ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ಕರ್ನಾಟಕ ( Karnataka) ಸಂಪದ್ಭರಿತ ರಾಜ್ಯವಾಗಿದ್ದು, ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿದೆ. ಇಲ್ಲಿನ ಜನರು ಹೆಚ್ಚು ಉದ್ಯಮಶೀಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಬೆಂಗಳೂರಿನಲ್ಲಿ ನಿನ್ನೆ ತಿಳಿಸಿದ್ದಾರೆ.ಆಸ್ಟ್ರೇಲಿಯಾ ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್ ಪೆರೊಟ್ವಿಟ್ ಅವರ ನೇತೃತ್ವದ ನಿಯೋಗದೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
  2. ರಾಷ್ಟ್ರಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ರಾಜ್ಯದ ಒಟ್ಟು 26 ಶಾಲೆಗಳು ಆಯ್ಕೆಯಾಗಿವೆ. ಈ ಶಾಲೆಗಳಿಗೆ ಇಂದು ಮಧ್ಯಾಹ್ನ 12.30ಕ್ಕೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.
  3. ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದ್ದಾರೆ.
  4. ದೇಶದಲ್ಲಿ ಕಳೆದ 7 ವರ್ಷಗಳ ಅವಧಿಯಲ್ಲಿ 1.5ಲಕ್ಷ ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ತಾಲೂಕಿನ ಅಂದಾರಲಹಳ್ಳಿಯಲ್ಲಿ ನಿನ್ನೆ ತಿಳಿಸಿದ್ದಾರೆ. ವಿದ್ಯುತ್ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸುವಲ್ಲಿ ಯಶಸ್ವಿಯಾಗಿದೆ ಅವರು ತಿಳಿಸಿದ್ದಾರೆ.
  5. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15 ರ ವರೆಗೆ ಹಮ್ಮಿಕೊಂಡಿರುವ ’ಹರ್ ಘರ್ ತಿರಂಗಾ’ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆ, ತಾಲೂಕು ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
  6. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರದಲ್ಲಿ ವಿದ್ಯುತ್ ಸ್ವಾವಲಂಬನೆ ಸಾಧಿಸಲು ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಕೆ.ಜಿ. ಬೋಪಯ್ಯ ಮಡಿಕೇರಿಯಲ್ಲಿ ನಿನ್ನೆ ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ನಡೆದ ಉಜ್ವಲ ಭಾರತ – ಉಜ್ವಲ ಭವಿಷ್ಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಿದ ಅವರು ಮಾತನಾಡಿದರು.
  7. ದೇಶದಲ್ಲಿ ಮೊದಲ ಬಾರಿಗೆ ಆಯೋಜಿಸಿರುವ ಅಖಿಲ ಭಾರತೀಯ ಕಾನೂನು ಸೇವಾ ಪ್ರಾಧಿಕಾರದ ಪ್ರಥಮ ಸಭೆಯನ್ನುದ್ದೇಶಿಸಿ ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಇದೇ ಮೊದಲ ಬಾರಿಗೆ ರಾಷ್ಟ್ರ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಭೆ ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಏಕರೂಪತೆ ಮತ್ತು ಸರಿ ಹೊಂದಿಸುವಿಕೆ ಕುರಿತು ಚರ್ಚೆ ನಡೆಯಲಿದೆ.
  8. ರಾಜ್ಯದ ಗ್ರಾಮೀಣ ಪ್ರದೇಶಗಳು ಸುಧಾರಣೆ ಕಾಣುತ್ತಿದ್ದು, ರಸ್ತೆ ಸಂಪರ್ಕ ಉತ್ತಮಗೊಳ್ಳುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಶಾಲೆ, ಆರೋಗ್ಯ, ಡಿಜಿಟಲ್ ಸಂಪರ್ಕಗಳನ್ನೂ ಇನ್ನೂ ಹೆಚ್ಚಿನ ರೀತಿಯಲ್ಲಿ ಸುಧಾರಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
  9. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ಹೋಬಳಿಗಳಲ್ಲಿ ಆಗಸ್ಟ್ 6ರ ರಾತ್ರಿ 12 ಗಂಟೆಯ ತನಕ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಗುಂಪು ಸೇರುವುದು, ಸಭೆ-ಸಮಾರಂಭ ನಡೆಸಲು ಯಾವುದೇ ಅನುಮತಿ ಇರುವುದಿಲ್ಲ, ಶಾಂತಿ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
  10. ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರಿಗೆ ಪ್ರಬುದ್ಧತೆ ಕಡಿಮೆ ; ಅವರನ್ನು ಮನೆಗೆ ಕಳುಹಿಸುವುದು ಐದು ನಿಮಿಷದ ಕೆಲಸ : ಕೆ.ಎಸ್ ಈಶ್ವರಪ್ಪ
  11. ಒಂದು ರಾಷ್ಟ್ರ ಒಂದು ಜಾಲ ಯೋಜನೆಯಡಿ ದೇಶದಲ್ಲಿ 1.63 ಲಕ್ಷ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಿ, ಪ್ರತಿ ಕುಟುಂಬಕ್ಕೂ ಗುಣಮಟ್ಟದ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಮಡಿಕೇರಿಯಲ್ಲಿ ನಿನ್ನೆ ಹೇಳಿದ್ದಾರೆ. ಜಲವಿದ್ಯುತ್, ಕಿರು ವಿದ್ಯುತ್, ಸೌರಶಕ್ತಿ ಮತ್ತು ನವೀಕರಿಸಬಹುದಾದ ಇಂಧನಕ್ಕೂ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
  12. ಕಾಮನ್‌ವೆಲ್ತ್ ಕ್ರೀಡಾಕೂಟದ ಆಗಸ್ಟ್ 8ರ ಸಮಾರೋಪ ಸಮಾರಂಭದ ವರೆಗೂ ಎಲ್ಲಾ ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್, ದೂರದರ್ಶನ ಸ್ಪೋರ್ಟ್ಸ್ ನೇರ ಪ್ರಸಾರ ಮಾಡಲಿದೆ. ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ಕ್ರೀಡಾಕೂಟ ಪ್ರಗತಿಯಲ್ಲಿದ್ದು, 20 ವಿವಿಧ ಕ್ರೀಡಾ ವಿಭಾಗದ ಪಂದ್ಯಾವಳಿಗಳನ್ನು ಡಿಡಿ ಸ್ಪೋರ್ಟ್ಸ್ ಮತ್ತು ಡಿಡಿ ಫ್ರೀ ಡಿಶ್ ನಿನ್ನೆಯಿಂದಲೇ ನೇರ ಪ್ರಸಾರ ಮಾಡುತ್ತಿವೆ.
  13. ಟ್ರಿನಿಡಾಡ್‌ನ ತರೌಬಾದಲ್ಲಿ ಕಳೆದ ರಾತ್ರಿ ನಡೆದ ಮೊದಲ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 68 ರನ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ ರೋಹಿತ್ ಶರ್ಮ ಸಾರಥ್ಯದ ಭಾರತ 1-0 ಅಂತರದ ಮುನ್ನಡೆ ಗಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version