ಲೈಫ್ ಸ್ಟೈಲ್
‘ಸ್ಕಿಜೋಫ್ರೇನಿಯ’ ವಾಸಿಯಾಗದ ಖಾಯಿಲೆ ಏನಲ್ಲ..!
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಒತ್ತಡದ ಜೀವನಶೈಲಿಯಿಂದ ಜನರಲ್ಲಿ ಅನೇಕಾನೇಕ ಮಾನಸಿಕ ಸಮಸ್ಯೆಗಳು ಕಾಣಿಸುತ್ತಿರುವುದನ್ನು ನಾವು ಗಮನಿಸಿರುತ್ತೇವೆ. ಅವುಗಳಲ್ಲಿ ಖಿನ್ನತೆ, ಹೊಂದಾಣಿಕೆ ಸಮಸ್ಯೆ ಹೀಗೆ ಮುಂದುವರೆದು ಸ್ಕಿಜೋಫ್ರೇನಿಯವರೆಗೂ ಬೆಳೆದ ಉದಾಹರಣೆಗಳು ನಮ್ಮ ಸುತ್ತಮುತ್ತ ಕಾಣುತ್ತೇವೆ. ಅಂತಹ ಮಾನಸಿಕ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆತರೆ ಖಂಡಿತ ಸಾಮಾನ್ಯರಂತೆ ಜೀವಿಸುವುದರಲ್ಲಿ ಯಾವ ಅನುಮಾನವು ಇಲ್ಲ.
ಆದರೆ ಭಾರತದಂತಹ ಹಿಂದುಳಿದ ರಾಷ್ಟ್ರಗಳಲ್ಲಿ ಜನ ಮಾನಸಿಕ ಸಮಸ್ಯೆಗಳನ್ನ ಪಾಪದ ಫಲ, ದೇವರ ಶಾಪ, ಭೂತ ಚೇಷ್ಠೆ ಇನ್ನು ಮುಂತಾದ ಮೂಢನಂಬಿಕೆಯ ದೃಷ್ಠಿಕೋನದಲ್ಲಿ ನೋಡಿ ರೋಗಿಗಳನ್ನ ನರಕಕ್ಕೆ ತಳ್ಳಲಾಗುತ್ತಿದೆ. ಹೆಚ್ಚುತ್ತಿರುವ ಸ್ಕಿಜೋಫ್ರೇನಿಯದಂತಹ ಸಮಸ್ಯೆಯನ್ನು ನಿಯಂತ್ರಿಸುವ ಸಲುವಾಗಿ ವಿಶ್ವಸಂಸ್ಥೆ ಪ್ರತಿ ವರ್ಷ ಮೇ ತಿಂಗಳ 24ರಂದು ವಿಶ್ವ ಸ್ಕಿಜೋಫ್ರೇನಿಯ ದಿನಾಚರಣೆಯನ್ನ ಆಚರಣೆಯನ್ನು ಆಚರಣೆಗೆ ತಂದು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನ ಕೈಗೊಂಡಿದೆ.
ಈ ಕಾಯಿಲೆಯು ಪ್ರೌಢಾವಸ್ಥೆ ಅಂದರೆ 15-25ರ ವಯಸ್ಸಿನವರು ಹಾಗೂ ಮೇಲ್ಪಟ್ಟವರಲ್ಲಿ ಕಂಡುಬರುತ್ತದೆ. ಜೀವನದಲ್ಲಿ ತೀವ್ರವಾದ ಸಂಕಟಗಳಿಗೆ ಸಿಲುಕಿದಾಗ ಈ ಖಾಯಿಲೆ ಬರುವ ಸಂಭವ ಹೆಚ್ಚು. ಈ ಖಾಯಿಲೆಗೆ ತುತ್ತಾದ ವ್ಯಕ್ತಿಯು ಮಾನಸಿಕ ಸಮತೋಲನವನ್ನು ಕಳೆದುಕೊಳ್ಳುತ್ತಾನೆ. ಋಣಾತ್ಮಾಕ ಆಲೋಚನೆ, ನಿರಾಸಕ್ತಿ, ಶುಭ್ರತೆ ಹಾಗೂ ಆರೋಗ್ಯದ ನಿರ್ಲಕ್ಷ್ಯ, ತನ್ನಷ್ಟಕ್ಕೆ ತಾನೆ ನಗುವುದು, ವ್ಯಕ್ತಿಯ ಮಾತು ಹಾಗೂ ನಡವಳಿಕೆಯಲ್ಲಿ ಆಕ್ರಮಣ ಪ್ರವೃತ್ತಿ, ಅತಿಯಾದ ಅನುಮಾನ ಮೊದಲಾದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
ರೋಗಿಯು ಎಲ್ಲಾ ಸಮಯದಲ್ಲೂ ಈ ಮೇಲಿನ ರೀತಿಯೆ ಇರಬೇಕೆಂದಿಲ್ಲ ಈ ಲಕ್ಷಣಗಳು ಆಗಾಗ ಕಾಣಿಸಿಕೊಳ್ಳಬಹುದು. ಇನ್ನು ತೀವ್ರವಾದಂತೆ ವ್ಯಕ್ತಿ ತೀವ್ರ ಭ್ರಮೆಗೊಳಗಾಗುತ್ತಾನೆ. ಯಾರದ್ದೋ ಮಾತು ಕೇಳಿದಂತೆ, ಏನನ್ನೋ ಸ್ಪರ್ಶಿಸಿದಂತೆ, ಏನೋ ನೋಡಿದಂತೆ, ವಾಸನೆಯನ್ನು ಗ್ರಹಿಸಿದಂತೆ, ತನ್ನನ್ನು ತಾನು ಸಾಧಕನೆಂದು ಭಾವಿಸಿ ಭ್ರಮೆಗೊಳಗಾಗುತ್ತಾನೆ.
ಕೆಲವೊಮ್ಮೆ ಸುಳ್ಳುಗಳನ್ನು ಸತ್ಯವೆಂದು ಭಾವಿಸುತ್ತಾರೆ, ತಮ್ಮನ್ನು ಯಾರೋ ನಿಯಂತ್ರಿಸುತ್ತಿದ್ದಾರೆ ಎಂದು ಭಾವಿಸುವುದು, ಒಮ್ಮೆಲೆ ಮಾತು ನಿಲ್ಲಿಸುವುದು, ಪ್ರಶ್ನೆಗಳಿಗೆ ಅಸಂಬದ್ಧ ಉತ್ತರ ನೀಡುವುದು, ಸರಳ ಕೆಲಸಗಳಲ್ಲೂ ಗಮನ ಹರಿಸಲು ಕಷ್ಟವಾಗುವುದು, ಒಂಟಿಯಾಗಿರುವುದು, ಮುಖ ಭಾವರಹಿತವಾಗುವುದು, ಯಾವಾಗಲೂ ಒಂದೇ ದ್ವನಿಯಲ್ಲಿ ಮಾತನಾಡುವುದು ಈ ಲಕ್ಷಣಗಳನ್ನು ಸಹ ಕಾಣಬಹುದಾಗಿದೆ.
ಈ ಕಾಯಿಲೆಗೆ ನಿಖರ ಕಾರಣವನ್ನು ಗುರುತಿಸಲು ಸಂಶೋಧಕರಿಗೂ ಇನ್ನೂ ಸಾಧ್ಯವಾಗಿಲ್ಲ. ಸಂಶೋಧಕರು ಕೆಲವು ಕಾರಣಗಳನ್ನು ಊಹಿಸಿದ್ದಾರೆ. ಮೆದುಳಿನ ರಚನೆ, ವಂಶವಾಹಿ, ಮದ್ಯ ಸೇವನೆ, ಅತಿಯಾದ ಔಷಧಿಗಳ ಸೇವನೆ, ಗರ್ಭಿಣಿಯರು ಪೌಷ್ಠಿಕ ಆಹಾರ ತೆಗೆದುಕೊಳ್ಳದಿದ್ದಲ್ಲಿ ಮಗುವಿಗೆ ಚಿತ್ತವಿಕಲತೆ ಕಾಣಿಸಿಕೊಳ್ಳಬಹುದು.
ಈ ಖಾಯಿಲೆಗೆ ನಿರಂತರ ಚಿಕಿತ್ಸೆಯನ್ನು ನೀಡುವುದರಿಂದ ರೋಗಿಯನ್ನು ಪೂರ್ಣ ಪ್ರಮಾಣ ಆರೋಗ್ಯವಂತನಾಗಿ ಹಾಗೂ ಎಲ್ಲರಂತೆ ಜೀವಿಸುವ ಹಾಗೆ ಮಾಡಬಹುದಾಗಿದ್ದು ಖಾಯಿಲೆ ವಾಸಿಯಾಗುವ ಅವಧಿ ರೋಗಿಗಳಿಂದ ರೋಗಿಗೆ ಭಿನ್ನವಾಗಿರುತ್ತದೆ. ಭಾರತದ ಜನಸಂಖ್ಯೆಯ ಒಂದು ಭಾಗ ಈ ಖಾಯಿಲೆಯಿಂದ ಬಳಲುತ್ತಿದೆ ಎಂಬುದು ಸಂಶೋಧನೆಯಿಂದ ತಿಳಿದು ಬಂದಿದ್ದು ಜನತೆ ಇಂತಹ ಸಮಸ್ಯೆಗಳ ಬಗ್ಗೆ ಶಿಕ್ಷಿತರಾಗಿ ಹೋರಾಡಬೇಕಾಗಿದೆ.
ಮಾನಸಿಕ ಸಮಸ್ಯೆ ಎದುರಿಸುತ್ತಿರುವ ಜನರಿಗೆ ಸಮಾಜ ಹಾಗೂ ಕುಟುಂಬದ ಸಹಕಾರ ಹಾಗೂ ಪ್ರೀತಿ ಅವಶ್ಯಕವಾಗಿ ಬೇಕು, ಸೂಕ್ತ ವೈದ್ಯರಿಂದ ಚಿಕಿತ್ಸೆ, ಪೂರಕ ಪರಿಸರ, ಸಾಮಥ್ರ್ಯಕ್ಕೆ ಅನುಗುಣವಾದ ಕೆಲಸ-ಮನರಂಜನೆ, ಸರಿಯಾದ ನಿದ್ರೆ- ಆಹಾರ ಹಾಗೂ ಮಾದಕ ವಸ್ತುಗಳಿಂದ ಅಂತರ ಕಾಯ್ದುಕೊಳ್ಳುವುದು ಇಂತಹ ಸಲಹೆಯನ್ನು ಪಾಲಿಸಿದರೆ ರೋಗಿಯು ಗುಣಮುಖವಾಗುವುದರಲ್ಲಿ ಯಾವ ಅನುಮಾನವು ಇಲ್ಲ.
– ಕೆ. ಗೋಪಾಲಕೃಷ್ಣ
(ಲೇಖನ ಕೃಪೆ : ಶಿವಮೊಗ್ಗ ವಾರ್ತಭವನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


