Connect with us

ದಿನದ ಸುದ್ದಿ

ಸಿದ್ದರಾಮಯ್ಯ ಬುಲೆಟ್ ನಂತಹ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಯಡಿಯೂರಪ್ಪ..? ಏನವು ಪ್ರಶ್ನೆಗಳು..?

Published

on


  • ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರಿಗೆ ಪ್ರಶ್ನೆಗಳ ಸುರಿಮಳೆಗೈಯ್ದಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ಪ್ರಶ್ನೆಗಳನ್ನು ಅವರು ಹಂಚಿಕೊಂಡಿದ್ದಾರೆ.

ಸುದ್ದಿದಿನ ಡೆಸ್ಕ್ : ಯಡಿಯೂರಪ್ಪನವರು (yeddyurappa) ಇತ್ತೀಚೆಗೆ ಜನಸಂಕಲ್ಪ ಯಾತ್ರೆಯೊಂದರಲ್ಲಿ ಮೋದಿಯವರನ್ನು ( Modi ) ಟೀಕಿಸುವವರ ವಿರುದ್ಧ ಆ ಕ್ಷಣದಲ್ಲಿಯೆ ಪ್ರತಿಭಟಿಸಿ ಎಂದು ಕಾರ್ಯಕರ್ತರಿಗೆ ಆಜ್ಞೆ ಹೊರಡಿಸುವ ಧ್ವನಿಯಲ್ಲಿ ಹೇಳಿದ್ದಾರೆ. ಮಾನ್ಯ ಯಡಿಯೂರಪ್ಪನವರಿಗೆ ಈ ಕೆಳಕಂಡ ಪ್ರಶ್ನೆಗಳನ್ನು ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾದ ನಾನು ಕೇಳಬಯಸುತ್ತೇನೆ.

2014ಕ್ಕೂ ಮೊದಲು ಮನಮೋಹನ್ ಸಿಂಗ್ ಸರ್ಕಾರ ರೈತರ ಎಷ್ಟು ಸಾಲವನ್ನು ಮನ್ನಾ ಮಾಡಿತ್ತು? ಅಂಬಾನಿ, ಅದಾನಿ ಮುಂತಾದ ಕಾರ್ಪೊರೇಟ್ ಬಂಡವಾಳಿಗರ ಎಷ್ಟು ಸಾಲವನ್ನು ಮನ್ನಾ ಮಾಡಲಾಗಿತ್ತು? ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಯಾರ್ಯಾರ ಎಷ್ಟು ಸಾಲವನ್ನು ಮನ್ನಾ ಮಾಡಿದ್ದಾರೆ?

ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ಜನರು ಕಟ್ಟುತ್ತಿದ್ದ ತೆರಿಗೆ ಎಷ್ಟು? ಕಾರ್ಪೊರೇಟ್ ಬಂಡವಾಳಿಗರು ಪಾವತಿಸುತ್ತಿದ್ದ ತೆರಿಗೆ ಎಷ್ಟಿತ್ತು? ಈಗ ಎಷ್ಟಿದೆ? ಜನರ ಮೇಲಿನ ತೆರಿಗೆ ಹೆಚ್ಚಿಸಿ ಅದಾನಿ, ಅಂಬಾನಿ ಮುಂತಾದವರ ಮೇಲಿದ್ದ ತೆರಿಗೆಯನ್ನು ಶೇ.8 ರಷ್ಟು ಇಳಿಸಿದ್ದು ಏಕೆ?

2014 ಕ್ಕೆ ಮೊದಲು ಪೆಟ್ರೋಲ್, ಡೀಸೆಲ್‍ಗಳ ಮೇಲೆ ವಿಧಿಸುತ್ತಿದ್ದ ಸೆಸ್‍ಗಳೆಷ್ಟು? ಮೋದಿಯವರು ವಿಧಿಸುತ್ತಿರುವ ಸೆಸ್‍ಗಳ ಪ್ರಮಾಣವೆಷ್ಟು?
ಇದರಿಂದಾಗಿ ಪೆಟ್ರೋಲ್, ಡೀಸೆಲ್‍ಗಳ ಬೆಲೆ ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ? 2014 ರ ಮೊದಲು 10 ವರ್ಷಗಳ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟಿತ್ತು? 2014 ರಿಂದ ಇದುವರೆಗೆ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟು?

2014 ಕ್ಕೆ ಮೊದಲು ದೇಶದಲ್ಲಿ ನಿರುದ್ಯೋಗದ ಪ್ರಮಾಣ ಎಷ್ಟಿತ್ತು? ಈಗ ಎಷ್ಟಿದೆ?
2014ಕ್ಕೆ ಮೊದಲು ರೈತರ ತಲೆಯ ಮೇಲೆ, ದೇಶದ ಜನರ ತಲೆಯ ಮೇಲೆ ಇದ್ದ ಸಾಲವೆಷ್ಟು? ಈಗ ಎಷ್ಟಿದೆ? ರೈತರ ಹಾಗೂ ಇತರೆ ಜನಸಮುದಾಯಗಳ ಆದಾಯ ಎಷ್ಟಿತ್ತು? ಈಗ ಎಷ್ಟಿದೆ?

2014ಕ್ಕಿಂತ ಮೊದಲು ಮಹಿಳಾ ಕಾರ್ಮಿಕರ ಪ್ರಮಾಣ ಶೇ.32 ಇದ್ದದ್ದು ಈಗ ಶೇ.21 ಕ್ಕೆ ಇಳಿಯಲು ಮೋದಿ ಸರ್ಕಾರದ ಮಹಿಳಾ ವಿರೋಧಿ ನೀತಿಗಳು ಕಾರಣವಲ್ಲವೆ?

2014ಕ್ಕಿಂತ ಮೊದಲು ದೇಶದ ಮೇಲೆ 53 ಲಕ್ಷ ಕೋಟಿ ಇದ್ದದ್ದು, ಈಗ 155 ಲಕ್ಷ ಕೋಟಿಗೆ ಏರಿಸಿ ದೇಶವನ್ನು ದಿವಾಳಿ ಮಾಡಿದ್ದು ಮೋದಿಯವರಲ್ಲವೆ?

2018 ಕ್ಕೆ ಮೊದಲು 2.42 ಲಕ್ಷ ಕೋಟಿ ಇದ್ದ ರಾಜ್ಯದ ಸಾಲವು ಈ ವರ್ಷದ ಕೊನೆಯ ಹೊತ್ತಿಗೆ 5.30 ರಿಂದ 5.40 ಲಕ್ಷ ಕೋಟಿಗಳವರೆಗೆ ಏರಿಕೆಯಾಗಲು ಕಾರಣವೇನು?

2014 ಕ್ಕಿಂತ ಮೊದಲು ಕೇಂದ್ರವು ಕರ್ನಾಟಕದಿಂದ ವಿವಿಧ ಬಾಬತ್ತುಗಳಿಂದ ಸಂಗ್ರಹಿಸುತ್ತಿದ್ದ ತೆರಿಗೆಗಳು, ಸೆಸ್ಸುಗಳು, ಅಡಿಷನಲ್ ಎಕ್ಸೈಜ್ ಡ್ಯೂಟಿಗಳೆಷ್ಟು? ಈಗ ಎಷ್ಟು ಸಂಗ್ರಹಿಸುತ್ತಿದ್ದಾರೆ? ಕರ್ನಾಟಕಕ್ಕೆ ಎಷ್ಟು ಹಂಚಿಕೆ ಮಾಡುತ್ತಿದ್ದಾರೆ? ಕರ್ನಾಟಕದಿಂದ ಪ್ರತಿ ವರ್ಷ 3.5 ಲಕ್ಷ ಕೋಟಿಗಳವರೆಗೆ ದೋಚಿಕೊಂಡು ನಮಗೆ ಕೇವಲ 30 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇದನ್ನು ನ್ಯಾಯ ಎನ್ನಬೇಕೆ? ಇದರಿಂದಾಗಿ 2018-19 ಮತ್ತು 2019-20 ಕ್ಕೆ ಹೋಲಿಸಿದರೆ ರಾಜ್ಯವು ಈ ವರ್ಷ ಕನಿಷ್ಟ 60 ಸಾವಿರ ಕೋಟಿ ಕಳೆದುಕೊಳ್ಳುತ್ತಿದೆ.

2014 ಕ್ಕಿಂತ ಮೊದಲು ಕೇಂದ್ರ ಸರ್ಕಾರ ಅಡುಗೆ ಸಿಲಿಂಡರಿನ ಮೇಲೆ ನೀಡುತ್ತಿದ್ದ ಸಬ್ಸಿಡಿಗಳೆಷ್ಟು? ಈಗ ಎಷ್ಟು ಸಬ್ಸಿಡಿಗಳನ್ನು ನೀಡಲಾಗುತ್ತಿದೆ?

1947 ರಿಂದ 2014 ರವರೆಗೆ ಕೇಂದ್ರ ಸರ್ಕಾರವು ಸ್ಥಾಪಿಸಿದ್ದ ಸಾರ್ವಜನಿಕ ವಲಯದ ಕಂಪೆನಿ/ ಸಂಸ್ಥೆ/ಉದ್ದಿಮೆಗಳೆಷ್ಟು? ಹಿಂದಿನವರು ಸ್ಥಾಪಿಸಿದವುಗಳನ್ನು ಖಾಸಗೀಕರಿಸಿದ್ದೆಷ್ಟು?

2014ರ ನಂತರ ಮೋದಿಯವರು ಒಂದು ಕಂಪೆನಿ/ ಸಂಸ್ಥೆಯನ್ನೂ ಸ್ಥಾಪಿಸದೆ ಎಲ್ಲವುಗಳನ್ನೂ ಮಾರಾಟ ಮಾಡುತ್ತಿರುವುದನ್ನು ಒಳ್ಳೆಯ ಆಡಳಿತವೆನ್ನುತ್ತಾರೊ ಅಥವಾ ದಾರಿದ್ರ್ಯಾವಸ್ಥೆ ತಲುಪಿದ ಆಡಳಿತವೆನ್ನುತ್ತಾರೊ ಎಂದು ಯಡಿಯೂರಪ್ಪನವರು ಹೇಳಬೇಕು.

ಸರ್ಕಾರಿ ಸಂಸ್ಥೆಗಳನ್ನು ಮುಚ್ಚುತ್ತಿರುವುದರಿಂದ ದಲಿತರು, ಹಿಂದುಳಿದವರಿಗೆ ಮೀಸಲಾತಿ ಅವಕಾಶಗಳು ಮುಚ್ಚಿ ಹೋಗುತ್ತಿವೆ. ಮೀಸಲಾತಿ ಹೊರಟು ಹೋಗಲಿ ಎಂದು ಭಾವಿಸಿಯೆ ಖಾಸಗೀಕರಣ ಮಾಡುತ್ತಿರುವಂತಿದೆ. ಇದನ್ನು ಮನುವಾದಿ ಸಿದ್ಧಾಂತದ ಮೌನ ಅನುಷ್ಠಾನದ ವಿಧಾನ ಎನ್ನದೆ ಬೇರೆ ದಾರಿ ಇದೆಯೆ?

2014ಕ್ಕೆ ಮೊದಲು ರಾಜ್ಯದ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಅನುದಾನದ ಪಾಲೆಷ್ಟು? 2014 ರ ನಂತರ ನೀಡುತ್ತಿರುವ ಪಾಲು ಎಷ್ಟು?

2014 ಕ್ಕೆ ಮೊದಲು ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದ ಸರಾಸರಿ ಜಿಡಿಪಿ ಬೆಳವಣಿಗೆ ಎಷ್ಟು? ಕಳೆದ 8 ವರ್ಷಗಳ ಸರಾಸರಿ ಬೆಳವಣಿಗೆ ಎಷ್ಟು?

2004-05 ರಿಂದ 2013-14 ರವರೆಗೆ ಕೇಂದ್ರ ಸರ್ಕಾರವು ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ನೀಡಿದ ಬೆಂಬಲ ಬೆಲೆಗಳ ಪ್ರಮಾಣ ಎಷ್ಟು? 2014 ರಿಂದ 2021-22 ರವರೆಗೆ ನೀಡಿದ ಬೆಂಬಲ ಬೆಲೆಗಳೆಷ್ಟು?

2014 ಕ್ಕಿಂತ ಮೊದಲು ದೇಶದ ವ್ಯಾಪಾರದ ಕೊರತೆ ಎಷ್ಟಿತ್ತು? ಈಗ ಎಷ್ಟಿದೆ? ಮೇಕ್ ಇಂಡಿಯಾ ಎಂದವರು ಯಾರು? ಚೀನಾದಿಂದ ಆಮದು ಮಾಡಿಕೊಳ್ಳುವ ಪ್ರಮಾಣವನ್ನು ದುಪ್ಪಟ್ಟು ಮಾಡಿದ್ದು ಏಕೆ?

2014 ಕ್ಕಿಂತ ಮೊದಲು ರೂಪಾಯಿಯ ಮೌಲ್ಯ ಡಾಲರಿನ ಎದುರು ಸರಾಸರಿ 58 ರೂ ಇದ್ದದ್ದು ಎಷ್ಟಿತ್ತು? ಈಗ 82.5 ರೂಗಳಿಗೆ ಬೀಳಿಸಿದ್ದನ್ನು ಮೋದಿಯವರ ಜಗಮೆಚ್ಚುವ ಕೆಲಸ ಎನ್ನಬೇಕೆ?

2014 ಕ್ಕಿಂತ ಮೊದಲು ಭಾರತ ಹಸಿವು ಮತ್ತು ಬಡತನದ ಸೂಚ್ಯಂಕಗಳಲ್ಲಿ ಯಾವ ಸ್ಥಾನದಲ್ಲಿತ್ತು? ಈಗ ಯಾವ ಸ್ಥಾನದಲ್ಲಿದೆ?

2015 ಕ್ಕಿಂತ ಮೊದಲು ಭಾರತೀಯರ ಸ್ವಾತಂತ್ರ್ಯ ಸೂಚ್ಯಂಕವು 75 ನೇ ಸ್ಥಾನದಲ್ಲಿದ್ದದ್ದು 2020ರ ವೇಳೆಗೆ 111 ನೇ ಸ್ಥಾನಕ್ಕೆ ಕುಸಿಯಲು ಮೋದಿ ಕಾರಣರಲ್ಲವೆ?

2013-2019 ರವರೆಗೆ ಮೋದಿಯವರು ಎಷ್ಟು ಭರವಸೆಗಳನ್ನು ದೇಶದ ಜನರಿಗೆ ನೀಡಿದ್ದರು? ಅವುಗಳಲ್ಲಿ ಎಷ್ಟನ್ನು ಈಡೇರಿಸಿದ್ದಾರೆ?

ಜಾಗತಿಕ ಸ್ಪರ್ಧಾತ್ಮಕತೆಯಲ್ಲಿ ಭಾರತದ ಸ್ಥಾನ 2013 ರಲ್ಲಿ 40 ರ‌್ಯಾಂಕ್ ಇದ್ದದ್ದು 2021 ರ ಹೊತ್ತಿಗೆ 43 ಕ್ಕೆ ಸ್ಥಾನಕ್ಕೆ ಕುಸಿಯಲು ಕಾರಣವೇನು?

ವಿಶ್ವ ಸಂಸ್ಥೆಯ ಸಮೀಕ್ಷೆಯಲ್ಲಿ ಭಾರತೀಯರ ಸಂತೋಷದ ಸೂಚ್ಯಂಕವು 2015 ರಲ್ಲಿ 117 ನೇ ಸ್ಥಾನದಲ್ಲಿದ್ದದ್ದು 2021 ರ ಹೊತ್ತಿಗೆ 139 ಸ್ಥಾನಕ್ಕೆ ಕುಸಿದದ್ದು ಯಾಕೆ? ಇದಕ್ಕೆ ಯಾರು ಕಾರಣ?

ಜಾಗತಿಕ ಆರ್ಥಿಕ ಸ್ವಾತಂತ್ರ್ಯದಲ್ಲಿ ಭಾರತದ ಸ್ಥಾನವು 2015 ರಲ್ಲಿ 95 ಸ್ಥಾನದಲ್ಲಿದ್ದದ್ದು 2020 ರ ಹೊತ್ತಿಗೆ 105 ನೇ ಸ್ಥಾನಕ್ಕೆ ಕುಸಿದಿದ್ದು ಯಾಕೆ?

ಟ್ರಾನ್ಸಪೆರೆನ್ಸಿ ಇಂಟರ್ ನ್ಯಾಷನಲ್ ಗ್ಲೋಬಲ್ ಕರಪ್ಷನ್ ಇಂಡೆಕ್ಸ್‌ನಲ್ಲಿ 2014 ರಲ್ಲಿ 85ನೇ ಸ್ಥಾನದಲ್ಲಿದ್ದ ಭಾರತ 2020 ರ ವೇಳೆಗೆ 86 ನೆ ಸ್ಥಾನಕ್ಕೆ ಕುಸಿಯಲು ಕಾರಣವೇನು? ಇದರ ಹೊಣೆಯನ್ನು ಮೋದಿಯವರೆ ಹೊರಬೇಕಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಜೆಂಡರ್ ಗ್ಯಾಪ್‍ನ ಸೂಚ್ಯಂಕದಲ್ಲಿ 2014 ರಲ್ಲಿ 114 ನೇ ಸ್ಥಾನದಲ್ಲಿದ್ದ ಭಾರತ 2021 ರಲ್ಲಿ ತೀವ್ರ ಕುಸಿತ ಕಾಣಲು ಕಾರಣ ಯಾರು?

ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಆರ್ಥಿಕ ಸ್ಪರ್ಧಾತ್ಮಕತೆಯಲ್ಲಿ 2017 ರಲ್ಲಿ ಭಾರತವು 40 ನೇ ರ‌್ಯಾಂಕ್ ನಲ್ಲಿದ್ದದ್ದು 2020 ರ ವೇಳೆಗೆ 68 ನೇ ಸ್ಥಾನಕ್ಕೆ ಕುಸಿಯಲು ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಕಾರಣವಲ್ಲವೆ?

ಪಾಸ್ ಪೋರ್ಟ್ ಇಂಡೆಕ್ಸ್‍ನಲ್ಲಿ 2013ರಲ್ಲಿ 74ನೇ ಸ್ಥಾನದಲ್ಲಿದ್ದ ಭಾರತವು 2021ರ ವೇಳೆಗೆ 85 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು? ಇದರಿಂದ ಭಾರತೀಯರ ಘನತೆ ಕಡಿಮೆಯಾಗಲು ಮೋದಿಯವರ ಆಡಳಿತ ಕಾರಣವಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಬಂಡವಾಳ ಸೂಚ್ಯಂಕದಲ್ಲಿ 78ನೇ ಸ್ಥಾನದಲ್ಲಿದ್ದ ಭಾರತವು 2017 ರ ವೇಳೆಗೆ 103 ನೇ ಸ್ಥಾನಕ್ಕೆ ಕುಸಿಯಲು ಮೋದಿಯವರು ಕಾರಣರಲ್ಲವೆ?

ಬ್ಲೂಮ್‍ಬರ್ಗ್ ಸಮೀಕ್ಷೆಗಳ ಪ್ರಕಾರ ಭಾರತದ ಆರೋಗ್ಯ ಕ್ಷೇತ್ರದ ಸೂಚ್ಯಂಕವು 2015 ರಲ್ಲಿ 103 ನೇ ಸ್ಥಾನದಲ್ಲಿದ್ದದ್ದು 2020 ರ ವೇಳೆಗೆ 120 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು?

ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ 2016 ರಲ್ಲಿ 110 ನೇ ಸ್ಥಾನದಲ್ಲಿದ್ದ ಭಾರತವು 2021 ರ ವೇಳೆಗೆ 120 ನೇ ಸ್ಥಾನಕ್ಕೆ, ಬಾಂಗ್ಲಾ, ನೇಪಾಳ, ಶ್ರೀ ಲಂಕಾ, ಭೂತಾನ್ ಗಳಿಗಿಂತ ಕೆಳಕ್ಕೆ ಕುಸಿದು ಬೀಳಲು ಕಾರಣ ಮೋದಿಯವರಲ್ಲವೆ?

ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ಎಡವಿ ದೇಶದ ಜನರನ್ನು ಸಾವಿನ ಸಮುದ್ರದಲ್ಲಿ ಮುಳುಗಿಸಿದವರು ಮೋದಿಯವರಲ್ಲವೆ? ಜಾಗತಿಕವಾಗಿ ಕೋವಿಡ್ಡನ್ನು ಅತಿ ಕೆಟ್ಟದಾಗಿ ನಿಭಾಯಿಸಿದ 5 ಕೆಟ್ಟ ನಾಯಕರಲ್ಲಿ ಮೋದಿಯವರೂ ಒಬ್ಬರೆಂದು ಅಂತರರಾಷ್ಟ್ರೀಯ ಮಟ್ಟದ ಪತ್ರಿಕೆಗಳು ವರದಿ ಮಾಡಿದ್ದನ್ನು ದೇಶ ಮರೆತಿದೆಯೆ? ನಿಮಗೂ ಮರೆತು ಹೋಗಿದೆಯೆ ಯಡಿಯೂರಪ್ಪನವರೆ?

2014 ಕ್ಕಿಂತ ಮೊದಲು ಇದ್ದ ಸಣ್ಣ, ಮಧ್ಯಮ, ಗುಡಿ ಕೈಗಾರಿಕೆಗಳೆಷ್ಟು? ಈಗ ಎಷ್ಟಿವೆ? ಶೇ. 60 ರಷ್ಟು ಕಂಪೆನಿಗಳು ಮುಚ್ಚಲು, ಮುಚ್ಚುವ ಹಂತಕ್ಕೆ ಬರಲು ಕಾರಣ ಯಾರು?

ಮನೆಗೆ ಮಾರಿ ಪರರಿಗೆ ಉಪಕಾರಿಯಂತೆ ವರ್ತಿಸುವ ಪ್ರಧಾನಿ ನರೇಂದ್ರ ಮೋದಿವರಿಂದಾಗಿಯೆ ದೇಶ ದುರವಸ್ಥೆಗೆ ಸಿಲುಕಿಕೊಂಡಿದೆ. ಆದರೂ ಅವರನ್ನು ಟೀಕಿಸಬೇಡಿ ಎಂದು ಆಜ್ಞೆ ಹೊರಡಿಸುವ ಯಡಿಯೂರಪ್ಪನವರನ್ನು, ಬೊಮ್ಮಾಯಿಯವರನ್ನು ಹಾಗೂ ಬಿಜೆಪಿಯವರನ್ನು ಏನೆಂದು ಕರೆಯಬೇಕು?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending