ದಿನದ ಸುದ್ದಿ
ಪರಿಶಿಷ್ಟರ ಕುಂದುಕೊರತೆ ಸಭೆ : ಜಿಲ್ಲೆಯಲ್ಲಿ ಅಸ್ಪೃಷ್ಯತೆ ನಿವಾರಣೆಗೆ ಕ್ರಮ ಕೈಗೊಳ್ಳಲು ಎಸ್.ಪಿ. ಸಿ.ಬಿ. ರಿಷ್ಯಂತ್ ಭರವಸೆ
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಜಾತೀಯತೆ ಇನ್ನೂ ಜೀವಂತವಾಗಿದೆ. ಹಲವು ದೇವಸ್ಥಾನಗಳಲ್ಲಿ ಇಂದಿಗೂ ಪ್ರವೇಶವಿರುವುದಿಲ್ಲ. ಕ್ಷೌರದಂಗಡಿಗಳಲ್ಲಿ ಈ ಜಾತಿಗಳರವರಿಗೆ ಕ್ಷೌರ ಮಾಡಲು ನಿರಾಕರಿಸುತ್ತಾರೆ.
ಹೋಟೆಲ್ಗಳಲ್ಲಿ ಸವರ್ಣೀಯರೊಂದಿಗೆ ಟೀ, ಕಾಫಿಯನ್ನು ಕೊಡಲು ನಿರಾಕರಿಸುತ್ತಾರೆ. ದೇವದಾಸಿ ಪದ್ಧತಿ, ಬೇವಿನ ಉಡುಗೆ ಆಚರಣೆಯಂತಹ ಅನಿಷ್ಟ ಪದ್ಧತಿಗಳಿಗೆ ಪರಿಶಿಷ್ಟ ಜಾತಿ ಪಂಗಡದವರು ಇಂದಿಗೂ ಬಲಿಯಾಗುತ್ತಿದ್ದು, ಅವುಗಳನ್ನು ತಪ್ಪಿಸಲು ಪೊಲೀಸ್ ಇಲಾಖೆ ಈ ಜನಾಂಗಗಳ ಪರವಾಗಿ ನಿಲ್ಲಬೇಕೆಂದು ಎಸ್.ಸಿ., ಎಸ್.ಟಿ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರುಗಳು ಒಕ್ಕೊರಲಿನಿಂದ ಆಗ್ರಹಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಕೇಳಿ ಬಂದ ಅಭಿಪ್ರಾಯಗಳು.
ಜಗಳೂರು ತಾಲ್ಲೂಕಿನ ಮುಖಂಡ ಸತೀಶ್ ಮಾತನಾಡಿ, ತಾಲ್ಲೂಕಿನ ಮಡ್ಡರಹಳ್ಳಿ ಚೌಡೇಶ್ವರಿ ದೇವಾಲಯದಲ್ಲಿ ಹಬ್ಬದ ಸಂದರ್ಭದಲ್ಲಿ ಹೆಣ್ಣುಮಕ್ಕಳಿಗೆ ಬೇವಿನುಡಿಗೆ, ನಾಲಿಗೆಗೆ ತಂತಿ ಸಿಕ್ಕಿಸಿಕೊಳ್ಳುವಂತಹ ಆಚರಣೆಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ಹೆಚ್ಚಾಗಿ ಅನುಸರಿಸುತ್ತಿದ್ದು, ಅವರುಗಳಿಗೆ ಅಧಿಕಾರಿಗಳ ಮಟ್ಟದಲ್ಲಿ ಸೂಕ್ತ ತಿಳುವಳಿಕೆ ನೀಡಿ ಇಂತಹ ಅನಿಷ್ಟ ಪದ್ಧತಿಗಳಿಂದ ಹೊರ ತರಲು ಸರ್ಕಾರ ಪ್ರಯತ್ನಿಸಲಿ.
ಹಾಗೂ ಇಂತಹ ಆಚರಣೆ ಕೈಗೊಳ್ಳಲು ಒತ್ತಾಯಿಸುವವರನ್ನು ಶಿಕ್ಷಿಸಬೇಕು. ಮತ್ತು ಹೊಸಗೆರೆ ಹಾಗೂ ಪಲ್ಲಾಗಟ್ಟೆ ಗ್ರಾಮದಲ್ಲಿರುವ ಬಾರ್ ಅನ್ನು ಬೇರೆ ಕಡೆ ಸ್ಥಳಾಂತರಿಸಬೇಕು. ಎಸ್.ಸಿ ಮತ್ತು ಎಸ್.ಟಿ ಹಾಸ್ಟೆಲ್ ಬಳಿ ದೊಡ್ಡ ಚರಂಡಿ ಹರಿಯುತ್ತಿದ್ದು ಸೊಳ್ಳೆ ಕಾಟ ಹೆಚ್ಚಾಗಿದೆ.
ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗೂ ಹಾಸ್ಟೆಲ್ ಬಳಿ ಪುಂಡ ಪೋಕರಿಗಳ ಕಾಟ ಹೆಚ್ಚಾಗಿದ್ದು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಎಸ್.ಪಿ. ಸಿ.ಬಿ.ರಿಷ್ಯಂತ್ ಅವರು ಪ್ರತಿಕ್ರಿಯಿಸಿ, ಇಂತಹ ಆಚರಣೆಗಳನ್ನು ತಡೆಯಲು ಕಾನೂನಾತ್ಮಕವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಜಗಳೂರು ಮುಖಂಡ ಹಾಲೇಶ್ ಬಿಳಿಚೋಡು ಮಾತನಾಡಿ, ಮೆದಗಿನಕೆರೆ, ಕೊರಟಿಗೆರೆ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಜೂಜು ಹಾವಳಿ ಹೆಚ್ಚಾಗಿದೆ. ಉಚ್ಚಂಗಿದುರ್ಗ ದೇವಸ್ಥಾನದಲ್ಲಿ ನಡೆಯುವ ಕಾರಹುಣ್ಣಿಮೆ ಹಬ್ಬಕ್ಕೆ ದೇವದಾಸಿಯರನ್ನು ಹೆಚ್ಚಾಗಿ ಬಳಸಿಕೊಳ್ಳುತ್ತಿದ್ದು, ನಮ್ಮ ಭಾಗದಿಂದ ಹೆಚ್ಚು ಜನ ಹೋಗುತ್ತಿದ್ದಾರೆ. ಇದನ್ನು ತಡೆಯಬೇಕು. ಬಿಳಿಚೋಡು ಗ್ರಾಮದ ಸರ್ಕಲ್ ನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಮನವಿ ಮಾಡಿದರು.
ಹರಿಹರ ತಾಲ್ಲೂಕಿನ ಮುಖಂಡರು ಮಾತನಾಡಿ, ತಾಲ್ಲೂಕಿನಲ್ಲಿ ವಾಹನ ಸಂಚಾರ ಹೆಚ್ಚಿದ್ದು ಟ್ರಾಫಿಕ್ ಸ್ಟೇಷನ್ ಆರಂಭಿಸಬೇಕು. ಹಾಗೂ ಅಂಬೇಡ್ಕರ್ ಭವನದಲ್ಲಿ ಕೆಎಎಸ್, ಐಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಸ್ಥಾಪಿಸಬೇಕು. ಬಾನುವಳ್ಳಿ ಗ್ರಾಮದಲ್ಲಿ 12 ಜನ ಮಾಜಿ ದೇವದಾಸಿಯರಿದ್ದು, ಅವರಿಗೆ ಮನೆ ಮಂಜೂರಾದರೂ ಇನ್ನೂ ಮನೆ ಕಟ್ಟಿಕೊಟ್ಟಿಲ್ಲ. ಆದಷ್ಟು ಬೇಗ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು.
ಎಸ್.ಪಿ ಮಾತನಾಡಿ, ಸಂಚಾರ ಪೊಲೀಸ್ ಠಾಣೆ ಮಂಜೂರಾತಿಗೆ ವಿವಿಧ ಪ್ರಕ್ರಿಯೆಗಳಿರುವುದರಿಂದ ತಡವಾಗುತ್ತದೆ. ಆದ್ದರಿಂದ ಟ್ರಾಫಿಕ್ ಪಾಯಿಂಟ್ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ನ್ಯಾಮತಿ ತಾಲ್ಲೂಕಿನ ಮುಖಂಡ ರಂಗನಾಥ.ಎ.ಕೆ ಮಾತನಾಡಿ, ಒಂದೂವರೆ ಎಕರೆ ಪ್ರದೇಶದಲ್ಲಿ ಹಿಂದು ಸ್ಮಶಾನ ಭೂಮಿ ನಿರ್ಮಿಸಿದ್ದು, ಪರಿಶಿಷ್ಟ ಜಾತಿಯ ಹೆಣ ಸುಡಲು ಸ್ಮಶಾನಕ್ಕೆ ಹೋದರೆ ಸುಡಲು ಅನುಮತಿ ನೀಡುವುದಿಲ್ಲ.
ಈ ಹಿಂದೆ ಅಂತ್ಯಕ್ರಿಯೆ ಮಾಡಲು ಒಳಗಡೆ ಪ್ರವೇಶಿಸಲು ಅವಕಾಶ ಕೊಡದೆ, ಶವ ಹೊರ ಹಾಕಿರುವ ಘಟನೆ ನಡೆದಿದೆ. ಇದರಿಂದ ಸಾಕಷ್ಟು ಬೇಸತ್ತಿದ್ದೆವೆ ಎಂದು ಅಳಲು ತೋಡಿಕೊಂಡರು.
ಎಸಿ ಮಮತ ಹೊಸಗೌಡರ್ ಮಾತನಾಡಿ, ಮನುಷ್ಯ ಬದುಕಿದ್ದಾಗ ಸಮಾನತೆಯಿಂದ ಬದುಕಲ್ಲ, ಸತ್ತ ಮೇಲಾದರೂ ಸಮಾನತೆಯಿಂದ ಇರಬೇಕು ಎಂಬ ಆಶಯದೊಂದಿಗೆ ಇರುವ ಸುತ್ತೋಲೆ ಮೇರೆಗೆ ಹಿಂದು ರುದ್ರ ಭೂಮಿ ಒದಗಿಸಲಾಗಿದೆ ಎಂದರು. ಎಸ್.ಪಿ ಪ್ರತಿಕ್ರಿಯಿಸಿ ಭೂಮಿ ಒದಗಿಸಿರುವುದು ಅಂತ್ಯಕ್ರಿಯೆ ಮಾಡಲೆಂದು. ಈ ರೀತಿ ಭೇದ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದರು.
ಮಲ್ಲಹಳ್ಳಿ ಗ್ರಾಮದಲ್ಲಿ ಹಬ್ಬ ಹರಿದಿನಗಳಲ್ಲಿ ಪರಿಶಿಷ್ಟರು ಊರ ಒಳಗೆ ಚಪ್ಪಲಿ ಹಾಕಿಕೊಂಡು ಹೋಗುವುದನ್ನು ಅಲ್ಲಿಯ ಗ್ರಾಮಸ್ಥರು ನಿಷೇಧಿಸಿದ್ದು, ಅಪ್ಪಿತಪ್ಪಿ ಒಳ ಹೋದರೆ ಜಾತಿ ನಿಂದನೆ ಮಾಡುತ್ತಾರೆ. ಈ ಗ್ರಾಮದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದು, ಐಪಿಎಲ್ ಬೆಟ್ಟಿಂಗ್ ದಂದೆ ಹೆಚ್ಚಾಗಿದೆ. ದಲಿತ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದು, ಸೂಕ್ತ ತನಿಖೆ ನಡೆಸಬೇಕು.
ದಾವಣಗೆರೆ ನಗರಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಕಾಣದಂತೆ ಫ್ಲೆಕ್ಸ್ ಕಟ್ಟಲಾಗುತ್ತಿದ್ದು, ಇದರಿಂದ ಪ್ರತಿಮೆ ಮರೆಯಾಗುತ್ತಿದೆ. ಇದನ್ನು ತಡೆಗಟ್ಟಬೇಕು. ಹೀಗೆ ಅನೇಕ ಕುಂದು ಕೊರತೆಗಳನ್ನು ಸ್ಥಳೀಯ ಮುಖಂಡರು ಹೇಳುವ ಮೂಲಕ ತಮ್ಮ ಅಳಲು ತೋಡಿಕೊಂಡರು.
ನೀರ್ಥಡಿ ಗ್ರಾಮದಲ್ಲಿ ಪೌರಾಣಿಕ ಇತಿಹಾಸ ಹೊಂದಿರುವ ರಂಗನಾಥಸ್ವಾಮಿ ದೇವಾಲಯದಲ್ಲಿ ಇಂದಿಗೂ ಮಾದಿಗರನ್ನು ಒಳಗಡೆ ಪ್ರವೇಶಿಸಲು ಬಿಡದೆ ದೌರ್ಜನ್ಯವೆಸಗುತ್ತಿದ್ದು, ಅವರಿಗೆ ರಕ್ಷಣೆ ಒದಗಿಸಬೇಕು.
ತಾನು ಹುಟ್ಟಿದ್ದು ಇಲ್ಲೆ ಆದರೂ ಇದುವರೆಗೂ ದೇವಸ್ಥಾನದ ಒಳಗಡೆ ಪ್ರವೇಶಿಸಲಾಗಿಲ್ಲ ಎಂದು ಮಂಜುನಾಥ್ ಎಂಬುವವರು ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಎಸ್.ಪಿ. ಪ್ರತಿಕ್ರಿಯಿಸಿ ಇದು ಸತ್ಯವೇ ಆಗಿದ್ದರೆ, ಸೂಕ್ತ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಸೂಕ್ರ ಕ್ರಮ ಕೈಗೊಳ್ಳಿ ಎಂದರು.
ಚನ್ನಗಿರಿಯ ಗೋವಿಂದಪ್ಪ ಮಾತನಾಡಿ, ಮದ್ಯದ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಗೆ ತೆರೆಯುತ್ತಿದ್ದು ಇದರಿಂದ ಮಕ್ಕಳಿಗೆ, ಮಹಿಳೆಯರಿಗೆ, ಸಆರ್ವಜನಿಕರಿಗೆ ತೊಂದರೆಯಾಗುತ್ತಿದ್ದು ನಿಯಮದಂತೆ ಬೆಳಿಗ್ಗೆ 10 ರ ನಂತರ ಮದ್ಯದ ಅಂಗಡಿ ತೆರೆಯಲು ಸೂಚಿಸಬೇಕೆಂದು ಮನವಿ ಮಾಡಿದರು.
ಹರಿಹರದ ಮಹಾಂತೇಶ ಮಾತನಾಡಿ, ಪರಿಶಿಷ್ಟರ ಶವಸಂಸ್ಕಾರಕ್ಕಾಗಿ 24.10 ಯೋಜನೆಯಲ್ಲಿ 5 ಸಾವಿರ ನೀಡಲಾಗುತ್ತಿದ್ದು ಶವ ಸಂಸ್ಕಾರದ ಹಣ ಬರಲು ತಡವಾಗುತಿದೆ ಎಂದರು.
ಉಪವಿಭಾಗಾಧಿಕಾರಿ ಪ್ರತಿಕ್ರಿಯಿಸಿ ಅಂತ್ಯ ಸಂಸ್ಕಾರದ ಹಣ ಸೀನಿಯಾರಿಟಿ ಪ್ರಕಾರ ಬರುತ್ತದೆ. ಹಾಗಾಗಿ ತಡವಾದರು ಬರುತ್ತದೆ ಎಂದರು.
ನ್ಯಾಮತಿಯ ರಂಗನಾಥ ಮಾತನಾಡಿ, ತಾಲ್ಲೂಕಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆಗಳು ಹೆಚ್ಚಾಗಿದ್ದು ಇದರಲ್ಲಿ ಭಾಗವಹಿಸುವ ಯುವಕರು ಅನಾಹುತ ಮಾಡಿಕೊಳ್ಳುತ್ತಾರೆ. ಹಾಗಾಗಿ ಈ ಸ್ಪರ್ಧೆ ನಿಲ್ಲಿಸಿ ಎಂದರು.
ಕುಂದುವಾಡ ಮಂಜುನಾಥ್ ಮಾತನಾಡಿ, ಪರಿಶಿಷ್ಟರ ಮೇಲೆ ಮುಂದುವರೆದ ಜನಾಂಗಗಳವರು ಸುಳ್ಳು ದೂರು ನೀಡುತ್ತಾರೆ. ಹಾಗಾಗಿ ತಕ್ಷಣ ಎಫ್ಐಆರ್ ಆಗುತ್ತದೆ. ಹಾಗಾಗದಂತೆ ತಡೆಯಿರಿ ಎಂದಾಗ ಎಸ್.ಪಿ ಅವರು ಪ್ರತಿಕ್ರಿಯಿಸಿ ದೂರು ನೀಡಿದ ಮೇಲೆ ಎಫ್.ಐ.ಆರ್ ಮಾಡಲು ಬರುವುದಿಲ್ಲ. ರಾಜಿ ಪಂಚಾಯತಿಗೆ ಅವಕಾಶವಿಲ್ಲ ಎಂದರು.
ಹಿಂಡಸಘಟ್ಟ ಹನುಮಂತಪ್ಪ ಮಾತನಾಡಿ, ಮನೋಜ್ ಎಂಬ ದಲಿತ ಯುವಕ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದು ಹುಡುಗಿ ಕಡೆಯವರು ಹುಡುಗಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಹುಡುಗ ಹುಡುಗಿ ವಯಸ್ಕರರಾಗಿದ್ದು ದಲಿತ ಯುವಕನಿಗೆ ನ್ಯಾಯ ಒದಗಿಸಿ ಎಂದರು.
ಜ್ಯೋತಿಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ಹಾವಳಿ ಹೆಚ್ಚಾಗಿದ್ದು ನಿಯಂತ್ರಿಸಬೇಕು ಎಂದರು. ಎಸ್.ಪಿ ಅವರು ಪ್ರತಿಕ್ರಿಯಿಸಿ ಈ ಬಗೆಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುವುದು ಎಂದರು.
ಕೊನೆಯಲ್ಲಿ ಎಸ್.ಪಿ ಅವರು ಮಾತನಾಡಿ, ಯಾವುದೇ ಅಪರಾಧ ಪ್ರಕರಣಗಳು ಕಂಡುಬಂದರೆ ತಕ್ಷಣ 112 ಕ್ಕೆ ಕರೆಮಾಡಿ. ಬೇಕಿದ್ದರೆ ತಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಹೀಗೆ ಕರೆ ಮಾಡುವುದರಿಂದ ಪೊಲೀಸರು ತಕ್ಷಣ ಸ್ಪಂದಿಸುತ್ತಾರೆ ಎಂದರು.
ಹಾಗೂ ಇನ್ನೂ ಮುಂದಿನ ಸಭೆಗಳು ಮೂರು ತಿಂಗಳಿಗೊಮ್ಮೆ ನಾಲ್ಕನೆ ಶನಿವಾರ ಕಡ್ಡಾಯವಾಗಿ ನಡೆಯಲಿದ್ದು ಈ ಕುರಿತು ಪತ್ರಿಕೆ ಹೇಳಿಕೆ ನೀಡಲಾಗುವುದು. ಯಾವುದೇ ಮುಖಂಡರಿಗೆ ಕರೆ ಮಾಡಲಾಗುವುದಿಲ್ಲ. ಹಾಗಾಗಿ ಪತ್ರಿಕೆ ಸುದ್ದಿ ನೋಡಿಕೊಂಡು ಸಭೆಗೆ ಹಾಜರಾಗಿ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖ ಅಧಿಕಾರಿ ವಿಜಯ್ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಪಂಗಡಗಳ ಸಂಘಟನೆ ಮುಖಂಡರಾದ ಗುಮ್ಮನೂರು ಮಲ್ಲಿಕಾರ್ಜುನ, ಹೆಗ್ಗೆರೆ ರಂಗಪ್ಪ, ಆವರಗೆರೆ ವಾಸು, ತಿಮ್ಮಣ್ಣ, ಹನುಮಂತಪ್ಪ, ರುದ್ರೇಶ್, ಹರೀಶ್, ಸೋಮಲಾಪುರ ಹನುಮಂತಪ್ಪ, ಪಂಚಾಕ್ಷರಯ್ಯ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

