ದಿನದ ಸುದ್ದಿ
ಪರಿಶಿಷ್ಟರ ಕುಂದುಕೊರತೆ ಸಭೆ : ಜಿಲ್ಲೆಯಲ್ಲಿ ಅಸ್ಪೃಷ್ಯತೆ ನಿವಾರಣೆಗೆ ಕ್ರಮ ಕೈಗೊಳ್ಳಲು ಎಸ್.ಪಿ. ಸಿ.ಬಿ. ರಿಷ್ಯಂತ್ ಭರವಸೆ
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಜಾತೀಯತೆ ಇನ್ನೂ ಜೀವಂತವಾಗಿದೆ. ಹಲವು ದೇವಸ್ಥಾನಗಳಲ್ಲಿ ಇಂದಿಗೂ ಪ್ರವೇಶವಿರುವುದಿಲ್ಲ. ಕ್ಷೌರದಂಗಡಿಗಳಲ್ಲಿ ಈ ಜಾತಿಗಳರವರಿಗೆ ಕ್ಷೌರ ಮಾಡಲು ನಿರಾಕರಿಸುತ್ತಾರೆ.
ಹೋಟೆಲ್ಗಳಲ್ಲಿ ಸವರ್ಣೀಯರೊಂದಿಗೆ ಟೀ, ಕಾಫಿಯನ್ನು ಕೊಡಲು ನಿರಾಕರಿಸುತ್ತಾರೆ. ದೇವದಾಸಿ ಪದ್ಧತಿ, ಬೇವಿನ ಉಡುಗೆ ಆಚರಣೆಯಂತಹ ಅನಿಷ್ಟ ಪದ್ಧತಿಗಳಿಗೆ ಪರಿಶಿಷ್ಟ ಜಾತಿ ಪಂಗಡದವರು ಇಂದಿಗೂ ಬಲಿಯಾಗುತ್ತಿದ್ದು, ಅವುಗಳನ್ನು ತಪ್ಪಿಸಲು ಪೊಲೀಸ್ ಇಲಾಖೆ ಈ ಜನಾಂಗಗಳ ಪರವಾಗಿ ನಿಲ್ಲಬೇಕೆಂದು ಎಸ್.ಸಿ., ಎಸ್.ಟಿ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರುಗಳು ಒಕ್ಕೊರಲಿನಿಂದ ಆಗ್ರಹಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಕೇಳಿ ಬಂದ ಅಭಿಪ್ರಾಯಗಳು.
ಜಗಳೂರು ತಾಲ್ಲೂಕಿನ ಮುಖಂಡ ಸತೀಶ್ ಮಾತನಾಡಿ, ತಾಲ್ಲೂಕಿನ ಮಡ್ಡರಹಳ್ಳಿ ಚೌಡೇಶ್ವರಿ ದೇವಾಲಯದಲ್ಲಿ ಹಬ್ಬದ ಸಂದರ್ಭದಲ್ಲಿ ಹೆಣ್ಣುಮಕ್ಕಳಿಗೆ ಬೇವಿನುಡಿಗೆ, ನಾಲಿಗೆಗೆ ತಂತಿ ಸಿಕ್ಕಿಸಿಕೊಳ್ಳುವಂತಹ ಆಚರಣೆಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ಹೆಚ್ಚಾಗಿ ಅನುಸರಿಸುತ್ತಿದ್ದು, ಅವರುಗಳಿಗೆ ಅಧಿಕಾರಿಗಳ ಮಟ್ಟದಲ್ಲಿ ಸೂಕ್ತ ತಿಳುವಳಿಕೆ ನೀಡಿ ಇಂತಹ ಅನಿಷ್ಟ ಪದ್ಧತಿಗಳಿಂದ ಹೊರ ತರಲು ಸರ್ಕಾರ ಪ್ರಯತ್ನಿಸಲಿ.
ಹಾಗೂ ಇಂತಹ ಆಚರಣೆ ಕೈಗೊಳ್ಳಲು ಒತ್ತಾಯಿಸುವವರನ್ನು ಶಿಕ್ಷಿಸಬೇಕು. ಮತ್ತು ಹೊಸಗೆರೆ ಹಾಗೂ ಪಲ್ಲಾಗಟ್ಟೆ ಗ್ರಾಮದಲ್ಲಿರುವ ಬಾರ್ ಅನ್ನು ಬೇರೆ ಕಡೆ ಸ್ಥಳಾಂತರಿಸಬೇಕು. ಎಸ್.ಸಿ ಮತ್ತು ಎಸ್.ಟಿ ಹಾಸ್ಟೆಲ್ ಬಳಿ ದೊಡ್ಡ ಚರಂಡಿ ಹರಿಯುತ್ತಿದ್ದು ಸೊಳ್ಳೆ ಕಾಟ ಹೆಚ್ಚಾಗಿದೆ.
ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗೂ ಹಾಸ್ಟೆಲ್ ಬಳಿ ಪುಂಡ ಪೋಕರಿಗಳ ಕಾಟ ಹೆಚ್ಚಾಗಿದ್ದು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಎಸ್.ಪಿ. ಸಿ.ಬಿ.ರಿಷ್ಯಂತ್ ಅವರು ಪ್ರತಿಕ್ರಿಯಿಸಿ, ಇಂತಹ ಆಚರಣೆಗಳನ್ನು ತಡೆಯಲು ಕಾನೂನಾತ್ಮಕವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಜಗಳೂರು ಮುಖಂಡ ಹಾಲೇಶ್ ಬಿಳಿಚೋಡು ಮಾತನಾಡಿ, ಮೆದಗಿನಕೆರೆ, ಕೊರಟಿಗೆರೆ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಜೂಜು ಹಾವಳಿ ಹೆಚ್ಚಾಗಿದೆ. ಉಚ್ಚಂಗಿದುರ್ಗ ದೇವಸ್ಥಾನದಲ್ಲಿ ನಡೆಯುವ ಕಾರಹುಣ್ಣಿಮೆ ಹಬ್ಬಕ್ಕೆ ದೇವದಾಸಿಯರನ್ನು ಹೆಚ್ಚಾಗಿ ಬಳಸಿಕೊಳ್ಳುತ್ತಿದ್ದು, ನಮ್ಮ ಭಾಗದಿಂದ ಹೆಚ್ಚು ಜನ ಹೋಗುತ್ತಿದ್ದಾರೆ. ಇದನ್ನು ತಡೆಯಬೇಕು. ಬಿಳಿಚೋಡು ಗ್ರಾಮದ ಸರ್ಕಲ್ ನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಮನವಿ ಮಾಡಿದರು.
ಹರಿಹರ ತಾಲ್ಲೂಕಿನ ಮುಖಂಡರು ಮಾತನಾಡಿ, ತಾಲ್ಲೂಕಿನಲ್ಲಿ ವಾಹನ ಸಂಚಾರ ಹೆಚ್ಚಿದ್ದು ಟ್ರಾಫಿಕ್ ಸ್ಟೇಷನ್ ಆರಂಭಿಸಬೇಕು. ಹಾಗೂ ಅಂಬೇಡ್ಕರ್ ಭವನದಲ್ಲಿ ಕೆಎಎಸ್, ಐಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಸ್ಥಾಪಿಸಬೇಕು. ಬಾನುವಳ್ಳಿ ಗ್ರಾಮದಲ್ಲಿ 12 ಜನ ಮಾಜಿ ದೇವದಾಸಿಯರಿದ್ದು, ಅವರಿಗೆ ಮನೆ ಮಂಜೂರಾದರೂ ಇನ್ನೂ ಮನೆ ಕಟ್ಟಿಕೊಟ್ಟಿಲ್ಲ. ಆದಷ್ಟು ಬೇಗ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು.
ಎಸ್.ಪಿ ಮಾತನಾಡಿ, ಸಂಚಾರ ಪೊಲೀಸ್ ಠಾಣೆ ಮಂಜೂರಾತಿಗೆ ವಿವಿಧ ಪ್ರಕ್ರಿಯೆಗಳಿರುವುದರಿಂದ ತಡವಾಗುತ್ತದೆ. ಆದ್ದರಿಂದ ಟ್ರಾಫಿಕ್ ಪಾಯಿಂಟ್ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ನ್ಯಾಮತಿ ತಾಲ್ಲೂಕಿನ ಮುಖಂಡ ರಂಗನಾಥ.ಎ.ಕೆ ಮಾತನಾಡಿ, ಒಂದೂವರೆ ಎಕರೆ ಪ್ರದೇಶದಲ್ಲಿ ಹಿಂದು ಸ್ಮಶಾನ ಭೂಮಿ ನಿರ್ಮಿಸಿದ್ದು, ಪರಿಶಿಷ್ಟ ಜಾತಿಯ ಹೆಣ ಸುಡಲು ಸ್ಮಶಾನಕ್ಕೆ ಹೋದರೆ ಸುಡಲು ಅನುಮತಿ ನೀಡುವುದಿಲ್ಲ.
ಈ ಹಿಂದೆ ಅಂತ್ಯಕ್ರಿಯೆ ಮಾಡಲು ಒಳಗಡೆ ಪ್ರವೇಶಿಸಲು ಅವಕಾಶ ಕೊಡದೆ, ಶವ ಹೊರ ಹಾಕಿರುವ ಘಟನೆ ನಡೆದಿದೆ. ಇದರಿಂದ ಸಾಕಷ್ಟು ಬೇಸತ್ತಿದ್ದೆವೆ ಎಂದು ಅಳಲು ತೋಡಿಕೊಂಡರು.
ಎಸಿ ಮಮತ ಹೊಸಗೌಡರ್ ಮಾತನಾಡಿ, ಮನುಷ್ಯ ಬದುಕಿದ್ದಾಗ ಸಮಾನತೆಯಿಂದ ಬದುಕಲ್ಲ, ಸತ್ತ ಮೇಲಾದರೂ ಸಮಾನತೆಯಿಂದ ಇರಬೇಕು ಎಂಬ ಆಶಯದೊಂದಿಗೆ ಇರುವ ಸುತ್ತೋಲೆ ಮೇರೆಗೆ ಹಿಂದು ರುದ್ರ ಭೂಮಿ ಒದಗಿಸಲಾಗಿದೆ ಎಂದರು. ಎಸ್.ಪಿ ಪ್ರತಿಕ್ರಿಯಿಸಿ ಭೂಮಿ ಒದಗಿಸಿರುವುದು ಅಂತ್ಯಕ್ರಿಯೆ ಮಾಡಲೆಂದು. ಈ ರೀತಿ ಭೇದ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದರು.
ಮಲ್ಲಹಳ್ಳಿ ಗ್ರಾಮದಲ್ಲಿ ಹಬ್ಬ ಹರಿದಿನಗಳಲ್ಲಿ ಪರಿಶಿಷ್ಟರು ಊರ ಒಳಗೆ ಚಪ್ಪಲಿ ಹಾಕಿಕೊಂಡು ಹೋಗುವುದನ್ನು ಅಲ್ಲಿಯ ಗ್ರಾಮಸ್ಥರು ನಿಷೇಧಿಸಿದ್ದು, ಅಪ್ಪಿತಪ್ಪಿ ಒಳ ಹೋದರೆ ಜಾತಿ ನಿಂದನೆ ಮಾಡುತ್ತಾರೆ. ಈ ಗ್ರಾಮದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದು, ಐಪಿಎಲ್ ಬೆಟ್ಟಿಂಗ್ ದಂದೆ ಹೆಚ್ಚಾಗಿದೆ. ದಲಿತ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದು, ಸೂಕ್ತ ತನಿಖೆ ನಡೆಸಬೇಕು.
ದಾವಣಗೆರೆ ನಗರಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಕಾಣದಂತೆ ಫ್ಲೆಕ್ಸ್ ಕಟ್ಟಲಾಗುತ್ತಿದ್ದು, ಇದರಿಂದ ಪ್ರತಿಮೆ ಮರೆಯಾಗುತ್ತಿದೆ. ಇದನ್ನು ತಡೆಗಟ್ಟಬೇಕು. ಹೀಗೆ ಅನೇಕ ಕುಂದು ಕೊರತೆಗಳನ್ನು ಸ್ಥಳೀಯ ಮುಖಂಡರು ಹೇಳುವ ಮೂಲಕ ತಮ್ಮ ಅಳಲು ತೋಡಿಕೊಂಡರು.
ನೀರ್ಥಡಿ ಗ್ರಾಮದಲ್ಲಿ ಪೌರಾಣಿಕ ಇತಿಹಾಸ ಹೊಂದಿರುವ ರಂಗನಾಥಸ್ವಾಮಿ ದೇವಾಲಯದಲ್ಲಿ ಇಂದಿಗೂ ಮಾದಿಗರನ್ನು ಒಳಗಡೆ ಪ್ರವೇಶಿಸಲು ಬಿಡದೆ ದೌರ್ಜನ್ಯವೆಸಗುತ್ತಿದ್ದು, ಅವರಿಗೆ ರಕ್ಷಣೆ ಒದಗಿಸಬೇಕು.
ತಾನು ಹುಟ್ಟಿದ್ದು ಇಲ್ಲೆ ಆದರೂ ಇದುವರೆಗೂ ದೇವಸ್ಥಾನದ ಒಳಗಡೆ ಪ್ರವೇಶಿಸಲಾಗಿಲ್ಲ ಎಂದು ಮಂಜುನಾಥ್ ಎಂಬುವವರು ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಎಸ್.ಪಿ. ಪ್ರತಿಕ್ರಿಯಿಸಿ ಇದು ಸತ್ಯವೇ ಆಗಿದ್ದರೆ, ಸೂಕ್ತ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಸೂಕ್ರ ಕ್ರಮ ಕೈಗೊಳ್ಳಿ ಎಂದರು.
ಚನ್ನಗಿರಿಯ ಗೋವಿಂದಪ್ಪ ಮಾತನಾಡಿ, ಮದ್ಯದ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಗೆ ತೆರೆಯುತ್ತಿದ್ದು ಇದರಿಂದ ಮಕ್ಕಳಿಗೆ, ಮಹಿಳೆಯರಿಗೆ, ಸಆರ್ವಜನಿಕರಿಗೆ ತೊಂದರೆಯಾಗುತ್ತಿದ್ದು ನಿಯಮದಂತೆ ಬೆಳಿಗ್ಗೆ 10 ರ ನಂತರ ಮದ್ಯದ ಅಂಗಡಿ ತೆರೆಯಲು ಸೂಚಿಸಬೇಕೆಂದು ಮನವಿ ಮಾಡಿದರು.
ಹರಿಹರದ ಮಹಾಂತೇಶ ಮಾತನಾಡಿ, ಪರಿಶಿಷ್ಟರ ಶವಸಂಸ್ಕಾರಕ್ಕಾಗಿ 24.10 ಯೋಜನೆಯಲ್ಲಿ 5 ಸಾವಿರ ನೀಡಲಾಗುತ್ತಿದ್ದು ಶವ ಸಂಸ್ಕಾರದ ಹಣ ಬರಲು ತಡವಾಗುತಿದೆ ಎಂದರು.
ಉಪವಿಭಾಗಾಧಿಕಾರಿ ಪ್ರತಿಕ್ರಿಯಿಸಿ ಅಂತ್ಯ ಸಂಸ್ಕಾರದ ಹಣ ಸೀನಿಯಾರಿಟಿ ಪ್ರಕಾರ ಬರುತ್ತದೆ. ಹಾಗಾಗಿ ತಡವಾದರು ಬರುತ್ತದೆ ಎಂದರು.
ನ್ಯಾಮತಿಯ ರಂಗನಾಥ ಮಾತನಾಡಿ, ತಾಲ್ಲೂಕಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆಗಳು ಹೆಚ್ಚಾಗಿದ್ದು ಇದರಲ್ಲಿ ಭಾಗವಹಿಸುವ ಯುವಕರು ಅನಾಹುತ ಮಾಡಿಕೊಳ್ಳುತ್ತಾರೆ. ಹಾಗಾಗಿ ಈ ಸ್ಪರ್ಧೆ ನಿಲ್ಲಿಸಿ ಎಂದರು.
ಕುಂದುವಾಡ ಮಂಜುನಾಥ್ ಮಾತನಾಡಿ, ಪರಿಶಿಷ್ಟರ ಮೇಲೆ ಮುಂದುವರೆದ ಜನಾಂಗಗಳವರು ಸುಳ್ಳು ದೂರು ನೀಡುತ್ತಾರೆ. ಹಾಗಾಗಿ ತಕ್ಷಣ ಎಫ್ಐಆರ್ ಆಗುತ್ತದೆ. ಹಾಗಾಗದಂತೆ ತಡೆಯಿರಿ ಎಂದಾಗ ಎಸ್.ಪಿ ಅವರು ಪ್ರತಿಕ್ರಿಯಿಸಿ ದೂರು ನೀಡಿದ ಮೇಲೆ ಎಫ್.ಐ.ಆರ್ ಮಾಡಲು ಬರುವುದಿಲ್ಲ. ರಾಜಿ ಪಂಚಾಯತಿಗೆ ಅವಕಾಶವಿಲ್ಲ ಎಂದರು.
ಹಿಂಡಸಘಟ್ಟ ಹನುಮಂತಪ್ಪ ಮಾತನಾಡಿ, ಮನೋಜ್ ಎಂಬ ದಲಿತ ಯುವಕ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದು ಹುಡುಗಿ ಕಡೆಯವರು ಹುಡುಗಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಹುಡುಗ ಹುಡುಗಿ ವಯಸ್ಕರರಾಗಿದ್ದು ದಲಿತ ಯುವಕನಿಗೆ ನ್ಯಾಯ ಒದಗಿಸಿ ಎಂದರು.
ಜ್ಯೋತಿಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ಹಾವಳಿ ಹೆಚ್ಚಾಗಿದ್ದು ನಿಯಂತ್ರಿಸಬೇಕು ಎಂದರು. ಎಸ್.ಪಿ ಅವರು ಪ್ರತಿಕ್ರಿಯಿಸಿ ಈ ಬಗೆಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುವುದು ಎಂದರು.
ಕೊನೆಯಲ್ಲಿ ಎಸ್.ಪಿ ಅವರು ಮಾತನಾಡಿ, ಯಾವುದೇ ಅಪರಾಧ ಪ್ರಕರಣಗಳು ಕಂಡುಬಂದರೆ ತಕ್ಷಣ 112 ಕ್ಕೆ ಕರೆಮಾಡಿ. ಬೇಕಿದ್ದರೆ ತಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಹೀಗೆ ಕರೆ ಮಾಡುವುದರಿಂದ ಪೊಲೀಸರು ತಕ್ಷಣ ಸ್ಪಂದಿಸುತ್ತಾರೆ ಎಂದರು.
ಹಾಗೂ ಇನ್ನೂ ಮುಂದಿನ ಸಭೆಗಳು ಮೂರು ತಿಂಗಳಿಗೊಮ್ಮೆ ನಾಲ್ಕನೆ ಶನಿವಾರ ಕಡ್ಡಾಯವಾಗಿ ನಡೆಯಲಿದ್ದು ಈ ಕುರಿತು ಪತ್ರಿಕೆ ಹೇಳಿಕೆ ನೀಡಲಾಗುವುದು. ಯಾವುದೇ ಮುಖಂಡರಿಗೆ ಕರೆ ಮಾಡಲಾಗುವುದಿಲ್ಲ. ಹಾಗಾಗಿ ಪತ್ರಿಕೆ ಸುದ್ದಿ ನೋಡಿಕೊಂಡು ಸಭೆಗೆ ಹಾಜರಾಗಿ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖ ಅಧಿಕಾರಿ ವಿಜಯ್ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಪಂಗಡಗಳ ಸಂಘಟನೆ ಮುಖಂಡರಾದ ಗುಮ್ಮನೂರು ಮಲ್ಲಿಕಾರ್ಜುನ, ಹೆಗ್ಗೆರೆ ರಂಗಪ್ಪ, ಆವರಗೆರೆ ವಾಸು, ತಿಮ್ಮಣ್ಣ, ಹನುಮಂತಪ್ಪ, ರುದ್ರೇಶ್, ಹರೀಶ್, ಸೋಮಲಾಪುರ ಹನುಮಂತಪ್ಪ, ಪಂಚಾಕ್ಷರಯ್ಯ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243