ಅಂತರಂಗ
ಆತ್ಮಕತೆ | ಮಹಾರಾಜಾ ಕಾಲೇಜಿನಲ್ಲಿ ಉಪನ್ಯಾಸಕನಾಗಿ : 1974-1976
- ರುದ್ರಪ್ಪ ಹನಗವಾಡಿ
1967ರಲ್ಲಿ ಎಸ್.ಎಸ್.ಎಲ್.ಸಿ. ಪಾಸು ಮಾಡಿದ ದಿನಗಳಿಂದಲೂ ಮುಂದಿನ ಕಲಿಕೆಗಾಗಿ ಮೈಸೂರಿಗೇ ಹೋಗಬೇಕೆಂದು ಕನಸು ಕಾಣುತ್ತಿದ್ದ ನನಗೆ ಅಲ್ಲಿಯೇ ಓದಿ ನಂತರ ಅಧ್ಯಾಪಕ ವೃತ್ತಿ ದೊರೆತದ್ದು ನನ್ನ ಸಂತೋಷಕ್ಕೆ ಪಾರವೇ ಇರಲಿಲ್ಲ. ಪ್ರಿನ್ಸಿಪಾಲರಾದ ಎನ್. ಶಂಕರಲಿಂಗಯ್ಯನವರು, ರಾಜ್ಯಶಾಸ್ತ್ರದ ಪಾಠ ಮಾಡುತ್ತಿದ್ದರು. ಮತ್ತು ಆಡಳಿತಾಧಿಕಾರಿಯಾಗಿದ್ದ, ಜೆ. ಬಿಲ್ಲಯ್ಯನವರು ನಮ್ಮದೇ ಅರ್ಥಶಾಸ್ತ್ರ ವಿಷಯದಲ್ಲಿ ಅಧ್ಯಾಪಕರಾಗಿದ್ದವರು. ನಮ್ಮ ಅರ್ಥಶಾಸ್ತç ವಿಭಾಗದಲ್ಲಿ ಇಲಾಖಾ ಮುಖ್ಯಸ್ಥರಾಗಿದ್ದ ಪ್ರೊ. ಸಿದ್ದೇಗೌಡರು, ಮತ್ತು ಹರಿಚರಣ್ ನನಗೆ ಎರಡು ವರ್ಷಗಳ ಹಿಂದೆ ಗುರುಗಳಾಗಿದ್ದವರು, ಉಳಿದಂತೆ ಇನ್ನಿಬ್ಬರು ಮಹಿಳಾ ಅಧ್ಯಾಪಕರುಗಳು ಮತ್ತು ಎಂ.ಎ.ನಲ್ಲಿ ನನಗಿಂತ ಹಿರಿಯರಾಗಿದ್ದ ಕೆ.ಸಿ. ಬಸವರಾಜ್ ಕೂಡ ಅಧ್ಯಾಪಕರಾಗಿದ್ದರು.
ಬಿ.ಎ. ಮತ್ತು ಎಂ.ಎ. ತರಗತಿಗಳಲ್ಲಿ ಓದುವಾಗ ಪಠ್ಯಗಳಿಗಿಂತಲೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನನಗೆ ಈಗ ಪಠ್ಯಕ್ರಮಕ್ಕನುಗುಣವಾಗಿ ಒಂದು ಗಂಟೆಗೆ ಬೇಕಾದ ತಯಾರಿಯೊಡನೆ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡುವುದು ಸವಾಲಿನ ಪ್ರಶ್ನೆಯಾಗಿತ್ತು. ಪ್ರತಿ ತರಗತಿಗಳಲ್ಲಿ 50-60 ವಿದ್ಯಾರ್ಥಿಗಳಿದ್ದು ಕೆಲವರು ನನಗಿಂತ ಹೆಚ್ಚಿನ ವಯಸ್ಸು ಮತ್ತು ದೈಹಿಕವಾಗಿ ಬಲವಾಗಿದ್ದವರು ಕೂಡ ಇದ್ದರು. ವಾರಕ್ಕೆ 16 ಗಂಟೆಗಳ ಪಾಠ ಮಾಡುವುದು ಎಲ್ಲ ಅಧ್ಯಾಪಕರಿಗೆ ನಿಗದಿಯಾಗಿತ್ತು. ಹೊಸ ಅಧ್ಯಾಪಕರುಗಳಿಗೆ ವಿಶೇಷವಾಗಿ ದ್ವಿತೀಯ ಮತ್ತು ಅಂತಿಮ ಬಿ.ಎ. ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿ ಅಧ್ಯಾಪಕರಿಗೆ ತಬ್ಬಿಬ್ಬು ಮಾಡುವುದು ನನಗೆ ಕೂಡ ಗೊತ್ತಿದ್ದ ವಿಷಯವಾಗಿತ್ತು. ಆ ಕಾರಣದಿಂದಲೇ ಸರಿರಾತ್ರಿಯರೆಗೆ ಓದಿಕೊಂಡು ಸಜ್ಜಾಗಿಯೇ ತರಗತಿಗಳಿಗೆ ಹೋಗುತ್ತಿದ್ದೆ. ನಿಜವಾದ ಅರ್ಥಶಾಸ್ತçದ ವಿದ್ಯಾರ್ಥಿಯಾಗಿದ್ದುದು, ನಾನು ಅಧ್ಯಾಪಕನಾಗಿ ಸೇರಿದ ಮೇಲೆಯೆ ಎಂದು ನನಗನ್ನಿಸತೊಡಗಿತು. ಪಾಠಗಳನ್ನು ಶಿಸ್ತಿನಿಂದ ಮಾಡಿಕೊಂಡು ಬರುತ್ತಿದ್ದ ಕಾಲದಲ್ಲಿ ಅಂತಿಮ ಬಿ.ಎ. ವಿದ್ಯಾರ್ಥಿಗಳ ತರಗತಿಗಳು ಜೂನಿಯರ್ ಮತ್ತು ಸೀನಿಯರ್ ಹಾಲ್ಗಳಲ್ಲಿ ನಡೆಯುತ್ತಿದ್ದವು. ಆಗ ಪ್ರತಿ ಪಿರಿಯಡ್ಗೆ ಹಾಜರಾತಿ ತೆಗೆದುಕೊಳ್ಳುವ ಪರಿಪಾಠವಿತ್ತು. ನಾನು ಹಾಜರಾತಿ ತೆಗೆದುಕೊಂಡು ಪಾಠ ಮಾಡಲು ಪ್ರಾರಂಭಿಸಿದಾಗ ಕೆಲವು ವಿದ್ಯಾರ್ಥಿಗಳು ನಾವು ತರಗತಿಯಿಂದ ಹೊರ ಹೋಗಲು ಅನುಮತಿ ನೀಡಬೇಕೆಂದು ಕೋರಿದರು. ಅದರ ಉದ್ದೇಶ ನಿಮ್ಮ ಪಾಠದ ಅಗತ್ಯವಿಲ್ಲ ಎನ್ನೋ ಧೋರಣೆಯಿಂದ ಕೇಳಿದ ಅವರಿಗೆ ನಾನು, ನೀವು ಹೊರಗೆ ಹೋದರೆ ನಿಮ್ಮ ಹಾಜರಾತಿ ದಾಖಲೆ ಪುಸ್ತಕದಲ್ಲಿ ಗೈರು ಹಾಜರಿ ಎಂದು ನಮೂದಿಸುವುದಾಗಿ ಹೇಳಿದೆ.
ಅದಕ್ಕೇನು ಉತ್ತರಿಸದೆ ಹಾಗೆ ಹೊರಗೆ ಹೋದ ಹುಡುಗರು, ಮಾರನೆಯ ದಿನ ಪ್ರಿನ್ಸಿಪಾಲರಾಗಿದ್ದ ಶಂಕರಲಿಂಗಯ್ಯನವರಿಗೆ ಹೋಗಿ ನಾನು ಮಾಡುವ ಪಾಠ ಅರ್ಥವಾಗುತ್ತಿಲ್ಲ ಎಂದೂ ಇವರ ಬದಲು ಬೇರೆ ಅಧ್ಯಾಪಕರನ್ನು ನೇಮಿಸಲು ಮೌಖಿಕವಾಗಿ ಕೇಳಿದ್ದರು. ಪ್ರಿನ್ಸಿಪಾಲರು ಅಲ್ಲೇ ಗದರಿಸಿ ಕಳಿಸುವುದನ್ನು ಬಿಟ್ಟು ನನ್ನನ್ನು ಕರೆಸಿ ಚರ್ಚಿಸಿದರು. ನಾನು ನಡೆದ ವಿಚಾರವನ್ನು ತಿಳಿಸಿದೆ. ಆಯ್ತು ನಾನೇ ನಾಳೆ ನಿಮ್ಮ ಕ್ಲಾಸಿಗೆ ಬರುವೆ ಎಂದು ಹೇಳಿದ ಅವರು ಬಂದು ಕೂತರು. ಅದೇನು ಅವರಿಗೆ ಅನ್ನಿಸಿತೋ, ಅಂತೂ ಕೊನೆಗೆ ಇನ್ನೂ ಹೇಗೆ ಪಾಠ ಮಾಡಬೇಕು ನಿಮಗೆ? ಎಂದು ವಿದ್ಯಾರ್ಥಿಗಳಿಗೆ ಕ್ಲಾಸಿನಲ್ಲಿ ಹೇಳಿ ಹೊರಟು ಹೋದರು.
ಆ ನಂತರ ಬೇರಾವ ಕ್ಲಾಸಿನಲ್ಲಿಯೂ ಈ ರೀತಿಯ ಘಟನೆಗಳು ನಡೆಯಲಿಲ್ಲ ದಿನ ಕಳೆದಂತೆ ನನ್ನ ಆತ್ಮವಿಶ್ವಾಸವೂ ಹೆಚ್ಚಿ ವಿದ್ಯಾರ್ಥಿಗಳು ಆತ್ಮೀಯತೆಯಿಂದ ಸ್ಪಂದಿಸಿ ಆಸಕ್ತಿಯಿಂದ ಕಲಿಯುತ್ತಿದ್ದರು. ನಾನು ತಾತ್ಕಾಲಿಕವಾಗಿ ಮಹೇಶನ ರೂಂನಿಂದ ಕಾಲೇಜಿಗೆ ಓಡಾಡುತ್ತಿದ್ದು ಬೇರೆ ಮನೆ ಅಥವಾ ಪ್ರತ್ಯೇಕ ರೂಮಿಗಾಗಿ ಸರಸ್ವತಿಪುರಂನಲ್ಲಿ ಹುಡುಕುತ್ತಿದ್ದೆ. ಈ ಮಧ್ಯೆ ನನಗೆ ಸೋಷಿಯಾಲಜಿ ವಿಭಾಗದಲ್ಲಿ ಸಂಶೋಧನ ಸಹಾಯಕನಾಗಿದ್ದಾಗ ಪರಿಚಯವಾಗಿದ್ದ ಡಾ. ಪಿ.ಕೆ. ಮಿಶ್ರಾಜಿ ಅವರು ( Director for South Indian Anthropoligical Survey of India ) ಅವರೂ ಕೂಡ ಅಮೇರಿಕನ್ ಸ್ನೇಹಿತರೊಬ್ಬರಿಗೆ ಮನೆಯನ್ನು ಹುಡುಕುತ್ತಿದ್ದರು. ಹೀಗೆ ನಾನೂ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇರಿದ ಬಗ್ಗೆ ತಿಳಿಸಿ ಮನೆ ಹುಡುಕುತ್ತಿರುವ ವಿಷಯ ತಿಳಿಸಿದಾಗ ನೀವಿಬ್ಬರು ಯಾಕೆ ಒಟ್ಟಿಗೆ ಇರುವ ಬಗ್ಗೆ ಯೋಚಿಸಬಾರದು ಎಂದು ಸಲಹೆ ನೀಡಿದರು. ಅದರಂತೆ ನನಗೆ ಸರಸ್ವತಿಪುರಂನ 15ನೇ ಮುಖ್ಯರಸ್ತೆಯಲ್ಲಿ ಒಂದು ಸ್ವತಂತ್ರ ಮನೆ ಬಾಡಿಗೆಗೆ ಸಿಕ್ಕಿತು. 300 ರೂಗಳ ಬಾಡಿಗೆ ಮನೆ ನನ್ನ ಕಾಲೇಜಿಗೂ ಹತ್ತಿರವಾಗಿತ್ತು.
ನನ್ನ ಜೊತೆ ಪ್ರೊ. ಮಿಶ್ರಾಜಿ ಅವರಿಗೆ ಪರಿಚಿತರಾದ ಅಮೇರಿಕಾದ ಒರೆಗಾನ್ ವಿಶ್ವವಿದ್ಯಾಲಯದಿಂದ ಬಂದ ಪ್ರೊ. ಪಾಲ್ ಇ. ಸೈಮನ್ಸ್ ಅವರು ಖ್ಯಾತ ಮಾನವಶಾಸ್ತ್ರದ ಅಧ್ಯಾಪಕರಾಗಿದ್ದು, ಅವರು ನನ್ನೊಟ್ಟಿಗೆ ಇರಲು ಒಪ್ಪಿದರು. ಅವರು ಮೈಸೂರಿಗೆ ಮಂಗಗಳ ಸ್ವಭಾವಗಳ ಮೇಲೆ ಅಧ್ಯಯನ ಮಾಡಲು ಬಂದಿದ್ದರು. ಬೆಳಿಗ್ಗೆ 7 ಗಂಟೆಗೆ ಎದ್ದು ಕುಕ್ಕರಹಳ್ಳಿ ಕೆರೆ ಮೇಲೆ ಓಡಾಡುವ ಮಂಗಗಳ ಬಗ್ಗೆ ತನ್ನ ಕ್ಯಾಮರಾ ತೆಗೆದುಕೊಂಡು ಸೈಕಲ್ನಲ್ಲಿ ಹೊರ ಹೋಗಿ 9 ಗಂಟೆಗೆ ಬಂದು ಅವರು ಬೆಳಗಿನ ಉಪಹಾರ ಮಾಡುತ್ತಿದ್ದರು. ಮಧ್ಯಾಹ್ನ ಹಣ್ಣು ಮತ್ತು ಜ್ಯೂಸಿನಲ್ಲಿ ಕಾಲ ಕಳೆದು ಸಂಜೆ 7 ಗಂಟೆಗೆ ಊಟ ಮಾಡುತ್ತಿದ್ದರು. ಮಧ್ಯಾಹ್ನ ಓದು ಮತ್ತು ಬೆಳಗಿನ ಸಮಯದಲ್ಲಿ, ನೋಡಿ ಬಂದ ಮಂಗಗಳ ಬಗೆಗೆ ತನ್ನ ಅಬ್ಸರ್ವೇಷನ್ಗಳನ್ನು ನೋಟ್ಸ್ ಮಾಡುತ್ತಿದ್ದರು. ಅವರೇ ನಿಗದಿಪಡಿಸಿದ ಊಟಿಯಿಂದ ಬಂದಿದ್ದ ಅಡುಗೆ ಭಟ್ಟ ಚೆನ್ನಾಗಿ ತಿಂಡಿ ಊಟಗಳ ವ್ಯವಸ್ಥೆ ಮಾಡುತ್ತಿದ್ದ. ಮೊದಲ ದಿನ ರಾತ್ರಿ ಊಟ ಮಾಡುವ ಸಮಯಕ್ಕೆ ನಾನು ಬರುವುದು ತಡವಾಯಿತು. ಆತ 7 ಗಂಟೆಗೆ ಊಟ ಮಾಡಿ ಮುಗಿಸಿದ್ದ. ನನಗೆ ದೊಡ್ಡ ತಟ್ಟೆಯಲ್ಲಿ ಮಾಂಸಾಹಾರದ ಅಡುಗೆಯನ್ನು ಬಡಿಸಿಟ್ಟು ನನ್ನ ಮುಂದೆ ಹಿಡಿದು Hope this is sufficeint for you ? ಎಂದು ಕೇಳಿದರು. ನಾನು ಉಂಡು ಇನ್ನೊಬ್ಬರಿಗೂ ಆಗಿ ಮಿಗುವಷ್ಟು ಅದರಲ್ಲಿತ್ತು. ನಾನು ಬಾಡಿಗೆ ಮತ್ತು ವಿದ್ಯುತ್ ವೆಚ್ಚಗಳನ್ನು ನೋಡಿಕೊಂಡರೆೆ ಉಳಿದಂತೆ ಇತರೆ ಎಲ್ಲಾ ಖರ್ಚುಗಳು ಸೈಮನ್ಸ್ ನೋಡಿಕೊಳ್ಳುವಂತೆ ಮಾತಾಡಿ ಹಂಚಿಕೊಂಡಿದ್ದೆವು.
ತಿಂಗಳಲ್ಲಿ ಒಂದೆರಡು ಬಾರಿ ಗುಂಡ್ಲುಪೇಟೆ ಕಡೆ ಹೋಗಿ ಮಂಗಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದರು. ನಾನು ಅಮೆರಿಕನ್ ಜೊತೆ ಪ್ರತ್ಯೇಕ ಅಡುಗೆಯವನೊಬ್ಬನನ್ನು ಇರಿಸಿಕೊಂಡು ಊಟ ಉಪಚಾರ ನಡೆಯುತ್ತಿದ್ದುದರ ಬಗ್ಗೆ ನಮ್ಮ ಮೈಸೂರಿನ ಹಿರಿಕಿರಿ ಸ್ನೇಹಿತರು ವಿಶೇಷವೆಂಬಂತೆ ವಿಚಾರಿಸುತ್ತಿದ್ದರು. ನನ್ನ ಅನೇಕ ಸಮಾಜವಾದಿ ಯುವಜನ ಸಭಾ ಮತ್ತು ದಲಿತ ವಿದ್ಯಾರ್ಥಿ ಮಿತ್ರರು ನನ್ನಲ್ಲಿಗೆ ಬಂದಾಗ ನಮ್ಮಲ್ಲಿಯೇ ಊಟ ತಿಂಡಿ ಮಾಡಿಕೊಂಡು ಹೋಗುತ್ತಿದ್ದರು.
ನಾನು 1974 ಡಿಸೆಂಬರ್ 4 ರಂದು ಅಧ್ಯಾಪಕ ವೃತ್ತಿಗೆ ಸೇರಿದ್ದು, ಮಾರ್ಚ್ ಅಥವಾ ಏಪ್ರಿಲ್ ಶೈಕ್ಷಣಿಕ ವರ್ಷದ ಕೊನೆಯಲ್ಲಿ ರಿಲೀವ್ ಮಾಡುತ್ತಿದ್ದರು. ಸ್ಥಳೀಯ ಅಭ್ಯರ್ಥಿಯಾಗಿ ತೆಗೆದುಕೊಂಡ ಎಲ್ಲ ವಿಷಯದ ಅಧ್ಯಾಪಕರುಗಳಿಗೂ ಇದೇ ವ್ಯವಸ್ಥೆ ಆಗ ಜಾರಿಯಲ್ಲಿತ್ತು. ಅದರಲ್ಲಿ ಆರು ತಿಂಗಳಿಗಿಂತ ಹೆಚ್ಚು ದಿನ ಕೆಲಸ ಮಾಡಿದವರಿಗೆ ಶೈಕ್ಷಣಿಕವಾಗಿದ್ದ ರಜೆಯಲ್ಲೂ ಬೇಸಿಗೆಯ ಸಂಬಳ ನೀಡುತ್ತಿದ್ದರು. ನಾನು ಆರು ತಿಂಗಳಿಗಿAತಲೂ ಕಡಿಮೆ ಅವಧಿಗೆ ಕೆಲಸ ಮಾಡಿದ್ದ ಕಾರಣಕ್ಕೆ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸೇರಿಕೊಂಡಿದ್ದೆ. ಆ ಕಾರಣದಿಂದ ನನಗೆ ಮತ್ತೆ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಪುನರ್ ನೇಮಕವಾಗುವವರೆಗೂ ಸಂಬಳವಿರಲಿಲ್ಲ. ಸುಮಾರು 3-4 ತಿಂಗಳು ರಜೆ ಮತ್ತು ಖರ್ಚಿಗೆ ಹಣವಿಲ್ಲದೆ ಚಿಂತಿತನಾಗಿದ್ದಾಗ ಡಾ. ಮಿಶ್ರಾಜಿ ಅವರು ನನ್ನ ಸಹಾಯಕ್ಕೆ ಬಂದರು.
ಈ ಮೂರು ತಿಂಗಳ ಕಾಲ ನಾನು ಪಾಲ್ ಇ. ಸೈಮನ್ಸ್ ಅವರಿಗೆ ಅನುವಾದಕನಾಗಿ ಕೆಲಸಮಾಡಲು ಸೂಚಿಸಿದ್ದರು. ಅದಕ್ಕಾಗಿ ನನಗೆ ತಿಂಗಳಿಗೆ 500 ರೂ ಸಂಬಳವನ್ನು ನಿಗದಿಪಡಿಸಿದ್ದರು. ಅದೇನು ಕಟ್ಟುನಿಟ್ಟಿನ ಕೆಲವಲ್ಲದೆ, ಸೈಮನ್ಸ್ ಕೇಳುವ ವಿಷಯಗಳ ಕೆಲವು ಹಾಗೂ ಸ್ಥಳೀಯ ಪ್ರದೇಶದ ಬಗ್ಗೆ ಕೇಳಿದಾಗ ಕನ್ನಡದಲ್ಲಿ ವಿಷಯ ಸಂಗ್ರಹಿಸಿ ಇಂಗ್ಲಿಷ್ನಲ್ಲಿ ವಿವರಿಸಿ ಹೇಳುವಂತಹದ್ದಾಗಿತ್ತು. ಆಗ ಅದೊಂದು ಕಷ್ಟದ ಕೆಲಸವಾಗೇನೂ ನನಗೆ ಅನ್ನಿಸಿರಲಿಲ್ಲ. ಆದರೆ ಈ ಕೆಲಸ ನನಗೆ ಹಣದ ಬಿಕ್ಕಟ್ಟಿನಿಂದ ಪಾರು ಮಾಡಿತ್ತು. ಅದು ನನ್ನ ಬೇಸಿಗೆ ರಜೆಯಲ್ಲಿ ಸಿಗದ ಸಂಬಳದ ಕೊರತೆಯನ್ನು ಕೂಡ ನೀಗಿಸಿತ್ತು.
ಈ ಮಧ್ಯೆ ಮೂರು ತಿಂಗಳ ರಜೆಯಲ್ಲಿ ನಮ್ಮ ಊರಿಗೆ ಡಾ. ಮಿಶ್ರಾಜಿ ಅವರನ್ನು ಕರೆದುಕೊಂಡು ಹೋಗುವ ಅವಕಾಶವಾಯಿತು. 1975ರ ಬೇಸಿಗೆ ದಿನಗಳಲ್ಲಿ ನಮ್ಮೂರಿಗೆ ಹೊರಟಿದ್ದೆವು. 1975ರ ನಮ್ಮ ಊರಲ್ಲಿ ನಮಗಿದ್ದ ಒಂದು ಮಾಳಿಗೆ ಮನೆ, ದನ ಕರುಗಳನ್ನು ಕಟ್ಟಲು ಬೇರೆ ತಗಡಿನ ಮನೆ ಇದ್ದವು. ಬಂದ ಅತಿಥಿಗಳಿಗೆ ಅನುಕೂಲವಾಗಲೆಂದು ವಾಸ್ತವ್ಯಕ್ಕೆ ಪ್ರತ್ಯೇಕ ಕೊಠಡಿಗಳಾಗಲೀ, ಹಾಸಿಗೆ ದಿಂಬುಗಳಾಗಲೀ ಮನೆಯಲ್ಲಿರಲಿಲ್ಲ. ಆದರೂ ಅದಾವುದರ ಬಗ್ಗೆ ಚಿಂತಿಸದೆ ಅವರನ್ನು ನಮ್ಮ ಊರಿಗೆ ಕರೆದುಕೊಂಡು ಹೋಗಿದ್ದೆ. ರಾತ್ರಿಗೆ ಊರು ಸೇರಿದ್ದ ನಾವು ಮನೆಯಲ್ಲಿ ಊಟ ಮಾಡಿ ಪ್ರೊ. ಮಿಶ್ರಾಜಿ ಅವರಿಗೆ ನಮ್ಮ ಹೊರಗಿನ ಜಗಲಿಯ ಮೇಲೆ ಸೊಳ್ಳೆಪರದೆ ಕಟ್ಟಿ ಮಲಗುವ ವ್ಯವಸ್ಥೆ ಮಾಡಿದೆ. ಬೆಳಗಿನ ಅಗತ್ಯಗಳಿಗೆ ಅವರನ್ನು ಸೀದಾ ಕರೆದುಕೊಂಡು ನಮ್ಮೂರ ಹತ್ತಿರವೇ ಹರಿಯುತ್ತಿರುವ ಸೂಳೆಕೆರೆ ಹಳ್ಳಕ್ಕೆ ಹೋಗಿ ಬೆಳಗಿನ ಕಾರ್ಯಗಳನ್ನು ಮುಗಿಸಿಕೊಂಡು ಬಂದೆವು. ಮನೆಯಲ್ಲಿ ಮಾಡಿದ ತಿಂಡಿ ತಿಂದು ಊರಲ್ಲಿನ ಗೆಳೆಯರಾದ ದಾವಣಗೆರೆ ನಾಗರಾಜ, ಬಾರಿಕರ ಮಾಂತೇಶಿ, ಮತ್ತಿತರ ಗೆಳೆಯರ ಜೊತೆ ತೋಟಕ್ಕೆ ಹೋದೆವು.
ಪ್ರೊ. ಮಿಶ್ರಾಜಿ ಅವರು ಒಬ್ಬ ಸಮಾಜ ವಿಜ್ಞಾನಿ – ಸಂಶೋಧಕ ಹಾಗೂ ಸಾಮಾಜಿಕ ಸಮಸ್ಯೆಗಳ ಆಳವಾದ ಜ್ಞಾನ ಉಳ್ಳವರಾಗಿದ್ದರು. ಊರಲ್ಲಿನ ಸಾಮಾಜಿಕ ಶೈಕ್ಷಣಿಕ ಹಾಗೂ ಕೂಲಿ ಕಾರ್ಮಿಕರ ಸ್ಥಿತಿಗತಿಗಳನ್ನು ವಿಚಾರಿಸುತ್ತಾ ಸೂಕ್ಷö್ಮವಾಗಿ ಎಲ್ಲರನ್ನು ಗಮನಿಸುತ್ತಿದ್ದರು. ಡಿ. ನಾಗರಾಜು ನಾನು ಪ್ರಾಥಮಿಕ ಶಾಲೆಯಲ್ಲಿ ಸಹಪಾಠಿಯಾಗಿದ್ದು ಈಗ ಊರಲ್ಲಿಯೇ ವೀಳ್ಯದೆಲೆ ತೋಟ ಮಾಡಿಕೊಂಡು ಆರಾಮವಾಗಿದ್ದನು. ಅವರ ತೋಟದಲ್ಲಿ ತೆರೆದ ಬಾವಿಯಲ್ಲಿ ಮಿಶ್ರಾಜಿಯೂ ನಾನು ಸೇರಿದಂತೆ ನಾವೆಲ್ಲರು ಈಜಾಡಿದೆವು. ಆಗ ಹೊರಬಂದು ತೋಟದಲ್ಲಿನ ತೆಂಗಿನ ಮರಗಳಿಂದ ಇಳಿಸಿದ ತೆಂಗಿನ ಹೆಂಡವನ್ನು ಸವಿದೆವು. ಮನೆಯಿಂದ ರೊಟ್ಟಿ ಬುತ್ತಿಯನ್ನು ಅಲ್ಲಿಗೇ ತರಿಸಿದ್ದು, ವೀಳ್ಯದೆಲೆಯ ತೋಟದಲ್ಲಿ ಎಲ್ಲರೂ ಕೂತು ಊಟ ಮಾಡಿದೆವು. ಮಿಶ್ರಾಜಿ ಅವರು ಸಂತೋಷದಿಂದಲೇ ಇಡೀ ದಿನ ಕಳೆದರು. ಮಾತಿನ ಮಧ್ಯೆ ನಮ್ಮೂರಲ್ಲಿನ ಶ್ರೀಮಂತರು ಮತ್ತು ದೊಡ್ಡ ರೀತಿಯಲ್ಲಿ ಒಕ್ಕಲುತನ ಮಾಡುವ ಬಣಕಾರ ಸಿದ್ದಪ್ಪನವರನ್ನು ನೋಡುವ ಆಸೆ ವ್ಯಕ್ತಪಡಿಸಿದರು. ಪ್ರೊ. ಅವರನ್ನು ಅವರ ಮನೆಗೂ ಕರೆದುಕೊಂಡು ಹೋದೆ. ನಮ್ಮಪ್ಪನ ಬಹುದೊಡ್ಡ ವಿಶ್ವಾಸಿಕರಾಗಿದ್ದ ಬಣಕಾರ ಸಿದ್ದಪ್ಪನವರು ಮಿಶ್ರಾಜಿ ಅವರ ಜೊತೆ ಗ್ರಾಮೀಣ ಅರ್ಥವ್ಯವಸ್ಥೆಯ, ಕೂಲಿಕಾರ್ಮಿಕರ, ಹಬ್ಬಹರಿದಿನಗಳ ಕುರಿತು ದೀರ್ಘವಾಗಿ ಚರ್ಚಿಸಿದರು. ಕೊನೆಗೆ ಟೀ ಕುಡಿದು ಅವರ ಮನೆಯಿಂದ ವಾಪಸ್ ಬಂದೆವು.
ಸಂಜೆ ಸಮಯಕ್ಕೆ ನಮ್ಮೂರಿನಲ್ಲಿಯೇ ಹೊಸದಾಗಿ ಕಲಿತಿದ್ದ ಬ್ಯಾಂಡ್ಅನ್ನು ಅವರ ಮುಂದೆ ಬಾರಿಸಿದರು. ಆ ಕಾಲಕ್ಕೆ ದೇಶ ವಿದೇಶಗಳನ್ನು ಪ್ರವಾಸ ಮಾಡಿ ನಮ್ಮ ದೇಶದಲ್ಲಿನ ದಕ್ಷಿಣ ಭಾರತಕ್ಕೆ ಮಾನವಶಾಸ್ತçದ ಅಧ್ಯಯನಕ್ಕೆ ಮುಖ್ಯಸ್ಥರಾಗಿದ್ದ, ಜಾತಿಯಲ್ಲಿ ಅತ್ಯುನ್ನತವಾದ ಶ್ರೇಣಿಗೆ ಸೇರಿದ ಬ್ರಾಹ್ಮಣರಾಗಿದ್ದ ಪ್ರಾಧ್ಯಾಪಕರೊಬ್ಬರು ಯಾವ ಹಮ್ಮು ಬಿಮ್ಮುಗಳಿಲ್ಲದೆ ಸಾಮಾನ್ಯ ಹಳ್ಳಿಗೆ ಬಂದು ಊರಲ್ಲಿಯ, ನಮ್ಮ ಮನೆಯಲ್ಲಿಯೇ ಉಳಿದು ಹೋಗಿದ್ದು ನಮ್ಮೂರಿನ ಮತ್ತು ನನ್ನ ಜೀವನ ಕಾಲಘಟ್ಟದಲ್ಲಿ ಮರೆಯಲಾಗದ ಸವಿನೆನಪಾಗಿ ಉಳಿದಿದೆ. ಅವರ ಸರಳ, ಸಜ್ಜನಿಕೆಯ ವ್ಯಕ್ತಿತ್ವದಿಂದಾಗಿ ಅಂದು ಪರಿಚಯವಾಗಿ, ನನಗೆ ಬೌದ್ಧಿಕ ಮತ್ತು ಆರ್ಥಿಕವಾಗಿ ಶಕ್ತಿ ನೀಡಿ, 50 ವರ್ಷಗಳ ನಂತರ ಇಂದಿಗೂ ನನ್ನ ಮಾರ್ಗದರ್ಶಕ ಗುರುಗಳಾಗಿ ಉಳಿದಿರುವುದು ನನ್ನ ಜೀವನದ ಭಾಗ್ಯವೆಂದೇ ಭಾವಿಸಿದ್ದೇನೆ. ಅವರು ಮಾಡಿದ ಯಾವ ಸಹಾಯವನ್ನೂ, ತಾನು ಮಾಡಿದೆನೆಂಬ ಅಹಂ ಎಲ್ಲೂ ಸುಳಿಯುವುದಿಲ್ಲ. ಅಂದು ನನಗೆ ಸಿಕ್ಕ ಈ ಪ್ರೊಫೆಸರ್ ನಂತರ ನನ್ನ ಸ್ನೇಹ ಬಳಗದ ಮಾದೇವ, ಅರ್ಕೇಶ, ಮಹೇಶ, ಭಕ್ತ, ಗೊಟ್ಟಿಗೆರೆ ಶಿವರಾಜು ಎಲ್ಲರಿಗೂ ಸ್ನೇಹದ ಗುರುಗಳಾಗಿ ಇಂದಿಗೂ ಉಳಿದಿದ್ದಾರೆ. ಈಗಲೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳಿಗೆ ವಿಶೇಷ ಉಪನ್ಯಾಸಕರಾಗಿ ಹೋಗಿ ಬರುತ್ತಿರುವುದನ್ನ ನೋಡಿದರೆ ಆಶ್ಚರ್ಯವಾಗುತ್ತದೆ. ಅವರಿಗಿಂತ ಇಪ್ಪತ್ತು ವರ್ಷಗಳಷ್ಟು ಕಿರಿಯರಾದ ನಾವುಗಳು ಅವರನ್ನು ಇಂದಿಗೂ ಅನುಸರಿಸುತ್ತಾ ಜೀವನ ಸಾಗಿಸುತ್ತಿದ್ದೇವೆ.
ನಾನು ಅಧ್ಯಾಪಕನಾಗಿದ್ದ ಸಮಯದಲ್ಲಿ ಶೈಕ್ಷಣಿಕ ವರ್ಷ ಮುಗಿದು ಮೂರು ತಿಂಗಳ ರಜೆಯಲ್ಲಿ ಊರಿಗೆ ಹೋಗಿದ್ದೆ. ಆಗ ಪಾಲ್ ಇ. ಸೈಮನ್ಸ್ಗೆ ನಾನು ಅನುವಾದಕನಾಗಿ ಕೆಲಸವೊಂದನ್ನು ಮಾಡಲು ಪ್ರೊ. ಮಿಶ್ರಾಜಿ ಅವರು ಒಪ್ಪಿಸಿದ್ದರು ಎಂಬುದನ್ನು ಆಗಲೇ ಹೇಳಿದ್ದೇನೆ. ಅದನ್ನು ನಾನು ಮಾಡುತ್ತಿದ್ದೆನಾದರೂ ನನಗೆ ಪ್ರತಿ ತಿಂಗಳು ಮುಗಿದಾಕ್ಷಣ ಸಂಬಳ ನೀಡಿರಲಿಲ್ಲ. ಆದರೆ ನಾನು ನನ್ನ ಹಳ್ಳಿಯಲ್ಲಿ ಇರುವಾಗ ಮೂರು ತಿಂಗಳ ಒಟ್ಟು ಸಂಬಳ 1500 ರೂಪಾಯಿಗಳನ್ನು ನನ್ನ ವಿಳಾಸಕ್ಕೆ ಮನಿ ಆರ್ಡರ್ ಮುಖಾಂತರ ಕಳಿಸಿದ್ದರು. ನಮ್ಮೂರಿಗೆ ಆಗತಾನೆ ಹೊಸದಾಗಿ ಬಂದಿದ್ದ ಪೋಸ್ಟ್ ಆಫೀಸ್ ಮತ್ತು ಅದರ ಉಸ್ತುವಾರಿಯನ್ನು ನಮ್ಮ ಊರಿನ ಗೌಡ್ರ ಈರಣ್ಣ ಎಂಬುವವರು ನೋಡಿಕೊಳ್ಳುತ್ತಿದ್ದರು. ಅವರು ನನಗೆ ಬಂದ 1500ರೂಗಳಷ್ಟು ಮನಿ ಆರ್ಡರ್ ಹಣ ನೋಡಿ ಆಶ್ರ್ಯಗೊಂಡಿದ್ದರು. ಆಗ ನಮ್ಮೂರಿಗೆ ಹೆಚ್ಚೆಂದರೆ 50-100ರೂಗಳು ಎಂ.ಓ. ಗಳು ಬರುತ್ತಿದ್ದ ಕಾಲ. ಇಷ್ಟೊಂದು ಹಣ ಬರುವಷ್ಟು ಈ ಹುಡುಗ ಹೆಂಗೆ ಬೆಳೆದ ಎಂಬೆಲ್ಲ ಯೋಚನೆ ಮಾಡುತ್ತಾ ಊರಿಗೆಲ್ಲ ಸುದ್ದಿ ಮಾಡಿದ್ದ. ಆಗ ನಮ್ಮ ಅಪ್ಪ ಇನ್ನೂ ಸಕ್ರಿಯವಾಗಿ ಕೆಲಸ ಕಾರ್ಯ ಮಾಡುತ್ತಿದ್ದರು. ‘ಅದೇನಪ್ಪ ಅಷ್ಟೊಂದು ದುಡ್ಡು, ಕಳಿಸಿದರ್ಯಾರು?’ ಎಂದು ಅಪ್ಪ ಕೂಡ ಆಶ್ಚರ್ಯದಿಂದ ಕೇಳಿದ್ದರು. ಆಗ ಪಡೆದ 1500 ರೂಗಳನ್ನು ಎಂ.ಓ. ಮೂಲಕ ಬಂದು ನೀಡಿದ ಸಂತೋಷವನ್ನು ಅಳೆಯಲಾಗದು. ಎಲ್ಲ ಕೊರತೆಗಳ ಆಗರದಲ್ಲಿ ಹೋರಾಡುತ್ತಿದ್ದ ನನಗೆ ಅದೊಂದು ಯಾವ ಮಾಪಕದಿಂದಲೂ ಅಳಿಯಲಾಗದ ಶಕ್ತಿವರ್ಧಕ ಔಷಧಿಯಂತೆ ಹುರುಪು ನೀಡಿ ಊರಲ್ಲಿ ನನ್ನ ಗೌರವ ಬೆಳೆಸಿತ್ತು.
ಮುಂದುವರಿಯುವುದು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



