ದಿನದ ಸುದ್ದಿ
ಪರಿಶಿಷ್ಟರ ಕುಂದುಕೊರತೆ ಸಭೆ : ಜಿಲ್ಲೆಯಲ್ಲಿ ಅಸ್ಪೃಷ್ಯತೆ ನಿವಾರಣೆಗೆ ಕ್ರಮ ಕೈಗೊಳ್ಳಲು ಎಸ್.ಪಿ. ಸಿ.ಬಿ. ರಿಷ್ಯಂತ್ ಭರವಸೆ
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಜಾತೀಯತೆ ಇನ್ನೂ ಜೀವಂತವಾಗಿದೆ. ಹಲವು ದೇವಸ್ಥಾನಗಳಲ್ಲಿ ಇಂದಿಗೂ ಪ್ರವೇಶವಿರುವುದಿಲ್ಲ. ಕ್ಷೌರದಂಗಡಿಗಳಲ್ಲಿ ಈ ಜಾತಿಗಳರವರಿಗೆ ಕ್ಷೌರ ಮಾಡಲು ನಿರಾಕರಿಸುತ್ತಾರೆ.
ಹೋಟೆಲ್ಗಳಲ್ಲಿ ಸವರ್ಣೀಯರೊಂದಿಗೆ ಟೀ, ಕಾಫಿಯನ್ನು ಕೊಡಲು ನಿರಾಕರಿಸುತ್ತಾರೆ. ದೇವದಾಸಿ ಪದ್ಧತಿ, ಬೇವಿನ ಉಡುಗೆ ಆಚರಣೆಯಂತಹ ಅನಿಷ್ಟ ಪದ್ಧತಿಗಳಿಗೆ ಪರಿಶಿಷ್ಟ ಜಾತಿ ಪಂಗಡದವರು ಇಂದಿಗೂ ಬಲಿಯಾಗುತ್ತಿದ್ದು, ಅವುಗಳನ್ನು ತಪ್ಪಿಸಲು ಪೊಲೀಸ್ ಇಲಾಖೆ ಈ ಜನಾಂಗಗಳ ಪರವಾಗಿ ನಿಲ್ಲಬೇಕೆಂದು ಎಸ್.ಸಿ., ಎಸ್.ಟಿ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರುಗಳು ಒಕ್ಕೊರಲಿನಿಂದ ಆಗ್ರಹಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಕೇಳಿ ಬಂದ ಅಭಿಪ್ರಾಯಗಳು.
ಜಗಳೂರು ತಾಲ್ಲೂಕಿನ ಮುಖಂಡ ಸತೀಶ್ ಮಾತನಾಡಿ, ತಾಲ್ಲೂಕಿನ ಮಡ್ಡರಹಳ್ಳಿ ಚೌಡೇಶ್ವರಿ ದೇವಾಲಯದಲ್ಲಿ ಹಬ್ಬದ ಸಂದರ್ಭದಲ್ಲಿ ಹೆಣ್ಣುಮಕ್ಕಳಿಗೆ ಬೇವಿನುಡಿಗೆ, ನಾಲಿಗೆಗೆ ತಂತಿ ಸಿಕ್ಕಿಸಿಕೊಳ್ಳುವಂತಹ ಆಚರಣೆಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ಹೆಚ್ಚಾಗಿ ಅನುಸರಿಸುತ್ತಿದ್ದು, ಅವರುಗಳಿಗೆ ಅಧಿಕಾರಿಗಳ ಮಟ್ಟದಲ್ಲಿ ಸೂಕ್ತ ತಿಳುವಳಿಕೆ ನೀಡಿ ಇಂತಹ ಅನಿಷ್ಟ ಪದ್ಧತಿಗಳಿಂದ ಹೊರ ತರಲು ಸರ್ಕಾರ ಪ್ರಯತ್ನಿಸಲಿ.
ಹಾಗೂ ಇಂತಹ ಆಚರಣೆ ಕೈಗೊಳ್ಳಲು ಒತ್ತಾಯಿಸುವವರನ್ನು ಶಿಕ್ಷಿಸಬೇಕು. ಮತ್ತು ಹೊಸಗೆರೆ ಹಾಗೂ ಪಲ್ಲಾಗಟ್ಟೆ ಗ್ರಾಮದಲ್ಲಿರುವ ಬಾರ್ ಅನ್ನು ಬೇರೆ ಕಡೆ ಸ್ಥಳಾಂತರಿಸಬೇಕು. ಎಸ್.ಸಿ ಮತ್ತು ಎಸ್.ಟಿ ಹಾಸ್ಟೆಲ್ ಬಳಿ ದೊಡ್ಡ ಚರಂಡಿ ಹರಿಯುತ್ತಿದ್ದು ಸೊಳ್ಳೆ ಕಾಟ ಹೆಚ್ಚಾಗಿದೆ.
ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗೂ ಹಾಸ್ಟೆಲ್ ಬಳಿ ಪುಂಡ ಪೋಕರಿಗಳ ಕಾಟ ಹೆಚ್ಚಾಗಿದ್ದು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಎಸ್.ಪಿ. ಸಿ.ಬಿ.ರಿಷ್ಯಂತ್ ಅವರು ಪ್ರತಿಕ್ರಿಯಿಸಿ, ಇಂತಹ ಆಚರಣೆಗಳನ್ನು ತಡೆಯಲು ಕಾನೂನಾತ್ಮಕವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಜಗಳೂರು ಮುಖಂಡ ಹಾಲೇಶ್ ಬಿಳಿಚೋಡು ಮಾತನಾಡಿ, ಮೆದಗಿನಕೆರೆ, ಕೊರಟಿಗೆರೆ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಜೂಜು ಹಾವಳಿ ಹೆಚ್ಚಾಗಿದೆ. ಉಚ್ಚಂಗಿದುರ್ಗ ದೇವಸ್ಥಾನದಲ್ಲಿ ನಡೆಯುವ ಕಾರಹುಣ್ಣಿಮೆ ಹಬ್ಬಕ್ಕೆ ದೇವದಾಸಿಯರನ್ನು ಹೆಚ್ಚಾಗಿ ಬಳಸಿಕೊಳ್ಳುತ್ತಿದ್ದು, ನಮ್ಮ ಭಾಗದಿಂದ ಹೆಚ್ಚು ಜನ ಹೋಗುತ್ತಿದ್ದಾರೆ. ಇದನ್ನು ತಡೆಯಬೇಕು. ಬಿಳಿಚೋಡು ಗ್ರಾಮದ ಸರ್ಕಲ್ ನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಮನವಿ ಮಾಡಿದರು.
ಹರಿಹರ ತಾಲ್ಲೂಕಿನ ಮುಖಂಡರು ಮಾತನಾಡಿ, ತಾಲ್ಲೂಕಿನಲ್ಲಿ ವಾಹನ ಸಂಚಾರ ಹೆಚ್ಚಿದ್ದು ಟ್ರಾಫಿಕ್ ಸ್ಟೇಷನ್ ಆರಂಭಿಸಬೇಕು. ಹಾಗೂ ಅಂಬೇಡ್ಕರ್ ಭವನದಲ್ಲಿ ಕೆಎಎಸ್, ಐಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಸ್ಥಾಪಿಸಬೇಕು. ಬಾನುವಳ್ಳಿ ಗ್ರಾಮದಲ್ಲಿ 12 ಜನ ಮಾಜಿ ದೇವದಾಸಿಯರಿದ್ದು, ಅವರಿಗೆ ಮನೆ ಮಂಜೂರಾದರೂ ಇನ್ನೂ ಮನೆ ಕಟ್ಟಿಕೊಟ್ಟಿಲ್ಲ. ಆದಷ್ಟು ಬೇಗ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು.
ಎಸ್.ಪಿ ಮಾತನಾಡಿ, ಸಂಚಾರ ಪೊಲೀಸ್ ಠಾಣೆ ಮಂಜೂರಾತಿಗೆ ವಿವಿಧ ಪ್ರಕ್ರಿಯೆಗಳಿರುವುದರಿಂದ ತಡವಾಗುತ್ತದೆ. ಆದ್ದರಿಂದ ಟ್ರಾಫಿಕ್ ಪಾಯಿಂಟ್ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ನ್ಯಾಮತಿ ತಾಲ್ಲೂಕಿನ ಮುಖಂಡ ರಂಗನಾಥ.ಎ.ಕೆ ಮಾತನಾಡಿ, ಒಂದೂವರೆ ಎಕರೆ ಪ್ರದೇಶದಲ್ಲಿ ಹಿಂದು ಸ್ಮಶಾನ ಭೂಮಿ ನಿರ್ಮಿಸಿದ್ದು, ಪರಿಶಿಷ್ಟ ಜಾತಿಯ ಹೆಣ ಸುಡಲು ಸ್ಮಶಾನಕ್ಕೆ ಹೋದರೆ ಸುಡಲು ಅನುಮತಿ ನೀಡುವುದಿಲ್ಲ.
ಈ ಹಿಂದೆ ಅಂತ್ಯಕ್ರಿಯೆ ಮಾಡಲು ಒಳಗಡೆ ಪ್ರವೇಶಿಸಲು ಅವಕಾಶ ಕೊಡದೆ, ಶವ ಹೊರ ಹಾಕಿರುವ ಘಟನೆ ನಡೆದಿದೆ. ಇದರಿಂದ ಸಾಕಷ್ಟು ಬೇಸತ್ತಿದ್ದೆವೆ ಎಂದು ಅಳಲು ತೋಡಿಕೊಂಡರು.
ಎಸಿ ಮಮತ ಹೊಸಗೌಡರ್ ಮಾತನಾಡಿ, ಮನುಷ್ಯ ಬದುಕಿದ್ದಾಗ ಸಮಾನತೆಯಿಂದ ಬದುಕಲ್ಲ, ಸತ್ತ ಮೇಲಾದರೂ ಸಮಾನತೆಯಿಂದ ಇರಬೇಕು ಎಂಬ ಆಶಯದೊಂದಿಗೆ ಇರುವ ಸುತ್ತೋಲೆ ಮೇರೆಗೆ ಹಿಂದು ರುದ್ರ ಭೂಮಿ ಒದಗಿಸಲಾಗಿದೆ ಎಂದರು. ಎಸ್.ಪಿ ಪ್ರತಿಕ್ರಿಯಿಸಿ ಭೂಮಿ ಒದಗಿಸಿರುವುದು ಅಂತ್ಯಕ್ರಿಯೆ ಮಾಡಲೆಂದು. ಈ ರೀತಿ ಭೇದ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದರು.
ಮಲ್ಲಹಳ್ಳಿ ಗ್ರಾಮದಲ್ಲಿ ಹಬ್ಬ ಹರಿದಿನಗಳಲ್ಲಿ ಪರಿಶಿಷ್ಟರು ಊರ ಒಳಗೆ ಚಪ್ಪಲಿ ಹಾಕಿಕೊಂಡು ಹೋಗುವುದನ್ನು ಅಲ್ಲಿಯ ಗ್ರಾಮಸ್ಥರು ನಿಷೇಧಿಸಿದ್ದು, ಅಪ್ಪಿತಪ್ಪಿ ಒಳ ಹೋದರೆ ಜಾತಿ ನಿಂದನೆ ಮಾಡುತ್ತಾರೆ. ಈ ಗ್ರಾಮದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದು, ಐಪಿಎಲ್ ಬೆಟ್ಟಿಂಗ್ ದಂದೆ ಹೆಚ್ಚಾಗಿದೆ. ದಲಿತ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದು, ಸೂಕ್ತ ತನಿಖೆ ನಡೆಸಬೇಕು.
ದಾವಣಗೆರೆ ನಗರಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಕಾಣದಂತೆ ಫ್ಲೆಕ್ಸ್ ಕಟ್ಟಲಾಗುತ್ತಿದ್ದು, ಇದರಿಂದ ಪ್ರತಿಮೆ ಮರೆಯಾಗುತ್ತಿದೆ. ಇದನ್ನು ತಡೆಗಟ್ಟಬೇಕು. ಹೀಗೆ ಅನೇಕ ಕುಂದು ಕೊರತೆಗಳನ್ನು ಸ್ಥಳೀಯ ಮುಖಂಡರು ಹೇಳುವ ಮೂಲಕ ತಮ್ಮ ಅಳಲು ತೋಡಿಕೊಂಡರು.
ನೀರ್ಥಡಿ ಗ್ರಾಮದಲ್ಲಿ ಪೌರಾಣಿಕ ಇತಿಹಾಸ ಹೊಂದಿರುವ ರಂಗನಾಥಸ್ವಾಮಿ ದೇವಾಲಯದಲ್ಲಿ ಇಂದಿಗೂ ಮಾದಿಗರನ್ನು ಒಳಗಡೆ ಪ್ರವೇಶಿಸಲು ಬಿಡದೆ ದೌರ್ಜನ್ಯವೆಸಗುತ್ತಿದ್ದು, ಅವರಿಗೆ ರಕ್ಷಣೆ ಒದಗಿಸಬೇಕು.
ತಾನು ಹುಟ್ಟಿದ್ದು ಇಲ್ಲೆ ಆದರೂ ಇದುವರೆಗೂ ದೇವಸ್ಥಾನದ ಒಳಗಡೆ ಪ್ರವೇಶಿಸಲಾಗಿಲ್ಲ ಎಂದು ಮಂಜುನಾಥ್ ಎಂಬುವವರು ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಎಸ್.ಪಿ. ಪ್ರತಿಕ್ರಿಯಿಸಿ ಇದು ಸತ್ಯವೇ ಆಗಿದ್ದರೆ, ಸೂಕ್ತ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಸೂಕ್ರ ಕ್ರಮ ಕೈಗೊಳ್ಳಿ ಎಂದರು.
ಚನ್ನಗಿರಿಯ ಗೋವಿಂದಪ್ಪ ಮಾತನಾಡಿ, ಮದ್ಯದ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಗೆ ತೆರೆಯುತ್ತಿದ್ದು ಇದರಿಂದ ಮಕ್ಕಳಿಗೆ, ಮಹಿಳೆಯರಿಗೆ, ಸಆರ್ವಜನಿಕರಿಗೆ ತೊಂದರೆಯಾಗುತ್ತಿದ್ದು ನಿಯಮದಂತೆ ಬೆಳಿಗ್ಗೆ 10 ರ ನಂತರ ಮದ್ಯದ ಅಂಗಡಿ ತೆರೆಯಲು ಸೂಚಿಸಬೇಕೆಂದು ಮನವಿ ಮಾಡಿದರು.
ಹರಿಹರದ ಮಹಾಂತೇಶ ಮಾತನಾಡಿ, ಪರಿಶಿಷ್ಟರ ಶವಸಂಸ್ಕಾರಕ್ಕಾಗಿ 24.10 ಯೋಜನೆಯಲ್ಲಿ 5 ಸಾವಿರ ನೀಡಲಾಗುತ್ತಿದ್ದು ಶವ ಸಂಸ್ಕಾರದ ಹಣ ಬರಲು ತಡವಾಗುತಿದೆ ಎಂದರು.
ಉಪವಿಭಾಗಾಧಿಕಾರಿ ಪ್ರತಿಕ್ರಿಯಿಸಿ ಅಂತ್ಯ ಸಂಸ್ಕಾರದ ಹಣ ಸೀನಿಯಾರಿಟಿ ಪ್ರಕಾರ ಬರುತ್ತದೆ. ಹಾಗಾಗಿ ತಡವಾದರು ಬರುತ್ತದೆ ಎಂದರು.
ನ್ಯಾಮತಿಯ ರಂಗನಾಥ ಮಾತನಾಡಿ, ತಾಲ್ಲೂಕಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆಗಳು ಹೆಚ್ಚಾಗಿದ್ದು ಇದರಲ್ಲಿ ಭಾಗವಹಿಸುವ ಯುವಕರು ಅನಾಹುತ ಮಾಡಿಕೊಳ್ಳುತ್ತಾರೆ. ಹಾಗಾಗಿ ಈ ಸ್ಪರ್ಧೆ ನಿಲ್ಲಿಸಿ ಎಂದರು.
ಕುಂದುವಾಡ ಮಂಜುನಾಥ್ ಮಾತನಾಡಿ, ಪರಿಶಿಷ್ಟರ ಮೇಲೆ ಮುಂದುವರೆದ ಜನಾಂಗಗಳವರು ಸುಳ್ಳು ದೂರು ನೀಡುತ್ತಾರೆ. ಹಾಗಾಗಿ ತಕ್ಷಣ ಎಫ್ಐಆರ್ ಆಗುತ್ತದೆ. ಹಾಗಾಗದಂತೆ ತಡೆಯಿರಿ ಎಂದಾಗ ಎಸ್.ಪಿ ಅವರು ಪ್ರತಿಕ್ರಿಯಿಸಿ ದೂರು ನೀಡಿದ ಮೇಲೆ ಎಫ್.ಐ.ಆರ್ ಮಾಡಲು ಬರುವುದಿಲ್ಲ. ರಾಜಿ ಪಂಚಾಯತಿಗೆ ಅವಕಾಶವಿಲ್ಲ ಎಂದರು.
ಹಿಂಡಸಘಟ್ಟ ಹನುಮಂತಪ್ಪ ಮಾತನಾಡಿ, ಮನೋಜ್ ಎಂಬ ದಲಿತ ಯುವಕ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದು ಹುಡುಗಿ ಕಡೆಯವರು ಹುಡುಗಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಹುಡುಗ ಹುಡುಗಿ ವಯಸ್ಕರರಾಗಿದ್ದು ದಲಿತ ಯುವಕನಿಗೆ ನ್ಯಾಯ ಒದಗಿಸಿ ಎಂದರು.
ಜ್ಯೋತಿಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ಹಾವಳಿ ಹೆಚ್ಚಾಗಿದ್ದು ನಿಯಂತ್ರಿಸಬೇಕು ಎಂದರು. ಎಸ್.ಪಿ ಅವರು ಪ್ರತಿಕ್ರಿಯಿಸಿ ಈ ಬಗೆಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುವುದು ಎಂದರು.
ಕೊನೆಯಲ್ಲಿ ಎಸ್.ಪಿ ಅವರು ಮಾತನಾಡಿ, ಯಾವುದೇ ಅಪರಾಧ ಪ್ರಕರಣಗಳು ಕಂಡುಬಂದರೆ ತಕ್ಷಣ 112 ಕ್ಕೆ ಕರೆಮಾಡಿ. ಬೇಕಿದ್ದರೆ ತಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಹೀಗೆ ಕರೆ ಮಾಡುವುದರಿಂದ ಪೊಲೀಸರು ತಕ್ಷಣ ಸ್ಪಂದಿಸುತ್ತಾರೆ ಎಂದರು.
ಹಾಗೂ ಇನ್ನೂ ಮುಂದಿನ ಸಭೆಗಳು ಮೂರು ತಿಂಗಳಿಗೊಮ್ಮೆ ನಾಲ್ಕನೆ ಶನಿವಾರ ಕಡ್ಡಾಯವಾಗಿ ನಡೆಯಲಿದ್ದು ಈ ಕುರಿತು ಪತ್ರಿಕೆ ಹೇಳಿಕೆ ನೀಡಲಾಗುವುದು. ಯಾವುದೇ ಮುಖಂಡರಿಗೆ ಕರೆ ಮಾಡಲಾಗುವುದಿಲ್ಲ. ಹಾಗಾಗಿ ಪತ್ರಿಕೆ ಸುದ್ದಿ ನೋಡಿಕೊಂಡು ಸಭೆಗೆ ಹಾಜರಾಗಿ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖ ಅಧಿಕಾರಿ ವಿಜಯ್ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಪಂಗಡಗಳ ಸಂಘಟನೆ ಮುಖಂಡರಾದ ಗುಮ್ಮನೂರು ಮಲ್ಲಿಕಾರ್ಜುನ, ಹೆಗ್ಗೆರೆ ರಂಗಪ್ಪ, ಆವರಗೆರೆ ವಾಸು, ತಿಮ್ಮಣ್ಣ, ಹನುಮಂತಪ್ಪ, ರುದ್ರೇಶ್, ಹರೀಶ್, ಸೋಮಲಾಪುರ ಹನುಮಂತಪ್ಪ, ಪಂಚಾಕ್ಷರಯ್ಯ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


