ರಾಜಕೀಯ
ಅನರ್ಹ ಶಾಸಕರು ಜನಸಾಮಾನ್ಯರ ರಕ್ತ ಹೀರುವ ಮಾಫಿಯಾ ಗ್ಯಾಂಗ್ನವರಂತೆ, ಇಂಥವರನ್ನು ಸೋಲಿಸಿ : ಸಿದ್ದರಾಮಯ್ಯ ಮನವಿ
ಸುದ್ದಿದಿನ,ಹೊಸಪೇಟೆ : ಹೊಸಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ನಮ್ಮ ಪಕ್ಷದ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರಿಗೆ ಮತ ನೀಡಿ ಆಶೀರ್ವಾದ ಮಾಡಬೇಕೆಂದು ಕ್ಷೇತ್ರದ ಮತದಾರರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.
ಹಿಂದೆ ಆನಂದ್ ಸಿಂಗ್ ನನ್ನ ಬಳಿ ಕಾಂಗ್ರೆಸ್ ಟಿಕೆಟ್ ಕೇಳಿದಾಗ ಏನಪ್ಪಾ ನಿನ್ನ ಹಿನ್ನೆಲೆ ಸರಿಯಿಲ್ಲ, ಅಕ್ರಮ ಗಣಿಗಾರಿಕೆ ಕೇಸಲ್ಲಿ ಜೈಲಿಗೆ ಹೋಗಿ ಬಂದಿದೀಯ, ಇಷ್ಟೆಲ್ಲ ಸಮಸ್ಯೆ ಇದ್ರೆ ಹೇಗಪ್ಪ? ಅಂದೆ. ನಾನು ಇನ್ಮೇಲೆ ಯಾವ ಭ್ರಷ್ಟಾಚಾರವನ್ನೂ ಮಾಡಲ್ಲ, ಕಾಂಗ್ರೆಸ್ಗೆ ನಿಷ್ಠನಾಗಿರ್ತೀನಿ ಅಂತ ನನಗೆ ಮಾತು ಕೊಟ್ಟಿದ್ರು. ಆನಂದ್ ಸಿಂಗ್ ತನ್ನನ್ನು ಆಯ್ಕೆ ಮಾಡಿದ ಜನತೆಗೂ ಬೆಲೆ ಕೊಡದೆ ಪಕ್ಷಾಂತರ ಮಾಡಿ ಮತ್ತೆ ಚುನಾವಣೆ ಎದುರಾಗುವಂತೆ ಮಾಡಿದ್ದಾರೆ. ಯಾಕಪ್ಪ ಆನಂದ್ ಸಿಂಗ್ ನಾವೇನು ದ್ರೋಹ ಮಾಡಿದ್ವಿ ನಿಮ್ಗೆ? ಕ್ಷೇತ್ರದ ಜನತೆ ಮತ ನೀಡಿ ಗೆಲ್ಲಿಸಿದ್ದು ತಪ್ಪಾ? ಅಥವಾ ನಿಮ್ಮ ಮಾತನ್ನು ನಂಬಿ ಪಕ್ಷದ ಟಿಕೆಟ್ ಕೊಟ್ಟಿದ್ದು ತಪ್ಪಾ? ಎಂದು ಪ್ರಶ್ನಿಸಿದರು.
ಆನಂದ್ ಸಿಂಗ್ ಸೇರಿದಂತೆ 15 ಶಾಸಕರು ಪಕ್ಷಾಂತರ ಮಾಡಿರುವುದು ಸಾಬೀತಾಗಿರುವುದರಿಂದ ಸುಪ್ರೀಂ ಕೋರ್ಟ್ ಅವರನ್ನು ರಾಜಕೀಯದಲ್ಲಿ ಮುಂದುವರೆಯಲು ನಾಲಾಯಕ್ ಎಂದು ಹೇಳಿದೆ. ಈಗ ಜನತೆಯ ಸರದಿ, ಈ ಚುನಾವಣೆಯಲ್ಲಿ ಅನರ್ಹ ಶಾಸಕ ಆನಂದ್ ಸಿಂಗ್ರನ್ನು ತಿರಸ್ಕರಿಸಿ, ಶಾಶ್ವತವಾಗಿ ಮನೆಗೆ ಕಳುಹಿಸಿ, ಕೋರ್ಟ್ ತೀರ್ಪನ್ನು ಎತ್ತಿಹಿಡಿಯಬೇಕು. ಈ ಚುನಾವಣೆ ಇಲ್ಲಿನ ಮತದಾರರ ಸ್ವಾಭಿಮಾನದ ಪ್ರಶ್ನೆ. ಆನಂದ್ ಸಿಂಗ್ ಹೆಸರು ಈಗ ಅನರ್ಹ ಸಿಂಗ್ ಆಗಿದೆ. ಅವರಿಗೆ ಬಡವರ ಕಷ್ಟ ಗೊತ್ತಿಲ್ಲ. ಕ್ಷೇತ್ರದ ಜನರ ಸಮಸ್ಯೆ ಕೇಳಲು ಬಿಡುವಿಲ್ಲ. ಚುನಾವಣೆಯಲ್ಲಿ ಗೆದ್ದಾಗಿನಿಂದ ಈವರೆಗೆ ಕ್ಷೇತ್ರಕ್ಕೇ ಬಂದಿಲ್ಲ. ಇಂಥ ವ್ಯಕ್ತಿ ಬೇಕೇ? ಅಥವಾ ಸರಳ ಸಜ್ಜನ ನಾಯಕ ಘೋರ್ಪಡೆಯವರು ಬೇಕೇ ಎಂದು ಯೋಚಿಸಬೇಕಿದೆ ಎಂದರು.
ಇದೇ ಆನಂದ್ ಸಿಂಗ್, ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ವಿರುದ್ಧ ವಿಧಾನಸಭೆಯಲ್ಲಿ ತೊಡೆತಟ್ಟಿ, ಅವರಿಗೆ ಸವಾಲು ಹಾಕಿ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ್ದರ ಫಲ ಬಳ್ಳಾರಿಯ ಗಣಿಕಳ್ಳರೆಲ್ಲ ಜೈಲಿಗೆ ಹೋಗಿ ಬಂದಿದ್ದರು. ಇಂಥ ಲೂಟಿಕೋರರ ಕೈಗೆ ಮತ್ತೆ ಅಧಿಕಾರ ಸಿಗಬೇಕಾ? ನಾನು ಪ್ರಚಾರಕ್ಕೆಂದು ಹೋದ ಕಡೆಗಳಲ್ಲಿ ಸರ್ಕಾರ 4 ಕೆ.ಜಿ ಅಕ್ಕಿ ಕೊಡ್ತಿದೆ, ರಾಗಿ, ಗೋಧಿ ನಿಯಮಿತವಾಗಿ ಕೊಡ್ತಿಲ್ಲ ಎಂದು ಜನ ತಮ್ಮ ಕಷ್ಟ ಹೇಳಿಕೊಳ್ತಿದ್ದಾರೆ. ‘ಈ ಕಷ್ಟ ಇನ್ನು ಕೆಲವೇ ದಿನ ಮಾತ್ರ. ಉಪಚುನಾವಣೆ ಫಲಿತಾಂಶದ ನಂತರ ನಮ್ಮ ಸರ್ಕಾರ ಬರುತ್ತೆ, ಆಗ ಮತ್ತೆ 10 ಕೆ.ಜಿ ಅಕ್ಕಿ ಕೊಡ್ತೀವಿ’ ಅಂತ ಅವರಿಗೆ ಧೈರ್ಯ ಹೇಳಿದ್ದೀನಿ. ಆಪರೇಷನ್ ಕಮಲಕ್ಕೆ ನೂರಾರು ಕೋಟಿ ಖರ್ಚು ಯಡಿಯೂರಪ್ಪ ಅವರ ಬಳಿ ಹಣವಿದೆ, ಆದ್ರೆ ಬಡಜನರ ಎರಡು ಹೊತ್ತಿನ ಊಟಕ್ಕೆ ಅಕ್ಕಿ ಕೊಡಲು ಹಣವಿಲ್ಲ. ಬಡವರ ಅನ್ನ ಕಸಿದ ಇಂಥ ಭಂಡ ಸರ್ಕಾರ ಬೇಕಾ? ಈ ಉಪಚುನಾವಣೆಯಲ್ಲಿ ಮತ ನೀಡುವ ಮುನ್ನ ಜನತೆ ಈ ವಿಚಾರ ನೆನಪು ಮಾಡಿಕೊಳ್ಳಬೇಕು. ಸ್ವಾರ್ಥ ಸೋಲಬೇಕು, ಪ್ರಜಾತಂತ್ರ ಗೆಲ್ಲಬೇಕು ಎಂಬುದು ನನ್ನ ಆಶಯ ಎಂದು ಹೇಳಿದರು.
ತನ್ನ ಸ್ವಾರ್ಥಸಾಧನೆ, ಅಕ್ರಮ ಆಸ್ತಿಯನ್ನು ರಕ್ಷಿಸಿಕೊಳ್ಳಲು ಆನಂದ್ ಸಿಂಗ್ ರಾಜಕೀಯದಲ್ಲಿ ಇದ್ದಾರೆ. ಜನಸೇವೆ ಮಾಡಲು ಅಲ್ಲ. ಇವರೆಲ್ಲ ಜನಸಾಮಾನ್ಯರ ರಕ್ತ ಹೀರುವ ಮಾಫಿಯಾ ಗ್ಯಾಂಗ್ನವರು. ಎಲ್ಲ 15 ಅನರ್ಹ ಶಾಸಕರು ಇಂಥವರೆ. ಇವರು ಗೆದ್ದರೆ ಯಾರಿಗೂ ಪ್ರಯೋಜನವಿಲ್ಲ. ಇಂಥವರನ್ನು ಸೋಲಿಸಿ ದೇಶಕ್ಕೆ ಉತ್ತಮ ಸಂದೇಶ ರವಾನಿಸಬೇಕು ಎಂದು ಕ್ಷೇತ್ರದ ಮತದಾರರಲ್ಲಿ ಕೈಮುಗಿದು ಮನವಿ ಮಾಡುತ್ತೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ1 day agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

