ದಿನದ ಸುದ್ದಿ
ಹಿರಿಯ ಸಾಹಿತಿ ಸುಮತೀಂದ್ರ ನಾಡಿಗ ಇನ್ನಿಲ್ಲ
ಸುದ್ದಿದಿನ ಡೆಸ್ಕ್: ಹಿರಿಯ ಲೇಖಕ ಸುಮತೀಂದ್ರ ನಾಡಿಗ (83) ಮಂಗಳವಾರ ಮುಂಜಾನೆ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಅವರನ್ನು ಅಗಲಿದ್ದಾರೆ.
ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಾಗಿ ಪ್ರಸಿದ್ಧರಾಗಿರುವ ಡಾ. ಸುಮತೀಂದ್ರ ನಾಡಿಗರು ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಮೇ 4, 1935ರಂದು ಜನಿಸಿದರು. ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯಗಳ ಪ್ರತಿಭಾವಂತ ವಿದ್ಯಾರ್ಥಿಯಾದ ನಾಡಿಗರು ಮೈಸೂರು ವಿಶ್ವವಿದ್ಯಾನಿಲಯದಿಂದ ಮತ್ತು ಅಮೆರಿಕದ ಫಿಲೆಡೆಲ್ಫಿಯಾ ವಿಶ್ವವಿದ್ಯಾಲಯಗಳಿಂದ ಇಂಗ್ಲಿಷ್ ಎಂ. ಎ. ಪದವಿಯನ್ನು ಪಡೆದರು. 1985ರಲ್ಲಿ, ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಡಾಕ್ಟರೇಟ್ ಪಡೆದುಕೊಂಡ ನಾಡಿಗರು ತಮ್ಮ ಪ್ರೌಢ ಪ್ರಬಂಧಕ್ಕಾಗಿ ಆರಿಸಿಕೊಂಡಿದ್ದ ವಿಷಯ ‘ಬೇಂದ್ರೆಯವರ ಕಾವ್ಯದ ವಿಭಿನ್ನ ನೆಲೆಗಳು’. ಬೇಂದ್ರೆ, ಗೋಪಾಲಕೃಷ್ಣ ಅಡಿಗ ಮತ್ತು ಕೆ. ಎಸ್. ನರಸಿಂಹಸ್ವಾಮಿಯವರ ಕಾವ್ಯದ ಬಗ್ಗೆ ಸುಮತೀಂದ್ರ ನಾಡಿಗರು ವಿಶೇಷವಾದ ಅಧ್ಯಯನ ನಡೆಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401