ರಾಜಕೀಯ
ಅನರ್ಹ ಶಾಸಕರು ಜನಸಾಮಾನ್ಯರ ರಕ್ತ ಹೀರುವ ಮಾಫಿಯಾ ಗ್ಯಾಂಗ್ನವರಂತೆ, ಇಂಥವರನ್ನು ಸೋಲಿಸಿ : ಸಿದ್ದರಾಮಯ್ಯ ಮನವಿ
ಸುದ್ದಿದಿನ,ಹೊಸಪೇಟೆ : ಹೊಸಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ನಮ್ಮ ಪಕ್ಷದ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರಿಗೆ ಮತ ನೀಡಿ ಆಶೀರ್ವಾದ ಮಾಡಬೇಕೆಂದು ಕ್ಷೇತ್ರದ ಮತದಾರರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.
ಹಿಂದೆ ಆನಂದ್ ಸಿಂಗ್ ನನ್ನ ಬಳಿ ಕಾಂಗ್ರೆಸ್ ಟಿಕೆಟ್ ಕೇಳಿದಾಗ ಏನಪ್ಪಾ ನಿನ್ನ ಹಿನ್ನೆಲೆ ಸರಿಯಿಲ್ಲ, ಅಕ್ರಮ ಗಣಿಗಾರಿಕೆ ಕೇಸಲ್ಲಿ ಜೈಲಿಗೆ ಹೋಗಿ ಬಂದಿದೀಯ, ಇಷ್ಟೆಲ್ಲ ಸಮಸ್ಯೆ ಇದ್ರೆ ಹೇಗಪ್ಪ? ಅಂದೆ. ನಾನು ಇನ್ಮೇಲೆ ಯಾವ ಭ್ರಷ್ಟಾಚಾರವನ್ನೂ ಮಾಡಲ್ಲ, ಕಾಂಗ್ರೆಸ್ಗೆ ನಿಷ್ಠನಾಗಿರ್ತೀನಿ ಅಂತ ನನಗೆ ಮಾತು ಕೊಟ್ಟಿದ್ರು. ಆನಂದ್ ಸಿಂಗ್ ತನ್ನನ್ನು ಆಯ್ಕೆ ಮಾಡಿದ ಜನತೆಗೂ ಬೆಲೆ ಕೊಡದೆ ಪಕ್ಷಾಂತರ ಮಾಡಿ ಮತ್ತೆ ಚುನಾವಣೆ ಎದುರಾಗುವಂತೆ ಮಾಡಿದ್ದಾರೆ. ಯಾಕಪ್ಪ ಆನಂದ್ ಸಿಂಗ್ ನಾವೇನು ದ್ರೋಹ ಮಾಡಿದ್ವಿ ನಿಮ್ಗೆ? ಕ್ಷೇತ್ರದ ಜನತೆ ಮತ ನೀಡಿ ಗೆಲ್ಲಿಸಿದ್ದು ತಪ್ಪಾ? ಅಥವಾ ನಿಮ್ಮ ಮಾತನ್ನು ನಂಬಿ ಪಕ್ಷದ ಟಿಕೆಟ್ ಕೊಟ್ಟಿದ್ದು ತಪ್ಪಾ? ಎಂದು ಪ್ರಶ್ನಿಸಿದರು.
ಆನಂದ್ ಸಿಂಗ್ ಸೇರಿದಂತೆ 15 ಶಾಸಕರು ಪಕ್ಷಾಂತರ ಮಾಡಿರುವುದು ಸಾಬೀತಾಗಿರುವುದರಿಂದ ಸುಪ್ರೀಂ ಕೋರ್ಟ್ ಅವರನ್ನು ರಾಜಕೀಯದಲ್ಲಿ ಮುಂದುವರೆಯಲು ನಾಲಾಯಕ್ ಎಂದು ಹೇಳಿದೆ. ಈಗ ಜನತೆಯ ಸರದಿ, ಈ ಚುನಾವಣೆಯಲ್ಲಿ ಅನರ್ಹ ಶಾಸಕ ಆನಂದ್ ಸಿಂಗ್ರನ್ನು ತಿರಸ್ಕರಿಸಿ, ಶಾಶ್ವತವಾಗಿ ಮನೆಗೆ ಕಳುಹಿಸಿ, ಕೋರ್ಟ್ ತೀರ್ಪನ್ನು ಎತ್ತಿಹಿಡಿಯಬೇಕು. ಈ ಚುನಾವಣೆ ಇಲ್ಲಿನ ಮತದಾರರ ಸ್ವಾಭಿಮಾನದ ಪ್ರಶ್ನೆ. ಆನಂದ್ ಸಿಂಗ್ ಹೆಸರು ಈಗ ಅನರ್ಹ ಸಿಂಗ್ ಆಗಿದೆ. ಅವರಿಗೆ ಬಡವರ ಕಷ್ಟ ಗೊತ್ತಿಲ್ಲ. ಕ್ಷೇತ್ರದ ಜನರ ಸಮಸ್ಯೆ ಕೇಳಲು ಬಿಡುವಿಲ್ಲ. ಚುನಾವಣೆಯಲ್ಲಿ ಗೆದ್ದಾಗಿನಿಂದ ಈವರೆಗೆ ಕ್ಷೇತ್ರಕ್ಕೇ ಬಂದಿಲ್ಲ. ಇಂಥ ವ್ಯಕ್ತಿ ಬೇಕೇ? ಅಥವಾ ಸರಳ ಸಜ್ಜನ ನಾಯಕ ಘೋರ್ಪಡೆಯವರು ಬೇಕೇ ಎಂದು ಯೋಚಿಸಬೇಕಿದೆ ಎಂದರು.
ಇದೇ ಆನಂದ್ ಸಿಂಗ್, ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ವಿರುದ್ಧ ವಿಧಾನಸಭೆಯಲ್ಲಿ ತೊಡೆತಟ್ಟಿ, ಅವರಿಗೆ ಸವಾಲು ಹಾಕಿ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ್ದರ ಫಲ ಬಳ್ಳಾರಿಯ ಗಣಿಕಳ್ಳರೆಲ್ಲ ಜೈಲಿಗೆ ಹೋಗಿ ಬಂದಿದ್ದರು. ಇಂಥ ಲೂಟಿಕೋರರ ಕೈಗೆ ಮತ್ತೆ ಅಧಿಕಾರ ಸಿಗಬೇಕಾ? ನಾನು ಪ್ರಚಾರಕ್ಕೆಂದು ಹೋದ ಕಡೆಗಳಲ್ಲಿ ಸರ್ಕಾರ 4 ಕೆ.ಜಿ ಅಕ್ಕಿ ಕೊಡ್ತಿದೆ, ರಾಗಿ, ಗೋಧಿ ನಿಯಮಿತವಾಗಿ ಕೊಡ್ತಿಲ್ಲ ಎಂದು ಜನ ತಮ್ಮ ಕಷ್ಟ ಹೇಳಿಕೊಳ್ತಿದ್ದಾರೆ. ‘ಈ ಕಷ್ಟ ಇನ್ನು ಕೆಲವೇ ದಿನ ಮಾತ್ರ. ಉಪಚುನಾವಣೆ ಫಲಿತಾಂಶದ ನಂತರ ನಮ್ಮ ಸರ್ಕಾರ ಬರುತ್ತೆ, ಆಗ ಮತ್ತೆ 10 ಕೆ.ಜಿ ಅಕ್ಕಿ ಕೊಡ್ತೀವಿ’ ಅಂತ ಅವರಿಗೆ ಧೈರ್ಯ ಹೇಳಿದ್ದೀನಿ. ಆಪರೇಷನ್ ಕಮಲಕ್ಕೆ ನೂರಾರು ಕೋಟಿ ಖರ್ಚು ಯಡಿಯೂರಪ್ಪ ಅವರ ಬಳಿ ಹಣವಿದೆ, ಆದ್ರೆ ಬಡಜನರ ಎರಡು ಹೊತ್ತಿನ ಊಟಕ್ಕೆ ಅಕ್ಕಿ ಕೊಡಲು ಹಣವಿಲ್ಲ. ಬಡವರ ಅನ್ನ ಕಸಿದ ಇಂಥ ಭಂಡ ಸರ್ಕಾರ ಬೇಕಾ? ಈ ಉಪಚುನಾವಣೆಯಲ್ಲಿ ಮತ ನೀಡುವ ಮುನ್ನ ಜನತೆ ಈ ವಿಚಾರ ನೆನಪು ಮಾಡಿಕೊಳ್ಳಬೇಕು. ಸ್ವಾರ್ಥ ಸೋಲಬೇಕು, ಪ್ರಜಾತಂತ್ರ ಗೆಲ್ಲಬೇಕು ಎಂಬುದು ನನ್ನ ಆಶಯ ಎಂದು ಹೇಳಿದರು.
ತನ್ನ ಸ್ವಾರ್ಥಸಾಧನೆ, ಅಕ್ರಮ ಆಸ್ತಿಯನ್ನು ರಕ್ಷಿಸಿಕೊಳ್ಳಲು ಆನಂದ್ ಸಿಂಗ್ ರಾಜಕೀಯದಲ್ಲಿ ಇದ್ದಾರೆ. ಜನಸೇವೆ ಮಾಡಲು ಅಲ್ಲ. ಇವರೆಲ್ಲ ಜನಸಾಮಾನ್ಯರ ರಕ್ತ ಹೀರುವ ಮಾಫಿಯಾ ಗ್ಯಾಂಗ್ನವರು. ಎಲ್ಲ 15 ಅನರ್ಹ ಶಾಸಕರು ಇಂಥವರೆ. ಇವರು ಗೆದ್ದರೆ ಯಾರಿಗೂ ಪ್ರಯೋಜನವಿಲ್ಲ. ಇಂಥವರನ್ನು ಸೋಲಿಸಿ ದೇಶಕ್ಕೆ ಉತ್ತಮ ಸಂದೇಶ ರವಾನಿಸಬೇಕು ಎಂದು ಕ್ಷೇತ್ರದ ಮತದಾರರಲ್ಲಿ ಕೈಮುಗಿದು ಮನವಿ ಮಾಡುತ್ತೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ಚುನಾವಣಾ ಆಯೋಗ ಸಮಾವೇಶ
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.
ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.
ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243