ದಿನದ ಸುದ್ದಿ

ಮೋದಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು : ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು. ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಮಂಕಿಬಾತ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವರು ಟ್ವೀಟ್ ಮಾಡಿದ್ದು, ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು.

ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆ ನೀಡಬೇಕಾದ ಪ್ರಧಾನಿ, ಟಿವಿಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ?

ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತಗೆ ಕೊರೊನಾ ಪರಿಹಾರದ ಇಪ್ಪತ್ತು ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು.

ಕೊರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜೂನ್ ನಲ್ಲಿ ಪ್ರಕಟಿಸಿದ್ದರು.ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು ಏಳರಿಂದ ಐದು ಕಿಲೋಗೆ ಇಳಿಸಿದೆ, ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಹೊರಟಿದೆ.

ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿಯವರ ಗಮನಕ್ಕೆ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version