ದಿನದ ಸುದ್ದಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ; ಇತಿಹಾಸಕ್ಕೆ ಕೊಡುಗೆ ನೀಡಿದ ಮಹನೀಯರ ಹೆಸರನ್ನು ನಾಮಕರಣ ಮಾಡಿ : ಸಿಎಂ ಬೊಮ್ಮಾಯಿಗೆ ಯಡಿಯೂರಪ್ಪ ಪತ್ರ

Published

on

ಸಾಂದರ್ಭಿಕ ಚಿತ್ರ

ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರನ್ನು ಇಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಸಿಸಿದ್ದರು.

ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಬಹು ಚರ್ಚೆಗೆ ಒಳಪಟ್ಟಿತು. ವಿಮಾನ‌ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ವಿಜೇತ ಕುವೆಂಪು, ಹೋರಾಟಗಾರ ಶಾಂತವೇರಿ ಗೋಪಾಲಗೌಡರ ಹೆಸರನ್ನು ಇಡಿ ಎಂಬ ಸಲಹೆಗಳು ಕೇಳಿ‌ಬಂದಿದ್ದವು.

ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಸಿಎಂ ಬೊಮ್ಮಾಯಿಗೆ ಪತ್ರವೊಂದನ್ನು ಬರೆದಿದ್ದಾರೆ. ಹೀಗಿದೆ ಪತ್ರ ಓದಿ.


ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಯಡಿಯೂರಪ್ಪ ಪತ್ರ

ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು.

ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ.

ಆದುದರಿಂದ, ತಮ್ಮ ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಎಂದಿದ್ದಾರೆ.

ಯಡಿಯೂರಪ್ಪ ಪತ್ರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version