ದಿನದ ಸುದ್ದಿ
‘ಮತದಾರ ದೇವರು’ ಎಂದ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇರು ನಟ ಡಾ.ರಾಜ್ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.
ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.
ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.
ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.
ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.
ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.
ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ
ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.
ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.
ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.
ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.
ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.
ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.
ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.
ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.
ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.
ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.
ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರಮುಖ 8 ಕ್ಲಬ್ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್
ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
http://Visit : www.suddidina.com
ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ
ಬೌರಿಂಗ್ ಕ್ಲಬ್ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಕೆಎಸ್ಸಿಎ ಕ್ಲಬ್ನಲ್ಲೂ ಹಲವು ಲೋಪ
ಕೆಎಸ್ಸಿಎ ಕ್ಲಬ್ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.
ಅವಧಿ ಮೀರಿದ ಅಣಬೆ ಪತ್ತೆ
ಕ್ಯಾಥೋಲಿಕ್ ಕ್ಲಬ್ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.
ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.
ಹೋಟೆಲ್ಗಳಿಗೂ ಕಟ್ಟುನಿಟ್ಟಿನ ಸೂಚನೆ
ಕ್ಲಬ್ಗಳ ಜೊತೆಗೆ ಹೋಟೆಲ್ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ದಿನದ ಸುದ್ದಿ
ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು
ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ ಕೆಲವು ಕಾರಣಗಳಿಂದ ಈ ವರ್ಷದ ಜನ್ಮದಿನದ ಸಂಭ್ರಮದಿಂದ ದೂರ ಉಳಿಯುತ್ತಿರುವುದಾಗಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಪತ್ರದ ಮೂಲಕ ತಿಳಿಸಿದ್ದಾರೆ.
ಹುಟ್ಟುಹಬ್ಬದಂದು ಮನೆಯ ಬಳಿ ಅಭಿಮಾನಿಗಳನ್ನು ಭೇಟಿಯಾಗಲು ತಾವು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಿಚ್ಚ, ಯಾವುದೇ ರೀತಿಯ ಗದ್ದಲ ಅಥವಾ ಸತ್ಕಾರಕ್ಕೆ ಮುಂದಾಗದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮನೆ ಮುಂದೆ ಸೇರುವ ಸಂದರ್ಭದಲ್ಲೇ, ಈ ಬಾರಿ ಸುದೀಪ್ ಅವರ ಮನವಿ ವಿಶೇಷ ಗಮನ ಸೆಳೆದಿದೆ.
ಉಡುಗೊರೆ ಬೇಡ, ಸಮಾಜಕ್ಕೆ ಸಹಾಯ ಮಾಡಿ
ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನೀಡಲು ಉದ್ದೇಶಿಸಿರುವ ಉಡುಗೊರೆಗಳ ಬದಲಾಗಿ ಆ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವಂತೆ ಸುದೀಪ್ ಕರೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ನಡೆಯುವ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕೆಲಸವೇ ತಮಗೆ ನಿಜವಾದ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.
ಅಭಿಮಾನಿಗಳು ತಮ್ಮ ತಮ್ಮ ಊರು, ಪ್ರದೇಶಗಳಲ್ಲಿ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುವುದೇ ತಮಗೆ ದೊರೆಯುವ ಅತ್ಯುತ್ತಮ ಆಶೀರ್ವಾದ ಎಂದು ಕಿಚ್ಚ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಹೊಸ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ.
30 ವರ್ಷಗಳ ಸಿನಿ ಪಯಣದ ನೆನಪು
ಕನ್ನಡ ಚಿತ್ರರಂಗಕ್ಕೆ ಸುದೀಪ್ ಬರೋಬ್ಬರಿ ಮೂರು ದಶಕಗಳನ್ನು ಅರ್ಪಿಸಿದ್ದಾರೆ. ಸಿನಿಮಾ ತಮ್ಮ ಪರಮ ಕಾಯಕವಾಗಿದ್ದು, ಕೆಲವೊಮ್ಮೆ ಸಿನಿಮಾಗಳು ತಡವಾಗಬಹುದು; ಅದಕ್ಕೂ ಕಾರಣಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಈ ಮಾತುಗಳ ಮೂಲಕ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ.
“ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ” ಎಂಬ ಖಡಕ್ ಡೈಲಾಗ್ ಮೂಲಕ ಮುಂದಿನ ಸಿನಿಮಾ ಅಥವಾ ಹೊಸ ಯೋಜನೆಗೆ ಸುದೀಪ್ ಸುಳಿವು ನೀಡಿದ್ದಾರೆ. ಹೀಗಾಗಿ ಅವರ ಪತ್ರ ಕೇವಲ ಹುಟ್ಟುಹಬ್ಬದ ಮನವಿಯಾಗದೆ, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.
https://x.com/KicchaSudeep/status/2092857077706506638
“ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ”
ತಮ್ಮ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನೂ ಸುದೀಪ್ ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಎಲ್ಲೇ ಹೋದರೂ ಕನ್ನಡಿಗರನ್ನು ರಂಜಿಸುವ ವಿಷಯದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ 30 ವರ್ಷಗಳಿಂದ ಅಭಿಮಾನಿಗಳಿಂದ ದೊರೆತ ಪ್ರೀತಿ, ಹಾರೈಕೆ, ಚಪ್ಪಾಳೆ ಮತ್ತು ಶಿಳ್ಳೆಗಳೇ ತಮ್ಮ ದೊಡ್ಡ ಬಲ ಎಂದು ಸ್ಮರಿಸಿದ್ದಾರೆ.
“ನಮ್ಮನ್ನು ಮತ್ತು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಅಭಿಮಾನಿಗಳೊಂದಿಗಿನ ತಮ್ಮ ಭಾವನಾತ್ಮಕ ಬಂಧವನ್ನು ತೆರೆದಿಟ್ಟಿದ್ದಾರೆ. ಕೊನೆಯಲ್ಲಿ “Luv u all always…” ಎಂದು ಹೇಳುವ ಮೂಲಕ ಕಿಚ್ಚ ತಮ್ಮ ಅಭಿಮಾನಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾರಿದ್ದಾರೆ.

ದಿನದ ಸುದ್ದಿ
ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್ಗಳ ಸದ್ದು
ಸುದ್ದಿದಿನ,ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್ದಾಸ್ ಅವರ ಹಳೆಯ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ನಿರ್ದೇಶಕಿಯ ಸಿನಿಮಾ ಮಾಡುವ ವಿಧಾನಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ.
ವೈರಲ್ ವಿಡಿಯೋದಲ್ಲಿ ಗೀತು ಮೋಹನ್ದಾಸ್ ಅವರು, ತಾವು ಬರೆಯುವುದು, ಚಿತ್ರೀಕರಿಸುವುದು ಹಾಗೂ ಎಡಿಟ್ ಮಾಡುವ ಪ್ರಕ್ರಿಯೆಯಲ್ಲಿ ಸಿನಿಮಾ ನಿಧಾನವಾಗಿ ರೂಪುಗೊಳ್ಳುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ತಾವು ಸ್ಕ್ರಿಪ್ಟ್ಗೆ ಕಟ್ಟುನಿಟ್ಟಾಗಿ ಅಂಟಿಕೊಂಡು ಕೆಲಸ ಮಾಡುವುದಿಲ್ಲ ಎಂಬ ಅವರ ಹೇಳಿಕೆಯೇ ಇದೀಗ ನೆಟ್ಟಿಗರ ಗಮನ ಸೆಳೆದಿದೆ.
http://Visit : www.suddidina.com
‘ಸ್ಕ್ರಿಪ್ಟ್ನಂತೆ ಸಿನಿಮಾ ಸಿಗುವುದಿಲ್ಲ’ ಎಂದಿದ್ದ ನಿರ್ದೇಶಕಿ
ನಿರ್ಮಾಪಕರನ್ನು ಭೇಟಿಯಾಗುವಾಗಲೇ ತಮ್ಮ ಕೆಲಸದ ಶೈಲಿಯನ್ನು ಸ್ಪಷ್ಟಪಡಿಸುವುದಾಗಿ ಗೀತು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಸ್ಕ್ರಿಪ್ಟ್ನಲ್ಲಿ ಓದುವ ಕಥೆಯಂತೆಯೇ ಅಂತಿಮ ಸಿನಿಮಾ ಇರಬೇಕೆಂದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದರು.
ಸಾಮಾನ್ಯವಾಗಿ ದೊಡ್ಡ ಬಜೆಟ್ನ ಸಿನಿಮಾಗಳಲ್ಲಿ ಕಥೆ, ಚಿತ್ರಕಥೆ ಮತ್ತು ಚಿತ್ರೀಕರಣದ ಯೋಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ಗೀತು ಅವರ ಈ ಹಳೆಯ ಹೇಳಿಕೆಯನ್ನು ಕೆಲವರು ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ ನಿರ್ದೇಶಕರ ಸೃಜನಶೀಲ ಪ್ರಕ್ರಿಯೆ ಒಂದೇ ರೀತಿಯಾಗಿರಬೇಕೆಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.
https://x.com/alpasankhyata/status/2092620787698094334
‘ಟಾಕ್ಸಿಕ್’ ಮೇಲೆ ಪರಿಣಾಮ ಬೀರಿದ ಹಳೆಯ ಹೇಳಿಕೆ?
‘ಟಾಕ್ಸಿಕ್’ ಬಿಡುಗಡೆ ಬಳಿಕ ಸಿನಿಮಾದ ಕಥೆ, ನಿರೂಪಣೆ, ಆಕ್ಷನ್ ಹಾಗೂ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಇದೇ ಸಮಯದಲ್ಲಿ ಹಳೆಯ ವಿಡಿಯೋ ವೈರಲ್ ಆಗಿರುವುದರಿಂದ, ಸಿನಿಮಾದಲ್ಲಿನ ಕೆಲವು ಅಂಶಗಳನ್ನು ಈ ಹೇಳಿಕೆಯೊಂದಿಗೆ ಹೋಲಿಸಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.
ಚಿತ್ರವು ಸ್ವಾತಂತ್ರ್ಯಪೂರ್ವದ ಗೋವಾ ಹಿನ್ನೆಲೆಯಲ್ಲಿನ ಅಪರಾಧ ಜಗತ್ತು ಮತ್ತು ಅಂಡರ್ವರ್ಲ್ಡ್ ಕಥೆಯನ್ನು ಒಳಗೊಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವಿದೆ.
ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭ
ಭಾರೀ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ‘ಟಾಕ್ಸಿಕ್’ ಮೊದಲ ದಿನವೇ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಆರಂಭ ಪಡೆದಿರುವುದನ್ನು ಸೂಚಿಸುತ್ತವೆ. ಆದರೆ ಪ್ರೇಕ್ಷಕರ ಪ್ರತಿಕ್ರಿಯೆ ಮಾತ್ರ ಮಿಶ್ರವಾಗಿದೆ.
ಸದ್ಯ ಗೀತು ಮೋಹನ್ದಾಸ್ ಅವರ ಹಳೆಯ ಹೇಳಿಕೆ ಮತ್ತು ‘ಟಾಕ್ಸಿಕ್’ ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದಿದೆ. ವೈರಲ್ ವಿಡಿಯೋ ಚಿತ್ರದ ಸೃಜನಶೀಲ ವಿಧಾನಕ್ಕೆ ಸಂಬಂಧಿಸಿದ ಹಳೆಯ ಅಭಿಪ್ರಾಯವಾಗಿದ್ದು, ಅದನ್ನು ಇಂದಿನ ಚಿತ್ರದ ಫಲಿತಾಂಶದೊಂದಿಗೆ ಹೇಗೆ ಸಂಪರ್ಕಿಸಬೇಕು ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ2 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ3 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ3 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ


