿಸಿಕೊಳ್ಳಲಾಗದೆ ಅವಮಾನದಲ್ಲಿ ಕುಸಿದು ಹೋಗಿದ್ದೆ. ಬಡತನದ ಕ್ರೌರ್ಯವೆಂದರೆ ಏನೆಂಬುದನ್ನ ಅವನ ಬೈಗುಳಗಳಲ್ಲಿ ದಾಖಲಿಸುತ್ತಾ, ಕೊಯ್ದಿದ್ದ ಎಲೆ ಬುಟ್ಟಿಯನ್ನು ನನ್ನ ಮೇಲೆ ಹೊರಿಸಿಕೊಂಡು ಊರಲ್ಲಿ ಪಂಚಾಯ್ತಿ ಮಾಡಬೇಕೆಂದು ಉದ್ದಕ್ಕೂ ಬೈಯುತ್ತಾ ಊರ ವೀರಭದ್ರ ದೇವರ ಗುಡಿಗೆ ತಂದಿರಿಸಿದ್ದ.

ನಾನು ಅವಮಾನದಲ್ಲಿ ಕುಸಿದು ಹೋಗಿದ್ದೆ. ಅದ್ಯರ‍್ಯಾರು ಪಂಚಾಯ್ತಿ ಸೇರಿದ್ದಾರೋ ವಿವರ ಮರೆತು ಹೋಗಿದೆ. ನನ್ನ ಹೆಸರಿನವರೇ ಆಗಿದ್ದ ಬಣಕಾರ್ ರುದ್ರಜ್ಜ `ಇದೇನು ದೊಡ್ಡ ವಿಷ್ಯಾ ಅಂತ ಇಲ್ಲಿಗೆ ತಂದಿದಿಯಾ’ ಕೋರಿನ ತೋಟ ಮಾಡೋ ಹುಡುಗ, ಉಳಿದ ಎಲೆ ಕೊಯ್ಯತಾನ, ಅದೇನು ಅಪರಾಧನಾ ಎಂದು ಅವನಿಗೆ ಗದರಿಸಿದರು. ಕಡೆಗೆ `ಉಳಿದ ಎಲೆಯಲ್ಲೂ ಪಾಲು ಬೇಕಂತೆ ಕೊಡಪ್ಪ’ ಅವನಿಗೆ ಎಂದು ತೀರ್ಮಾನ ಹೇಳಿ ಮುಗಿಸಿದ್ದರು. ಅಲ್ಲಿ ಅಪ್ಪ ಮತ್ತು ಅಣ್ಣ ಇದ್ದರೋ ಇಲ್ಲವೋ ಗೊತ್ತಿಲ್ಲ. ಕೋರಿನ ತೋಟದಲ್ಲಿ ಬೆಳೆದ ಎಲ್ಲದರಲ್ಲೂ ನಮ್ಮ ದುಡಿಮೆಯ ಅರ್ಧ ಭಾಗ ಇರುತ್ತದೆ. ಇನ್ನರ್ಧಕ್ಕೆ ಯಾಕೆ ನಾವು ಬೇಡುವ ಕೆಲಸ ಮಾಡಬೇಕು.

ಇನ್ನು ಮೇಲೆ ಏನೇ ಉಳಿದರೂ ನಮ್ಮದೆಂದು ಆಸೆ ಪಡಬಾರದೆಂದು ಅಪ್ಪ ಹೇಳಿದ ಮಾತು ಇಂದಿಗೂ ಮರೆತಿಲ್ಲ. ತೋಟದಿಂದ ಗುಡಿವರೆಗೆ ಎಲೆಪುಟ್ಟಿಯ ಹೊತ್ತು ತಂದು ಪಂಚಾಯ್ತಿ ನಡೆಸಿದ ದಿನವನ್ನು ನನಗೆ ಈಗಲೂ ಮರೆಯಲಾಗುತ್ತಿಲ್ಲ. ಸದ್ಯ ಪಂಚಾಯಿತಿಯವರ ದೃಷ್ಟಿಯಲ್ಲಾದರೂ ಅದೊಂದು ದೊಡ್ಡ ಅಪರಾಧವಲ್ಲವೆಂಬಂತೆ ಮಾತಾಡಿದ್ದು ನನಗೆ ಸಮಾಧಾನ ತಂದಿತ್ತು. ನಂತರ ರಜೆ ಮುಗಿದ ಮೇಲೆ ಸಾಗರಕ್ಕೆ ಹೋಗಿ, ನನ್ನ ಅಭ್ಯಾಸ ಮುಂದುವರಿಸಿದೆ.

ಅಕ್ಕ ಭಾವ ನನ್ನ ಓದು ಬರಹಕ್ಕೆ ಸಹಕಾರಿಯಾಗಿದ್ದರು. ಸರಿಯಾದ ಕುಟುಂಬ ಯೋಜನೆಯ ಅರಿವು ಇರದೆ, ನಾನು ಸಾಗರಕ್ಕೆ ಬಂದಾಗ ಇದ್ದ ಒಬ್ಬಳೇ ಮಗಳ ಜೊತೆ ಮತ್ತೆ ಮೂರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಜನಿಸಿ ಅವರ ಕುಟುಂಬ ಹಿಗ್ಗುತ್ತಾ ಹೋಯಿತು. ನಾನು ಮನೆಯವನಾಗಿ ಸಾಮಾನ್ಯ ಕೆಲಸಗಳಾದ ನೀರು ತರುವುದು, ಕಸ ಗುಡಿಸುವುದು, ನೆಲ ಒರೆಸುವುದು, ಬಟ್ಟೆ ಒಗೆಯುವುದು, ಅಂಗಡಿಯಿAದ ಮನೆಗೆ ಬೇಕಾದ ದಿನಸಿ ತರುವುದು ಎಲ್ಲ ಕೆಲಸ ಮಾಡುತ್ತಿದ್ದೆ. ಅದಕ್ಕಾಗಿ ಒಮ್ಮೊಮ್ಮೆ ಅಕ್ಕ ನನಗೆ ಬಕ್ಷೀಸು ಸಹ ನೀಡುತ್ತಿದ್ದಳು.

ಹೈಸ್ಕೂಲು ಅಭ್ಯಾಸ ಮಾಡುತ್ತಾ ಎಸ್.ಎಸ್.ಎಲ್.ಸಿ.ಗೆ ಬಂದಾಗ ಮನೆಯಲ್ಲಿ ಮಕ್ಕಳ ಗಲಾಟೆಯಿಂದ ಓದಲು ಕಷ್ಟ ಎನ್ನೋ ಕಾರಣದಿಂದ ಸಾಗರದಲ್ಲಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುತ್ತಿದ್ದ ಹಾಸ್ಟೆಲ್‌ಗೆ ಸೇರಿಕೊಂಡೆ. ಆಗಿನ ಮುನಿಸಿಪಲ್ ಹೈಸ್ಕೂಲಿನಲ್ಲಿ ಹಾಸ್ಟೆಲ್‌ನಿಂದ ರ‍್ಮ ಶೇಖರ್ ಮತ್ತು ಅವರ ಅಣ್ಣ ಹನುಮಂತಪ್ಪ ಹಾಗೂ ಯಶವಂತಪ್ಪ ಒಟ್ಟು ನಾಲ್ಕು ಜನ ಎಸ್‌ಎಸ್‌ಎಲ್‌ಸಿ ತರಗತಿಗೆ ಹೋಗುತ್ತಿದ್ದೆವು. ಪರೀಕ್ಷೆ ಮುಗಿದು ರಿಸಲ್ಟ್ ಬಂದಾಗ ಸಾರ್ವಜನಿಕ ಹಾಸ್ಟೆಲ್‌ನಿಂದ ಪರೀಕ್ಷೆ ಬರೆದವರಲ್ಲಿ ನಾನೊಬ್ಬ ಮಾತ್ರ ಪಾಸಾಗಿದ್ದೆ. ಉಳಿದವರು ಒಂದೊಂದು ವಿಷಯದಲ್ಲಿ ಫೇಲಾಗಿದ್ದರು. ಮುನಿಸಿಪಲ್ ಹೈಸ್ಕೂಲಿನಲ್ಲಿ ಹಾಸ್ಟೆಲ್‌ನಿಂದ ಬರುತ್ತಿದ್ದ ಹುಡುಗರಲ್ಲಿ ನಾನೊಬ್ಬ ಪಾಸಾಗಿರುವ ಬಗ್ಗೆ ತಿಳಿದು ಸಂಸ್ಕೃತ ಅಧ್ಯಾಪಕರು ನನಗೆ ಕರೆದು ಪ್ರೋತ್ಸಾಹದ ಮಾತಾಡಿದ್ದನ್ನು ನಾನಿನ್ನೂ ಕೂಡ ಮರೆತಿಲ್ಲ.

ನಾನು ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಬಂದಾಗ ಊರಿನಲ್ಲಿದ್ದೆ. ನನ್ನ ರಿಜಿಸ್ಟ್ರೇಷನ್ ನಂ. 64960. ಆಗ ಫಲಿತಾಂಶಗಳು ದಿನಪತ್ರಿಕೆಗಳಲ್ಲಿ ಬರುತ್ತಿದ್ದವು. ಅಣ್ಣ ತಿಪ್ಪಣ್ಣ ಬೆಳಗಿನ ಜಾವ ಹೊಸಪೇಟೆಗೆ ವೀಳ್ಯದೆಲೆ ಮಾರಾಟ ಮಾಡಲು ಹೋಗುತ್ತಿದ್ದವನು ಹರಿಹರದಲ್ಲಿ ಪ್ರಜಾವಾಣಿ ಪೇಪರ್‌ನಲ್ಲಿ ನನ್ನ ಫಲಿತಾಂಶವನ್ನು ನೋಡಿ, ನನ್ನ ನಂಬರನ್ನು ಗುರ್ತು ಮಾಡಿ ನನ್ನೂರಿಗೆ ದಿನವೂ ಬರುತ್ತಿದ್ದ ಕ್ಷೌರಿಕ ನರಸಿಂಹಣ್ಣನ ಮುಖಾಂತರ ಪೇಪರ್ ಕಳಿಸಿದ್ದ. ನಾನು ಪೇಪರ್ ನೋಡಲು ಹರಿಹರಕ್ಕೆ ಹೋಗೋ ದಾರಿಯಲ್ಲಿ ನರಸಿಂಹಣ್ಣ ಸಿಕ್ಕು ನಾನು ಪಾಸಾಗಿರುವ ಬಗ್ಗೆ ನನ್ನ ಅಣ್ಣ ತಿಪ್ಪಣ್ಣ ನಂಬರ್ ಗುರ್ತು ಮಾಡಿ ಕೊಟ್ಟದ್ದನ್ನು ನನಗೆ ತೋರಿಸಿ ಸಂತೋಷಪಟ್ಟಿದ್ದ.

ಹನಗವಾಡಿಯಲ್ಲೇ ಹಲವು ವರ್ಷಗಳಿಂದ ಎಸ್.ಎಸ್.ಎಲ್.ಸಿಯಲ್ಲಿ ಸಂಶೋಧನೆ ಮಾಡುತ್ತಾ ಉಳಿದಿದ್ದ ಸ್ನೇಹಿತರೊಡನೆ ನಾನು ಎಸ್.ಎಸ್.ಎಲ್.ಸಿ. ಪರೀಕ್ಷೆ ಪಾಸಾದ ವಿಷಯ ಹೇಳಿದೆ. ಅರ‍್ಯಾರಿಗೂ ನಾನು ಪಾಸಾದ ಬಗ್ಗೆ ನಂಬಿಕೆ ಬರಲಿಲ್ಲ. ಅದರಲ್ಲಿ ಈಗಾಗಲೇ ನಾಲ್ಕು ವರ್ಷಗಳಿಂದ ಎಸ್.ಎಸ್.ಎಲ್.ಸಿ.ಯಲ್ಲೇ ಉಳಿದಿದ್ದ ಹಿರಿಯ ಮಿತ್ರರಲ್ಲೊಬ್ಬ `ಇಲ್ಲಪ್ಪಾ, ಪೇರ‍್ನಲ್ಲಿ ಬಂದಿರೋದು ನಂಬಕ್ಕಾಗಲ್ಲ, ಫಲಿತಾಂಶ ಸ್ಕೂಲಿಗೆ ಬರೋ ತನಕ ಏನು ಹೇಳುವುದಕ್ಕಾಗಲ್ಲ’ ಎಂದು ಬಾಣ ಬಿಟ್ಟು – ಪಾಸಾಗಿದ್ದೇನೆ ಎಂಬ ಅಸಾಧ್ಯ ಸಂತೋಷದ ಮೂಡಿನಲ್ಲಿದ್ದ ನನಗೆ ಅನುಮಾನದ ಕಿಚ್ಚು ಹಚ್ಚಿದ್ದ. ಆದರೂ ಇದ್ದ ಐದು ಮನೆಯ ಚಲುವಾದಿಗರ ಜೊತೆ ಊರ ಅನೇಕ ಜನರಿಗೆ ನಾನು ಎಸ್.ಎಸ್.ಎಲ್.ಸಿ. ಪಾಸಾದ ಸುದ್ದಿ ಸಂತೋಷ ನೀಡಿತ್ತು.

ನಮ್ಮೂರ ಹಿರಿಯ ರಾಜಕಾರಣಿ ಹೆಚ್. ಸಿದ್ದವೀರಪ್ಪ ನವರ ನಂತರ ಎಸ್.ಎಸ್.ಎಲ್.ಸಿ.ಯಲ್ಲಿ ಮೊದಲನೇ ಅಟೆಂಪ್ಟ್ನಲ್ಲಿ ಪಾಸಾದವನು ನಾನೇ ಎಂದು ಮಾತಾಡಿ ಕೊಳ್ಳುತ್ತಿದ್ದರು. ನಮ್ಮ ಚಿಕ್ಕಪ್ಪ ಮಹದೇವಪ್ಪನಂತೂ ತಮ್ಮ ಎರಡೂ ಕೈಮುಗಿದುಕೊಂಡು ‘ವಾಲಗದ ಸಮೇತ ವೀರಭದ್ರ ದೇವರಿಗೆ ಹಣ್ಣುಕಾಯಿ ಮಾಡಿಸೋಣ’ ಎಂದು ಸಂತೋಷದಲ್ಲಿ ಹೇಳಿದನಾದರೂ ಹಾಗೇನು ನಾನು ಮಾಡಲಿಲ್ಲ. ನನ್ನ ಎಸ್.ಎಸ್.ಎಲ್.ಸಿ. ವರೆಗಿನ ಓದಿನ ಜೊತೆ ಊರಲ್ಲಿ ರಜಾ ದಿನಗಳಲ್ಲಿ ಹಲವು ಕೆಲಸ ಮಾಡುತ್ತಿದ್ದೆ. ಚಲುವಾದಿಗಳಿಗೆ ವಿಶೇಷವಾದ ಬ್ಯಾಂಡ್‌ಸೆಟ್‌ವೊಂದನ್ನು ರೂಪಿಸಿಕೊಂಡಿದ್ದರು. ಊರ ದೇವರ ಚಾಕರಿಗೆಂದು ಅಪ್ಪ ಚಿಕ್ಕಪ್ಪಂದಿರು ಹಳೆಯ ಮೇಳ ಹೊಂದಿದ್ದರು. ಮೇಳದಲ್ಲಿ ಸುತಿ, (ಶ್ರುತಿ) ಸೊನಾಯಿ, (ಶಹನಾಯಿ) ಸಮಾಳ ಹಾಗೂ ಚೌಗಡ (ಚರ್ಮದ ವಾದ್ಯ) ಊರ ದೇವರ ಚಾಕರಿ ಜೊತೆಗೆ ಊರಲ್ಲಿನ ಮದುವೆ ಮತ್ತು ಸಾವುಗಳ ಸಮಯದಲ್ಲಿ ವಾದ್ಯಮಾಡಿ ಹಣ ಸಂಪಾದಿಸುತ್ತಿದ್ದರು. ಈ ಮ್ಯಾಳದಲ್ಲಿ ಹೋಗುವ ಸಂದರ್ಭದಲ್ಲಿ ಸಾಮೂಹಿಕವಾಗಿ ಎಲ್ಲರೂ ಶುಭ್ರವಾದ ಅಂಗಿ ಪಂಚೆ ಮತ್ತೊಂದು ಟವಲ್ ಜೊತೆಗೆ ತಮ್ಮ ಮ್ಯಾಳದ ಸಾಮಾನು ಮುಚ್ಚಲು ಬೇಕಾದ ಚೀಲಗಳನ್ನು ಅಚ್ಚುಕಟ್ಟಾಗಿ ಶುಚಿಗೊಳಿಸಿಕೊಂಡು ಹೋಗುತ್ತಿದ್ದರು. ಮದುವೆ ಸಮಯಗಳಲ್ಲಿ ಸಂಪಾದನೆ ಜೊತೆಗೆ ಖುಷಿಗಾಗಿ ಕೆಲವರು ನೀಡುವ ಹಣದ ರೂಪದ ಶಭಾಷ್‌ಗಿರಿಯಿಂದಾಗಿ ಸಾಮಾನ್ಯವಾಗಿ ಬಿರುಸಿನ ಹೊಲಮನಿ ಕೆಲಸಗಳು ರುಚಿಸುತ್ತಿರಲಿಲ್ಲ. ಆದರೆ ನಮ್ಮ ಊರಿನವರು ಇದಕ್ಕೆ ಅಪವಾದವೆಂಬಂತೆ ಹೊಲ ಮತ್ತು ತೋಟಗಳಲ್ಲಿ ಮುತುವರ್ಜಿಯಿಂದ ದುಡಿಯುತ್ತಿದ್ದರು. ಆದರೂ ನಮ್ಮ ಅಪ್ಪ ಅಗಾಗ `ಅರಿಶಿಣ ಕೂಳಿಗೋಗಿ ವರ್ಷದ ಕೂಳು ಕಳೆದು ಕೊಳ್ಳಬೇಡಿರೆಂದು’ ಎಚ್ಚರಿಸುತ್ತಿದ್ದರು.

ಊರಿನಲ್ಲಿ ಅಪ್ಪ ಚಿಕ್ಕಪ್ಪಂದಿರ ಮ್ಯಾಳ ಹಳೆಯದಾಯಿತೆಂದು ನಮ್ಮಣ್ಣನೂ ಸೇರಿದಂತೆ ಹೊಸಬರನ್ನು ಸೇರಿಸಿಕೊಂಡು ಹೊಸ ಬ್ಯಾಂಡ್ ಸೆಟ್ ತರಿಸಿ, ಅದಕ್ಕೊಬ್ಬ ಬ್ಯಾಂಡ್ ಮಾಸ್ತರರನ್ನು ನೇಮಿಸಿಕೊಂಡಿದ್ದರು. ಬರಿ ಐದಾರು ಜನರಿದ್ದ ಮ್ಯಾಳವು ಹೊಸ ಹುಡುಗರನ್ನೆಲ್ಲಾ ಸೇರಿಸಿ ಹತ್ತು ಜನರ ಗುಂಪೇ ಆಯಿತು. ನಾನು ಕೂಡ ತರಬೇತಿ ನೀಡುವ ಸಮಯದಲ್ಲಿ ಡೋಲು ಬಾರಿಸಲು ಪ್ರಯತ್ನಪಟ್ಟೆ. ಆದರೆ ಅದು ಯಾಕೋ ನನಗೆ ಕರಗತವಾಗಲಿಲ್ಲ. ಅದೇ ಸಮಯದಲ್ಲಿ ಅಪ್ಪ `ಏನು ಕಲಿತು ಏನು ಬಾರಿಸಿದರೂ ಕೆರ ಬಿಡುವಲ್ಲಿ ಕೂಳು ತಿನ್ನೋ ವಿದ್ಯೆ ಇದು. ನಿನಗೆ ಯಾಕೆ ಬೇಕು ಮಗನೇ’ ಎಂದು ನನ್ನ ಉತ್ಸಾಹಕ್ಕೆ ನೀರೆರಚಿದ್ದರು.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending