Connect with us

ಅಂತರಂಗ

ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು

Published

on

  • ರುದ್ರಪ್ಪ ಹನಗವಾಡಿ 

ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ ತೋರಿಸಬೇಕೆಂದು ಯೋಚಿಸಿದ್ದೆ. ಅಪ್ಪನು ಓಡಾಡಲು ಶಕ್ತಿ ಇದ್ದ ಕಾಲದಲ್ಲಿ ಎಲೆ ವ್ಯಾಪಾರಕ್ಕಾಗಿ ಧಾರವಾಡ, ಕಂಪ್ಲಿ, ಗಂಗಾವತಿ, ಹೊಸಪೇಟೆ, ಹರಿಹರ, ದಾವಣಗೆರೆ ಸಂತೆಗಳಲ್ಲಿ ಓಡಾಡುತ್ತಿದ್ದನು. ಇತ್ತೀಚೆಗೆ ಅವರಿಗೆ ಇದ್ದ ಕೆಮ್ಮು ದಮ್ಮುಗಳಿಂದ ಹೊರ ಊರುಗಳಿಗೆಲ್ಲೂ ಹೋಗುತ್ತಿರಲಿಲ್ಲ. ಅಪ್ಪನ ಹೆಚ್ಚಾದ ವಯಸ್ಸಿನ ಕಾರಣದಿಂದಲೇ ಹರಿಹರದಲ್ಲಿ ಹೈಸ್ಕೂಲಿಗೆ ಸೇರಿದ್ದ ಅಣ್ಣ ತಿಪ್ಪಣ್ಣನನ್ನು ಶಾಲೆ ಬಿಡಿಸಿ ತೋಟದ ಕೆಲಸಕ್ಕೆ ಹಾಕಿಕೊಂಡಿದ್ದ. ಹಾಗಾಗಿ ಈಗೆಲ್ಲ ಸಂತೆಗಳಿಗೆ ಅಣ್ಣನನ್ನೇ ಕಳಿಸುತ್ತಿದ್ದ.

ನಾನು ಮೈಸೂರಿನಲ್ಲಿ ಮತ್ತೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪುನಃ ನನ್ನ ಉಪನ್ಯಾಸಕ ಹುದ್ದೆಯನ್ನು ವಿಶ್ವವಿದ್ಯಾಲಯ ಮುಂದುವರೆಸಿತು. ಈ ನಡುವೆ ಪಾಲ್ ಇ ಸೈಮನ್ಸ್ ಅವರ ಪ್ರಾಜೆಕ್ಟ್ ಪೂರ್ಣಗೊಂಡಿತ್ತು. ಹಾಗಾಗಿ ಅವರು ವಾಪಸ್ ಅಮೇರಿಕೆಗೆ ಹೊರಟುಹೋದರು. ಹೋಗುವ ಮುನ್ನ ತಮ್ಮಲ್ಲಿದ್ದ ರ‍್ಯಾಲೀ ಬೈಸಿಕಲ್ ಮತ್ತು ಆರಾಮವಾಗಿ ಕೂರಲು ತೆಗೆದುಕೊಂಡಿದ್ದ `ಇಸೀ ಚೇರ್’ನ್ನು ನನಗೆ ಇಟ್ಟುಕೊಳ್ಳಲು ಹೇಳಿದರು. ಉಳಿದಂತೆ ತನ್ನೆಲ್ಲ ವಸ್ತುಗಳನ್ನು ಅಚ್ಚುಕಟ್ಟಾಗಿ ಪ್ಯಾಕ್ ಮಾಡಿಕೊಳ್ಳಲು ನಾನು ಸಹಕರಿಸಿದೆ.

ಈ ಸಮಯಕ್ಕಾಗಲೇ ಮಹೇಶ ರಾಜ್ಯಶಾಸ್ತçದಲ್ಲಿ ಎಂ.ಎ. ಮುಗಿಸಿದ್ದ. ಅವನು ಮುಂದೆ ಕಾನೂನು ವ್ಯಾಸಂಗ ಮಾಡಲು ಮೈಸೂರಿನಲ್ಲಿಯೇ ಇರುವ ತೀರ್ಮಾನ ಮಾಡಿದ್ದ. ಹಾಗಾಗಿ ಹಾಲಿ ಇದ್ದ ಮನೆಯನ್ನು ನಾನು ಬಿಟ್ಟು
ಕೆ.ಜಿ. ಕೊಪ್ಪಲಲ್ಲಿ ನಾನು ಅವನೂ ಸೇರಿ ಬಾಡಿಗೆ ಮನೆ ಮಾಡಿದೆವು. ನಂತರದಲ್ಲಿ ನಮ್ಮ ಊರಿನಲ್ಲಿ ಪಿಯುಸಿ ಪಾಸು ಮಾಡಿ ಊರಲ್ಲಿದ್ದ ಬಾರಿಕರ ಮಾಂತೇಶಿ, ಐನೇರ ಮುಕ್ತಾಯಕ್ಕ ಇವರುಗಳು ಕೂಡ ಮೈಸೂರಿಗೆ ಬಂದು ಓದು ಮುಂದುವರೆಸಲು ನನ್ನ ಸಹಾಯ ಕೋರಿದ್ದರು. ನಾನು ಅವರನ್ನೂ ಸಹ ನನ್ನ ಜೊತೆಗೆ ಮೈಸೂರಿಗೆ ಕರೆತಂದು, ಮುಕ್ತಾಯಕ್ಕನಿಗೆ ಸರಸ್ವತಿಪುರಂನಲ್ಲಿ ಸಣ್ಣ ಬಾಡಿಗೆ ಮನೆ ಮಾಡಿಕೊಟ್ಟು ಮಾಂತೇಶಿಗೆ ಮಹಾರಾಜ ಕಾಲೇಜಿನಲ್ಲಿ ಮತ್ತು ಬಿ.ಸಿ.ಎಂ. ಹಾಸ್ಟೆಲ್‌ನಲ್ಲಿ ಸೀಟು ಕೊಡಿಸಿ ಬಿ.ಎ. ಮುಂದುವರೆಸಲು ಅವಕಾಶ ಮಾಡಿಕೊಟ್ಟೆ. ಈ ನಡುವೆ ನಾನು ಊರಿಗೆ ಹೋದಾಗ ನನ್ನ ಅವ್ವನ ತಂಗಿ ಮಗ ಸಿರಿಗೇರಿ ರಾಮಣ್ಣ ಬಿ.ಎ. ಪದವಿ ಕೋರ್ಸು ಮುಗಿಸಿ ಕೆಲವು ವಿಷಯಗಳಲ್ಲಿ ಫೇಲಾಗಿ ತನ್ನ ಊರಿನಲ್ಲಿದ್ದ. ಅವನನ್ನು ಕೂಡ ಮೈಸೂರಿಗೆ ಕರೆದುಕೊಂಡು ಬಂದು ನಾವಿದ್ದ ಮನೆಯಲ್ಲಿಟ್ಟುಕೊಂಡು, ಬಾಕಿ ಉಳಿದ ವಿಷಯಗಳಿಗಾಗಿ ಟ್ಯೂಷನ್ ತೆಗೆದುಕೊಳ್ಳಲು ವ್ಯವಸ್ಥೆ ಮಾಡಿದೆ. ನಂತರ ಬಿ.ಎ. ಪಾಸು ಮಾಡಿಕೊಂಡು ಮುಂದೆ ಕೆ.ಇ.ಬಿ.ಯಲ್ಲಿ ಸರ್ಕಾರಿ ಕೆಲಸಕ್ಕೆ ಸೇರಿದ.

ಕೆ.ಜಿ. ಕೊಪ್ಪಲ ಮನೆಯಲ್ಲಿ ನಾನು ಮಹೇಶ ಅಧಿಕೃತ ಬಾಡಿಗೆದಾರರಾದರೂ ಅನಧಿಕೃತವಾಗಿ ವಿದ್ಯಾರ್ಥಿ ಬಳಗ ಮತ್ತು ನಿರುದ್ಯೋಗಿಗಳ ಬಳಗದ ಸದಸ್ಯರು ಯಾರಾದರೊಬ್ಬರು ಇರುತ್ತಿದ್ದರು. ನಮ್ಮಿಬ್ಬರಿಗೆ ಅಡಿಗೆ ಮಾಡಿಡಲು ಒಪ್ಪಿಕೊಂಡಿದ್ದ ಶಿವಪ್ಪ ಎನ್ನುವ ಅಡಿಗೆಯವನು ನಮ್ಮಲ್ಲಿ ದಿನವೂ ಏರುಪೇರಾಗುತ್ತಿದ್ದ ಸಂಖ್ಯೆ ಮತ್ತು ಹೊಲೆ ಮಾದಿಗರೆಗೆಲ್ಲ ನಾನು ಅಡಿಗೆ ಮಾಡುವುದಿಲ್ಲ ಎಂದು ಹೇಳಿ ಹೊರಟು ಹೋಗಿದ್ದ. ಈ ನಡುವೆ ಹಾಸ್ಟೆಲ್‌ನಲ್ಲಿ ಸೀಟು ಸಿಗುವವರೆಗೆ ಮಾಂತೇಶಿ ಮತ್ತು ರಾಮಣ್ಣನೇ ತೋಚಿದಂತೆ ಅಡುಗೆ ಮಾಡುತ್ತಿದ್ದರು. ಅದನ್ನೇ ಎಲ್ಲರೂ ಹಂಚಿ ಉಣ್ಣುತ್ತಿದ್ದೆವು. ಇದನ್ನೆಲ್ಲ ನೆನಪಿಸಿಕೊಳ್ಳುವ ಸಮಯಕ್ಕೆ ರಾಮಣ್ಣ ಮತ್ತು ಮಾಂತೇಶಿ ಇಬ್ಬರೂ ತೀರಿಕೊಂಡಿದ್ದಾರೆ. ಮುಕ್ತಾಯಕ್ಕ ಹೊಳೆ ದಾಟಿದ ಮನುಷ್ಯ ಸ್ವಭಾವದಂತೆ ಗುರ್ತಿಲ್ಲದವರಂತೆ ದಾವಣಗೆರೆಯಲ್ಲಿ ಅರಾಮ ಇದ್ದಾಳೆ.

ಇದೇ ಸಮಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಇಂದಿರಾ ಗಾಂಧಿ ಅವರ ಬಗ್ಗೆ ಅಲಹಾಬಾದ್ ಕೈಕೋರ್ಟ್ ನೀಡಿದ ತೀರ್ಪಿನಂತೆ ಪಾರ್ಲಿಮೆಂಟ್ ಸದಸ್ಯತ್ವವನ್ನು ರದ್ದುಗೊಳಿಸಿದ ಕಾರಣ ದೇಶದಾದ್ಯಂತ ಆಂತರಿಕ ತುರ್ತು ಪರಿಸ್ಥಿತಿ ಘೋಷಣೆಯಿಂದಾಗಿ ಧಾರವಾಡದಲ್ಲಿದ್ದು ಪತ್ರಿಕೆ ನಡೆಸುತ್ತಿದ್ದ ರಾಜಶೇಖರ ಕೋಟಿ ಕೂಡ ಮೈಸೂರಿಗೆ ಬಂದಿದ್ದರು ಹಾಗೂ ನಮ್ಮ ಈ ಬಾಡಿಗೆ ಮನೆಯ ಗೌರವಾನ್ವಿತ ಸದಸ್ಯರಾಗಿದ್ದರು.

ನನಗೆ ಬರುತ್ತಿದ್ದ 600ರೂಗಳ ಸಂಬಳ ಮತ್ತು ಮಹೇಶನ ಊರಿನಿಂದ ಬರುತ್ತಿದ್ದ ಅಕ್ಕಿ ಮತ್ತು ಸಾಂಬಾರು ಪದಾರ್ಥಗಳು ಸೇರಿಕೊಂಡು ಎಲ್ಲರಿಗೂ ಊಟ-ತಿಂಡಿಗಳು ಸಾಧಾರಣವಾಗಿ ನಡೆಯುತ್ತಿದ್ದವು. ಬಿ.ಎ. ಮತ್ತು ಎಂ.ಎ.ಗಳಲ್ಲಿ ಹಾಸ್ಟೆಲ್‌ನಲ್ಲಿನ ಸೊಗಸಾದ ಊಟ ನಂತರ ಪಾಲ್ ಸೈಮನ್ಸ್ ಜೊತೆ ಅಡಿಗೆ ಭಟ್ಟನ ಕೈರುಚಿ ನೋಡಿದ್ದ ನನಗೆ ಇಲ್ಲಿನ ಅನಿಶ್ಚಿತವಾದ ಊಟೋಪಚಾರಗಳನ್ನು ಸಹಿಸಿಕೊಳ್ಳುವುದು ಕಷ್ಟವಾಗುತ್ತಿತ್ತು. ಆದರೇನು? ನಮ್ಮ ಮಿತ್ರ ಬಳಗದ ಬೆಚ್ಚಗಿನ ಸೆಳೆತಗಳು ಇದನ್ನೆಲ್ಲ ಮೀರಿ ಒಬ್ಬರಿಗೊಬ್ಬರು ಸಹಕರಿಸಿಕೊಂಡು ಕಾಲ ಹಾಕುತ್ತಿದ್ದೆವು.
ದಸರಾ ರಜೆ ಬಂದು ಊರಿಗೆ ಹೋದಾಗ ಅಪ್ಪನನ್ನು ಒಮ್ಮೆ ಮೈಸೂರಿಗೆ ಕರೆತಂದು ದಸರಾ ಹಬ್ಬ ಮತ್ತು ನಮ್ಮ ಕಾಲೇಜು ತೋರಿಸಬೇಕೆಂಬ ಆಸೆಯಾಯಿತು. ಈ ಬಾರಿ ದಸರೆಯಲ್ಲಿ ಊರಿಗೆ ಹೋದಾಗ ಸೈಕಲ್ ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ನಮ್ಮ ಅಜ್ಜಿ (ಅಪ್ಪನ ತಾಯಿ) ಪಕ್ಕೀರಜ್ಜಿಯ ಹೆಸರಿಗಿದ್ದ ಹಳ್ಳದಾಚೆಗಿನ ಹೊಲದಲ್ಲಿನ ಬೆಳೆ ನೋಡಲು ಹೋಗಿದ್ದೆವು. ಅಣ್ಣ ಸರಿಯಾಗಿ ಕೆಲಸ ಮಾಡದೆ ಎಲ್ಲಾ ಕಡೆ ನಿರೀಕ್ಷಿತ ಉತ್ಪಾದನೆ ಇಲ್ಲವೆಂದು ನನ್ನ ಬಳಿ ಅಪ್ಪ ಅಲವತ್ತುಕೊಂಡಿದ್ದ. ಅವನೂ ಆಗ ತಾನೆ ಓದುವುದನ್ನು ಬಿಟ್ಟು ತೋಟದ ಕೆಲಸಗಳಲ್ಲಿ ತೊಡಗಿದ್ದರಿಂದಲೋ ಏನೋ ವ್ಯವಸಾಯದಲ್ಲಾಗಲೀ, ತೋಟ ಮಾಡುವುದರಲ್ಲಾಗಲೀ, ಅಪ್ಪನ ನಿರೀಕ್ಷಿತ ಮಟ್ಟದ ಕೆಲಸಗಾರನಾಗಿರಲಿಲ್ಲ. ಅದಕ್ಕೆ ನಮ್ಮವ್ವನ ಕಟಿಪಿಟಿಯೂ ಕಾರಣವಾಗಿತ್ತು. ನಮ್ಮ ಸೈಕಲ್ ಸವಾರಿ ಮುಗಿದು ಮನೆಗೆ ಬಂದಾಗ ಮೈಸೂರು ದಸರಾ ನೋಡಲು ಕರೆದುಕೊಂಡು ಹೋಗುವ ತೀರ್ಮಾನ ಅಪ್ಪನಿಗೆ ಹೇಳಿ ಒಪ್ಪಿಸಿದೆ. ನಂತರ ರೈಲಿನಲ್ಲಿ ಮಾರನೇ ದಿನ ಅಪ್ಪನೊಡನೆ ಮೈಸೂರಿಗೆ ಪ್ರಯಾಣ ಬೆಳೆಸಿದೆ.

ಮೈಸೂರು ನಗರ ದಸರಾ ಹಬ್ಬದ ಸಂಭ್ರಮದಲ್ಲಿ ಗಿಜುಗುಡುತ್ತಿತ್ತು. ವಿದ್ಯುತ್ ಅಲಂಕಾರದಿಂದ ಶೃಂಗಾರಗೊಂಡಿದ್ದರಿಂದ ಚಾಮುಂಡೇಶ್ವರಿ ಬೆಟ್ಟ, ಸಂಜೆ ವೇಳೆ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ನಮ್ಮ ಕಾಲೇಜನ್ನು ಎಲ್ಲಾ ತೋರಿಸಿದೆ. ನಾನು ಈಗ್ಗೆ 2-3 ವರ್ಷಗಳ ಹಿಂದೆ ಇಲ್ಲಿಯೇ ಓದಿ ಈಗ ಅಲ್ಲಿಯೇ ಮೇಷ್ಟರಾಗಿ ಕೆಲಸ ಮಾಡುತ್ತಿರುವುದನ್ನು ಕಣ್ಣಾರೆ ಕಂಡ ಅಪ್ಪ ಖುಷಿಗೊಂಡಿದ್ದ. ಅರಮನೆ, ಚಾಮುಂಡಿ ಬೆಟ್ಟ, ನಮ್ಮ ಕಾಲೇಜು, ಎಲ್ಲ ನೋಡಿದ ಅಪ್ಪ `ನಾನಿನ್ನು ಸತ್ತರೂ ಚಿಂತೆಯಿಲ್ಲ, ನೀನೊಂದು ದಡ ಸೇರಿದೆ’ ಎಂದು ಹೇಳಿ ಪುಳಕಗೊಂಡಿದ್ದ. ಮಾರನೇ ದಿನ ಸಂಜೆ ಕೃಷ್ಣರಾಜ ಸಾಗರ ಅಣೆಕಟ್ಟು ವೀಕ್ಷಣೆಗೆ ಹೋಗುವ ಮಾತಾಡಿದಾಗ ಅವನು ಆಸಕ್ತಿ ತೋರಲಿಲ್ಲ. ಹಾಗಾಗಿ ಅವನನ್ನು ರಾಮನಗರದಲ್ಲಿದ್ದ ಅಕ್ಕನ ಮನೆಗೆ ಬಸ್ಸಿನಲ್ಲಿ ಹತ್ತಿಸಿ ಕಳಿಸಿದೆ.

ದೇಶಾದಾದ್ಯಂತ ತುರ್ತು ಪರಿಸ್ಥಿತಿ, ದೇವರಾಜ ಅರಸರ 20 ಅಂಶದ ಕಾರ್ಯಕ್ರಮಗಳು, ಈ ಬಗ್ಗೆ ರಾಷ್ಟ್ರಮಟ್ಟದಲ್ಲಿ ಜೆಪಿ ಅವರು ಸೇರಿದಂತೆ ವಿರೋಧ ಪಕ್ಷಗಳ ಧುರೀಣರನ್ನು ಬಂಧಿಸಿ ಜೈಲಿನಲ್ಲಿಡುವಂತಾದ ವಿಷಯಗಳ ಚರ್ಚೆ ನಮ್ಮ ಕೆ.ಜಿ.ಕೊಪ್ಪಲ ಮನೆಯಲ್ಲಿ ನಡೆಯುತ್ತಿತ್ತು. ತುರ್ತು ಪರಿಸ್ಥಿತಿಯ ಕಾರಣದಿಂದಾಗಿ ವಿದ್ಯಾರ್ಥಿಗಳಿಂದ ಆಗಾಗ ನಡೆಯುತ್ತಿದ್ದ ಮುಷ್ಕರಗಳಾಗಲಿ, ವಿದ್ಯಾರ್ಥಿ ಸಂಘದ ಚುನಾವಣೆಗಳಾಗಲೀ ನಡೆಯದೆ, ಎಲ್ಲರೂ ಬೆದರಿದಂತೆ, ಸ್ವಯಂ ನಿಯಂತ್ರಿತರಾದವರಂತೆ ಕೆಲಸ ಮಾಡುವ ವಾತಾವರಣ, ಶೈಕ್ಷಣಿಕ ಮತ್ತು ಸರ್ಕಾರಿ ಕಛೇರಿಗಳಲ್ಲಿ ಮೂಡಿದಂತೆ ತೋರುತ್ತಿತ್ತು.

ಅಪ್ಪನನ್ನು ಊರಿಗೆ ಕಳಿಸಿ, ನಂತರದ ದಿನಗಳಲ್ಲಿ ಓದು, ತರಗತಿಗಳ ಪಾಠ ಮತ್ತು ಸಮಾಜವಾದಿ ಯುವಜನ ಸಭಾ, ಲೋಹಿಯಾ, ಅಂಬೇಡ್ಕರ್ ಚಿಂತನೆಗಳ ಕಡೆ ವಾಲಿಕೊಂಡಿದ್ದೆ. ಅಪ್ಪನಿಗೆ 80-85 ವರ್ಷಗಳಾಗಿರಬಹುದು. ಆಗಿದ್ದರೂ ಎಂದೂ ಮನೆಯಲ್ಲಿ ಕೂತು ವಿಶ್ರಾಂತಿ ಪಡೆಯುವ ಪರಿಪಾಟ ಅಪ್ಪನಿಗಿರಲಿಲ್ಲ. ಬೆಳಿಗ್ಗೆ ಎದ್ದು ದನಕರುಗಳ ಕೊಟ್ಟಿಗೆಯ ಕಸವನ್ನು ತಿಪ್ಪೆಗೆ ಹಾಕಿ, ಚಾ ಕುಡಿದು ತೋಟಕ್ಕೆ ಹೋದರೆ ಮತ್ತೆ ಬರುವುದು ರಾತ್ರಿಗೆ, ಬಂದು ಬಿಸಿನೀರಿನಲ್ಲಿ ಸ್ನಾನ ಮಾಡಿ ಊಟ ಮಾಡಿದರೆ ಅವನ ದಿನಚರಿ ಮುಗಿಯುತ್ತಿತ್ತು. ಯಾರಾದರೂ ಊರಿನಿಂದಲೋ ಇಲ್ಲ ನಮ್ಮ ಚಿಕ್ಕಪ್ಪಂದಿರಾಗಿದ್ದ ನಾಗಪ್ಪ, ಮಹಾದೇವಪ್ಪ ಮತ್ತು ಭೀಮಪ್ಪ ಇವರುಗಳು ಏನಾದರೂ ಮಾತಾಡೋ ನೆಪದಲ್ಲಿ ಸಂಜೆ ಸೇರಿಕೊಂಡರೆ ಸಾರಾಯಿ ಸಮಾರಾಧನೆ ಆಗಿ ಊಟ ಮಾಡುತ್ತಿದ್ದರು. ಇಲ್ಲ ಊರಲ್ಲಿನ ಲಿಂಗಾಯತ ಸ್ನೇಹಿತರಲ್ಲಿ ವಾರಕ್ಕೋ 15ದಿನಗಳಿಗೊಮ್ಮೆಯೋ ಗೌಪ್ಯವಾಗಿ ನಮ್ಮಲ್ಲಿನ ಕೋಣೆಯೊಂದರಲ್ಲಿ ಕೂತು ಪಾರ್ಟಿ ಮಾಡುತ್ತಿದ್ದರು. ಅವ್ವ ಲೊಟಗುಡುತ್ತಾ ಜೋಳದ ಹಪ್ಪಳವನ್ನೋ ಇಲ್ಲ ಮನೆಯಲ್ಲಿದ್ದ ಮೊಟ್ಟೆಗಳನ್ನು ಹುರಿದು ಅವರ ಪಾರ್ಟಿಗೆ ನೆಂಚಿಗೆ ಮಾಡಿ ಕೊಡುತ್ತಿದ್ದಳು.

ಅಪ್ಪನ ಅಣ್ಣ ರಂಗಪ್ಪಜ್ಜ ಇದ್ದು, ಅವನು ಮದುವೆಯಾಗಿ, ಮಕ್ಕಳು ಮನಿ ಎಂತೆಲ್ಲಾ ಆದ ಮೇಲೆ ಖಾವಿ ಧರಿಸಿ ಸಾಧುವಾಗಿದ್ದ. ಅವನು ಊರ ಹೊರಗಿನ ಗೋಮಾಳದಲ್ಲಿ ನಮ್ಮಜ್ಜಿ ಫಕ್ಕೀರಜ್ಜಿಯನ್ನು ಸಮಾಧಿ ಮಾಡಿದ್ದು. ಅಲ್ಲಿಯೇ ಒಂದು ವಿಶಾಲ ಗುಡಿಸಲು ಕಟ್ಟಿಕೊಂಡು, ದಿನವೂ ಅಜ್ಜಿಯ ಸಮಾಧಿಯನ್ನು ಪೂಜೆ ಮಾಡಿಕೊಂಡು, ನಮ್ಮ ಊರಿನ ಲಿಂಗಾಯತರ ಮನೆಯಿಂದ ಕಂತೆ ಭಿಕ್ಷೆ ಎತ್ತಿ ಅದರಲ್ಲಿಯೇ ಊಟ ಮಾಡಿಕೊಂಡಿದ್ದ. ಕ್ರಮೇಣ ಎಲ್ಲ ಜನರೂ ಸಾಧು ರಂಗಜ್ಜನ ಮಠ ಎಂದು ಗುರುತಿಸುತ್ತಿದ್ದರು. ಊರಿನ ಲಿಂಗಾಯತರು ಮತ್ತು ಇತರೆ ಜಾತಿಯ ಪ್ರಮುಖರೆಲ್ಲ ಶ್ರಾವಣಮಾಸದಲ್ಲಿ ದೇವಿಪುರಾಣವನ್ನೋ, ಭಜನೆಯನ್ನೋ ಮಾಡುತ್ತಾ ಕೊನೆಯಲ್ಲಿ ಕರಿಯ ಕೊಳವೆಯಂತಹ ವುದರಲ್ಲಿ ಸಾಂಬ್ರಾಣಿಯಂತಹದನ್ನು ನಾದಿ ಚಿಲುಮೆಯಲ್ಲಿ ತುಂಬಿ ಒಂದು ತುದಿಯಲ್ಲಿ ಬಟ್ಟೆಯನ್ನು ಸುತ್ತಿ ಎಡಗೈಯಲ್ಲಿ ಒಂದು ವಿಶೇಷ ಸ್ಟೈಲ್‌ನಲ್ಲಿ ಹಿಡಿದು ಜೋರಾಗಿ ದಮ್ಮು ಎಳೆಯುತ್ತಿದ್ದರು. ಬಲಕ್ಕೊ ಎಡಕ್ಕೊ ಕೂತವನೊಬ್ಬನು ಕಡ್ಡಿ ಗೀರಿ ಬೆಂಕಿ ಹಚ್ಚಿದರೆ ಉಸಿರು ಬಿಗಿ ಹಿಡಿದು ಎಳದಾಗ ರೈಲ್ವೆ ಉಗಿ ಬಂಡಿ ಹೊಗೆ ಉಗುಳಿದಂತೆ, ಮೂಗು ಬಾಯಿಯಿಂದ ಪುಂಖಾನುಪುಂಖವಾಗಿ ಹೊಗೆ ಹೊರಬರುತ್ತಿತ್ತು. ಹಾಗೆ ಎಳೆದವನು ಮತ್ತೊಬ್ಬನಿಗೆ ಭಯ ಮಿಶ್ರಿತ ಭಕ್ತಿಯಿಂದ ನಮಸ್ಕರಿಸಿ `ಗುರುವೇ ತಿಪ್ಪೇಶಾ’ ಎಂಬ ಉದ್ಘಾರದೊಂದಿಗೆ ಕೊಡುತ್ತಿದ್ದನು. ಆತನೂ ಸೇದಿ ಭಗವಂತನ ಕೃಪೆ, ದೇವಿಯ ಮಹಾತ್ಮೆ ಎಂದೇನೇನೋ ಮಾತಾಡಿಕೊಳ್ಳುತ್ತಿದ್ದರು. ಈ ಪಾರ್ಟಿಯಲ್ಲಿ ಅಪ್ಪನೂ ಆಗಾಗ ಅಲ್ಲಿ ಸೇರಿಕೊಳ್ಳುತ್ತಿದ್ದನು. ನಾವೆಲ್ಲ ಕೆಲವು ಹುಡುಗರು ನಮ್ಮ ಕೇರಿಯಿಂದ ಪ್ರಸಾದದ ಆಸೆಗಾಗಿ ಅಲ್ಲಿಗೆ ಹೋಗುತ್ತಿದ್ದೆವು. ಏಕೆಂದರೆ ಪ್ರತಿ ಭಜನೆ ಮುಗಿದಾಕ್ಷಣ ಪೂಜೆಗಾಗಿ ಒಡೆದ ತೆಂಗಿನ ಕಾಯಿಯ ಹಸಿ ಕೊಬ್ಬರಿಯ ಚೂರುಗಳು, ಜೊತೆಗೆ ಕತ್ತರಿಸಿದ ಬಾಳೆಯ ಹಣ್ಣು ಮಂಡಕ್ಕಿ ಕಾರ ಎಲ್ಲ ಸೇರಿಸಿ ಎಲ್ಲರಿಗೂ ಹಂಚುತ್ತಿದ್ದರು.

ಮಠದ ರಂಗಪ್ಪಜ್ಜ ನಮಗೆ ಸ್ವಂತ ಅಪ್ಪನ ಅಣ್ಣ, ದೊಡ್ಡಪ್ಪನಾಗಿದ್ದವರು ಎನ್ನುವ ವಿಷಯ ನಮಗಾರಿಗೂ ನಮ್ಮ ಬಾಲ್ಯ ಕಳೆಯುವವರೆಗೂ ಗೊತ್ತೇ ಇರಲಿಲ್ಲ. ನಾನು ಮತ್ತೆ ನಮ್ಮ ಕೇರಿಯ ಕಡೆಮನೆ ತಿಪ್ಪಣ್ಣ, ಕರಿಬಸಪ್ಪ, ಕುಬೇರ ಜೋಗಪ್ಪ ತುಂಗಣ್ಣ ಸಂಜೆ 4-5 ಗಂಟೆಯ ಸಮಯಕ್ಕೆ ಮಠದ ಕಡೆಗೆ ಹೋಗಿ ಅಲ್ಲಿಯೇ ಇದ್ದ ಬಾವಿಯಿಂದ ನೀರು ಸೇದಿ ಮಠದಲ್ಲಿನ ಗಿಡಬಳ್ಳಿಗಳಿಗೆ ಹೊಯ್ಯುತ್ತಿದ್ದವು. ನೀರು ಸೇದಿ ಹಾಕಿದ ನಾಟಕ ಮುಗಿದ ಮೇಲೆ ಎಲ್ಲರಿಗೂ ಅಲ್ಲಿದ್ದ ಮಣ್ಣಿನ ಮುಚ್ಚಳಗಳಲ್ಲಿ ಊರಲ್ಲಿನ ಕಂತೆ ಭಿಕ್ಷೆಯಲ್ಲಿ ತಂದ ರೊಟ್ಟಿ ಮತ್ತು ಎಲ್ಲರ ಮನೆಯ ಸಾರನ್ನು ಒಂದೇ ಮಡಕೆಯಲ್ಲಿ ಕುದಿಸಿಟ್ಟದ್ದನ್ನು ಬಡಿಸುತ್ತಿದ್ದರು. ಅದನ್ನೆಲ್ಲ ನಾವು ತುಂಬಾ ಖುಷಿಯಿಂದ ಉಣ್ಣುತ್ತಿದ್ದೆವು. ನಂತರ ಎಲ್ಲ ಮಣ್ಣಿನ ಮುಚ್ಚಳದಂತಿದ್ದ ತಟ್ಟೆಯನ್ನು ತೊಳೆದಿಟ್ಟು ಅವರ ಕಾಲಿಗೆ ನಮಸ್ಕರಿಸಿ ಮನೆಗೆ ಹೋಗುತ್ತಿದ್ದೆವು. ನಮ್ಮಲ್ಲೆಲ್ಲ ದೊಡ್ಡವನಾಗಿದ್ದ ಕಡೆಮನೆ ತಿಪ್ಪಣ್ಣನೇ ನಮ್ಮ ಎಲ್ಲರನ್ನೂ ಕೂಡಿಸಿ ಕರೆದುಕೊಂಡು ಹೋಗುತ್ತಿದ್ದ. ಎಲ್ಲರಿಗೂ ಬೇರೆ ಬೇರೆ ನೀಡಿದ ಮೇಲೆ ಮಠದೊಳಗೆ ಅಜ್ಜ ಹೋಗುತ್ತಿದ್ದರು. ನಮಗೆ ನೀಡಿದ ರೊಟ್ಟಿಯಲ್ಲಿ ಕಡೆಮನೆ ತಿಪ್ಪಣ್ಣನಿಗೆ ಹೆಚ್ಚುವರಿಯಾಗಿ ತನಗೆ ಕೊಡುವುದರ ಬಗ್ಗೆ ಬಂದವರಿಗೆಲ್ಲ ಮೊದಲೇ ಕೊಡುವಂತೆ ತಾಕೀತು ಮಾಡಿರುತ್ತಿದ್ದ. ಕೆಲವು ಸಮಯ ತಟ್ಟೆಗಳು ಕಡಿಮೆ ಇದ್ದುದರಿಂದ ಒಂದೇ ತಟ್ಟೆಯಲ್ಲಿ ಇಬ್ಬರು ಅಥವಾ ಮೂವರು ಕೂತು ಉಣ್ಣುವುದಾದರೆ, ನಮಗೆ ಸಾಕೆಂದು ಮೊದಲೇ ಎದ್ದು ಅವನಿಗೆ ಹೆಚ್ಚಿನ ರೊಟ್ಟಿ ಉಣ್ಣಲು ಅವಕಾಶ ಮಾಡಿಕೊಡಬೇಕಾಗಿತ್ತು. ಹಾಗೆ ಮಾಡದಿದ್ದರೆ ನಾಳೆ ಮತ್ತೆ ನಿಮ್ಮನ್ನು ಇಲ್ಲಿಗೆ ಕರೆತರುವುದಿಲ್ಲ ಎನ್ನೋ ಧಮಕಿ ಹಾಕುತ್ತಿದ್ದ. ಅವನು ನಮ್ಮೆಲ್ಲರಿಗಿಂತಲೂ 2-3 ವರ್ಷಕ್ಕೂ ಹಿರಿಯವನು, ನಮ್ಮ ಚಿಕ್ಕಪ್ಪ ಭೀಮಪ್ಪನ ಮಗನಾಗಿದ್ದ ಅವರಿಗೆ ಮನೆಯಲ್ಲಿ ಆರೇಳು ಹೆಣ್ಣು ಮಕ್ಕಳ ನಂತರ ಹುಟ್ಟಿದ ಕಾರಣ ಇವನಿಗೆ ಯಾವ ಕೆಲಸವನ್ನೂ ಹೇಳುತ್ತಿರಲಿಲ್ಲ. ವಿಶೇಷವಾಗಿ ಬುಗುರಿ, ಚಿನ್ನಿ ದಾಂಡು, ಕೀಳಾಪಟ್ಟಿ ಆಟಗಳಲ್ಲಿ ನಮಗೆ ಗುರುವಾಗಿದ್ದವನು. ಆದರೆ ಊರ ಎಲ್ಲರ ದೃಷ್ಟಿಯಲ್ಲಿ ದಂಡಪಿಂಡ ಎಂಬಂತೆ ಅವನನ್ನು ಅವರ ಮನೆಯವರೂ ಸೇರಿದಂತೆ ಊರಿನಲ್ಲಿ ಜನ ಪರಿಗಣಿಸಿದ್ದರು. ಆದರೀಗ ಒಂದು ದಂಡನ್ನೇ ಕಟ್ಟುವಷ್ಟು ಮಕ್ಕಳನ್ನು, ಮೊಮ್ಮಕ್ಕಳನ್ನು ಪಡೆದು ದುಡಿಮೆ ಮಾಡಿಕೊಂಡು ಹಾಯಾಗಿದ್ದಾನೆ. ಊರಲ್ಲಿರುವಾಗಲೆಲ್ಲ ನನ್ನನ್ನು ಸೆಳೆದುಕೊಂಡಿದ್ದ ಅವನು ನಂತರದ ದಿನಗಳಲ್ಲಿ ಸಣ್ಣ ವ್ಯತ್ಯಾಸದಿಂದ ದೂರವಾಗಿದ್ದಾನೆ. ಈಗ ಮತ್ತೆ ಕರೆದು ಮಾತಾಡಿಸಬೇಕೆಂದು ನೆನಪಾದಾಗ ಅನ್ನಿಸುತ್ತಿದೆ.

ಅಜ್ಜನ ಗುಡಿಸಲು ಅರ್ಥಾತ್ ಮಠ ಸುಮಾರು ಅರ್ಧ ಎಕರೆಯಲ್ಲಿ ಸುತ್ತ ಬೇಲಿಯ ಮಧ್ಯದಲ್ಲಿನ ಅಜ್ಜಿ ಸಮಾದಿಗೆ ಮತ್ತು ಅಜ್ಜಯ್ಯ ಇರುವಿಕೆಗೆ ತೆಂಗಿನ ಗರಿ ಮತ್ತು ಭತ್ತದ ಹುಲ್ಲಿನ ಮುಚ್ಚಳಿಕೆಯಿಂದ ಗಾಳಿ ಬಿಸಿಲು ಮಳೆಗಳಿಂದ ರಕ್ಷಣೆ ಪಡೆದಿತ್ತು. ಆಗಾಗ ಅಜ್ಜಯ್ಯ ಮಠ ಕಟ್ಟುತ್ತೇನೆಂದು ಹಣ ಸಂಗ್ರಹದಲ್ಲಿ ತೊಡಗಿದ್ದರೆಂದು, ಅಪ್ಪ ಮನೆಯಲ್ಲಿ ಮಾತಾಡುತ್ತಿದ್ದರು. ಹಬ್ಬ ಹರಿದಿನಗಳಲ್ಲಿ ದೊಡ್ಡಪ್ಪ ಮನೆಗೆ ಬಂದರೆ ಅವರಿಗೆ ವಿಶೇಷವಾಗಿ ಪಾದಪೂಜೆ ಮಾಡಿ ಆ ನೀರನ್ನೆಲ್ಲ ಮನೆಯ ಎಲ್ಲ ದಿಕ್ಕುಗಳಿಗೂ ಪ್ರೋಕ್ಷಿಸುತ್ತಿದ್ದರು. ಹಾಗೆ ನಮ್ಮಲ್ಲಿನ ಇತರೆ ನಾಲ್ಕು ಚಲವಾದಿ ಮನೆತನದವರೂ ಕರೆದು ಪಾದಪೂಜೆ ಮಾಡುತ್ತಿದ್ದರು. ನಮ್ಮೂರ ಹತ್ತಿರದ ಕಡ್ಲಬಾಳ ಊರಿನ ತೇರಿಗೆ ಮತ್ತು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ರಥೋತ್ಸವಕ್ಕೆ ಹೋಗಿ ವಾರಗಟ್ಟಲೇ ಅಲ್ಲಿದ್ದು, ಅನೇಕ ಇತರೆ ಸಾಧು ಸಂತರ ಸಂಗಡದಲ್ಲಿ ಭಜನೆ ಮತ್ತು ಗಾಂಜಾ ಸೇವನೆ ಮಾಡುತ್ತಿದ್ದುದರ ಬಗ್ಗೆ ಅವರ ಜೊತೆ ಹೋಗಿ ಬಂದವರು ಆಗಾಗ ಮಾತಾಡಿಕೊಳ್ಳುತ್ತಿದ್ದರು.

ಈ ರೀತಿಯಲ್ಲಿ ಇದ್ದ ದೊಡ್ಡಪ್ಪ ನಾನು ಸಾಗರದ ಹೈಸ್ಕೂಲಿನಲ್ಲಿ ಓದುವ ಸಮಯದಲ್ಲಿ ಒಂದೆರಡು ದಿನಗಳ ಅಸ್ವಸ್ಥತೆಯಿಂದ ಹರಿಹರದ ಹತ್ತಿರವಿರುವ ಗುತ್ತೂರಿನ ಗುರು ಬಸಜ್ಜನ ಮಠದಲ್ಲಿ ತೀರಿಹೋಗಿದ್ದರು. ಅಲ್ಲಿಯ ಮಠದಲ್ಲಿಯೇ ಅವರ ಸಮಾಧಿ ಮಾಡಿದ್ದಾರೆ. ಅದೇ ಮಠದಲ್ಲಿ ನನ್ನ ಗುರುಗಳಾಗಿದ್ದ
ಪ್ರೊ. ಬಿ. ಕೃಷ್ಣಪ್ಪನವರು ಮತ್ತವರ ತಂಗಿ ಹಾಲಮ್ಮ ತಮ್ಮ ಬಾಲ್ಯದ ದಿನಗಳಲ್ಲಿ ಗಿಡಗಳಿಗೆ ನೀರು ಹಾಕುವುದು, ಹೂ ಕೀಳುವ ಸೇವೆ ಮಾಡುತ್ತಿದ್ದರು ಎಂಬುದನ್ನು ಕೃಷ್ಣಪ್ಪನವರ ತಂಗಿ ಹಾಲಜ್ಜಿ ಆಗಾಗ ನಮ್ಮೂರಿಗೆ ಬಂದಾಗ ಜ್ಞಾಪಿಸಿಕೊಳ್ಳುತ್ತಿದ್ದರು. ಅಪ್ಪನ ಅಣ್ಣ ಈ ರೀತಿಯ ಜೀವನ ಸಾಗಿಸುತ್ತಾ ಕಾಲವಾದರೆ ಅಪ್ಪ ಒಂದಲ್ಲವೆಂದರೂ ಎರಡು ಮದುವೆಯಾಗಿ, ಮ್ಯಾಳ ಮಾಡುತ್ತಾ ಅವರೆಲ್ಲರಿಗೂ ನಾಯಕನಾಗಿ, ಮಾಡಿದ ಹೊಲಮನಿ ಕೆಲಸಗಳಲ್ಲಿ ಸೈ ಎನಿಸಿಕೊಂಡು, ನಾನು ಎಂ.ಎ. ಮಾಡಿ ಅಧ್ಯಾಪಕನಾಗಿರುವವರೆಗೆ ಬದುಕಿದ್ದೇ ಒಂದು ಪವಾಡ. ಸದಾ ಕೆಲಸದಲ್ಲಿ ತೊಡಗಿರುತ್ತಿದ್ದ ಅಪ್ಪ ಸಣ್ಣಪುಟ್ಟ ಖಾಯಿಲೆಗಳಿಗೆ ಜಗ್ಗುತ್ತಿರಲಿಲ್ಲ ಯವ್ವನದ ಕಾಲಘಟ್ಟದಲ್ಲಿ ಎಲೆ ಅಡಿಕೆ ತಂಬಾಕು ಬೀಡಿ ಸೇದುತ್ತಿದ್ದ ಅಪ್ಪ ನಂತರದ ದಿನಗಳಲ್ಲಿ ಕೆಮ್ಮು ದಮ್ಮುಗಳ ಕಾಟದಿಂದ ಅವನ್ನೆಲ್ಲ ಬಿಟ್ಟು ಬಿಟ್ಟಿದ್ದನು. ನಾನು ಕೆಲಸಕ್ಕೆ ಸೇರಿ ಊರಿಗೆ ಹೋದಾಗ ಅವ್ವನಿಗೆ, ಓಬಜ್ಜನಿಗೆ, ಅಪ್ಪನಿಗೆ ವಿಶೇಷವಾಗಿ ಸಣ್ಣ ಮೊತ್ತದ ಹಣ ಕೊಡಲು ಹೋದಾಗಲೆಲ್ಲ `ನನಗ್ಯಾಕೆ ಕೊಡುತ್ತೀ, ನಿಮ್ಮವ್ವನಿಗೇ ಕೊಡು’ ಎಂದು ಹೇಳಿ ಸುಮ್ಮನಾಗುತ್ತಿದ್ದ. ಇಂತಹ ಅಪ್ಪನನ್ನು ನಾನು ಅಧ್ಯಾಪಕನಾಗಿ ಕೆಲಸಕ್ಕೆ ಸೇರಿದ ಒಂದು ವರ್ಷ ತುಂಬಿದ ದಿನ (4.12.1975)ರಲ್ಲಿ ನಾನು ಎರಡನೇ ಬಿ.ಎ. ಕ್ಲಾಸ್ ರೂಮ್‌ನಲ್ಲಿ ಪಾಠ ಮಾಡುವಾಗ ತಂತಿ ಸಂದೇಶದಲ್ಲಿ ಅಪ್ಪ ತೀರಿದ ಸುದ್ದಿ ಹೊತ್ತು ತಂದಿತ್ತು. ಅಂದಿಗೆ ಸಂಬಳ ಬಂದು 4 ದಿನಗಳಾಗಿದ್ದರೂ ಎಲ್ಲಾ ಬಟವಾಡೆ ಮಾಡಿ ನನ್ನಲ್ಲಿ 50ರೂಗಳು ಮಾತ್ರ ಜೇಬಿನಲ್ಲಿದ್ದವು. ನೇರ ರಮಾವಿಲಾಸ್ ರಸ್ತೆಯಲ್ಲಿದ್ದ ಮಯೂರ ಪ್ರಿಂರ‍್ಸ್ನಲ್ಲಿಗೆ ಹೋಗಿ ಪಿ. ಮಲ್ಲೇಶ್ ಅವರಿಂದ 100 ರೂಗಳ ಸಾಲ ಪಡೆದು ನಾನು ಮತ್ತು ನನ್ನ ಕಾಲೇಜಿನಲ್ಲಿಯೇ ಓದುತ್ತಿದ್ದ ನಮ್ಮೂರಿನ ಹುಡುಗ ಮಾಂತೇಶಿಯನ್ನು ಕರೆದುಕೊಂಡು ರಾತ್ರಿಯ ಬಸ್ ಹತ್ತಿ ಬೆಳಗಿನ ಜಾವಕ್ಕೆ ಊರಿಗೆ ಬಂದು ಸೇರಿದೆ. ಅಪ್ಪನ ಸೋತ ಮುಖನೋಡಿ ನಾನು ತೀವ್ರ ಮೌನಕ್ಕೆ ಜಾರಿದೆ. ಎಂದೂ ಏನಲೇ ಎಂದು ಗದರಿಸದೆ ತನ್ನೆಲ್ಲ ಶಕ್ತಿ ಮೀರಿದ ದುಡಿಮೆಯಿಂದ, ಪ್ರೀತಿಯಿಂದ ನಮ್ಮನ್ನು ಸಾಕಿದ ಅಪ್ಪ, ಅವನ ಜೀವನದ ಹೋರಾಟಕ್ಕೆ ಅಂತ್ಯ ಹಾಡಿದ್ದ. ನಮ್ಮೆಲ್ಲರನ್ನು ತಿದ್ದಿ ಬೆಳೆಸಿ ಬದುಕಲು ನಮಗೆ ಅನುವು ಮಾಡಿ ಇಹಲೋಕದ ವ್ಯಾಪಾರ ಮುಗಿಸಿದ್ದ ಅಪ್ಪನ ನೆನಪು ನನ್ನ ಮನಸ್ಸಿನಾಳದಲ್ಲಿ ದಿನವೂ ಸ್ಫೂರ್ತಿಯಾಗಿ, ಸಾಮಾನ್ಯ ನ್ಯಾಯದ ದೊಂದಿಯಾಗಿ ಅನುರಣಿಸುತ್ತಿರುತ್ತಾನೆ.

ನಾನು ಕೆ.ಜಿ. ಕೊಪ್ಪಲಿನ ಮನೆಯಿಂದ ಮಹಾರಾಜ ಕಾಲೇಜಿಗೆ ಹೋಗಿ ಬರುತ್ತಿದ್ದೆ. ಬಿಡುವಿನ ವೇಳೆಯಲ್ಲಿ ನಾನು ಮಹೇಶ ಇತರೆ ಸ್ನೇಹಿತರು ಜೆಪಿ ಚಳುವಳಿ ನವನಿರ್ಮಾಣ ಕ್ರಾಂತಿ, ಜಾತಿ ವಿನಾಶ ಸಮ್ಮೇಳನ, ಬೂಸಾ ಚಳುವಳಿಗಳಲ್ಲಿ ಭಾಗವಹಿಸಿದ್ದೆವು. ಈ ಎಲ್ಲ ಸಂಘಟನೆಗಳ ಮೂಲ ಹೋರಾಟಗಾರರು ಮೈಸೂರಿನಲ್ಲಿದ್ದ ಎಂ.ಡಿ. ನಂಜುಂಡಸ್ವಾಮಿ, ಪಿ. ಮಲ್ಲೇಶ್, ಕೆ. ರಾಮದಾಸ್, ಮಾದೇವ, ಭಕ್ತ, ರಾಜಶೇಖರ ಕೋಟಿ, ರಾಮದೇವ ರಾಕೆ, ನಂಜುಂಡೇ ಗೌಡ, ಗೋವಿಂದಯ್ಯ, ಶಂಕರಲಿಂಗಪ್ಪ, ಗೊಟ್ಟಿಗೆರೆ ಶಿವರಾಜು, ಇಂದೂಧರ ಹೊನ್ನಾಪುರ, ದೇವನೂರ ಶಿವಮಲ್ಲು, ವಿಶ್ವವಿದ್ಯಾಲಯದ ಗಂಗೋತ್ರಿಯಿಂದ ಪ್ರೊ. ರಾಮಲಿಂಗಂ, ಕೆ.ಎಂ. ಜಯರಾಮಯ್ಯ, ಹೊರೆಯಾಲ ದೊರೆಸ್ವಾಮಿ, ಚಂದ್ರಶೇಖರ ತಾಳ್ಯ, ಎಲ್ಲರೂ ಇದೇ ಪೂರ್ಣಾವಧಿ ಕೆಲಸವೆಂಬಂತೆ ತೊಡಗಿಸಿಕೊಂಡಿದ್ದರು. ಹಾಗೆಯೇ ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳಲ್ಲಿನ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಇಂತಹ ವಿಷಯಗಳ ಬಗ್ಗೆ ಬೆಳಕು ಚೆಲ್ಲುವ `ಮ್ಯಾನ್ ಕೈಂಡ್’, `ಬಂಡಾಯ’, `ಶೋಷಿತ’, `ನರ’, `ಪಂಚಮ’ ಎಂಬ ಅಕಾಲಿಕ ಪತ್ರಿಕೆಗಳನ್ನು ಅಸಾಧ್ಯ ಹಣಕಾಸಿನ ತೊಂದರೆಗಳ ನಡುವೆಯೂ ಹೊರ ತರುತ್ತಿದ್ದರು.

ಆ ದಿನಗಳಲ್ಲಿ ಇಂತಹದೇ ಪತ್ರಿಕೆಯಲ್ಲಿ ನಮ್ಮೂರಿನಲ್ಲಿ ನಡೆದ ಹಿಂದುಳಿದ ಜಾತಿಯ ಹುಡುಗಿಯೊಬ್ಬಳನ್ನು ಲಿಂಗಾಯತರ ಹುಡುಗನೊಬ್ಬ ಕೆಣಕಿದ ಬಗ್ಗೆ ನಾನು ಊರಿಗೆ ಹೋದಾಗ ತಿಳಿಯಿತು. ಈ ಕೃತ್ಯ ಎಸಗಿದವನನ್ನು ಯಾರೂ ವಿಚಾರಿಸುವಂತಿರಲಿಲ್ಲ. ಹುಡುಗಿಯ ಕಡೆಯವರು ಯಾರೂ ಅದನ್ನು ಪ್ರಶ್ನಿಸಲೂ ಇಲ್ಲ. ಇದೆಲ್ಲ ಗೊತ್ತಾದ ನಾನು ನರ ಬಂಡಾಯದ ಪತ್ರಿಕೆಗೆ ಬರೆದು ಪ್ರಕಟಿಸಿದ್ದೆ. ಆ ಪ್ರತಿಗಳನ್ನು ಮಾಂತೇಶಿ ಊರಿಗೆ ತೆಗೆದುಕೊಂಡು ಹೋಗಿ ಊರಲ್ಲೆಲ್ಲಾ ಹಂಚಿದನು. ವಿಷಯ ತಿಳಿದ ಊರಿನ ಪ್ರಮುಖರು, ಈ ರುದ್ರಪ್ಪ ಊರ ಮಾನ ಹರಾಜು ಹಾಕಿದ ಎಂದೆಲ್ಲ ಕೂಗಾಡಿದ್ದರು.

`ಅವನು ಊರಿಗೆ ಬರಲಿ ವಿಚಾರಿಸುತ್ತೇವೆ’ ಎಂದೆಲ್ಲಾ ಕೂಗಾಡಿದರು. ನಾನು ತಿಂಗಳೊಪ್ಪತ್ತಿನಲ್ಲಿ ಊರಿಗೆ ಹೋದಾಗ ಯಾರೂ ಆ ಬಗ್ಗೆ ಮಾತಾಡಲಿಲ್ಲ. ಮುಖ್ಯ ಕಾರಣ ಬರೆದುದೆಲ್ಲ ನಿಜವಾದ ಘಟನೆಯಾಗಿತ್ತು. ಮತ್ತೆ ಹೆಚ್ಚು ಕೆದಕಿದರೆ ತಮಗೆ ಇದು ಅವಮಾನದ ಘಟನೆಯ ಮರು ಪ್ರಸ್ತಾಪವಾಗಿ ವಿಪರೀತಕ್ಕೆ ಹೋಗಬಹುದೆಂದು ಸುಮ್ಮನಾಗಿದ್ದರು. ಹೀಗೆ ನಾನು ಮೈಸೂರಲ್ಲಿದ್ದಾಗ ಊರ ಘಟನೆಗಳಿಗೆ ಸ್ಪಂದಿಸುತ್ತಾ ಇರುವುದು ಮೈಸೂರಿನಲ್ಲಿದ್ದ ಪ್ರಗತಿಪರ ಸಂಘಟನೆಗಳ ಮತ್ತು ವಿಚಾರವಂತರ ಒಡನಾಟವೇ ಅದಕ್ಕೆ ಕಾರಣವಾಗಿತ್ತು ಎಂಬುದನ್ನ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending