ದಿನದ ಸುದ್ದಿ
ಕರ್ನಾಟಕ ಬಸವಣ್ಣ, ಸರ್ವಜ್ಞ, ಕನಕದಾರಸ ಪುಣ್ಯನೆಲ, ಇಲ್ಲಿ ಕೋಮುವಾದಿಗಳು ಬೇರೂರಲು ಬಿಡಬೇಡಿ : ಸಿದ್ದರಾಮಯ್ಯ ಮನವಿ
ಸುದ್ದಿದಿನ, ಬಾಗಲಕೋಟೆ : ಕೋಮುಗಲಭೆ ಸೃಷ್ಟಿಸುವವರಿಗೆ, ದಲಿತ ವಿರೋಧಿಗಳಿಗೆ, ಬಾಂಬು ಹಾಕಿ ಅಮಾಯಕರನ್ನು ಕೊಲ್ಲುವವರಿಗೆ ಬಿಜೆಪಿ ಟಿಕೆಟ್ ಸಿಗುತ್ತದೆ ಎಂಬುದು ಮತ್ತೆ ಸಾಬೀತಾಗಿದೆ. ಮಾಲೆಗಾಂವ್ ಸ್ಪೋಟದ ಪ್ರಮುಖ ಆರೋಪಿಗೆ ಬಿಜೆಪಿ ಟಿಕೆಟ್ ನೀಡಿರುವುದರ ಹಿಂದಿನ ಉದ್ದೇಶವಾದರೂ ಏನು? ಇದರಿಂದ ಸಮಾಜಕ್ಕೆ ಅವರು ನೀಡುವ ಸಂದೇಶವಾದರೂ ಏನು? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಭಾನುವಾರ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಹುನಗುಂದದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ವೀಣಾ ಕಾಶಪ್ಪನವರ್ ಅವರಿಗೆ ಮತ ನೀಡುವಂತೆ ಕೋರಿದ ಅವರು, ಕರ್ನಾಟಕ ಬಸವಣ್ಣ, ಸರ್ವಜ್ಞ, ಕನಕದಾಸರಂತಹ ಪುಣ್ಯಪುರುಷರ ನೆಲ. ಸೌಹಾರ್ದತೆಯ ಈ ನಾಡಿನಲ್ಲಿ ಕೋಮುವಾದಿಗಳನ್ನು ಬೇರೂರಲು ಬಿಡಬೇಡಿ ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದರು.
ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರೋಧಿಗಳು. ಅವರ ‘ಸಬ್ ಕಾ ಸಾಥ್ ಸಬ್ ಕ ವಿಕಾಸ್’ ಬರಿ ಘೋಷಣೆಗಷ್ಟೇ ಸೀಮಿತ. ಅವರಿಗೆ ಸರ್ವರ ಅಭಿವೃದ್ಧಿಯ ನಿಜಕಾಳಜಿ ಇದ್ದಿದ್ದರೆ ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಹಿಂದುಳಿದ ವರ್ಗದ ಅಥವಾ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗೆ ಟಿಕೆಟ್ ನೀಡುತ್ತಿರಲಿಲ್ಲವೇ? ಕೇವಲ ಘೋಷಣೆಗಳಿಂದ ಈ ಸಮುದಾಯ ಅಭಿವೃದ್ಧಿ ಸಾಧ್ಯವೇ? ಎಂದು ಪ್ರಶ್ನಿಸಿದರು.
ಕೇಂದ್ರದಲ್ಲಿ ಅವರದೇ ಬಿಜೆಪಿ ಸರ್ಕಾರ ಕೊನೆಯ ದಿನಗಳನ್ನು ಎಣಿಸುತ್ತಿದೆ, ಇತ್ತ ರಾಜ್ಯ ಬಿಜೆಪಿ ನಾಯಕರು ಕರ್ನಾಟಕದಲ್ಲಿ ಸರ್ಕಾರ ರಚಿಸುವ ಭ್ರಮೆಯಲ್ಲಿದ್ದಾರೆ. ನರೇಂದ್ರ ಮೋದಿಯವರು ತಮ್ಮ ರಾಜಕೀಯ ವಿರೋಧಿಗಳ ಮೇಲೆ ಐಟಿ ದಾಳಿ ಮಾಡಿಸುವ ಬದಲು, ಶಾಸಕರ ಖರೀದಿಗೆ ಕಾದು ಕುಳಿತಿರುವ ರಾಜ್ಯ ಬಿಜೆಪಿ ನಾಯಕರ ಮನೆ ಮೇಲೆ ದಾಳಿ ಮಾಡಿಸಲಿ ಎಂದು ಸವಾಲು ಹಾಕಿದರು.
ರಾಹುಲ್ ಗಾಂಧಿಯವರು ನುಡಿದಂತೆ ನಡೆದು 5 ರಾಜ್ಯಗಳ ರೈತರ ಸಾಲ ಮನ್ನಾ ಮಾಡಿದ್ದಾರೆ. ನಮ್ಮ ಗರೀಬಿ ಹಠಾವೋ ಘೋಷಣೆ ಭಾಷಣಕ್ಕಷ್ಟೇ ಸೀಮಿತವಲ್ಲ. ನುಡಿದಂತೆ ನಡೆಯುವವರು ನಾವು. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಬಡಕುಟುಂಬಕ್ಕೆ ವಾರ್ಷಿಕ ರೂ.72,000 ನೀಡುತ್ತೇವೆ. ಇದರಿಂದ ದೇಶದ ಬಡತನವೂ ನಿರ್ಮೂಲನೆಯಾಗಲಿದೆ ಎಂದು ವಿಶ್ವಾಸ ನೀಡಿದರು.
ಜಿಲ್ಲೆಗೆ ಬೆಂಕಿ ಹಚ್ಚುತ್ತೇನೆ ಎನ್ನುವವರು, ಪೊಲೀಸ್ ಬ್ಯಾರಿಕೇಡ್ ಮುರಿಯುವವರು, ಹುತಾತ್ಮ ಪೊಲೀಸರನ್ನು ಅವಮಾನಿಸುವವರನ್ನು ಇಟ್ಟುಕೊಂಡು ಬಿಜೆಪಿ ದೇಶ ಪ್ರೇಮದ ನಾಟಕವಾಡುತ್ತಿದೆ. ಹಾಗಾಗಿ ಜನತೆ ವಿವೇಚನೆಯಿಂದ ಮತ ಚಲಾಯಿಸಬೇಕು. ದುಷ್ಟರ ಕೈಯಲ್ಲಿ ಅಧಿಕಾರ ಕೊಟ್ಟು ಪರಿತಪಿಸುವ ಬದಲು, ರಾಷ್ಟ್ರ ಕಟ್ಟುವ ಕಾಂಗ್ರೆಸ್ ಕೈಯನ್ನು ಬೆಂಬಲಿಸಿ ಎಂದು ಕರೆ ಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


