ದಿನದ ಸುದ್ದಿ
ದಾವಣಗೆರೆ | ಒಳಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ; ಹೋರಾಟಕ್ಕೆ ಸ್ಪಂದಿಸದಿದ್ದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ : ಸರ್ಕಾರಕ್ಕೆ ಎಚ್ಚರಿಕೆ
ಸುದ್ದಿದಿನ,ದಾವಣಗೆರೆ ; ಒಳಮೀಸಲಾತಿಗೆ ಆಗ್ರಹಿಸಿ ಜಿಲ್ಲಾ ಮಾದಿಗ ಸಮಾಜ ಹಾಗೂ ಛಲವಾದಿ ಮಹಾಸಭಾ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಯದೇವ ವೃತ್ತ, ಅಶೋಕ ರಸ್ತೆ ಮಾರ್ಗವಾಗಿ ಗಾಂಧಿಸರ್ಕಲ್ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದ ರವಿನಾರಾಯಣ್ ಹಾಗೂ ಎನ್ ರುದ್ರಮುನಿಯವರು ಮಾತನಾಡಿ, ಮಾದಿಗ ಸಮುದಾಯದ ಜನಸಂಖ್ಯೆ ಆಧಾರದಲ್ಲಿ ಒಳ ಮೀಸಲಾತಿ ವರ್ಗೀಕರಣ ಮಾಡಲು ಒತ್ತಾಯಿಸಿ ಕಳೆದ ಮೂರು ದಶಕದಿಂದ ನಡೆಸಿದ ನಿರಂತರ ಹೋರಾಟದ ಫಲವಾಗಿ ಈಗ ಒಳ ಮೀಸಲಾತಿ ದೊರಕುವ ಸಮಯ ಬಂದಿದೆ. ಸರ್ವೋಚ್ಚ ನ್ಯಾಯಾಲಯ ಅ. 1 ರಂದು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಮತ್ತು ಹೊಣೆಗಾರಿಕೆ ಆಯಾಯ ರಾಜ್ಯ ಸರ್ಕಾರಗಳಿಗೆ ಇದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ. ಅದರ ಅನ್ವಯ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಒಳ ಮೀಸಲಾತಿ ನೀಡದೇ ಇರುವುದರಿಂದ ಅನೇಕ ಸಮುದಾಯಗಳಿಗೆ ಅನ್ಯಾಯ ಆಗುತ್ತಿದೆ. ತುಟಿ ಮೇಲಿನ ಅನುಕಂಪ ಬೇಕಾಗಿಲ್ಲ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪಿನಂತೆ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ಅಲ್ಲಿಯವರೆಗೆ ರಾಜ್ಯದಲ್ಲಿ ನಡೆಯುವ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ನೇಮಕಾತಿ ಸ್ಥಗಿತಗೊಳಿಸಬೇಕು. ಹಣಕಾಸಿನ ಮತ್ತು ಇತರೆ ಸೌಲಭ್ಯಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಸರ್ಕಾರದಲ್ಲಿ ಇರುವ ಲಭ್ಯವಿರುವ ದತ್ತಾಂಶಗಳ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ. ಆದರೂ, ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಈಗ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಒಳಗೊಂಡಂತೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಒಳ ಮೀಸಲಾತಿ ಜಾರಿಗೆ ಬರುವವರೆಗೂ ಹೋರಾಟ ನಿಲ್ಲಿಸುವ ಮಾತೇ ಇಲ್ಲ. ಒಳ ಮೀಸಲಾತಿ ಜಾರಿಗೊಳಿಸಲೇಬೇಕು ಎಂದು ಒತ್ತಾಯಿಸಿದರು.
ಮಾದಿಗ ಸಮುದಾಯವು ವೈಜ್ಞಾನಿಕ ಸ್ವರೂಪದ ಆಂತರಿಕ ಮೀಸಲಾತಿಗಾಗಿ ಕಳೆದ 30 ವರ್ಷಗಳಿಂದ ಪ್ರತಿಭಟನೆ ಮಾಡುತ್ತ ಕಾನೂನು ನಡೆಸುತ್ತ ಬಂದಿದ್ದಾರೆ. ಪರಿಣಾಮವಾಗಿ ಹೋರಾಟವನ್ನೂ ಈ ಹೋರಾಟದ ಸರ್ಕಾರ ನ್ಯಾ. ৯. ಜೆ. ಸದಾಶಿವ ಆಯೋಗ ರಚಿಸಿ ಅದರ ವರದಿಯನ್ನು ಪಡೆದಿದೆ. ತದನಂತರ ಸರ್ಕಾರ ಒಳ ಮೀಸಲಾತಿ ಕುರಿತು ಸಂಪುಟದ ಉಪ ಸಮಿತಿಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತು.
ವೈಜ್ಞಾನಿಕ ದತ್ತಾಂಶಗಳ ಆಧಾರದ ಮೇಲೆ ಒಳಮೀಸಲಾತಿ ನೀಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದ್ದು, ಸದರಿ ದತ್ತಾಂಶಗಳು ನ್ಯಾ. ಎ.ಜೆ. ಸದಾಶಿವ ಆಯೋಗ, ಕಾಂತರಾಜು ವರದಿ, ನ್ಯಾ. ನಾಗಮೋಹನದಾಸ್ ಆಯೋಗ ಮತ್ತು ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿಯ ವರದಿಗಳಲ್ಲಿ ಲಭ್ಯವಿವೆ. ಆದ್ದರಿಂದ ಸರ್ಕಾರ ಇನ್ನೂ ಹೆಚ್ಚಿನ ವಿಳಂಬ ತೋರದೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಲು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎ.ಡಿ. ಈಶ್ವರಪ್ಪ, ಹೊನ್ನಾಳಿ, ಕೆ.ಎಸ್ ಗೋವಿಂದರಾಜ್, ಬಿ.ಎಸ್. ಪುರುಷೋತ್ತಮ್, ಎಚ್. ಮಲ್ಲೇಶ್, ಬಿ.ಎಚ್. ಉದಯ್ ಕುಮಾರ್, ಎಂ. ಹಾಲೇಶ್, ಎಲ್.ಎಚ್. ಸಾಗರ್, ಆಲೂರು ನಿಂಗರಾಜ್, ಬಿ.ಎಂ. ನಿರಂಜನ್, ಹೆಗ್ಗೆರೆ ರಂಗಪ್ಪ, ಕೆ.ಎಸ್. ಗೋವಿಂದರಾಜ್, ಎಸ್. ಮಲ್ಲಿಕಾರ್ಜುನ್, ಎಚ್.ಕೆ. ಬಸವರಾಜ್, ಕೆ. ಏಕಾಂತಪ್ಪ, ಕುಂದುವಾಡ ಮಂಜುನಾಥ್, ನಾಗಭೂಷಣ್, ಓಂಕಾರಪ್ಪ, ಸೋಮಲಾಪುರ ಹನುಮಂತಪ್ಪ ಹಾಗೂ ಮುಖಂಡರುಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243