ದಿನದ ಸುದ್ದಿ
ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೂ ಮೀಸಲಾತಿ ಸೌಲಭ್ಯ ವಿಸ್ತರಿಸಿಲ್ಲವೇ? : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ ಡೆಸ್ಕ್ : ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ಕಳೆದ 49 ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಕೂತಿದ್ದಾರೆ. ಸರ್ಕಾರ ಅವರ ಬೇಡಿಕೆಗಳ ಈಡೇರಿಕೆಗೆ ಮುಕ್ತವಾಗಿದೆ ಎಂದು ಹೇಳಿದರೆ ಸಾಲದು ಅಲ್ಲಿಗೆ ಹೋಗಿ ಧರಣಿ ಕೈಬಿಡುವಂತೆ ಸ್ವಾಮಿಗಳ ಮನವೊಲಿಸಬೇಕು ಎಂದು ಮಾಜೊ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯ ಸರ್ಕಾರ ಸುಭಾಷ್ ಅಡಿಯವರ ನೇತೃತ್ವದ ಸಮಿತಿಯ ವರದಿಯನ್ನು ಪಡೆದುಕೊಳ್ಳಲಿ, ಅದರ ಜೊತೆಗೆ ಮೀಸಲಾತಿ ಪ್ರಮಾಣವನ್ನು ಶೇ. 50 ಕ್ಕಿಂತ ಹೆಚ್ಚು ಮಾಡಲಿ. ಇಲ್ಲದಿದ್ದರೆ ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯವಾಗಲಿದೆ.
ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣ ಶೇ. 50 ಮೀರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶವಿರುವುದು ನಿಜ. ಆದರೆ ಹಲವಾರು ಸಂದರ್ಭಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಆ ಮಿತಿಯನ್ನು ಮೀರಿ ಮೀಸಲಾತಿ ನೀಡಿಲ್ಲವೇ?
ಈ ಪ್ರಕರಣದಲ್ಲಿ ನೀಡಿದ ತೀರ್ಪಿನಂತೆ ಮೀಸಲಾತಿ ಪದ್ಧತಿ ಈಗಿಲ್ಲ. ಸಾಮಾನ್ಯ ವರ್ಗದ ಜನರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ನೀಡಿರುವುದರಿಂದ ಮೀಸಲಾತಿ ಪ್ರಮಾಣ ಶೇ. 60ಕ್ಕೆ ತಲುಪಿದೆ.
ಸಂವಿಧಾನದ 15 ನೇ ಪರಿಚ್ಛೇದವು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಲು ಅವಕಾಶ ನೀಡಿದೆ. ಆರ್ಥಿಕ ಸ್ಥಿತಿ ಆಧರಿಸಿ ಮೀಸಲಾತಿ ನೀಡಬಹುದು ಎಂದು ಸಂವಿಧಾನದಲ್ಲಿ ಇಲ್ಲದಿದ್ದರೂ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೂ ಮೀಸಲಾತಿ ಸೌಲಭ್ಯ ವಿಸ್ತರಿಸಿಲ್ಲವೇ?.
ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7% ಮೀಸಲಾತಿ ನೀಡಬೇಕು ಎಂದು ಶಿಫಾರಸು ಮಾಡಿದೆ. ರಾಜ್ಯದಲ್ಲಿ ಎಸ್.ಟಿ ಜನಸಂಖ್ಯೆ 6.95%, ಎಸ್.ಸಿ ಜನಸಂಖ್ಯೆ 17.15% ಇದೆ. ಅವರ ಜನಸಂಖ್ಯೆಗೆ ಅನುಗುಣವಾಗಿ 24.1% ಮೀಸಲಾತಿ ನೀಡಲು ಸಂವಿಧಾನಬದ್ಧವಾಗಿ ಅವಕಾಶವಿದೆ.
ಒಬ್ಬರ ಮೀಸಲಾತಿಯನ್ನು ಕಿತ್ತು ಇನ್ನೊಬ್ಬರಿಗೆ ಕೊಡುವುದು ಬೇಡ, ಇದರ ಬದಲಿಗೆ ಮೀಸಲಾತಿ ಪ್ರಮಾಣವನ್ನು 50% ಗಿಂತ ಹೆಚ್ಚಿಸಬೇಕು ಎಂದು ಈ ಸಮಿತಿ ಶಿಫಾರಸು ಮಾಡಿದೆ.
3-ಬಿ ಇಂದ 2-ಎ ಗೆ, 2-ಎ ನಲ್ಲಿ ಇದ್ದವರನ್ನು ಎಸ್.ಟಿ ಗೆ ಸೇರಿಸಲು ಸುಭಾಷ್ ಅಡಿ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ಸಮಿತಿ ರಚಿಸಿ, ವರದಿ ನೀಡುವಂತೆ ಕೇಳಿದೆ. ಈಗಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಇರುವಾಗ ಇದು ಸಂವಿಧಾನಿಕವೋ? ಇಲ್ಲವೋ? ಎಂಬ ಬಗ್ಗೆ ಗೊಂದಲವಿದೆ.
ತಾವು ಅಧಿಕಾರಕ್ಕೆ ಬಂದ 24 ಗಂಟೆಗಳ ಒಳಗೆ ವಾಲ್ಮೀಕಿ ಸಮುದಾಯದ ಮೀಸಲಾತಿಯನ್ನು ಹೆಚ್ಚಿಸುತ್ತೇನೆ, ಇದನ್ನು ರಕ್ತದಲ್ಲಿ ಬೇಕಾದರೂ ಬರೆದುಕೊಡುತ್ತೇನೆ ಹೇಳಿದ್ದ ಸಚಿವ ಶ್ರೀರಾಮುಲು ಈಗ ಯಾಕೆ ಬಾಯಿಮುಚ್ಚಿಕೊಂಡಿದ್ದಾರೆ?
ತಮಿಳುನಾಡಿನಲ್ಲಿ ಮೀಸಲಾತಿ ಪ್ರಮಾಣ 69% ಗೆ ಹೆಚ್ಚಿಸಿದ್ದಾರೆ, ಇದು ಸುಪ್ರೀಂ ಕೋರ್ಟ್ ನ ಮುಂದಿದೆ. ಬೇರೆ ಬೇರೆ ರಾಜ್ಯಗಳು ಕೂಡ 50% ಗಿಂತ ಹೆಚ್ಚು ಮೀಸಲಾತಿ ನೀಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮೀಸಲಾತಿ ಪ್ರಮಾಣ ಏರಿಕೆ ಮಾಡಲು ಅವಕಾಶ ಇದೆ ಎಂಬುದು ನನ್ನ ಅನಿಸಿಕೆ ಎಂದರು.
ಸಂವಿಧಾನದ 15 ನೇ ಪರಿಚ್ಛೇದವು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಲು ಅವಕಾಶ ನೀಡಿದೆ. ಆರ್ಥಿಕ ಸ್ಥಿತಿ ಆಧರಿಸಿ ಮೀಸಲಾತಿ ನೀಡಬಹುದು ಎಂದು ಸಂವಿಧಾನದಲ್ಲಿ ಇಲ್ಲದಿದ್ದರೂ @BJP4India ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೂ ಮೀಸಲಾತಿ ಸೌಲಭ್ಯ ವಿಸ್ತರಿಸಿಲ್ಲವೇ? 5/10#socialjustice
— Siddaramaiah (@siddaramaiah) March 30, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243