Connect with us

ದಿನದ ಸುದ್ದಿ

ನೇರ ಮಾರುಕಟ್ಟೆಯಿಂದ ಲಾಭ ಗಳಿಸಿದ ಸಣ್ಣ ರೈತ ದುರ್ಗಪ್ಪ ಅಂಗಡಿ

Published

on

ಸುದ್ದಿದಿನ,ಶಿವಮೊಗ್ಗ : ಲಾಕ್‍ಡೌನ್ ಪರಿಸ್ಥಿತಿ ಮಧ್ಯೆ ದೃತಿಗೆಡದೆ ತಾನು ಬೆಳೆದ ತರಕಾರಿಗಳನ್ನು ನೇರವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಿ ಶಿಕಾರಿಪುರ ತಾಲೂಕಿನ ಸಹಸ್ರವಳ್ಳಿ ಗ್ರಾಮದ ರೈತ ದುರ್ಗಪ್ಪ ಅಂಗಡಿಯವರು ಲಾಭ ಕಂಡುಕೊಂಡಿದ್ದಾರೆ.

ದುರ್ಗಪ್ಪ ಅಂಗಡಿಯವರು ಕಳೆದ ಕೆಲವು ವರ್ಷಗಳಿಂದ ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಮಾರ್ಗದರ್ಶನದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ತಮ್ಮ 2 ಎಕರೆ ಪ್ರದೇಶದಲ್ಲಿ, ಕೋಳಿ ಸಾಕಾಣಿಕೆ, ಜೇನು ಸಾಕಾಣಿಕೆ, ಕೃಷಿ ಹೊಂಡ, ಎರೆಹುಳುಗೊಬ್ಬರ ತಯಾರಿಕೆ ಘಟಕಗಳನ್ನು ಸ್ಥಪಿಸಿಕೊಂಡಿದ್ದಾರೆ.

ತೋಟಗಾರಿಕೆ ಬೆಳೆಗಳಾದ ಬಾಳೆ ಮತ್ತು ಅಡಿಕೆಯ ಬೆಳೆಗಳ ಮಧ್ಯೆ ಅಂತರ ಬೆಳೆಯಾಗಿ ತರಕಾರಿ ಬೆಳೆಗಳಾದ ತೊಂಡೆಕಾಯಿ, ನುಗ್ಗೆಕಾಯಿ, ಸೌತೆಕಾಯಿ, ಟೊಮ್ಯಾಟೋ, ಬದನೆಕಾಯಿ ಮತ್ತು ಬೀನ್ಸ್ ತರಕಾರಿಗಳನ್ನು ಬೆಳೆಯುತ್ತಿದ್ದಾರೆ.

ಆದರೆ ಲಾಕ್‍ಡೌನ್ ಅವಧಿಯಲ್ಲಿ ತಾನು ಬೆಳೆದ ತರಕಾರಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಕಂಗಾಲಾದ ದುರ್ಗಪ್ಪನವರಿಗೆ ತರಕಾರಿ ಕೊಯ್ಲಿಗೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸ್ಥಳೀಯ ಮಾರುಕಟ್ಟೆಯನ್ನು ಬಳಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿ ಧೈರ್ಯ ತುಂಬಲಾಯಿತು ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ಬಿ.ಸಿ.ಹನುಮಂತಸ್ವಾಮಿ ಅವರು ತಿಳಿಸಿದ್ದಾರೆ.

ಬಳಿಕ ದುರ್ಗಪ್ಪನವರು ಪರಿಚಯಸ್ತ ಹಾಗೂ ಆರೋಗ್ಯವಂತ ಇಬ್ಬರು ಕೃಷಿ ಕಾರ್ಮಿಕರನ್ನು ನೇಮಿಸಿಕೊಂಡು ತರಕಾರಿಗಳನ್ನು ಕೊಯ್ಲು ಮಾಡಿದ್ದಾರೆ. ಅಲ್ಲದೆ, ತಾವು ತರಕಾರಿಗಳನ್ನು ಸಾಗಿಸುವ ವಾಹನ, ಗೋಣಿಚೀಲ ಮತ್ತು ಉಪಯೋಗಿಸುವ ವಸ್ತುಗಳನ್ನು ಸೋಂಕು ನಿವಾರಕ ರಾಸಾಯನಿಕಗಳಿಂದ ಶುದ್ಧಗೊಳಿಸಿಕೊಂಡು ತರಕಾರಿಗಳನ್ನು ಸಂಗ್ರಹಣೆ ಮಾಡಿಕೊಂಡಿದ್ದಾರೆ.

ದೂರದ ಗ್ರಾಮಗಳಿಗೆ ಸಾಗಾಟಕ್ಕೆ ಅವಕಾಶ ಇಲ್ಲದೆ ಇದ್ದುದ್ದರಿಂದ ತಾವೇ ಖುದ್ದು ತರಕಾರಿಗಳನ್ನು ಸ್ಥಳೀಯವಾಗಿ ಮನೆ ಮನೆಗೆ ಹೋಗಿ ತರಕಾರಿಗಳನ್ನು ಮಾರಾಟ ಮಾಡಿದ್ದಾರೆ.ನೇರ ಮಾರುಕಟ್ಟೆಯಿಂದ ಅವರ ಮುಖದಲ್ಲಿ ಮಂದಹಾಸ ಬೀರುವ ಹಾಗೆ ಮಾಡಿದೆ.

ರೈತ ಉತ್ಪಾದಕರ ಸಂಘ ಹಾಗೂ ಹಾಪ್‍ಕಾಮ್ಸ್‍ಗಳ ಮುಖಾಂತರ ಜೊತೆಗೆ ಸ್ಥಳೀಯವಾಗಿಯೇ ಮಾರುಕಟ್ಟೆ ವ್ಯವಸ್ಥೆ ಕಂಡುಕೊಂಡ ಇವರು ಹೇಳುವ ಪ್ರಕಾರ 20 ರೂ.ನಂತೆ 20 ಕ್ವಿಂಟಾಲ್ ತೊಂಡೆಕಾಯಿ, 25 ರೂ.ನಂತೆ 5 ಕ್ವಿಂಟಾಲ್ ನುಗ್ಗೆಕಾಯಿ, 20 ರೂ.ನಂತೆ 6 ಕ್ವಿಂಟಾಲ್ ಟೊಮ್ಯಾಟೊ, 30 ರೂ.ನಂತೆ 10 ಕ್ವಿಂಟಾಲ್ ಬೀನ್ಸ್ ಮಾರಾಟ ಮಾಡಿರುತ್ತಾರೆ. ಇದರಿಂದ ಒಟ್ಟು 54,500/- ರೂಪಾಯಿ ನಿವ್ವಳ ಆದಾಯ ಬಂದಿದೆ.

ಲಾಕ್‍ಡೌನ್ ಮಧ್ಯೆಯೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗದ ವ್ಯಾಪ್ತಿಯಲ್ಲಿ ಬರುವ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಿಂದ ಮಾಹಿತಿ ಪಡೆದು ಮಾರಾಟ ಮಾಡಲು ಸೂಕ್ತ ಮತ್ತು ಪರ್ಯಾಯ ದಾರಿಯ ಬಗ್ಗೆ ಚಿಂತಿಸದಿದ್ದರೆ ತರಕಾರಿಗಳು ಹೊಲದಲ್ಲಿ ಕೊಳೆತು ನಾರುತ್ತಿದ್ದವು. ಈಗ ತಾನು ಹಾಕಿದ ಬಂಡವಾಳವೂ ಬಂದಿದೆ. ನಾವು ಹೊಲಕ್ಕೆ ಹಾಕಿದ ಪರಿಶ್ರಮಕ್ಕೆ ಫಲ ಸಿಕ್ಕಿದೆ ಎಂದು ಅವರು ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending