ದಿನದ ಸುದ್ದಿ
ಧರ್ಮದ ಹೆಸರಿನಲ್ಲಿ ಬಿಜೆಪಿಗರು ಅಮಾಯಕರ ರಕ್ತ ಹರಿಸುತ್ತಿದ್ದಾರೆ : ಸಿದ್ದರಾಮಯ್ಯ ಆಕ್ರೋಶ
ಸುದ್ದಿದಿನ, ಮೈಸೂರು : ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ನೀಡಿದ್ದ ದೊಡ್ಡ ಮೊತ್ತದ ಹಣವನ್ನು ಎನ್.ಆರ್ ಸಂತೋಷ್ ಹಾಗೂ ಸಿ.ಪಿ ಯೋಗೀಶ್ವರ್ ಲಪಟಾಯಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಣ ನೀಡಿದವರು ಯಾರು? ಎಷ್ಟು ಹಣ ನೀಡಿದ್ದರು? ಅದು ಬ್ಲಾಕ್ ಮನಿಯೋ? ವೈಟ್ ಮನಿಯೋ? ಎಂಬ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಮೈಸೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್ ಯಡಿಯೂರಪ್ಪ ಇದುವರೆಗೆ ನಾನು ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ. ಸರ್ಕಾರ ರಚನೆಯಾಗಿ ಒಂದೂವರೆ ವರ್ಷ ಕಳೆದರೂ ಇನ್ನೂ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಂಡಿಲ್ಲ, ಒಂದೇ ಒಂದು ಜನಪರ ಯೋಜನೆ ಈ ವರೆಗೆ ಜಾರಿಗೆ ಬಂದಿಲ್ಲ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದಂತ ಪರಿಸ್ಥಿತಿಯಿದೆ ಎಂದರು.
ಇಂದು ಮೈಸೂರಿನಲ್ಲಿ ಪ್ರಗತಿಪರ ಚಿಂತಕರು, ಸಮಾಜವಾದಿ, ಜಾತ್ಯಾತೀತ ಚಿಂತನೆಯ ಬರಹಗಾರರ ಜೊತೆ ಚರ್ಚೆ ಮಾಡಿದ್ದೇನೆ. ದೇಶದಲ್ಲಿ ಕೋಮುವಾದಿಗಳು ಅಧಿಕಾರಕ್ಕೆ ಬಂದಿರುವುದರಿಂದ ಕೆಳವರ್ಗದ ಜನರು ಜೀವನ ನಡೆಸಲು ಹೆಣಗಾಡುವಂತಹ ಸ್ಥಿತಿ ನಿರ್ಮಾಣವಾಗಿದೆ, ಹಾಗಾಗಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಆಶಯ ವ್ಯಕ್ತವಾಗಿದೆ ಎಂದು ಹೇಳಿದರು.
ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ಬಿಜೆಪಿಗೆ ನೈಜ ಕಾಳಜಿಯಿದ್ದರೆ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ನಿರ್ಧರಿಸಿ, ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೆ ಸಾಕು, ಸಮಾವೇಶ, ಪಾದಯಾತ್ರೆಗಳನ್ನು ಮಾಡುವ ಅಗತ್ಯವೇ ಬೀಳುವುದಿಲ್ಲ ಅಭಿಪ್ರಾಯ ಪಟ್ಟರು.
ಸಂವಿಧಾನದ ಆಶಯಗಳಾದ ಸಹಬಾಳ್ವೆ ಹಾಗೂ ಸೋದರತ್ವಗಳನ್ನು ಪಾಲಿಸುವವರು ನಾವು, ಧರ್ಮದ ಹೆಸರಿನಲ್ಲಿ ಅಮಾಯಕರ ರಕ್ತ ಹರಿಸುವವರು ಬಿಜೆಪಿಯವರು. ಯಾರದ್ದು ಐಸಿಸ್ ಉಗ್ರರ ಮನಸ್ಥಿತಿ ಎಂದು ಜನರೇ ನಿರ್ಧರಿಸಬೇಕು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243