ದಿನದ ಸುದ್ದಿ

ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ನೆರವು ಘೋಷಿಸಬೇಕು : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಅನ್ನಭಾಗ್ಯ ಯೋಜನೆಯ ಏಳು ಕೆ.ಜಿ. ಅಕ್ಕಿಯಲ್ಲಿ ಕಡಿತ ಮಾಡಿದರೆ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಪ್ರಸ್ತಾವನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಇದರ ವಿರುದ್ಧ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಅಷ್ಟೇ ಅಲ್ಲ, ಸದನದ ಒಳಗೂ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ‌ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ನಾಲ್ಕು ಕೋಟಿ ಜನರಿಗೆ 7 ಕೆಜಿ ಅಕ್ಕಿಯನ್ನ ಉಚಿತವಾಗಿ ನೀಡುತ್ತಿತ್ತು. ಬಿಜೆಪಿ ಸರ್ಕಾರ ರಚನೆ ಆದ ಮೇಲೆ ಅನ್ನಭಾಗ್ಯ ಅಕ್ಕಿ ಕಡಿಮೆ ಮಾಡಲು ಚರ್ಚೆ ನಡೆದಿದೆಎಂಬ ಮಾಹಿತಿ ಬಂದಿದೆ. ಕಡಿತ ಮಾಡಿದ ಅಕ್ಕಿ ಹಣವನ್ನ ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಈ ಯೋಜನೆಯಲ್ಲಿ ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ. ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡ್ತೇವೆ ಅನ್ನೊದು ಬಡವರ ವಿರೋಧಿ ಧೋರಣೆ ಎಂದರು.

ಅನ್ನಭಾಗ್ಯ ಅಕ್ಕಿ ಕಡಿತ ಮಾಡುವ ಯೋಚನೆ ಸರ್ಕಾರದ ಮುಂದೆ ಇದ್ದರೆ ಅದನ್ನ ಕೂಡಲೇ ಕೈ ಬಿಡಬೇಕು.ಅನ್ನಭಾಗ್ಯ ಯೋಜನೆ ಜಾರಿಗೆ ಬಂದ ಮೇಲೆ ಗುಳೆ ಪದ್ಧತಿ ಕಡಿಮೆ ಆಗಿದೆ. ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇದು‌ ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮ.

ಇಂದಿರಾ ಕ್ಯಾಂಟೀನ್ ‌ಗೆ ಸರ್ಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸ ಬೇಕು ಎಂದು ಸರ್ಕಾರ ಹೇಳುತ್ತಿದೆ. ಕ್ಯಾಂಟೀನ್ ನಿರಂತರವಾಗಿ ನಡೆಯಬೇಕಾದರೆ
ಅಲ್ಲಿ ಗುಣಮಟ್ಟದ‌ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ವೆಚ್ಚವನ್ನ ರಾಜ್ಯ ಸರ್ಕಾರ ಭರಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಅಂತ ಈ ಯೋಜನೆ ಮಾಡಲಾಗಿದೆ. ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ‌ ಎಂದು ಹೇಳಿದರು.

ಸಿಎಂ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ 22 ದಿನ ಕಳೆದವು.ಆದರೆ, ಇನ್ನು ರಾಜ್ಯದಲ್ಲಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ
ಇಲ್ಲ. ಒಂದೆಡೆ ಪ್ರವಾಹ, ಇನ್ನೊಂದೆಡೆ ಬರ ಎರಡೂ ಇದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮ ನಗರ, ಬೆಂಗಳೂರು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ20 ಕಡಿಮೆ ಆಗಿದೆ.ಇವತ್ತಿನವರೆಗೆ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಅಂತ ಘೋಷಣೆ ಮಾಡದೆ ಇದ್ದರೆ ಪರಿಹಾರ ಪಡೆಯಲು ಆಗಲ್ಲ ಎಂದು ಕಿಡಿಕಾರಿದರು.

ಮಳೆಯಾಗದೆ ಬಿತ್ತನೆ ಮಾಡಿರುವ ಬೆಳೆ ಹಾಳಾಗಿದೆ.‌ ಕೆಲವೆಡೆ ಬಿತ್ತನೆ ಸಹ ಆಗ್ತಿಲ್ಲ. ಮಳೆ ಇಲ್ಲದೆ ಜಾನುವಾರುಗಳುಗೆ ಮೇವಿಲ್ಲದಂತಾಗಿದೆ.ಯಡಿಯೂರಪ್ಪ ಸಿಎಂ ಆಗಿ 22 ದಿನ ಆಯ್ತು. ದನಕರುಗಳಿಗೆ ಮೇವು ಕೊಡ್ತಿಲ್ಲ, ಯುವಕರಿಗೆ ಉದ್ಯೋಗ ಸಿಗ್ತಿಲ್ಲ.‌ ಅವರು, ‌ ರೈತರಿಗೆ, ಬಡವರಿಗೆ ಸಹಾಯ ಮಾಡ್ತಿಲ್ಲ.‌ಹಾಗಿದ್ರೆ ಈ ಸರ್ಕಾರ ಯಾಕೆ ಇರಬೇಕು. ಸರ್ಕಾರ‌ ಕೂಡಲೇ ಬರ ಪ್ರದೇಶಗಳನ್ನ ಘೋಷಿಸಬೇಕು‌ ಎಂದರು.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ.‌ ಪ್ರಜಾಪ್ರಭುತ್ವ ಇದ್ಯಾ, ಇದನ್ನೆ ಪ್ರಜಾಪ್ರಭುತ್ವ ಅಂತ ಕರೆಯೋದಾ. ಅಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ.ಯಡಿಯೂರಪ್ಪ ಬಹಳ ಮಾತಾಡ್ತಾರೆ, ಅವರು ಕೇಂದ್ರದ ಮೇಲೆ ಏಕೆ ಒತ್ತಡ ಹೇರುವುದಿಲ್ಲ.‌ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ.‌ ಈವರೆಗೆ ಎಷ್ಟು ನಷ್ಟ ಆಗಿದೆ ಎಂಬ ವರದಿಯನ್ನೇ ತಯಾರಿಸಿಲ್ಲ.ಪ್ರವಾಹ, ಬರಪೀಡಿತ ಪ್ರದೇಶಗಳಲ್ಲಿ ಸೋಮವಾರದಿಂದ ಪ್ರವಾಸ ಕೈಗೊಳ್ಳುತ್ತೇನೆ. ಕೂಡಲೇ ಕೇಂದ್ರ ಸರ್ಕಾರ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಕೇದ್ರಸರ್ಕಾಕ್ಕೆ ಒತ್ತಾಯಿಸಿದರು.

ಯಡಿಯೂರಪ್ಪ, ಪ್ರಧಾನ ಮಂತ್ರಿಗಳಿಗೆ ಏನಾದ್ರೂ ಹೆದರುತ್ತಾರೋ ಹೇಗೆ ? ಸರ್ವ ಪಕ್ಷ ನಿಯೋಗವನ್ನಾದ್ರು ಕರೆದುಕೊಂಡು ಹೋಗಿ ನಾವೇ ಮಾತಾಡ್ತೇವೆ. ಇಷ್ಟು ನಿರ್ಲಜ್ಜವಾದ ಸರ್ಕಾರವನ್ನ ನಾನು ನೋಡಿರಲಿಲ್ಲ.
ಇಷ್ಟೇಲ್ಲಾ ಆಗಿದೆ ಇದರ ಬಗ್ಗೆ ಚರ್ಚೆಗೆ ವಿಧಾನ ಮಂಡಲ ಅಧಿವೇಶನ ಕರೆಯಿರಿ ಎಂದು ಒತ್ತಾಯಿಸುತ್ತೇನೆ. ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ರಚನೆ ಆಗಿದೆ. ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನ ನಾನು ಎಂದಿಗೂ ನೋಡಿಲ್ಲ. ಪ್ರಧಾನ ಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ. 6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಆಗಿದೆ. ಒಟ್ಟಾರೆ 1ಲಕ್ಷ ಕೋಟಿ ನಷ್ಟ ಆಗಿದೆ. ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ರೂ.ಗಳ ನೆರವು ಘೋಷಿಸಬೇಕು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version