ದಿನದ ಸುದ್ದಿ
ಪರಿಶಿಷ್ಟರ ಕುಂದುಕೊರತೆ ಸಭೆ : ಜಿಲ್ಲೆಯಲ್ಲಿ ಅಸ್ಪೃಷ್ಯತೆ ನಿವಾರಣೆಗೆ ಕ್ರಮ ಕೈಗೊಳ್ಳಲು ಎಸ್.ಪಿ. ಸಿ.ಬಿ. ರಿಷ್ಯಂತ್ ಭರವಸೆ
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಜಾತೀಯತೆ ಇನ್ನೂ ಜೀವಂತವಾಗಿದೆ. ಹಲವು ದೇವಸ್ಥಾನಗಳಲ್ಲಿ ಇಂದಿಗೂ ಪ್ರವೇಶವಿರುವುದಿಲ್ಲ. ಕ್ಷೌರದಂಗಡಿಗಳಲ್ಲಿ ಈ ಜಾತಿಗಳರವರಿಗೆ ಕ್ಷೌರ ಮಾಡಲು ನಿರಾಕರಿಸುತ್ತಾರೆ.
ಹೋಟೆಲ್ಗಳಲ್ಲಿ ಸವರ್ಣೀಯರೊಂದಿಗೆ ಟೀ, ಕಾಫಿಯನ್ನು ಕೊಡಲು ನಿರಾಕರಿಸುತ್ತಾರೆ. ದೇವದಾಸಿ ಪದ್ಧತಿ, ಬೇವಿನ ಉಡುಗೆ ಆಚರಣೆಯಂತಹ ಅನಿಷ್ಟ ಪದ್ಧತಿಗಳಿಗೆ ಪರಿಶಿಷ್ಟ ಜಾತಿ ಪಂಗಡದವರು ಇಂದಿಗೂ ಬಲಿಯಾಗುತ್ತಿದ್ದು, ಅವುಗಳನ್ನು ತಪ್ಪಿಸಲು ಪೊಲೀಸ್ ಇಲಾಖೆ ಈ ಜನಾಂಗಗಳ ಪರವಾಗಿ ನಿಲ್ಲಬೇಕೆಂದು ಎಸ್.ಸಿ., ಎಸ್.ಟಿ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರುಗಳು ಒಕ್ಕೊರಲಿನಿಂದ ಆಗ್ರಹಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಕೇಳಿ ಬಂದ ಅಭಿಪ್ರಾಯಗಳು.
ಜಗಳೂರು ತಾಲ್ಲೂಕಿನ ಮುಖಂಡ ಸತೀಶ್ ಮಾತನಾಡಿ, ತಾಲ್ಲೂಕಿನ ಮಡ್ಡರಹಳ್ಳಿ ಚೌಡೇಶ್ವರಿ ದೇವಾಲಯದಲ್ಲಿ ಹಬ್ಬದ ಸಂದರ್ಭದಲ್ಲಿ ಹೆಣ್ಣುಮಕ್ಕಳಿಗೆ ಬೇವಿನುಡಿಗೆ, ನಾಲಿಗೆಗೆ ತಂತಿ ಸಿಕ್ಕಿಸಿಕೊಳ್ಳುವಂತಹ ಆಚರಣೆಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ಹೆಚ್ಚಾಗಿ ಅನುಸರಿಸುತ್ತಿದ್ದು, ಅವರುಗಳಿಗೆ ಅಧಿಕಾರಿಗಳ ಮಟ್ಟದಲ್ಲಿ ಸೂಕ್ತ ತಿಳುವಳಿಕೆ ನೀಡಿ ಇಂತಹ ಅನಿಷ್ಟ ಪದ್ಧತಿಗಳಿಂದ ಹೊರ ತರಲು ಸರ್ಕಾರ ಪ್ರಯತ್ನಿಸಲಿ.
ಹಾಗೂ ಇಂತಹ ಆಚರಣೆ ಕೈಗೊಳ್ಳಲು ಒತ್ತಾಯಿಸುವವರನ್ನು ಶಿಕ್ಷಿಸಬೇಕು. ಮತ್ತು ಹೊಸಗೆರೆ ಹಾಗೂ ಪಲ್ಲಾಗಟ್ಟೆ ಗ್ರಾಮದಲ್ಲಿರುವ ಬಾರ್ ಅನ್ನು ಬೇರೆ ಕಡೆ ಸ್ಥಳಾಂತರಿಸಬೇಕು. ಎಸ್.ಸಿ ಮತ್ತು ಎಸ್.ಟಿ ಹಾಸ್ಟೆಲ್ ಬಳಿ ದೊಡ್ಡ ಚರಂಡಿ ಹರಿಯುತ್ತಿದ್ದು ಸೊಳ್ಳೆ ಕಾಟ ಹೆಚ್ಚಾಗಿದೆ.
ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗೂ ಹಾಸ್ಟೆಲ್ ಬಳಿ ಪುಂಡ ಪೋಕರಿಗಳ ಕಾಟ ಹೆಚ್ಚಾಗಿದ್ದು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಎಸ್.ಪಿ. ಸಿ.ಬಿ.ರಿಷ್ಯಂತ್ ಅವರು ಪ್ರತಿಕ್ರಿಯಿಸಿ, ಇಂತಹ ಆಚರಣೆಗಳನ್ನು ತಡೆಯಲು ಕಾನೂನಾತ್ಮಕವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಜಗಳೂರು ಮುಖಂಡ ಹಾಲೇಶ್ ಬಿಳಿಚೋಡು ಮಾತನಾಡಿ, ಮೆದಗಿನಕೆರೆ, ಕೊರಟಿಗೆರೆ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಜೂಜು ಹಾವಳಿ ಹೆಚ್ಚಾಗಿದೆ. ಉಚ್ಚಂಗಿದುರ್ಗ ದೇವಸ್ಥಾನದಲ್ಲಿ ನಡೆಯುವ ಕಾರಹುಣ್ಣಿಮೆ ಹಬ್ಬಕ್ಕೆ ದೇವದಾಸಿಯರನ್ನು ಹೆಚ್ಚಾಗಿ ಬಳಸಿಕೊಳ್ಳುತ್ತಿದ್ದು, ನಮ್ಮ ಭಾಗದಿಂದ ಹೆಚ್ಚು ಜನ ಹೋಗುತ್ತಿದ್ದಾರೆ. ಇದನ್ನು ತಡೆಯಬೇಕು. ಬಿಳಿಚೋಡು ಗ್ರಾಮದ ಸರ್ಕಲ್ ನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಮನವಿ ಮಾಡಿದರು.
ಹರಿಹರ ತಾಲ್ಲೂಕಿನ ಮುಖಂಡರು ಮಾತನಾಡಿ, ತಾಲ್ಲೂಕಿನಲ್ಲಿ ವಾಹನ ಸಂಚಾರ ಹೆಚ್ಚಿದ್ದು ಟ್ರಾಫಿಕ್ ಸ್ಟೇಷನ್ ಆರಂಭಿಸಬೇಕು. ಹಾಗೂ ಅಂಬೇಡ್ಕರ್ ಭವನದಲ್ಲಿ ಕೆಎಎಸ್, ಐಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಸ್ಥಾಪಿಸಬೇಕು. ಬಾನುವಳ್ಳಿ ಗ್ರಾಮದಲ್ಲಿ 12 ಜನ ಮಾಜಿ ದೇವದಾಸಿಯರಿದ್ದು, ಅವರಿಗೆ ಮನೆ ಮಂಜೂರಾದರೂ ಇನ್ನೂ ಮನೆ ಕಟ್ಟಿಕೊಟ್ಟಿಲ್ಲ. ಆದಷ್ಟು ಬೇಗ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು.
ಎಸ್.ಪಿ ಮಾತನಾಡಿ, ಸಂಚಾರ ಪೊಲೀಸ್ ಠಾಣೆ ಮಂಜೂರಾತಿಗೆ ವಿವಿಧ ಪ್ರಕ್ರಿಯೆಗಳಿರುವುದರಿಂದ ತಡವಾಗುತ್ತದೆ. ಆದ್ದರಿಂದ ಟ್ರಾಫಿಕ್ ಪಾಯಿಂಟ್ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ನ್ಯಾಮತಿ ತಾಲ್ಲೂಕಿನ ಮುಖಂಡ ರಂಗನಾಥ.ಎ.ಕೆ ಮಾತನಾಡಿ, ಒಂದೂವರೆ ಎಕರೆ ಪ್ರದೇಶದಲ್ಲಿ ಹಿಂದು ಸ್ಮಶಾನ ಭೂಮಿ ನಿರ್ಮಿಸಿದ್ದು, ಪರಿಶಿಷ್ಟ ಜಾತಿಯ ಹೆಣ ಸುಡಲು ಸ್ಮಶಾನಕ್ಕೆ ಹೋದರೆ ಸುಡಲು ಅನುಮತಿ ನೀಡುವುದಿಲ್ಲ.
ಈ ಹಿಂದೆ ಅಂತ್ಯಕ್ರಿಯೆ ಮಾಡಲು ಒಳಗಡೆ ಪ್ರವೇಶಿಸಲು ಅವಕಾಶ ಕೊಡದೆ, ಶವ ಹೊರ ಹಾಕಿರುವ ಘಟನೆ ನಡೆದಿದೆ. ಇದರಿಂದ ಸಾಕಷ್ಟು ಬೇಸತ್ತಿದ್ದೆವೆ ಎಂದು ಅಳಲು ತೋಡಿಕೊಂಡರು.
ಎಸಿ ಮಮತ ಹೊಸಗೌಡರ್ ಮಾತನಾಡಿ, ಮನುಷ್ಯ ಬದುಕಿದ್ದಾಗ ಸಮಾನತೆಯಿಂದ ಬದುಕಲ್ಲ, ಸತ್ತ ಮೇಲಾದರೂ ಸಮಾನತೆಯಿಂದ ಇರಬೇಕು ಎಂಬ ಆಶಯದೊಂದಿಗೆ ಇರುವ ಸುತ್ತೋಲೆ ಮೇರೆಗೆ ಹಿಂದು ರುದ್ರ ಭೂಮಿ ಒದಗಿಸಲಾಗಿದೆ ಎಂದರು. ಎಸ್.ಪಿ ಪ್ರತಿಕ್ರಿಯಿಸಿ ಭೂಮಿ ಒದಗಿಸಿರುವುದು ಅಂತ್ಯಕ್ರಿಯೆ ಮಾಡಲೆಂದು. ಈ ರೀತಿ ಭೇದ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದರು.
ಮಲ್ಲಹಳ್ಳಿ ಗ್ರಾಮದಲ್ಲಿ ಹಬ್ಬ ಹರಿದಿನಗಳಲ್ಲಿ ಪರಿಶಿಷ್ಟರು ಊರ ಒಳಗೆ ಚಪ್ಪಲಿ ಹಾಕಿಕೊಂಡು ಹೋಗುವುದನ್ನು ಅಲ್ಲಿಯ ಗ್ರಾಮಸ್ಥರು ನಿಷೇಧಿಸಿದ್ದು, ಅಪ್ಪಿತಪ್ಪಿ ಒಳ ಹೋದರೆ ಜಾತಿ ನಿಂದನೆ ಮಾಡುತ್ತಾರೆ. ಈ ಗ್ರಾಮದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದು, ಐಪಿಎಲ್ ಬೆಟ್ಟಿಂಗ್ ದಂದೆ ಹೆಚ್ಚಾಗಿದೆ. ದಲಿತ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದು, ಸೂಕ್ತ ತನಿಖೆ ನಡೆಸಬೇಕು.
ದಾವಣಗೆರೆ ನಗರಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಕಾಣದಂತೆ ಫ್ಲೆಕ್ಸ್ ಕಟ್ಟಲಾಗುತ್ತಿದ್ದು, ಇದರಿಂದ ಪ್ರತಿಮೆ ಮರೆಯಾಗುತ್ತಿದೆ. ಇದನ್ನು ತಡೆಗಟ್ಟಬೇಕು. ಹೀಗೆ ಅನೇಕ ಕುಂದು ಕೊರತೆಗಳನ್ನು ಸ್ಥಳೀಯ ಮುಖಂಡರು ಹೇಳುವ ಮೂಲಕ ತಮ್ಮ ಅಳಲು ತೋಡಿಕೊಂಡರು.
ನೀರ್ಥಡಿ ಗ್ರಾಮದಲ್ಲಿ ಪೌರಾಣಿಕ ಇತಿಹಾಸ ಹೊಂದಿರುವ ರಂಗನಾಥಸ್ವಾಮಿ ದೇವಾಲಯದಲ್ಲಿ ಇಂದಿಗೂ ಮಾದಿಗರನ್ನು ಒಳಗಡೆ ಪ್ರವೇಶಿಸಲು ಬಿಡದೆ ದೌರ್ಜನ್ಯವೆಸಗುತ್ತಿದ್ದು, ಅವರಿಗೆ ರಕ್ಷಣೆ ಒದಗಿಸಬೇಕು.
ತಾನು ಹುಟ್ಟಿದ್ದು ಇಲ್ಲೆ ಆದರೂ ಇದುವರೆಗೂ ದೇವಸ್ಥಾನದ ಒಳಗಡೆ ಪ್ರವೇಶಿಸಲಾಗಿಲ್ಲ ಎಂದು ಮಂಜುನಾಥ್ ಎಂಬುವವರು ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಎಸ್.ಪಿ. ಪ್ರತಿಕ್ರಿಯಿಸಿ ಇದು ಸತ್ಯವೇ ಆಗಿದ್ದರೆ, ಸೂಕ್ತ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಸೂಕ್ರ ಕ್ರಮ ಕೈಗೊಳ್ಳಿ ಎಂದರು.
ಚನ್ನಗಿರಿಯ ಗೋವಿಂದಪ್ಪ ಮಾತನಾಡಿ, ಮದ್ಯದ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಗೆ ತೆರೆಯುತ್ತಿದ್ದು ಇದರಿಂದ ಮಕ್ಕಳಿಗೆ, ಮಹಿಳೆಯರಿಗೆ, ಸಆರ್ವಜನಿಕರಿಗೆ ತೊಂದರೆಯಾಗುತ್ತಿದ್ದು ನಿಯಮದಂತೆ ಬೆಳಿಗ್ಗೆ 10 ರ ನಂತರ ಮದ್ಯದ ಅಂಗಡಿ ತೆರೆಯಲು ಸೂಚಿಸಬೇಕೆಂದು ಮನವಿ ಮಾಡಿದರು.
ಹರಿಹರದ ಮಹಾಂತೇಶ ಮಾತನಾಡಿ, ಪರಿಶಿಷ್ಟರ ಶವಸಂಸ್ಕಾರಕ್ಕಾಗಿ 24.10 ಯೋಜನೆಯಲ್ಲಿ 5 ಸಾವಿರ ನೀಡಲಾಗುತ್ತಿದ್ದು ಶವ ಸಂಸ್ಕಾರದ ಹಣ ಬರಲು ತಡವಾಗುತಿದೆ ಎಂದರು.
ಉಪವಿಭಾಗಾಧಿಕಾರಿ ಪ್ರತಿಕ್ರಿಯಿಸಿ ಅಂತ್ಯ ಸಂಸ್ಕಾರದ ಹಣ ಸೀನಿಯಾರಿಟಿ ಪ್ರಕಾರ ಬರುತ್ತದೆ. ಹಾಗಾಗಿ ತಡವಾದರು ಬರುತ್ತದೆ ಎಂದರು.
ನ್ಯಾಮತಿಯ ರಂಗನಾಥ ಮಾತನಾಡಿ, ತಾಲ್ಲೂಕಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆಗಳು ಹೆಚ್ಚಾಗಿದ್ದು ಇದರಲ್ಲಿ ಭಾಗವಹಿಸುವ ಯುವಕರು ಅನಾಹುತ ಮಾಡಿಕೊಳ್ಳುತ್ತಾರೆ. ಹಾಗಾಗಿ ಈ ಸ್ಪರ್ಧೆ ನಿಲ್ಲಿಸಿ ಎಂದರು.
ಕುಂದುವಾಡ ಮಂಜುನಾಥ್ ಮಾತನಾಡಿ, ಪರಿಶಿಷ್ಟರ ಮೇಲೆ ಮುಂದುವರೆದ ಜನಾಂಗಗಳವರು ಸುಳ್ಳು ದೂರು ನೀಡುತ್ತಾರೆ. ಹಾಗಾಗಿ ತಕ್ಷಣ ಎಫ್ಐಆರ್ ಆಗುತ್ತದೆ. ಹಾಗಾಗದಂತೆ ತಡೆಯಿರಿ ಎಂದಾಗ ಎಸ್.ಪಿ ಅವರು ಪ್ರತಿಕ್ರಿಯಿಸಿ ದೂರು ನೀಡಿದ ಮೇಲೆ ಎಫ್.ಐ.ಆರ್ ಮಾಡಲು ಬರುವುದಿಲ್ಲ. ರಾಜಿ ಪಂಚಾಯತಿಗೆ ಅವಕಾಶವಿಲ್ಲ ಎಂದರು.
ಹಿಂಡಸಘಟ್ಟ ಹನುಮಂತಪ್ಪ ಮಾತನಾಡಿ, ಮನೋಜ್ ಎಂಬ ದಲಿತ ಯುವಕ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದು ಹುಡುಗಿ ಕಡೆಯವರು ಹುಡುಗಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಹುಡುಗ ಹುಡುಗಿ ವಯಸ್ಕರರಾಗಿದ್ದು ದಲಿತ ಯುವಕನಿಗೆ ನ್ಯಾಯ ಒದಗಿಸಿ ಎಂದರು.
ಜ್ಯೋತಿಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ಹಾವಳಿ ಹೆಚ್ಚಾಗಿದ್ದು ನಿಯಂತ್ರಿಸಬೇಕು ಎಂದರು. ಎಸ್.ಪಿ ಅವರು ಪ್ರತಿಕ್ರಿಯಿಸಿ ಈ ಬಗೆಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುವುದು ಎಂದರು.
ಕೊನೆಯಲ್ಲಿ ಎಸ್.ಪಿ ಅವರು ಮಾತನಾಡಿ, ಯಾವುದೇ ಅಪರಾಧ ಪ್ರಕರಣಗಳು ಕಂಡುಬಂದರೆ ತಕ್ಷಣ 112 ಕ್ಕೆ ಕರೆಮಾಡಿ. ಬೇಕಿದ್ದರೆ ತಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಹೀಗೆ ಕರೆ ಮಾಡುವುದರಿಂದ ಪೊಲೀಸರು ತಕ್ಷಣ ಸ್ಪಂದಿಸುತ್ತಾರೆ ಎಂದರು.
ಹಾಗೂ ಇನ್ನೂ ಮುಂದಿನ ಸಭೆಗಳು ಮೂರು ತಿಂಗಳಿಗೊಮ್ಮೆ ನಾಲ್ಕನೆ ಶನಿವಾರ ಕಡ್ಡಾಯವಾಗಿ ನಡೆಯಲಿದ್ದು ಈ ಕುರಿತು ಪತ್ರಿಕೆ ಹೇಳಿಕೆ ನೀಡಲಾಗುವುದು. ಯಾವುದೇ ಮುಖಂಡರಿಗೆ ಕರೆ ಮಾಡಲಾಗುವುದಿಲ್ಲ. ಹಾಗಾಗಿ ಪತ್ರಿಕೆ ಸುದ್ದಿ ನೋಡಿಕೊಂಡು ಸಭೆಗೆ ಹಾಜರಾಗಿ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖ ಅಧಿಕಾರಿ ವಿಜಯ್ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಪಂಗಡಗಳ ಸಂಘಟನೆ ಮುಖಂಡರಾದ ಗುಮ್ಮನೂರು ಮಲ್ಲಿಕಾರ್ಜುನ, ಹೆಗ್ಗೆರೆ ರಂಗಪ್ಪ, ಆವರಗೆರೆ ವಾಸು, ತಿಮ್ಮಣ್ಣ, ಹನುಮಂತಪ್ಪ, ರುದ್ರೇಶ್, ಹರೀಶ್, ಸೋಮಲಾಪುರ ಹನುಮಂತಪ್ಪ, ಪಂಚಾಕ್ಷರಯ್ಯ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


