ದಿನದ ಸುದ್ದಿ

ದಾವಣಗೆರೆ | ಎಸ್ಸಿ-ಎಸ್ಟಿ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತಲಾ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ 15 ಸಾವಿರ ರೂ. ಗಳ ಸ್ಟೈಫೆಂಡ್ ನೀಡಲಾಗುವುದು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ ಕ್ಷೇತ್ರ ಪ್ರಚಾರ, ಸುದ್ದಿ ಸಂಗ್ರಹ ಮತ್ತು ರಚನೆ ಕುರಿತಂತೆ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು, ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಹೊಂದಿರಬೇಕು. ವಯೋಮಿತಿಯು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 40 ವರ್ಷದೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ. ಇಲಾಖೆಯಲ್ಲಿ ಈ ಹಿಂದೆ ತರಬೇತಿ ಪಡೆದವರು ಪುನಃ ಅರ್ಜಿ ಸಲ್ಲಿಸುವಂತಿಲ್ಲ.

ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಪಾಸ್‍ಪೋರ್ಟ್ ಅಳತೆಯ 02 ಭಾವಚಿತ್ರ, ಕಂಪ್ಯೂಟರ್ ಜ್ಞಾನ ಹೊಂದಿರುವ ಕುರಿತ ಪೂರಕ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ನವೆಂಬರ್ 10 ರ ಒಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದೇವರಾಜ ಅರಸ್ ಕಾಲೋನಿ, ದಾವಣಗೆರೆ ಇವರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಇದೇ ಕಚೇರಿಯನ್ನು 08192-254892 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version