Connect with us

ದಿನದ ಸುದ್ದಿ

ದಾವಣಗೆರೆ | ಹನ್ನೊಂದನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿ.ಎಸ್. ಸುಶಿಲಾದೇವಿ ಆರ್ ರಾವ್ ಆಯ್ಕೆ : ನಿಯೋಗದಿಂದ ಗೌರವ ಪೂರ್ವಕ ಆಮಂತ್ರಣ

Published

on

ಸುದ್ದಿದಿನ ,ದಾವಣಗೆರೆ : 11 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಮಾರ್ಚ್ 26 ಮತ್ತು 27 ರಂದು ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಜಿ.ಎಸ್. ಸುಶಿಲಾದೇವಿ ಆರ್ ರಾವ್ ಅವರೊಗೆ ಗೌರವಪೂರ್ವಕವಾಗಿ ಆಮಂತ್ರಣ ನೀಡಲಾಯಿತು.

ಸೋಮವಾರ ಜಿಲ್ಲಾಧ್ಯಕ್ಷ ಬಿ ವಾಮದೇವಪ್ಪ ನವರ ನೇತೃತ್ವದಲ್ಲಿ ಜಿಲ್ಲಾ ಕಸಾಪ ಪದಾಧಿಕಾರಿಗಳು ಹಾಗೂ ಎಲೆಬೇತೂರು ಗ್ರಾಮದ ಮುಖಂಡರು,ನಾಗರಿಕ ಬಂಧುಗಳ ನಿಯೋಗ ಅವರ ಮನೆಗೆ ತೆರಳಿ ಸಮ್ಮೇಳನದ ಸರ್ವಾಧ್ಯಕ್ಷತೆ ಅಲಂಕರಿಸಿ ಸಮ್ಮೇಳನವನ್ನು ಯಶಸ್ವಿಯಾಗಿ ನೆರವೇರಿಸಿಕೊಡಲು ಜಿಲ್ಲಾ ಕಸಾಪ ದ ಪರವಾಗಿ ಕೇಳಿಕೊಂಡು ಗೌರವಪೂರ್ವಕವಾಗಿ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ನವರು ಮಾತನಾಡಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಬಗ್ಗೆ ಕಾರ್ಯಕಾರಿ ಸಮಿತಿಯಲ್ಲಿ ಈ ಬಾರಿ ಮಹಿಳೆಯರಿಗೆ ಸರ್ವಾಧ್ಯಕ್ಷತೆ ಸ್ಥಾನ ವಹಿಸಿಕೊಡಬೇಕೆಂದು ವಿಷಯ ಪ್ರಸ್ತಾಪಿಸಲಾಯಿತು. ತಕ್ಷಣ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯ ರೆಲ್ಲರೂ ಅತ್ಯಂತ ಸಂತೋಷದಿಂದ ಸರ್ವಾನುಮತದಿಂದ ತಮ್ಮ ಹೆಸರನ್ನು ಸೂಚಿಸಿದ್ದು ಅತ್ಯಂತ ಸಂತೋಷಕರ ಎಂದರು.

ಸರ್ವಾಧ್ಯಕ್ಷರ ಕನ್ನಡದ ಅನುಪಮ ಸೇವೆಯನ್ನು ಶ್ಲಾಘಿಸುತ್ತಾ ದಾವಣಗೆರೆ ತಾಲೂಕಿನವರಾದ ತಾವುಗಳು ತಾಲೂಕಿಗೆ ಹೆಮ್ಮೆ ತರುವಂತಹ ಸೊಸೆಯಾಗಿದ್ದೀರಿ. ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ತಮ್ಮಿಂದ ಸುಮಾರು 10 ಕಾದಂಬರಿಗಳು, 50 ಬಿಡಿ ಲೇಖನಗಳು, ಕಥೆಗಳು, ನಾಟಕಗಳು ಹೊರಬಂದಿರುವುದು ತಮ್ಮ ಸಾಹಿತ್ಯ ಕೃಷಿಗೆ ಹಿಡಿದ ಕೈಗನ್ನಡಿ ಗಳಾಗಿವೆ. ತಮ್ಮ ನಾಟಕಗಳು ಬಾನುಲಿಯಲ್ಲಿ ಬಿತ್ತರಗೊಂಡಿರುವುದು ನಿಜಕ್ಕೂ ಸಂತೋಷಕರ ಎಂದು ತಿಳಿಸಿದರು.

ನಿಮ್ಮ ಆಯ್ಕೆ ಅತ್ಯಂತ ಸಮರ್ಥನೀಯ ಹಾಗೂ ಪ್ರಸ್ತುತ ದಿನಮಾನಗಳಲ್ಲಿ ಮಹಿಳಾ ಲೋಕಕ್ಕೊಂದು ಗೌರವದ ಸಂಕೇತವಾಗಿದೆ ಎಂದು ತಿಳಿಸಿದರು.

ಎಲೆಬೇತೂರು ಗ್ರಾಮದಲ್ಲಿ ಸಮ್ಮೇಳನದ ಆಯೋಜನೆಗೆ ಸೂಕ್ತ ಸ್ಪಂದನೆ ದೊರಕಿದ್ದು, ಈಗಾಗಲೇ ಅಲ್ಲಿನ ಮುಖಂಡರು, ನಾಗರಿಕ ಬಂಧುಗಳು, ಸುತ್ತಮುತ್ತಲ ಗ್ರಾಮಸ್ಥರು ತಕ್ಷಣ ಸಮ್ಮೇಳನದ ಬಗ್ಗೆ ಅತ್ಯಂತ ಉತ್ಸಾಹದಿಂದ ಕಾರ್ಯಪ್ರವೃತ್ತರಾಗಿರುವುದು ಕನ್ನಡ ನಾಡು-ನುಡಿಯ ಬಗ್ಗೆ ಅವರಲ್ಲಿರುವ ಪ್ರೇಮವನ್ನು ತೋರಿಸುತ್ತದೆ.

ಎಲೆಬೇತೂರು ಗ್ರಾಮದ ಮುಖ್ಯಸ್ಥರು, ಜಿಲ್ಲಾ ಕಸಾಪ ನಿಯೋಗ ಸಿರಿಗೆರೆಗೆ ತೆರಳಿ ಪರಮಪೂಜ್ಯ ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ರನ್ನು ಸಮ್ಮೇಳನದ ಉದ್ಘಾಟನೆಗೆ ಆಮಂತ್ರಿಸಿದ್ದು, ಪರಮಪೂಜ್ಯರು ಸಂತೋಷದಿಂದ ಆಗಮಿಸಲು ಒಪ್ಪಿಗೆ ಸೂಚಿಸುತ್ತಾರೆ ಎಂದು ಜಿಲ್ಲಾಧ್ಯಕ್ಷ ಬಿ ವಾಮದೇವಪ್ಪ ನವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಕಸಾಪ ಜಿಲ್ಲಾಧ್ಯಕ್ಷ ಎ.ಆರ್.ಉಜ್ಜಿನಪ್ಪ, ನಿಕಟಪೂರ್ವ ಅಧ್ಯಕ್ಷ ಡಾ.ಹೆಚ್.ಎಸ್.ಮಂಜುನಾಥ್ ಕುರ್ಕಿ ಮಾತನಾಡಿ ಶ್ರೀಮತಿ ಜಿ.ಎಸ್ ಸುಶಿಲಾದೇವಿ ಆರ್ ರಾವ್ ರವರ ಆಯ್ಕೆ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಬಿ.ದಿಳ್ಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ,, ಕೋಶಾಧ್ಯಕ್ಷರಾದ ಕೆ. ರಾಘವೇಂದ್ರ ನಾಯರಿ, ದಾವಣಗೆರೆ ತಾಲೂಕು ಕಸಾಪ ಅಧ್ಯಕ್ಷರಾದ ಶ್ರೀಮತಿ ಎ.ಜಿ.ಸುಮತಿ ಜಯಪ್ಪ, ಜಿಲ್ಲಾ ಪದಾಧಿಕಾರಿಗಳಾದ ಬಿ.ಎಂ ಬೈರೇಶ್ವರ, ಶ್ರೀಮತಿ ಸತ್ಯಭಾಮ, ಶ್ರೀಮತಿ ರುದ್ರಾಕ್ಷಿ ಬಾಯಿ, ಶ್ರೀಮತಿ ಎಸ್.ಎಂ.ಮಲ್ಲಮ್ಮ, ಹಾಗೂ ತಾಲೂಕು ಪದಾಧಿಕಾರಿಗಳಾದ ಪರಮೇಶ್ವರಪ್ಪ ದಾಗಿನಕಟ್ಟೆ, ಶಿವಕುಮಾರ್ ಆರ್. ಉಪಸ್ಥಿತರಿದ್ದರು.

ಜೊತೆಗೆ ಎಲೆಬೇತೂರು ಗ್ರಾಮದ ಹೆಚ್. ಬಸವರಾಜಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಸಿ. ಸುಮಾ ಬಿ.ವಿರುಪಾಕ್ಷಪ್ಪ, ಮಂಗಳಾ ಷಡಕ್ಷರಪ್ಪ, ಹಂಚಿನಮನೆ ಗಂಗಪ್ಪ, ಎಂ ಷಡಾಕ್ಷರಪ್ಪ ಬೇತೂರು, ಟಿ ಅಂಬಣ್ಣ ಕ್ಷೇತ್ರಶಿಕ್ಷಣಾಧಿಕಾರಿಗಳು ದಾವಣಗೆರೆ ಉತ್ತರ ವಲಯ ಇವರುಗಳು ಉಪಸ್ಥಿತರಿದ್ದು ಸರ್ವಾಧ್ಯಕ್ಷರಾದ ಜಿಎಸ್ ಸುಶಿಲಾದೇವಿ ಆರ್ ರಾವ್ ರವರಿಗೆ ಅತ್ಯಂತ ಸಂತೋಷದಿಂದ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಾಪಕ ಸಿ.ಜಿ. ಜಗದೀಶ್ ಕೂಲಂಬಿ, ಡಾ. ಆನಂದ ಋಗ್ವೇದಿ, ಶ್ರೀಮತಿ ಎಚ್ಆರ್ ವಿನುತಾ, ಚಿರಂಜೀವಿ, ಅನಿಕೇತ್ ಅಶುತೋಷ್ ರವರುಗಳು ಭಾಗಿಗಳಾಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending