Connect with us

ದಿನದ ಸುದ್ದಿ

ಸಿದ್ದರಾಮಯ್ಯ ಬುಲೆಟ್ ನಂತಹ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಯಡಿಯೂರಪ್ಪ..? ಏನವು ಪ್ರಶ್ನೆಗಳು..?

Published

on


  • ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರಿಗೆ ಪ್ರಶ್ನೆಗಳ ಸುರಿಮಳೆಗೈಯ್ದಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ಪ್ರಶ್ನೆಗಳನ್ನು ಅವರು ಹಂಚಿಕೊಂಡಿದ್ದಾರೆ.

ಸುದ್ದಿದಿನ ಡೆಸ್ಕ್ : ಯಡಿಯೂರಪ್ಪನವರು (yeddyurappa) ಇತ್ತೀಚೆಗೆ ಜನಸಂಕಲ್ಪ ಯಾತ್ರೆಯೊಂದರಲ್ಲಿ ಮೋದಿಯವರನ್ನು ( Modi ) ಟೀಕಿಸುವವರ ವಿರುದ್ಧ ಆ ಕ್ಷಣದಲ್ಲಿಯೆ ಪ್ರತಿಭಟಿಸಿ ಎಂದು ಕಾರ್ಯಕರ್ತರಿಗೆ ಆಜ್ಞೆ ಹೊರಡಿಸುವ ಧ್ವನಿಯಲ್ಲಿ ಹೇಳಿದ್ದಾರೆ. ಮಾನ್ಯ ಯಡಿಯೂರಪ್ಪನವರಿಗೆ ಈ ಕೆಳಕಂಡ ಪ್ರಶ್ನೆಗಳನ್ನು ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾದ ನಾನು ಕೇಳಬಯಸುತ್ತೇನೆ.

2014ಕ್ಕೂ ಮೊದಲು ಮನಮೋಹನ್ ಸಿಂಗ್ ಸರ್ಕಾರ ರೈತರ ಎಷ್ಟು ಸಾಲವನ್ನು ಮನ್ನಾ ಮಾಡಿತ್ತು? ಅಂಬಾನಿ, ಅದಾನಿ ಮುಂತಾದ ಕಾರ್ಪೊರೇಟ್ ಬಂಡವಾಳಿಗರ ಎಷ್ಟು ಸಾಲವನ್ನು ಮನ್ನಾ ಮಾಡಲಾಗಿತ್ತು? ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಯಾರ್ಯಾರ ಎಷ್ಟು ಸಾಲವನ್ನು ಮನ್ನಾ ಮಾಡಿದ್ದಾರೆ?

ಮೋದಿಯವರು ಅಧಿಕಾರಕ್ಕೆ ಬರುವ ಮೊದಲು ಜನರು ಕಟ್ಟುತ್ತಿದ್ದ ತೆರಿಗೆ ಎಷ್ಟು? ಕಾರ್ಪೊರೇಟ್ ಬಂಡವಾಳಿಗರು ಪಾವತಿಸುತ್ತಿದ್ದ ತೆರಿಗೆ ಎಷ್ಟಿತ್ತು? ಈಗ ಎಷ್ಟಿದೆ? ಜನರ ಮೇಲಿನ ತೆರಿಗೆ ಹೆಚ್ಚಿಸಿ ಅದಾನಿ, ಅಂಬಾನಿ ಮುಂತಾದವರ ಮೇಲಿದ್ದ ತೆರಿಗೆಯನ್ನು ಶೇ.8 ರಷ್ಟು ಇಳಿಸಿದ್ದು ಏಕೆ?

2014 ಕ್ಕೆ ಮೊದಲು ಪೆಟ್ರೋಲ್, ಡೀಸೆಲ್‍ಗಳ ಮೇಲೆ ವಿಧಿಸುತ್ತಿದ್ದ ಸೆಸ್‍ಗಳೆಷ್ಟು? ಮೋದಿಯವರು ವಿಧಿಸುತ್ತಿರುವ ಸೆಸ್‍ಗಳ ಪ್ರಮಾಣವೆಷ್ಟು?
ಇದರಿಂದಾಗಿ ಪೆಟ್ರೋಲ್, ಡೀಸೆಲ್‍ಗಳ ಬೆಲೆ ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ? 2014 ರ ಮೊದಲು 10 ವರ್ಷಗಳ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟಿತ್ತು? 2014 ರಿಂದ ಇದುವರೆಗೆ ಕಚ್ಛಾ ತೈಲದ ಸರಾಸರಿ ಬೆಲೆಗಳು ಎಷ್ಟು?

2014 ಕ್ಕೆ ಮೊದಲು ದೇಶದಲ್ಲಿ ನಿರುದ್ಯೋಗದ ಪ್ರಮಾಣ ಎಷ್ಟಿತ್ತು? ಈಗ ಎಷ್ಟಿದೆ?
2014ಕ್ಕೆ ಮೊದಲು ರೈತರ ತಲೆಯ ಮೇಲೆ, ದೇಶದ ಜನರ ತಲೆಯ ಮೇಲೆ ಇದ್ದ ಸಾಲವೆಷ್ಟು? ಈಗ ಎಷ್ಟಿದೆ? ರೈತರ ಹಾಗೂ ಇತರೆ ಜನಸಮುದಾಯಗಳ ಆದಾಯ ಎಷ್ಟಿತ್ತು? ಈಗ ಎಷ್ಟಿದೆ?

2014ಕ್ಕಿಂತ ಮೊದಲು ಮಹಿಳಾ ಕಾರ್ಮಿಕರ ಪ್ರಮಾಣ ಶೇ.32 ಇದ್ದದ್ದು ಈಗ ಶೇ.21 ಕ್ಕೆ ಇಳಿಯಲು ಮೋದಿ ಸರ್ಕಾರದ ಮಹಿಳಾ ವಿರೋಧಿ ನೀತಿಗಳು ಕಾರಣವಲ್ಲವೆ?

2014ಕ್ಕಿಂತ ಮೊದಲು ದೇಶದ ಮೇಲೆ 53 ಲಕ್ಷ ಕೋಟಿ ಇದ್ದದ್ದು, ಈಗ 155 ಲಕ್ಷ ಕೋಟಿಗೆ ಏರಿಸಿ ದೇಶವನ್ನು ದಿವಾಳಿ ಮಾಡಿದ್ದು ಮೋದಿಯವರಲ್ಲವೆ?

2018 ಕ್ಕೆ ಮೊದಲು 2.42 ಲಕ್ಷ ಕೋಟಿ ಇದ್ದ ರಾಜ್ಯದ ಸಾಲವು ಈ ವರ್ಷದ ಕೊನೆಯ ಹೊತ್ತಿಗೆ 5.30 ರಿಂದ 5.40 ಲಕ್ಷ ಕೋಟಿಗಳವರೆಗೆ ಏರಿಕೆಯಾಗಲು ಕಾರಣವೇನು?

2014 ಕ್ಕಿಂತ ಮೊದಲು ಕೇಂದ್ರವು ಕರ್ನಾಟಕದಿಂದ ವಿವಿಧ ಬಾಬತ್ತುಗಳಿಂದ ಸಂಗ್ರಹಿಸುತ್ತಿದ್ದ ತೆರಿಗೆಗಳು, ಸೆಸ್ಸುಗಳು, ಅಡಿಷನಲ್ ಎಕ್ಸೈಜ್ ಡ್ಯೂಟಿಗಳೆಷ್ಟು? ಈಗ ಎಷ್ಟು ಸಂಗ್ರಹಿಸುತ್ತಿದ್ದಾರೆ? ಕರ್ನಾಟಕಕ್ಕೆ ಎಷ್ಟು ಹಂಚಿಕೆ ಮಾಡುತ್ತಿದ್ದಾರೆ? ಕರ್ನಾಟಕದಿಂದ ಪ್ರತಿ ವರ್ಷ 3.5 ಲಕ್ಷ ಕೋಟಿಗಳವರೆಗೆ ದೋಚಿಕೊಂಡು ನಮಗೆ ಕೇವಲ 30 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇದನ್ನು ನ್ಯಾಯ ಎನ್ನಬೇಕೆ? ಇದರಿಂದಾಗಿ 2018-19 ಮತ್ತು 2019-20 ಕ್ಕೆ ಹೋಲಿಸಿದರೆ ರಾಜ್ಯವು ಈ ವರ್ಷ ಕನಿಷ್ಟ 60 ಸಾವಿರ ಕೋಟಿ ಕಳೆದುಕೊಳ್ಳುತ್ತಿದೆ.

2014 ಕ್ಕಿಂತ ಮೊದಲು ಕೇಂದ್ರ ಸರ್ಕಾರ ಅಡುಗೆ ಸಿಲಿಂಡರಿನ ಮೇಲೆ ನೀಡುತ್ತಿದ್ದ ಸಬ್ಸಿಡಿಗಳೆಷ್ಟು? ಈಗ ಎಷ್ಟು ಸಬ್ಸಿಡಿಗಳನ್ನು ನೀಡಲಾಗುತ್ತಿದೆ?

1947 ರಿಂದ 2014 ರವರೆಗೆ ಕೇಂದ್ರ ಸರ್ಕಾರವು ಸ್ಥಾಪಿಸಿದ್ದ ಸಾರ್ವಜನಿಕ ವಲಯದ ಕಂಪೆನಿ/ ಸಂಸ್ಥೆ/ಉದ್ದಿಮೆಗಳೆಷ್ಟು? ಹಿಂದಿನವರು ಸ್ಥಾಪಿಸಿದವುಗಳನ್ನು ಖಾಸಗೀಕರಿಸಿದ್ದೆಷ್ಟು?

2014ರ ನಂತರ ಮೋದಿಯವರು ಒಂದು ಕಂಪೆನಿ/ ಸಂಸ್ಥೆಯನ್ನೂ ಸ್ಥಾಪಿಸದೆ ಎಲ್ಲವುಗಳನ್ನೂ ಮಾರಾಟ ಮಾಡುತ್ತಿರುವುದನ್ನು ಒಳ್ಳೆಯ ಆಡಳಿತವೆನ್ನುತ್ತಾರೊ ಅಥವಾ ದಾರಿದ್ರ್ಯಾವಸ್ಥೆ ತಲುಪಿದ ಆಡಳಿತವೆನ್ನುತ್ತಾರೊ ಎಂದು ಯಡಿಯೂರಪ್ಪನವರು ಹೇಳಬೇಕು.

ಸರ್ಕಾರಿ ಸಂಸ್ಥೆಗಳನ್ನು ಮುಚ್ಚುತ್ತಿರುವುದರಿಂದ ದಲಿತರು, ಹಿಂದುಳಿದವರಿಗೆ ಮೀಸಲಾತಿ ಅವಕಾಶಗಳು ಮುಚ್ಚಿ ಹೋಗುತ್ತಿವೆ. ಮೀಸಲಾತಿ ಹೊರಟು ಹೋಗಲಿ ಎಂದು ಭಾವಿಸಿಯೆ ಖಾಸಗೀಕರಣ ಮಾಡುತ್ತಿರುವಂತಿದೆ. ಇದನ್ನು ಮನುವಾದಿ ಸಿದ್ಧಾಂತದ ಮೌನ ಅನುಷ್ಠಾನದ ವಿಧಾನ ಎನ್ನದೆ ಬೇರೆ ದಾರಿ ಇದೆಯೆ?

2014ಕ್ಕೆ ಮೊದಲು ರಾಜ್ಯದ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಅನುದಾನದ ಪಾಲೆಷ್ಟು? 2014 ರ ನಂತರ ನೀಡುತ್ತಿರುವ ಪಾಲು ಎಷ್ಟು?

2014 ಕ್ಕೆ ಮೊದಲು ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದ ಸರಾಸರಿ ಜಿಡಿಪಿ ಬೆಳವಣಿಗೆ ಎಷ್ಟು? ಕಳೆದ 8 ವರ್ಷಗಳ ಸರಾಸರಿ ಬೆಳವಣಿಗೆ ಎಷ್ಟು?

2004-05 ರಿಂದ 2013-14 ರವರೆಗೆ ಕೇಂದ್ರ ಸರ್ಕಾರವು ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ನೀಡಿದ ಬೆಂಬಲ ಬೆಲೆಗಳ ಪ್ರಮಾಣ ಎಷ್ಟು? 2014 ರಿಂದ 2021-22 ರವರೆಗೆ ನೀಡಿದ ಬೆಂಬಲ ಬೆಲೆಗಳೆಷ್ಟು?

2014 ಕ್ಕಿಂತ ಮೊದಲು ದೇಶದ ವ್ಯಾಪಾರದ ಕೊರತೆ ಎಷ್ಟಿತ್ತು? ಈಗ ಎಷ್ಟಿದೆ? ಮೇಕ್ ಇಂಡಿಯಾ ಎಂದವರು ಯಾರು? ಚೀನಾದಿಂದ ಆಮದು ಮಾಡಿಕೊಳ್ಳುವ ಪ್ರಮಾಣವನ್ನು ದುಪ್ಪಟ್ಟು ಮಾಡಿದ್ದು ಏಕೆ?

2014 ಕ್ಕಿಂತ ಮೊದಲು ರೂಪಾಯಿಯ ಮೌಲ್ಯ ಡಾಲರಿನ ಎದುರು ಸರಾಸರಿ 58 ರೂ ಇದ್ದದ್ದು ಎಷ್ಟಿತ್ತು? ಈಗ 82.5 ರೂಗಳಿಗೆ ಬೀಳಿಸಿದ್ದನ್ನು ಮೋದಿಯವರ ಜಗಮೆಚ್ಚುವ ಕೆಲಸ ಎನ್ನಬೇಕೆ?

2014 ಕ್ಕಿಂತ ಮೊದಲು ಭಾರತ ಹಸಿವು ಮತ್ತು ಬಡತನದ ಸೂಚ್ಯಂಕಗಳಲ್ಲಿ ಯಾವ ಸ್ಥಾನದಲ್ಲಿತ್ತು? ಈಗ ಯಾವ ಸ್ಥಾನದಲ್ಲಿದೆ?

2015 ಕ್ಕಿಂತ ಮೊದಲು ಭಾರತೀಯರ ಸ್ವಾತಂತ್ರ್ಯ ಸೂಚ್ಯಂಕವು 75 ನೇ ಸ್ಥಾನದಲ್ಲಿದ್ದದ್ದು 2020ರ ವೇಳೆಗೆ 111 ನೇ ಸ್ಥಾನಕ್ಕೆ ಕುಸಿಯಲು ಮೋದಿ ಕಾರಣರಲ್ಲವೆ?

2013-2019 ರವರೆಗೆ ಮೋದಿಯವರು ಎಷ್ಟು ಭರವಸೆಗಳನ್ನು ದೇಶದ ಜನರಿಗೆ ನೀಡಿದ್ದರು? ಅವುಗಳಲ್ಲಿ ಎಷ್ಟನ್ನು ಈಡೇರಿಸಿದ್ದಾರೆ?

ಜಾಗತಿಕ ಸ್ಪರ್ಧಾತ್ಮಕತೆಯಲ್ಲಿ ಭಾರತದ ಸ್ಥಾನ 2013 ರಲ್ಲಿ 40 ರ‌್ಯಾಂಕ್ ಇದ್ದದ್ದು 2021 ರ ಹೊತ್ತಿಗೆ 43 ಕ್ಕೆ ಸ್ಥಾನಕ್ಕೆ ಕುಸಿಯಲು ಕಾರಣವೇನು?

ವಿಶ್ವ ಸಂಸ್ಥೆಯ ಸಮೀಕ್ಷೆಯಲ್ಲಿ ಭಾರತೀಯರ ಸಂತೋಷದ ಸೂಚ್ಯಂಕವು 2015 ರಲ್ಲಿ 117 ನೇ ಸ್ಥಾನದಲ್ಲಿದ್ದದ್ದು 2021 ರ ಹೊತ್ತಿಗೆ 139 ಸ್ಥಾನಕ್ಕೆ ಕುಸಿದದ್ದು ಯಾಕೆ? ಇದಕ್ಕೆ ಯಾರು ಕಾರಣ?

ಜಾಗತಿಕ ಆರ್ಥಿಕ ಸ್ವಾತಂತ್ರ್ಯದಲ್ಲಿ ಭಾರತದ ಸ್ಥಾನವು 2015 ರಲ್ಲಿ 95 ಸ್ಥಾನದಲ್ಲಿದ್ದದ್ದು 2020 ರ ಹೊತ್ತಿಗೆ 105 ನೇ ಸ್ಥಾನಕ್ಕೆ ಕುಸಿದಿದ್ದು ಯಾಕೆ?

ಟ್ರಾನ್ಸಪೆರೆನ್ಸಿ ಇಂಟರ್ ನ್ಯಾಷನಲ್ ಗ್ಲೋಬಲ್ ಕರಪ್ಷನ್ ಇಂಡೆಕ್ಸ್‌ನಲ್ಲಿ 2014 ರಲ್ಲಿ 85ನೇ ಸ್ಥಾನದಲ್ಲಿದ್ದ ಭಾರತ 2020 ರ ವೇಳೆಗೆ 86 ನೆ ಸ್ಥಾನಕ್ಕೆ ಕುಸಿಯಲು ಕಾರಣವೇನು? ಇದರ ಹೊಣೆಯನ್ನು ಮೋದಿಯವರೆ ಹೊರಬೇಕಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಜೆಂಡರ್ ಗ್ಯಾಪ್‍ನ ಸೂಚ್ಯಂಕದಲ್ಲಿ 2014 ರಲ್ಲಿ 114 ನೇ ಸ್ಥಾನದಲ್ಲಿದ್ದ ಭಾರತ 2021 ರಲ್ಲಿ ತೀವ್ರ ಕುಸಿತ ಕಾಣಲು ಕಾರಣ ಯಾರು?

ವಿಶ್ವ ಆರ್ಥಿಕ ವೇದಿಕೆಯ ಪ್ರಕಾರ ಜಾಗತಿಕ ಆರ್ಥಿಕ ಸ್ಪರ್ಧಾತ್ಮಕತೆಯಲ್ಲಿ 2017 ರಲ್ಲಿ ಭಾರತವು 40 ನೇ ರ‌್ಯಾಂಕ್ ನಲ್ಲಿದ್ದದ್ದು 2020 ರ ವೇಳೆಗೆ 68 ನೇ ಸ್ಥಾನಕ್ಕೆ ಕುಸಿಯಲು ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಕಾರಣವಲ್ಲವೆ?

ಪಾಸ್ ಪೋರ್ಟ್ ಇಂಡೆಕ್ಸ್‍ನಲ್ಲಿ 2013ರಲ್ಲಿ 74ನೇ ಸ್ಥಾನದಲ್ಲಿದ್ದ ಭಾರತವು 2021ರ ವೇಳೆಗೆ 85 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು? ಇದರಿಂದ ಭಾರತೀಯರ ಘನತೆ ಕಡಿಮೆಯಾಗಲು ಮೋದಿಯವರ ಆಡಳಿತ ಕಾರಣವಲ್ಲವೆ?

ವಿಶ್ವ ಆರ್ಥಿಕ ವೇದಿಕೆಯ ಬಂಡವಾಳ ಸೂಚ್ಯಂಕದಲ್ಲಿ 78ನೇ ಸ್ಥಾನದಲ್ಲಿದ್ದ ಭಾರತವು 2017 ರ ವೇಳೆಗೆ 103 ನೇ ಸ್ಥಾನಕ್ಕೆ ಕುಸಿಯಲು ಮೋದಿಯವರು ಕಾರಣರಲ್ಲವೆ?

ಬ್ಲೂಮ್‍ಬರ್ಗ್ ಸಮೀಕ್ಷೆಗಳ ಪ್ರಕಾರ ಭಾರತದ ಆರೋಗ್ಯ ಕ್ಷೇತ್ರದ ಸೂಚ್ಯಂಕವು 2015 ರಲ್ಲಿ 103 ನೇ ಸ್ಥಾನದಲ್ಲಿದ್ದದ್ದು 2020 ರ ವೇಳೆಗೆ 120 ನೇ ಸ್ಥಾನಕ್ಕೆ ಕುಸಿಯಲು ಕಾರಣ ಯಾರು?

ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ 2016 ರಲ್ಲಿ 110 ನೇ ಸ್ಥಾನದಲ್ಲಿದ್ದ ಭಾರತವು 2021 ರ ವೇಳೆಗೆ 120 ನೇ ಸ್ಥಾನಕ್ಕೆ, ಬಾಂಗ್ಲಾ, ನೇಪಾಳ, ಶ್ರೀ ಲಂಕಾ, ಭೂತಾನ್ ಗಳಿಗಿಂತ ಕೆಳಕ್ಕೆ ಕುಸಿದು ಬೀಳಲು ಕಾರಣ ಮೋದಿಯವರಲ್ಲವೆ?

ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ಎಡವಿ ದೇಶದ ಜನರನ್ನು ಸಾವಿನ ಸಮುದ್ರದಲ್ಲಿ ಮುಳುಗಿಸಿದವರು ಮೋದಿಯವರಲ್ಲವೆ? ಜಾಗತಿಕವಾಗಿ ಕೋವಿಡ್ಡನ್ನು ಅತಿ ಕೆಟ್ಟದಾಗಿ ನಿಭಾಯಿಸಿದ 5 ಕೆಟ್ಟ ನಾಯಕರಲ್ಲಿ ಮೋದಿಯವರೂ ಒಬ್ಬರೆಂದು ಅಂತರರಾಷ್ಟ್ರೀಯ ಮಟ್ಟದ ಪತ್ರಿಕೆಗಳು ವರದಿ ಮಾಡಿದ್ದನ್ನು ದೇಶ ಮರೆತಿದೆಯೆ? ನಿಮಗೂ ಮರೆತು ಹೋಗಿದೆಯೆ ಯಡಿಯೂರಪ್ಪನವರೆ?

2014 ಕ್ಕಿಂತ ಮೊದಲು ಇದ್ದ ಸಣ್ಣ, ಮಧ್ಯಮ, ಗುಡಿ ಕೈಗಾರಿಕೆಗಳೆಷ್ಟು? ಈಗ ಎಷ್ಟಿವೆ? ಶೇ. 60 ರಷ್ಟು ಕಂಪೆನಿಗಳು ಮುಚ್ಚಲು, ಮುಚ್ಚುವ ಹಂತಕ್ಕೆ ಬರಲು ಕಾರಣ ಯಾರು?

ಮನೆಗೆ ಮಾರಿ ಪರರಿಗೆ ಉಪಕಾರಿಯಂತೆ ವರ್ತಿಸುವ ಪ್ರಧಾನಿ ನರೇಂದ್ರ ಮೋದಿವರಿಂದಾಗಿಯೆ ದೇಶ ದುರವಸ್ಥೆಗೆ ಸಿಲುಕಿಕೊಂಡಿದೆ. ಆದರೂ ಅವರನ್ನು ಟೀಕಿಸಬೇಡಿ ಎಂದು ಆಜ್ಞೆ ಹೊರಡಿಸುವ ಯಡಿಯೂರಪ್ಪನವರನ್ನು, ಬೊಮ್ಮಾಯಿಯವರನ್ನು ಹಾಗೂ ಬಿಜೆಪಿಯವರನ್ನು ಏನೆಂದು ಕರೆಯಬೇಕು?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending