ದಿನದ ಸುದ್ದಿ
ಶರಾವತಿ ಉಳಿಸಿ | ಶರಾವತಿ ನದಿ ಎಂಬುದು ಮಲೆನಾಡಿನ ನಾಡಿ ಮಿಡಿತ
ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ
ಮಾನ್ಯರೇ ,
ಶರಾವತಿ ನದಿ ಎಂಬುದು ಮಲೆನಾಡಿನ ನಾಡಿ ಮಿಡಿತ. ಮಲೆನಾಡಿನ ಬದುಕಿನ ಜೊತೆ ಹಾಸುಹೊಕ್ಕಾಗಿರುವ ಮತ್ತು ಮಲೆನಾಡಿನ ಹೆಗ್ಗುರುತಾಗಿ ಬೆಳೆದುಬಂದಿರುವ ಜೀವನದಿ ಅದು. ಅದು ಸೃಷ್ಟಿಸುವ ಜೋಗ ಜಲಪಾತದ ಸೌಂದರ್ಯದಂತೆಯೇ ಅದರ ಹೆಸರೇ ನಮಗೆ ಒಂದು ಐಡೆಂಟಿಟಿಯನ್ನು ತಂದುಕೊಟ್ಟಿದೆ. ಸಾಲು ಸಾಲು ಜಲಾಶಯಗಳು ಮುಳುಗಿಸಿದ ಬದುಕಿನ ಹೊರತಾಗಿಯೂ ಅದರೊಂದಿಗೆ ಮಲೆನಾಡಿನ ಮಣ್ಣಿನಮಕ್ಕಳು ಹೊಂದಿರುವ ಕಳ್ಳುಬಳ್ಳಿಯ ಸಂಬಂಧ ಕಡಿದುಕೊಂಡಿಲ್ಲ. ಹಾಗಾಗಿ ಇದು ಅಮ್ಮ-ಮಕ್ಕಳ ಅನುಬಂಧ.
ಆದರೆ, ಇಂತಹ ನಮ್ಮೆಲ್ಲರ ಬದುಕಿನ ಭಾಗವಾಗಿರುವ ನದಿಗೆ ಈಗ ಅಪಾಯ ಬಂದೊದಗಿದೆ. ಆ ನದಿಯ ಲಿಂಗನಮಕ್ಕಿ ಅಣೆಕಟ್ಟೆಯಿಂದ ಸುಮಾರು 400 ಕಿ.ಮೀ ದೂರದ ಬೆಂಗಳೂರಿಗೆ ನೀರು ಒಯ್ಯುವ ಕುರಿತ ತ್ಯಾಗರಾಜ್ ಸಮಿತಿ ವರದಿಯ ಪ್ರಕಾರ, ಯೋಜನೆಯ ಡಿಪಿಆರ್(ವಿಸ್ತೃತ ಯೋಜನಾ ವರದಿ) ತಯಾರಿಸುವಂತೆ ರಾಜ್ಯ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ ಜಿ ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಾಗೆ ನೋಡಿದರೆ, 2010ರಷ್ಟು ಹಿಂದೆಯೇ ಈ ಬಗ್ಗೆ ಯೋಚಿಸಿದ್ದ ಅಂದಿನ ರಾಜ್ಯ ಸರ್ಕಾರ, ತ್ಯಾಗರಾಜ್ ನೇತೃತ್ವದಲ್ಲಿ ಒಂಭತ್ತು ಮಂದಿ ತಜ್ಞರ ಸಮಿತಿ ರಚಿಸಿ, ಬೆಳೆಯುತ್ತಿರುವ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೂಲಕಗಳ ಕುರಿತು ವರದಿ ನೀಡುವಂತೆ ಸೂಚಿಸಿತ್ತು. ಸಾಕಷ್ಟು ನೀರು ಲಭ್ಯವಿರುವ ಮತ್ತು ಅಂತಾರಾಜ್ಯ ವಿವಾದಗಳಿಲ್ಲದ ಲಿಂಗನಮಕ್ಕಿ ಜಲಾಶಯದಿಂದ ಶರಾವತಿ ನದಿ ನೀರನ್ನು ಒಯ್ಯುವುದು ಮತ್ತು ಹಂತಹಂತವಾಗಿ ಶರಾವತಿ ಕಣಿವೆಯ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿ ಸಂಪೂರ್ಣ ನೀರನ್ನು ಬೆಂಗಳೂರು ಮೈಸೂರು ಭಾಗದ ಹಲವು ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡಬಹುದು ಎಂದು ಸಮಿತಿ 2013ರ ತನ್ನ ವರದಿಯಲ್ಲಿ ಹೇಳಿತ್ತು.
ಇದೀಗ ಮಾನ್ಯ ಉಪಮುಖ್ಯಮಂತ್ರಿಗಳ ಪ್ರಸ್ತಾಪದೊಂದಿಗೆ ಆ ವರದಿಯನ್ನೇ ಮುಂದಿಟ್ಟುಕೊಂಡು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿರುವುದು ಸ್ಪಷ್ಟ.
ಆದರೆ, ಮಲೆನಾಡಿಗರಾಗಿ, ಲಿಂಗನಮಕ್ಕಿಯೂ ಸೇರಿದಂತೆ ಶರಾವತಿ ಕಣಿವೆಯ ಸರಣಿ ಜಲಾಶಯಗಳಿಗಾಗಿ ನಮ್ಮ ಮನೆಮಠ, ಆಸ್ತಿಪಾಸ್ತಿ ಕಳೆದುಕೊಂಡು, ಬೀದಿಗೆ ಬಿದ್ದಿರುವ ಮುಳುಗಡೆ ಸಂತ್ರಸ್ತರಾಗಿ, ಮಲೆನಾಡು ವ್ಯಾಪ್ತಿಯಲ್ಲಿದ್ದೂ ತೀವ್ರ ಬರ ಮತ್ತು ಕುಡಿಯುವ ನೀರಿನ ಹಾಹಾಕಾರ ಎದುರಿಸುತ್ತಿರುವ ನದಿ ತಟದ ನತದೃಷ್ಟರಾಗಿ, ಈ ಯೋಜನೆಗೆ ನಮ್ಮ ಸಂಪೂರ್ಣ ವಿರೋಧ ಇದೆ.
12 ಸಾವಿರ ಕೋಟಿ ರೂಪಯಿ ಬೃಹತ್ ಮೊತ್ತದ ಯೋಜನೆಯ ಹಿಂದೆ ಯಾವುದೇ ವೈಜ್ಞಾನಿಕ, ಕಾರ್ಯಸಾಧುವಾದ ಯೋಚನೆ, ಚಿಂತನೆ ಇರದೆ, ಕೇವಲ ರಾಜಕೀಯ ಲಾಭ ಮತ್ತು ಸಾರ್ವಜನಿಕ ಹಣವನ್ನು ಲೂಟಿ ಹೊಡೆಯುವ ಲೆಕ್ಕಾಚಾರ ಇದರ ಹಿಂದಿದೆ ಮತ್ತು ಪರಿಸರ ಮತ್ತು ಮಲೆನಾಡಿನ ಜನಜೀವನದ ಮೇಲು ಉಂಟಾಗಬಹುದಾದ ಪರಿಣಾಮದ ಕಾರಣದಿಂದಾಗಿ ಇಂತಹ ಮೂರ್ಖತನದ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕು ಮತ್ತು ಮೂಲಭೂತವಾಗಿ ವಿದ್ಯುತ್ ಉತ್ಪಾದನೆಯ ಉದ್ದೇಶಕ್ಕಾಗಿಯೇ ನಿರ್ಮಾಣವಾಗಿರುವ ಶರಾವತಿ ಕಣಿವೆಯ ಲಿಂಗನಮಕ್ಕಿ ಮತ್ತಿತರ ಜಲಾಶಯಗಳ ನೀರನ್ನು ಆ ಉದ್ದೇಶಕ್ಕಲ್ಲದೆ ಅನ್ಯ ಉದ್ದೇಶಕ್ಕೆ ಬಳಸುವುದೇ ಆದರೆ, ನದಿ ತಟದಲ್ಲೇ ಕುಡಿಯುವ ನೀರಿನ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಜನರಿಗೆ ಮತ್ತು ಕಣಿವೆಯ ಜಲವಿದ್ಯುತ್ ಯೋಜನೆಗಳಿಂದ ಸಂತ್ರಸ್ತರಾಗಿ ಸೂಕ್ತ ಪರಿಹಾರವೂ ಕಾಣದೆ, ಅಲ್ಲಲ್ಲಿ ಬರಪೀಡಿತ ಒಣಭೂಮಿ ಬೇಸಾಯ ಮಾಡಿಕೊಂಡಿರುವ ಸಂತ್ರಸ್ತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಈ ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ, ಮಲೆನಾಡಿನ ಸಾಕ್ಷಿಪ್ರಜ್ಞೆಯಂತಿರುವ ಹಿರಿಯ ಸಾಹಿತಿ ಮತ್ತು ಶರಾವತಿ ಕಣಿವೆಯ ಬದುಕನ್ನು ಕಂಡುಂಡ ಶ್ರೀಯುತ ನಾ. ಡಿಸೋಜ ಅವರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ.
ಮಾನ್ಯರ ನೇತೃತ್ವದಲ್ಲಿ ಸಾಗರದಲ್ಲಿ 22-06-19ರಂದು ನಡೆದ ಒಕ್ಕೂಟದ ಮೊದಲ ಸಮಾಲೋಚನಾ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳ ಪ್ರಸ್ತಾಪವನ್ನು ವಿರೋಧಿಸಿ, ಮಲೆನಾಡಿನಾದ್ಯಂತ ದಿಟ್ಟ ಹೋರಾಟ ನಡೆಸುವ ಮತ್ತು ಸರ್ಕಾರಕ್ಕೆ ನಮ್ಮ ಆಕ್ರೋಶ ವ್ಯಕ್ತಪಡಿಸುವ ಮಾರ್ಗವಾಗಿ ಜುಲೈ 10ರಂದು ಸಂಪೂರ್ಣ ಶಿವಮೊಗ್ಗ ಜಿಲ್ಲಾ ಬಂದ್ ನಡೆಸುವ ಕುರಿತು ನಿರ್ಧರಿಸಲಾಯಿತು.
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆ ಕೇವಲ ಶರಾವತಿ ಕಣಿವೆಯ ಜನರ ಸಮಸ್ಯೆ ಅಲ್ಲ. ಇದು ಇಡೀ ಮಲೆನಾಡಿನ ಜೀವ ಪರಿಸರ ಮತ್ತು ಜನಜೀವನದ ಭವಿಷ್ಯದ ಪ್ರಶ್ನೆ. ಹಾಗಾಗಿ ಸರ್ಕಾರದ ವಿವೇಚನಾಹೀನ ಯೋಜನೆಯ ಭವಿಷ್ಯದ ಗಂಭೀರ ಪರಿಣಾಮಗಳನ್ನು ಅರಿತು ಇಡೀ ಮಲೆನಾಡಿನ ಜನ ಈ ಹೋರಾಟಕ್ಕೆ ದನಿಗೂಡಿಸಬೇಕಿದೆ.
ಶಿವಮೊಗ್ಗ ನಗರ ಮತ್ತು ಜಿಲ್ಲೆಯ ಸಮಸ್ತ ಜನತೆ ಈ ಹೋರಾಟಕ್ಕೆ ಬೆಂಬಲ ನೀಡಿ, ಜುಲೈ 10ರ ಬಂದ್ ಬೆಂಬಲಿಸಬೇಕಾಗಿ ಒಕ್ಕೂಟ ಮನವಿ ಮಾಡುತ್ತದೆ. ಜಿಲ್ಲೆಯ ಧಾರ್ಮಿಕ ಮಠ-ಮಾನ್ಯಗಳ ಮುಖಂಡರು ಮತ್ತು ಮಠಾಧೀಶರು, ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಮುಖಂಡರು, ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು, ಆಟೋ ಚಾಲಕರ ಸಂಘ, ಬಸ್ ಮಾಲೀಕರ ಸಂಘ, ಸರಕು ಸಾಗಣೆ ವಾಹನ ಮಾಲೀಕರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ- ಸಂಸ್ಥೆಗಳು, ಸರ್ಕಾರಿ ನೌಕರರ ಸಂಘ, ಅಡಿಕೆ ಮಂಡಿ ಮಾಲೀಕರ ಸಂಘ ಮತ್ತು ಅಡಿಕೆ ಬೆಳೆಗಾರರ ಸಂಘಟನೆಗಳು, ಅಂಗಡಿ ಮುಂಗಟ್ಟು ಮಾಲೀಕರು, ವ್ಯಾಪಾರಸ್ಥರು ಮತ್ತು ಹೋಟೆಲ್ ಉದ್ಯಮಿಗಳು, ವಿದ್ಯಾರ್ಥಿ ಸಂಘಟನೆಗಳು, ವಿವಿಧ ಜಾತಿ- ಜನಾಂಗ ಸಂಘಟನೆಗಳು, ಮುಖ್ಯವಾಗಿ ಜಿಲ್ಲೆಯ ಇಡೀ ಮಾಧ್ಯಮ ಸ್ನೇಹಿತರು ಸದುದ್ದೇಶದದ ಮತ್ತು ಪಕ್ಷಾತೀತವಾದ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಒಕ್ಕೂಟ ಕೋರುತ್ತದೆ.
ಸರ್ಕಾರ ಸಂಪೂರ್ಣ ತನ್ನ ಪ್ರಸ್ತಾವನೆಯಿಂದ ಹಿಂದೆ ಸರಿದು, ತ್ಯಾಗರಾಜ್ ಸಮಿತಿ ವರದಿಯನ್ನು ಅಧಿಕೃತವಾಗಿ ತಿರಸ್ಕರಿಸಬೇಕು ಮತ್ತು ಭವಿಷ್ಯದಲ್ಲಿ ಕೂಡ ಶರಾವತಿ ನದಿ ಕಣಿವೆಯ ನೀರನ್ನು ಕಣಿವೆ ವ್ಯಾಪ್ತಿ ಹೊರಗಿನ ಬಳಕೆಗೆ ಮುಂದಾಗುವುದಿಲ್ಲ ಎಂದು ಭರವಸೆ ನೀಡಬೇಕು ಎಂಬ ಹಕ್ಕೊತ್ತಾಯಕ್ಕೆ ದನಿಗೂಡಿಸಬೇಕು ಎಂದು ಮನವಿ ಮಾಡುತ್ತದೆ.
ಹಕ್ಕೊತ್ತಾಯಗಳು
- ಶರಾವತಿ ನೀರನ್ನು ಬೆಂಗಳೂರಿಗೆ ಒಯ್ಯುವ ಪ್ರಸ್ತಾಪವನ್ನು ಸಾರಾಸಗಟಾಗಿ ಕೈಬಿಡಬೇಕು ಮತ್ತು ತ್ಯಾಗರಾಜ್ ವರದಿಯನ್ನು ಅಧಿಕೃತವಾಗಿ ತಿರಸ್ಕರಿಸಬೇಕು.
- ಶರಾವತಿ ಕಣಿವೆಯ ಆಸುಪಾಸಿನ ವಿವಿಧ ಯೋಜನೆಗಳ ಸಂತ್ರಸ್ತರು ಸೇರಿದಂತೆ ಆ ಭಾಗದ ಕುಡಿಯುವ ನೀರು ಮತ್ತು ಒಣ ಭೂಮಿಗೆ ನೀರಾವರಿ ಒದಗಿಸಲು ಜಲಾಶಯದ ನೀರು ಬಳಕೆಗೆ ಆದ್ಯತೆ ನೀಡಬೇಕು. ಈ ಕುರಿತು ಸರ್ಕಾರ ಕೂಡಲೇ ಡಿಪಿಆರ್ ತಯಾರಿಸಲು ಆದೇಶ ನೀಡಬೇಕು.
ಸಹಿಗಳು:
ಡಾ. ನಾ ಡಿಸೋಜಾ, ಹಿರಿಯ ಸಾಹಿತಿಗಳು (ಗೌರವಾಧ್ಯಕ್ಷರು),ಪ್ರೊ. ಶ್ರೀಕಂಠ ಕೂಡಿಗೆ ಚಿಂತಕರು,ಶಂಕರ್ ಶರ್ಮಾ, ಇಂಧನ ತಜ್ಞರು,
ಹರ್ಷಕುಮಾರ್ ಕುಗ್ವೆ,ಶಶಿ ಸಂಪಳ್ಳಿ,ಎಚ್ ಬಿ ರಾಘವೇಂದ್ರ,ಜಿ ಟಿ ಸತ್ಯನಾರಾಯಣ ಕರೂರು,
ಅಜಯ್ ಶರ್ಮಾ,ವಿನ್ಸೆಂಟ್ ರೋಡ್ರಿಗಸ್,ಕನ್ನಪ್ಪ ಈಡಿಗ,ತಾರಾಮೂರ್ತಿ,
ಇತರರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243