ಅಂತರಂಗ
ಆತ್ಮಕತೆ | ಮಹಾರಾಜಾ ಕಾಲೇಜಿನಲ್ಲಿ ಉಪನ್ಯಾಸಕನಾಗಿ : 1974-1976
- ರುದ್ರಪ್ಪ ಹನಗವಾಡಿ
1967ರಲ್ಲಿ ಎಸ್.ಎಸ್.ಎಲ್.ಸಿ. ಪಾಸು ಮಾಡಿದ ದಿನಗಳಿಂದಲೂ ಮುಂದಿನ ಕಲಿಕೆಗಾಗಿ ಮೈಸೂರಿಗೇ ಹೋಗಬೇಕೆಂದು ಕನಸು ಕಾಣುತ್ತಿದ್ದ ನನಗೆ ಅಲ್ಲಿಯೇ ಓದಿ ನಂತರ ಅಧ್ಯಾಪಕ ವೃತ್ತಿ ದೊರೆತದ್ದು ನನ್ನ ಸಂತೋಷಕ್ಕೆ ಪಾರವೇ ಇರಲಿಲ್ಲ. ಪ್ರಿನ್ಸಿಪಾಲರಾದ ಎನ್. ಶಂಕರಲಿಂಗಯ್ಯನವರು, ರಾಜ್ಯಶಾಸ್ತ್ರದ ಪಾಠ ಮಾಡುತ್ತಿದ್ದರು. ಮತ್ತು ಆಡಳಿತಾಧಿಕಾರಿಯಾಗಿದ್ದ, ಜೆ. ಬಿಲ್ಲಯ್ಯನವರು ನಮ್ಮದೇ ಅರ್ಥಶಾಸ್ತ್ರ ವಿಷಯದಲ್ಲಿ ಅಧ್ಯಾಪಕರಾಗಿದ್ದವರು. ನಮ್ಮ ಅರ್ಥಶಾಸ್ತç ವಿಭಾಗದಲ್ಲಿ ಇಲಾಖಾ ಮುಖ್ಯಸ್ಥರಾಗಿದ್ದ ಪ್ರೊ. ಸಿದ್ದೇಗೌಡರು, ಮತ್ತು ಹರಿಚರಣ್ ನನಗೆ ಎರಡು ವರ್ಷಗಳ ಹಿಂದೆ ಗುರುಗಳಾಗಿದ್ದವರು, ಉಳಿದಂತೆ ಇನ್ನಿಬ್ಬರು ಮಹಿಳಾ ಅಧ್ಯಾಪಕರುಗಳು ಮತ್ತು ಎಂ.ಎ.ನಲ್ಲಿ ನನಗಿಂತ ಹಿರಿಯರಾಗಿದ್ದ ಕೆ.ಸಿ. ಬಸವರಾಜ್ ಕೂಡ ಅಧ್ಯಾಪಕರಾಗಿದ್ದರು.
ಬಿ.ಎ. ಮತ್ತು ಎಂ.ಎ. ತರಗತಿಗಳಲ್ಲಿ ಓದುವಾಗ ಪಠ್ಯಗಳಿಗಿಂತಲೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನನಗೆ ಈಗ ಪಠ್ಯಕ್ರಮಕ್ಕನುಗುಣವಾಗಿ ಒಂದು ಗಂಟೆಗೆ ಬೇಕಾದ ತಯಾರಿಯೊಡನೆ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡುವುದು ಸವಾಲಿನ ಪ್ರಶ್ನೆಯಾಗಿತ್ತು. ಪ್ರತಿ ತರಗತಿಗಳಲ್ಲಿ 50-60 ವಿದ್ಯಾರ್ಥಿಗಳಿದ್ದು ಕೆಲವರು ನನಗಿಂತ ಹೆಚ್ಚಿನ ವಯಸ್ಸು ಮತ್ತು ದೈಹಿಕವಾಗಿ ಬಲವಾಗಿದ್ದವರು ಕೂಡ ಇದ್ದರು. ವಾರಕ್ಕೆ 16 ಗಂಟೆಗಳ ಪಾಠ ಮಾಡುವುದು ಎಲ್ಲ ಅಧ್ಯಾಪಕರಿಗೆ ನಿಗದಿಯಾಗಿತ್ತು. ಹೊಸ ಅಧ್ಯಾಪಕರುಗಳಿಗೆ ವಿಶೇಷವಾಗಿ ದ್ವಿತೀಯ ಮತ್ತು ಅಂತಿಮ ಬಿ.ಎ. ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿ ಅಧ್ಯಾಪಕರಿಗೆ ತಬ್ಬಿಬ್ಬು ಮಾಡುವುದು ನನಗೆ ಕೂಡ ಗೊತ್ತಿದ್ದ ವಿಷಯವಾಗಿತ್ತು. ಆ ಕಾರಣದಿಂದಲೇ ಸರಿರಾತ್ರಿಯರೆಗೆ ಓದಿಕೊಂಡು ಸಜ್ಜಾಗಿಯೇ ತರಗತಿಗಳಿಗೆ ಹೋಗುತ್ತಿದ್ದೆ. ನಿಜವಾದ ಅರ್ಥಶಾಸ್ತçದ ವಿದ್ಯಾರ್ಥಿಯಾಗಿದ್ದುದು, ನಾನು ಅಧ್ಯಾಪಕನಾಗಿ ಸೇರಿದ ಮೇಲೆಯೆ ಎಂದು ನನಗನ್ನಿಸತೊಡಗಿತು. ಪಾಠಗಳನ್ನು ಶಿಸ್ತಿನಿಂದ ಮಾಡಿಕೊಂಡು ಬರುತ್ತಿದ್ದ ಕಾಲದಲ್ಲಿ ಅಂತಿಮ ಬಿ.ಎ. ವಿದ್ಯಾರ್ಥಿಗಳ ತರಗತಿಗಳು ಜೂನಿಯರ್ ಮತ್ತು ಸೀನಿಯರ್ ಹಾಲ್ಗಳಲ್ಲಿ ನಡೆಯುತ್ತಿದ್ದವು. ಆಗ ಪ್ರತಿ ಪಿರಿಯಡ್ಗೆ ಹಾಜರಾತಿ ತೆಗೆದುಕೊಳ್ಳುವ ಪರಿಪಾಠವಿತ್ತು. ನಾನು ಹಾಜರಾತಿ ತೆಗೆದುಕೊಂಡು ಪಾಠ ಮಾಡಲು ಪ್ರಾರಂಭಿಸಿದಾಗ ಕೆಲವು ವಿದ್ಯಾರ್ಥಿಗಳು ನಾವು ತರಗತಿಯಿಂದ ಹೊರ ಹೋಗಲು ಅನುಮತಿ ನೀಡಬೇಕೆಂದು ಕೋರಿದರು. ಅದರ ಉದ್ದೇಶ ನಿಮ್ಮ ಪಾಠದ ಅಗತ್ಯವಿಲ್ಲ ಎನ್ನೋ ಧೋರಣೆಯಿಂದ ಕೇಳಿದ ಅವರಿಗೆ ನಾನು, ನೀವು ಹೊರಗೆ ಹೋದರೆ ನಿಮ್ಮ ಹಾಜರಾತಿ ದಾಖಲೆ ಪುಸ್ತಕದಲ್ಲಿ ಗೈರು ಹಾಜರಿ ಎಂದು ನಮೂದಿಸುವುದಾಗಿ ಹೇಳಿದೆ.
ಅದಕ್ಕೇನು ಉತ್ತರಿಸದೆ ಹಾಗೆ ಹೊರಗೆ ಹೋದ ಹುಡುಗರು, ಮಾರನೆಯ ದಿನ ಪ್ರಿನ್ಸಿಪಾಲರಾಗಿದ್ದ ಶಂಕರಲಿಂಗಯ್ಯನವರಿಗೆ ಹೋಗಿ ನಾನು ಮಾಡುವ ಪಾಠ ಅರ್ಥವಾಗುತ್ತಿಲ್ಲ ಎಂದೂ ಇವರ ಬದಲು ಬೇರೆ ಅಧ್ಯಾಪಕರನ್ನು ನೇಮಿಸಲು ಮೌಖಿಕವಾಗಿ ಕೇಳಿದ್ದರು. ಪ್ರಿನ್ಸಿಪಾಲರು ಅಲ್ಲೇ ಗದರಿಸಿ ಕಳಿಸುವುದನ್ನು ಬಿಟ್ಟು ನನ್ನನ್ನು ಕರೆಸಿ ಚರ್ಚಿಸಿದರು. ನಾನು ನಡೆದ ವಿಚಾರವನ್ನು ತಿಳಿಸಿದೆ. ಆಯ್ತು ನಾನೇ ನಾಳೆ ನಿಮ್ಮ ಕ್ಲಾಸಿಗೆ ಬರುವೆ ಎಂದು ಹೇಳಿದ ಅವರು ಬಂದು ಕೂತರು. ಅದೇನು ಅವರಿಗೆ ಅನ್ನಿಸಿತೋ, ಅಂತೂ ಕೊನೆಗೆ ಇನ್ನೂ ಹೇಗೆ ಪಾಠ ಮಾಡಬೇಕು ನಿಮಗೆ? ಎಂದು ವಿದ್ಯಾರ್ಥಿಗಳಿಗೆ ಕ್ಲಾಸಿನಲ್ಲಿ ಹೇಳಿ ಹೊರಟು ಹೋದರು.
ಆ ನಂತರ ಬೇರಾವ ಕ್ಲಾಸಿನಲ್ಲಿಯೂ ಈ ರೀತಿಯ ಘಟನೆಗಳು ನಡೆಯಲಿಲ್ಲ ದಿನ ಕಳೆದಂತೆ ನನ್ನ ಆತ್ಮವಿಶ್ವಾಸವೂ ಹೆಚ್ಚಿ ವಿದ್ಯಾರ್ಥಿಗಳು ಆತ್ಮೀಯತೆಯಿಂದ ಸ್ಪಂದಿಸಿ ಆಸಕ್ತಿಯಿಂದ ಕಲಿಯುತ್ತಿದ್ದರು. ನಾನು ತಾತ್ಕಾಲಿಕವಾಗಿ ಮಹೇಶನ ರೂಂನಿಂದ ಕಾಲೇಜಿಗೆ ಓಡಾಡುತ್ತಿದ್ದು ಬೇರೆ ಮನೆ ಅಥವಾ ಪ್ರತ್ಯೇಕ ರೂಮಿಗಾಗಿ ಸರಸ್ವತಿಪುರಂನಲ್ಲಿ ಹುಡುಕುತ್ತಿದ್ದೆ. ಈ ಮಧ್ಯೆ ನನಗೆ ಸೋಷಿಯಾಲಜಿ ವಿಭಾಗದಲ್ಲಿ ಸಂಶೋಧನ ಸಹಾಯಕನಾಗಿದ್ದಾಗ ಪರಿಚಯವಾಗಿದ್ದ ಡಾ. ಪಿ.ಕೆ. ಮಿಶ್ರಾಜಿ ಅವರು ( Director for South Indian Anthropoligical Survey of India ) ಅವರೂ ಕೂಡ ಅಮೇರಿಕನ್ ಸ್ನೇಹಿತರೊಬ್ಬರಿಗೆ ಮನೆಯನ್ನು ಹುಡುಕುತ್ತಿದ್ದರು. ಹೀಗೆ ನಾನೂ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇರಿದ ಬಗ್ಗೆ ತಿಳಿಸಿ ಮನೆ ಹುಡುಕುತ್ತಿರುವ ವಿಷಯ ತಿಳಿಸಿದಾಗ ನೀವಿಬ್ಬರು ಯಾಕೆ ಒಟ್ಟಿಗೆ ಇರುವ ಬಗ್ಗೆ ಯೋಚಿಸಬಾರದು ಎಂದು ಸಲಹೆ ನೀಡಿದರು. ಅದರಂತೆ ನನಗೆ ಸರಸ್ವತಿಪುರಂನ 15ನೇ ಮುಖ್ಯರಸ್ತೆಯಲ್ಲಿ ಒಂದು ಸ್ವತಂತ್ರ ಮನೆ ಬಾಡಿಗೆಗೆ ಸಿಕ್ಕಿತು. 300 ರೂಗಳ ಬಾಡಿಗೆ ಮನೆ ನನ್ನ ಕಾಲೇಜಿಗೂ ಹತ್ತಿರವಾಗಿತ್ತು.
ನನ್ನ ಜೊತೆ ಪ್ರೊ. ಮಿಶ್ರಾಜಿ ಅವರಿಗೆ ಪರಿಚಿತರಾದ ಅಮೇರಿಕಾದ ಒರೆಗಾನ್ ವಿಶ್ವವಿದ್ಯಾಲಯದಿಂದ ಬಂದ ಪ್ರೊ. ಪಾಲ್ ಇ. ಸೈಮನ್ಸ್ ಅವರು ಖ್ಯಾತ ಮಾನವಶಾಸ್ತ್ರದ ಅಧ್ಯಾಪಕರಾಗಿದ್ದು, ಅವರು ನನ್ನೊಟ್ಟಿಗೆ ಇರಲು ಒಪ್ಪಿದರು. ಅವರು ಮೈಸೂರಿಗೆ ಮಂಗಗಳ ಸ್ವಭಾವಗಳ ಮೇಲೆ ಅಧ್ಯಯನ ಮಾಡಲು ಬಂದಿದ್ದರು. ಬೆಳಿಗ್ಗೆ 7 ಗಂಟೆಗೆ ಎದ್ದು ಕುಕ್ಕರಹಳ್ಳಿ ಕೆರೆ ಮೇಲೆ ಓಡಾಡುವ ಮಂಗಗಳ ಬಗ್ಗೆ ತನ್ನ ಕ್ಯಾಮರಾ ತೆಗೆದುಕೊಂಡು ಸೈಕಲ್ನಲ್ಲಿ ಹೊರ ಹೋಗಿ 9 ಗಂಟೆಗೆ ಬಂದು ಅವರು ಬೆಳಗಿನ ಉಪಹಾರ ಮಾಡುತ್ತಿದ್ದರು. ಮಧ್ಯಾಹ್ನ ಹಣ್ಣು ಮತ್ತು ಜ್ಯೂಸಿನಲ್ಲಿ ಕಾಲ ಕಳೆದು ಸಂಜೆ 7 ಗಂಟೆಗೆ ಊಟ ಮಾಡುತ್ತಿದ್ದರು. ಮಧ್ಯಾಹ್ನ ಓದು ಮತ್ತು ಬೆಳಗಿನ ಸಮಯದಲ್ಲಿ, ನೋಡಿ ಬಂದ ಮಂಗಗಳ ಬಗೆಗೆ ತನ್ನ ಅಬ್ಸರ್ವೇಷನ್ಗಳನ್ನು ನೋಟ್ಸ್ ಮಾಡುತ್ತಿದ್ದರು. ಅವರೇ ನಿಗದಿಪಡಿಸಿದ ಊಟಿಯಿಂದ ಬಂದಿದ್ದ ಅಡುಗೆ ಭಟ್ಟ ಚೆನ್ನಾಗಿ ತಿಂಡಿ ಊಟಗಳ ವ್ಯವಸ್ಥೆ ಮಾಡುತ್ತಿದ್ದ. ಮೊದಲ ದಿನ ರಾತ್ರಿ ಊಟ ಮಾಡುವ ಸಮಯಕ್ಕೆ ನಾನು ಬರುವುದು ತಡವಾಯಿತು. ಆತ 7 ಗಂಟೆಗೆ ಊಟ ಮಾಡಿ ಮುಗಿಸಿದ್ದ. ನನಗೆ ದೊಡ್ಡ ತಟ್ಟೆಯಲ್ಲಿ ಮಾಂಸಾಹಾರದ ಅಡುಗೆಯನ್ನು ಬಡಿಸಿಟ್ಟು ನನ್ನ ಮುಂದೆ ಹಿಡಿದು Hope this is sufficeint for you ? ಎಂದು ಕೇಳಿದರು. ನಾನು ಉಂಡು ಇನ್ನೊಬ್ಬರಿಗೂ ಆಗಿ ಮಿಗುವಷ್ಟು ಅದರಲ್ಲಿತ್ತು. ನಾನು ಬಾಡಿಗೆ ಮತ್ತು ವಿದ್ಯುತ್ ವೆಚ್ಚಗಳನ್ನು ನೋಡಿಕೊಂಡರೆೆ ಉಳಿದಂತೆ ಇತರೆ ಎಲ್ಲಾ ಖರ್ಚುಗಳು ಸೈಮನ್ಸ್ ನೋಡಿಕೊಳ್ಳುವಂತೆ ಮಾತಾಡಿ ಹಂಚಿಕೊಂಡಿದ್ದೆವು.
ತಿಂಗಳಲ್ಲಿ ಒಂದೆರಡು ಬಾರಿ ಗುಂಡ್ಲುಪೇಟೆ ಕಡೆ ಹೋಗಿ ಮಂಗಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದರು. ನಾನು ಅಮೆರಿಕನ್ ಜೊತೆ ಪ್ರತ್ಯೇಕ ಅಡುಗೆಯವನೊಬ್ಬನನ್ನು ಇರಿಸಿಕೊಂಡು ಊಟ ಉಪಚಾರ ನಡೆಯುತ್ತಿದ್ದುದರ ಬಗ್ಗೆ ನಮ್ಮ ಮೈಸೂರಿನ ಹಿರಿಕಿರಿ ಸ್ನೇಹಿತರು ವಿಶೇಷವೆಂಬಂತೆ ವಿಚಾರಿಸುತ್ತಿದ್ದರು. ನನ್ನ ಅನೇಕ ಸಮಾಜವಾದಿ ಯುವಜನ ಸಭಾ ಮತ್ತು ದಲಿತ ವಿದ್ಯಾರ್ಥಿ ಮಿತ್ರರು ನನ್ನಲ್ಲಿಗೆ ಬಂದಾಗ ನಮ್ಮಲ್ಲಿಯೇ ಊಟ ತಿಂಡಿ ಮಾಡಿಕೊಂಡು ಹೋಗುತ್ತಿದ್ದರು.
ನಾನು 1974 ಡಿಸೆಂಬರ್ 4 ರಂದು ಅಧ್ಯಾಪಕ ವೃತ್ತಿಗೆ ಸೇರಿದ್ದು, ಮಾರ್ಚ್ ಅಥವಾ ಏಪ್ರಿಲ್ ಶೈಕ್ಷಣಿಕ ವರ್ಷದ ಕೊನೆಯಲ್ಲಿ ರಿಲೀವ್ ಮಾಡುತ್ತಿದ್ದರು. ಸ್ಥಳೀಯ ಅಭ್ಯರ್ಥಿಯಾಗಿ ತೆಗೆದುಕೊಂಡ ಎಲ್ಲ ವಿಷಯದ ಅಧ್ಯಾಪಕರುಗಳಿಗೂ ಇದೇ ವ್ಯವಸ್ಥೆ ಆಗ ಜಾರಿಯಲ್ಲಿತ್ತು. ಅದರಲ್ಲಿ ಆರು ತಿಂಗಳಿಗಿಂತ ಹೆಚ್ಚು ದಿನ ಕೆಲಸ ಮಾಡಿದವರಿಗೆ ಶೈಕ್ಷಣಿಕವಾಗಿದ್ದ ರಜೆಯಲ್ಲೂ ಬೇಸಿಗೆಯ ಸಂಬಳ ನೀಡುತ್ತಿದ್ದರು. ನಾನು ಆರು ತಿಂಗಳಿಗಿAತಲೂ ಕಡಿಮೆ ಅವಧಿಗೆ ಕೆಲಸ ಮಾಡಿದ್ದ ಕಾರಣಕ್ಕೆ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸೇರಿಕೊಂಡಿದ್ದೆ. ಆ ಕಾರಣದಿಂದ ನನಗೆ ಮತ್ತೆ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಪುನರ್ ನೇಮಕವಾಗುವವರೆಗೂ ಸಂಬಳವಿರಲಿಲ್ಲ. ಸುಮಾರು 3-4 ತಿಂಗಳು ರಜೆ ಮತ್ತು ಖರ್ಚಿಗೆ ಹಣವಿಲ್ಲದೆ ಚಿಂತಿತನಾಗಿದ್ದಾಗ ಡಾ. ಮಿಶ್ರಾಜಿ ಅವರು ನನ್ನ ಸಹಾಯಕ್ಕೆ ಬಂದರು.
ಈ ಮೂರು ತಿಂಗಳ ಕಾಲ ನಾನು ಪಾಲ್ ಇ. ಸೈಮನ್ಸ್ ಅವರಿಗೆ ಅನುವಾದಕನಾಗಿ ಕೆಲಸಮಾಡಲು ಸೂಚಿಸಿದ್ದರು. ಅದಕ್ಕಾಗಿ ನನಗೆ ತಿಂಗಳಿಗೆ 500 ರೂ ಸಂಬಳವನ್ನು ನಿಗದಿಪಡಿಸಿದ್ದರು. ಅದೇನು ಕಟ್ಟುನಿಟ್ಟಿನ ಕೆಲವಲ್ಲದೆ, ಸೈಮನ್ಸ್ ಕೇಳುವ ವಿಷಯಗಳ ಕೆಲವು ಹಾಗೂ ಸ್ಥಳೀಯ ಪ್ರದೇಶದ ಬಗ್ಗೆ ಕೇಳಿದಾಗ ಕನ್ನಡದಲ್ಲಿ ವಿಷಯ ಸಂಗ್ರಹಿಸಿ ಇಂಗ್ಲಿಷ್ನಲ್ಲಿ ವಿವರಿಸಿ ಹೇಳುವಂತಹದ್ದಾಗಿತ್ತು. ಆಗ ಅದೊಂದು ಕಷ್ಟದ ಕೆಲಸವಾಗೇನೂ ನನಗೆ ಅನ್ನಿಸಿರಲಿಲ್ಲ. ಆದರೆ ಈ ಕೆಲಸ ನನಗೆ ಹಣದ ಬಿಕ್ಕಟ್ಟಿನಿಂದ ಪಾರು ಮಾಡಿತ್ತು. ಅದು ನನ್ನ ಬೇಸಿಗೆ ರಜೆಯಲ್ಲಿ ಸಿಗದ ಸಂಬಳದ ಕೊರತೆಯನ್ನು ಕೂಡ ನೀಗಿಸಿತ್ತು.
ಈ ಮಧ್ಯೆ ಮೂರು ತಿಂಗಳ ರಜೆಯಲ್ಲಿ ನಮ್ಮ ಊರಿಗೆ ಡಾ. ಮಿಶ್ರಾಜಿ ಅವರನ್ನು ಕರೆದುಕೊಂಡು ಹೋಗುವ ಅವಕಾಶವಾಯಿತು. 1975ರ ಬೇಸಿಗೆ ದಿನಗಳಲ್ಲಿ ನಮ್ಮೂರಿಗೆ ಹೊರಟಿದ್ದೆವು. 1975ರ ನಮ್ಮ ಊರಲ್ಲಿ ನಮಗಿದ್ದ ಒಂದು ಮಾಳಿಗೆ ಮನೆ, ದನ ಕರುಗಳನ್ನು ಕಟ್ಟಲು ಬೇರೆ ತಗಡಿನ ಮನೆ ಇದ್ದವು. ಬಂದ ಅತಿಥಿಗಳಿಗೆ ಅನುಕೂಲವಾಗಲೆಂದು ವಾಸ್ತವ್ಯಕ್ಕೆ ಪ್ರತ್ಯೇಕ ಕೊಠಡಿಗಳಾಗಲೀ, ಹಾಸಿಗೆ ದಿಂಬುಗಳಾಗಲೀ ಮನೆಯಲ್ಲಿರಲಿಲ್ಲ. ಆದರೂ ಅದಾವುದರ ಬಗ್ಗೆ ಚಿಂತಿಸದೆ ಅವರನ್ನು ನಮ್ಮ ಊರಿಗೆ ಕರೆದುಕೊಂಡು ಹೋಗಿದ್ದೆ. ರಾತ್ರಿಗೆ ಊರು ಸೇರಿದ್ದ ನಾವು ಮನೆಯಲ್ಲಿ ಊಟ ಮಾಡಿ ಪ್ರೊ. ಮಿಶ್ರಾಜಿ ಅವರಿಗೆ ನಮ್ಮ ಹೊರಗಿನ ಜಗಲಿಯ ಮೇಲೆ ಸೊಳ್ಳೆಪರದೆ ಕಟ್ಟಿ ಮಲಗುವ ವ್ಯವಸ್ಥೆ ಮಾಡಿದೆ. ಬೆಳಗಿನ ಅಗತ್ಯಗಳಿಗೆ ಅವರನ್ನು ಸೀದಾ ಕರೆದುಕೊಂಡು ನಮ್ಮೂರ ಹತ್ತಿರವೇ ಹರಿಯುತ್ತಿರುವ ಸೂಳೆಕೆರೆ ಹಳ್ಳಕ್ಕೆ ಹೋಗಿ ಬೆಳಗಿನ ಕಾರ್ಯಗಳನ್ನು ಮುಗಿಸಿಕೊಂಡು ಬಂದೆವು. ಮನೆಯಲ್ಲಿ ಮಾಡಿದ ತಿಂಡಿ ತಿಂದು ಊರಲ್ಲಿನ ಗೆಳೆಯರಾದ ದಾವಣಗೆರೆ ನಾಗರಾಜ, ಬಾರಿಕರ ಮಾಂತೇಶಿ, ಮತ್ತಿತರ ಗೆಳೆಯರ ಜೊತೆ ತೋಟಕ್ಕೆ ಹೋದೆವು.
ಪ್ರೊ. ಮಿಶ್ರಾಜಿ ಅವರು ಒಬ್ಬ ಸಮಾಜ ವಿಜ್ಞಾನಿ – ಸಂಶೋಧಕ ಹಾಗೂ ಸಾಮಾಜಿಕ ಸಮಸ್ಯೆಗಳ ಆಳವಾದ ಜ್ಞಾನ ಉಳ್ಳವರಾಗಿದ್ದರು. ಊರಲ್ಲಿನ ಸಾಮಾಜಿಕ ಶೈಕ್ಷಣಿಕ ಹಾಗೂ ಕೂಲಿ ಕಾರ್ಮಿಕರ ಸ್ಥಿತಿಗತಿಗಳನ್ನು ವಿಚಾರಿಸುತ್ತಾ ಸೂಕ್ಷö್ಮವಾಗಿ ಎಲ್ಲರನ್ನು ಗಮನಿಸುತ್ತಿದ್ದರು. ಡಿ. ನಾಗರಾಜು ನಾನು ಪ್ರಾಥಮಿಕ ಶಾಲೆಯಲ್ಲಿ ಸಹಪಾಠಿಯಾಗಿದ್ದು ಈಗ ಊರಲ್ಲಿಯೇ ವೀಳ್ಯದೆಲೆ ತೋಟ ಮಾಡಿಕೊಂಡು ಆರಾಮವಾಗಿದ್ದನು. ಅವರ ತೋಟದಲ್ಲಿ ತೆರೆದ ಬಾವಿಯಲ್ಲಿ ಮಿಶ್ರಾಜಿಯೂ ನಾನು ಸೇರಿದಂತೆ ನಾವೆಲ್ಲರು ಈಜಾಡಿದೆವು. ಆಗ ಹೊರಬಂದು ತೋಟದಲ್ಲಿನ ತೆಂಗಿನ ಮರಗಳಿಂದ ಇಳಿಸಿದ ತೆಂಗಿನ ಹೆಂಡವನ್ನು ಸವಿದೆವು. ಮನೆಯಿಂದ ರೊಟ್ಟಿ ಬುತ್ತಿಯನ್ನು ಅಲ್ಲಿಗೇ ತರಿಸಿದ್ದು, ವೀಳ್ಯದೆಲೆಯ ತೋಟದಲ್ಲಿ ಎಲ್ಲರೂ ಕೂತು ಊಟ ಮಾಡಿದೆವು. ಮಿಶ್ರಾಜಿ ಅವರು ಸಂತೋಷದಿಂದಲೇ ಇಡೀ ದಿನ ಕಳೆದರು. ಮಾತಿನ ಮಧ್ಯೆ ನಮ್ಮೂರಲ್ಲಿನ ಶ್ರೀಮಂತರು ಮತ್ತು ದೊಡ್ಡ ರೀತಿಯಲ್ಲಿ ಒಕ್ಕಲುತನ ಮಾಡುವ ಬಣಕಾರ ಸಿದ್ದಪ್ಪನವರನ್ನು ನೋಡುವ ಆಸೆ ವ್ಯಕ್ತಪಡಿಸಿದರು. ಪ್ರೊ. ಅವರನ್ನು ಅವರ ಮನೆಗೂ ಕರೆದುಕೊಂಡು ಹೋದೆ. ನಮ್ಮಪ್ಪನ ಬಹುದೊಡ್ಡ ವಿಶ್ವಾಸಿಕರಾಗಿದ್ದ ಬಣಕಾರ ಸಿದ್ದಪ್ಪನವರು ಮಿಶ್ರಾಜಿ ಅವರ ಜೊತೆ ಗ್ರಾಮೀಣ ಅರ್ಥವ್ಯವಸ್ಥೆಯ, ಕೂಲಿಕಾರ್ಮಿಕರ, ಹಬ್ಬಹರಿದಿನಗಳ ಕುರಿತು ದೀರ್ಘವಾಗಿ ಚರ್ಚಿಸಿದರು. ಕೊನೆಗೆ ಟೀ ಕುಡಿದು ಅವರ ಮನೆಯಿಂದ ವಾಪಸ್ ಬಂದೆವು.
ಸಂಜೆ ಸಮಯಕ್ಕೆ ನಮ್ಮೂರಿನಲ್ಲಿಯೇ ಹೊಸದಾಗಿ ಕಲಿತಿದ್ದ ಬ್ಯಾಂಡ್ಅನ್ನು ಅವರ ಮುಂದೆ ಬಾರಿಸಿದರು. ಆ ಕಾಲಕ್ಕೆ ದೇಶ ವಿದೇಶಗಳನ್ನು ಪ್ರವಾಸ ಮಾಡಿ ನಮ್ಮ ದೇಶದಲ್ಲಿನ ದಕ್ಷಿಣ ಭಾರತಕ್ಕೆ ಮಾನವಶಾಸ್ತçದ ಅಧ್ಯಯನಕ್ಕೆ ಮುಖ್ಯಸ್ಥರಾಗಿದ್ದ, ಜಾತಿಯಲ್ಲಿ ಅತ್ಯುನ್ನತವಾದ ಶ್ರೇಣಿಗೆ ಸೇರಿದ ಬ್ರಾಹ್ಮಣರಾಗಿದ್ದ ಪ್ರಾಧ್ಯಾಪಕರೊಬ್ಬರು ಯಾವ ಹಮ್ಮು ಬಿಮ್ಮುಗಳಿಲ್ಲದೆ ಸಾಮಾನ್ಯ ಹಳ್ಳಿಗೆ ಬಂದು ಊರಲ್ಲಿಯ, ನಮ್ಮ ಮನೆಯಲ್ಲಿಯೇ ಉಳಿದು ಹೋಗಿದ್ದು ನಮ್ಮೂರಿನ ಮತ್ತು ನನ್ನ ಜೀವನ ಕಾಲಘಟ್ಟದಲ್ಲಿ ಮರೆಯಲಾಗದ ಸವಿನೆನಪಾಗಿ ಉಳಿದಿದೆ. ಅವರ ಸರಳ, ಸಜ್ಜನಿಕೆಯ ವ್ಯಕ್ತಿತ್ವದಿಂದಾಗಿ ಅಂದು ಪರಿಚಯವಾಗಿ, ನನಗೆ ಬೌದ್ಧಿಕ ಮತ್ತು ಆರ್ಥಿಕವಾಗಿ ಶಕ್ತಿ ನೀಡಿ, 50 ವರ್ಷಗಳ ನಂತರ ಇಂದಿಗೂ ನನ್ನ ಮಾರ್ಗದರ್ಶಕ ಗುರುಗಳಾಗಿ ಉಳಿದಿರುವುದು ನನ್ನ ಜೀವನದ ಭಾಗ್ಯವೆಂದೇ ಭಾವಿಸಿದ್ದೇನೆ. ಅವರು ಮಾಡಿದ ಯಾವ ಸಹಾಯವನ್ನೂ, ತಾನು ಮಾಡಿದೆನೆಂಬ ಅಹಂ ಎಲ್ಲೂ ಸುಳಿಯುವುದಿಲ್ಲ. ಅಂದು ನನಗೆ ಸಿಕ್ಕ ಈ ಪ್ರೊಫೆಸರ್ ನಂತರ ನನ್ನ ಸ್ನೇಹ ಬಳಗದ ಮಾದೇವ, ಅರ್ಕೇಶ, ಮಹೇಶ, ಭಕ್ತ, ಗೊಟ್ಟಿಗೆರೆ ಶಿವರಾಜು ಎಲ್ಲರಿಗೂ ಸ್ನೇಹದ ಗುರುಗಳಾಗಿ ಇಂದಿಗೂ ಉಳಿದಿದ್ದಾರೆ. ಈಗಲೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳಿಗೆ ವಿಶೇಷ ಉಪನ್ಯಾಸಕರಾಗಿ ಹೋಗಿ ಬರುತ್ತಿರುವುದನ್ನ ನೋಡಿದರೆ ಆಶ್ಚರ್ಯವಾಗುತ್ತದೆ. ಅವರಿಗಿಂತ ಇಪ್ಪತ್ತು ವರ್ಷಗಳಷ್ಟು ಕಿರಿಯರಾದ ನಾವುಗಳು ಅವರನ್ನು ಇಂದಿಗೂ ಅನುಸರಿಸುತ್ತಾ ಜೀವನ ಸಾಗಿಸುತ್ತಿದ್ದೇವೆ.
ನಾನು ಅಧ್ಯಾಪಕನಾಗಿದ್ದ ಸಮಯದಲ್ಲಿ ಶೈಕ್ಷಣಿಕ ವರ್ಷ ಮುಗಿದು ಮೂರು ತಿಂಗಳ ರಜೆಯಲ್ಲಿ ಊರಿಗೆ ಹೋಗಿದ್ದೆ. ಆಗ ಪಾಲ್ ಇ. ಸೈಮನ್ಸ್ಗೆ ನಾನು ಅನುವಾದಕನಾಗಿ ಕೆಲಸವೊಂದನ್ನು ಮಾಡಲು ಪ್ರೊ. ಮಿಶ್ರಾಜಿ ಅವರು ಒಪ್ಪಿಸಿದ್ದರು ಎಂಬುದನ್ನು ಆಗಲೇ ಹೇಳಿದ್ದೇನೆ. ಅದನ್ನು ನಾನು ಮಾಡುತ್ತಿದ್ದೆನಾದರೂ ನನಗೆ ಪ್ರತಿ ತಿಂಗಳು ಮುಗಿದಾಕ್ಷಣ ಸಂಬಳ ನೀಡಿರಲಿಲ್ಲ. ಆದರೆ ನಾನು ನನ್ನ ಹಳ್ಳಿಯಲ್ಲಿ ಇರುವಾಗ ಮೂರು ತಿಂಗಳ ಒಟ್ಟು ಸಂಬಳ 1500 ರೂಪಾಯಿಗಳನ್ನು ನನ್ನ ವಿಳಾಸಕ್ಕೆ ಮನಿ ಆರ್ಡರ್ ಮುಖಾಂತರ ಕಳಿಸಿದ್ದರು. ನಮ್ಮೂರಿಗೆ ಆಗತಾನೆ ಹೊಸದಾಗಿ ಬಂದಿದ್ದ ಪೋಸ್ಟ್ ಆಫೀಸ್ ಮತ್ತು ಅದರ ಉಸ್ತುವಾರಿಯನ್ನು ನಮ್ಮ ಊರಿನ ಗೌಡ್ರ ಈರಣ್ಣ ಎಂಬುವವರು ನೋಡಿಕೊಳ್ಳುತ್ತಿದ್ದರು. ಅವರು ನನಗೆ ಬಂದ 1500ರೂಗಳಷ್ಟು ಮನಿ ಆರ್ಡರ್ ಹಣ ನೋಡಿ ಆಶ್ರ್ಯಗೊಂಡಿದ್ದರು. ಆಗ ನಮ್ಮೂರಿಗೆ ಹೆಚ್ಚೆಂದರೆ 50-100ರೂಗಳು ಎಂ.ಓ. ಗಳು ಬರುತ್ತಿದ್ದ ಕಾಲ. ಇಷ್ಟೊಂದು ಹಣ ಬರುವಷ್ಟು ಈ ಹುಡುಗ ಹೆಂಗೆ ಬೆಳೆದ ಎಂಬೆಲ್ಲ ಯೋಚನೆ ಮಾಡುತ್ತಾ ಊರಿಗೆಲ್ಲ ಸುದ್ದಿ ಮಾಡಿದ್ದ. ಆಗ ನಮ್ಮ ಅಪ್ಪ ಇನ್ನೂ ಸಕ್ರಿಯವಾಗಿ ಕೆಲಸ ಕಾರ್ಯ ಮಾಡುತ್ತಿದ್ದರು. ‘ಅದೇನಪ್ಪ ಅಷ್ಟೊಂದು ದುಡ್ಡು, ಕಳಿಸಿದರ್ಯಾರು?’ ಎಂದು ಅಪ್ಪ ಕೂಡ ಆಶ್ಚರ್ಯದಿಂದ ಕೇಳಿದ್ದರು. ಆಗ ಪಡೆದ 1500 ರೂಗಳನ್ನು ಎಂ.ಓ. ಮೂಲಕ ಬಂದು ನೀಡಿದ ಸಂತೋಷವನ್ನು ಅಳೆಯಲಾಗದು. ಎಲ್ಲ ಕೊರತೆಗಳ ಆಗರದಲ್ಲಿ ಹೋರಾಡುತ್ತಿದ್ದ ನನಗೆ ಅದೊಂದು ಯಾವ ಮಾಪಕದಿಂದಲೂ ಅಳಿಯಲಾಗದ ಶಕ್ತಿವರ್ಧಕ ಔಷಧಿಯಂತೆ ಹುರುಪು ನೀಡಿ ಊರಲ್ಲಿ ನನ್ನ ಗೌರವ ಬೆಳೆಸಿತ್ತು.
ಮುಂದುವರಿಯುವುದು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ



