ರಾಜಕೀಯ
ಶಿವಮೊಗ್ಗ | 144 ಸೆಕ್ಷನ್ ಉಲಂಘನೆ ; ಇದು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ : ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ಹಲ್ಲೆ, ಕಲ್ಲು ತೂರಾಟ, ಸರ್ಕಾರದ ಸಚಿವ ಸ್ಥಾನದಲ್ಲಿರುವ ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿರುವುದು ಈ ಎಲ್ಲಾ ಒಟ್ಟು ಘಟನೆಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಬಿಜೆಪಿ ಕಾರ್ಯಕರ್ತ ಹರ್ಷ ಅವರ ಕೊಲೆಯಾದದ್ದು ಭಾನುವಾರ. ಮುಂಜಾಗ್ರತಾ ಕ್ರಮವಾಗಿ ಆ ದಿನದ ರಾತ್ರಿಯಿಂದಲೇ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ ಶಿವಮೊಗ್ಗದಲ್ಲಿ 3 ಕೊಲೆಗಳು ನಡೆದಿವೆ. ಶಿವಮೊಗ್ಗ ಗೃಹ ಸಚಿವರ ತವರು ಜಿಲ್ಲೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಈಶ್ವರಪ್ಪ ಅವರು ಅದೇ ಜಿಲ್ಲೆಯವರು. ಅಲ್ಲೇ ಈ ರೀತಿಯ ಕೊಲೆಗಳು ನಿರಂತರವಾಗಿ ನಡೆಯುತ್ತವೆ ಎಂದರೆ ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ ಎಂದರು
ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಮತ್ತು ಏಕೆ? ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು, ಹೀಗಾಗಿ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ. ತಮ್ಮದೇ ಸರ್ಕಾರ 144 ಸೆಕ್ಷನ್ ಹಾಕಿದೆ, ಸರ್ಕಾರದ ಸಚಿವರ ಎದುರೇ ಕಲ್ಲುತೂರಾಟ ನಡೆದಿದೆ, ಅಂಗಡಿ, ವಾಹನಗಳಿಗೆ ಬೆಂಕಿ ಹಾಕಲಾಗಿದೆ, ಜನ ಗುಂಪು ಗುಂಪಾಗಿ ಕತ್ತಿ, ತಲ್ವಾರ್ ಹಿಡಿದು ಓಡಾಡುತ್ತಾರೆ, ಈ ಮೆರವಣಿಗೆಯಲ್ಲಿ ಸಚಿವ ಈಶ್ವರಪ್ಪ ಅವರೇ ಮುಂದೆ ನಿಂತಿದ್ದಾರೆ ಎಂದರೆ ಇದು ನಾಗರೀಕ ಸರ್ಕಾರವ? ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಸಚಿವ ಈಶ್ವರಪ್ಪ ಅವರೇ ನೇರ ಹೊಣೆ.
ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಈ ಕೂಡಲೇ ಅವುಗಳನ್ನು ನಿಷೇಧ ಮಾಡಲಿ. ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು? ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಬೇರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ನಡೆಸಲಿ. ಅದಕ್ಕೆ ನನ್ನ ತಕರಾರು ಇಲ್ಲ. ಅದರ ಜೊತೆಗೆ ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ, ಕಲ್ಲು ತೂರಾಟ ನಡೆದಿದೆ. ಈ ಎಲ್ಲಾ ಕಾರಣಗಳಿಗಾಗಿ ಒಟ್ಟು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸುತ್ತೇನೆ.
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದು ಹೇಳಿದ್ದಾರೆ. ಜೊತೆಗೆ ಅವರಿಗೆ ತಾವು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ವಿಚಾರ ಬೇರೆ ಉಂಟಾ? ಈಶ್ವರಪ್ಪ ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು.
ಹರ್ಷ ಕೊಲೆ ಆರೋಪಿಗಳು ಯಾವುದೇ ಪಕ್ಷ, ಸಮುದಾಯ, ಸಂಘಟನೆಗಳಿಗೆ ಸೇರಿದ್ದರೂ @BJP4Karnataka ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಪರಿಸ್ಥಿತಿ ಬಿಗಡಾಯಿಸದಂತೆ ನೋಡಿಕೊಳ್ಳಬೇಕು.
4/7#ಶಿವಮೊಗ್ಗ— Siddaramaiah (@siddaramaiah) February 21, 2022
ಸಚಿವ ಈಶ್ವರಪ್ಪ ಮೊದಲು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿ ದೇಶದ್ರೋಹ ಎಸಗಿದ್ದರು, ಈಗ ತಮ್ಮ ಸರ್ಕಾರವೇ ವಿಧಿಸಿದ್ದ 144 ಸೆಕ್ಷನ್ ಮೀರಿ ಕಾನೂನಿಗೆ ಅಗೌರವ ತೋರಿದ್ದಾರೆ. ದೇಶದ ಸಂವಿಧಾನ, ರಾಷ್ಟ್ರ ಧ್ವಜ, ಕಾನೂನು, ಪ್ರಜಾಪ್ರಭುತ್ವ ಹಾಗೂ ಸಂಸದೀಯ ವ್ಯವಸ್ಥೆಯ ಬಗ್ಗೆ ಗೌರವವೇ ಇಲ್ಲದಿರುವ ಈಶ್ವರಪ್ಪ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಲು ಅನರ್ಹರು. ಹಾಗಾಗಿ ಇಂದು ಸಂಜೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನ ಎಲ್ಲಾ ಕಾಂಗ್ರೆಸ್ ಸದಸ್ಯರು ವಿಧಾನಸೌಧದಿಂದ ರಾಜಭವನದ ವರೆಗೆ ಕಾಲ್ನಡಿಗೆ ಮೂಲಕ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಮನವಿ ಮಾಡುತ್ತೇವೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದ 5 ಸೇರಿದಂತೆ ದೇಶದ 103 ಅಭಿವೃದ್ಧಿಪಡಿಸಿದ ರೈಲ್ವೆ ನಿಲ್ದಾಣಗಳ ಲೋಕಾರ್ಪಣೆ

ಸುದ್ದಿದಿನಡೆಸ್ಕ್:ದೇಶಾದ್ಯಂತ ರೈಲು ನಿಲ್ದಾಣಗಳ ಅಭಿವೃದ್ಧಿ ತ್ವರಿತವಾಗಿ ಪೂರ್ಣಗೊಳ್ಳುತ್ತಿದೆ. ಸದ್ಯ ಕಾಮಗಾರಿ ಪೂರ್ಣಗೊಂಡ ಕರ್ನಾಟಕದ 5 ರೈಲ್ವೆ ನಿಲ್ದಾಣಗಳು ಸೇರಿದಂತೆ ದೇಶದ 103 ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವರ್ಚುವಲ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ.
18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿ ಈ ರೈಲ್ವೈ ನಿಲ್ದಾಣಗಳನ್ನು ಒಂದು ಸಾವಿರದ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ರಾಜಸ್ಥಾನದ ಬಿಕೇನರ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅವರು ಅಭಿವೃದ್ಧಿಪಡಿಸಿದ ನೂತನ ರೈಲ್ವೈ ನಿಲ್ದಾಣಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಇದೇ ಸಂದರ್ಭದಲ್ಲಿ ಅವರು 26ಸಾವಿರ ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ನೈರುತ್ವ ರೈಲ್ವೆ ವಿಭಾಗದ ಧಾರವಾಡ, ಗದಗ, ಬಾಗಲಕೋಟೆ, ಗೋಕಾಕ ಮತ್ತು ಮುನಿರಾಬಾದ್ ಸೇರಿದಂತೆ ವಿವಿಧ ರೈಲ್ವೆ ನಿಲ್ದಾಣಗಳನ್ನು ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಪುನಾರಾಭಿವೃದ್ಧಿಗೊಳಿಸಲಾಗಿದೆ.
ಸಮಯದ ಉಳಿತಾಯದ ಜೊತೆಗೆ ಪರಿಸರ ಸ್ನೇಹಿ ವಾತಾವರಣದ ಮೂಲಕ ಪ್ರಯಾಣಿಕರಿಗೆ ರೈಲು ನಿಲ್ದಾಣಗಳಲ್ಲಿ ಅತ್ಯಾಧುನಿಕ ಸೌಲಭ್ಯ ಲಭ್ಯವಾಗಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಈ ಅಮೃತ ಭಾರತ ರೈಲ್ವೆ ಯೋಜನೆಯಡಿ ದೇಶವ್ಯಾಪಿ ರೈಲು ನಿಲ್ದಾಣಗಳನ್ನು ಉನ್ನತೀಕರಣಗೊಳಿಸಲಾಗುತ್ತಿದೆ. ಅಮೃತ ಭಾರತ ರೈಲ್ವೆ ಯೋಜನೆಯಡಿ ಬಾಗಲಕೋಟೆ ರೈಲ್ವೆ ನಿಲ್ದಾಣವನ್ನು ಸುಮಾರು 16 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅತ್ಯಾಧುನಿಕವಾಗಿ ನವೀಕರಿಸಲಾಗಿದೆ. ರೈಲ್ವೆ ನಿಲ್ದಾಣದಲ್ಲಿ ಸುಸಜ್ಜಿತ ತಂಗುದಾಣ, ಶೌಚಾಲಯ ಹಾಗೂ ನೂತನ ಪ್ಲಾಟ್ ಫಾರ್ಮ್ ಮತ್ತು ಎಸ್ಕಲೇಟರ್ ನಿರ್ಮಾಣ ಸೇರಿದಂತೆ ಶುದ್ಧ ಕುಡಿಯುವ ನೀರು ವ್ಯವಸ್ಥೆ ಜೊತೆಗೆ ವಿವಿಧ ಸೌಲಭ್ಯ ಕಲ್ಪಿಸಲಾಗಿದೆ.
ಬಾಗಲೋಕೋಟೆ ವಿದ್ಯಾರ್ಥಿ ಭೈರೇಗೌಡ ಮಾತನಾಡಿ, ಕೇಂದ್ರ ಸರ್ಕಾರ ರೈಲ್ವೆ ನಿಲ್ದಾಣಗಳನ್ನು ಪುನರಾಭಿವೃದ್ಧಿಗೊಳಿಸುವ ಮೂಲಕ ಜನರಿಗೆ ಹೆಚ್ಚಿನ ಅನುಕೂಲ ಕಲ್ಪಿಸುತ್ತಿದೆ, ನವೀಕರಣಗೊಂಡ ನಿಲ್ದಾಣ ಪ್ರಯಾಣಿಕ ಸ್ನೇಹಿಯಾಗಿರುವುದು ಸಂತಸದ ಸಂಗತಿ ಎಂದರು.
ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಎ.ಎ ದಂಡಿಯಾ ಮಾತನಾಡಿ, ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ನಿಲ್ದಾಣವನ್ನು ಕೇಂದ್ರ ಸರ್ಕಾರ ನವೀನ ಮಾದರಿಯಲ್ಲಿ ಅಭಿವೃದ್ಧಿಗೊಳಿಸಿರುವುದು ಹೆಮ್ಮೆಯ ಸಂಗತಿ ಎಂದು ಅಭಿಪ್ರಾಯಪಟ್ಟರು.
ಮುಖ್ಯ ರೈಲ್ವೆ ವಾಣಿಜ್ಯ ನಿರೀಕ್ಷಕ ಚಂದ್ರಶೇಖರ್ ಮಾತನಾಡಿ, ಅಮೃತ ಭಾರತ ರೈಲ್ವೆ ಯೋಜನೆಯಡಿ ಹೈಟೆಕ್ ಮಾದರಿಯಲ್ಲಿ ನಿಲ್ದಾಣವನ್ನು ನವೀಕರಿಸಲಾಗಿದೆ, ಆಧುನಿಕ ಸೌಲಭ್ಯಗಳೊಂದಿಗೆ ಸೋಲಾರ್ ವಿದ್ಯುತ್ ಘಟಕಗಳನ್ನು ಸಹ ನಿರ್ಮಿಸಲಾಗಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಸ್ಥಳೀಯ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಸಹ ನಿರ್ಮಿಸಿರುವುದು ವಿಶೇಷವಾಗಿದೆ ಎಂದು ಹೇಳಿದರು.
ಹುಬ್ಬಳಿ-ಧಾರವಾಡ ರೈಲ್ವೆ ನಿಲ್ದಾಣವನ್ನು ಆಧುನಿಕ ಸೌಲಭ್ಯಗಳನ್ನು ಒಳಗೊಂಡಂತೆ ನವೀಕರಿಸಿ, ಸುಮಾರು ೧೭ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮೇಲ್ದರ್ಜೆರಿಸಲಾಗಿದೆ. ನೈರುತ್ಯ ರೈಲ್ವೆ ವಿಭಾಗದ ಐದು ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಅತ್ಯಾಧುನಿಕ ಮಾದರಿಯಲ್ಲಿ ಪುನಾರಾಭಿವೃದ್ಧಿಗೊಳಿಸಲಾಗಿದೆ.
ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಗಣೇಶ ಸಿಂಗ ಬ್ಯಾಳಿ ಮಾತನಾಡಿ, ಹೈಟೆಕ್ ರೂಪದಲ್ಲಿ ರೈಲ್ವೆ ನಿಲ್ದಾಣವನ್ನು ನವೀಕರಿಸಲಾಗಿರುವುದು ಸಂತಸದ ಸಂಗತಿಯಾಗಿದ್ದು, ಶುದ್ಧ ಕುಡಿಯುವ ನೀರು, ಸುಸಜ್ಜಿತ ತಂಗುದಾಣದೊಂದಿಗೆ, ಎಕ್ಸಲೇಟರ್ ವ್ಯವಸ್ಥೆಯನ್ನು ನಿರ್ಮಿಸಲಾಗಿದ್ದು ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ದಿನದ ಸುದ್ದಿ
ಬಾಕಿ ಕಾಮಗಾರಿ ಬೇಗ ಪೂರ್ಣಗೊಳಿಸಿ ; ಕಿರಿದಾದ ರಸ್ತೆ ವಿಸ್ತರಿಸಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ವಿವಿದೆಡೆ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಹಲವೆಡೆ ಕಿರಿದಾದ ರಸ್ತೆ ಹಾಗೂ ಅಂಡರ್ ಪಾಸ್, ಸೇವಾ ರಸ್ತೆ ಸ್ಥಾಪಿಸಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಂಸದರಾದ ಡಾ;ಪ್ರಭಾ ಮಲ್ಲಿಕಾರ್ಜುನ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಎಸ್.ಎಸ್.ಹೈಟೆಕ್ ಮುಖ್ಯ ಆಸ್ಪತ್ರೆಯ ಮುಖ್ಯ ದ್ವಾರ ರಾಷ್ಟ್ರೀಯ ಹೆದ್ದಾರಿ-48ರ, ಚೈನೇಜ್ ಅಂಡರ್ ಪಾಸ್ ಬಳಿ ಭಾರಿ ವಾಹನ, ನಗರ ಸಾರಿಗೆ, ಲಾರಿ, ಬಸ್ ವಾಹನಗಳು ಸಂಚರಿಸುತ್ತಿವೆ. ಇಲ್ಲಿನ ಕೆಳ ಸೇತುವೆ ತುಂಬಾ ಕಿರಿದಾಗಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ಕುರಿತು ಮಾಹಿತಿ ಪಡೆದ ಸಂಸದೆ ಶೀಘ್ರದಲ್ಲಿಯೇ ಇದನ್ನು ಪರಿಶೀಲಿಸಿ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಷ್ಟೇ ಅಲ್ಲದೇ ಕೆಲವು ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ಗಳಲ್ಲಿ ಸೂಕ್ತವಾದ ಬೆಳಕಿನ ವ್ಯವಸ್ಥೆ ಇಲ್ಲಾ. ಸಂಜೆ ಹಾಗೂ ರಾತ್ರಿಯ ಸಮಯದಲ್ಲಿ ಸಾರ್ವಜನಿಕರು, ಮಹಿಳೆಯರು, ವಿದ್ಯಾರ್ಥಿಗಳು ಸಂಚರಿಸುತ್ತಿರುತ್ತಾರೆ. ಅವರುಗಳಿಗೆ ತೊಂದರೆಯಾಗದಂತೆ ಅಗತ್ಯವಿರವ ಕಡೆ ಕ್ಯಾರೇಜ್-ವೇ ಹೆಚ್ಚಿಸುವುದರ ಜೊತೆಗೆ ಬೆಳಕಿನ ವಿದ್ಯುತ್ದೀಪದ ವ್ಯವಸ್ಥೆ ಮಾಡಬೇಕು. ಇದರಿಂದ ಕಳ್ಳತನ, ಅಪಘಾತ ಸೇರಿದಂತೆ ಇನ್ನಿತರೆ ಅಹಿತಕರ ಘಟನೆಗಳು ಜರುಗುವ ಸಂಭವ ಕಡಿಮೆಯಾಗುತ್ತದೆ ಎಂದ ಅವರು, ಮಳೆಗಾಲ ಆರಂಭವಾಗಿದೆ, ಹಲವೆಡೆ ನೀರು ನಿಲ್ಲುವ ಕುರಿತು ವರದಿ, ಆರೋಪ ಕೇಳಿ ಬರುತ್ತಿವೆ. ಆದ್ದರಿಂದ ಅಂತಹ ಸ್ಥಳಗಳನ್ನು ಗುರುತಿಸಿ ಸರಿಪಡಿಸಬೇಕು ಎಂದರು.
ಹರಿಹರ ತಾಲ್ಲೂಕಿನ ಹರಗನಹಳ್ಳಿ ಹಾಗೂ ಆನಗೋಡು, ಹೆಬ್ಬಾಳು ಬಳಿ ಏಕಾ-ಏಕಿ ತಿರುವು ಪಡೆದುಕೊಳ್ಳುವ ವಾಹನಗಳಿಗೆ ಡಾಬಾ ಹೋಟೆಲ್, ಪೆಟ್ರೋಲ್ ಬಂಕ್, ಇನ್ನಿತರೆ ಅಂಗಡಿ ಮುಂಗಟ್ಟುಗಳು ಅವೈಜ್ಞಾನಿಕ ಮತ್ತು ಅನಧಿಕೃತವಾಗಿ ನಿರ್ಮಿಸಿರುವುದರಿಂದ ಅಪಘಾತ ಹೆಚ್ಚಾಗುತ್ತಿವೆ. ಅಲ್ಲಿನ ಅನಧಿಕೃತ, ಮತ್ತು ನಿಯಮಬಾಹಿರವಾಗಿ ಇರುವವರ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.
ಟೋಲ್ಗಳಲ್ಲಿ ಎನ್ಪಿಆರ್ ನಂಬರ್ ಪ್ಲೇಟ್ ನೊಂದಣಿ ಮಾಡಿಕೊಳ್ಳುವ ಉತ್ತಮ ಗುಣಮಟ್ಟದ ಸಿಸಿಟಿವಿ ಮತ್ತು ಬೆಳಕಿನ ವಿದ್ಯುದೀಪಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ನಿರ್ದೇಶಿಸಿದರು. ಇದಕ್ಕೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿ 70 ಕಿ.ಮೀ ವ್ಯಾಪ್ತಿಗೆ 2 ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಯಾವುದೇ ರೀತಿಯ ಅಪಘಾತಗಳು ಸಂಭವಿಸಿದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಸ್ಪಂದಿಸಬೇಕು. ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 1033 ಸಂಖ್ಯೆ ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ. ಆದ್ದರಿಂದ ಸಹಾಯವಾಣಿ ಸಂಖ್ಯೆಯನ್ನು ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಸಹಾಯವಾಗುವಂತೆ ಕ್ರಮವಹಿಸಬೇಕು. ಕೆಲವು ಸಂದರ್ಭಗಳಲ್ಲಿ ಒಬ್ಬ ವ್ಯಕ್ತಿ ಇದ್ದಾಗ ಅಪಘಾತಗಳು ಸಂಭವಿಸಿದಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತುರ್ತು ಗಮನಹರಿಸಿ ಸರಿಯಾದ ಸಂದರ್ಭದಲ್ಲಿ ಅಂಬುಲೆನ್ಸ್, ರಕ್ಷಣೆ ಮಾಡುವ ಮೂಲಕ ಸ್ಪಂದಿಸಲು ತಿಳಿಸಿದರು.
ಅದೇ ರೀತಿ ಜಿಲ್ಲೆಯಲ್ಲಿ ಹಾದು ಹೋಗಿರುವ ಕುಂದವಾಡ ರಸ್ತೆಯಲ್ಲಿ ಸೇವಾ ರಸ್ತೆ ನಿರ್ಮಿಸಿಲ್ಲ. ಸೂಕ್ತ ಚರಂಡಿ ವ್ಯವಸ್ತೆ ಕಲ್ಪಿಸದ ಕಾರಣ ಮಳೆ ನೀರು ಸಂಪೂರ್ಣ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಠಿಯಾಗಿದೆ. ಇಂತಹ ಅವೈಜ್ಞಾನಿಕವಾದ ಕಾಮಗಾರಿ ನಿರ್ಮಿಸಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದರು.
ರಸ್ತೆಯ ಇಕ್ಕೆಲಗಳಲ್ಲಿ ಗಿಡಗಂಟಿಗಳು ಬೆಳೆದು ನಿಂತಿದ್ದು, ಸಾರ್ವಜನಿಕರಿಗೆ, ಸವಾರರಿಗೆ ತೊಡಕುಂಟಾಗಿರುವ ಕುರಿತು ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ತ್ವರಿತವಾಗಿ ತೆರವು ಮಾಡಿಸಿಸುವ ಮೂಲಕ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಲು ತಿಳಿಸಿದರು.
ಹೂವಿನ ಗೂಡಂಗಡಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸೂಚನೆ: ನಗರದ ಪಿ.ಬಿ ರಸ್ತೆಯ ದೇವರಾಜ ಅರಸು ವೃತ್ತದ ಬಳಿ ಇರುವ ಬಿಎಸ್ಎನ್ಎಲ್ ಕಚೇರಿಯ ಮುಂಭಾಗ ಸುಮಾರು 15-15 ಹೂವಿನ ಗೂಡಂಗಿಡಿಗಳಿದ್ದು, ಅವರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಾಹನ ಸಂಚಾರಕ್ಕೆ ಅಡ್ಡಿಪಡಿಸದಂತೆ ತಾತ್ಕಾಲಿಕವಾಗಿ ಸೂಕ್ತ ಕ್ರಮವಹಿಸಬೇಕು. ತದನಂತರದ ದಿನಗಳಲ್ಲಿ ಒಂದೆಡೆ ಶಾಶ್ವತ ಸ್ಥಳ ಗುರುತಿಸಿ ಸ್ಥಳಾಂತರಿಸುವ ಕಾರ್ಯ ಮಾಡಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು.
ಈ ವೇಳೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ನರೇಂದ್ರಬಾಬು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ ಸಂತೋಷ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ವಿಭಾಗೀಯ ನಿಯಂತ್ರಣಾಧಿಕಾರಿ ಫಕ್ರುದ್ದೀನ್, ಡಿಹೆಚ್ಓ ಡಾ.ಷಣ್ಮುಖಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮುಂದಿನ 3 ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳ ಈಡೇರಿಕೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹೊಸಪೇಟೆ:ಚುನಾವಣೆ ವೇಳೆ ಜನರಿಗೆ ನೀಡಿದ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಕಂದಾಯ ಇಲಾಖೆ ಹೊಸಪೇಟೆಯಲ್ಲಿ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1 ಲಕ್ಷದ 11 ಸಾವಿರದ 111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ನೀಡಿದ್ದು, ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಅನ್ಯಾಯ ಮಾಡುತ್ತಿದೆ ಎಂದು ದೂರಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸರ್ಕಾರ ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಒಂದು ಲಕ್ಷದ 111 ಜನರಿಗೆ ಹಕ್ಕು ಪತ್ರಗಳ ವಿತರಣೆ ಮಾಡಲಾಯಿತು.
ನಂತರ ಸರ್ಕಾರದ ಎಲ್ಲ ಇಲಾಖೆಗಳ ಸಾಧನೆಯ ಕಿರು ಹೊತ್ತಿಗೆಗಳನ್ನು ಬಿಡುಗಡೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಪುತ್ತಳಿಯನ್ನು ಅನಾವರಣಗೊಳಿಸಿದರು.

-
ದಿನದ ಸುದ್ದಿ6 days ago
ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ದಾವಣಗೆರೆ | ಕಾಂಗ್ರೆಸ್ ಸಾಧನೆಯ ಸಮರ್ಪಣೆ ಕಾರ್ಯಕ್ರಮ : ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ
-
ದಿನದ ಸುದ್ದಿ6 days ago
ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ
-
ಅಂಕಣ4 days ago
ಹನಿಗವಿತೆಗಳು | ಬೆಳಕಿನ ಬೆನ್ನ ಹಿಂದೆ
-
ದಿನದ ಸುದ್ದಿ7 days ago
ಚನ್ನಗಿರಿ | ರೈತರಿಗೆ, ವ್ಯಾಪಾರಿಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳ ಬಾಡಿಗೆ
-
ದಿನದ ಸುದ್ದಿ4 days ago
ಹೊಸಪೇಟೆ ನಗರದ ತುಂಬೆಲ್ಲಾ ಜಾಹೀರಾತುಗಳ ಹಾವಳಿ ; ಕಣ್ಣ್ಮುಚ್ಚಿ ಕುಳಿತ ಅಧಿಕಾರಿಗಳು
-
ದಿನದ ಸುದ್ದಿ3 days ago
ದಾವಣಗೆರೆ | ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ