Connect with us

ದಿನದ ಸುದ್ದಿ

ಕುರಿ ಸಾಕಾಣಿಕೆಯಲ್ಲಿ ರೈತರ ಕಷ್ಟಗಳು

Published

on

  • ಆಶಾ ಸಿದ್ದಲಿಂಗಯ್ಯ

ಕುರಿಗಾರರು ತಮ್ಮ ಕುರಿ ಹಿಂಡನ್ನು ಮೇಯಿಸಲು ಸಾಮಾನ್ಯವಾಗಿ ಬೆಟ್ಟ ಗುಡ್ಡ ಪ್ರದೇಶಗಳು, ಕಾಡುಗಳು, ಕೆರೆ ಮೈದಾನಗಳನ್ನು ಅವಲಂಬಿಸಿರುತ್ತಾರೆ. ಬೆಳೆ ಕಟಾವು ಮಾಡಿದ ನಂತರ ಖುಷ್ಕಿ ಜಮೀನುಗಳಲ್ಲಿ ಮೇಯಿಸುವುದು ಬಹಳ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿ.

ಏಕೆಂದರೆ ಇವುಗಳನ್ನು ಕಟ್ಟಿ ಮೇಯಿಸುವುದಾಗಲಿ ಹಟ್ಟಿಗಳಲ್ಲಿ ಕೂಡಿ ಮೇಯಿಸುವುದಾಗಲಿ ಸಾಧ್ಯವಾಗುವುದಿಲ್ಲ. ಮಳೆಗಾಲದಲ್ಲಿ ಅಂದರೆ ಜೂನ್ ತಿಂಗಳಿಂದ ಸೆಪ್ಟೆಂಬರ‍್ವರೆಗೆ ಬೆಟ್ಟ ಗುಡ್ಡಗಳಲ್ಲಿ ಹಸಿರು ಹುಲ್ಲು ದೊರೆಯುವುದರಿಂದ ನಂತರ ಖುಷ್ಕಿ ಜಮೀನುಗಳಲ್ಲಿ ಪೈರುಗಳ ಉಳಿಕೆಗಳನ್ನು ಹಾಗೂ ಹೀಗೂ ಡಿಸೆಂಬರ್ ತಿಂಗಳವರೆಗೂ ಮೇಯಿಸಲು ಸಾಧ್ಯವಾಗಬಹುದು.

ಕುರಿಗಾರನ ನಿಜವಾದ ಕಷ್ಟದ ದಿನಗಳು ಜನವರಿಯಿಂದ ಪ್ರಾರಂಭವಾಗಿ ಮೇ ತಿಂಗಳವರೆಗೆ ಮುಂದುವರೆದು ಕುರಿಗಳ ಹೊಟ್ಟೆ ತುಂಬಿಸುವುದಕ್ಕಾಗಿ ಪಡಬಾರದ ಕಷ್ಟ ಪಡಬೇಕಾಗುತ್ತದೆ. ಇಂತಹ ದಿನಗಳಲ್ಲೇ ಕುರಿಗಾರರು ತಮ್ಮ ಹಿಂಡಿನೊಂದಿಗೆ ಜಿಲ್ಲೆಯಿಂದ ಜಿಲ್ಲೆಗೆ ವಲಸೆ ಹೋಗುತ್ತಾರೆ.

ಮಾರ್ಗಗಳ ಬದಿಯ ಮೇವಿನ ಮರಗಳ ಟೊಂಗೆಗಳನ್ನು ಕಡಿದು ಹಾಕಿ ಅವುಗಳನ್ನು ಬರಡುಗೊಳೆಸುತ್ತಾರೆ. ಮಲೆನಾಡಿನ ಕಾಡುಗಳಿಗೆ ಲಗ್ಗೆ ಇಡುತ್ತಾರೆ ಇಂತಹ ಸಂದರ್ಭಗಳಲ್ಲೇ ಕುರಿಗಳು ಕುಡಿಯಲು ಸಾಕಷ್ಟು ಮತ್ತು ಯೋಗ್ಯವಾದ ನೀರಿನ ಕೊರತೆಯಿಂದಾಗಿ ಜಂತು ಹುಳುವಿನ ಬಾಧೆ ಮತ್ತು ರೋಗ ರುಜಿನಗಳಿಗೆ ತುತ್ತಾಗುತ್ತವೆ.

ನೂರಾರು ವರ್ಷಗಳಿಂದ ಕುರಿಗಳು ಗೋಮಾಳಗಳಲ್ಲಿ, ಗುಡ್ಡ, ಬೆಟ್ಟ ಮತ್ತು ಅರಣ್ಯ ಪ್ರದೇಶಗಳಲ್ಲಿ ನಿರಂತರವಾಗಿ ಮೇದು ಅವುಗಳಲ್ಲಿ ಉಪಯುಕ್ತವಾದ ಮೇವಿನ ಮರಗಳು, ಹಸಿರು ಹುಲ್ಲಿನ ತಳಿಗಳು ಉಳಿಯದೆ ಭೂಮಿಯು ಬರಡಾಗಿ ಬರೀ ಮುಳ್ಳು ಕಂಟಿಗಳಿಂದಲೂ ಜಾನುವಾರುಗಳಿಗೆ ಉಪಯುಕ್ತವಲ್ಲದ ಸಸ್ಯಗಳಿಂದಲೂ ತುಂಬಿರುವುದಲ್ಲದೆ ಮಣ್ಣಿನ ಕೊರತಕ್ಕೆ ಎಡೆಕೊಟ್ಟು ಭೂಮಿಯ ಸಾರವು ನಿಸ್ಸಾರವಾಗುತ್ತಿದೆ.

ಇದರ ಜೊತೆಗೆ ಮಳೆಯು ಕಡಿಮೆ ಆಗುತ್ತಿದ್ದು, ಹಸಿರು ಹುಲ್ಲಿನ ಮತ್ತು ಗಿಡಮರಗಳ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ಇಂತಹ ಪ್ರದೇಶಗಳನ್ನು ಗುರುತಿಸಿ ಅಭಿವೃದ್ಧಿ ಪಡೆಸುವುದು ಸರ್ಕಾರದ ಹಾಗೂ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ.

ಇತ್ತೀಚೆಗೆ ಸರ್ಕಾರ ಹಮ್ಮಿಕೊಂಡಿರುವ ಜಲಾನಯನ ಪ್ರದೇಶ ಅಭಿವೃದ್ಧಿ ಅಡಿಯಲ್ಲಿ ಕೆಲವು ಪ್ರದೇಶಗಳು ಅಭಿವೃದ್ಧಿಗೊಂಡಿದ್ದರೂ ಈ ದಿಸೆಯಲ್ಲಿ ಇನ್ನೂ ಬಹಳಷ್ಟು ಕೆಲಸವಾಗಬೇಕಿದೆ. ಸಂರಕ್ಷಿತ ಅರಣ್ಯ ಪ್ರದೇಶಗಳು ಸಾಮಾಜಿಕ ಅರಣ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಸ್ಥಳಗಳಲ್ಲಿ ಜಾನುವಾರು, ಕುರಿ, ಮೇಕೆಗಳನ್ನು ಮೇಯಿಸುಲು ಬಿಡುವುದಿಲ್ಲ. ಜಾನುವಾರುಗಳನ್ನು ಕಟ್ಟಿ ಮೇಯಿಸಬಹುದಾದರು ಕುರಿಗಳನ್ನು ಅರಣ್ಯಗಳ ಅಂಚು ಪ್ರದೇಶಗಳಲ್ಲಾದರೂ ಮೇಯಿಸಲು ಅವಕಾಶವಿರಬೇಕು.

ತ್ವರಿತವಾಗಿ ಬೆಳೆಯುವ ಮೇವಿನ ಮರಗಳಾದ ಸುಬಾಬುಲ್, ಬ್ರಿಜ ಬಾಬುಲ್, ಬೋರೆ ಮರ, ಗೊಬ್ಬರದ ಗಿಡ, ಗಾಳಿ ಮರ, ಹಾಲವಾಣ, ಕ್ಯಾಲಿಯೊಂಡ್ರ, ಅಗಸೆ, ಸೇವರಿ, ಸರ್ವೆ, ಹೂವರಸೆ, ನುಗ್ಗೆ, ಹೆಬ್ಬೇವು, ಬಳ್ಳಾರಿ ಜಾಲಿ, ಬೆಂಗಾಲ ಜಾಲಿ ಹಾಗೂ ಲಂಟಾನಾ ಮತ್ತು ಹಿಪ್ಪುನೇರಳೆ ಇತ್ಯಾದಿ ಮರಗಳನ್ನು ಹೊಲಗಳ ಬದುಗಳು, ಕೆರೆಕುಂಟೆಗಳ ಅಕ್ಕಪಕ್ಕ ಪಾಳು ಭೂಮಿಯಲ್ಲಿ ಬೆಳೆಯಬೇಕು, ಈ ಮರಗಳಿಂದ ಎಲೆ ಚಿಗುರನ್ನು ತಂದು ಬಾಡಿಸಿ ಕುರಿಗಳಿಗೆ ಕೊಡಬಹುದು.

ಸರ್ಕಾರದವರು ರೈತರ ಜಮೀನುಗಳಲ್ಲಿ ಒಡ್ಡುಗಳನ್ನು ನಿರ್ಮಿಸುತ್ತಿದ್ದು, ಈ ಒಡ್ಡುಗಳ ಮೇಲೆ ಹಾಗೂ ಬದಿಯಲ್ಲಿ ಹುಲ್ಲು ಹಾಗೂ ಮೇವಿನ ಮರಗಳನ್ನು ನೆಡುವುದರಿಂದ ಭೂಮಿಯ ಕೊರೆತ ತಪ್ಪುವುದಲ್ಲದೆ ಭೂಮಿಯ ಸಾರಜನಕದ ಅಂಶ ಸಹ ಹೆಚ್ಚುವುದು. ಆಹಾರ ಧಾನ್ಯಗಳ ಬೆಳೆಗಳನ್ನು ಕಟಾವು ಮಾಡಿದ ನಂತರ ಪರ್ಯಾಯ ಬೆಳೆಯಾಗಿ ಮೇವಿನ ಬೆಳೆಗಳನ್ನು ಬೆಳೆಯಬಹುದು.

ಸರ್ಕಾರವು ಈಗಾಗಲೇ ಹಮ್ಮಿಕೊಂಡಿರುವಂತೆ ಜಲಾನಯನ ಪ್ರದೇಶ ಅಭಿವೃದ್ಧಿ ಅಡಿಯಲ್ಲಿ ಸುಧಾರಿಸಿದ ಹುಲ್ಲು ಹಾಗೂ ಮೇವಿನ ಮರಗಿಡಗಳನ್ನು ಬೆಳೆಸುವುದು; ಈ ಮರಗಿಡಗಳಿಂದ ಹಸಿರೆಲೆಗಳನ್ನು ತಂದು ಒಣಗಿಸಿ ಹದ ಮಾಡಿ ಕೂಡಿಟ್ಟು ಕೊಂಡು ಮೇವಾಗಿ ಕೊಡುವುದು; ಹುಲ್ಲುಗಾವಲು ಪುನಶ್ಚೇತನ ಹಾಗೂ ವಿಕಾಸಗೊಳಿಸುವ ಯೋಜನೆ, ವೀವು ತಳಿಗಳ ಬೀಜೋತ್ಪತ್ತಿ ಸಂಸ್ಕರಣೆ ಹಾಗೂ ಬೀಜಾಭಿವೃದ್ಧಿ ಯೋಜನೆ, ಮೇವು ನಿಧಿ, ಪೌಂಡರ್ ಮಿನಿಕಿಟ್ ವಿತರಣೆ ಯೋಜನೆ; ಮೇವು ಮರಗಳ ಸಸಿ ಬೆಳೆಸುವಿಕೆ ಸಂರಕ್ಷಣೆ ಹಾಗೂ ವಿತರಣೆ ಯೋಜನೆಗಳನ್ನು ಕ್ರಿಯಾತ್ಮಕಗೊಳಿಸುವುದು.

ಪ್ರಚಲಿತ ವ್ಯವಸ್ಥೆಯಲ್ಲಿ ಹೆಚ್ಚುವರಿ ಕುರಿಗಳನ್ನು ರೈತರು ಸ್ಥಳಕ್ಕೆ ಬಂದು ಕೊಂಡುಕೊಳ್ಳುವ ಕಟುಕ ವ್ಯಾಪಾರಸ್ಥರಿಗೆ ಮಾರುತ್ತಿದ್ದಾರೆ. ಗ್ರಾಮಗಳಿಗೆ ಭೇಟಿ ನೀಡಿ ಕೊಂಡ ಕಟುಕರು ಗ್ರಾಮಸ್ಥರ ಮಾಂಸದ ಬೇಡಿಕೆಯನುಸಾರ ಅಲ್ಲಿಯೇ ಕಟಾವು ಮಾಡಬಹುದು. ಹತ್ತಿರದ ಪಟ್ಟಣಗಳಿಗೆ ಸಾಗಿಸಬಹುದು ಅಥವಾ ಗುತ್ತಿಗೆದಾರರು ದಲ್ಲಾಳಿಗಳಿಗೆ ಮಾರಲೂಬಹುದು.

ಗ್ರಾಹಕರ ಮಧ್ಯೆ 3-4 ದಲ್ಲಾಳಿಗಳಿರುತ್ತಾರೆ. ಕುರಿಗಳ ಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಸಹ ಕುರಿ ಮತ್ತು ಆಡುಗಳ ಸಂಘಟಿತ, ಸುವ್ಯವಸ್ಥಿತ ಮಾರುಕಟ್ಟೆ ಇಲ್ಲ. ಈ ಪದ್ಧತಿಯಲ್ಲಿ ಉತ್ಪತ್ತಿದಾರರಿಗೂ ಲಾಭವಿಲ್ಲ ಮತ್ತು ಉಪಯೋಗಿಸುವ ಗ್ರಾಹಕರಿಗೆ ಉತ್ತಮ ಮಾಂಸ ಸರಿಯಾದ ಬೆಲೆಗೆ ದೊರಕುತ್ತಿಲ್ಲ. ಹೆಚ್ಚು ಲಾಭಾಂಶ ಮಧ್ಯವರ್ತಿ ದಲ್ಲಾಳಿಗಳಿಗೆ ದಕ್ಕುತ್ತದೆ.

ಕುರಿಗಳನ್ನು ವೈಜ್ಞಾನಿಕವಾಗಿ ತೂಕದ ಮಾಂಸದ ಇಳುವರಿ ಆಧಾರಿತವಲ್ಲದ ಬರೀ ಮೇಲ್ನೋಟದ ಶರೀರ ಪ್ರಮಾಣದ ಕಣ್ಣಳತೆಯ ಮೇಲೆ ಕೊಳ್ಳಲಾಗುತ್ತದೆ. ಮಧ್ಯವರ್ತಿಗಳ ಹಿಡಿತದಿಂದ ಕುರಿ ಮತ್ತು ಆಡುಗಳ ಉತ್ಪಾದಕನನ್ನು ಮುಕ್ತಗೊಳಿಸಿ ಅವರಿಗೆ ನ್ಯಾಯವಾದ ಬೆಲೆ ದಕ್ಕುವಂತೆ ಮಾಡಬೇಕಾದರೆ ಸುವ್ಯವಸ್ಥಿತ ಮಾರುಕಟ್ಟೆಯನ್ನು ಕುರಿ ಉತ್ಪಾದಕರ ಸಂಘಗಳ ಮೂಲಕ ಏರ್ಪಾಡು ಮಾಡಬೇಕಾದ ಅಗತ್ಯವಿದೆ.

ಕುರಿ ಸಾಕಾಣಿಕೆ ಗ್ರಾಮೀಣ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಸಹಕಾರಿ

ಕುರಿ ಮತ್ತು ಕುರಿ ಉತ್ಪನ್ನಗಳು ರಾಜ್ಯದ ಆರ್ಥಿಕ ವಹಿವಾಟಿನಲ್ಲಿ ಬಹುಮುಖ್ಯ ಸ್ಥಾನವನ್ನು ಪಡೆದಿದ್ದು, ರಾಜ್ಯದ ವರಮಾನಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡುತ್ತಿದೆ. ಕುರಿಗಳ ಮಾಂಸವು ಉತ್ತಮ ಗುಣಮಟ್ಟದಾಗಿದ್ದು, ದೇಶದ ಬಹು ದೊಡ್ಡ ಮಾಂಸಹಾರಿ ವರ್ಗದ ಆಹಾರದ ಮುಖ್ಯ ಅಂಶವಾಗಿದ್ದು, ಅಪೌಷ್ಟಿಕತೆಯನ್ನು ನಿವಾರಿಸುವಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸಿದೆ. ಈ ಉಣ್ಣೆಯನ್ನು ಕಂಬಳಿ, ರತ್ನಗಂಬಳಿ, ಉಣ್ಣೆ ಶಾಲು, ಡ್ರಗೇಟ್ ಟೋಪಿ ಮುಂತಾದ ಉಣ್ಣೆ ವಸ್ತುಗಳನ್ನು ತಯಾರಿಸಲು ಬಳಸಲಾಗುತ್ತದೆ.

ಕುರಿಗಳನ್ನು ಚಲಿಸುವ ಬ್ಯಾಂಕುಗಳೆಂದು ಅಥವಾ ನಿಧಿಯೆಂದು ಕರೆಯಲಾಗುತ್ತದೆ. ಏಕೆಂದರೆ, ರೈತ ಬೇಕೆಂದಾಗ ಕುರಿಗಳನ್ನು ಮಾರಿ ತಕ್ಷಣ ಹಣ ಪಡೆಯಬಹುದು. ಆದರೆ ವ್ಯವಸಾಯದಿಂದಾಗಲಿ ಅಥವಾ ತೋಟಗಾರಿಕೆಯಿಂದಾಗಲಿ ಈ ರೇತಿ ದಿಢೀರನೆ ಹಣ ಗಳಿಸಲಾಗುವುದಿಲ್ಲ.

ನಿರುದ್ಯೋಗ ನಿವಾರಣೆ ಹಾಗೂ ರೈತರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮ ಪಡಿಸಲು ಕೈಗೊಂಡ ಕಾರ್ಯಕ್ರಮಗಳಲ್ಲಿ ಕುರಿ ಘಟಕ ಸ್ಥಾಪನೆಯೂ ಸಹ ಒಂದು ಇದಕ್ಕೆ ಮುಖ್ಯ ಕಾರಣವೆಂದರೆ ಕಡಿಮೆ ಬಂಡವಾಳವನ್ನು ಬಳಸಿಕೊಂಡು ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸಲು ಮತ್ತು ಲಾಭವನ್ನು ಪಡೆಯಲು ಸಹಾಯವಾಗುವುದು.

ಇದರಿಂದಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಜನಾಂಗಗಳಲ್ಲೂ ಲಾಭದಾಯಕ ಕುರಿ ಸಾಕಾಣಿಕೆಯ ಮುಖಾಂತರ ಅವರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು 20 ಕುರಿ ಮತ್ತು ಒಂದು ಟಗರಿನ ಘಟಕ ಹಮ್ಮಿಕೊಳ್ಳಲು ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳ ಮುಖಾಂತರ ಸಾಲದ ವ್ಯವಸ್ಥೆಯನ್ನು ಸಹ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಮತ್ತು ಕ್ಷೇತ್ರಾಭಿವೃದ್ಧಿ ಅಧಿಕಾರಿಗಳ ಮೂಲಕ ಮಾಡಲಾಗಿದೆ.

ರಾಜ್ಯ ಸರ್ಕಾರವು ಕುರಿ ಅಭಿವೃದ್ಧಿಗಾಗಿ ಕರ್ನಾಟಕ ಕುರಿ ಮತ್ತು ಕುರಿ ಉತ್ಪನ್ನಗಳ ಅಭಿವೃದ್ಧಿ ಮಂಡಳಿ ಹಮ್ಮಿಕೊಂಡಿರುವ ಆರು ಅಂಶಗಳ ಕಾರ್ಯಕ್ರಮಗಳಲ್ಲಿ ಒಂದಾದ ಕುರಿ ಸಾಕಾಣಿಕೆದಾರರ ಸಹಕಾರ ಸಂಘಗಳ ಸ್ಥಾಪನೆ ಯೋಜನೆಗೆ ಮಂಜೂರಾತಿ ನೀಡಿದೆ ಅದರಂತೆ ಸದರಿ ಕುರಿ ಸಾಕಾಣಿಕೆದಾರರ ಸಹಕಾರ ಸಂಘಗಳನ್ನು ಸ್ಥಾಪಿಸಲು ಸೂಕ್ತ ಕ್ರಮಗಳನ್ನು ಕೈಗೊಳಲು ಆಯಾ ಜಿಲ್ಲೆಗಳ ಸಹಕಾರ ಸಂಘಗಳ ಇಲಾಖೆಯ ಉಪ ನಿಬಂಧಕರಿಗೆ ಹಾಗೂ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರುಗಳನ್ನು ಕೋರಲಾಗಿದೆ.

ಈ ಸಂಘಗಳ ಮುಖ್ಯ ಉದ್ದೇಶ ಕುರಿ ಉಣ್ಣೆಯ ಮಾರುಕಟ್ಟೆಯನ್ನು ವ್ಯವಸ್ಥಿತಗೊಳಿಸುವುದು, ಕುರಿಗಾರರಿಗೆ ತಾಂತ್ರಿಕತೆ ಹಾಗೂ ಆರ್ಥಿಕ ಸವಲತ್ತುಗಳನ್ನು ಒದಗಿಸುವುದು, ಯಾಂತ್ರೀಕೃತ ಉಣ್ಣೆ ಕಟಾವು ಸೌಲಭ್ಯಗಳನ್ನು ಕಲ್ಪಿಸುವುದು.

ರೈತ ನಷ್ಟ ಅನುಭವಿಸಿದಾಗ ಕೈ ಹಿಡಿಯುವುದು ಕುರಿ ಸಾಕಾಣಿಕೆ ಆದರಿಂದ ಸರಕಾರ ಕುರಿ ಸಾಕಾಣಿಕೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending