ದಿನದ ಸುದ್ದಿ
ಪರಿಶಿಷ್ಟರ ಕುಂದುಕೊರತೆ ಸಭೆ : ಜಿಲ್ಲೆಯಲ್ಲಿ ಅಸ್ಪೃಷ್ಯತೆ ನಿವಾರಣೆಗೆ ಕ್ರಮ ಕೈಗೊಳ್ಳಲು ಎಸ್.ಪಿ. ಸಿ.ಬಿ. ರಿಷ್ಯಂತ್ ಭರವಸೆ
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಜಾತೀಯತೆ ಇನ್ನೂ ಜೀವಂತವಾಗಿದೆ. ಹಲವು ದೇವಸ್ಥಾನಗಳಲ್ಲಿ ಇಂದಿಗೂ ಪ್ರವೇಶವಿರುವುದಿಲ್ಲ. ಕ್ಷೌರದಂಗಡಿಗಳಲ್ಲಿ ಈ ಜಾತಿಗಳರವರಿಗೆ ಕ್ಷೌರ ಮಾಡಲು ನಿರಾಕರಿಸುತ್ತಾರೆ.
ಹೋಟೆಲ್ಗಳಲ್ಲಿ ಸವರ್ಣೀಯರೊಂದಿಗೆ ಟೀ, ಕಾಫಿಯನ್ನು ಕೊಡಲು ನಿರಾಕರಿಸುತ್ತಾರೆ. ದೇವದಾಸಿ ಪದ್ಧತಿ, ಬೇವಿನ ಉಡುಗೆ ಆಚರಣೆಯಂತಹ ಅನಿಷ್ಟ ಪದ್ಧತಿಗಳಿಗೆ ಪರಿಶಿಷ್ಟ ಜಾತಿ ಪಂಗಡದವರು ಇಂದಿಗೂ ಬಲಿಯಾಗುತ್ತಿದ್ದು, ಅವುಗಳನ್ನು ತಪ್ಪಿಸಲು ಪೊಲೀಸ್ ಇಲಾಖೆ ಈ ಜನಾಂಗಗಳ ಪರವಾಗಿ ನಿಲ್ಲಬೇಕೆಂದು ಎಸ್.ಸಿ., ಎಸ್.ಟಿ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರುಗಳು ಒಕ್ಕೊರಲಿನಿಂದ ಆಗ್ರಹಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಕೇಳಿ ಬಂದ ಅಭಿಪ್ರಾಯಗಳು.
ಜಗಳೂರು ತಾಲ್ಲೂಕಿನ ಮುಖಂಡ ಸತೀಶ್ ಮಾತನಾಡಿ, ತಾಲ್ಲೂಕಿನ ಮಡ್ಡರಹಳ್ಳಿ ಚೌಡೇಶ್ವರಿ ದೇವಾಲಯದಲ್ಲಿ ಹಬ್ಬದ ಸಂದರ್ಭದಲ್ಲಿ ಹೆಣ್ಣುಮಕ್ಕಳಿಗೆ ಬೇವಿನುಡಿಗೆ, ನಾಲಿಗೆಗೆ ತಂತಿ ಸಿಕ್ಕಿಸಿಕೊಳ್ಳುವಂತಹ ಆಚರಣೆಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ಹೆಚ್ಚಾಗಿ ಅನುಸರಿಸುತ್ತಿದ್ದು, ಅವರುಗಳಿಗೆ ಅಧಿಕಾರಿಗಳ ಮಟ್ಟದಲ್ಲಿ ಸೂಕ್ತ ತಿಳುವಳಿಕೆ ನೀಡಿ ಇಂತಹ ಅನಿಷ್ಟ ಪದ್ಧತಿಗಳಿಂದ ಹೊರ ತರಲು ಸರ್ಕಾರ ಪ್ರಯತ್ನಿಸಲಿ.
ಹಾಗೂ ಇಂತಹ ಆಚರಣೆ ಕೈಗೊಳ್ಳಲು ಒತ್ತಾಯಿಸುವವರನ್ನು ಶಿಕ್ಷಿಸಬೇಕು. ಮತ್ತು ಹೊಸಗೆರೆ ಹಾಗೂ ಪಲ್ಲಾಗಟ್ಟೆ ಗ್ರಾಮದಲ್ಲಿರುವ ಬಾರ್ ಅನ್ನು ಬೇರೆ ಕಡೆ ಸ್ಥಳಾಂತರಿಸಬೇಕು. ಎಸ್.ಸಿ ಮತ್ತು ಎಸ್.ಟಿ ಹಾಸ್ಟೆಲ್ ಬಳಿ ದೊಡ್ಡ ಚರಂಡಿ ಹರಿಯುತ್ತಿದ್ದು ಸೊಳ್ಳೆ ಕಾಟ ಹೆಚ್ಚಾಗಿದೆ.
ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗೂ ಹಾಸ್ಟೆಲ್ ಬಳಿ ಪುಂಡ ಪೋಕರಿಗಳ ಕಾಟ ಹೆಚ್ಚಾಗಿದ್ದು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಎಸ್.ಪಿ. ಸಿ.ಬಿ.ರಿಷ್ಯಂತ್ ಅವರು ಪ್ರತಿಕ್ರಿಯಿಸಿ, ಇಂತಹ ಆಚರಣೆಗಳನ್ನು ತಡೆಯಲು ಕಾನೂನಾತ್ಮಕವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಜಗಳೂರು ಮುಖಂಡ ಹಾಲೇಶ್ ಬಿಳಿಚೋಡು ಮಾತನಾಡಿ, ಮೆದಗಿನಕೆರೆ, ಕೊರಟಿಗೆರೆ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಜೂಜು ಹಾವಳಿ ಹೆಚ್ಚಾಗಿದೆ. ಉಚ್ಚಂಗಿದುರ್ಗ ದೇವಸ್ಥಾನದಲ್ಲಿ ನಡೆಯುವ ಕಾರಹುಣ್ಣಿಮೆ ಹಬ್ಬಕ್ಕೆ ದೇವದಾಸಿಯರನ್ನು ಹೆಚ್ಚಾಗಿ ಬಳಸಿಕೊಳ್ಳುತ್ತಿದ್ದು, ನಮ್ಮ ಭಾಗದಿಂದ ಹೆಚ್ಚು ಜನ ಹೋಗುತ್ತಿದ್ದಾರೆ. ಇದನ್ನು ತಡೆಯಬೇಕು. ಬಿಳಿಚೋಡು ಗ್ರಾಮದ ಸರ್ಕಲ್ ನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಮನವಿ ಮಾಡಿದರು.
ಹರಿಹರ ತಾಲ್ಲೂಕಿನ ಮುಖಂಡರು ಮಾತನಾಡಿ, ತಾಲ್ಲೂಕಿನಲ್ಲಿ ವಾಹನ ಸಂಚಾರ ಹೆಚ್ಚಿದ್ದು ಟ್ರಾಫಿಕ್ ಸ್ಟೇಷನ್ ಆರಂಭಿಸಬೇಕು. ಹಾಗೂ ಅಂಬೇಡ್ಕರ್ ಭವನದಲ್ಲಿ ಕೆಎಎಸ್, ಐಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಸ್ಥಾಪಿಸಬೇಕು. ಬಾನುವಳ್ಳಿ ಗ್ರಾಮದಲ್ಲಿ 12 ಜನ ಮಾಜಿ ದೇವದಾಸಿಯರಿದ್ದು, ಅವರಿಗೆ ಮನೆ ಮಂಜೂರಾದರೂ ಇನ್ನೂ ಮನೆ ಕಟ್ಟಿಕೊಟ್ಟಿಲ್ಲ. ಆದಷ್ಟು ಬೇಗ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು.
ಎಸ್.ಪಿ ಮಾತನಾಡಿ, ಸಂಚಾರ ಪೊಲೀಸ್ ಠಾಣೆ ಮಂಜೂರಾತಿಗೆ ವಿವಿಧ ಪ್ರಕ್ರಿಯೆಗಳಿರುವುದರಿಂದ ತಡವಾಗುತ್ತದೆ. ಆದ್ದರಿಂದ ಟ್ರಾಫಿಕ್ ಪಾಯಿಂಟ್ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ನ್ಯಾಮತಿ ತಾಲ್ಲೂಕಿನ ಮುಖಂಡ ರಂಗನಾಥ.ಎ.ಕೆ ಮಾತನಾಡಿ, ಒಂದೂವರೆ ಎಕರೆ ಪ್ರದೇಶದಲ್ಲಿ ಹಿಂದು ಸ್ಮಶಾನ ಭೂಮಿ ನಿರ್ಮಿಸಿದ್ದು, ಪರಿಶಿಷ್ಟ ಜಾತಿಯ ಹೆಣ ಸುಡಲು ಸ್ಮಶಾನಕ್ಕೆ ಹೋದರೆ ಸುಡಲು ಅನುಮತಿ ನೀಡುವುದಿಲ್ಲ.
ಈ ಹಿಂದೆ ಅಂತ್ಯಕ್ರಿಯೆ ಮಾಡಲು ಒಳಗಡೆ ಪ್ರವೇಶಿಸಲು ಅವಕಾಶ ಕೊಡದೆ, ಶವ ಹೊರ ಹಾಕಿರುವ ಘಟನೆ ನಡೆದಿದೆ. ಇದರಿಂದ ಸಾಕಷ್ಟು ಬೇಸತ್ತಿದ್ದೆವೆ ಎಂದು ಅಳಲು ತೋಡಿಕೊಂಡರು.
ಎಸಿ ಮಮತ ಹೊಸಗೌಡರ್ ಮಾತನಾಡಿ, ಮನುಷ್ಯ ಬದುಕಿದ್ದಾಗ ಸಮಾನತೆಯಿಂದ ಬದುಕಲ್ಲ, ಸತ್ತ ಮೇಲಾದರೂ ಸಮಾನತೆಯಿಂದ ಇರಬೇಕು ಎಂಬ ಆಶಯದೊಂದಿಗೆ ಇರುವ ಸುತ್ತೋಲೆ ಮೇರೆಗೆ ಹಿಂದು ರುದ್ರ ಭೂಮಿ ಒದಗಿಸಲಾಗಿದೆ ಎಂದರು. ಎಸ್.ಪಿ ಪ್ರತಿಕ್ರಿಯಿಸಿ ಭೂಮಿ ಒದಗಿಸಿರುವುದು ಅಂತ್ಯಕ್ರಿಯೆ ಮಾಡಲೆಂದು. ಈ ರೀತಿ ಭೇದ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದರು.
ಮಲ್ಲಹಳ್ಳಿ ಗ್ರಾಮದಲ್ಲಿ ಹಬ್ಬ ಹರಿದಿನಗಳಲ್ಲಿ ಪರಿಶಿಷ್ಟರು ಊರ ಒಳಗೆ ಚಪ್ಪಲಿ ಹಾಕಿಕೊಂಡು ಹೋಗುವುದನ್ನು ಅಲ್ಲಿಯ ಗ್ರಾಮಸ್ಥರು ನಿಷೇಧಿಸಿದ್ದು, ಅಪ್ಪಿತಪ್ಪಿ ಒಳ ಹೋದರೆ ಜಾತಿ ನಿಂದನೆ ಮಾಡುತ್ತಾರೆ. ಈ ಗ್ರಾಮದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದು, ಐಪಿಎಲ್ ಬೆಟ್ಟಿಂಗ್ ದಂದೆ ಹೆಚ್ಚಾಗಿದೆ. ದಲಿತ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದು, ಸೂಕ್ತ ತನಿಖೆ ನಡೆಸಬೇಕು.
ದಾವಣಗೆರೆ ನಗರಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಕಾಣದಂತೆ ಫ್ಲೆಕ್ಸ್ ಕಟ್ಟಲಾಗುತ್ತಿದ್ದು, ಇದರಿಂದ ಪ್ರತಿಮೆ ಮರೆಯಾಗುತ್ತಿದೆ. ಇದನ್ನು ತಡೆಗಟ್ಟಬೇಕು. ಹೀಗೆ ಅನೇಕ ಕುಂದು ಕೊರತೆಗಳನ್ನು ಸ್ಥಳೀಯ ಮುಖಂಡರು ಹೇಳುವ ಮೂಲಕ ತಮ್ಮ ಅಳಲು ತೋಡಿಕೊಂಡರು.
ನೀರ್ಥಡಿ ಗ್ರಾಮದಲ್ಲಿ ಪೌರಾಣಿಕ ಇತಿಹಾಸ ಹೊಂದಿರುವ ರಂಗನಾಥಸ್ವಾಮಿ ದೇವಾಲಯದಲ್ಲಿ ಇಂದಿಗೂ ಮಾದಿಗರನ್ನು ಒಳಗಡೆ ಪ್ರವೇಶಿಸಲು ಬಿಡದೆ ದೌರ್ಜನ್ಯವೆಸಗುತ್ತಿದ್ದು, ಅವರಿಗೆ ರಕ್ಷಣೆ ಒದಗಿಸಬೇಕು.
ತಾನು ಹುಟ್ಟಿದ್ದು ಇಲ್ಲೆ ಆದರೂ ಇದುವರೆಗೂ ದೇವಸ್ಥಾನದ ಒಳಗಡೆ ಪ್ರವೇಶಿಸಲಾಗಿಲ್ಲ ಎಂದು ಮಂಜುನಾಥ್ ಎಂಬುವವರು ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಎಸ್.ಪಿ. ಪ್ರತಿಕ್ರಿಯಿಸಿ ಇದು ಸತ್ಯವೇ ಆಗಿದ್ದರೆ, ಸೂಕ್ತ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ಸೂಕ್ರ ಕ್ರಮ ಕೈಗೊಳ್ಳಿ ಎಂದರು.
ಚನ್ನಗಿರಿಯ ಗೋವಿಂದಪ್ಪ ಮಾತನಾಡಿ, ಮದ್ಯದ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಗೆ ತೆರೆಯುತ್ತಿದ್ದು ಇದರಿಂದ ಮಕ್ಕಳಿಗೆ, ಮಹಿಳೆಯರಿಗೆ, ಸಆರ್ವಜನಿಕರಿಗೆ ತೊಂದರೆಯಾಗುತ್ತಿದ್ದು ನಿಯಮದಂತೆ ಬೆಳಿಗ್ಗೆ 10 ರ ನಂತರ ಮದ್ಯದ ಅಂಗಡಿ ತೆರೆಯಲು ಸೂಚಿಸಬೇಕೆಂದು ಮನವಿ ಮಾಡಿದರು.
ಹರಿಹರದ ಮಹಾಂತೇಶ ಮಾತನಾಡಿ, ಪರಿಶಿಷ್ಟರ ಶವಸಂಸ್ಕಾರಕ್ಕಾಗಿ 24.10 ಯೋಜನೆಯಲ್ಲಿ 5 ಸಾವಿರ ನೀಡಲಾಗುತ್ತಿದ್ದು ಶವ ಸಂಸ್ಕಾರದ ಹಣ ಬರಲು ತಡವಾಗುತಿದೆ ಎಂದರು.
ಉಪವಿಭಾಗಾಧಿಕಾರಿ ಪ್ರತಿಕ್ರಿಯಿಸಿ ಅಂತ್ಯ ಸಂಸ್ಕಾರದ ಹಣ ಸೀನಿಯಾರಿಟಿ ಪ್ರಕಾರ ಬರುತ್ತದೆ. ಹಾಗಾಗಿ ತಡವಾದರು ಬರುತ್ತದೆ ಎಂದರು.
ನ್ಯಾಮತಿಯ ರಂಗನಾಥ ಮಾತನಾಡಿ, ತಾಲ್ಲೂಕಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆಗಳು ಹೆಚ್ಚಾಗಿದ್ದು ಇದರಲ್ಲಿ ಭಾಗವಹಿಸುವ ಯುವಕರು ಅನಾಹುತ ಮಾಡಿಕೊಳ್ಳುತ್ತಾರೆ. ಹಾಗಾಗಿ ಈ ಸ್ಪರ್ಧೆ ನಿಲ್ಲಿಸಿ ಎಂದರು.
ಕುಂದುವಾಡ ಮಂಜುನಾಥ್ ಮಾತನಾಡಿ, ಪರಿಶಿಷ್ಟರ ಮೇಲೆ ಮುಂದುವರೆದ ಜನಾಂಗಗಳವರು ಸುಳ್ಳು ದೂರು ನೀಡುತ್ತಾರೆ. ಹಾಗಾಗಿ ತಕ್ಷಣ ಎಫ್ಐಆರ್ ಆಗುತ್ತದೆ. ಹಾಗಾಗದಂತೆ ತಡೆಯಿರಿ ಎಂದಾಗ ಎಸ್.ಪಿ ಅವರು ಪ್ರತಿಕ್ರಿಯಿಸಿ ದೂರು ನೀಡಿದ ಮೇಲೆ ಎಫ್.ಐ.ಆರ್ ಮಾಡಲು ಬರುವುದಿಲ್ಲ. ರಾಜಿ ಪಂಚಾಯತಿಗೆ ಅವಕಾಶವಿಲ್ಲ ಎಂದರು.
ಹಿಂಡಸಘಟ್ಟ ಹನುಮಂತಪ್ಪ ಮಾತನಾಡಿ, ಮನೋಜ್ ಎಂಬ ದಲಿತ ಯುವಕ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದು ಹುಡುಗಿ ಕಡೆಯವರು ಹುಡುಗಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಹುಡುಗ ಹುಡುಗಿ ವಯಸ್ಕರರಾಗಿದ್ದು ದಲಿತ ಯುವಕನಿಗೆ ನ್ಯಾಯ ಒದಗಿಸಿ ಎಂದರು.
ಜ್ಯೋತಿಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ಹಾವಳಿ ಹೆಚ್ಚಾಗಿದ್ದು ನಿಯಂತ್ರಿಸಬೇಕು ಎಂದರು. ಎಸ್.ಪಿ ಅವರು ಪ್ರತಿಕ್ರಿಯಿಸಿ ಈ ಬಗೆಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುವುದು ಎಂದರು.
ಕೊನೆಯಲ್ಲಿ ಎಸ್.ಪಿ ಅವರು ಮಾತನಾಡಿ, ಯಾವುದೇ ಅಪರಾಧ ಪ್ರಕರಣಗಳು ಕಂಡುಬಂದರೆ ತಕ್ಷಣ 112 ಕ್ಕೆ ಕರೆಮಾಡಿ. ಬೇಕಿದ್ದರೆ ತಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಹೀಗೆ ಕರೆ ಮಾಡುವುದರಿಂದ ಪೊಲೀಸರು ತಕ್ಷಣ ಸ್ಪಂದಿಸುತ್ತಾರೆ ಎಂದರು.
ಹಾಗೂ ಇನ್ನೂ ಮುಂದಿನ ಸಭೆಗಳು ಮೂರು ತಿಂಗಳಿಗೊಮ್ಮೆ ನಾಲ್ಕನೆ ಶನಿವಾರ ಕಡ್ಡಾಯವಾಗಿ ನಡೆಯಲಿದ್ದು ಈ ಕುರಿತು ಪತ್ರಿಕೆ ಹೇಳಿಕೆ ನೀಡಲಾಗುವುದು. ಯಾವುದೇ ಮುಖಂಡರಿಗೆ ಕರೆ ಮಾಡಲಾಗುವುದಿಲ್ಲ. ಹಾಗಾಗಿ ಪತ್ರಿಕೆ ಸುದ್ದಿ ನೋಡಿಕೊಂಡು ಸಭೆಗೆ ಹಾಜರಾಗಿ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖ ಅಧಿಕಾರಿ ವಿಜಯ್ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಪಂಗಡಗಳ ಸಂಘಟನೆ ಮುಖಂಡರಾದ ಗುಮ್ಮನೂರು ಮಲ್ಲಿಕಾರ್ಜುನ, ಹೆಗ್ಗೆರೆ ರಂಗಪ್ಪ, ಆವರಗೆರೆ ವಾಸು, ತಿಮ್ಮಣ್ಣ, ಹನುಮಂತಪ್ಪ, ರುದ್ರೇಶ್, ಹರೀಶ್, ಸೋಮಲಾಪುರ ಹನುಮಂತಪ್ಪ, ಪಂಚಾಕ್ಷರಯ್ಯ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.
ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.
ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.
ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
ದಿನದ ಸುದ್ದಿ16 hours agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ15 hours agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ54 minutes agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ

